ಬೆಂಗಳೂರು: ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ಕ್ಯಾಬ್ ಚಾಲಕನೊಬ್ಬ ಕಾರಿನೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚಾಲಕ ಎಸಿ ಹಾಕಿಕೊಂಡು ಕಾರಿನ ಗ್ಲಾಸ್ ಏರಿಸಿ ನಿದ್ರಿಸುತ್ತಿದ್ದಾಗಲೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ ಸುಮಾರು 10 ಗಂಟೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಬ್ ದೀರ್ಘ ಸಮಯದಿಂದ ಚಲನೆಯಿಲ್ಲದೆ ನಿಂತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಾರಿನ ಬಳಿ ಹೋದಾಗ ಚಾಲಕ ಒಳಗೆ ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಡೋರ್ ತೆರೆಯಲು ಪ್ರಯತ್ನಿಸಿದರೂ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲ್ಲಿನಿಂದ ಗಾಜು ಒಡೆದು ಕಾರನ್ನು ತೆರೆಯಲಾಗಿದೆ. ಈ ವೇಳೆ ಚಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತರು ಖಾಸಗಿ ಕಂಪನಿಯ ಕ್ಯಾಬ್ ಚಾಲಕರಾಗಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದೆ.

