ಗದಗ: ‘ನೀವ್ ಬರ್ತಿರಿ, ಇಂತಾ ಪಂಕ್ಷನ್ ಮಾಡ್ತಿರಿ, ಹೊಗ್ತಿರಿ ಅಷ್ಟೇ. ಅರ್ಜಿ ಸ್ವೀಕರಿಸಿ ಕುಂತರೇ ಆಗಲ್ಲ, ಕೆಲಸ ಮಾಡಬೇಕು’ ಎಂದು ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ನಡೆದಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದು, ಹಲವು ವರ್ಷಗಳಿಂದ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸುತ್ತಿದ್ದರೂ ಪರಿಹಾರ ಮಾತ್ರ ದೊರೆಯುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗಿಲ್ಲ. ಈ ಕುರಿತು ಅರ್ಜಿ ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
‘ಕೊಟ್ಟ ಅಪ್ಲಿಕೇಶನ್ಗಳು ಮೂಲೆಯಲ್ಲಿ ಬಿದ್ದಿರುತ್ತವೆ. ಪ್ರತಿ ಬಾರಿ ಅರ್ಜಿ ಸ್ವೀಕರಿಸುತ್ತೀರಿ, ಕೆಲಸ ಮಾತ್ರ ಆಗುವುದಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತೊಂಡಿಹಾಳ ರಸ್ತೆಯ ದುಸ್ಥಿತಿ ಕುರಿತು ಸ್ಥಳೀಯರು ಅಧಿಕಾರಿಗಳ ಗಮನ ಸೆಳೆದರು. 15ರಿಂದ 20 ವರ್ಷಗಳಿಂದ ರಸ್ತೆ ದುರಸ್ತಿ ನಡೆದಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ರಸ್ತೆಯ ವಾಸ್ತವ ಸ್ಥಿತಿ ತಿಳಿಯಲು ಅಧಿಕಾರಿಗಳಿಗೆ ಸವಾಲು ಹಾಕಿದರು.
‘ಒಂದ್ಸಲ ಟ್ರ್ಯಾಕ್ಟರ್ನಲ್ಲಿ ಆ ರಸ್ತೆಗೆ ಹೋಗಿ ಬರೋಣ ಬನ್ನಿ’ ಎಂದು ಅಧಿಕಾರಿಗಳಿಗೆ ಹೇಳಿ, ರಸ್ತೆಯ ದುಸ್ಥಿತಿಯನ್ನು ಸ್ಥಳಕ್ಕೆ ಬಂದು ನೋಡುವಂತೆ ಒತ್ತಾಯಿಸಿದರು.
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಈವರೆಗೆ ಸಮರ್ಪಕವಾಗಿ ಬಗೆಹರಿಸಿಲ್ಲ ಎಂದು ಸ್ಥಳೀಯರು ದೂರಿದರು. ಹಲವು ಬಾರಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಒಂದರ ಹಿಂದೆ ಒಂದರಂತೆ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು. ಪ್ರತಿ ಬಾರಿ ಅರ್ಜಿ ಸ್ವೀಕರಿಸಿ ಭರವಸೆ ನೀಡಲಾಗುತ್ತದೆ. ಆದರೆ, ಸಮಸ್ಯೆಗಳು ಮಾತ್ರ ಬಗೆಹರಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೆಲಕಾಲ ಮೌನವಾಗಿ ಕುಳಿತುಕೊಳ್ಳುವಂತಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಕೇವಲ ಅರ್ಜಿ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂತು.

