ರಾಯಚೂರು: ಬೆಂಗಳೂರಿನಲ್ಲಿ ಸೆ.6ರಂದು ನಡೆದ ಕಾರ್ಯಕ್ರಮ ಅಹಿಂದ ಸಭೆಯಲ್ಲ. ಅದು ಹಿಂದುಳಿದ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಹಿಂದುಳಿದ ಸಂಘಟನೆಗಳ ಒಕ್ಕೂಟದ ಸಮಾವೇಶಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸದ ವಿಚಾರಕ್ಕೆ ಪ್ರತಿಕ್ರಿಯಿಸಿದರು.
“ಅಹಿಂದ ಯಾರ ಸ್ವತ್ತೂ ಅಲ್ಲ ಎಂಬುದು ನಿಜ. ಅದರಲ್ಲಿ ತಪ್ಪೇನಿಲ್ಲ. ಇದು ನಮ್ಮ ತಂದೆಯವರು ಮಾಡಿದ ಕಾರ್ಯಕ್ರಮವಲ್ಲ. ಯಾವುದೇ ರಾಜಕೀಯ ಕಾರ್ಯಕ್ರಮವೂ ಅಲ್ಲ. ಕಾರ್ಯಕ್ರಮಕ್ಕೆ ಯಾರನ್ನು ಕರೆಯಬೇಕು, ಯಾರನ್ನು ಕರೆಯಬಾರದು ಎಂಬುದು ಆಯೋಜಕರು ಹಾಗೂ ಒಕ್ಕೂಟದವರಿಗೆ ಬಿಟ್ಟ ವಿಚಾರ. ಇಂತಹವರನ್ನೇ ಕರೆಯಬೇಕು, ಇಂತಹವರನ್ನು ಕರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ, 25ನೇ ವರ್ಷದ ಮಹೋತ್ಸವವನ್ನು ಆಯೋಜಕರು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿ ನಡೆಸಿದ್ದಾರೆ. ಆ ಕಾರ್ಯಕ್ರಮಕ್ಕೆ ತಮ್ಮ ತಂದೆ ಸಿದ್ದರಾಮಯ್ಯ ಅವರನ್ನೂ ಆಹ್ವಾನಿಸಲಾಗಿತ್ತು ಎಂದು ಅವರು ತಿಳಿಸಿದರು.
ಇನ್ನು ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಇತ್ತೀಚೆಗೆ ಅಂತರ ಉಂಟಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, “ನನಗೆ ಗೊತ್ತಿರುವಂತೆ ಅಂತಹದ್ದೇನೂ ಇಲ್ಲ” ಎಂದು ಹೇಳಿದರು.
ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆ ಕುರಿತೂ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರು ಬಹಳ ದಿನಗಳಿಂದ ಕುಳಿತು ಸೋಮಾರಿಗಳಾಗಿದ್ದರು. ಇದೀಗ ಸ್ವತಃ ಕ್ರಿಯಾಶೀಲರಾಗಬೇಕು ಎಂಬ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
“ಪಾದಯಾತ್ರೆಯಿಂದ ಏನೂ ಪ್ರಯೋಜನವಿಲ್ಲ. ಯಾವ ಉದ್ದೇಶದಿಂದ ಪಾದಯಾತ್ರೆ ಮಾಡಬೇಕು ಎಂದುಕೊಂಡಿದ್ದರೋ, ಆ ಉದ್ದೇಶ ಈಗಾಗಲೇ ಈಡೇರಿದೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಯತೀಂದ್ರ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

