Home Blog

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ಪ್ರಶಾಂತನಗರದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯಲ್ಲಿ ಪತಿ ಪ್ರಕಾಶ್ (54), ಪತ್ನಿ ಪ್ರಭಾ (46) ಹಾಗೂ ಪುತ್ರ ಶಶಾಂಕ್ (21) ಮೃತಪಟ್ಟಿದ್ದಾರೆ.

ಮೃತ ಪ್ರಕಾಶ್ ರಾಯ್ಕರ್ ಗಂಗಾವತಿಯಲ್ಲಿ ಜ್ಯುವೆಲರಿ ಅಂಗಡಿ ನಡೆಸುತ್ತಿದ್ದರು. ಸಾಲದ ಒತ್ತಡದಿಂದಾಗಿ ಕುಟುಂಬ ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದು, ಇದೇ ಕಾರಣಕ್ಕೆ ಈ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಕುಟುಂಬದ ಮೂವರು ಮನೆಯೊಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಹಿತಿ ತಿಳಿದ ಕೂಡಲೇ ಗಂಗಾವತಿ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಸಾಲಬಾಧೆಯೇ ಈ ದುರ್ಘಟನೆಗೆ ಪ್ರಮುಖ ಕಾರಣವೇ ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಸೋನಂ, ಸಿಯಾ ಬಳಿಕ ಇದೀಗ ರೂಬಿ ಪ್ರಕರಣ: ಪತಿಯನ್ನು ಕೊಂದು ಬಾತ್ ರೂಮ್ʼನಲ್ಲೇ ಶವ ಹೂತಿಟ್ಟ ಪತ್ನಿ

ಲಕ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಚ್ಚಿಬೀಳಿಸುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪತ್ನಿಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಬಾತ್‌ರೂಂ ನೆಲದಡಿ ಹೂತು, ಬಳಿಕ ಪತಿ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿ ನಾಟಕವಾಡಿದ್ದ ಘಟನೆ ತನಿಖೆಯಲ್ಲಿ ಬಯಲಾಗಿದೆ.

ಆರೋಪಿ ರೂಬಿ ಶರ್ಮಾ ತನ್ನ ಪತಿ ಸುರೇಂದ್ರ ಶರ್ಮಾ ಸುಮಾರು ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದರು. ಆದರೆ, 45 ದಿನಗಳ ಬಳಿಕ ನಡೆದ ವಿಚಾರಣೆಯಲ್ಲಿ ರೂಬಿ ಸತ್ಯ ಒಪ್ಪಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ.

ತನಿಖೆಯ ಅವಧಿಯಲ್ಲಿ ರೂಬಿ, ಪೊಲೀಸರೊಂದಿಗೆ ಪತಿಗಾಗಿ ಹುಡುಕಾಟ ನಡೆಸುವಂತೆ ನಟಿಸಿದ್ದಳು. ನೆರೆಹೊರೆಯವರ ಮುಂದೆ ಕಣ್ಣೀರು ಹಾಕುತ್ತಾ, ಪತಿ ಕಾಣೆಯಾಗಿರುವ ನೋವಿನಲ್ಲಿ ಇದ್ದಂತೆ ವರ್ತಿಸಿ ಎಲ್ಲರ ಸಹಾನುಭೂತಿ ಪಡೆಯಲು ಪ್ರಯತ್ನಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಸುರೇಂದ್ರ ಶರ್ಮಾ ಅವರ ಸಹೋದರರಿಗೆ ರೂಬಿ ನೀಡುತ್ತಿದ್ದ ಮಾಹಿತಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿದ್ದವು. ಪತಿ ನಾಪತ್ತೆಯಾದ ದಿನದ ಕುರಿತು ಆಕೆ ಪದೇಪದೆ ಬದಲಾಗುವ ಹೇಳಿಕೆ ನೀಡುತ್ತಿದ್ದ ಕಾರಣ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಮನೆಯಲ್ಲೇ ಮರುಶೋಧ ನಡೆಸಿದಾಗ, ಬಾತ್‌ರೂಂನಲ್ಲಿ ಹೊಸದಾಗಿ ಅಳವಡಿಸಲಾಗಿದ್ದ ಟೈಲ್ಸ್ ಅನುಮಾನಕ್ಕೆ ಕಾರಣವಾಯಿತು. ನೆಲವನ್ನು ಒಡೆದು ಪರಿಶೀಲಿಸಿದಾಗ ಕಾಂಕ್ರೀಟ್ ಅಡಿಯಲ್ಲಿ ಹೂತಿದ್ದ ಅಸ್ಥಿಪಂಜರ ಪತ್ತೆಯಾಯಿತು. ಬಳಿಕ ಶವವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸಾವಿನ ನಿಖರ ಕಾರಣ ವರದಿ ಬಂದ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಸುರೇಂದ್ರ ಶರ್ಮಾ ಕಳೆದ ಕೆಲವು ವರ್ಷಗಳಿಂದ ನಿರುದ್ಯೋಗಿಯಾಗಿದ್ದು, ಮದ್ಯದ ಚಟಕ್ಕೆ ಬಿದ್ದಿದ್ದರು. ಮದ್ಯ ಖರೀದಿಸಲು ಪತ್ನಿಯಿಂದ ಆಗಾಗ ಹಣ ಕೇಳುತ್ತಿದ್ದರು. ಹಣ ನೀಡಲು ನಿರಾಕರಿಸಿದರೆ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಕಾರಣದಿಂದ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುಮಾರು 16 ವರ್ಷಗಳ ಹಿಂದೆ ವಿವಾಹವಾಗಿದ್ದ ಸುರೇಂದ್ರ ಮತ್ತು ರೂಬಿ ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ. ಕುಟುಂಬದ ಪ್ರಮುಖ ಆದಾಯ ಮೂಲ ಸುರೇಂದ್ರ ಅವರ ತಂದೆಯ ಪಿಂಚಣಿಯಾಗಿದ್ದು, ಅದನ್ನು ಸುರೇಂದ್ರ ಹಾಗೂ ಅವರ ಸಹೋದರ ಅನಿಲ್ ಶರ್ಮಾ ಹಂಚಿಕೊಂಡು ಬಳಸುತ್ತಿದ್ದರು.

ಪೊಲೀಸರ ಶಂಕೆಯಂತೆ ಮೇ 18ರಂದು ಸುರೇಂದ್ರ ಶರ್ಮಾ ಅವರನ್ನು ಕೊಲೆ ಮಾಡಲಾಗಿದೆ. ತನಿಖೆಯಲ್ಲಿ ಮತ್ತೊಂದು ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದ್ದು, ರೂಬಿ ಮೊದಲು ಪಾಯಸದಲ್ಲಿ ಹೆಚ್ಚಿನ ಪ್ರಮಾಣದ ನಿದ್ರೆ ಮಾತ್ರೆಗಳನ್ನು ಬೆರೆಸಿ ಪತಿಗೆ ನೀಡಿದ್ದಾಳೆ ಎನ್ನಲಾಗಿದೆ. ಪ್ರಜ್ಞಾಹೀನರಾದ ಬಳಿಕ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿಯಲಿದೆ.

ಮದ್ಯ ಸೇವಿಸಿದ ಬಳಿಕ ಸುರೇಂದ್ರ ಗಂಟೆಗಟ್ಟಲೆ ನಿದ್ರಿಸುವುದು ಕುಟುಂಬಕ್ಕೆ ಸಾಮಾನ್ಯವಾಗಿದ್ದ ಕಾರಣ, ಅವರು ಚಲನೆಯಿಲ್ಲದೆ ಮಲಗಿದ್ದರೂ ಇಬ್ಬರು ಪುತ್ರಿಯರಿಗೆ ಯಾವುದೇ ಅನುಮಾನ ಬಂದಿರಲಿಲ್ಲ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ನಡೆದ ಮರುದಿನ ರೂಬಿ ತನ್ನ ಇಬ್ಬರು ಪುತ್ರಿಯರನ್ನು ಸುರೇಂದ್ರ ಅವರ ಸಹೋದರ ಅನಿಲ್ ಶರ್ಮಾ ಅವರ ಮನೆಗೆ ಬಿಟ್ಟು ತಾನೊಬ್ಬಳೇ ಮನೆಗೆ ಹಿಂದಿರುಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ್ದು ಬ್ಯಾಂಕ್ ಖಾತೆಯ ಎಟಿಎಂ ವಹಿವಾಟು. ಪಿಂಚಣಿ ಹಣ ಜಮೆಯಾಗುತ್ತಿದ್ದ ಖಾತೆಯ ಎಟಿಎಂ ಕಾರ್ಡ್ ಸುರೇಂದ್ರ ಅವರ ಬಳಿಯೇ ಇತ್ತು. ಅವರು ನಾಪತ್ತೆಯಾದ ಬಳಿಕವೂ ಖಾತೆಯಿಂದ ಹಣ ಡ್ರಾ ಆಗುತ್ತಿರುವುದನ್ನು ಸಹೋದರ ಅನಿಲ್ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಿಂದ ತನಿಖೆಯ ದಿಕ್ಕೇ ಬದಲಾಗಿದ್ದು, ಕೊಲೆ ರಹಸ್ಯ ಬಯಲಾಗಿದೆ.

ಪ್ರಸ್ತುತ ರೂಬಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ. ಕೊಲೆಯ ಹಿಂದೆ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

ಉಪ ಪೊಲೀಸ್ ಆಯುಕ್ತ ಸಯ್ಯದ್ ಅಲಿ ಅಬ್ಬಾಸ್ ಮಾತನಾಡಿ, “ಒಬ್ಬ ಮಹಿಳೆ ಮಾತ್ರವೇ ವ್ಯಕ್ತಿಯನ್ನು ಕೊಲೆ ಮಾಡಿ, ಮನೆಯೊಳಗೆ ಗುಂಡಿ ತೋಡಿ ಶವವನ್ನು ಹೂಳುವುದು ಸುಲಭದ ಕೆಲಸವಲ್ಲ. ಹೀಗಾಗಿ ಈ ಕೃತ್ಯದಲ್ಲಿ ಮತ್ತಾರಾದರೂ ಭಾಗಿಯಾಗಿರುವ ಸಾಧ್ಯತೆಯನ್ನು ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ. ರೂಬಿ ಹೊರತುಪಡಿಸಿ ಇತರರ ಪಾತ್ರವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

India vs England 2nd T20: 2ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ವೈಭವ್‌ʼಗೆ ಅವಕಾಶ ಸಿಗುತ್ತಾ?

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಉಭಯ ತಂಡಗಳು ಗೆಲುವಿನ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿವೆ.

ಈ ನಡುವೆ ಆತಿಥೇಯ ಇಂಗ್ಲೆಂಡ್ ಈಗಾಗಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಭಾರತದ ಸಂಭಾವ್ಯ ಪ್ಲೇಯಿಂಗ್ 11 ಬಗ್ಗೆ ಕುತೂಹಲ ಹೆಚ್ಚಾಗಿದೆ. ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದ್ದರೂ, ಕೆಲ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ಹೀಗಾಗಿ ಎರಡನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡಲಾಗುತ್ತದೆಯೇ ಎಂಬ ಚರ್ಚೆ ಜೋರಾಗಿದೆ. ಆದರೆ ಲಭ್ಯವಿರುವ ಮಾಹಿತಿಯ ಪ್ರಕಾರ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಮಹತ್ವದ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ?

ಮೊದಲ ಟಿ20 ಹಾಗೂ ಅದಕ್ಕೂ ಮುನ್ನ ಐರ್ಲೆಂಡ್ ವಿರುದ್ಧದ ಸರಣಿಯಲ್ಲೂ ದೊಡ್ಡ ಮೊತ್ತ ಗಳಿಸಲು ವಿಫಲರಾಗಿದ್ದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರೊಂದಿಗೆ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.

ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್‌ಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ತಂಡದ ಆಡಳಿತ ಮಂಡಳಿ ಅವರ ಮೇಲೆ ವಿಶ್ವಾಸ ಮುಂದುವರಿಸುವ ಸಾಧ್ಯತೆ ಇದೆ.

ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆ ಇಲ್ಲ

ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್‌ಗೆ ಇಳಿಯಲಿದ್ದು, ಐದನೇ ಸ್ಥಾನದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವ ಸಾಧ್ಯತೆ ಇದೆ. ತಿಲಕ್ ಅವರ ಸ್ಟ್ರೈಕ್‌ರೇಟ್ ಬಗ್ಗೆ ಟೀಕೆಗಳಿದ್ದರೂ, ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

ಆಲ್‌ರೌಂಡರ್‌ಗಳಾಗಿ ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಪ್ರಮುಖ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ಸಾಧ್ಯತೆ

ಮೊದಲ ಪಂದ್ಯದಲ್ಲಿ ಭಾರತ ಮೂರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು. ಆದರೆ ಮ್ಯಾಂಚೆಸ್ಟರ್‌ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡನೇ ಪಂದ್ಯದಲ್ಲಿ ಹೆಚ್ಚುವರಿ ವೇಗದ ಬೌಲರ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ರವಿ ಬಿಷ್ಣೋಯಿ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್‌ಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇದೆ. ಮತ್ತೊಂದೆಡೆ ವರುಣ್ ಚಕ್ರವರ್ತಿ ಪ್ರಮುಖ ಸ್ಪಿನ್ನರ್ ಆಗಿ ತಂಡದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಈ ಬದಲಾವಣೆ ನಡೆದರೆ ಭಾರತ ತಂಡದಲ್ಲಿ ಒಂದೇ ಒಂದು ಬದಲಾವಣೆ ಆಗಲಿದೆ.

ಇದರೊಂದಿಗೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಈ ಪಂದ್ಯದಲ್ಲೂ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11:

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ/ರವಿ ಬಿಷ್ಣೋಯಿ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್.

ಇಂಗ್ಲೆಂಡ್‌ನ ಪ್ಲೇಯಿಂಗ್ 11:

ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ವಿಲ್ ಜ್ಯಾಕ್ಸ್, ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್.

ಭಾರತ-ಇಂಗ್ಲೆಂಡ್ 2ನೇ ಟಿ20ಗೆ ಮಳೆ ಅಡ್ಡಿಯಾಗುತ್ತಾ? ಮ್ಯಾಂಚೆಸ್ಟರ್ ಹವಾಮಾನ ವರದಿ ಏನು ಹೇಳುತ್ತೆ?

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರಿಂದ, ಇದೀಗ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 189 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತ್ತು. ಆದರೆ ಇಂಗ್ಲೆಂಡ್‌ ತಂಡ ಗುರಿ ಬೆನ್ನಟ್ಟುವ ಮುನ್ನವೇ ಮಳೆ ಸುರಿದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಮ್ಯಾಂಚೆಸ್ಟರ್‌ನಲ್ಲಿ ಹವಾಮಾನ ಹೇಗಿರಲಿದೆ?

ಹವಾಮಾನ ಮುನ್ಸೂಚನೆಯ ಪ್ರಕಾರ, ಪಂದ್ಯದ ದಿನ ಮ್ಯಾಂಚೆಸ್ಟರ್‌ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ಟಾಸ್‌ಗೆ ಮುನ್ನ ತುಂತುರು ಮಳೆಯ ಸಾಧ್ಯತೆ ಇದ್ದರೂ, ಪಂದ್ಯದ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಮಧ್ಯಾಹ್ನ 1ರಿಂದ ಸಂಜೆ 6 ಗಂಟೆಯವರೆಗೆ ಮಳೆಯ ಸಾಧ್ಯತೆ ಶೇಕಡಾ 24ರಿಂದ ಶೇಕಡಾ 13ಕ್ಕೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಆದರೆ ಪಂದ್ಯ ಅಂತ್ಯದ ವೇಳೆಗೆ, ಅಂದರೆ ಸ್ಥಳೀಯ ಸಮಯ ಸಂಜೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ, ಕೊನೆಯ ಹಂತದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಮೋಡ ಕವಿದ ವಾತಾವರಣದಿಂದ ಆಟಗಾರರಿಗೆ ತೀವ್ರ ಬಿಸಿಲಿನ ತಾಪದ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆಯಿದೆ.

ಮ್ಯಾಂಚೆಸ್ಟರ್‌ನಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆ

ಮ್ಯಾಂಚೆಸ್ಟರ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ ಎರಡು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಆರು ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಆದರೆ ಎರಡನೇ ಮುಖಾಮುಖಿಯಲ್ಲಿ ಭಾರತ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 159 ರನ್‌ಗಳಿಗೆ ಸೀಮಿತವಾಗಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅಜೇಯ ಶತಕ ಸಿಡಿಸಿ ಗೆಲುವಿನ ರೂವಾರಿ ಆಗಿದ್ದರು. ರಾಹುಲ್ ಕೇವಲ 54 ಎಸೆತಗಳಲ್ಲಿ 101 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿ ಭಾರತವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದ್ದರು.

ಮೊದಲ ಪಂದ್ಯ ಮಳೆಯಿಂದ ರದ್ದಾದ ಹಿನ್ನೆಲೆಯಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಮಳೆ ಅಡ್ಡಿಯಾಗದಿದ್ದರೆ ಅಭಿಮಾನಿಗಳಿಗೆ ರೋಚಕ ಹಣಾಹಣಿ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ.

480 ಕೋಟಿ ರೂ. ವೆಚ್ಚದ ಜೋಧ್ ಪುರ ಹೊಸ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಜೈಪುರ: ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ ಸುಮಾರು 480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮುಂದಿನ ಹತ್ತು ವರ್ಷಗಳಿಗೆ 28,840 ಕೋಟಿ ರೂ. ಅನುದಾನ ಹೊಂದಿರುವ ಪರಿಷ್ಕೃತ ಉಡಾನ್ (UDAN) ಯೋಜನೆಗೂ ಅಧಿಕೃತ ಚಾಲನೆ ನೀಡಿದರು.

ಪ್ರಧಾನಿ ಮೋದಿ ಜೋಧ್‌ಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜಸ್ಥಾನ ರಾಜ್ಯಪಾಲ ಹರಿಭಾವು ಬಾಗಡೆ, ಕೇಂದ್ರ ಜಲಶಕ್ತಿ ಸಚಿವ ಹಾಗೂ ಜೋಧ್‌ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್, ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಸೇರಿದಂತೆ ಹಲವು ಗಣ್ಯರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ನೂತನ ಟರ್ಮಿನಲ್ ಕಟ್ಟಡದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಿದರು. ನಂತರ ಟರ್ಮಿನಲ್‌ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪ್ರಯಾಣಿಕರಿಗಾಗಿ ಕಲ್ಪಿಸಲಾಗಿರುವ ಆಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು.

ಸುಮಾರು 23 ಸಾವಿರ ಚದರ ಮೀಟರ್‌ಗೂ ಅಧಿಕ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಈ ನೂತನ ಟರ್ಮಿನಲ್ ವರ್ಷಕ್ಕೆ ಸುಮಾರು 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಭವಿಷ್ಯದಲ್ಲಿ ಹೆಚ್ಚಾಗುವ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ.

ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಸೇವೆ ಒದಗಿಸುವ ಉದ್ದೇಶದಿಂದ ವಿಶಾಲ ನಿರೀಕ್ಷಣಾ ಕೊಠಡಿಗಳು, ಸುಧಾರಿತ ಚೆಕ್-ಇನ್ ವ್ಯವಸ್ಥೆ, ಅತ್ಯಾಧುನಿಕ ಭದ್ರತಾ ತಪಾಸಣಾ ವ್ಯವಸ್ಥೆ ಸೇರಿದಂತೆ ಹಲವು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಟರ್ಮಿನಲ್‌ನಲ್ಲಿ ಅಳವಡಿಸಲಾಗಿದೆ.

ಈ ಟರ್ಮಿನಲ್‌ನ ವಿನ್ಯಾಸವು ರಾಜಸ್ಥಾನದ ಸಾಂಪ್ರದಾಯಿಕ ರಾಜಮನೆತನದ ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದಿದ್ದು, ಕಮಾನುಗಳು, ಝರೋಖಾಗಳು ಸೇರಿದಂತೆ ರಾಜಸ್ಥಾನಿ ಶೈಲಿಯ ಅಂಶಗಳನ್ನು ಆಧುನಿಕ ವಾಸ್ತುಶಿಲ್ಪದೊಂದಿಗೆ ಸಂಯೋಜಿಸಿ ನಿರ್ಮಿಸಲಾಗಿದೆ. ಇದರಿಂದ ಕಟ್ಟಡಕ್ಕೆ ವಿಶಿಷ್ಟ ಸಾಂಸ್ಕೃತಿಕ ಗುರುತು ಲಭಿಸಿದೆ.

ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಸ್ಥಳೀಯ ಜಾನಪದ ಕಲಾವಿದರು ರಾಜಸ್ಥಾನದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ನೃತ್ಯ ಮತ್ತು ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ಪರಿಷ್ಕೃತ ಉಡಾನ್ ಯೋಜನೆಗೂ ಚಾಲನೆ ನೀಡಿದರು. ಮುಂದಿನ ಹತ್ತು ವರ್ಷಗಳಿಗೆ 28,840 ಕೋಟಿ ರೂ. ಅನುದಾನ ಹೊಂದಿರುವ ಈ ಯೋಜನೆ ದೇಶದ ನಾಗರಿಕ ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಹೊಸ ಉತ್ತೇಜನ ನೀಡುವ ಗುರಿ ಹೊಂದಿದೆ.

ಪರಿಷ್ಕೃತ ಉಡಾನ್ ಯೋಜನೆಯಡಿ ಪ್ರಾದೇಶಿಕ ವಿಮಾನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು, ಸಣ್ಣ ಮತ್ತು ಮಧ್ಯಮ ನಗರಗಳಿಗೆ ವಿಮಾನ ಸೇವೆಯನ್ನು ವಿಸ್ತರಿಸುವುದು, ವಿಮಾನ ಪ್ರಯಾಣವನ್ನು ಸಾಮಾನ್ಯ ಜನರಿಗೆ ಇನ್ನಷ್ಟು ಕೈಗೆಟುಕುವಂತೆ ಮಾಡುವುದು ಹಾಗೂ ದೇಶದಾದ್ಯಂತ ಸಮಗ್ರ ಮತ್ತು ಸುಸ್ಥಿರ ವಿಮಾನ ಸಂಪರ್ಕ ವ್ಯವಸ್ಥೆ ನಿರ್ಮಿಸುವುದಕ್ಕೆ ಆದ್ಯತೆ ನೀಡಲಾಗುತ್ತದೆ.

BLOಗಳೇ ಹಣ ನೀಡಿ ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾ.ರಾ. ಮಹೇಶ್ ಗಂಭೀರ ಆರೋಪ

ಮೈಸೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಬಂಧ ಮಾಜಿ ಸಚಿವ ಸಾ.ರಾ. ಮಹೇಶ್ ಗಂಭೀರ ಆರೋಪಗಳನ್ನು ಮಾಡಿದ್ದು, ಬೂತ್ ಮಟ್ಟದ ಅಧಿಕಾರಿಗಳೇ (ಬಿಎಲ್ಒ) ಹಣ ನೀಡಿ ಇತರರಿಂದ ಅರ್ಜಿಗಳನ್ನು ಭರ್ತಿ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಮೂರು ವಾರ್ಡ್‌ಗಳಲ್ಲಿ ಮತದಾರರ ಅರ್ಜಿಗಳನ್ನು ಸಂಬಂಧಪಟ್ಟ ವ್ಯಕ್ತಿಗಳ ಬದಲು ಇತರರಿಂದ ಭರ್ತಿ ಮಾಡಿಸಲಾಗುತ್ತಿದೆ ಎಂದು ಹೇಳಿದರು.

“ಬಿಎಲ್ಒಗಳೇ ಒಂದು ಅರ್ಜಿಗೆ ₹50 ನೀಡುವ ಮೂಲಕ ಕೆಲ ಕಾರ್ಯಕರ್ತರಿಂದ ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಸಾಧ್ಯವಾಗದ ಕಾರಣ, ತಮ್ಮ ಖರ್ಚಿನಲ್ಲೇ ಇತರರನ್ನು ಬಳಸಿಕೊಂಡು ಕೆಲಸ ಮಾಡಿಸುತ್ತಿದ್ದಾರೆ” ಎಂದು ಸಾ.ರಾ. ಮಹೇಶ್ ಆರೋಪಿಸಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಅವರು, “ಗೃಹ ಸಚಿವರ ಹೇಳಿಕೆ ನೋಡಿದರೆ ಅವರಿಗೆ ಕಾನೂನಿನ ಅರಿವು ಇಲ್ಲ ಎನ್ನುವ ಭಾವನೆ ಮೂಡುತ್ತದೆ. ಕಾನೂನು ತಿಳಿದವರು ಮಾತನಾಡುವ ರೀತಿಯಲ್ಲಿ ಅವರು ಮಾತನಾಡಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ, “ಈ ವಿಷಯದಲ್ಲಿ ಸರ್ಕಾರದ ಇತರ ಸಚಿವರು ಯಾರೂ ಮಾತನಾಡುತ್ತಿಲ್ಲ. ಆದರೆ ಗೃಹ ಸಚಿವರು ಮಾತ್ರ ಈ ಪ್ರಕ್ರಿಯೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಏಕೆ? ಕಾನೂನುಬಾಹಿರ ಎಂದು ಆರೋಪಿಸಲಾಗುತ್ತಿರುವ ವಿಷಯವನ್ನು ಅವರು ಯಾಕೆ ಸಮರ್ಥಿಸುತ್ತಿದ್ದಾರೆ? ಎಸ್‌ಐಆರ್ ಎಂಬ ವಿಚಾರ ಪ್ರಸ್ತಾಪವಾದ ತಕ್ಷಣ ಗೃಹ ಸಚಿವರಿಗೆ ಭಯ ಏಕೆ?” ಎಂದು ಪ್ರಶ್ನಿಸಿದರು.

ವಿದೇಶಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾಕಿಸ್ತಾನ ಉಪಪ್ರಧಾನಿ ಸಂಬಂಧಿ ಅರೆಸ್ಟ್

ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್‌ನಲ್ಲಿ ಇಬ್ಬರು ವಿದೇಶಿ ಮಹಿಳೆಯರ ಅಪಹರಣ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರ ಸಂಬಂಧಿ ಎನ್ನಲಾದ ಪ್ರಮುಖ ಶಂಕಿತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಹಮ್ಮದ್ ರಜಾ ದಾರ್, ಹಸನ್ ರಜಾ, ಸಿಕಂದರ್ ಖಾನ್ ಮತ್ತು ಸಾಜಿದ್ ಅಲಿ ಎಂದು ಗುರುತಿಸಲಾಗಿದ್ದು, ಲಾಹೋರ್ ನ್ಯಾಯಾಲಯವು ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಮುಖ ಶಂಕಿತ ಮುಹಮ್ಮದ್ ರಜಾ ದಾರ್ ಅವರು ಪಾಕಿಸ್ತಾನದ ಉಪಪ್ರಧಾನಿ ಇಶಾಕ್ ದಾರ್ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ. ಪ್ರಕರಣದ ಸೂಕ್ಷ್ಮ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದ ವಿವರಗಳ ಪ್ರಕಾರ, ಜೂನ್ 29ರಂದು ಲಾಹೋರ್‌ನಲ್ಲಿ ನೆದರ್ಲ್ಯಾಂಡ್ಸ್‌ನ ಒಬ್ಬರು ಹಾಗೂ ವೆನೆಜುವೆಲಾದ ಮತ್ತೊಬ್ಬರು ಸೇರಿದಂತೆ ಇಬ್ಬರು ವಿದೇಶಿ ಮಹಿಳೆಯರನ್ನು ಐವರು ಆರೋಪಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತೆಯೊಬ್ಬರ ತಂದೆ ಸ್ಪೇನ್‌ನಿಂದ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿ ಮಹಿಳೆಯರನ್ನು ಸುರಕ್ಷಿತವಾಗಿ ಪತ್ತೆಹಚ್ಚಲಾಗಿದೆ. ನಂತರ ಪೊಲೀಸರು ಐವರು ಶಂಕಿತರ ವಿರುದ್ಧ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 365A (ಅಪಹರಣ) ಹಾಗೂ ಸೆಕ್ಷನ್ 375A (ಸಾಮೂಹಿಕ ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, 2025ರ ಅಕ್ಟೋಬರ್‌ನಲ್ಲಿ ಸಿಂಗಾಪುರದಲ್ಲಿ ಪ್ರಮುಖ ಆರೋಪಿ ರಜಾ ದಾರ್ ಮತ್ತು ಸಂತ್ರಸ್ತೆಯರ ಪರಿಚಯವಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಕ್ರಿಪ್ಟೋಕರೆನ್ಸಿ ಉದ್ಯಮದಲ್ಲಿ ವ್ಯವಹಾರಿಕ ಪಾಲುದಾರರಾಗಿದ್ದ ಅವರು, ಮಹಿಳೆಯರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ್ದು, ವ್ಯವಹಾರ ವೀಸಾ ವ್ಯವಸ್ಥೆಯನ್ನೂ ಮಾಡಿಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯರು ಜೂನ್ 29ರಂದು ಲಾಹೋರ್‌ಗೆ ಬಂದಿಳಿದ ಬಳಿಕ, ಆರೋಪಿಗಳು ಅವರನ್ನು ಅಪಹರಿಸಿ ಖಾಸಗಿ ನಿವಾಸಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಬಿಡುಗಡೆ ಮಾಡಲು ಹಣದ ಬೇಡಿಕೆಯನ್ನೂ ಇಟ್ಟಿದ್ದರು ಎಂದು ಸಂತ್ರಸ್ತೆಯರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಪರಾರಿಯಾಗಿರುವ ಐದನೇ ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗೆ ಜಮೀನು ಮಾರಾಟಕ್ಕೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ವ್ಯಕ್ತಿ ತನ್ನ ಆಸ್ತಿ ಹಕ್ಕುಗಳನ್ನು ಕಳೆದುಕೊಳ್ಳುವುದಿಲ್ಲ. ಜೈಲಿನಲ್ಲಿದ್ದಾನೆ ಎಂಬ ಕಾರಣಕ್ಕೆ ಆತನ ನಾಗರಿಕ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿ ಬಸವರಾಜು ಶಂಕರಪ್ಪ ಅವ್ವಣ್ಣವರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ತೀರ್ಪಿನಲ್ಲಿ, ವಿಚಾರಣಾಧೀನ ಕೈದಿಗೂ ಸಾಮಾನ್ಯ ನಾಗರಿಕನಿಗಿರುವ ಎಲ್ಲ ಕಾನೂನುಬದ್ಧ ಹಕ್ಕುಗಳು ಮುಂದುವರೆಯುತ್ತವೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ತನ್ನ ಚರ ಹಾಗೂ ಸ್ಥಿರ ಆಸ್ತಿಯನ್ನು ಮಾರಾಟ ಮಾಡುವುದು, ವರ್ಗಾಯಿಸುವುದು ಅಥವಾ ನೋಂದಣಿ ಮಾಡಿಸುವ ಹಕ್ಕು ಆತನಿಗೆ ಇದೆ. ಕೇವಲ ಜೈಲಿನಲ್ಲಿರುವ ಕಾರಣಕ್ಕೆ ಈ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಅಲ್ಲದೆ, ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯನ್ನು ‘ನಾಗರಿಕ ಮರಣ’ ಹೊಂದಿದವನಂತೆ ಪರಿಗಣಿಸಲಾಗುವುದಿಲ್ಲ. ಜೈಲು ಶಿಕ್ಷೆ ಅಥವಾ ನ್ಯಾಯಾಂಗ ಬಂಧನದಿಂದ ವ್ಯಕ್ತಿಯ ಆಸ್ತಿ ಮಾಲೀಕತ್ವ ಅಥವಾ ಕಾನೂನುಬದ್ಧ ಹಕ್ಕುಗಳು ಅಂತ್ಯಗೊಳ್ಳುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನೋಂದಣಿ ಕಾಯ್ದೆ-1908ರ ಸೆಕ್ಷನ್ 38 ಅನ್ನು ಉಲ್ಲೇಖಿಸಿರುವ ನ್ಯಾಯಾಲಯ, ಜೈಲಿನಲ್ಲಿರುವ ವ್ಯಕ್ತಿಯನ್ನು ಕಡ್ಡಾಯವಾಗಿ ಉಪನೋಂದಣಾಧಿಕಾರಿ ಕಚೇರಿಗೆ ಕರೆತರಬೇಕೆಂಬ ನಿಯಮವಿಲ್ಲ. ಬದಲಾಗಿ, ಉಪನೋಂದಣಾಧಿಕಾರಿಯೇ ಜೈಲಿಗೆ ತೆರಳಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯ ಅನುಮತಿ ಹಾಗೂ ಭದ್ರತಾ ವ್ಯವಸ್ಥೆ ಕಲ್ಪಿಸುವುದು ಜೈಲು ಅಧಿಕಾರಿಗಳ ಕರ್ತವ್ಯ ಎಂದು ನಿರ್ದೇಶನ ನೀಡಿದೆ.

ಅರ್ಜಿದಾರರು ಯಾವುದೇ ವಿಶೇಷ ಸೌಲಭ್ಯವನ್ನು ಕೇಳುತ್ತಿಲ್ಲ. ಶಾಸನದಿಂದ ದೊರೆತಿರುವ ಕಾನೂನುಬದ್ಧ ಹಕ್ಕನ್ನು ಜಾರಿಗೊಳಿಸುವಂತೆ ಮಾತ್ರ ಮನವಿ ಮಾಡಿದ್ದಾರೆ. ಆಡಳಿತಾತ್ಮಕ ತೊಂದರೆ ಅಥವಾ ನಿರ್ಲಕ್ಷ್ಯವನ್ನು ನೆಪವನ್ನಾಗಿ ಮಾಡಿಕೊಂಡು ನಾಗರಿಕರ ಕಾನೂನುಬದ್ಧ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಉಪನೋಂದಣಾಧಿಕಾರಿಗಳು ಜೈಲಿಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಅನುಮತಿ ಹಾಗೂ ಸೂಕ್ತ ಭದ್ರತೆ ಒದಗಿಸುವಂತೆ ಧಾರವಾಡ ಕೇಂದ್ರ ಕಾರಾಗೃಹದ ವರಿಷ್ಠಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ: ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಚಾರಣಾಧೀನ ಕೈದಿಯಾಗಿರುವ ಧಾರವಾಡ ಜಿಲ್ಲೆಯ ಕಮಲಾಪುರ ಗ್ರಾಮದ ಬಸವರಾಜು ಶಂಕರಪ್ಪ ಅವ್ವಣ್ಣವರ ತಮ್ಮ 22 ಗುಂಟೆ ಜಮೀನನ್ನು ಮಾರಾಟ ಮಾಡಲು ಮುಂದಾಗಿದ್ದರು. ಆದರೆ ಜೈಲಿನಲ್ಲಿದ್ದ ಕಾರಣ ಉಪನೋಂದಣಾಧಿಕಾರಿ ಕಚೇರಿಗೆ ಖುದ್ದು ತೆರಳಲು ಸಾಧ್ಯವಾಗಿರಲಿಲ್ಲ. ಉಪನೋಂದಣಾಧಿಕಾರಿಗಳು ಜೈಲಿಗೆ ಬಂದು ನೋಂದಣಿ ನಡೆಸಲು ಸಮ್ಮತಿಸಿದ್ದರೂ, ಜೈಲು ಅಧಿಕಾರಿಗಳಿಂದ ಅಗತ್ಯ ಸಹಕಾರ ಸಿಗದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಬ್ರೈನ್ ಟ್ಯೂಮರ್‌ಗೆ ಬಲಿಯಾದ ರಿಯಾಲಿಟಿ ಶೋ ಸ್ಪರ್ಧಿ ಪದ್ದು ಗೌಡ

ಬೆಂಗಳೂರು: ಖಾಸಗಿ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ಸೀಸನ್ 2 ಮೂಲಕ ಖ್ಯಾತಿ ಪಡೆದಿದ್ದ ಪದ್ಮನಾಭ ಕೆ.ಎಂ (ಪದ್ದು ಗೌಡ) ಅವರು ಬ್ರೈನ್ ಟ್ಯೂಮರ್‌ನಿಂದ ಮೃತಪಟ್ಟಿದ್ದಾರೆ.

ಮಾಡೆಲ್ ಹಾಗೂ ನಿರೂಪಕರಾಗಿಯೂ ಕಾರ್ಯನಿರ್ವಹಿಸಿದ್ದ 44 ವರ್ಷದ ಪದ್ದು ಗೌಡ ಅವರು ಬೆಂಗಳೂರಿನ ಯಲಹಂಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಅವರು ನಂತರ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಅವರ ನಿಧನಕ್ಕೆ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪದ್ಮನಾಭ ಗೌಡ ಅವರು ಪತ್ನಿ ಅಶ್ವಿನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

ಕೆಆರ್ ಸರ್ಕಲ್‌ನಲ್ಲಿ ಇವಿ ಬಿಎಂಟಿಸಿ ಬಸ್‌ಗಳ ಭೀಕರ ಡಿಕ್ಕಿ; 16 ಮಂದಿಗೆ ಗಾಯ, ಚಿಕಿತ್ಸಾ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಣೆ

ಬೆಂಗಳೂರು: ನಗರದ ಕೆ.ಆರ್. ಸರ್ಕಲ್‌ನಲ್ಲಿ ಎರಡು ಎಲೆಕ್ಟ್ರಿಕ್ ಬಿಎಂಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬೈರತಿ ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ನಡೆದ ಅಪಘಾತದಲ್ಲಿ ಒಟ್ಟು 16 ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ದೇವರ ದಯೆಯಿಂದ ಕೆಲವರನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗುತ್ತಿದ್ದು, ಮೂವರು ಗಾಯಾಳುಗಳಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆ.ಆರ್. ಸರ್ಕಲ್ ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಇವಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಇವಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಬಿಎಂಟಿಸಿ ಸಿಬ್ಬಂದಿ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಚಿವ ಬೈರತಿ ಸುರೇಶ್ ಘೋಷಿಸಿದರು. ಅಲ್ಲದೆ, ಚಾಲಕನ ವೇಗ ಅಥವಾ ನಿರ್ಲಕ್ಷ್ಯ ಕಾರಣವೇ ಎಂಬುದನ್ನು ತನಿಖೆ ನಡೆಸಲಾಗುವುದು. ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳ ತಾಂತ್ರಿಕ ಹಾಗೂ ಕಾರ್ಯಾಚರಣೆಯ ಸ್ಥಿತಿಗತಿ ಕುರಿತು ಸಮಗ್ರ ವರದಿ ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.