ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಸ್ವಚ್ಛತಾ ಕಾರ್ಯ ಹಾಗೂ ಮನೆ-ಮನೆಗೆ ತೆರಳಿ ಕಸ ಸಂಗ್ರಹಿಸುತ್ತಿರುವ ಮಹಿಳಾ ಕಾರ್ಮಿಕರನ್ನು ಕಡೆಗಣಿಸಿ 154 ಪೌರಕಾರ್ಮಿಕರ ನೇಮಕಾತಿಗೆ ಮುಂದಾಗಿರುವುದನ್ನು ವಿರೋಧಿಸಿ ಐದು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಸದ್ಯಕ್ಕೆ ವಿರಾಮ ದೊರೆತಿದೆ.
ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಜಿಲ್ಲಾಡಳಿತದಿಂದ ಹೊರಡಿಸಲಾಗಿದ್ದ 154 ಪೌರಕಾರ್ಮಿಕರ ನೇಮಕಾತಿ ಅಧಿಸೂಚನೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಮಸ್ಯೆ ಕುರಿತು ಮುಂದಿನ ಹಂತದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮಹಿಳಾ ಕಾರ್ಮಿಕರು ಪ್ರತಿಭಟನೆ ಅಂತ್ಯಗೊಳಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸೇವಾವಧಿಯನ್ನು ಪರಿಗಣಿಸಿ, ನೇರ ಪಾವತಿ ವ್ಯವಸ್ಥೆಯಡಿ ಪೌರಕಾರ್ಮಿಕರ ಹುದ್ದೆಗಳಿಗೆ ಕಾಯಂಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.
ಸುಮಾರು 20 ವರ್ಷಗಳಿಂದ ಮನೆ-ಮನೆಗೆ ತೆರಳಿ ಕಸ ಸಂಗ್ರಹಿಸುವುದು ಸೇರಿದಂತೆ ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಕಡಿಮೆ ಆದಾಯದಲ್ಲೇ ಕುಟುಂಬ ನಿರ್ವಹಿಸುತ್ತಿದ್ದಾರೆ. ಹೊಸದಾಗಿ ನೇಮಕಾತಿ ಕೈಗೊಂಡರೆ ತಮ್ಮ ಉದ್ಯೋಗ ಕಳೆದುಕೊಳ್ಳುವ ಆತಂಕವಿದೆ ಎಂದು ಅವರು ಅಳಲು ತೋಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕ ಡಾ. ಎಚ್.ಕೆ. ಪಾಟೀಲ ಅವರ ನೇತೃತ್ವದಲ್ಲಿ ಸೆ.22ರಂದು ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮುಖಂಡರ ಸಭೆ ನಡೆಯಲಿದೆ. ಪೌರಕಾರ್ಮಿಕರ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಪ್ರಸ್ತುತ ಪ್ರತಿಭಟನೆ ಹಿಂಪಡೆದಿದ್ದರೂ, ಬೆಂಗಳೂರಿನ ಸಭೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಪರವಾಗಿ ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು. ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆ ಆರಂಭಿಸಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಮಹಿಳಾ ಕಾರ್ಮಿಕರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಕೃಷ್ಣಾ ಪರಾಪುರ, ಯುವರಾಜ ಬಳ್ಳಾರಿ, ಪೃಥ್ವಿ ಪರಾಪುರ, ವಿಜಯ ಕಲ್ಮನಿ, ಉಡಚಪ್ಪ ಹಳ್ಳಿಕೇರಿ, ನಿಂಗಪ್ಪ ದೊಡ್ಡಮನಿ, ಚಂದ್ರು ಕೋನಿಮನಿ, ಗಣೇಶ ಹುಬ್ಬಳ್ಳಿ ಸೇರಿದಂತೆ ನಾಗಮ್ಮ ಬಳ್ಳಾರಿ, ಯಶೋದಾ ಬಳ್ಳಾರಿ, ದಂಡಕ್ಕ ಬಳ್ಳಾರಿ, ಕನಕವ್ವ ದೊಡ್ಡಮನಿ, ಅನಿತಾ ಯಳವತ್ತಿ, ರಾಜೇಶ್ವರಿ, ಜ್ಯೋತಿ ಮತ್ತಿತರ ಮಹಿಳಾ ಪೌರಕಾರ್ಮಿಕರು ಉಪಸ್ಥಿತರಿದ್ದರು.

