Home Blog

ವಿಜಯ್ ಸಿಎಂ ಆಗ್ತಿದ್ದಂತೆ ಕಣ್ಣೀರಿಟ್ಟ ತ್ರಿಷಾ: ಪ್ರಮಾಣವಚನ ಸಮಾರಂಭದಲ್ಲಿ ಭಾವನಾತ್ಮಕ ಕ್ಷಣ ವೈರಲ್!

ನಟ ವಿಜಯ್ ದಳಪತಿ ತಮಿಳುನಾಡಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದಲ್ಲಿ ನಟಿ ತ್ರಿಷಾ ಕೃಷ್ಣನ್ ಭಾವನಾತ್ಮಕವಾಗಿ ಮಿಂಚಿದ್ದಾರೆ. ಸಮಾರಂಭದಲ್ಲಿ ಅವರ ಪ್ರತಿಕ್ರಿಯೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದ ತ್ರಿಷಾ, ವಿಜಯ್ ವೇದಿಕೆ ಮೇಲೆ ಪ್ರಮಾಣವಚನ ಸ್ವೀಕರಿಸುತ್ತಿದ್ದ ವೇಳೆ ಕಣ್ಣೀರಿನಿಂದ ತುಂಬಿದ ಕಣ್ಣಿನೊಂದಿಗೆ ಗಮನ ಸೆಳೆದರು. ವಿಜಯ್ ಭಾಷಣ ಮುಗಿಸಿ ಜನರತ್ತ ಕೈಬೀಸಿದಾಗ, ತ್ರಿಷಾ ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಹೆಮ್ಮೆಯಿಂದ ನಗುತ್ತಿರುವ ದೃಶ್ಯ ವೈರಲ್ ಆಗಿದೆ.

ವಿಜಯ್ ಮತ್ತು ತ್ರಿಷಾ ನಡುವಿನ ಆತ್ಮೀಯತೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ. ಇದೇ ವೇಳೆ ವಿಜಯ್ ಅವರ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ, ಅವರ ಪತ್ನಿ ಮತ್ತು ಮಕ್ಕಳು ಸಮಾರಂಭಕ್ಕೆ ಗೈರಾಗಿದ್ದರು ಎನ್ನಲಾಗಿದೆ.

‘ಗಿಲ್ಲಿ’, ‘ಲಿಯೋ’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ, ಈಗ ರಾಜಕೀಯ ವೇದಿಕೆಯಲ್ಲೂ ಚರ್ಚೆಯ ಕೇಂದ್ರವಾಗಿದೆ. ಸ್ನೇಹಿತನ ರಾಜಕೀಯ ಏರಿಗೆಯನ್ನು ನೋಡಿ ತ್ರಿಷಾ ಭಾವುಕರಾದ ಕ್ಷಣ ಅಭಿಮಾನಿಗಳ ಮನ ಗೆದ್ದಿದೆ.

ರಾಜಕೀಯದ ಗಂಭೀರ ವಾತಾವರಣದ ನಡುವೆಯೂ ಈ ಭಾವನಾತ್ಮಕ ಕ್ಷಣವೇ ಸಮಾರಂಭದ ಪ್ರಮುಖ ಹೈಲೈಟ್ ಆಗಿ ಉಳಿದಿದೆ.

ಸಾನ್ವಿ ಸುದೀಪ್ ಬೆನ್ನಿನ ಮೇಲೆ ಮೂಡಿದ ಗಣೇಶ ; 8 ಗಂಟೆಗಳ ಟ್ಯಾಟೂ ಜರ್ನಿ ವೈರಲ್!

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಮತ್ತೊಮ್ಮೆ ತಮ್ಮ ಸರಳತೆ ಮತ್ತು ವಿಭಿನ್ನ ಸ್ಟೈಲ್‌ನಿಂದ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಹೈದರಾಬಾದ್‌ನಲ್ಲಿ ಭವ್ಯ ಗಣಪತಿ ಟ್ಯಾಟೂ ಹಾಕಿಸಿಕೊಂಡಿರುವ ಸಾನ್ವಿ, ಅದರ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದಾರೆ.

ಬೆನ್ನಿನ ಮೇಲೆ ಮೂಡಿಬಂದಿರುವ ಈ ಟ್ಯಾಟೂ ಕೆಂಪು ಮತ್ತು ಕಪ್ಪು ಬಣ್ಣದ ಕಾಂಬಿನೇಷನ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಸುಮಾರು 8 ಗಂಟೆಗಳ ಕಾಲ ಟ್ಯಾಟೂ ಪ್ರಕ್ರಿಯೆ ನಡೆದಿದ್ದು, ಸಾನ್ವಿ ಅದನ್ನು ತಾಳ್ಮೆಯಿಂದ ಪೂರ್ಣಗೊಳಿಸಿದ್ದಾರೆ.

ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮತ್ತು ಬಳಿಕದ ಜರ್ನಿಯನ್ನು ಸಾನ್ವಿ ವಿಡಿಯೋ ಮೂಲಕ ಹಂಚಿಕೊಂಡಿದ್ದು, “ಫೈನಲ್ ಲುಕ್ ಅದ್ಭುತವಾಗಿದೆ” ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾನ್ವಿ ಈಗಾಗಲೇ ಗಾಯಕಿಯಾಗಿ ಗುರುತಿಸಿಕೊಂಡಿದ್ದು, ‘ಮಸ್ತ್ ಮಲೈಕಾ’ ಹಾಡಿನ ಮೂಲಕ ಸಾಕಷ್ಟು ಗಮನ ಸೆಳೆದಿದ್ದರು. ಪಾಶ್ಚಾತ್ಯ ಮತ್ತು ಭಾರತೀಯ ಸಂಗೀತ ಎರಡರಲ್ಲೂ ಆಸಕ್ತಿ ಹೊಂದಿರುವ ಅವರು, ಸಂಗೀತ ಕ್ಷೇತ್ರದಲ್ಲೂ ತಮ್ಮದೇ ಗುರುತು ಮೂಡಿಸುತ್ತಿದ್ದಾರೆ.

ಸ್ಟಾರ್ ನಟನ ಮಗಳಾಗಿದ್ದರೂ ಅತಿರೇಕದ ಲೈಮ್‌ಲೈಟ್‌ನಿಂದ ದೂರ ಉಳಿಯುವ ಸಾನ್ವಿ, ತಮ್ಮ ಕಲೆ, ಸಂಗೀತ ಮತ್ತು ಸರಳ ವ್ಯಕ್ತಿತ್ವದ ಮೂಲಕ ಯುವಜನರಲ್ಲಿ ವಿಭಿನ್ನ ಫ್ಯಾನ್ ಬೇಸ್ ನಿರ್ಮಿಸಿಕೊಂಡಿದ್ದಾರೆ.

‘ಕಾಂಗ್ರೆಸ್ ಊಸರವಳ್ಳಿಗಿಂತ ಫಾಸ್ಟ್’ ; ಶಶಿ ತರೂರ್ ಎದುರೇ ಅಣ್ಣಾಮಲೈ ಟಾಂಗ್!

ಚೆನ್ನೈ: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಮ್ಮುಖದಲ್ಲೇ ಕಾಂಗ್ರೆಸ್ ಪಕ್ಷವನ್ನು ‘ಊಸರವಳ್ಳಿ’ಗೆ ಹೋಲಿಸಿ ಅಣ್ಣಾಮಲೈ ಟೀಕಿಸಿದ್ದಾರೆ.

ತಮಿಳುನಾಡಿನಲ್ಲಿ ಇಷ್ಟು ವರ್ಷ ಡಿಎಂಕೆ ಭಾಷೆಯನ್ನೇ ಮಾತನಾಡುತ್ತಿದ್ದ ಕಾಂಗ್ರೆಸ್, ಇದೀಗ ನಟ ವಿಜಯ್ ಪಕ್ಷದತ್ತ ಒಲವು ತೋರಿಸುತ್ತಿದೆ. “ಊಸರವಳ್ಳಿಯೂ ಕೂಡ ಇಷ್ಟು ವೇಗವಾಗಿ ಬಣ್ಣ ಬದಲಿಸೋದಿಲ್ಲ” ಎಂದು ಅಣ್ಣಾಮಲೈ ವ್ಯಂಗ್ಯವಾಡಿದರು.

ಕಾಂಗ್ರೆಸ್ ತನ್ನ ಸ್ವತಂತ್ರ ಅಸ್ತಿತ್ವ ಕಳೆದುಕೊಂಡಿದ್ದು, ಅಧಿಕಾರದಲ್ಲಿರುವ ಪ್ರಾದೇಶಿಕ ಪಕ್ಷಗಳ ಬೆನ್ನೇರಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ದಕ್ಷಿಣ ಭಾರತದ ರಾಜಕೀಯ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

“ಕಾಂಗ್ರೆಸ್ ಯಾವದಾದರೂ ಒಂದು ದಕ್ಷಿಣ ರಾಜ್ಯದಲ್ಲಿ ಗೆದ್ದರೆ ಸಾಕು, ದಕ್ಷಿಣ ಭಾರತ ಬೇರೆ, ತಮಿಳುನಾಡು ಬೇರೆ, ಕೇರಳ ಬೇರೆ ಎಂದು ಕೆಲ ಸಂಸದರು ಟ್ವೀಟ್ ಮಾಡೋಕೆ ಶುರುಮಾಡ್ತಾರೆ” ಎಂದು ಹೇಳಿದ ಅಣ್ಣಾಮಲೈ, ಶಶಿ ತರೂರ್ ಅಂತಹ ನಾಯಕರಿಗೆ ಹತ್ತಿರವಾಗಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದೂ ಅಣ್ಣಾಮಲೈ ಆರೋಪಿಸಿದರು. “ಲಕ್ಷಾಂತರ ಮತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಆರೋಪಕ್ಕೆ ಯಾವುದೇ ಸಾಕ್ಷ್ಯ ಇಲ್ಲ” ಎಂದು ತಿರುಗೇಟು ನೀಡಿದರು.

ಅಣ್ಣಾಮಲೈ ಟೀಕೆಗೆ ಪ್ರತಿಕ್ರಿಯಿಸಿದ ಶಶಿ ತರೂರ್, “ಅವರು ಚಮಿಲಿಯನ್ ಅಲ್ಲ, ತಮಿಳಿಯನ್ ಅಂತ ಹೇಳಿರಬಹುದು” ಎಂದು ಹಾಸ್ಯಾತ್ಮಕವಾಗಿ ಉತ್ತರಿಸಿ ವೇದಿಕೆಯಲ್ಲಿ ನಗುವಿನ ಅಲೆ ಎಬ್ಬಿಸಿದರು.

‘ಟಾಕ್ಸಿಕ್’ ಶೂಟಿಂಗ್ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಜೊತೆ ಮಾತಾಡ್ತಿದ್ದೆ: ಕಿಯಾರಾ ಅಡ್ವಾಣಿ ಭಾವುಕ

ತಾಯ್ತನದ ನಂತರದ ಬದುಕಿನ ಬಗ್ಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮನಮುಟ್ಟುವ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತಾವು ಮಾನಸಿಕವಾಗಿ ಮತ್ತು ದೈಹಿಕವಾಗಿ ದೊಡ್ಡ ಬದಲಾವಣೆ ಎದುರಿಸಿದ್ದಾಗಿ ಹೇಳಿದ ನಟಿ, ಸಂದರ್ಶನದ ವೇಳೆ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಕಿಯಾರಾ ಅವರು ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದ ವೇಳೆ ಏಳು ತಿಂಗಳ ಗರ್ಭಿಣಿಯಾಗಿದ್ದರು ಎಂಬ ವಿಚಾರ ಈಗ ಬಹಿರಂಗವಾಗಿದೆ. ಗರ್ಭಿಣಿಯಾಗಿದ್ದರೂ ಅವರು ಸಾಹಸ ದೃಶ್ಯಗಳಲ್ಲಿ ಭಾಗವಹಿಸಿದ್ದಾಗಿ ತಿಳಿದುಬಂದಿದೆ. ಈ ವಿಚಾರವನ್ನು ಚಿತ್ರತಂಡ ತುಂಬಾ ಗುಪ್ತವಾಗಿ ಇಟ್ಟಿತ್ತು ಎನ್ನಲಾಗಿದೆ.

‘ಶೂಟಿಂಗ್ ಸಮಯದಲ್ಲಿ ವ್ಯಾನ್‌ಗೆ ಹೋಗಿ ಹೊಟ್ಟೆಯಲ್ಲಿದ್ದ ಮಗುವಿನ ಜೊತೆ ಮಾತನಾಡುತ್ತಿದ್ದೆ. ಅಮ್ಮ ಕೇವಲ ಆ್ಯಕ್ಟಿಂಗ್ ಮಾಡುತ್ತಿದ್ದಾಳೆ, ಹೆದರಬೇಡ ಎಂದು ಹೇಳುತ್ತಿದ್ದೆ’ ಎಂದು ಕಿಯಾರಾ ಹೇಳಿದ್ದಾರೆ. ಈ ಹೇಳಿಕೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಾಯ್ತನದ ಆರಂಭದ ದಿನಗಳು ತುಂಬಾ ಕಠಿಣವಾಗಿದ್ದವು ಎಂದು ಹೇಳಿದ ನಟಿ, ‘ಮಗು ಹುಟ್ಟಿದ ಬಳಿಕ ಮೊದಲ ಆರು ತಿಂಗಳು ನನಗೆ ನನ್ನ ಬಗ್ಗೆ ಯೋಚಿಸುವ ಅವಕಾಶವೇ ಇರಲಿಲ್ಲ’ ಎಂದು ಹೇಳಿದ್ದಾರೆ.

ಇದೇ ವೇಳೆ ಯಶ್ ಜೊತೆಗಿನ ಆಪ್ತ ದೃಶ್ಯಗಳನ್ನು ಸಿನಿಮಾದಿಂದ ತೆಗೆಸಲು ತಾವು ಒತ್ತಾಯಿಸಿದ್ದೇವೆ ಎಂಬ ವದಂತಿಯನ್ನು ಕಿಯಾರಾ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ‘ಅದು ಸಂಪೂರ್ಣ ಸುಳ್ಳು’ ಎಂದು ಹೇಳಿದ್ದಾರೆ.

ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕುರಿತು ಮಾತನಾಡಿದ ಅವರು, ‘ಅವರು ಅದ್ಭುತ ತಂದೆ. ಪ್ರತಿಯೊಂದು ಹಂತದಲ್ಲೂ ನನ್ನ ಜೊತೆ ನಿಂತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಆರ್ಥಿಕತೆಗೆ ಬೆಂಬಲ ನೀಡಿ: ಚಿನ್ನ ಖರೀದಿಸಬೇಡಿ ಎಂದ ಮೋದಿ!

ಮುಂಬೈ: ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ “ಭಾರತೀಯರು ಒಂದು ವರ್ಷದವರೆಗೆ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸುವುದನ್ನು ತಪ್ಪಿಸಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ ಮಾರುಕಟ್ಟೆಯಲ್ಲಿ ತಕ್ಷಣದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ.

ಪ್ರಧಾನಿಯವರ ಈ ಹೇಳಿಕೆಯ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ (MCX) ನಲ್ಲಿ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಬೆಳಗ್ಗೆ 9:40ರ ವೇಳೆಗೆ ಜೂನ್‌ ತಿಂಗಳ ಚಿನ್ನದ ಫ್ಯೂಚರ್‌ ಕಾಂಟ್ರಾಕ್ಟ್‌ ಸುಮಾರು 574 ರೂ. ಇಳಿಕೆಯಾಗಿದ್ದು, 1,53,669 ರೂ. ಮಟ್ಟದಲ್ಲಿ ವ್ಯವಹಾರ ನಡೆಸುತ್ತಿದೆ.

ಇತ್ತ ಬೆಳ್ಳಿಯ ದರದಲ್ಲಿ ಏರಿಕೆ ದಾಖಲಾಗಿದೆ. ಜೂನ್‌ ಫ್ಯೂಚರ್‌ ಬೆಳ್ಳಿ ದರವು 698 ರೂ. ಏರಿಕೆಯಾಗಿದ್ದು, 2,65,957 ರೂ. ಮಟ್ಟದಲ್ಲಿ ವ್ಯವಹಾರ ನಡೆಯುತ್ತಿದೆ. ಮಾರುಕಟ್ಟೆ ಮುಕ್ತಾಯವಾಗುವ ವೇಳೆಗೆ ದರಗಳಲ್ಲಿ ಇನ್ನಷ್ಟು ಏರಿಳಿತ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿ ಜಾಗತಿಕ ಆರ್ಥಿಕತೆಯ ಮೇಲೆ ಒತ್ತಡ ಉಂಟುಮಾಡುತ್ತಿದೆ. ಈ ಸವಾಲಿನ ಸಂದರ್ಭದಲ್ಲಿ ಭಾರತೀಯರು ದೇಶದ ಆರ್ಥಿಕ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತವು ಚಿನ್ನದ ಅಗತ್ಯದ ಬಹುಪಾಲನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಇದರಿಂದ ದೇಶದ ವಿದೇಶಿ ವಿನಿಮಯ ನಿಧಿಯಿಂದ ದೊಡ್ಡ ಮೊತ್ತ ಹೊರಹೋಗುತ್ತಿದೆ. ಆಮದು ವೆಚ್ಚ ಕಡಿಮೆ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಹಾಸನದಲ್ಲಿ ದಾರುಣ ಘಟನೆ! ಆಡಿಯೋ ರೆಕಾರ್ಡ್ ಮಾಡಿ ರೈಲಿಗೆ ತಲೆಕೊಟ್ಟ ಯುವಕ

ಹಾಸನ: ಯುವತಿ ವಿಚಾರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.

ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ ಎಂದು ಗುರುತಿಸಲಾಗಿದೆ. ಯುವತಿಯೊಬ್ಬಳ ವಿಚಾರದಲ್ಲಿ ಗ್ರಾಮದ ಶಂಕರ, ದರ್ಶನ್, ಚೇತನ್ ಹಾಗೂ ದಿನೇಶ್ ಎಂಬವರು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅಭಿಷೇಕ್ ಆತ್ಮಹತ್ಯೆಗೆ ಮುನ್ನ ಆಡಿಯೋ ರೆಕಾರ್ಡ್ ಮಾಡಿಟ್ಟಿದ್ದಾನೆ ಎನ್ನಲಾಗಿದೆ.

ಆಡಿಯೋದಲ್ಲಿ ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವ ಅಭಿಷೇಕ್, ಬಳಿಕ ಭಾನುವಾರ ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಯುವಕನ ಆಡಿಯೋ ದಾಖಲೆಯನ್ನು ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರೈತನ ಮಗನ ಮಹಾಸಾಧನೆ..! ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ರೈತನ ಮಗ ಬಸವರಾಜ್ ಧರೇಪ್ಪ ಕೆಂಪವಾಡ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಯುಪಿಎಸ್‌ಸಿ ನಡೆಸಿದ ಐಎಫ್‌ಎಸ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಸವರಾಜ್ ದೇಶಕ್ಕೇ ಮೊದಲ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಬಸವರಾಜ್ ಅವರ ಈ ಸಾಧನೆ ಇದೀಗ ಸಾವಿರಾರು ಯುವಕರಿಗೆ ಸ್ಪೂರ್ತಿಯಾಗಿದೆ.

ಸಾಧನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸವದಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಹಾಗೂ ಸಂಬಂಧಿಕರು ಬಸವರಾಜ್ ಮನೆಗೆ ಆಗಮಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಬಸವರಾಜ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸವದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರ್ಣಗೊಳಿಸಿದ್ದರು. ಬಳಿಕ ಅಥಣಿಯಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡಿ, ಶಿರಸಿಯಲ್ಲಿ ಪದವಿ ಶಿಕ್ಷಣ ಮುಗಿಸಿದ್ದರು. ನಂತರ ಯುಪಿಎಸ್‌ಸಿ ಕನಸನ್ನು ಹೊತ್ತು ಬೆಂಗಳೂರಿಗೆ ತೆರಳಿ ತಯಾರಿ ಆರಂಭಿಸಿದ್ದರು.

ಯಾವುದೇ ಪ್ರತಿಷ್ಠಿತ ಕೋಚಿಂಗ್ ಸೆಂಟರ್‌ಗಳ ನೆರವಿಲ್ಲದೆ ಸ್ವಂತ ಪರಿಶ್ರಮದ ಮೂಲಕ ಎರಡನೇ ಪ್ರಯತ್ನದಲ್ಲೇ ಅಖಿಲ ಭಾರತ ಮಟ್ಟದ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಸವರಾಜ್, “ನಾನು ಗ್ರಾಮೀಣ ಭಾಗದವನು. ಮೊರಾರ್ಜಿ ಶಾಲೆಯಲ್ಲಿ ಓದಿದವನು. ಗುರಿ ತಲುಪುವ ಛಲವಿದ್ದರೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ನನ್ನ ಸಾಧನೆ ಅದಕ್ಕೆ ಸಾಕ್ಷಿ” ಎಂದು ಸಂತಸ ವ್ಯಕ್ತಪಡಿಸಿದರು.

ತಂದೆ ಧರೇಪ್ಪ ಕೆಂಪವಾಡ ಮಾತನಾಡಿ, “ನಾವು ಸಣ್ಣ ರೈತ ಕುಟುಂಬದವರು. ಆರ್ಥಿಕ ಸಂಕಷ್ಟ ಇದ್ದರೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿದ್ದೇವೆ. ಗುತ್ತಿಗೆ ಜಮೀನು ಪಡೆದು ದುಡಿದು ಮಗನನ್ನು ಓದಿಸಿದ್ದೇವೆ. ಇಂದು ಅವನ ಸಾಧನೆಯಿಂದ ನಮ್ಮ ಜೀವನ ಸಾರ್ಥಕವಾಗಿದೆ” ಎಂದು ಭಾವುಕರಾಗಿ ಹೇಳಿದರು.

ರೈತ ಕುಟುಂಬದ ಯುವಕನೊಬ್ಬ ದೇಶದ ಅಗ್ರಸ್ಥಾನಕ್ಕೇರಿರುವುದು ಬೆಳಗಾವಿ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ಭುವನೇಶ್ವರ್ ಸಿಕ್ಸರ್‌ನಿಂದ ತಿರುಗಿದ ಪಂದ್ಯ..! ಮುಂಬೈ ವಿರುದ್ಧ ರೋಚಕ ಗೆಲುವು ಸಾಧಿಸಿದ ಆರ್‌ಸಿಬಿ

ಕೊನೆಯ ಎಸೆತದವರೆಗೂ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸಿದ್ದ ಐಪಿಎಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ಕೊನೆಯ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಸಿಡಿಸಿದ ಸಿಕ್ಸರ್ ಪಂದ್ಯಕ್ಕೆ ತಿರುವು ನೀಡಿದ್ದು, ಆರ್‌ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಯಿತು. 166 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಆರಂಭದಲ್ಲೇ ಆಘಾತ ಅನುಭವಿಸಿತು. ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರೆ, ದೇವದತ್ ಪಡಿಕ್ಕಲ್ 12 ಮತ್ತು ನಾಯಕ ರಜತ್ ಪಾಟೀದಾರ್ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಜಾಕೋಬ್ ಬೆಥೆಲ್ 27 ರನ್‌ಗಳ ಕೊಡುಗೆ ನೀಡಿದರು.

ಸಂಕಷ್ಟದ ವೇಳೆಯಲ್ಲಿ ಕೃನಾಲ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. 46 ಎಸೆತಗಳಲ್ಲಿ 73 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದ ಕೃನಾಲ್, ತಂಡವನ್ನು ಗೆಲುವಿನ ಹಾದಿಯಲ್ಲಿಟ್ಟರು. ಜಿತೇಶ್ ಶರ್ಮಾ 18 ರನ್‌ಗಳ ನೆರವು ನೀಡಿದರೆ, ಟಿಮ್ ಡೇವಿಡ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.

ಕೊನೆಯ ಓವರ್‌ನಲ್ಲಿ ಆರ್‌ಸಿಬಿಗೆ 15 ರನ್‌ಗಳ ಅವಶ್ಯಕತೆ ಇತ್ತು. ಪಂದ್ಯ ತೀವ್ರ ರೋಚಕ ಹಂತ ತಲುಪಿದ್ದ ವೇಳೆ ಶೆಫರ್ಡ್ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್ ಕುಮಾರ್ ಸಿಕ್ಸರ್ ಸಿಡಿಸಿ ಪಂದ್ಯದ ಚಿತ್ರಣ ಬದಲಿಸಿದರು. ಬಳಿಕ ಒಂದು ಸಿಂಗಲ್ ಪಡೆದು ಸಮೀಕರಣವನ್ನು ಕೊನೆಯ ಎಸೆತಕ್ಕೆ 2 ರನ್‌ಗೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ರಸಿಕ್ ಸಲಾಂ ಎರಡು ರನ್ ಪೂರೈಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಕೇವಲ 28 ರನ್‌ಗೆ ಮೂರು ಪ್ರಮುಖ ವಿಕೆಟ್ ಕಳೆದುಕೊಂಡ ಮುಂಬೈಗೆ ನಮನ್ ಧೀರ್ ಹಾಗೂ ತಿಲಕ್ ವರ್ಮಾ ಆಸರೆಯಾದರು. ಇಬ್ಬರೂ ಜವಾಬ್ದಾರಿಯುತ ಆಟವಾಡಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ಹಾಗೂ ರೊಮಾರಿಯೋ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದರು.

ಕೊನೆಯ ಕ್ಷಣದವರೆಗೂ ಕುತೂಹಲ ಕಾಪಾಡಿಕೊಂಡಿದ್ದ ಈ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಗೆಲುವು ಸಾಧಿಸಿ ಅಭಿಮಾನಿಗಳ ಹರ್ಷಕ್ಕೆ ಕಾರಣವಾಯಿತು.

ಬೆಂಗಳೂರಿನಲ್ಲಿ ಎರಡು ದಿನ ಮಳೆ ಅಲರ್ಟ್..! ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೀನುಗಾರರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರೀತಿ ಮಾಡಿದ್ದು ತಮ್ಮ, ಶಿಕ್ಷೆ ಅಣ್ಣನಿಗೆ! ಕಿಡ್ನ್ಯಾಪ್ ಮಾಡಿ ಕೈ ಕಾಲು ಕಟ್ಟಿ ಹಲ್ಲೆ ಮಾಡಿದ ಹುಡುಗಿ ಕಡೆಯವರು

ಬೆಂಗಳೂರು: ಪ್ರೇಮ ಪ್ರಕರಣದ ಹಿನ್ನೆಲೆ ಯುವಕನ ಅಣ್ಣನನ್ನು ಅಪಹರಿಸಿ ಕೈಕಾಲು ಕಟ್ಟಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಬ್ಬರೂ ಮನೆ ಬಿಟ್ಟು ಓಡಿ ಹೋಗಿದ್ದರು ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಯುವತಿಯ ತಂದೆ ಬಸವರಾಜ್ ಹಾಗೂ ಅವರ ಸಂಬಂಧಿಕರು, ಶಿವಕುಮಾರ್ ಸಿಗದಿದ್ದ ಹಿನ್ನೆಲೆ ಆತನ ಅಣ್ಣ ಕೊಟ್ರೇಶ್ ಮೇಲೆ ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಕೊಟ್ರೇಶ್ ಬ್ಯಾಡರಹಳ್ಳಿಯ ದೇವಸ್ಥಾನವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. “ಪೊಲೀಸ್ ಠಾಣೆಗೆ ಹೋಗೋಣ” ಎಂದು ನಂಬಿಸಿ ಆರೋಪಿಗಳು ಕೊಟ್ರೇಶ್ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದಾರೆ. ಬಳಿಕ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೈಕಾಲು ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ನಡೆಸುವ ದೃಶ್ಯವನ್ನು ಆರೋಪಿಗಳು ವೀಡಿಯೋ ಮಾಡಿ, “ಶಿವು ಎಲ್ಲೇ ಇದ್ದರೂ ಹುಡುಗಿಯನ್ನು ಕರೆದುಕೊಂಡು ಬಂದು ಒಪ್ಪಿಸು” ಎಂದು ಕೊಟ್ರೇಶ್ ಮೂಲಕ ಹೇಳಿಸಿ ಸಂಬಂಧಿಕರಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವೀಡಿಯೋದಲ್ಲಿ ಕೊಟ್ರೇಶ್ ಜೀವ ಉಳಿಸುವಂತೆ ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಈ ಕುರಿತು ಕೊಟ್ರೇಶ್ ಸಂಬಂಧಿಕರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿಗಳು ಕೊಟ್ರೇಶ್ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

error: Content is protected !!