ಲಕ್ಷ್ಮೇಶ್ವರ; ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಪೂರ್ವನಿಯೋಜಿತವಾಗಿ ಕೈಗೊಳ್ಳದೇ ಅವ್ಯವಸ್ಥೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನೂರಾರು ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿಯಿಂದ ಪ್ರತಿ ವರ್ಷ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಬಡ ಕೂಲಿಕಾರ್ಮಿಕರಿಗೆ ನೀಡಬೇಕಾದ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ವನಿಯೋಜಿತ ಮಾಡದೇ ಇರುವುದರಿಂದ ಕೆಲಸ ನಿರ್ವಹಣೆ ಗೊಂದಲದ ನಡುವೆ ಸಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದರು.
ಮುಖ್ಯವಾಗಿ ಪೇಸ್ಲಾಕ್ ತಾಂತ್ರಿಕ ಸಮಸ್ಯೆಯನ್ನು ನೆಪವೊಡ್ಡಿ ಹಲವಾರು ಕಾರ್ಮಿಕರಿಗೆ ಕೆಲಸ ನೀಡದೇ ವಂಚಿಸಲಾಗುತ್ತಿದೆ. ಆದ್ದರಿಂದ ಗ್ರಾಮ ಪಂಚಾಯಿತಿ ಆಡಳಿತ ಮುಂಚಿತವಾಗಿ ಕಾಮಗಾರಿಗಳನ್ನು ಯೋಜಿಸಿ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಕಳೆದ ವರ್ಷವೂ ಮಳೆ ಆರಂಭವಾದ ಬಳಿಕ ಕಾಮಗಾರಿ ನಡೆಸಲು ಪ್ರಯತ್ನಿಸಿದ್ದು, 20 ದಿನ ಕೆಲಸ ಮಾಡಿದರೂ ಕೆಲವೇ ದಿನಗಳ ಅರ್ಧ ಕೂಲಿ ಮಾತ್ರ ಪಾವತಿಸಲಾಗಿದೆ. ಇದಕ್ಕೂ ತಾಂತ್ರಿಕ ದೋಷವನ್ನೇ ಕಾರಣವಾಗಿ ಹೇಳಲಾಗಿದೆ ಎಂದು ಕಾರ್ಮಿಕರು ದೂರಿದರು.
ಈ ವರ್ಷವೂ ಪೂರ್ವಯೋಜನೆ ಇಲ್ಲದೇ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಕಾರ್ಮಿಕರು ಸ್ಥಳಕ್ಕೆ ತೆರಳಿ ಕೆಲಸ ಆರಂಭಿಸಿದರೂ, ಪೇಸ್ಲಾಕ್ ತೆಗೆಯದ ಕಾರಣ ಎನ್ಎಂಆರ್ ದಾಖಲಾಗದೇ ಹಲವರು ಕೂಲಿಯಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ ಸೂರಣಗಿ ಮಾತನಾಡಿ, ಪ್ರತಿವರ್ಷ ಕಾರ್ಮಿಕರು ಜಾಬ್ ಕಾರ್ಡ್ ಸಲ್ಲಿಸಿದರೂ ಸಿಬ್ಬಂದಿ ಸರಿಯಾಗಿ ಎನ್ಎಂಆರ್ ಹಾಕುವುದಿಲ್ಲ. ಪೂರ್ವಯೋಜನೆ ಇಲ್ಲದೇ ಕಾಮಗಾರಿ ನಡೆಸುತ್ತಿರುವುದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂಗಾರು ಕೃಷಿ ಚಟುವಟಿಕೆ ಆರಂಭವಾಗುವ ಮೊದಲು ಸಮಸ್ಯೆ ಪರಿಹರಿಸಿ ಕೂಲಿಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.
“ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಪೂರ್ವನಿಯೋಜಿತವಾಗಿ ಕೈಗೊಳ್ಳಲಾಗುತ್ತಿದೆ. ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಮಾಹಿತಿ ನೀಡಲಾಗಿದೆ. ಪೇಸ್ಲಾಕ್ ಸೇರಿ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಕಾರ್ಮಿಕರ ನೋಂದಣಿ ವಿಳಂಬವಾಗುತ್ತಿದೆ. ಇದು ಜಿಲ್ಲೆಯ ಹಲವೆಡೆ ಕಂಡುಬಂದಿರುವ ಸಮಸ್ಯೆಯಾಗಿದ್ದು, ಶೀಘ್ರ ಪರಿಹರಿಸಿ ಕಾಮಗಾರಿ ಸುಗಮಗೊಳಿಸಲಾಗುವುದು.” ಎಂದು ರೋಣದ, ಪಿಡಿಓ ಜಿ.ಎಂ ಹೇಳಿದರು.

