ಬೆಂಗಳೂರು: ರಾಜ್ಯದಲ್ಲಿ ಜುಲೈ 1ರಿಂದ ಆರಂಭವಾಗಿರುವ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಪ್ರಕ್ರಿಯೆಯಲ್ಲಿ ಜಾತಿ ಅಥವಾ ಪ್ರವರ್ಗಕ್ಕೆ ಸಂಬಂಧಿಸಿದ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಈ ಮಾಹಿತಿ ನೀಡುವುದು ಸಂಪೂರ್ಣವಾಗಿ ಫಲಾನುಭವಿಗಳ ಇಚ್ಛೆಗೆ ಬಿಟ್ಟ ವಿಚಾರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನೆ ಅಂಗವಾಗಿ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ಫಲಾನುಭವಿಯ ಪ್ರವರ್ಗ ಅಥವಾ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಮಾಹಿತಿ ಕೇಳುತ್ತಿರುವ ಕುರಿತು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ಗೊಂದಲಗಳಿಗೆ ಸ್ಪಷ್ಟನೆ ನೀಡಿರುವ ಬೆಸ್ಕಾಂ, ಜಾತಿ ಮಾಹಿತಿ ನೀಡಲು ಫಲಾನುಭವಿಗಳು ಇಚ್ಛಿಸದಿದ್ದರೆ ಮೊಬೈಲ್ ಅಪ್ಲಿಕೇಶನ್ನಲ್ಲಿ ಇರುವ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ದಾಖಲಿಸುವಂತೆ ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆ 2023ರ ಜುಲೈನಲ್ಲಿ ಜಾರಿಗೆ ಬಂದಿತ್ತು. ಇದೀಗ ಯೋಜನೆಯ ಫಲಾನುಭವಿಗಳ ಮಾಹಿತಿ ಹಾಗೂ ದಾಖಲೆಗಳ ಮರುಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಕೈಗೊಂಡಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಮೀಟರ್ ರೀಡರ್ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮೊಬೈಲ್ ಅಪ್ಲಿಕೇಶನ್ ಹಾಗೂ ಘೋಷಣಾ ಪತ್ರದ ಮೂಲಕ ಮಾಹಿತಿ ದಾಖಲಿಸುತ್ತಿದ್ದಾರೆ.
ಮನೆ-ಮನೆ ಪರಿಶೀಲನೆ ವೇಳೆ ಆಧಾರ್ ಕಾರ್ಡ್, ಪಾಸ್ಪೋರ್ಟ್ ಗಾತ್ರದ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಅಗತ್ಯವಿದ್ದಲ್ಲಿ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಕೆಲವು ದಾಖಲೆಗಳನ್ನು ತೋರಿಸುವಂತೆ ಫಲಾನುಭವಿಗಳಿಗೆ ಮನವಿ ಮಾಡಲಾಗಿದೆ. ಜಾತಿ ಪ್ರಮಾಣಪತ್ರದ ಮಾಹಿತಿಯನ್ನು ಕೇಳಲಾಗಿದ್ದರೂ, ಅದನ್ನು ಒದಗಿಸುವುದು ಕಡ್ಡಾಯವಲ್ಲ ಎಂಬುದನ್ನು ಬೆಸ್ಕಾಂ ಪುನರುಚ್ಚರಿಸಿದೆ.

