ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ಮನಕಲಕುವ ಘಟನೆ ಸಂಭವಿಸಿದೆ. ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿದ್ದಾನೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಮೃತ ಬಾಲಕ ತ್ರಿಲೋಕ್ ಜೈನ್, ಕೊಡನವಳ್ಳಿ ಗ್ರಾಮದ ಗೌತಮ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದು, ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಮಧ್ಯಾಹ್ನದ ವೇಳೆ ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಅಸ್ವಸ್ಥಗೊಂಡು ನೆಲಕ್ಕುರುಳಿದ್ದಾನೆ.
ಘಟನೆ ಗಮನಿಸಿದ ಶಿಕ್ಷಕರು ಹಾಗೂ ಸಿಬ್ಬಂದಿ ಕೂಡಲೇ ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲುವೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ದುರಂತದಿಂದ ಕುಟುಂಬಸ್ಥರು, ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಬಾಲಕ ಹೃದಯಾಘಾತಕ್ಕೆ ಒಳಗಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಸಾವಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಹಿಂದೆ ಬಾಲಕನಿಗೆ ಯಾವುದೇ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆ ಇತ್ತೇ ಅಥವಾ ಬೇರೆ ವೈದ್ಯಕೀಯ ಕಾರಣಗಳಿವೆಯೇ ಎಂಬುದು ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ವರದಿ ಬಳಿಕ ಸ್ಪಷ್ಟವಾಗಲಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ವೈದ್ಯಕೀಯ ವರದಿಯ ನಿರೀಕ್ಷೆಯಿದೆ. ಪುಟ್ಟ ವಯಸ್ಸಿನಲ್ಲೇ ತ್ರಿಲೋಕ್ ಜೈನ್ ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

