ಬೆಂಗಳೂರು: ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡುಗೋಡಿ ಚನ್ನಸಂದ್ರ ನಿವಾಸಿ ಪಾಪಣ್ಣ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ವಿಡಿಯೋ ಸಂದೇಶ ದಾಖಲಿಸಿರುವ ಪಾಪಣ್ಣ, ಎಕೆಜಿ ಕಾಲೋನಿಯ ನಿವಾಸಿಗಳಾದ ಜೋಗಿ ಶೀನಾ, ಪ್ರಶಾಂತ್, ಸಂತೋಷ್, ರಾಧಾ ಹಾಗೂ ಲಲಿತ್ ಕುಮಾರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಪಾಪಣ್ಣ, “ಸುಳ್ಳು ಅಟ್ರಾಸಿಟಿ ಪ್ರಕರಣಗಳನ್ನು ದಾಖಲಿಸಿ ಹಣಕ್ಕಾಗಿ ಒತ್ತಡ ಹೇರಲಾಗುತ್ತಿದೆ. 2021ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಿಸಿ, ಅದನ್ನು ವಾಪಸ್ ಪಡೆಯಲು ಲಕ್ಷಾಂತರ ರೂಪಾಯಿ ಪಡೆದಿದ್ದರು. ಇದೀಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಾನು ಬಡ ವ್ಯಾಪಾರಿಯಾಗಿದ್ದು, ಈ ಕಿರುಕುಳದಿಂದ ಮನನೊಂದಿದ್ದೇನೆ” ಎಂದು ಆರೋಪಿಸಿದ್ದಾರೆ.
ಅಲ್ಲದೆ, ತಮ್ಮ ಸಾವಿಗೆ ಜೋಗಿ ಶೀನಾ ಮತ್ತು ಅವರ ಕುಟುಂಬದವರೇ ಕಾರಣ ಎಂದು ಹೇಳಿರುವ ಪಾಪಣ್ಣ, ತಮ್ಮ ಕುಟುಂಬ ಹಾಗೂ ತಂಗಿಯನ್ನು ರಕ್ಷಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಮೃತರು ಮಂಗಳವಾರ ರಾತ್ರಿ ಸುಮಾರು 10.05 ಗಂಟೆಗೆ ವಿಡಿಯೋ ಸಂದೇಶ ಕಳುಹಿಸಿದ್ದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ವೈಟ್ಫೀಲ್ಡ್ ವಿಭಾಗದ ಡಿಸಿಪಿ ಬೆಳಗಿನ ಜಾವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ತಂಗಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಭಾಗ್ಯಶ್ರೀ ನೀಡಿದ ದೂರಿನ ಜೊತೆಗೆ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

