Home Blog

‘ನೋಟಿಸ್‌ಗೆ ಹೆದರಿಲ್ಲ’: ರಣವೀರ್ ಮೇಲಿನ ನಿಷೇಧ ಹಿಂಪಡೆದರೂ FWICE ತಿರುಗೇಟು!

ಮುಂಬೈ: ರಣವೀರ್ ಸಿಂಗ್ ವಿರುದ್ಧ ಘೋಷಿಸಿದ್ದ ಅಸಹಕಾರ ಆದೇಶವನ್ನು ಹಿಂಪಡೆದಿರುವ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE), ಈ ನಿರ್ಧಾರಕ್ಕೆ ನಟನ ಕಾನೂನು ನೋಟಿಸ್ ಕಾರಣವಲ್ಲ ಎಂದು ಸ್ಪಷ್ಟಪಡಿಸಿದೆ.

‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹೊರನಡೆದ ಬಳಿಕ ಎಕ್ಸೆಲ್ ಎಂಟರ್‌ಟೈನ್‌ಮೆಂಟ್‌ಗೆ ನಷ್ಟ ಉಂಟಾಗಿದೆ ಎಂಬ ದೂರಿನ ಆಧಾರದಲ್ಲಿ FWICE ಅಸಹಕಾರ ಆದೇಶ ಹೊರಡಿಸಿತ್ತು. ಬಳಿಕ ರಣವೀರ್ ಸಿಂಗ್ ಒಕ್ಕೂಟಕ್ಕೆ ಲೀಗಲ್ ನೋಟಿಸ್ ಕಳುಹಿಸಿ ಕ್ರಮ ಪ್ರಶ್ನಿಸಿದ್ದರು.

ಈ ನಡುವೆ ಇಂಡಿಯನ್ ಮೋಷನ್ ಪಿಕ್ಚರ್ ಪ್ರೊಡ್ಯೂಸರ್ಸ್ ಅಸೋಸಿಯೇಷನ್ (IMPPA), ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ ಹಾಗೂ CINTAA ಜೊತೆ ನಡೆದ ಚರ್ಚೆಗಳ ಬಳಿಕ ನಿಷೇಧ ಹಿಂಪಡೆಯಲಾಗಿದೆ.

FWICE ಅಧ್ಯಕ್ಷ ಬಿ.ಎನ್. ತಿವಾರಿ ಪ್ರತಿಕ್ರಿಯಿಸಿ, “ನಾವು ಯಾವುದೇ ಒತ್ತಡಕ್ಕೆ ಮಣಿದಿಲ್ಲ. 70 ವರ್ಷಗಳ ಇತಿಹಾಸ ಹೊಂದಿರುವ ಸಂಸ್ಥೆ. ಇಂತಹ ಅನೇಕ ಕಾನೂನು ನೋಟಿಸ್‌ಗಳನ್ನು ನಾವು ಎದುರಿಸಿದ್ದೇವೆ. ರಣವೀರ್ ಕಳುಹಿಸಿದ ನೋಟಿಸ್‌ಗೆ ನಮ್ಮ ಕಾನೂನು ತಂಡ ಸೂಕ್ತ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ.

ಇದೇ ವೇಳೆ ‘ಡಾನ್ 3’ ವಿವಾದದಿಂದ ನಿರ್ಮಾಪಕರಿಗೆ ನಷ್ಟವಾಗಿರುವುದನ್ನು ಪ್ರೊಡ್ಯೂಸರ್ಸ್ ಗಿಲ್ಡ್ ಖಂಡಿಸಿದೆ ಎಂದು FWICE ತಿಳಿಸಿದೆ. ರಣವೀರ್ ಸಿಂಗ್ ನೇರವಾಗಿ ಮಾತುಕತೆಗೆ ಬರಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಅವರ ತಂಡವೇ ತಪ್ಪು ಸಲಹೆ ನೀಡಿದೆ ಎಂದು FWICE ಅಸಮಾಧಾನ ವ್ಯಕ್ತಪಡಿಸಿದೆ.

ನಿಷೇಧ ಹಿಂಪಡೆಯಲ್ಪಟ್ಟಿದ್ದರೂ, ‘ಡಾನ್ 3’ ವಿವಾದ ಮತ್ತು ಪರಿಹಾರದ ವಿಚಾರದಲ್ಲಿ ರಣವೀರ್ ಸಿಂಗ್ ಹಾಗೂ ನಿರ್ಮಾಪಕರ ನಡುವಿನ ಸಂಘರ್ಷ ಇನ್ನೂ ಮುಕ್ತಾಯಗೊಂಡಿಲ್ಲ.

ಡಿಕೆಶಿ ಸಂಪುಟದಲ್ಲಿ ಜಿ. ಪರಮೇಶ್ವರ್ʼಗೆ ಉಪಮುಖ್ಯಮಂತ್ರಿ ಸ್ಥಾನ: ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸರ್ಕಾರದ ರಚನೆಗೆ ವೇಗ ಸಿಕ್ಕಿರುವ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಡಿಸಿಎಂ ಹುದ್ದೆಯ ಕುತೂಹಲಕ್ಕೆ ಅಧಿಕೃತ ತೆರೆ ಬಿದ್ದಿದೆ.

ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಜಿ. ಪರಮೇಶ್ವರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ವೇಳೆ ಪರಮೇಶ್ವರ್ ಅವರು ಭಾರತದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಮೇಶ್ವರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಶಾಸಕರು, ವಿವಿಧ ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದು, ಪರಮೇಶ್ವರ್ ಅವರ ಪ್ರಮಾಣವಚನಕ್ಕೆ ಸಾಕ್ಷಿಯಾದರು.

ಸಂಪುಟ ರಚನೆ ಪ್ರಕ್ರಿಯೆ ಆರಂಭವಾದ ದಿನದಿಂದಲೇ ಉಪಮುಖ್ಯಮಂತ್ರಿ ಸ್ಥಾನ ಯಾರ ಪಾಲಾಗಲಿದೆ ಎಂಬ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ಅಂತಿಮವಾಗಿ ಪಕ್ಷದ ಹಿರಿಯ ನಾಯಕ ಹಾಗೂ ಅನುಭವಿ ರಾಜಕಾರಣಿ ಜಿ. ಪರಮೇಶ್ವರ್ ಅವರಿಗೆ ಡಿಸಿಎಂ ಹುದ್ದೆ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸಿದ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಹೊಸ ಆಡಳಿತಕ್ಕೆ ಚಾಲನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರಾಜಕೀಯ ಮುಖಂಡರು, ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು ವಿಶೇಷ ಆಕರ್ಷಣೆಯಾಗಿತ್ತು. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಕೂಡ ಸಮಾರಂಭದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇನ್ನು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಆಧಾರದ ಮೇಲೆ ವಿಶೇಷ ಮುಹೂರ್ತವನ್ನು ಆಯ್ಕೆ ಮಾಡಲಾಗಿತ್ತು. ಜ್ಯೋತಿಷಿಗಳ ಪ್ರಕಾರ ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗುವ ‘ಮಾಲವ್ಯ ಯೋಗ’ದಲ್ಲಿ ಪ್ರಮಾಣವಚನ ಸ್ವೀಕರಿಸುವಂತೆ ಸಮಯ ನಿಗದಿಪಡಿಸಲಾಗಿತ್ತು.

ತುಲಾ ಲಗ್ನದಲ್ಲಿ ನಡೆದ ಈ ಪ್ರತಿಜ್ಞಾವಿಧಿಯು ಆಡಳಿತಾತ್ಮಕವಾಗಿ ಶುಭ ಫಲಗಳನ್ನು ನೀಡಲಿದೆ ಎಂಬ ನಂಬಿಕೆ ವ್ಯಕ್ತವಾಗಿದೆ. ಪ್ರಸ್ತುತ ಗ್ರಹಸ್ಥಿತಿಯಲ್ಲಿ ಗುರು ಗ್ರಹ ಉಚ್ಚ ಸ್ಥಾನದಲ್ಲಿದ್ದು, ದಶಮ ಭಾವ ಬಲಿಷ್ಠವಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಎದುರಾಗುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ ಜನಪರ ಆಡಳಿತ ನೀಡಲು ಇದು ಅನುಕೂಲಕರವಾಗಲಿದೆ ಎಂದು ಜ್ಯೋತಿಷ್ಯ ವಲಯ ಅಭಿಪ್ರಾಯಪಟ್ಟಿದೆ.

ಸುದೀರ್ಘ ರಾಜಕೀಯ ಅನುಭವ, ಪಕ್ಷ ಸಂಘಟನೆಯಲ್ಲಿನ ಪರಿಶ್ರಮ ಮತ್ತು ಆಡಳಿತಾತ್ಮಕ ಸಾಮರ್ಥ್ಯದ ಮೂಲಕ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಕರ್ನಾಟಕ ಹೈಕೋರ್ಟ್ ಗೆ 6 ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಆರು ಹೊಸ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಸಂಬಂಧ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಹತ್ವದ ಶಿಫಾರಸು ಮಾಡಿದೆ. ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತಾವಿತ ಹೆಸರುಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದರೆ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ.

ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ಮಂಜೂರಾಗಿರುವ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳ ಪೈಕಿ ಹಲವು ಹುದ್ದೆಗಳು ಖಾಲಿ ಉಳಿದಿದ್ದು, ಹೊಸ ನೇಮಕಾತಿಗಳ ಮೂಲಕ ನ್ಯಾಯಾಂಗ ಕಾರ್ಯಭಾರವನ್ನು ಮತ್ತಷ್ಟು ಸಮರ್ಥವಾಗಿ ನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

ನ್ಯಾಯಮೂರ್ತಿ ಹುದ್ದೆಗೆ ಶಿಫಾರಸಾದವರು ಯಾರು?

ಸುಪ್ರೀಂ ಕೋರ್ಟ್ ಕೊಲಿಜಿಯಂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೆಳಕಂಡ ಆರು ಹಿರಿಯ ವಕೀಲರ ಹೆಸರನ್ನು ಶಿಫಾರಸು ಮಾಡಿದೆ.

  • ರಾಘವೇಂದ್ರ ಸೀತಾರಾಂ ಶ್ರೀವತ್ಸ
  • ಹೇಮಾ ಕುಲಕರ್ಣಿ
  • ಸುಬ್ರಮಣ್ಯ ರಂಗರಾವ್
  • ತಡಗವಾಡಿ ಪ್ರಕಾಶ್ ವಿವೇಕಾನಂದ
  • ಬಕ್ಕೇಶ್ವರ ಪ್ರಮೋದ್
  • ಹೊಂಬೆಗೌಡ ಶಾಂತಿ ಭೂಷಣ್

ಕಾನೂನು ಕ್ಷೇತ್ರದ ಅನುಭವಿ ಮುಖಗಳಿಗೆ ಅವಕಾಶ

ಶಿಫಾರಸು ಪಟ್ಟಿಯಲ್ಲಿರುವ ರಾಘವೇಂದ್ರ ಸೀತಾರಾಂ ಶ್ರೀವತ್ಸ ಅವರು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ದೇಶಾದ್ಯಂತ ಹೆಸರಾಗಿದ್ದಾರೆ. ಹೇಮಾ ಕುಲಕರ್ಣಿ ಅವರು ಕಲಬುರಗಿ ಪೀಠದಲ್ಲಿ ದೀರ್ಘಕಾಲ ವಕಾಲತ್ತು ನಡೆಸಿದ್ದು, ಕಾನೂನು ಕ್ಷೇತ್ರದಲ್ಲಿ ವಿಶಾಲ ಅನುಭವ ಹೊಂದಿದ್ದಾರೆ.

ಹಿರಿಯ ವಕೀಲರಾದ ಸುಬ್ರಮಣ್ಯ ರಂಗರಾವ್ ಹಾಗೂ ತಡಗವಾಡಿ ಪ್ರಕಾಶ್ ವಿವೇಕಾನಂದ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಹಲವು ಮಹತ್ವದ ಪ್ರಕರಣಗಳಲ್ಲಿ ವಾದ ಮಂಡಿಸಿರುವ ಅನುಭವ ಹೊಂದಿದ್ದಾರೆ. ಬಕ್ಕೇಶ್ವರ ಪ್ರಮೋದ್ ಅವರು ಬೆಂಗಳೂರಿನ ಖ್ಯಾತ ಕಾನೂನು ತಜ್ಞರಾಗಿದ್ದು, ಹೊಂಬೆಗೌಡ ಶಾಂತಿ ಭೂಷಣ್ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ಗೆ ಭಾರತ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.

ಇತ್ತೀಚೆಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಅನುಮೋದನೆ ನೀಡಿತ್ತು. ಅದರೊಂದಿಗೆ ಕಾರ್ಯನಿರ್ವಹಣೆಯಲ್ಲಿದ್ದ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿಕೆಯಾಗಿತ್ತು.

ಈಗ ಮತ್ತಷ್ಟು ಆರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು ಮಾಡಿರುವುದರಿಂದ, ಕೇಂದ್ರ ಸರ್ಕಾರದ ಅಂತಿಮ ಅನುಮೋದನೆ ದೊರೆತ ಬಳಿಕ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ತಲುಪಲಿದೆ. ಇದರಿಂದ ಬಾಕಿ ಇರುವ ಪ್ರಕರಣಗಳ ವಿಲೇವಾರಿ ಪ್ರಕ್ರಿಯೆಗೆ ವೇಗ ಸಿಗುವ ನಿರೀಕ್ಷೆಯಿದೆ.

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪದಡಿ ಬಂಧನಕ್ಕೊಳಗಾಗಿರುವ ಟೆಕ್ಕಿ ರೋಹನ್ ಚಂದ್ರ ಭಟ್ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಘಟನೆ ಬಳಿಕ ರೋಹನ್ ಸ್ಕಿಜೋಫ್ರೇನಿಯಾ ಸೇರಿದಂತೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂಬ ಮಾಹಿತಿ ಹರಿದಾಡಿದ್ದರೂ, ನಿಮ್ಹಾನ್ಸ್ ವೈದ್ಯಕೀಯ ಪರೀಕ್ಷೆಯಲ್ಲಿ ಆತ ಸಂಪೂರ್ಣ ಮಾನಸಿಕವಾಗಿ ಸದೃಢನಾಗಿದ್ದಾನೆ ಎಂಬುದು ದೃಢಪಟ್ಟಿದೆ.

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ನವೀನ್‌ಚಂದ್ರ ಭಟ್ ಹಾಗೂ ದಂತ ವೈದ್ಯೆ ಡಾ. ಶ್ಯಾಮಲಾ ಭಟ್ ಅವರನ್ನು ಚಾಕುವಿನಿಂದ ಇರಿದು ಕೊಂದ ಪ್ರಕರಣದ ತನಿಖೆ ವೇಳೆ ಆರೋಪಿಯನ್ನು ನಿಮ್ಹಾನ್ಸ್‌ಗೆ ದಾಖಲಿಸಿ ವೈದ್ಯಕೀಯ ವೀಕ್ಷಣೆಗೆ ಒಳಪಡಿಸಲಾಗಿತ್ತು. ಒಂದು ವಾರದ ಪರಿಶೀಲನೆ ಬಳಿಕ ವೈದ್ಯರು ರೋಹನ್‌ಗೆ ಒತ್ತಡ, ಆತಂಕ ಅಥವಾ ಸ್ಕಿಜೋಫ್ರೇನಿಯಾ ಸೇರಿದಂತೆ ಯಾವುದೇ ಗಂಭೀರ ಮಾನಸಿಕ ಕಾಯಿಲೆಯ ಲಕ್ಷಣಗಳು ಕಂಡುಬಂದಿಲ್ಲ ಎಂದು ವರದಿ ನೀಡಿದ್ದಾರೆ.

ಪೊಲೀಸ್ ತನಿಖೆ ಪ್ರಕಾರ, ಸ್ಟಾರ್ಟ್‌ಅಪ್ ಆರಂಭಿಸಲು 10 ಲಕ್ಷ ರೂಪಾಯಿ ನೀಡುವಂತೆ ಪೋಷಕರನ್ನು ರೋಹನ್ ಒತ್ತಾಯಿಸಿದ್ದ. ಆದರೆ ಉದ್ಯೋಗ ಪಡೆದು ಸ್ಥಿರವಾಗುವಂತೆ ಸಲಹೆ ನೀಡಿದ ಪೋಷಕರು ಹಣ ನೀಡಲು ನಿರಾಕರಿಸಿದ್ದರು. ಇದೇ ವಿಚಾರದಲ್ಲಿ ಆತನ ಅಸಮಾಧಾನ ಹೆಚ್ಚಾಗಿತ್ತು.

ಇದರ ಜೊತೆಗೆ ತನ್ನ ಮೊಬೈಲ್ ಸಂಖ್ಯೆಯನ್ನು ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಮಾಡಲು ತಂದೆ ಅವಕಾಶ ನೀಡದಿದ್ದ ವಿಚಾರವೂ ಕುಟುಂಬದೊಳಗಿನ ಕಲಹಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ಎರಡೂ ವಿಚಾರಗಳ ಬಗ್ಗೆ ನಡೆದ ತೀವ್ರ ವಾಗ್ವಾದವೇ ಫೆಬ್ರವರಿ 11ರಂದು ನಡೆದ ಭೀಕರ ಕೊಲೆಗೆ ಕಾರಣವಾಯಿತು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಪೊಲೀಸರು ಸುಮಾರು 500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳು ಹಾಗೂ ಫಾರೆನ್ಸಿಕ್ ವರದಿಗಳನ್ನು ಸೇರಿಸಿದ್ದಾರೆ. ಆರೋಪಿಯ ಬಟ್ಟೆ ಮತ್ತು ದೇಹದಲ್ಲಿ ಪತ್ತೆಯಾದ ರಕ್ತದ ಕಲೆಗಳು ಮೃತ ಪೋಷಕರದ್ದೇ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಬಿ.ಕೆ. ಹರಿಪ್ರಸಾದ್‌ಗೆ ಕೆಪಿಸಿಸಿ ಸಾರಥ್ಯ: ಸಚಿವ ಸ್ಥಾನ ಬದಲು ಪಕ್ಷ ಸಂಘಟನೆಯ ಹೊಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ಕುರಿತು ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್ ಅವರನ್ನು ಸರ್ಕಾರಕ್ಕಿಂತ ಪಕ್ಷ ಸಂಘಟನೆಯ ಜವಾಬ್ದಾರಿಗೆ ಆಯ್ಕೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೂಡ ಬಲವಾಗಿ ಕೇಳಿಬಂದಿತ್ತು. ಆದರೆ ಅವರ ಆಯ್ಕೆಗೆ ಪಕ್ಷದೊಳಗಿನ ಒಂದು ಬಣ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಪರ ಒಲವು ತೋರಿದೆ ಎನ್ನಲಾಗಿದೆ.

ಸದ್ಯ ವಿಧಾನಪರಿಷತ್ ಸದಸ್ಯರಾಗಿರುವ ಹರಿಪ್ರಸಾದ್ ಅವರು ಕಾಂಗ್ರೆಸ್ ಸಂಘಟನೆ ಹಾಗೂ ರಾಷ್ಟ್ರೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಪಕ್ಷವನ್ನು ಬಲಪಡಿಸುವ ಉದ್ದೇಶದಿಂದಲೇ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆಗೆ ಹಿಂದುಳಿದ ವರ್ಗಗಳಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಮತ್ತು ಸ್ಥಾನಮಾನ ನೀಡುವ ಉದ್ದೇಶವೂ ಈ ನಿರ್ಧಾರದ ಹಿಂದೆ ಇದೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಬಳಿಕ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆ ಅಬ್ಬರ: 36 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ 36 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಮುಂದಿನ ಕೆಲವು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಮಂಗಳವಾರ ರಾಜ್ಯದ ಬಹುತೇಕ ನಗರಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದ್ದು, ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಉಷ್ಣಾಂಶದಲ್ಲಿ ಇಳಿಕೆ ಕಂಡುಬಂದಿದೆ. ಇಂದೋರ್ ಹಾಗೂ ಉಜ್ಜಯಿನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯೆಲ್ಲೋ ಅಲರ್ಟ್ ಘೋಷಿಸಿದ ಜಿಲ್ಲೆಗಳು

ಇಂದೋರ್, ಉಜ್ಜಯಿನಿ, ಗ್ವಾಲಿಯರ್, ಶಿಯೋಪುರ್, ಮೊರೆನಾ, ಭಿಂಡ್, ದತಿಯಾ, ಶಿವಪುರಿ, ಗುಣಾ, ಅಶೋಕನಗರ, ನಿವಾರಿ, ಟಿಕಮ್ಗಢ್, ಛತ್ತರ್ಪುರ, ಪನ್ನಾ, ದಿಂಡೋರಿ, ಮಂಡ್ಲಾ, ಬಾಲಾಘಾಟ್, ಸಿಯೋನಿ, ಛಿಂದ್ವಾರಾ, ಪಾಂಡುರ್ನಾ, ನರ್ಮದಾಪುರಂ, ಬೇತುಲ್, ಹರ್ದಾ, ಬುರ್ಹಾನ್ಪುರ, ಖಾಂಡ್ವಾ, ದೇವಾಸ್, ಶಾಜಾಪುರ, ರಾಜ್ಗಢ್, ಖಾರ್ಗೋನೆ, ರತ್ಲಾಮ್,

ಝಾಬುವಾ, ಅಲಿರಾಜ್ಪುರ ಹಾಗೂ ಬರ್ವಾನಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.ಹವಾಮಾನ ಇಲಾಖೆ ಜನರಿಗೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಗುಡುಗು-ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಲಹೆ ನೀಡಿದೆ. ಅಲ್ಲದೆ, ಸ್ಥಳೀಯ ಆಡಳಿತದಿಂದ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದೆ.

ಮಳೆಯ ಪರಿಣಾಮ ರಾಜ್ಯದ ಹಲವು ನಗರಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಭೋಪಾಲ್ ಮತ್ತು ಗ್ವಾಲಿಯರ್‌ನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು,

ಇಂದೋರ್‌ನಲ್ಲಿ 38.2 ಡಿಗ್ರಿ, ಉಜ್ಜಯಿನಿಯಲ್ಲಿ 37.5 ಡಿಗ್ರಿ ಹಾಗೂ ಜಬಲ್ಪುರದಲ್ಲಿ 38.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.ಮುಂದಿನ ಕೆಲವು ದಿನಗಳವರೆಗೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

 

ಡಿಕೆಶಿ ಸಚಿವ ಸಂಪುಟದ ಮೊದಲ ಪಟ್ಟಿ ಫೈನಲ್: ಪರಮೇಶ್ವರ್ ಏಕೈಕ DCM, 13 ಮಂದಿ ಇಂದು ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟದ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು,

ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಾಯ ಕೇಳಿಬಂದಿದ್ದರೂ, ಹೈಕಮಾಂಡ್ ಆ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ.

ಜಾತಿ ಸಮೀಕರಣ ಮತ್ತು ರಾಜಕೀಯ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಲಿರುವವರು

ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರ ಹೆಸರು ಸೇರಿದ್ದು, ಉಳಿದಂತೆ ಸತೀಶ್ ಜಾರಕಿಹೊಳಿ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಡಾ. ಯತೀಂದ್ರ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೊದಲ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರು ಮತ್ತು ಸಚಿವಾಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಹಂತದಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾತಿ ಸಮೀಕರಣಕ್ಕೆ ಆದ್ಯತೆ

ಸಚಿವ ಸಂಪುಟ ರಚನೆಯಲ್ಲಿ ಜಾತಿ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಕಾಂಗ್ರೆಸ್ ನಾಯಕತ್ವ ಹೆಚ್ಚಿನ ಒತ್ತು ನೀಡಿದೆ. ಒಕ್ಕಲಿಗ ಸಮುದಾಯದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೂ ಮೂರು ಸ್ಥಾನಗಳು ದೊರೆತಿವೆ.

ದಲಿತ ಸಮುದಾಯದಡಿ ಡಾ. ಜಿ. ಪರಮೇಶ್ವರ್ ಸೇರಿ ಮೂವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಕುರುಬ ಸಮುದಾಯದ ಇಬ್ಬರು ನಾಯಕರಿಗೂ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಪರಿಶಿಷ್ಟ ಪಂಗಡ (ಎಸ್‌ಟಿ), ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳಿಂದ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ಸಮತೋಲನ ಸಾಧಿಸಲು ಪ್ರಯತ್ನಿಸಲಾಗಿದೆ.

ಇಂದು ಅದ್ಧೂರಿ ಪ್ರಮಾಣವಚನ

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಲವು ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಹೊಸ ಸರ್ಕಾರದ ಮೊದಲ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಈ ರೂಪುರೇಷೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ದಿಕ್ಕು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ.

13 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ-ಮೊಬೈಲ್ ರಿಕವರಿ: ಮಹಾಲಿಂಗಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ

0

ಬಾಗಲಕೋಟೆ: ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂ. ಮೌಲ್ಯದ ಕಳುವಾದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದಾರೆ.

2025-26ನೇ ಸಾಲಿನಲ್ಲಿ ಸಾರ್ವಜನಿಕರಿಂದ ಕಳುವಾಗಿದ್ದ 62 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 9.15 ಲಕ್ಷ ರೂಪಾಯಿಗಳಷ್ಟಾಗಿದೆ ಎಂದು ಅಂದಾಜಿಸಲಾಗಿದೆ.

ಅದೇ ರೀತಿ 2026ನೇ ಸಾಲಿನಲ್ಲಿ ಕಳೆದುಹೋದ 30 ಮೊಬೈಲ್‌ಗಳನ್ನು CEIR ಪೋರ್ಟಲ್ ತಂತ್ರಜ್ಞಾನ ಬಳಸಿ ಟ್ರ್ಯಾಕ್ ಮಾಡಿ ರಿಕವರಿ ಮಾಡಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.19 ಲಕ್ಷ ರೂಪಾಯಿಗಳಾಗಿದೆ.

ಎರಡೂ ಸೇರಿ ಒಟ್ಟು 13.34 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲೀಕರಿಗೆ ಮರಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯನ್ನು ಎಸ್‌ಪಿ ಸಿದ್ಧಾರ್ಥ ಗೋಯಲ್ ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ಸೇರಿ 30 ಮಂದಿಯ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಬೃಹತ್ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ.

ನಿಗಮದ ಹಣದ ಅಕ್ರಮ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಆಪ್ತರ ಪಾತ್ರವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಸಿಬಿಐ ತಿಳಿಸಿದೆ. ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ನಡೆದಿರುವ ಆರ್ಥಿಕ ಅಕ್ರಮಗಳ ತನಿಖೆಯನ್ನು ಪೂರ್ಣಗೊಳಿಸಿರುವ ಸಿಬಿಐ, ಮೂರು ಪ್ರಕರಣಗಳಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಜಿ. ರಸ್ತೆ ಶಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆರಂಭಗೊಂಡಿತ್ತು. ಬಳಿಕ ನ್ಯಾಯಾಲಯದ ನಿರ್ದೇಶನದಂತೆ ತನಿಖೆಯನ್ನು ಇಲಾಖೆಯ ಇತರೆ ಘಟಕಗಳಿಗೂ ವಿಸ್ತರಿಸಲಾಗಿತ್ತು.

ಸಿಬಿಐ ತನಿಖೆಯ ಪ್ರಕಾರ, ಮಾಜಿ ಸಚಿವ ಬಿ. ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಅವರು ಸೇರಿ ಅಕ್ರಮ ಹಣ ವರ್ಗಾವಣೆಗೆ ಸಂಚು ರೂಪಿಸಿದ್ದರು.

ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮಾ ಎಂಬಾತ ನಕಲಿ ದಾಖಲೆಗಳನ್ನು ಬಳಸಿಕೊಂಡು 18 ಬೋಗಸ್ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ. ನಿಗಮದ ಎಂಡಿ ಮತ್ತು ಅಕೌಂಟ್ಸ್ ಅಧಿಕಾರಿಗಳ ನಕಲಿ ಸಹಿ ಹಾಗೂ ರಬ್ಬರ್ ಸ್ಟಾಂಪ್‌ಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂಪಾಯಿ ಪೈಕಿ 89.63 ಕೋಟಿ ರೂಪಾಯಿಯನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ವರ್ಗಾಯಿಸಿ, ಬಳಿಕ ನಗದು, ಚಿನ್ನ ಹಾಗೂ ಐಷಾರಾಮಿ ಬೆನಾಮಿ ವಾಹನಗಳ ರೂಪದಲ್ಲಿ ಪರಿವರ್ತಿಸಲಾಗಿದೆ ಎಂದು ಸಿಬಿಐ ಹೇಳಿದೆ. ಈ ಅಕ್ರಮಕ್ಕೆ ಕೆಲವು ಬ್ಯಾಂಕ್ ಅಧಿಕಾರಿಗಳ ಸಹಕಾರವೂ ದೊರೆತಿತ್ತು ಎಂಬ ಆರೋಪವೂ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.

ಸ್ಮಾರ್ಟ್ ಕಂಪ್ಯೂಟರ್ ಲ್ಯಾಬ್ ಮತ್ತು ರೊಟ್ಟಿ ತಯಾರಿಕಾ ಯಂತ್ರಗಳ ಖರೀದಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ನೆಕ್ಕಂಟಿ ನಾಗರಾಜ್ ಅವರ ಆಪ್ತರಿಗೆ ಸೇರಿದ ಸಂಸ್ಥೆಗೆ 13.95 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ನೀಡಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.

ಈ ವ್ಯವಹಾರದ ಪ್ರತಿಫಲವಾಗಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ತಲುಪಿದ ಎಂದು ಹೇಳಲಾಗಿರುವ 1.20 ಕೋಟಿ ರೂಪಾಯಿ ಅಕ್ರಮ ಹಣವನ್ನು ಅವರ ಸಹೋದರಿ, ಭಾವ, ವೈಯಕ್ತಿಕ ಸಹಾಯಕ (ಪಿಎ) ಹಾಗೂ ಬಳ್ಳಾರಿಯಲ್ಲಿರುವ ಫಾರ್ಮ್‌ಹೌಸ್ ಮಾಲೀಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.

ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ 4.90 ಕೋಟಿ ರೂಪಾಯಿ ಕಾಮಗಾರಿಯಲ್ಲಿ ನಿಯಮಬಾಹಿರವಾಗಿ ಉಪಗುತ್ತಿಗೆ ನೀಡಲಾಗಿತ್ತು ಎಂದು ಸಿಬಿಐ ತಿಳಿಸಿದೆ.

ಈ ವ್ಯವಹಾರದಲ್ಲಿ ನೆಕ್ಕಂಟಿ ನಾಗರಾಜ್ ಅವರ ಕುಟುಂಬಕ್ಕೆ 64 ಲಕ್ಷ ರೂಪಾಯಿ ಹಾಗೂ ಇಲಾಖೆಯ ಸೆಕ್ಷನ್ ಅಧಿಕಾರಿ ಪ್ರಕಾಶ್ ಅವರಿಗೆ 15.50 ಲಕ್ಷ ರೂಪಾಯಿ ಲಂಚ ರೂಪದಲ್ಲಿ ಪಾವತಿಸಲಾಗಿದೆ ಎಂಬ ಆರೋಪವನ್ನೂ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಚಾರ್ಜ್‌ಶೀಟ್ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಂಗ ಪ್ರಕ್ರಿಯೆ ಮತ್ತಷ್ಟು ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

error: Content is protected !!