Home Blog

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು, ಪ್ರವಾಹದ ಆತಂಕ

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ ಆರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕರ್ನಾಟಕದತ್ತ ನದಿಗಳ ಒಳಹರಿವು ಗಣನೀಯವಾಗಿ ಹೆಚ್ಚಿದೆ. ರಾಜ್ಯಕ್ಕೆ ಒಟ್ಟು 98 ಸಾವಿರದಿಂದ 1 ಲಕ್ಷ ಕ್ಯೂಸೆಕ್‌ಗಿಂತ ಅಧಿಕ ನೀರು ಹರಿದು ಬರುತ್ತಿದ್ದು, ಕಳೆದ ಒಂದೇ ರಾತ್ರಿ ಕೃಷ್ಣಾ ನದಿಗೆ ಹೆಚ್ಚುವರಿಯಾಗಿ ಸುಮಾರು 28 ಸಾವಿರ ಕ್ಯೂಸೆಕ್ ನೀರು ಸೇರ್ಪಡೆಯಾಗಿದೆ.

ಭಾರೀ ಒಳಹರಿವಿನ ಪರಿಣಾಮ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ, ಘಟಪ್ರಭಾ, ಮಲಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ. ಮುಲ್ಲಾಂಕಿ–ದತ್ತವಾಡ, ಕಾರದಗಾ–ಬೋಜ್, ಅಕ್ಕೋಳ–ಸಿದ್ನಾಳ, ಜತ್ರಾಟ್–ಭೀವಶಿ, ಬಾರವಾಡ–ಕನ್ನೂರ ಹಾಗೂ ಬೋಜವಾಡಿ–ಗಜವರವಾಡಿ ಸೇರಿದಂತೆ ಹಲವು ಸಂಪರ್ಕ ಸೇತುವೆಗಳು ನೀರಿನಲ್ಲಿ ಮುಳುಗಿವೆ. ಇದರ ಪರಿಣಾಮವಾಗಿ 16ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ದೂದಗಂಗಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದ ಪಕ್ಕದ ಕೃಷಿ ಜಮೀನುಗಳಿಗೆ ನೀರು ನುಗ್ಗಿದೆ. ನಿಪ್ಪಾಣಿ ತಾಲೂಕಿನ ಶಿರದವಾಡ ಗ್ರಾಮದ ಹೊಲಗಳಲ್ಲಿ ಬೆಳೆದಿದ್ದ ಜೋಳ, ಉದ್ದು ಹಾಗೂ ಸೊಯಾಬೀನ್ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರೈತರು ಭಾರೀ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ.

ಮಳೆಗಾಗಿ ಕಾಯುತ್ತಿದ್ದ ರೈತರಿಗೆ ಇದೀಗ ಅತಿಯಾದ ಮಳೆ ಮತ್ತು ಪ್ರವಾಹವೇ ಸಂಕಷ್ಟ ತಂದೊಡ್ಡಿದ್ದು, ಬೆಳೆ ಹಾನಿಯಿಂದ ಆತಂಕ ಹೆಚ್ಚಾಗಿದೆ. ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಎಂಗೇಜ್ ಮೆಂಟ್ ಒಂದೆಡೆ, ರಹಸ್ಯ ಮದುವೆ ಮತ್ತೊಂದೆಡೆ: ಕ್ರಿಮಿನಲ್ ಬ್ಯೂಟಿ ಸಿಯಾ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಯಲು

ಮುಂಬೈ: ಭಾವಿ ಪತಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ನಾಲ್ಕು ತಿಂಗಳ ಹಿಂದೆಯೇ ರಹಸ್ಯವಾಗಿ ವಿವಾಹವಾಗಿದ್ದರು ಎಂಬ ಹೊಸ ಮಾಹಿತಿ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪುಣೆ ಗ್ರಾಮೀಣ ಪೊಲೀಸರು ಈ ಮಾಹಿತಿಯನ್ನು ಪರಿಶೀಲಿಸುತ್ತಿದ್ದು, ಸ್ಥಳೀಯ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಇಬ್ಬರೂ ವಿವಾಹ ನೋಂದಣಿ ಮಾಡಿಕೊಂಡಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮದುವೆ ನೋಂದಣಿಗೆ ಸಾಕ್ಷಿಗಳಾಗಿ ಸಹಿ ಹಾಕಿದ್ದಾರೆ ಎನ್ನಲಾದ ಸಿಯಾ ಅವರ ಇಬ್ಬರು ಕಾಲೇಜು ಸ್ನೇಹಿತರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾದ ಫೋಟೋವೊಂದರಲ್ಲಿ ಸಿಯಾ ಮತ್ತು ಚೇತನ್ ಹಾರ ಧರಿಸಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಇನ್‌ಸ್ಟಾಗ್ರಾಂ ಖಾತೆಯಿಂದ ಅಳಿಸಲಾದ ಫೋಟೋಗಳನ್ನು ಮರುಪಡೆಯಲು ಪೊಲೀಸರ ತಾಂತ್ರಿಕ ತಂಡ ಪ್ರಯತ್ನಿಸುತ್ತಿದೆ.

ಪ್ರಕರಣದ ತನಿಖೆ ಪ್ರಕಾರ, ಜೂನ್ 18ರಂದು ಪುಣೆ ಸಮೀಪದ ಲೋಹಗಡ ಕೋಟೆಯ ಎತ್ತರದ ಪ್ರದೇಶದಿಂದ ಕೇತನ್ ಅಗರ್ವಾಲ್ ಅವರನ್ನು ಅವರ ಭಾವಿ ಪತ್ನಿ ಸಿಯಾ ಗೋಯಲ್ (20) ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿ (22) ತಳ್ಳಿದ ಪರಿಣಾಮ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಈ ಪ್ರಕರಣದಲ್ಲಿ ಸಿಯಾ ಮತ್ತು ಚೇತನ್ ಇಬ್ಬರ ಪಾತ್ರವೂ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದು, ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

4 ದಿನಗಳ ಬಳಿಕ ಹುಂಡಿ ಎಣಿಕೆ ಪತ್ರಿಕಾ ಪ್ರಕಟಣೆ: ಅನುಮಾನಕ್ಕೆ ಕಾರಣವಾದ ತಾಲೂಕು ಆಡಳಿತದ ನಡೆ

ಕೊಪ್ಪಳ: ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ನಡೆದ ನಾಲ್ಕು ದಿನಗಳ ಬಳಿಕ ತಾಲೂಕು ಆಡಳಿತ ಪತ್ರಿಕಾ ಪ್ರಕಟಣೆ ಹೊರಡಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟವನ್ನು ಹನುಮಂತನ ಜನ್ಮಸ್ಥಳವೆಂದು ಭಕ್ತರು ನಂಬುತ್ತಾರೆ. ಜುಲೈ 3ರಂದು ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದರೂ, ಅದರ ವಿವರಗಳನ್ನು ನಾಲ್ಕು ದಿನಗಳ ಬಳಿಕ ಮಾತ್ರ ಅಧಿಕೃತವಾಗಿ ಪ್ರಕಟಿಸಲಾಗಿದೆ.

ತಾಲೂಕು ಆಡಳಿತದ ಈ ವಿಳಂಬದ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮಾಹಿತಿ ಪ್ರಕಟಿಸಲು ತಡವಾದ ಕಾರಣವೇನು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಇದಕ್ಕೂ ಮೊದಲು ಮಾರ್ಚ್ 23ರಂದು ಹುಂಡಿ ಎಣಿಕೆ ನಡೆದಿತ್ತು. ಕಳೆದ 94 ದಿನಗಳ ಅವಧಿಯಲ್ಲಿ ಭಕ್ತರಿಂದ ಒಟ್ಟು 71,77,460 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುಂಡಿಯಲ್ಲಿ ಭಾರತೀಯ ಕರೆನ್ಸಿಯ ಜೊತೆಗೆ ನೇಪಾಳ, ಅಮೆರಿಕಾ, ಥೈಲ್ಯಾಂಡ್ ಹಾಗೂ ಹಾಂಕಾಂಗ್ ದೇಶಗಳ ಕರೆನ್ಸಿಗಳೂ ಪತ್ತೆಯಾಗಿದ್ದು, ದೇಶ-ವಿದೇಶಗಳಿಂದ ಆಗಮಿಸುವ ಭಕ್ತರ ಸಂಖ್ಯೆಗೆ ಇದು ಸಾಕ್ಷಿಯಾಗಿದೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಹತ್ಯೆ ಮಾಡಿದ ನರ್ಸ್!

ಹೈದರಾಬಾದ್: ಪ್ರಿಯಕರನೊಂದಿಗಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ ನರ್ಸ್ ಪತ್ನಿಯೊಬ್ಬಳು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡನ ದೇಹಕ್ಕೆ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಸೇರಿದಂತೆ ರಾಸಾಯನಿಕ ದ್ರವವನ್ನು ಸೇರಿಸಿ ಹತ್ಯೆ ಮಾಡಿರುವ ಆಘಾತಕಾರಿ ಪ್ರಕರಣ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಪ್ರಶಾಂತ್ ಮೃತಪಟ್ಟವರು. ಇತ್ತೀಚೆಗಷ್ಟೇ ಗಲ್ಫ್ ದೇಶದಿಂದ ಊರಿಗೆ ಮರಳಿದ್ದ ಪ್ರಶಾಂತ್, ಪತ್ನಿ ಸಂಧ್ಯಾ ಮತ್ತು ಆಕೆಯ ಪ್ರಿಯಕರ ಅನಿಲ್ ನಡುವಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಧ್ಯಾ ತನ್ನ ಪರಿಚಯದ ವೆಂಕಟ ಸಾಯಿ ಅಲಿಯಾಸ್ ಬಂಟಿಗೆ ಪ್ರಶಾಂತ್‌ನೊಂದಿಗೆ ಸ್ನೇಹ ಬೆಳೆಸಿ ಮದ್ಯಪಾನ ಮಾಡಿಸುವಂತೆ ಸೂಚಿಸಿದ್ದಳು. ಜೂನ್ 29ರಂದು ಇಬ್ಬರೂ ಮದ್ಯ ಸೇವಿಸಿದ ಬಳಿಕ ಕಟ್ಟಡದ ಮೇಲ್ಛಾವಣಿಗೆ ತೆರಳಿದ್ದು, ಅಲ್ಲಿ ಸಂಧ್ಯಾ ಮತ್ತು ಬಂಟಿ ಸೇರಿ ಪ್ರಶಾಂತ್‌ನನ್ನು ಕೆಳಕ್ಕೆ ತಳ್ಳಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್‌ನನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಮೊದಲ ಸಂಚು ವಿಫಲವಾದ ಬಳಿಕ, ನರ್ಸ್ ಆಗಿರುವ ಸಂಧ್ಯಾ ತನ್ನ ವೈದ್ಯಕೀಯ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಆಸ್ಪತ್ರೆಯಲ್ಲೇ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಹಾಗೂ ಇತರೆ ರಾಸಾಯನಿಕಗಳನ್ನು ದೇಹಕ್ಕೆ ಸೇರಿಸಿದ್ದಾಳೆ. ಇದರಿಂದ ಪ್ರಶಾಂತ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಶಾಂತ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರ ತಾಯಿ ಜುಲೈ 1ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು, ಪ್ರಕರಣದ ಹಿಂದಿನ ಸಂಚನ್ನು ಬಯಲಿಗೆಳೆದಿದ್ದಾರೆ.

ವಿಚಾರಣೆ ವೇಳೆ ವೆಂಕಟ ಸಾಯಿ ಅಲಿಯಾಸ್ ಬಂಟಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದು, ಸಂಧ್ಯಾಳ ಸೂಚನೆಯಂತೆ ಪ್ರಶಾಂತ್‌ನನ್ನು ಟೆರೆಸ್‌ನಿಂದ ತಳ್ಳಿದ್ದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯಕ್ಕಾಗಿ ಸಂಧ್ಯಾಳೇ ಹಣ ನೀಡಿದ್ದಳು ಎಂಬ ಮಾಹಿತಿಯನ್ನೂ ಆತ ನೀಡಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 4ರಂದು ಸಂಧ್ಯಾ, ಆಕೆಯ ಪ್ರಿಯಕರ ಅನಿಲ್ ಹಾಗೂ ವೆಂಕಟ ಸಾಯಿ ಅಲಿಯಾಸ್ ಬಂಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂವರ ವಿರುದ್ಧ ಕೊಲೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ವಯನಾಡ್‌ ಭೂಕುಸಿತ ಮಾನವ ನಿರ್ಮಿತ ದುರಂತ; ಜೂನ್‌ 20ರಂದೇ ಮಣ್ಣು ತೆರವುಗೊಳಿಸಲು ಸೂಚಿಸಲಾಗಿತ್ತು ಎಂದ ಸಿಎಂ ಸತೀಶನ್‌

ವಯನಾಡ್: ಮೆಪ್ಪಾಡಿ ಸುರಂಗ ರಸ್ತೆ ನಿರ್ಮಾಣ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ದುರಂತಕ್ಕೆ ಸಂಬಂಧಿಸಿದಂತೆ, ಸುರಂಗ ಕಾಮಗಾರಿ ಪ್ರದೇಶದಿಂದ ಮಣ್ಣು ತೆರವುಗೊಳಿಸುವಂತೆ ಜೂನ್ 20ರಂದೇ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದ್ದರೂ, ಅದನ್ನು ಪಾಲಿಸದಿರುವುದೇ ದುರಂತಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ.

ದುರಂತದ ಕುರಿತು ಪ್ರತಿಕ್ರಿಯಿಸಿದ ವಿ.ಡಿ. ಸತೀಶನ್, ಮೀನಂಗಡಿ ಹಾಗೂ ಕೋಝಿಕ್ಕೋಡ್‌ನ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸುರಂಗ ರಸ್ತೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆ ಏಳು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸುರಂಗ ರಸ್ತೆ ನಿರ್ಮಾಣ ಪ್ರದೇಶದಿಂದ ಮಣ್ಣು ತೆರವುಗೊಳಿಸುವಂತೆ ಜೂನ್ 20ರಂದೇ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು. ಲೋಕೋಪಯೋಗಿ ಇಲಾಖೆ ಸಚಿವರೂ ಈ ಬಗ್ಗೆ ಎಚ್ಚರಿಕೆ ನೀಡಿದ್ದರೂ, ಗುತ್ತಿಗೆದಾರರು ಆದೇಶ ಪಾಲಿಸದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅವರು ಆರೋಪಿಸಿದರು.

ವಯನಾಡ್ ಜಿಲ್ಲೆಯಲ್ಲಿ ಈವರೆಗೆ 225 ಸೆಂ.ಮೀ. ಮಳೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಮಾತ್ರ 265 ಮಿ.ಮೀ. ಮಳೆ ದಾಖಲಾಗಿದೆ. ಭೂಕುಸಿತ ಪ್ರದೇಶದಲ್ಲಿ ಎಂಟು ಎಕ್ಸ್‌ಕವೇಟರ್‌ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ವಾಟ್ಸಪ್ʼನ ಹೊಸ ವೈಶಿಷ್ಟ್ಯ ಕುರಿತು ಕೇಂದ್ರ ಸರ್ಕಾರಕ್ಕೆ ಕಳವಳ: ಪ್ರತಿಕ್ರಿಯೆ ಸಲ್ಲಿಸಲು ಮೆಟಾಗೆ ಮತ್ತೆ ಮೂರು ದಿನಗಳ ಕಾಲಾವಕಾಶ

ನವದೆಹಲಿ: ವಾಟ್ಸಪ್‌ನಲ್ಲಿ ಪರಿಚಯಿಸಲು ಉದ್ದೇಶಿಸಿರುವ ‘ಯೂಸರ್‌ನೇಮ್’ (Username) ವೈಶಿಷ್ಟ್ಯದ ಕುರಿತು ಉದ್ಭವಿಸಿರುವ ಆತಂಕಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಟೆಕ್ ದೈತ್ಯ ಮೆಟಾಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಮೂರು ದಿನಗಳ ಕಾಲಾವಕಾಶ ನೀಡಿದೆ.

ಹೆಚ್ಚುವರಿ ಸಮಯ ನೀಡುವಂತೆ ಮೆಟಾ ಮನವಿ ಮಾಡಿದ್ದ ಹಿನ್ನೆಲೆ ಸರ್ಕಾರ ಈ ಅವಕಾಶ ಕಲ್ಪಿಸಿದೆ. ಈ ಮಧ್ಯೆ, ಎಲ್ಲಾ ಕಳವಳಗಳು ಮತ್ತು ತಾಂತ್ರಿಕ ವಿಚಾರಗಳು ಇತ್ಯರ್ಥವಾಗುವವರೆಗೆ ಭಾರತದಲ್ಲಿ ವಾಟ್ಸಪ್‌ನ ಹೊಸ ಯೂಸರ್‌ನೇಮ್ ವೈಶಿಷ್ಟ್ಯವನ್ನು ಜಾರಿಗೆ ತರುವುದಿಲ್ಲ ಎಂದು ಮೆಟಾ ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್ ನೀಡಿದ ಬಳಿಕ ಮೆಟಾ ಪ್ರತಿನಿಧಿಗಳು ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.

ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬಹಿರಂಗಪಡಿಸದೇ, ಯೂಸರ್‌ನೇಮ್ ಮೂಲಕ ಇತರರೊಂದಿಗೆ ಸಂಪರ್ಕ ಸಾಧಿಸುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಹೊಸ ವೈಶಿಷ್ಟ್ಯವನ್ನು ವಾಟ್ಸಪ್ ಪರೀಕ್ಷಿಸುತ್ತಿದೆ. ಶೀಘ್ರದಲ್ಲೇ ಭಾರತದಲ್ಲೂ ಇದನ್ನು ಪರಿಚಯಿಸುವ ಯೋಜನೆ ಹೊಂದಿದ್ದರೂ, ಅದರ ಸುರಕ್ಷತೆ ಮತ್ತು ದುರ್ಬಳಕೆಯ ಸಾಧ್ಯತೆಗಳ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಕಳವಳ ವ್ಯಕ್ತಪಡಿಸಿದೆ.

ಯೂಸರ್‌ನೇಮ್ ವ್ಯವಸ್ಥೆಯಿಂದ ನಕಲಿ ಖಾತೆಗಳನ್ನು ಸೃಷ್ಟಿಸುವುದು, ಪ್ರಸಿದ್ಧ ವ್ಯಕ್ತಿಗಳ ಹೆಸರಿನಲ್ಲಿ ವಂಚನೆ ನಡೆಸುವುದು, ಗುರುತಿನ ಕಳವು ಹಾಗೂ ಸೈಬರ್ ಅಪರಾಧಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ಸರ್ಕಾರ ವ್ಯಕ್ತಪಡಿಸಿದೆ. ಒಂದೇ ರೀತಿಯ ಅಥವಾ ಗೊಂದಲ ಉಂಟುಮಾಡುವ ಯೂಸರ್‌ನೇಮ್‌ಗಳನ್ನು ಬಳಸಿಕೊಂಡು ಸಾರ್ವಜನಿಕರನ್ನು ದಾರಿ ತಪ್ಪಿಸುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಷಯ ಸಾರ್ವಜನಿಕ ವಲಯದಲ್ಲಿಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ಭದ್ರತಾ ಮತ್ತು ಗೌಪ್ಯತಾ ವಿಚಾರಗಳ ಕುರಿತು ಸಮಾಲೋಚನೆ ಪೂರ್ಣಗೊಳ್ಳುವವರೆಗೆ ಭಾರತದಲ್ಲಿ ಈ ಹೊಸ ವೈಶಿಷ್ಟ್ಯವನ್ನು ಜಾರಿಗೆ ತರದಂತೆ ಮೆಟಾ ತಾತ್ಕಾಲಿಕವಾಗಿ ತಡೆಹಿಡಿದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರಂತ: ಟ್ರಕ್‌ಗೆ ಎಪಿಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎಪಿಎಸ್‌ಆರ್‌ಟಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪೈಲಗುರ್ಕಿ ಗ್ರಾಮದ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎಪಿಎಸ್‌ಆರ್‌ಟಿಸಿ ಬಸ್, ನಿಯಂತ್ರಣ ಕಳೆದುಕೊಂಡು ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಲಕ್ಷ್ಮಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿಯ ವೇಳೆ ಬಸ್‌ನಲ್ಲಿದ್ದ ಬೆಂಗಳೂರಿನ ಕಲ್ಯಾಣನಗರ ನಿವಾಸಿ ಉಮಾಕಾಂತ್ ರಾವ್ ಕೂಡ ಮೃತಪಟ್ಟಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ರಕ್ಷಣಾ ಸಿಬ್ಬಂದಿ ಹೊರತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ಅಪಘಾತದ ಬಳಿಕ ಬಸ್‌ನ ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಕ್ರೇನ್ ಬಳಸಬೇಕಾಯಿತು. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸದ್ಯ ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾರ್ವಜನಿಕ ಸಾರಿಗೆ ವಾಹನಗಳ ಸುರಕ್ಷತೆ, ಚಾಲಕರ ಎಚ್ಚರಿಕೆಯ ಚಾಲನೆ ಹಾಗೂ ವಾಹನಗಳ ನಿರ್ವಹಣೆ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಸಂಭವಿಸಿದ್ದ ಅಪಘಾತದ ಬಳಿಕ ಇದೀಗ ಮತ್ತೊಂದು ಬಸ್ ದುರಂತ ಸಂಭವಿಸಿರುವುದು ಆತಂಕ ಹೆಚ್ಚಿಸಿದೆ

ದಸರಾ ಗಜಪಡೆಗೆ ಆರೋಗ್ಯದ ಕಠಿಣ ತಪಾಸಣೆ; ಇಸಿಜಿ, ಅಲ್ಟ್ರಾಸೌಂಡ್ ಸೇರಿ ಸಮಗ್ರ ವೈದ್ಯಕೀಯ ಪರೀಕ್ಷೆ

0

ಮಡಿಕೇರಿ: ನಾಡಹಬ್ಬ ಮೈಸೂರು ದಸರಾ-2026ರ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಬಾರಿ ಆನೆಗಳ ಆರೋಗ್ಯ ತಪಾಸಣೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ 20ಕ್ಕೂ ಹೆಚ್ಚು ಆನೆಗಳಿಗೆ ಸಮಗ್ರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಮೊದಲ ಬಾರಿಗೆ ಹೃದಯದ ಆರೋಗ್ಯ ಪರೀಕ್ಷೆಗೆ ಇಸಿಜಿ (ECG) ತಪಾಸಣೆಯನ್ನೂ ಕಡ್ಡಾಯಗೊಳಿಸಲಾಗಿದೆ.

ಪಶುವೈದ್ಯರ ತಜ್ಞರ ತಂಡವು ಆನೆಗಳ ದೈಹಿಕ ಸಾಮರ್ಥ್ಯ, ಆರೋಗ್ಯ ಸ್ಥಿತಿ ಹಾಗೂ ರೋಗನಿರೋಧಕ ಸ್ಥಿತಿಯನ್ನು ಪರಿಶೀಲಿಸಿದ್ದು, ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ರವಾನಿಸಿದೆ. ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನೂ ನಡೆಸಲಾಗಿದೆ.

ದಸರಾ ಗಜಪಡೆಗೆ ಆಯ್ಕೆಯಾಗುವ ಆನೆಗಳು ಸಂಪೂರ್ಣ ಆರೋಗ್ಯವಂತರಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಬಾರಿ ಹೃದಯದ ಕಾರ್ಯಕ್ಷಮತೆಯನ್ನು ಇಸಿಜಿ ಮೂಲಕ ಪರಿಶೀಲಿಸಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಗಳ ಎಲ್ಲಾ ವರದಿಗಳು ಬಂದ ಬಳಿಕ ಅರ್ಹ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಿ ರಾಜ್ಯಮಟ್ಟದ ಆಯ್ಕೆ ಸಮಿತಿಗೆ ಸಲ್ಲಿಸಲಾಗುತ್ತದೆ.

  1. 2026ರ ವಿಜಯದಶಮಿ ಆಚರಣೆ ಕಳೆದ ವರ್ಷಕ್ಕಿಂತ ಸುಮಾರು 20 ದಿನ ತಡವಾಗಿ ನಡೆಯಲಿರುವುದರಿಂದ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ. ಆದರೂ ವೈದ್ಯಕೀಯ ಪರೀಕ್ಷೆ, ಆರೋಗ್ಯ ಮೌಲ್ಯಮಾಪನ ಹಾಗೂ ಅಂತಿಮ ಆಯ್ಕೆ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಪೂರ್ಣಗೊಳಿಸಿ ದಸರಾ ಮಹೋತ್ಸವಕ್ಕೆ ಗಜಪಡೆಯನ್ನು ಸಜ್ಜುಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಆಸ್ತಿ ವಾಪಸ್ ಕೊಡುವಂತೆ ಪತಿ ಒತ್ತಾಯ: ವಿಚ್ಛೇದನ ಹೋರಾಟದ ನಡುವೆ ನಟಿ ಸೆಲೀನಾ ಜೇಟ್ಲಿ ಗಂಭೀರ ಆರೋಪ

ಮುಂಬೈ: ಮದುವೆಯ ಬಳಿಕ ಚಿತ್ರರಂಗಕ್ಕೆ ವಿದಾಯ ಹೇಳಿದ್ದ ನಟಿ ಸೆಲೀನಾ ಜೇಟ್ಲಿ ಇದೀಗ ತಮ್ಮ ದಾಂಪತ್ಯ ಜೀವನದ ಸಂಕಷ್ಟವನ್ನು ಬಹಿರಂಗಪಡಿಸಿದ್ದಾರೆ. ಜರ್ಮನಿಯ ಉದ್ಯಮಿ ಪೀಟರ್ ಹಾಗ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ವಿಚ್ಛೇದನ ಪ್ರಕರಣದ ನಡುವೆ 20 ಕೋಟಿ ರೂಪಾಯಿ ಮೌಲ್ಯದ ತಮ್ಮ ಆಸ್ತಿಯನ್ನು ವರ್ಗಾಯಿಸುವಂತೆ ಪತಿ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡದ ‘ಶ್ರೀಮತಿ’ ಚಿತ್ರ ಸೇರಿದಂತೆ ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಗುರುತಿಸಿಕೊಂಡಿದ್ದ ಸೆಲೀನಾ, ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿ, ವಿಚ್ಛೇದನ ಹೋರಾಟದ ವೇಳೆ ಆರ್ಥಿಕ ಮತ್ತು ಕಾನೂನು ಸಂಕಷ್ಟಗಳನ್ನು ಎದುರಿಸುತ್ತಿರುವುದಾಗಿ ತಿಳಿಸಿದರು. ಪತಿಯೊಂದಿಗೆ ನಡೆಯುತ್ತಿರುವ ಕಾನೂನು ಹೋರಾಟದಿಂದ ಜೀವನಾಂಶವೂ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಮಹಿಳೆಯರು ತಮ್ಮ ಅನುಭವದಿಂದ ಪಾಠ ಕಲಿಯಬೇಕು ಎಂದು ಹೇಳಿದ ಸೆಲೀನಾ, ಮದುವೆಗೆ ಮುನ್ನ ವಿವಾಹಪೂರ್ವ ಒಪ್ಪಂದಕ್ಕೆ ಸಹಿ ಮಾಡಿಸಿಕೊಳ್ಳುವುದು ಅಗತ್ಯ ಎಂದು ಸಲಹೆ ನೀಡಿದರು. ಮಹಿಳೆಯರು ತಮ್ಮ ಹೆಸರಿನಲ್ಲಿರುವ ಆಸ್ತಿ, ಹೂಡಿಕೆ ಮತ್ತು ಆರ್ಥಿಕ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು. ವೈಯಕ್ತಿಕ ಆಸ್ತಿಯ ಮೇಲೆ ಸಂಪೂರ್ಣ ಹಕ್ಕು ಉಳಿಸಿಕೊಳ್ಳುವುದೇ ಸುರಕ್ಷಿತ ಮಾರ್ಗ ಎಂದು ಅವರು ಹೇಳಿದರು.

ಜರ್ಮನಿಯ ಪೀಟರ್ ಹಾಗ್ ಅವರನ್ನು ವಿವಾಹವಾಗಿದ್ದ ಸೆಲೀನಾ ಜೇಟ್ಲಿಗೆ ಮೂವರು ಮಕ್ಕಳಿದ್ದಾರೆ. ದೀರ್ಘ ವಿರಾಮದ ಬಳಿಕ ಅವರು ಮತ್ತೆ ಚಿತ್ರರಂಗಕ್ಕೆ ಮರಳಿದ್ದು, ‘ಸಿಸ್ಟರ್ ನಿವೇದಿತಾ’ ಚಿತ್ರದ ಮೂಲಕ ಅಭಿನಯ ಜೀವನಕ್ಕೆ ಹೊಸ ಆರಂಭ ನೀಡಿದ್ದಾರೆ.

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ: “ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

ಬರಗಾಲಕ್ಕೆ ಸಿಲುಕಿರುವ ಕಲ್ಯಾಣ ಕರ್ನಾಟಕದ ಭಾಗಕ್ಕೆ ಸರಕಾರದ ಕೊಡುಗೆ ಏನು ಎಂದು ಕೇಳಿದಾಗ, “ನಾನು ಬರಗಾಲ ಪರಿಸ್ಥಿತಿ ಅವಲೋಕಿಸಲು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಇಲ್ಲಿನ ಜನರು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಪರಿಸ್ಥಿತಿಯ ಅವಲೋಕನಕ್ಕೆ ಸಭೆ ನಡೆಸುತ್ತಿದ್ದೇನೆ. ಅದೇ ರೀತಿ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತಿದ್ದೇನೆ” ಎಂದರು.

“ಸಮಸ್ಯೆ ಬಗೆಹರಿಸಬೇಕು ಎಂದು ಜನರು ಬೇಡಿಕೆಗಳನ್ನು ಮಂಡಿಸಿದ್ದಾರೆ. ಅವರ ಸಮಸ್ಯೆ ಆಲಿಸಲು ಹೊಸದಾಗಿ ಪ್ರಜಾಸೇವಾ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಿ, ಜನರ ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆ” ಎಂದರು.

ಇದಕ್ಕೂ ಮೊದಲು ಮುಖ್ಯಮಂತ್ರಿಯವರು ಕಲಬುರ್ಗಿ ಸರಕಾರಿ ಅತಿಥಿ ಗೃಹದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರೈತರು ಕಬ್ಬಿನ ಜಲ್ಲೆ ಜತೆಗೆ ತಮ್ಮ ಅಹವಾಲುಗಳನ್ನು ನೀಡಿದರು. ಮಳೆ ಕೊರತೆ ಉಂಟಾಗಿದೆ, ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ರೈತರು ಮನವಿ ಮಾಡಿದರು.

“ಈ ಪರಿಸ್ಥಿತಿಯನ್ನು ಕಣ್ಣಾರೆ ನೋಡಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಎಂದರು. ರೈತರ ಸಾಲ ಮನ್ನಾ ವಿಚಾರ ಹಾಗೂ ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ಮಾಡಿರುವ ಬಗ್ಗೆ ಕೇಳಿದಾಗ, “ಎಲ್ಲಿಯ ಸಾಲ, ಯಾವ ಸಾಲ ಎಂಬುದನ್ನು ಪರಿಶೀಲನೆ ಮಾಡೋಣ” ಎಂದರು.