Home Blog

ಹಾವೇರಿ ಎನ್‌ಎಚ್ 48 ದುರಂತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ನವದಂಪತಿ ಸಾವು

0

ಹಾವೇರಿ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮದುವೆಯಾಗಿ ಕೇವಲ 15 ದಿನಗಳಾಗಿದ್ದ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ನಲ್ಲಿ ನಡೆದಿದೆ.

ನಿಂತಿದ್ದ ಲಾರಿಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಜ್ಜಿಹೋಗಿದೆ. ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಹಾಗೂ ಅವರ ಪತ್ನಿ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ದೇವರ ದರ್ಶನಕ್ಕೆ ತೆರಳಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದರು. ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

ಈ ದುರಂತದಿಂದ ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಹಾವೇರಿ ನಗರದಲ್ಲಿ ಶೋಕ ವಾತಾವರಣ ಮನೆಮಾಡಿದೆ.

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ!

0

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಕೆಲವೇ ಗಂಟೆಗಳ ಒಳಗೆ, ಇರಾನ್ ಮಾಧ್ಯಮವೂ ಸುಪ್ರೀಂ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ದೃಢಪಡಿಸಿದೆ.

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಸ್ಟೇಟ್ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆಯಿಂದ ಇರಾನ್ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ‘ಟ್ರುತ್ ಸೋಶಿಯಲ್’ನಲ್ಲಿ ಖಮೇನಿಯನ್ನು “ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ” ಎಂದು ವಿವರಿಸಿ, ಇದರಿಂದ ಅಮೆರಿಕ ಮತ್ತು ಜಾಗತಿಕ ನ್ಯಾಯವು ಸಾಧ್ಯವಾಯಿತು ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ಇರಾನ್‌ನ ಐಆರ್‌ಜಿಸಿ, ಸೇನೆ ಮತ್ತು ಭದ್ರತಾ ಪಡೆಗಳು ಮುಂದಿನ ಹೋರಾಟಕ್ಕೆ ತಯಾರಾಗಿಲ್ಲವೆಂಬ ಮಾಹಿತಿ ಲಭ್ಯವಾಗಿದೆ.

ಒಂದೇ ದಿನದಲ್ಲಿ ಇರಾನ್ ದೇಶವು ಬಹಳಷ್ಟು ನಾಶವಾಗಿದೆ, ಆದರೆ ಮಧ್ಯಪ್ರಾಚ್ಯ ಮತ್ತು ಜಗತ್ತಿನಲ್ಲಿ ಶಾಂತಿ ಸ್ಥಾಪಿಸುವವರೆಗೆ ನಿಖರ ಮತ್ತು ದೊಡ್ಡ ದಾಳಿಗಳನ್ನು ಮುಂದುವರಿಸಲು ನಾವು ತಯಾರಾಗಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ. ಈ ಘಟನೆ ಮಧ್ಯಪ್ರಾಚ್ಯ ಭದ್ರತೆ ಮತ್ತು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಉದ್ವಿಗ್ನತೆ ಉಂಟುಮಾಡಿದೆ, ಹಾಗೂ ಜಾಗತಿಕ ಸಮುದಾಯ ಮತ್ತು ಮಧ್ಯಪ್ರಾಚ್ಯ ಪ್ರದೇಶದ ರಾಜ್ಯಗಳಿಗೆ ಗಂಭೀರ ಪರಿಣಾಮ ಬೀರಲಿದೆ.

 

ಮಂಗಳೂರು ಏರ್‌ಪೋರ್ಟ್‌ನಿಂದ ದುಬೈಗೆ ವಿಮಾನಗಳ ಹಾರಾಟ ತಾತ್ಕಾಲಿಕ ಸ್ಥಗಿತ!

ಮಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ತಾತ್ಕಾಲಿಕ ವ್ಯತ್ಯಯ ಕಂಡುಬಂದಿದೆ.

ನಿಗದಿಯಾಗಿದ್ದ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು ಹಠಾತ್ ರದ್ದುಗೊಳಿಸಲ್ಪಟ್ಟಿದ್ದು, ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳು ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರದ್ದಾದ ವಿಮಾನಗಳು:

  • 9.25 AM: ಮಂಗಳೂರು – ಮಸ್ಕತ್, ಏರ್ ಇಂಡಿಯಾ ಎಕ್ಸ್‌ಪ್ರೆಸ್
  • 1.20 PM: ಮಂಗಳೂರು – ದುಬೈ, ಏರ್ ಇಂಡಿಯಾ ಎಕ್ಸ್‌ಪ್ರೆಸ್
  • 7.15 PM: ಮಂಗಳೂರು – ದುಬೈ, ಇಂಡಿಗೋ
  • 8.15 PM: ಮಂಗಳೂರು – ದುಬೈ, ಏರ್ ಇಂಡಿಯಾ ಎಕ್ಸ್‌ಪ್ರೆಸ್
  • 8.55 PM: ಮಂಗಳೂರು – ಬಹರೇನ್, ಏರ್ ಇಂಡಿಯಾ ಎಕ್ಸ್‌ಪ್ರೆಸ್
  • 9.05 PM: ಮಂಗಳೂರು – ಅಬುಧಾಬಿ, ಇಂಡಿಗೋ

ಸೂಚನೆಗಳು:

  • ಇರಾನ್ ವಾಯು ಮಾರ್ಗದಲ್ಲಿ ವಿಮಾನ ಹಾರಾಟ ನಿಷೇಧಗೊಂಡಿರುವ ಹಿನ್ನೆಲೆಯಲ್ಲಿ ಗಲ್ಪ್ ರಾಷ್ಟ್ರಗಳಿಗೆ ತೆರಳುವ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.
  • ಪ್ರಯಾಣಿಕರಿಗೆ ತಮ್ಮ ವಿಮಾನ ಸಂಸ್ಥೆಯಿಂದ ಹಾರಾಟ ಖಚಿತಗೊಂಡ ನಂತರ ಮಾತ್ರ ವಿಮಾನ ನಿಲ್ದಾಣಕ್ಕೆ ಆಗಮಿಸಲು ಅಧಿಕಾರಿಗಳು ಮನವಿ ಮಾಡಿದ್ದಾರೆ.
  • ಹೆಚ್ಚಿನ ಮಾಹಿತಿ ಮತ್ತು ಟಿಕೆಟ್ ಸಂಬಂಧಿ ವಿಚಾರಗಳಿಗಾಗಿ ಸಂಸ್ಥೆಗಳ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಸ್ರೇಲ್–ಇರಾನ್ ಸಂಘರ್ಷದಿಂದ ಮಧ್ಯಪ್ರಾಚ್ಯದ ಗಾಳಿಯ ಉದ್ವಿಗ್ನತೆ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಪ್ರಯಾಣಿಕರು ಈ ಕಾರಣಕ್ಕೆ ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ.

 

ಇರಾನ್ ಯುದ್ಧದ ಎಫೆಕ್ಟ್; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

0

ಇರಾನ್ ಯುದ್ಧದ ಎಫೆಕ್ಟ್ ನಿಂದಾಗಿ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,68,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,54,630 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 1ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,653 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ.

ಮಾ.3ರಂದು ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವ

0

ವಿಜಯಸಾಕ್ಷಿ ಸುದ್ದಿ, ಗದಗ: ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳು ಅವರ 112ನೇ ಜಯಂತ್ಯುತ್ಸವವನ್ನು ಮಾರ್ಚ್ 3ರಂದು ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಕೆ.ಎಚ್. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದ ಅಂಗವಾಗಿ ಸರ್ವಧರ್ಮ ಸಾಮೂಹಿಕ ವಿವಾಹ ನಡೆಯಲಿದೆ ಎಂದು ದಿ. ಕೆ. ಎಚ್. ಪಾಟೀಲ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪೀರಸಾಬ ಕೌತಾಳ ತಿಳಿಸಿದ್ದಾರೆ.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 3ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ 1012 ಕುಂಭೋತ್ಸವದೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ. ನಂತರ ಮಧ್ಯಾಹ್ನ 12.30ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳು ಹಾಗೂ ಶಿವಕುಮಾರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು ವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಡಿ. ಆರ್. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆನಂದಸ್ವಾಮಿ ಗಡ್ಡದೇವರಮಠ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ವೇಳೆ ಮಾರ್ಚ್ 2ರಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ರಸಮಂಜರಿ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸತ್ಕಾರ ಸಮಾರಂಭ ಏರ್ಪಡಿಸಲಾಗಿದೆ. ಪುಟ್ಟರಾಜ ಗವಾಯಿಗಳ ಭಕ್ತರು ಹಾಗೂ ಕೆ.ಎಚ್. ಪಾಟೀಲ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪೀರಸಾಬ ಕೌತಾಳ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ್ ಮುಳಗುಂದ, ಆನಂದ ಸಾಲಿಗ್ರಾಮ, ಚಂದ್ರು ಕಡಕೊಳ, ದಾವಲಸಾಬ ಇರಕಲ್, ವಿನೋದ್ ಶಿದ್ಲಿಂಗ ಸೇರಿದಂತೆ ಅನೇಕರಿದ್ದರು.

ಮಾ. 11ರಿಂದ ಸರ್ಕಾರಿ ವೈದ್ಯಾಧಿಕಾರಿ–ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಮಲ್ಲಿಕಾರ್ಜುನ

0

ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಇಲಾಖೆಯ ಪ್ರಮುಖ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರದ ಗಮನಕ್ಕೆ ತರಲಾಗಿದೆ. ಆದಾಗ್ಯೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೋರಾಟದ ಮಾರ್ಗ ಹಿಡಿಯಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಮಾರ್ಚ್ 11ರಿಂದ 15ರವರೆಗೆ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ನೌಕರರು ಕಪ್ಪುಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಈ ಅವಧಿಯಲ್ಲಿ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಹೊರಬರದಿದ್ದರೆ, ಮಾರ್ಚ್ 16ರಿಂದ ತುರ್ತು ಸೇವೆಗಳನ್ನೂ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಗೈರುಹಾಜರಾಗಿ ಮುಷ್ಕರ ಮುಂದುವರಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಹಾಗೂ ನೌಕರರ ಹೋರಾಟಕ್ಕೆ ಸಂಘದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ಡಾ. ಶರಣು ಗಾಣಿಗೇರ, ಮಲ್ಲಿಕಾರ್ಜುನ ಕಲಕಂಬಿ, ಡಾ. ಅರುಣಪ್ರಸಾದ, ಅಜಯಕುಮಾರ ಕಲಾಲ, ಡಾ. ಪ್ರಲ್ಹಾದ ಹೊಸಮನಿ, ರವಿ ಗುಂಜೀಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಮುಖ ಬೇಡಿಕೆಗಳು

*ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕ ಔಷಧಿಗಳ ಸರಬರಾಜು

*ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ

*ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ನಿಯಮಿತವಾಗಿ ಪ್ರಕಟಣೆ

*ಅರ್ಹ ಅಧಿಕಾರಿ–ನೌಕರರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ಇತರ ಆಡಳಿತಾತ್ಮಕ ಸಮಸ್ಯೆಗಳ ಪರಿಹಾರ

ಡಾ. ಸಂಗಮೇಶ ತಮ್ಮನಗೌಡ್ರರಿಗೆ `ಕವಿ ಕಾವ್ಯ ವಿಭೂಷಣ’ ರಾಷ್ಟ್ರೀಯ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾಹಿತಿ ಡಾ. ಸಂಗಮೇಶ ತಮ್ಮನಗೌಡ್ರ ಅವರಿಗೆ ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ `ಕವಿ ಕಾವ್ಯ ವಿಭೂಷಣ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

ವೃತ್ತಿಯಿಂದ ಶಿಕ್ಷಕರಾಗಿ, ಶಿರಹಟ್ಟಿ ತಾಲೂಕಿನ ಕಡಕೋಳದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಹಿರಿಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ತಮ್ಮನಗೌಡ್ರ ಅವರು 1989ರಿಂದ ಗ್ರಂಥಗಳನ್ನು ಪ್ರಕಟಿಸುತ್ತಿದ್ದು, ಇದುವರೆಗೆ 115 ಪುಸ್ತಕ ಬಿಡುಗಡೆಗೊಳಿಸಿದ್ದಾರೆ.

ವೇದಿಕೆಯಲ್ಲಿ ಸಮ್ಮೇಳನದ ಅಧ್ಯಕ್ಷರಾದ ನಾಡೋಜ ಡಾ. ಕೃಷ್ಣಪ್ರಸಾದ ಕೂಡ್ಲು, ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನರಾವ ಬೇಕಲ್, ಪ್ರದೀಪ ಬೇಕಲ್, ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಡಾ. ಕೊಳಚಪ್ಪೆ ಗೋವಿಂದ ಭಟ್, ಪ್ರದೀಪಕುಮಾರ ಕಲ್ಕೂರ, ನಂ. ವಿಜಯಕುಮಾರ, ಡಾ. ಸುರೇಶ ನೆಗಳಗುಳಿ, ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾಂದಗಳವರು, ಶ್ರೀಮದ್ ಎಡೆನೀರು ಮಠಾಧೀಶರು, ಶ್ರೀ ಶಂಕರಾಚಾರ್ಯ ಸಂಸ್ಥಾನಮಠ ಕಾಸರಗೋಡು, ಡಾ. ಕೆ.ಜಿ. ವೆಂಕಟೇಶ, ಡಾ. ಬಾಲಕೃಷ್ಣ ಮದ್ದೋಡಿ, ಡಾ. ಸಂಗಮೇಶ ತಮ್ಮನಗೌಡ್ರ, ಇರಾ ನೇಮು ಪೂಜಾರಿ, ವಿಶಾಲಾಕ್ಷ ಪುತ್ರಕಳಾ, ಜಯಾನಂದ ಪೆರಾಜೆ, ಡಾ. ಶಾಂತಾ ಮತ್ತೂರ, ಸತ್ಯವತಿ ಭಟ್, ಕೊಳಚಪ್ಪು, ರತ್ನಾ ಗಿರೋಸಾ ಬದಿ, ಅಲ್ಲಾಸಾಬ ನದಾಫ, ಮಂಜುನಾಥ ಡೋಣಿ ಮುಂತಾದವರು ಪಾಲ್ಗೊಂಡಿದ್ದರು.

ಪ್ರಶಸ್ತಿ ವಿಜೇತ ಸಾಹಿತಿಗಳಿಗೆ ರಾಮಗಿರಿಯ ವರಕವಿ ಡಾ. ದ.ರಾ. ಬೇಂದ್ರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ಶಂಕ್ರಪ್ಪ ಶಿಳ್ಳಿನ, ಕಡಕೋಳದ ಕೆ.ಪಿ.ಎಸ್. ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಕನಕಮ್ಮ, ಕೆ.ಪಿ.ಎಸ್. ಪ್ರೌಢಶಾಲಾ ಉಪಪ್ರಾಚಾರ್ಯರಾದ ಎನ್.ವ್ಹಿ. ಮುಲ್ಕಿಗೌಡ್ರ ಮತ್ತು ಕೆ.ಪಿ.ಎಸ್. ಪ್ರಾಥಮಿಕ ಶಾಲಾ ವಿಭಾಗದ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಗೋವನಾಳದ ಪೂಜ್ಯ ಶ್ರೀ ರಮೇಶ ಮಹಾಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಾ, ಸಾಹಿತಿಗಳಾದ ಡಾ. ಸಂಗಮೇಶ ತಮ್ಮನಗೌಡ್ರ ಅವರು ನಮ್ಮ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿರುವುದು ಹೆಮ್ಮೆಯ ವಿಷಯವಾಗಿದೆ. 115 ಕೃತಿಗಳನ್ನು ಬರೆದು ಪ್ರಕಟಿಸುವುದು ಸಾಮಾನ್ಯ ಮಾತಲ್ಲ. ಅಂತಹ ಸಾಹಸದ ಕೆಲಸಕ್ಕೆ ಅವರು ಕೈ ಹಾಕಿರುವುದು ಕನ್ನಡ ನಾಡು-ನುಡಿಯ ಅಭಿಮಾನದ ತುಡಿತವನ್ನು ಎತ್ತಿ ತೋರಿಸುತ್ತದೆ. ಅವರು ಸಾಹಿತ್ಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಮೌಲ್ಯಯುತ ಕೃತಿಗಳನ್ನು ಪ್ರಕಟಿಸಲಿ ಎಂದು ಶುಭ ನುಡಿದರು.

‘ಕಲಿಕಾ ಹಬ್ಬ’ ಮಕ್ಕಳ ಕಲಿಕೆಗೆ ಪ್ರೇರಣೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣೆ, ಸಂತಸದಾಯಕ ಕಲಿಕೆ ಮತ್ತು ಪ್ರತಿಭಾನ್ವೇಷಣೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಛಬ್ಬಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಶಿರಹಟ್ಟಿ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗುಡ್ಡದಪುರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕೀ ನಾಯ್ಕ, ಕಲಿಕಾ ಹಬ್ಬವು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾಗಿದೆ. ಮಕ್ಕಳ ಕಲಿಕಾ ಪ್ರತಿಭೆಯನ್ನು ಹೊರತರುವ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿರುವ ಈ ಹಬ್ಬ, ಮಕ್ಕಳಲ್ಲಿ ಕಲಿಕೆಯ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆಯಾಗುತ್ತದೆ ಎಂದರು.

ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದಾಯಕ ಕಲಿಕೆಯನ್ನು ಉತ್ತೇಜಿಸುವ ಜೊತೆಗೆ ಅವರಲ್ಲಿರುವ ಅಡಗಿದ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ಎಫ್‌ಎಲ್‌ಎನ್ ಕಲಿಕಾ ಹಬ್ಬ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕ ಭಿನ್ನತೆಗಳಿರುತ್ತವೆ. ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಹಾಗೂ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಪರಿಕಲ್ಪನೆ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಆರ್‌ಪಿ ಗೀತಾ ಸರವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಇಸಿಓ ಆರ್.ಬಿ. ಪವಾರ, ಎಸ್‌ಡಿಎಂಸಿ ಅಧ್ಯಕ್ಷರಾದ ಕೃಷ್ಣಪ್ಪ ಲಮಾಣಿ, ಸದಸ್ಯರಾದ ರೂಪಾ ಲಮಾಣಿ, ಶೇಖಪ್ಪ ಲಮಾಣಿ, ಶಿಕ್ಷಣ ಪ್ರೇಮಿಗಳಾದ ದೀಪಕ್ ಲಮಾಣಿ, ಲಕ್ಷ್ಮಣ ಲಮಾಣಿ, ತಿಪ್ಪಣ್ಣ ಲಮಾಣಿ, ಸಂಘದ ನಿರ್ದೇಶಕ ಮೋಹನ ಮಾಂಡ್ರೆ, ಬಿಆರ್‌ಪಿ ಬಿ.ಎಂ. ಯರಗುಪ್ಪಿ, ಛಬ್ಬಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗೀತಾ ಸರವಿ, ಸಿಆರ್‌ಪಿ ಮಿತ್ರರಾದ ಆರ್. ಮಹಾಂತೇಶ, ಮುತ್ತು ಸಾವಿರಕುರಿ, ಉಮೇಶ್ ನೇಕಾರ, ಗಿರೀಶ್ ನೇಕಾರ, ಎನ್.ಎ. ಮುಲ್ಲಾ, ಕೆ.ಪಿ. ಕಂಬಳಿ, ಉಪ ಪ್ರಾಚಾರ್ಯ ಅರವಟಗಿ ಸೇರಿದಂತೆ ಛಬ್ಬಿ ಕ್ಲಸ್ಟರ್‌ನ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಕಲಿಕಾ ಹಬ್ಬದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳು, ಸೃಜನಾತ್ಮಕ ಚಟುವಟಿಕೆಗಳು ಮತ್ತು ಕಲಿಕಾ ಪ್ರದರ್ಶನಗಳು ನಡೆಯಿತು. ಹಬ್ಬದ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ಪ್ರವಾಹಕ್ಕೆ ತರುವ ಪ್ರಯತ್ನ ಗಮನಾರ್ಹವಾಗಿತ್ತು.

ಸಂದೀಪ್‌ಗೆ ಪಿಎಚ್‌ಡಿ ಪದವಿ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಹಿಳಾ ವಿ.ವಿ ಸಹಾಯಕ ಪ್ರಾಧ್ಯಾಪಕ ಸಂದೀಪ್ ಅವರು ಸಲ್ಲಿಸಿದ್ದ, `ಕವರೇಜ್ ಆಫ್ ಸೈಬರ್ ಕ್ರೈಮ್: ಅ ಕಂಪಾರೇಟಿವ್ ಸ್ಟಡಿ ಅಮಂಗ್ ಕನ್ನಡ ಆಂಡ್ ಇಂಗ್ಲೀಷ್ ಡೈಲೀಸ್’ ಕುರಿತ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿದೆ.

ಸಂದೀಪ್ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಜೆ.ಎಂ. ಚಂದುನವರ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಉಡುಪಿಯವರಾದ ಸಂದೀಪ್ ಅವರು ವಿಜಯಪುರ ಮಹಿಳಾ ವಿ.ವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇಸ್ರೇಲ್–ಅಮೆರಿಕ ದಾಳಿಗೆ ಇರಾನ್ ಕೌಂಟರ್ ಅಟ್ಯಾಕ್: ದುಬೈನಲ್ಲೂ ಸ್ಫೋಟ!

ಟೆಹ್ರಾನ್: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಶನಿವಾರ ಅಬುಧಾಬಿ, ದುಬೈ, ದೋಹಾ ಹಾಗೂ ರಿಯಾದ್ ನಗರಗಳತ್ತ ಕ್ಷಿಪಣಿ ದಾಳಿ ನಡೆಸಿದೆ.

ಅಬುಧಾಬಿಯ ವಸತಿ ಪ್ರದೇಶದಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದ ಪರಿಣಾಮ ಏಷ್ಯಾದ ಮೂಲದ ಒಬ್ಬ ವ್ಯಕ್ತಿ ಸಾವನ್ನಪ್ಪಿರುವುದಾಗಿ ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ದಾಳಿಯನ್ನು “ನಾಗರಿಕರ ಸುರಕ್ಷತೆಗೆ ಬೆದರಿಕೆ ಹಾಗೂ ಪ್ರಾದೇಶಿಕ ಸ್ಥಿರತೆಯನ್ನು ಹಾಳು ಮಾಡುವ ಹೇಡಿತನದ ಕೃತ್ಯ” ಎಂದು ಸಚಿವಾಲಯ ಖಂಡಿಸಿದೆ.

ದುಬೈ ನಿವಾಸಿಗಳ ಪ್ರಕಾರ, ಸ್ಫೋಟದ ಭಾರೀ ಸದ್ದು ಕೇಳಿಬಂದಿದ್ದು, ಆಕಾಶದಲ್ಲಿ ಕ್ಷಿಪಣಿಗಳು ಹಾರಾಡುತ್ತಿರುವುದು ಗೋಚರಿಸಿತು. ಸ್ಫೋಟದ ತೀವ್ರತೆಗೆ ಕಟ್ಟಡಗಳ ಕಿಟಕಿಗಳು ನಡುಗಿದವು ಎಂದು ತಿಳಿಸಿದ್ದಾರೆ.

ಈ ನಗರಗಳು ಅಮೆರಿಕದ ಸೈನಿಕ ನೆಲೆಗಳನ್ನು ಹೊಂದಿರುವುದರಿಂದ ತೀವ್ರತೆ ಹೆಚ್ಚಾಗಿದೆ. ಅಬುಧಾಬಿಯ ಅಲ್ ಧಾಫ್ರಾ ವಾಯುನೆಲೆ ಯುಎಇ ಮತ್ತು ಅಮೆರಿಕ ವಾಯುಪಡೆಗಳು ಹಂಚಿಕೊಂಡಿರುವ ತಾಣವಾಗಿದೆ. ದುಬೈನ ಜೆಬೆಲ್ ಅಲಿ ಬಂದರು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೌಕಾಪಡೆಯ ಪ್ರಮುಖ ಸಂಪರ್ಕ ಬಂದರಾಗಿದ್ದು, ವಿಮಾನವಾಹಕ ನೌಕೆಗಳು ಇಲ್ಲಿ ನಿಯಮಿತವಾಗಿ ತಂಗುತ್ತವೆ.

ದೋಹಾದ ಅಲ್ ಉದೈದ್ ವಾಯುನೆಲೆ ಯುಎಸ್ ಸೆಂಟ್ರಲ್ ಕಮಾಂಡ್‌ನ ಮುಂಚೂಣಿ ಪ್ರಧಾನ ಕಚೇರಿಯಾಗಿದೆ. ಸೌದಿ ಅರೇಬಿಯಾದಲ್ಲೂ 2,000 ಕ್ಕೂ ಹೆಚ್ಚು ಅಮೆರಿಕ ಸೈನಿಕರು ನೆಲೆಸಿದ್ದು, ರಿಯಾದ್ ಸಮೀಪದ ಪ್ರಿನ್ಸ್ ಸುಲ್ತಾನ್ ವಾಯುನೆಲೆ ಪ್ರಮುಖ ರಕ್ಷಣಾತ್ಮಕ ತಾಣವಾಗಿದೆ. ಇಲ್ಲಿ ಪೇಟ್ರಿಯಾಟ್ ಕ್ಷಿಪಣಿ ವ್ಯವಸ್ಥೆಗಳು ಹಾಗೂ ಟರ್ಮಿನಲ್ ಹೈ ಆಲ್ಟಿಟ್ಯೂಡ್ ಏರಿಯಾ ಡಿಫೆನ್ಸ್ ವ್ಯವಸ್ಥೆಗಳು ನಿಯೋಜಿಸಲಾಗಿದೆ.

ಒಟ್ಟಾರೆ, ಇಸ್ರೇಲ್–ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್ ಕೈಗೊಂಡಿರುವ ಕ್ರಮಗಳಿಂದ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ವಾತಾವರಣ ಮತ್ತಷ್ಟು ಗಂಭೀರಗೊಂಡಿದೆ.

error: Content is protected !!