ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ರಬ್ಬರ್ ತೋಟವೊಂದರಲ್ಲಿ ಯುವಕನ ಅಸ್ಥಿಪಂಜರ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸಂಚಲನ ಮೂಡಿಸಿದೆ. ಘಟನೆಗೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅರಳಿಕೊಪ್ಪ ನಿವಾಸಿ ಎಲ್ಡೋ ಅವರಿಗೆ ಸೇರಿದ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮೂಳೆಗಳು ಮಾತ್ರ ಉಳಿದಿರುವ ಸ್ಥಿತಿ ಕಂಡುಬಂದಿದೆ. ತೋಟದ ಕೆಲಸಗಾರರು ಈ ದೃಶ್ಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪತ್ತೆಯಾದ ಅಸ್ಥಿಪಂಜರವು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಕಾರ್ಮಿಕ ಬಿಬಿನ್ನದ್ದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬಿಬಿನ್ ಇದೇ ತೋಟದಲ್ಲಿ ಕೆಲಸ ಮಾಡುತ್ತಿದ್ದನು. ಘಟನೆ ಸ್ಥಳದಲ್ಲಿ ಅವನು ಬಳಸುತ್ತಿದ್ದ ಜರ್ಕಿನ್ ಪತ್ತೆಯಾಗಿರುವುದು ಅನುಮಾನಕ್ಕೆ ಬಲ ನೀಡಿದೆ. ಈ ಸಂಬಂಧ ಬಿಬಿನ್ ಕುಟುಂಬಸ್ಥರು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬಂದಿದೆ.
ಎಫ್ಎಸ್ಎಲ್ ತಂಡದ ಸಹಾಯದಿಂದ ತನಿಖೆ ಮುಂದುವರಿದಿದ್ದು, ಪ್ರಕರಣದ ಸೂಕ್ಷ್ಮ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

