Home Blog

ಸರಣಿ ಮನೆಗಳ್ಳತನಕ್ಕೆ ಬ್ರೇಕ್: ಮೂವರು ಬಂಧನ, ₹15 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

0

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ 20 ದಿನಗಳಿಂದ ಗದಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮನೆಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣಗಳು ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೇ 11ರಿಂದ ಜೂನ್ 3ರವರೆಗೆ ಮುಂಡರಗಿ, ನರೇಗಲ್ಲ, ರೋಣ ಹಾಗೂ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 8 ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಒಂದೇ ಮಾದರಿಯಲ್ಲಿ ಕಳ್ಳತನಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿತ್ತು.

ಜೂನ್ 7ರಂದು ಮುಂಡರಗಿ ಪಟ್ಟಣದ ಬ್ಯಾಲವಾಡಗಿ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಲಕ್ಷ್ಮೇಶ್ವರದ ಹನುಮಂತ ಕುಂಚಿಕೊರವರ, ಶಿಗ್ಗಾಂವಿಯ ಮಹಾಂತೇಶ ಕುಂಚಿಕೊರವರ ಹಾಗೂ ದುರುಗೇಶ ಗುತ್ತಲ್ ಬಂಧಿತ ಆರೋಪಿಗಳಾಗಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಗದಗ ಜಿಲ್ಲೆಯಷ್ಟೇ ಅಲ್ಲದೆ ಧಾರವಾಡ, ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಲ್ಲಿಯೂ ಮನೆಗಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಒಟ್ಟು 13 ಮನೆಗಳ್ಳತನ ಪ್ರಕರಣಗಳಲ್ಲಿ ಇವರ ಕೈವಾಡ ಇರುವುದು ತನಿಖೆಯಿಂದ ದೃಢಪಟ್ಟಿದೆ.

ನರಗುಂದ ಉಪ ವಿಭಾಗದ ಡಿವೈಎಸ್ಪಿ ಪ್ರಭುಗೌಡ ಡಿ.ಕೆ. ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಅಮ್ಮಣಗೌಡ ಪಾಟೀಲ, ಬಿ.ಎನ್. ಯಳವತ್ತಿ ಹಾಗೂ ಪ್ರಕಾಶ ಬಣಕಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಈ ತಂಡದಲ್ಲಿ ಸಿಬ್ಬಂದಿಗಳಾದ ಜಿ.ಬಿ. ಬಳ್ಳಾರಿ, ಅಶೋಕ ಬೂದಿಹಾಳ, ಮಂಜುನಾಥ ಅಗಸಿಮನಿ, ಗಂಗಾಧರ ಮಜ್ಜಿಗಿ, ಮಹೇಶ ಗೊಳಗೊಳಕಿ, ಚಂದ್ರಶೇಖರ ದೊಡ್ಡಮನಿ, ಕಿರಣ ಹಿರೇಮಠ, ಮಂಜು ಬಂಡಿವಡ್ಡರ ಹಾಗೂ ಶಿವು ಹುಬ್ಬಳ್ಳಿ ಭಾಗವಹಿಸಿದ್ದರು. ತಾಂತ್ರಿಕ ವಿಭಾಗದ ಖಲಂದರ ನದಾಫ್, ಗುರು ಬೂದಿಹಾಳ ಹಾಗೂ ಸಂಜು ಕೋರಡೂರ ಸಹ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ಘೋಷಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು.

“ಸರಣಿ ಮನೆಗಳ್ಳತನ ಪ್ರಕರಣಗಳಿಂದ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ನಿವಾರಿಸಲು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ನಿಖರ ಕಾರ್ಯಾಚರಣೆಯಿಂದ 13 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಲಾಗಿದೆ.”

– ರೋಹನ್ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

15 ಲಕ್ಷ ರೂ. ಮೌಲ್ಯದ ಕಳ್ಳಸೊತ್ತು ವಶ

ಆರೋಪಿಗಳಿಂದ 145 ಗ್ರಾಂ ಬಂಗಾರದ ಆಭರಣ, 332 ಗ್ರಾಂ ಬೆಳ್ಳಿ ಆಭರಣ ಹಾಗೂ ₹50 ಸಾವಿರ ನಗದು ಸೇರಿ ಒಟ್ಟು ಸುಮಾರು ₹15 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳ ದಾಳಿ: ರೋಣದಲ್ಲಿ 34 ಕ್ವಿಂಟಲ್ ಪಿಡಿಎಸ್ ಅಕ್ಕಿ ಜಪ್ತಿ

0

ಗದಗ: ಬಡವರ ಹೊಟ್ಟೆ ತುಂಬಿಸಬೇಕಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲು ಯತ್ನಿಸಿದ ಜಾಲವನ್ನು ರೋಣ ಆಹಾರ ಇಲಾಖೆಯ ಅಧಿಕಾರಿಗಳು ಭೇದಿಸಿದ್ದು, 69 ಚೀಲ ಪಿಡಿಎಸ್ ಅಕ್ಕಿಯೊಂದಿಗೆ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಸಾಗಣೆಯ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆ ತೀವ್ರಗೊಳಿಸಲಾಗಿದೆ.

ಆಹಾರ ಇಲಾಖೆಗೆ ಬಂದ ಖಚಿತ ಮಾಹಿತಿಯ ಮೇರೆಗೆ ರೋಣ–ನರಗುಂದ ರಸ್ತೆಯ ಐಬಿ ಸಮೀಪ ಬುಧವಾರ ತಡರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ, ಸರ್ಕಾರದ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂತು.

ತಪಾಸಣೆಯಲ್ಲಿ ವಾಹನದಲ್ಲಿ 69 ಚೀಲಗಳಲ್ಲಿ 34 ಕ್ವಿಂಟಲ್ 40 ಕೆ.ಜಿ. ಅಕ್ಕಿ ಪತ್ತೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ಅಕ್ಕಿ ಹಾಗೂ ವಾಹನವನ್ನು ವಶಕ್ಕೆ ಪಡೆದರು. ವಶಪಡಿಸಿಕೊಂಡ ಅಕ್ಕಿಯ ಮೌಲ್ಯ ₹77,400 ಹಾಗೂ ವಾಹನದ ಮೌಲ್ಯ ₹2.50 ಲಕ್ಷ ಸೇರಿ ಒಟ್ಟು ₹3.27 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಪ್ರಕರಣದಲ್ಲಿ ಗದಗ ನಗರದ ಗಣೇಶನಗರ ನಿವಾಸಿ ರಮಜಾನಸಾಬ್ ಹಸನಸಾಬ್ ಸೂರಣಗಿ (32) ಎಂಬಾತನನ್ನು ಆರೋಪಿಯಾಗಿ ಗುರುತಿಸಲಾಗಿದೆ. ಆತ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಪಿಡಿಎಸ್ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆಹಾರ ನಿರೀಕ್ಷಕಿ ಸುವರ್ಣಾ ಜಮ್ಮನಕಟ್ಟಿ ನೀಡಿದ ದೂರಿನ ಮೇರೆಗೆ ರೋಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 107/2026 ದಾಖಲಾಗಿದ್ದು, ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಪಿಡಿಎಸ್ ನಿಯಂತ್ರಣ ಆದೇಶದಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಎಚ್.ಕೆ. ಪಾಟೀಲರಿಗೆ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಶಿವಪ್ಪ ಬಳ್ಳಾರಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕೆ. ಪಾಟೀಲರು ಸಚಿವರಾಗಿದ್ದ ಅವಧಿಯಲ್ಲಿ ರೈತರ ಪರವಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸಂಕಷ್ಟದ ಸಂದರ್ಭಗಳಲ್ಲಿ ಜನರ ಬೆನ್ನಿಗೆ ನಿಂತು ಕಾರ್ಯನಿರ್ವಹಿಸಿದ ನಾಯಕತ್ವ ಅವರದ್ದಾಗಿದೆ ಎಂದು ಹೇಳಿದರು.

ಗದಗ ಜಿಲ್ಲೆಗೆ ಗ್ರಾಮೀಣ ಪಂಚಾಯತ್ ವಿಶ್ವವಿದ್ಯಾಲಯ ಮಂಜೂರು ಮಾಡುವಲ್ಲಿ ಹಾಗೂ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿರುವುದನ್ನು ಸ್ಮರಿಸಿದ ಅವರು, ಗಡಿ ವಿವಾದದಂತಹ ಸೂಕ್ಷ್ಮ ವಿಷಯಗಳಲ್ಲೂ ಪಾಟೀಲರು ದೂರದೃಷ್ಟಿಯ ನಾಯಕತ್ವ ಪ್ರದರ್ಶಿಸಿದ್ದಾರೆ ಎಂದರು.

ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ಎಚ್ಚರಿಕೆ

ವಾಲ್ಮೀಕಿ ಸಮಾಜದ ಮುಖಂಡ ಬಸವರಾಜ ಬೆಳದಡಿ ಮಾತನಾಡಿ, ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಎಸ್‌ಟಿ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.

ಪಕ್ಷ ಸಂಘಟನೆ ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಗದಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಲಪ್ಪ ಮಾಲ್ಯಪ್ಪನವರ, ಬಸವರಾಜ ದಾವಣಗೇರಿ, ಮಂಜುನಾಥ ಬೆಳದಡಿ, ಕೃಷ್ಣಪ್ಪ ದೇವರಮನಿ, ರಾಮು ಬಾಗಲಕೋಟಿ, ಮುತ್ತುರಾಜ ಬಳಗಾನೂರು, ಸಚಿನ್ ನಿಂಬಣ್ಣನವರ, ಕಿರಣ ನಾಯ್ಕರ, ದತ್ತು ಬೆಳದಡಿ, ನಾಗರಾಜ ಕುರುಗೋಡು ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಎಚ್.ಕೆ. ಪಾಟೀಲರು ರೈತರು, ಬಡವರು ಹಾಗೂ ಜನಸಾಮಾನ್ಯರ ಪರವಾಗಿ ಹೋರಾಟ ನಡೆಸಿದ ನಾಯಕರು. ಅವರ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು.”

ಶಿವಪ್ಪ ಬಳ್ಳಾರಿ

ಜಿಲ್ಲಾಧ್ಯಕ್ಷರು, ಕಾಂಗ್ರೆಸ್ ಎಸ್‌ಟಿ ಘಟಕ

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಎಪಿಎಂಸಿ ಹಮಾಲರ ವಿಶಿಷ್ಟ ಹೋರಾಟ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ಎಪಿಎಂಸಿ ಹಮಾಲರು, ಚಕ್ಕಡಿ ಸಂಘ ಹಾಗೂ ತಳಗಾಳು ಸಂಘದ ಸದಸ್ಯರು ಗುರುವಾರ ನಗರದಲ್ಲಿ ವಿಶಿಷ್ಟ ಪ್ರತಿಭಟನೆ ನಡೆಸಿದರು.

ಎಪಿಎಂಸಿ ಆವರಣದಿಂದ ವೀರೇಶ್ವರ ಪುಣ್ಯಾಶ್ರಮದವರೆಗೆ ಶ್ರಮಿಕರು ದೀಡ್ ನಮಸ್ಕಾರ ಹಾಕುತ್ತಾ ಸಾಗುವ ಮೂಲಕ ತಮ್ಮ ಒತ್ತಾಯವನ್ನು ಸರ್ಕಾರದ ಗಮನಕ್ಕೆ ತಂದರು. ಜೊತೆಗೆ ಹಲಗೆ ಬಾರಿಸಿ ಘೋಷಣೆಗಳನ್ನು ಕೂಗುತ್ತ ಶಕ್ತಿ ಪ್ರದರ್ಶನ ನಡೆಸಿದರು.

ಮೆರವಣಿಗೆಗೆ ಮುನ್ನ ಎಪಿಎಂಸಿ ಹಮಾಲರ ವಿಶ್ರಾಂತಿ ಗೃಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಚಾಲನೆ ನೀಡಲಾಯಿತು.

ಪ್ರತಿಭಟನಾಕಾರರು, “ಬಡವರು, ಹಿಂದುಳಿದವರು, ಹಮಾಲರು ಹಾಗೂ ಶ್ರಮಿಕರ ಪರವಾಗಿ ನಿರಂತರವಾಗಿ ಧ್ವನಿ ಎತ್ತಿರುವ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು” ಎಂಬ ಬರಹವಿರುವ ಫಲಕಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

ಕರ್ನಾಟಕ ರಾಜ್ಯ ಹಮಾಲರ ಒಕ್ಕೂಟದ ರಾಜ್ಯಾಧ್ಯಕ್ಷ ಅಯ್ಯಪ್ಪ ನಾಯ್ಕರ್, ಎಪಿಎಂಸಿ ಹಮಾಲರು ಹಾಗೂ ಚಕ್ಕಡಿ ಸಂಘದ ಅಧ್ಯಕ್ಷ ಆದಪ್ಪ ಮಾರೆಪ್ಪನವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಜಿಲ್ಲೆಯ ಅಭಿವೃದ್ಧಿಗೆ ಎಚ್.ಕೆ. ಪಾಟೀಲ ಅವರ ಕೊಡುಗೆ ಮಹತ್ವದ್ದಾಗಿದೆ. ಮೊದಲ ಹಂತದಲ್ಲಿ ಅವಕಾಶ ತಪ್ಪಿದ್ದರೆ, ಎರಡನೇ ಹಂತದಲ್ಲಾದರೂ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.

ಕಮಲವ್ವ ಚಲವಾದಿ, ಕನಕವ್ವ ದಾಸರ, ಯಲ್ಲವ್ವ ಚಲವಾದಿ, ರಾಮಚಂದ್ರ ಹರಿಜನ, ಹನಮವ್ವ ತುಮ್ಮರಮಟ್ಟಿ, ಸುಮಾ ಆದೋನಿ, ಶೇಖವ್ವ ಸಂಕಣ್ಣವರ, ಸರೋಜವ್ವ ಚಲವಾದಿ ಸೇರಿದಂತೆ ಹಲವರು ದೀಡ್ ನಮಸ್ಕಾರ ಹಾಕಿ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಹಮಾಲರು, ಶ್ರಮಿಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

‘ಖೇತ್ ಬಚಾವೋ’ ಅಭಿಯಾನಕ್ಕೆ ರೈತರಿಂದ ಮೆಚ್ಚುಗೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಣ್ಣಿನ ಆರೋಗ್ಯ ಸಂರಕ್ಷಣೆ, ಕೃಷಿ ವೆಚ್ಚ ಕಡಿತ ಹಾಗೂ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರ ಹುಲಕೋಟಿ ಸಂಯುಕ್ತ ಆಶ್ರಯದಲ್ಲಿ ಖೇತ್ ಬಚಾವೋ ಅಭಿಯಾನದಡಿ ಸಮತೋಲಿತ ರಸಗೊಬ್ಬರ ಬಳಕೆ ಹಾಗೂ ಬೀಜೋಪಚಾರ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗದಗ ತಾಲೂಕಿನ ಬೂದಿಶ್ವರ ಹೊಸಳ್ಳಿ ಹಾಗೂ ಶ್ಯಾಗೋಟಿ ಗ್ರಾಮಗಳಲ್ಲಿ ಜೂನ್ 8ರಂದು ನಡೆದ ಈ ಕಾರ್ಯಕ್ರಮದಲ್ಲಿ ರೈತರಿಗೆ ಮಣ್ಣಿನ ಫಲವತ್ತತೆ ಕಾಪಾಡುವ ವಿಧಾನಗಳು, ಸಮತೋಲಿತ ಗೊಬ್ಬರ ಬಳಕೆ, ಜೈವಿಕ ಕೃಷಿ ಪದ್ಧತಿಗಳು, ನೀರಿನ ಸಂರಕ್ಷಣೆ ಹಾಗೂ ಸಮಗ್ರ ಕೀಟ ನಿರ್ವಹಣೆ ಕುರಿತು ತಜ್ಞರು ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮಣ್ಣು ಪರೀಕ್ಷೆಯ ಮಹತ್ವವನ್ನು ವಿವರಿಸಿ, ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವ ವಿಧಾನವನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು. ಇದರಿಂದ ಬೆಳೆ ರೋಗಗಳನ್ನು ತಡೆಗಟ್ಟುವ ಜೊತೆಗೆ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಅಧಿಕಾರಿಗಳು ಸರ್ಕಾರದ ವಿವಿಧ ಯೋಜನೆಗಳು, ಸಬ್ಸಿಡಿ ಸೌಲಭ್ಯಗಳು ಹಾಗೂ ಕೃಷಿ ಯಂತ್ರೋಪಕರಣಗಳ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಆಧುನಿಕ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಕರೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಖೇತ್ ಬಚಾವೋ ಅಭಿಯಾನವು ಸಾವಯವ ಕೃಷಿಗೆ ಉತ್ತೇಜನ ನೀಡುವ ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಪ್ರಗತಿಪರ ರೈತರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಉಪ ಕೃಷಿ ನಿರ್ದೇಶಕಿ ಸ್ಪೂರ್ತಿ ಜಿ.ಎಸ್., ಎನ್.ಎಚ್. ಭಂಡಿ, ಪ್ರವೀಣ ಕರಿಕಟ್ಟಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಕೃಷಿ ಅಧಿಕಾರಿಗಳಾದ ರಾಜರಾಜೇಶ್ವರಿ ಚಿನಿವಾರ, ಬಸವರಾಜೇಶ್ವರಿ ಸಜ್ಜನರ, ಪ್ರಗತಿಪರ ರೈತ ವಿಜಯಕುಮಾರ ಸುಂಕದ ಸೇರಿದಂತೆ ಹಲವರು ಭಾಗವಹಿಸಿದ್ದರು.

ಬೂದಿಶ್ವರ ಹೊಸಳ್ಳಿ, ಕುರ್ತಕೋಟಿ, ಶ್ಯಾಗೋಟಿ, ದುಂದೂರ ಹಾಗೂ ಚಿಕ್ಕಹಂದಿಗೋಳ ಗ್ರಾಮಗಳ ರೈತರು, ರೈತ ಮಹಿಳೆಯರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೊರಬ ಗ್ರಾಮದಲ್ಲಿ ಹೈಟೆಕ್ ಕಳ್ಳಬಟ್ಟಿ ದಂಧೆ ಭೇದಿಸಿದ ಪೊಲೀಸರು: 1,800 ಲೀಟರ್ ಸಾರಾಯಿ ಜಪ್ತಿ!

ಚಿಕ್ಕೋಡಿ: ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆಯುತ್ತಿದ್ದ ಹೈಟೆಕ್ ಅಕ್ರಮ ಕಳ್ಳಬಟ್ಟಿ ದಂಧೆಯ ಜಾಲವನ್ನು ಕುಡಚಿ ಪೊಲೀಸರು ಭೇದಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಅಕ್ರಮ ಕಳ್ಳಬಟ್ಟಿ ಅಡ್ಡೆಯನ್ನು ಪತ್ತೆಹಚ್ಚಿ ಭಾರೀ ಪ್ರಮಾಣದ ಮದ್ಯ ತಯಾರಿಕಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ದಾಳಿಯ ವೇಳೆ ಒಟ್ಟು 1,790 ಲೀಟರ್ ಬೆಲ್ಲದ ಕೊಳೆ (ಕಚ್ಚಾ ವಸ್ತು) ಹಾಗೂ 10 ಲೀಟರ್ ತಯಾರಾಗಿದ್ದ ಕಳ್ಳಬಟ್ಟಿ ಸಾರಾಯಿ ಸೇರಿದಂತೆ ಒಟ್ಟು 1,800 ಲೀಟರ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

35 ವರ್ಷಗಳ ಸೇವೆಯ ಸಾರ್ಥಕತೆ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವಲ್ಲ, ವಿದ್ಯಾರ್ಥಿಗಳ ಬದುಕು ರೂಪಿಸುವ ತಪಸ್ಸೆಂದು ಪರಿಗಣಿಸಿ 35 ವರ್ಷಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಮೂಲಕ ಭವಿಷ್ಯದ ದಾರಿ ತೋರಿದ ಜಗದ್ಗುರು ತೋಂಟದಾರ್ಯ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಶಿವರಾಚಯ್ಯ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಭುಜಂಗನಗರದಲ್ಲಿ ಸಿದ್ದರಾಮಯ್ಯ-ನಾಗಮ್ಮ ದಂಪತಿಯ ಪುತ್ರರಾಗಿ ಜನಿಸಿದ ಶಿವರಾಚಯ್ಯ ಅವರು ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಹಾಗೂ ಡಿಪ್ಲೊಮಾ ಶಿಕ್ಷಣವನ್ನು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು.

1991ರ ಸೆಪ್ಟೆಂಬರ್ 11ರಂದು ಮಾದರ ಚೆನ್ನಯ್ಯ ಐಟಿಐ ಕಾಲೇಜಿನಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಹಿರಿಯ ತರಬೇತುದಾರರಾಗಿ ಸೇವೆ ಸಲ್ಲಿಸಿದರು. ಬಳಿಕ 1997ರ ಆಗಸ್ಟ್ 1ರಂದು ಡಂಬಳದ ಪ್ರತಿಷ್ಠಿತ ಜಗದ್ಗುರು ತೋಂಟದಾರ್ಯ ಐಟಿಐ ಕಾಲೇಜಿನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿ ಸಂಸ್ಥೆಯ ಬೆಳವಣಿಗೆಗೆ ಹೊಸ ಆಯಾಮ ನೀಡಿದರು.

ಅವರ ಆಡಳಿತಾವಧಿಯಲ್ಲಿ ಬೆಂಗಳೂರಿನ ಬಿಡದಿಯ ಪ್ರಸಿದ್ಧ ಟೋಯೊಟಾ ಮೋಟಾರು ಕಾರ್ಪೊರೇಷನ್ ಕಂಪನಿಯೊಂದಿಗೆ ತರಬೇತಿ ಮತ್ತು ಅಪ್ರೆಂಟಿಸ್‌ಶಿಪ್ ಸಂಬಂಧಿತ ಒಡಂಬಡಿಕೆ ಮಾಡಿಕೊಳ್ಳುವ ಅವಕಾಶ ಸಂಸ್ಥೆಗೆ ದೊರೆಯಿತು. ರಾಜ್ಯದ ಕೇವಲ ಐದು ಖಾಸಗಿ ಐಟಿಐ ಸಂಸ್ಥೆಗಳಲ್ಲಿ ಡಂಬಳ ಐಟಿಐ ಸ್ಥಾನ ಪಡೆದಿದ್ದು, ನೂರಾರು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳ ಬಾಗಿಲು ತೆರೆದಿದೆ.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೃಷ್ಟಿಯಿಂದ ವಿವಿಧ ಕಂಪನಿಗಳನ್ನು ಕಾಲೇಜಿಗೆ ಆಹ್ವಾನಿಸಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕುವಂತೆ ಮಾಡಿದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಜೆ.ಟಿ.ಮಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಮಾತನಾಡಿ, ಸಂಸ್ಥೆಯ ಅಭಿವೃದ್ಧಿ, ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿ ಹಾಗೂ ಸಿಬ್ಬಂದಿಯೊಂದಿಗೆ ಉತ್ತಮ ಸಮನ್ವಯ ಸಾಧಿಸುವಲ್ಲಿ ಶಿವರಾಚಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

“ಐಟಿಐ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಭದ್ರ ಅಡಿಪಾಯ. ಶಿಸ್ತು, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಯಶಸ್ಸು ಖಚಿತ.”

ಎಸ್.ಎಂ. ಶಿವರಾಚಯ್ಯ

ನಿವೃತ್ತ ಪ್ರಾಚಾರ್ಯರು

“ಶಿಕ್ಷಣವೆಂದರೆ ಕೇವಲ ಜ್ಞಾನ ನೀಡುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಮಹತ್ತರ ಕಾರ್ಯ. ಶಿವರಾಚಯ್ಯ ಅವರು ಶಿಸ್ತು, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ.”

ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಮಕ್ಕಳ ಕೈಗೆ ಕೆಲಸವಲ್ಲ, ಪುಸ್ತಕ ಕೊಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಕೈಗೆ ಕೆಲಸವಲ್ಲ, ಶಿಕ್ಷಣದ ಬೆಳಕು ತಲುಪಿಸಬೇಕೆಂಬ ಸಂದೇಶದೊಂದಿಗೆ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಗದಗ ನಗರದಲ್ಲಿ ಗುರುವಾರ ಬೃಹತ್ ಜನಜಾಗೃತಿ ಜಾಥಾ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ (ರಿ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಿವನಗೌಡ್ರ ಅವರು, ಮಕ್ಕಳು ದೇಶದ ಭವಿಷ್ಯವಾಗಿದ್ದು, ಅವರನ್ನು ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

14 ವರ್ಷದೊಳಗಿನ ಮಕ್ಕಳನ್ನು ಹೋಟೆಲ್, ಗ್ಯಾರೇಜ್, ಕಟ್ಟಡ ಕಾಮಗಾರಿ ಸೇರಿದಂತೆ ಯಾವುದೇ ಉದ್ಯಮಗಳಲ್ಲಿ ಕೆಲಸಕ್ಕೆ ನೇಮಿಸುವುದು ಕಾನೂನುಬಾಹಿರವಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಾರ್ವಜನಿಕರು ತಮ್ಮ ಸುತ್ತಮುತ್ತ ಬಾಲ ಕಾರ್ಮಿಕ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಗದಗ-ಬೆಟಗೇರಿ ನಗರಸಭೆ ಆವರಣದಿಂದ ಆರಂಭವಾದ ಜಾಥಾ ಮಹಾತ್ಮ ಗಾಂಧಿ ವೃತ್ತ, ಮಹೇಂದ್ರಕರ್ ಸರ್ಕಲ್, ಟಾಂಗಕೂಟ, ಹಳೆ ಬಸ್ ನಿಲ್ದಾಣ, ರೋಟರಿ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿತು.

ಜಾಥಾದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು “ಬಾಲ ಕಾರ್ಮಿಕ ಪದ್ಧತಿ ತೊಲಗಲಿ, ಮಕ್ಕಳ ಭವಿಷ್ಯ ಬೆಳಗಲಿ”, “ಮಕ್ಕಳಿಗೆ ಕೆಲಸ ಬೇಡ, ಅಕ್ಷರ ನೀಡಿ” ಎಂಬ ಘೋಷಣೆಗಳನ್ನು ಕೂಗಿ ಜನರಲ್ಲಿ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಕವಲೂರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಶಾಲೆಗೆ ಹೋಗಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ತಳ್ಳುವುದು ಅಪರಾಧ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು.”

ಶಿವನಗೌಡ್ರ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

ಮಳೆರಾಯನ ಅಬ್ಬರಕ್ಕೆ ಮನೆ ಗೋಡೆ ಕುಸಿತ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಅಬ್ಬರಕ್ಕೆ ಡಂಬಳ ಗ್ರಾಮದ ರೈತ ಹನಮಂತಪ್ಪ ಶಿವಪ್ಪ ಆಲೂರ ಅವರಿಗೆ ಸೇರಿದ ಮಣ್ಣಿನ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮನೆ ಭಾಗಶಃ ನೆಲಸಮವಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಮನೆಯ ಗೋಡೆಗಳು ಏಕಾಏಕಿ ಕುಸಿದು ಬಿದ್ದಿವೆ. ಮನೆಯ ಒಂದು ಭಾಗ ಸಂಪೂರ್ಣ ನೆಲಸಮವಾಗಿದ್ದರೆ, ಮತ್ತೊಂದು ಗೋಡೆ ಶೇ.65ರಷ್ಟು ಕುಸಿದು ಬೀಳುವ ಸ್ಥಿತಿಯಲ್ಲಿದೆ. ಗೋಡೆ ಕುಸಿದ ಪರಿಣಾಮ ಮನೆಯ ಪಕ್ಕದಲ್ಲಿದ್ದ ಮೂರು ಟ್ರ್ಯಾಕ್ಟರ್‌ಗಳಷ್ಟು ಸಿಂಗಾ ಹೊಟ್ಟು ಸಂಪೂರ್ಣ ಹಾಳಾಗಿದ್ದು, ರೈತ ಕುಟುಂಬಕ್ಕೆ ಭಾರೀ ನಷ್ಟ ಉಂಟಾಗಿದೆ.

ಘಟನೆ ನಡೆದ ವೇಳೆ ಮನೆಯಲ್ಲಿದ್ದ ಕುಟುಂಬದ ಸದಸ್ಯರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ವಾಸಿಸಲು ಸುರಕ್ಷಿತ ಆಶ್ರಯವಿಲ್ಲದೆ ಕುಟುಂಬ ಆತಂಕದ ದಿನಗಳನ್ನು ಎದುರಿಸುತ್ತಿದೆ. ಮನೆ ಕುಸಿದಿದ್ದರೂ ಅದೇ ಅವಶೇಷಗಳ ನಡುವೆ ಅಡುಗೆ ಮಾಡುತ್ತಿರುವ ಕುಟುಂಬದ ದೃಶ್ಯ ಮನಕಲಕುವಂತಿತ್ತು.

ಕುಟುಂಬದ ಸದಸ್ಯೆ ಪ್ರೇಮವ್ವ ಹನಮಂತಪ್ಪ ಆಲೂರ ಮಾತನಾಡಿ, “ಸಾಲ ಮಾಡಿ ಕೃಷಿ ಮಾಡಿದ್ದೇವೆ. ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಮನೆ ಕಟ್ಟಲು ಸಹ ಸಾಲ ಮಾಡಿದ್ದೇವೆ. ಈಗ ಮಳೆಗೆ ಮನೆ ಕುಸಿದಿದೆ. ನಾವು ಎಲ್ಲಿಗೆ ಹೋಗಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಸರ್ಕಾರ ನಮಗೆ ಆಶ್ರಯ ಮನೆ ಕಲ್ಪಿಸಬೇಕು” ಎಂದು ಕಣ್ಣೀರಿಟ್ಟರು.

ಮಾಹಿತಿ ತಿಳಿಯುತ್ತಿದ್ದಂತೆಯೇ ಉಪ ತಹಸೀಲ್ದಾರ್ ಎಸ್.ಎಸ್. ಬಿಚಾಲಿ, ಕಂದಾಯ ಅಧಿಕಾರಿ ಪ್ರಭು ಬಾಗಲಿ ಹಾಗೂ ಕಂದಾಯ ಆಡಳಿತಾಧಿಕಾರಿ ಲಕ್ಷ್ಮಣ ಗುಡಸಲಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯ ಪ್ರಮಾಣದ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಸತತ ಮಳೆಯಿಂದ ಗ್ರಾಮದಲ್ಲಿ ಹಲವಾರು ಹಳೆಯ ಮಣ್ಣಿನ ಮನೆಗಳು ಅಪಾಯದ ಸ್ಥಿತಿಯಲ್ಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪ ತಹಸೀಲ್ದಾರ್ ಎಸ್.ಎಸ್. ಬಿಚಾಲಿ ಮನವಿ ಮಾಡಿದ್ದಾರೆ.

“ಸಾಲ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಈಗ ಮನೆ ಕುಸಿದಿದೆ. ನಮಗೆ ಆಶ್ರಯ ಮನೆ ಕಲ್ಪಿಸಿ.”

ಪ್ರೇಮವ್ವ ಹನಮಂತಪ್ಪ ಆಲೂರ

ಗದಗದ ಕವಿತಾಗೆ ಅಂತಾರಾಷ್ಟ್ರೀಯ ಗೌರವ

0

ವಿಜಯಸಾಕ್ಷಿ ಸುದ್ದಿ, ಗದಗ: ಆರಿ ವರ್ಕ್ ಕೌಶಲ್ಯದ ಮೂಲಕ ನೂರಾರು ಮಹಿಳೆಯರ ಬದುಕಿಗೆ ಹೊಸ ಬೆಳಕು ನೀಡಿರುವ ಗದಗದ ಭಾರ್ಗವಿ ಮಹಿಳಾ ಫೌಂಡೇಶನ್ ಸಂಸ್ಥಾಪಕಿ ಕವಿತಾ ಕೊಣ್ಣೂರ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ದೊರೆತಿದೆ. ಇತ್ತೀಚೆಗೆ ಮಲೇಶಿಯಾದಲ್ಲಿ ನಡೆದ World Fashion Summit 2026 ಕಾರ್ಯಕ್ರಮದಲ್ಲಿ ಉಗಾಂಡಾದ World Fashion University ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಲಾಗಿದೆ.

ಆರಿ ವರ್ಕ್ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡುವುದರ ಜೊತೆಗೆ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಶ್ರಮಿಸಿರುವ ಕವಿತಾ ಕೊಣ್ಣೂರ ಅವರ ಸೇವೆಯನ್ನು ಗುರುತಿಸಿ ಈ ಅಂತಾರಾಷ್ಟ್ರೀಯ ಗೌರವ ನೀಡಲಾಗಿದೆ.

ಕೇವಲ ತರಬೇತಿ ನೀಡುವುದಷ್ಟೇ ಅಲ್ಲದೆ, ತಮ್ಮನ್ನು ಅರಸಿ ಬರುವ ಮಹಿಳೆಯರಿಗೆ ಮಾರ್ಗದರ್ಶಕಿಯಾಗಿ, ಅಕ್ಕನ ಸ್ಥಾನದಲ್ಲಿ ನಿಂತು ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಕವಿತಾ ನಿರಂತರವಾಗಿ ಮಾಡುತ್ತಿದ್ದಾರೆ. ಆರಿ ವರ್ಕ್ ಮೂಲಕ ಅನೇಕ ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ.

ಸಾಮಾಜಿಕ ಸೇವೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕವಿತಾ ಕೊಣ್ಣೂರ, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ.

ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಗಣ್ಯರು, ಸಮಾಜಸೇವಕರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ವೇಳೆ ಗೌರವ ಸ್ವೀಕರಿಸಿದ ಕವಿತಾ ಕೊಣ್ಣೂರ, ಈ ಪ್ರಶಸ್ತಿ ತಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಸಮಾಜ ಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲೆಗೆ ಹೆಮ್ಮೆಯ ಕ್ಷಣ

ಗದಗ ಜಿಲ್ಲೆಯ ಮಹಿಳಾ ಪ್ರತಿಭೆಯೊಬ್ಬರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊರೆತ ಈ ಗೌರವ ಜಿಲ್ಲೆಯ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕವಿತಾ ಕೊಣ್ಣೂರ ಅವರ ಸಾಧನೆಗೆ ವಿವಿಧ ಸಂಘ-ಸಂಸ್ಥೆಗಳು, ಸಮಾಜಮುಖಿ ಸಂಘಟನೆಗಳು ಹಾಗೂ ಅವರ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

“ಇದು ನನ್ನೊಬ್ಬಳ ಸಾಧನೆಯಲ್ಲ. ನನ್ನ ಕುಟುಂಬ, ಗುರುಗಳು, ಸ್ನೇಹಿತರು ಹಾಗೂ ನನ್ನನ್ನು ಬೆಂಬಲಿಸಿದ ಎಲ್ಲರ ಆಶೀರ್ವಾದದ ಫಲ. ಈ ಗೌರವ ನನ್ನ ಸಾಮಾಜಿಕ ಸೇವೆಗೆ ಮತ್ತಷ್ಟು ಪ್ರೇರಣೆ ನೀಡಿದೆ.”

ವಿತಾ ಕೊಣ್ಣೂರ

ಸಂಸ್ಥಾಪಕಿ, ಭಾರ್ಗವಿ ಮಹಿಳಾ ಫೌಂಡೇಶನ್

error: Content is protected !!