ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿ ಹದಗೆಟ್ಟಿದ್ದು, ನೂತನ ನಾಯಕತ್ವದ ಮುಂದೆ ಅದನ್ನು ಸರಿಪಡಿಸುವ ದೊಡ್ಡ ಸವಾಲು ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅಭಿಪ್ರಾಯಪಟ್ಟಿದ್ದಾರೆ.
ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಉತ್ತಮ ಅವಕಾಶ ಸಿಕ್ಕಿದ್ದು, ತಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
136 ಸ್ಥಾನಗಳನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಜನರು ರಾಜ್ಯದ ಅಭಿವೃದ್ಧಿ ಮತ್ತು ಸುಭಿಕ್ಷೆಯ ನಿರೀಕ್ಷೆಯಲ್ಲಿದ್ದರು. ಆದರೆ ಕಳೆದ ಮೂರು ವರ್ಷಗಳಲ್ಲಿ ಆ ಮಟ್ಟದ ಅಭಿವೃದ್ಧಿ ಕಂಡುಬಂದಿಲ್ಲ. ಜನರ ನಿರೀಕ್ಷೆಗಳಿಗೆ ತಕ್ಕ ಆಡಳಿತ ಸಿಗಲಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಬೆಲ್ಲದ್, ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣ ಬಿಟ್ಟು ಎಲ್ಲ ವರ್ಗಗಳನ್ನೂ ಸಮಾನವಾಗಿ ಕಾಣುವ ಆಡಳಿತ ನೀಡಬೇಕಿತ್ತು. ಆದರೆ ಆ ದಿಸೆಯಲ್ಲಿ ಕೆಲಸ ನಡೆದಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಹಿಂದೆಂದೂ ಕಾಣದ ಮಟ್ಟಿಗೆ ಹೆಚ್ಚಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಕೊರತೆಯಾಗಿದ್ದು, ಅಭಿವೃದ್ಧಿ ಕಾರ್ಯಗಳಿಗಿಂತ ರಾಜಕೀಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ದೂರಿದರು.
ನೂತನ ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದ ಅವರು, ಇದು ಅವರಿಗೆ ಮಹತ್ವದ ಅವಕಾಶ. ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುವ ಆಡಳಿತ ನೀಡಬೇಕು. ಕಾಂಗ್ರೆಸ್ಗೆ 136 ಸ್ಥಾನಗಳು ಬಂದಿರುವುದು ಕೇವಲ ಒಂದು ವರ್ಗದ ಮತಗಳಿಂದಲ್ಲ, ಎಲ್ಲ ವರ್ಗಗಳ ಜನರ ಬೆಂಬಲದಿಂದ. ಆದ್ದರಿಂದ ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಬೇಕು ಎಂದು ಹೇಳಿದರು.
ರಾಜ್ಯದ ಆರ್ಥಿಕ ಸ್ಥಿತಿ ಈಗಾಗಲೇ ಹದಗೆಟ್ಟಿರುವುದರಿಂದ ಅದನ್ನು ಸುಧಾರಿಸುವ ನಿಟ್ಟಿನಲ್ಲಿ ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಹೊಸ ನಾಯಕತ್ವ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಿ, ಆರ್ಥಿಕ ಶಿಸ್ತು ಹಾಗೂ ಉತ್ತಮ ಆಡಳಿತದ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು” ಎಂದು ಅರವಿಂದ್ ಬೆಲ್ಲದ್ ಸಲಹೆ ನೀಡಿದರು.


