ಬೆಂಗಳೂರು: ಪ್ರಸ್ತುತ ಸಾಲಿನಿಂದಲೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಕುರಿತು ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2025-2026ನೇ ಸಾಲಿನಿಂದ ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರವನ್ನು ಸರ್ಕಾರ ಕೊನೆಯ ಕ್ಷಣದಲ್ಲಿ ತೆಗೆದುಕೊಂಡಿದೆ ಎಂದು ಆಕ್ಷೇಪಿಸಿದರು. ಇದಕ್ಕೂ ಮುನ್ನ ಮಂಡಳಿ ಹೊರಡಿಸಿದ್ದ ಮಾರ್ಗಸೂಚಿಯ ಪ್ರಕಾರ, 100 ಅಂಕಗಳ ವ್ಯವಸ್ಥೆ (80 ಲಿಖಿತ + 20 ಆಂತರಿಕ) ಜಾರಿಯಲ್ಲಿತ್ತು ಎಂದು ಹೇಳಿದರು.
ಇದಲ್ಲದೆ, ಯುಪಿಎಸ್ಸಿ ಹಾಗೂ ಬ್ಯಾಂಕಿಂಗ್ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗ್ರೇಡ್ ಪರಿಗಣಿಸಲಾಗುವುದಿಲ್ಲ. ಕೇವಲ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಹೀಗಾಗಿ ಗ್ರೇಡ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗಬಹುದು ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದೆಯೇ ಎಂದು ಪ್ರಶ್ನಿಸಿತು. ಸರ್ಕಾರಿ ವಕೀಲರು, ಸದ್ಯ ಕರಡು ಅಧಿಸೂಚನೆ ಮಾತ್ರ ಹೊರಬಂದಿದೆ ಎಂದು ತಿಳಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ಹಾಲಿ ಇರುವ ನಿಯಮಗಳು ಹಾಗೂ ಮಾರ್ಗಸೂಚಿಯ ಪ್ರಕಾರವೇ 2025-2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

