ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಹಬ್ಬದ ಸಂಭ್ರಮ ಮನೆ ಮಾಡಿದೆ.
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಸೀಸನ್ನಲ್ಲಿ ಆರ್ಸಿಬಿ ತವರು ನೆಲದಲ್ಲಿ ಆಡಲಿರುವ ಕೊನೆಯ ಲೀಗ್ ಪಂದ್ಯ ಇದಾಗಿರುವುದರಿಂದ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಕಂಡುಬರುತ್ತಿದೆ.
ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದ್ದು, ಸುಮಾರು 2,300 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಡಿಸಿಪಿ, ಎಸಿಪಿ ಹಾಗೂ ಇನ್ಸ್ಪೆಕ್ಟರ್ ಹುದ್ದೆಯ ಅಧಿಕಾರಿಗಳ ನೇತೃತ್ವದಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ವಿಶೇಷ ಭದ್ರತಾ ಯೋಜನೆ ರೂಪಿಸಲಾಗಿದೆ.
ಇದೇ ವೇಳೆ ಸ್ಟೇಡಿಯಂ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಹಲವೆಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿರುವ ಪೊಲೀಸರು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಳೆದ ಪಂದ್ಯಗಳ ವೇಳೆ ಟಿಕೆಟ್ಗಳ ಕಾಳಸಂತೆ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆ, ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಈ ಬಾರಿ ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ. ಟಿಕೆಟ್ ಅಕ್ರಮ ಮಾರಾಟಗಾರರ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗಿದೆ.
ಪಂದ್ಯ ವೀಕ್ಷಣೆಗೆ ಸಾವಿರಾರು ಅಭಿಮಾನಿಗಳು ಆಗಮಿಸುವುದರಿಂದ ಜನದಟ್ಟಣೆಯಲ್ಲಿ ಮೊಬೈಲ್ ಕಳ್ಳತನದಂತಹ ಘಟನೆಗಳು ಸಂಭವಿಸದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೂಚಿಸಲಾಗಿದೆ.

