Home Blog

ಬೆಂಗಳೂರಿನ ಖಾಲಿ ನಿವೇಶನಗಳಿಗೆ ನೋಟಿಸ್‌: ತ್ವರಿತ ಸ್ವಚ್ಛತಾ ಕಾರ್ಯಕ್ಕೆ ಕೃಷ್ಣ ಬೈರೇಗೌಡ ಸೂಚನೆ

0

ಬೆಂಗಳೂರು: ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಮಾಲೀಕರಿಗೆ ನೋಟಿಸ್‌ ನೀಡಿ ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದ ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಸಚಿವರು, ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್‌ 22ರವರೆಗೆ ಗಡುವು ನೀಡಲಾಗಿತ್ತು. ಆದರೆ, ಕೆಲವೇ ಪ್ರದೇಶಗಳಲ್ಲಿ ಶೇ.20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ ನಗರದ ಎಲ್ಲಾ ಖಾಲಿ ನಿವೇಶನಗಳಲ್ಲೂ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಐದೂ ನಗರ ಪಾಲಿಕೆಗಳು ಅಗತ್ಯ ಸಿದ್ಧತೆ ಮಾಡಿಕೊಂಡು ಕಾರ್ಯಾಚರಣೆ ನಡೆಸಬೇಕು. ಸ್ವಚ್ಛತಾ ಕಾರ್ಯಕ್ಕೆ ತಗಲುವ ವೆಚ್ಚವನ್ನು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

ನಿವೇಶನಗಳ ಗುರುತಿಸಿ ನೋಟಿಸ್‌ ನೀಡಲು ಸೂಚನೆ

ಸ್ವಚ್ಛತಾ ಕಾರ್ಯ ಅಗತ್ಯವಿರುವ ಖಾಲಿ ನಿವೇಶನಗಳನ್ನು ಕಂದಾಯ ಅಧಿಕಾರಿಗಳು ಗುರುತಿಸಿ ಪಟ್ಟಿ ಮಾಡಬೇಕು. ಪಟ್ಟಿ ಮಾಡಲಾದ ನಿವೇಶನಗಳಿಗೆ ಮಾರ್ಷಲ್‌ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ನೋಟಿಸ್‌ ಅಂಟಿಸಬೇಕು.

ಬಳಿಕ ನಗರ ಪಾಲಿಕೆಗಳ ವತಿಯಿಂದಲೇ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದ್ದಾರೆ. ಇದೇ ಗುರುವಾರದಿಂದ ಎಲ್ಲಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಆರಂಭಿಸಬೇಕು. ಮುಂದಿನ ಸೋಮವಾರದಿಂದ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತೆಗಾಗಿ ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳಲು ಅಗತ್ಯವಿರುವ ಏಜೆನ್ಸಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೈಸ್ ಕಂಪನಿ ಖರೀದಿ ಮಾಡುತ್ತಿರುವುದು ಸಿಎಂ ಡಿ.ಕೆ.ಶಿವಕುಮಾರ್! ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

0

ಬೆಂಗಳೂರು:  ರಾಜ್ಯದ ಈಗಿನ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ (ಟೇಕ್ ಓವರ್) ಮಾಡಲು ಹೊರಟಿರುವ ವ್ಯಕ್ತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪೋಟಕ ಸಂಗತಿಯನ್ನು ಬಹಿರಂಗಪಡಿಸಿದರು. ನನಗಿರುವ ಮಾಹಿತಿ ಪ್ರಕಾರ ಬೇನಾಮಿ ಕಂಪನಿಗಳ ಮೂಲಕ ಈ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ ಮಾಡಲು ಹೊರಟಿದ್ದಾರೆ. ರೈತರಿಗೊಂದು ಕಾನೂನು, ಮುಖ್ಯಮಂತ್ರಿಗೆ ಇನ್ನೊಂದು ಕಾನೂನು ಇದೆಯಾ ಈ ರಾಜ್ಯದಲ್ಲಿ? ಬಿಎಂಐಸಿ ಯೋಜನೆ ಹೆಸರಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಹೊಡೆಲು ಸಂಚು ರೂಪಿಸಿದ್ದಾರೆ. ನಾನಿಲ್ಲಿ ಕೂತು ಸಂತೆಭಾಷಣ ಮಾಡುತ್ತಿಲ್ಲ. ಮುಂದಿನ ವಾರ ದಾಖಲೆ ಸಮೇತ ಹೇಳುತ್ತೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ರಾಜ್ಯದ ಈಗಿನ ಮುಖ್ಯಮಂತ್ರಿ ನೈಸ್ ಅಕ್ರಮಗಳಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಈ ಮುಖ್ಯಮಂತ್ರಿಯೇ ರಾಷ್ಟ್ರದಲ್ಲಿಯೇ ಅತಿ ದೊಡ್ಡ ಭೂ ಲೂಟಿಯ ಮಹಾನಾಯಕ ಎಂದು ಅವರು ಗಂಭೀರ ಆರೋಪ ಮಾಡಿದರು.

ವಿಧಾನಸೌಧದ ಮೂರನೇ ಮಾಡಿಯಲ್ಲಿ ಕೂತು ಈ ಮುಖ್ಯಮಂತ್ರಿ ನೇರ ವ್ಯವಹಾರಕ್ಕೆ ಇಳಿದಿದ್ದಾರೆ. ನೈಸ್ ಕಂಪನಿಯನ್ನು ಯಾರು ಟೇಕ್ ಓವರ್ ಮಾಡುತ್ತಿದ್ದಾರೆ ಎಂಬುದನ್ನು ತಾಕತ್ತಿದ್ದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಹೇಳಲಿ. ಯೋಜನೆಯನ್ನು ಯಾರು ಸ್ವಾಧೀನ ಮಾಡಿಕೊಳ್ಳುತ್ತಿದ್ದಾರೆ?ಬೇನಾಮಿ ಕಂಪನಿಗಳ ಮೂಲಕ ಯಾರು ಯಾರು ಈ ವ್ಯವಹಾರಕ್ಕೆ ಇಳಿದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ಮುಖ್ಯಮಂತ್ರಿ ಎದೆ ಮುಟ್ಟಿಕೊಂಡು ಮಾತನಾಡಲಿ. ಈ ಬಗ್ಗೆ ರಾಜ್ಯದ ಜನತೆಯ ಮುಂದೆ ಸತ್ಯವನ್ನು ಬಾಯಿ ಬಿಡಲಿ ಎಂದು ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.

ವಿದ್ಯಾರ್ಥಿ, ಯುವ ಸಮೂಹಕ್ಕೆ ಕರೆ ನೀಡಿದ ಕೇಂದ್ರ ಸಚಿವರು:

ನೈಸ್ ಯೋಜನೆ ಇಡೀ ದೇಶದಲ್ಲಿಯೇ ಅತೀ ದೊಡ್ಡ ಭೂ ಹಗರಣ. ಇದು ಸ್ಕ್ಯಾಮ್ ಫಾರ್ ಸ್ಕಿಮ್ ಎನ್ನುವ ರೀತಿಯಲ್ಲಿದೆ. ಈ ಅಕ್ರಮದ ವಿರುದ್ಧ ಇಡೀ ರಾಜ್ಯವೇ ತಿರುಗಿ ಬೀಳಬೇಕಿದೆ. ಯುವಕರು, ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಬೇಕಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಕರೆ ನೀಡಿದರು. ಈ ಮುಖ್ಯಮಂತ್ರಿಗೂ ನೈಸ್ ಯೋಜನೆಗೂ ಇರುವ ಸಂಬಂಧವೇನು? ನೈಸ್ ಜೊತೆ ಸಿಎಂ ಒಡಂಬಡಿಕೆ ಏನು? ಈ ಕಂಪನಿಯ ಮಾಲೀಕರ ಜೊತೆ ಈ ವ್ಯಕ್ತಿಗೆ ಇರುವ ಸಂಬಂಧಗಳು ಮತ್ತು ವ್ಯವಹಾರಗಳು ಏನು? ಧೈರ್ಯವಿದ್ದರೆ ಜನರ ಮುಂದೆ ಈ ಬಗ್ಗೆ ಮಾತನಾಡಲಿ. ನಾನು ಸತ್ಯ ಹೇಳುವುದಕ್ಕೆ ಅಂಜುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ನೈಸ್ ರಸ್ತೆ ಅಕ್ರಮದ ಬಗ್ಗೆ ರಾಜ್ಯ ಸರಕಾರ ಮೌನಕ್ಕೆ ಶರಣಾಗಿದೆ. ಯೋಜನಾ ಚೌಕಟ್ಟು ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆ ಆಗಿದೆ. ಈ ಸರ್ಕಾರ ನೈಸ್ ಕಂಪನಿ ಜತೆ ನೇರವಾಗಿ ಕುಮ್ಮಕ್ಕಾಗಿದೆ ಎಂದು ಅವರು ದೂರಿದರು. ರೈತರ ಭೂಸ್ವಾಧೀನವಾಗಿ 20 ವರ್ಷಗಳೇ ಆಗಿದೆ. ರೈತರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ. ಆದರೆ, ರೈತರಿಂದ ಕಿತ್ತುಕೊಂಡ ಭೂಮಿಯನ್ನು ಮನಸೋಇಚ್ಛೆ ಮಾರಾಟ ಮಾಡಿಕೊಂಡಿದೆ.

ಅಲ್ಲದೆ ಒಪ್ಪಂದದಂತೆ 111 ಕಿ.ಮೀ. ರಸ್ತೆಯನ್ನು ನೈಸ್ ನಿರ್ಮಾಣ ಮಾಡಬೇಕಿತ್ತು. ಆದರೆ ಕೇವಲ 5 ಕಿಲೋಮೀಟರ್ ರಸ್ತೆಯನ್ನಷ್ಟೇ ನಿರ್ಮಿಸಿದೆ. ಹೀಗೆ ಯೋಜನಾ ಚೌಕಟ್ಟು ಒಪ್ಪಂದದ ಎಲ್ಲ ಅಂಶಗಳನ್ನು ಸಾರಾಸಗಟ್ಟಾಗಿ ಉಲ್ಲಂಘನೆ ಮಾಡಿದ ಮೇಲೆಯೂ ಅನೇಕ ವರ್ಷಗಳಿಂದ ನೈಸ್ ಕಂಪನಿ ತನ್ನ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಇಷ್ಟೆಲ್ಲಾ ಅಕ್ರಮಗಳನ್ನು ಎಸಿಗಿರುವ ಕಾರಣದಿಂದಲೇ ರಾಜ ಹೈಕೋರ್ಟ್ ನೈಸ್ ಯೋಜನೆಯ ಬಗ್ಗೆ ಕಠಿಣವಾದ ಶಬ್ದಗಳ ಮೂಲಕ ತನ್ನ ಅಭಿಪ್ರಾಯವನ್ನು ದಾಖಲಿಸಿದೆ. ನ್ಯಾಯಾಲಯದ ಅಭಿಪ್ರಾಯವನ್ನು ಈಗಾಗಲೇ ಗಣನೆಗೆ ತೆಗೆದುಕೊಂಡು ಸರ್ಕಾರ ನೈಸ್ ವಿರುದ್ಧ ಕ್ರಮ ಜರುಗಿಸಬೇಕಿತ್ತು. ದುರಂತವೆಂದರೆ ರಾಜ್ಯದ ಮುಖ್ಯಮಂತ್ರಿಯೇ ನೇರವಾಗಿ ನೈಸ್ ಕಂಪನಿ ಜೊತೆ ಶಾಮೀಲಾಗಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಸಾರ್ವಜನಿಕವಾಗಿ ಇಷ್ಟೆಲ್ಲ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗುತ್ತಿದ್ದರು ನೈಸ್ ರಸ್ತೆಗಳಲ್ಲಿ ಟೋಲ್ ಸಂಗ್ರಹ ನಿಲ್ಲುತ್ತಿಲ್ಲ. ಟೋಲ್ ಸಂಗ್ರಹಕ್ಕೆ ಈ ಸರ್ಕಾರವೇ ಒತ್ತಾಸೆಯಾಗಿ ನಿಂತಿದೆ. ಅಲ್ಲಿ ಸುಲಿಗೆ ಮಾಡುವ ಹಣವನ್ನು ಇವರೆಲ್ಲರೂ ಹಂಚಿಕೊಳ್ಳುತ್ತಿದ್ದಾರೆ. ಬಡವಾನ ಸವಾರರ ರಕ್ತವನ್ನು ಹೀರುವ ಕೆಲಸ ನಡೆಯುತ್ತಿದೆ. ರಾಜ್ಯದ ಯುವಜನರು ಈ ಅಕ್ರಮವನ್ನು ನೋಡುತ್ತಾ ಸುಮ್ಮನೆ ಕುಳಿತುಕೊಳ್ಳಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನಗೆ ತಿಳಿದ ಮಟ್ಟಿಗೆ ರಾಷ್ಟ್ರದ ಇತಿಹಾಸದಲ್ಲಿಯೇ ಬೃಹತ್ತಾದ ಭೂಹಾಗರಣ ನೈಸ್ ಅಕ್ರಮವಾಗಿದೆ. ನ್ಯಾಯಾಲವೂ ಕೂಡ ಇದೊಂದು ಹಗರಣದಂತೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಆಡಳಿತ ನಡೆಸುವ ರಾಜಕಾರಣಿಗಳೇ ಶಾಮೀಳಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ನ್ಯಾಯಾಲಯಗಳಿಗೆ ತಪ್ಪು ಮಾಹಿತಿಗಳನ್ನು ಕೊಟ್ಟು ಸರ್ಕಾರಕ್ಕೆ ಛೀಮಾರಿ ಹಾಕಿಸುವ ದುಷ್ಕೃತ್ಯ ನಡೆದಿದೆ. ಸ್ಕೀಂ ಫಾರ್ ಸ್ಕ್ಯಾಮ್ ಯೋಜನೆ ಇದು. ಇದೆಲ್ಲವನ್ನು ನೋಡಿಕೊಂಡು ನಾವು ಮೌನಕ್ಕೆ ಶರಣಾಗಲು ಸಾಧ್ಯವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ನಾವೆಲ್ಲರೂ ಒಗ್ಗಟ್ಟಾಗಿ ಸೇರಿ ಈ ಅಕ್ರಮದ ವಿರುದ್ಧ ಹೋರಾಟ ನಡೆಸಬೇಕಿದೆ. ಹೋರಾಟ ಎಂದರೆ ನಾವೆಲ್ಲರೂ ಹೋಗಿ ಟೋಲ್ ಪ್ಲಾಝಗಳಾಗೆ ಆ ಗಳಿಗೆ ನುಗ್ಗಬೇಕು ಎಂದಲ್ಲ. ಆ ರೀತಿ ಮಾಡುವುದಿದ್ದರೆ ಯಾವತ್ತೂ ನೈಸ್ ಟೋಲ್ ಕೇಂದ್ರಗಳಿಗೆ ಜನರನ್ನು ನುಗ್ಗಿಸಿಬಿಡುತ್ತಿದ್ದೆ. ಶಾಂತಿಯುತ ಹೋರಾಟ ನಡೆಸುವುದು ನಮ್ಮ ಉದ್ದೇಶ. ನೀವು ಕೂತಿರುವ ಈ ಕಚೇರಿಯ ಹೆಸರು ಜೆಪಿ ಭವನ. ಲೋಕ ನಾಯಕ ಜಯಪ್ರಕಾಶನಾರಾಯಣ ಅವರ ಸ್ಪೂರ್ತಿ ಮತ್ತು ಆದರ್ಶದ ನೆಲೆಗಟ್ಟಿನ ಮೇಲೆ ನಮ್ಮ ಪಕ್ಷ ನಿಂತಿದೆ. ಇಂದಿರಾ ಗಾಂಧಿ ಅವರು ಈ ರಾಷ್ಟ್ರದ ಮೇಲೆ ಹೇರಿದ ತುರ್ತು ಪರಿಸ್ಥಿತಿಯ ವಿರುದ್ಧ ಇಡೀ ರಾಷ್ಟ್ರವನ್ನೇ ಸಂಘಟಿಸಿ ಹೋರಾಟ ನಡೆಸಿದ ಮಹಾನ್ ನಾಯಕರು ಅವರು. ಹೀಗಾಗಿ ನಮ್ಮ ಹೋರಾಟ ಶಾಂತಿ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಕೇಂದ್ರ ಸಚಿವರು ಯುವಕರು ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕಿವಿಮಾತು ಹೇಳಿದರು.

ಟೋಲ್ ಸಂಗ್ರಹ ಮಾಡುತ್ತಿರುವುದೇ ಮಹಾನ್ ಅಕ್ರಮ ಎಂದ ಸಚಿವ ಕುಮಾರಸ್ವಾಮಿ ಅವರು; ಇದರ ಬಗ್ಗೆ ತನಿಖೆ ಮಾಡಿದರೆ ಬಹುದೊಡ್ಡ ಅಕ್ರಮ ಬೈಲಿಗೆ ಬರುತ್ತದೆ. ಸಂಘಟಿತವಾಗಿ ಸರ್ಕಾರವನ್ನು ಶಾಮೀಲು ಮಾಡಿಸಿಕೊಂಡು ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಅಕ್ರಮ ವಯಸ್ಸಿದ್ದರೆ ಎಂತಹ ಕುಖ್ಯಾತ ಹಗರಣ ಸೃಷ್ಟಿಯಾಗುತ್ತದೆ ಎಂಬುದಕ್ಕೆ ನೈಸ್ ಹಗರಣ ಜಲಂತ ಸಾಕ್ಷಿ ಎಂದು ಸಚಿವರು ಒತ್ತಿ ಹೇಳಿದರು.

ಬೆಂಗಳೂರು ಜನರಷ್ಟೇ ಅಲ್ಲ ರಾಜ್ಯದ ಎಲ್ಲ ಭಾಗದ ಜನರು ನೈಸ್ ಅಕ್ರಮದಿಂದ ನೋವು ಅನುಭವಿಸುತ್ತಿದ್ದಾರೆ. ಯುವ ಸಮುದಾಯ ನೈಸಕ್ರಮಗಳ ಬಗ್ಗೆ ಮನೆ ಮನೆಗೂ ಮಾಹಿತಿ ಕೊಡಬೇಕು. ಬೀದಿ ಬೀದಿಗಳಲ್ಲಿ ಹೋರಾಟ ನಡೆಸಬೇಕು. ಯಾರೂ ಕೂಡ ಟೋಲ್ ಕಟ್ಟದಿರಲು ಜಾಗೃತಿ ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.

ಉದ್ಯಾನವನಗಳನ್ನು ನುಂಗಲು ಸರಕಾರ ಸಂಚು:

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜೇಬು ತುಂಬಿಸಲು ಕಂಡಕಂಡ ಭೂಮಿಯನ್ನು ನೋಟಿಫಿಕೇಷನ್ ಮಾಡುತ್ತಿರುವ ಈ ರಾಜ್ಯ ಸರಕಾರ ಈಗ ಅಭಿವೃದ್ಧಿ ನೆಪ ಹೇಳಿ ಬೆಂಗಳೂರಿನ ಉದ್ಯಾನವನಗಳನ್ನು ನುಂಗಲು ಸಂಚು ರೂಪಿಸಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ವಿಶಾಲವಾಗಿರುವ ಉದ್ಯಾನವನಗಳು, ಆಟದ ಮೈದಾನಗಳನ್ನು ಸ್ವಾಹಾ ಮಾಡಲು ಈ ಕೆಟ್ಟ ಸರಕಾರ ಹೊರಟಿದೆ. ಪಾರ್ಕ್ ಗಳ 5% ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಎಂದು ನೆಪ ಮಾಡಿಕೊಂಡು ಕೊಳ್ಳೆ ಹೊಡೆಯಲು ಸಂಚು ಹೂಡಿದೆ.

ವಿಧಾನಸೌಧದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಜೆಡಿಎಸ್ ಮತ್ತು ಬಿಜೆಪಿ ಹೋರಾಟ ಮಾಡುತ್ತಿದ್ದರೆ ಈ ಸರಕಾರ ಅದಕ್ಕೆ ಬೇಕಾದ ಬಿಲ್ ಪಾಸು ಮಾಡಿಕೊಂಡಿದೆ. ಈ ಮೂಲಕ ಬೆಂಗಳೂರಿನ ಲಂಗ್ ಸ್ಪೇಸ್ ಅನ್ನು ನಾಶ ಮಾಡಲು ಹೊರಟಿದೆ. ಅದರ ಜತೆಗೆ ಮನೆಯ ಮುಂದೆ ಕಾರು ನಿಲ್ಲಿಸಿದರೂ ವರ್ಷಕ್ಕೆ ₹25,000 ಕಟ್ಟಬೇಕಂತೆ! ದಿವಾಳಿ ಆಗಿರುವ ಈ ಸರಕಾರ ಜನರ ಜೇಬಿಗೆ ಕೈಹಾಕಿದೆ ಎಂದು ಎಂದು ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬೇನಾಮಿ ಆಸ್ತಿ ಇದ್ದರೆ ತೋರಿಸಿ, ರಾಜಕೀಯ ನಿವೃತ್ತಿಯಾಗುತ್ತೇನೆ:

ಕುಮಾರಸ್ವಾಮಿ ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆ ಎಂದು ಯಾರೋ ಮಾತನಾಡಿರುವುದರನ್ನು ಗಮನಿಸಿದ್ದೇನೆ. ನನ್ನ ಬೇನಾಮಿ ಆಸ್ತಿ ಯಾವುದಾದರೂ ಇದ್ದರೆ ತೋರಿಸಲಿ. ಈ ಸರಕಾರಕ್ಕೆ ನಾನು ನೇರ ಸವಾಲು ಹಾಕುತ್ತೇನೆ. ಅಂತಹ ಯಾವುದಾದರೂ ಅಸ್ತಿ ಇದ್ದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.

ಕರ್ನಾಟಕದಲ್ಲಿ SIR ಪೂರ್ಣ: 5.54 ಕೋಟಿ ಮತದಾರರಿರುವ ಕರಡು ಪಟ್ಟಿ ರಿಲೀಸ್, 1.07 ಕೋಟಿ ಮತದಾರರ ಹೆಸರು ಡಿಲೀಟ್

0

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, 1,07,96,339 ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಗೆ 15,17,042 ಮಂದಿ ಗೈರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

65,45,679 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದು, 16,39,864 ಮಂದಿ ಮೃತಪಟ್ಟಿದ್ದಾರೆ. 7,09,870 ಮತದಾರರು ಒಂದಕ್ಕಿಂತ ಹೆಚ್ಚು ಕಡೆ ಮತದಾನ ಮಾಡಿರುವುದು ಪತ್ತೆಯಾಗಿದೆ. ಇನ್ನು 3,83,884 ಮತದಾರರು ಇತರ ವರ್ಗಕ್ಕೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಒಟ್ಟು 43,81,335 ಮತದಾರರಿಗೆ ಎಸ್‌ಐಆರ್‌ ಸಂಬಂಧ ನೋಟಿಸ್‌ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ನೋಟಿಸ್‌ ನೀಡುವ ವಿಧಾನ ಸೇರಿದಂತೆ ಪರಿಶೀಲನಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

ಮತದಾರರ ವರ್ಗೀಕರಣ

  • ಸಾಮಾನ್ಯ ಮತದಾರರು: 4,46,35,975
  • 18ರಿಂದ 19 ವರ್ಷದ ಯುವ ಮತದಾರರು: 3,70,341
  • 20ರಿಂದ 29 ವರ್ಷದ ಮತದಾರರು: 83,87,880
  • 85 ವರ್ಷ ಮೇಲ್ಪಟ್ಟ ಮತದಾರರು: 3,92,302
  • ಎನ್‌ಆರ್‌ಐ ಮತದಾರರು: 951
  • ಸೇವೆಯಲ್ಲಿರುವ ಮತದಾರರು: 44,176
  • ವಿಶೇಷ ಚೇತನ ಮತದಾರರು: 5,55,691

43 ಲಕ್ಷ ಮತದಾರರಿಗೆ ನೋಟಿಸ್‌

ಕರಡು ಮತದಾರರ ಪಟ್ಟಿಯಲ್ಲಿರುವ 43 ಲಕ್ಷಕ್ಕೂ ಅಧಿಕ ಮತದಾರರಿಗೆ ಹೆಚ್ಚುವರಿ ದಾಖಲೆಗಳ ಅಗತ್ಯವಿದ್ದಲ್ಲಿ ಮಾತ್ರ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ನಲ್ಲಿ ಕಾರಣವನ್ನೂ ಸ್ಪಷ್ಟವಾಗಿ ಉಲ್ಲೇಖಿಸಲಾಗುತ್ತದೆ.

ನೋಟಿಸ್‌ಗಳನ್ನು ಮೊಬೈಲ್‌ ಸಂದೇಶದ ಮೂಲಕ ಕಳುಹಿಸುವುದಿಲ್ಲ. ಮತದಾರರ ಮನೆಗೆ ತೆರಳಿ ಖುದ್ದಾಗಿ ನೋಟಿಸ್‌ ನೀಡಲಾಗುತ್ತದೆ. ನೋಟಿಸ್‌ ಸ್ವೀಕರಿಸಿದ ಬಳಿಕ ಏಳು ದಿನಗಳ ಕಾಲ ಪ್ರತಿಕ್ರಿಯೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.

ಈ ಪ್ರಕ್ರಿಯೆಗಾಗಿ 3 ಸಾವಿರಕ್ಕೂ ಅಧಿಕ ARO ಹಾಗೂ EROಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಕ್ಟೋಬರ್‌ 22ರೊಳಗೆ ನೋಟಿಸ್‌ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಒಬ್ಬ AROಗೆ ಸರಾಸರಿ 1,000 ನೋಟಿಸ್‌ಗಳ ಜವಾಬ್ದಾರಿ ಇರಲಿದೆ.

ಮತದಾರರ ಹೆಸರು, ಹುಟ್ಟಿದ ದಿನಾಂಕ ಅಥವಾ ವಿಳಾಸದಲ್ಲಿ ತಿದ್ದುಪಡಿ ಮಾಡಬೇಕಿದ್ದರೆ ಫಾರ್ಮ್‌-8 ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನೋಟಿಸ್‌ಗೆ ಸಂಬಂಧಿಸಿದ ಅಕ್ಷೇಪಣೆ ಹಾಗೂ ದಾಖಲೆಗಳನ್ನು ನಿಗದಿತ ಸ್ಥಳದಲ್ಲಿ ಸಲ್ಲಿಸಲು ಅವಕಾಶವಿರುತ್ತದೆ.

ನಗರ ಪ್ರದೇಶಗಳಲ್ಲಿ ‘ನೋ ಮ್ಯಾಪಿಂಗ್’ ಸಮಸ್ಯೆ

ನಗರ ಪ್ರದೇಶಗಳಲ್ಲಿ ‘ನೋ ಮ್ಯಾಪಿಂಗ್’ ಸಮಸ್ಯೆ ಹೆಚ್ಚಾಗಿ ಕಂಡುಬಂದಿದೆ ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ಸೆಪ್ಟೆಂಬರ್‌ 23ರೊಳಗೆ ಫಾರ್ಮ್‌-6 ಸಲ್ಲಿಸಿದರೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್‌ 27ರಂದು ‘ಖೇಲೋ ಇಂಡಿಯಾ ಸಂವಾದ’: ಯುವ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

0

ಬೆಂಗಳೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಆಗಸ್ಟ್‌ 27ರಂದು ದೇಶಾದ್ಯಂತ ಬೃಹತ್‌ ಮಟ್ಟದಲ್ಲಿ ‘ಖೇಲೋ ಇಂಡಿಯಾ ಸಂವಾದ – ಖೇಲ್ ಕೀ ಬಾತ್, ಪ್ರಧಾನ ಮಂತ್ರಿ ಮೋದಿ ಕೆ ಸಾಥ್’ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ದೇಶದ 1,500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ವರ್ಚುವಲ್‌ ಸಂವಾದದಲ್ಲಿ ದೇಶದ ನೂರಾರು ಯುವಕರು ಹಾಗೂ ಕ್ರೀಡಾಪಟುಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ ಯಲಹಂಕ ನ್ಯೂಟೌನ್‌ನ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ‘ಮೈ ಭಾರತ್’ ಪೋರ್ಟಲ್‌ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೈ ಭಾರತ್‌ ತಿಳಿಸಿದೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮೂಲಕ ಯುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕ್ರೀಡೆ, ಯುವ ನಾಯಕತ್ವ ಹಾಗೂ ವಿಕಸಿತ ಭಾರತ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಪ್ರಧಾನಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಬಳಿಕ ಆಯಾ ಸ್ಥಳಗಳಲ್ಲಿ ಭೌತಿಕ ಸಂವಾದ ಕಾರ್ಯಕ್ರಮಗಳು ನಡೆಯಲಿವೆ.

ಐಐಟಿ, ಐಐಎಂ, ಎನ್‌ಐಟಿ, ಏಮ್ಸ್‌ ಸೇರಿದಂತೆ ದೇಶದ ಪ್ರಮುಖ ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿವೆ.

2036ರ ಒಲಿಂಪಿಕ್ಸ್‌ ಮೇಲೆ ಗಮನ

ದೇಶದ ಕ್ರೀಡಾ ಭವಿಷ್ಯ ಹಾಗೂ ಮುನ್ನೆಲೆಗೆ ಬರುತ್ತಿರುವ ಯುವ ಕ್ರೀಡಾಪಟುಗಳು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ನೇರವಾಗಿ ಹಂಚಿಕೊಳ್ಳಲು ಈ ಸಂವಾದ ವೇದಿಕೆಯಾಗಲಿದೆ.

ದೇಶದ ಕ್ರೀಡಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾ ಮೂಲಸೌಕರ್ಯ ಹಾಗೂ ತರಬೇತಿ ಸೌಲಭ್ಯಗಳನ್ನು ವಿಸ್ತರಿಸುವುದು, 2036ರ ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಪ್ರತಿಭೆಗಳನ್ನು ಗುರುತಿಸುವುದು ಮತ್ತು ಯುವ ನಾಯಕತ್ವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ.

ಇದೇ ವೇಳೆ ಕ್ರೀಡಾಸಕ್ತ ಯುವಕರಿಗೆ ಭಾರತದ ದಿಗ್ಗಜ ಕ್ರೀಡಾಪಟುಗಳೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶವೂ ಸಿಗಲಿದೆ. ದೀಪಾ ಕರ್ಮಾಕರ್‌, ಸೈನಾ ನೆಹ್ವಾಲ್‌, ಗಗನ್ ನಾರಂಗ್‌, ಪಿ.ಆರ್‌. ಶ್ರೀಜೇಶ್‌, ಮೇರಿ ಕೋಮ್‌, ಬೈಚುಂಗ್ ಭುಟಿಯಾ, ಪುಲ್ಲೇಲ ಗೋಪಿಚಂದ್‌, ಅಂಜು ಬಾಬಿ ಜಾರ್ಜ್‌, ಕರ್ಣಂ ಮಲ್ಲೇಶ್ವರಿ, ಮೀರಾಬಾಯಿ ಚಾನು ಹಾಗೂ ಪಿ.ಟಿ. ಉಷಾ ಸೇರಿದಂತೆ ಹಲವು ಕ್ರೀಡಾ ತಾರೆಯರು ತಮ್ಮ ಕ್ರೀಡಾ ಪಯಣ, ಸವಾಲುಗಳು ಮತ್ತು ಅನುಭವಗಳನ್ನು ಯುವಕರೊಂದಿಗೆ ಹಂಚಿಕೊಳ್ಳಲಿದ್ದಾರೆ.

ಇವರೊಂದಿಗೆ ಸಂಸದರು, ಶಾಸಕರು, ಕೇಂದ್ರ ಸಚಿವರು ಹಾಗೂ ವಿವಿಧ ರಾಜ್ಯಗಳ ಕ್ರೀಡಾ ಸಚಿವರು ಕೂಡ ಸಂವಾದದಲ್ಲಿ ಭಾಗವಹಿಸಿ ಯುವಕರ ಸಲಹೆಗಳನ್ನು ಸ್ವೀಕರಿಸಲಿದ್ದಾರೆ.

ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ಮದುವೆಗೆ ಕುಮ್ಮಕ್ಕು ನೀಡಿದರೆ ಕೇಸ್: ಹೈಕೋರ್ಟ್

0

ಬೆಂಗಳೂರು: ಮೊದಲ ಪತ್ನಿಯಿಂದ ವಿಚ್ಛೇದನ ಪಡೆಯದೇ, ಆಕೆ ಜೀವಂತವಾಗಿರುವ ಸಂದರ್ಭದಲ್ಲಿ ಮತ್ತೊಂದು ಮದುವೆಯಾಗುವ ಪ್ರಕರಣಗಳಲ್ಲಿ, ಎರಡನೇ ಮದುವೆಗೆ ಕುಮ್ಮಕ್ಕು ನೀಡುವ, ಪ್ರಚೋದಿಸುವ ಅಥವಾ ನೇರವಾಗಿ ಸಹಾಯ ಮಾಡುವ ಸಂಬಂಧಿಕರು ಹಾಗೂ ಇತರ ವ್ಯಕ್ತಿಗಳ ವಿರುದ್ಧವೂ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 109ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಯಾವುದೇ ಅಡ್ಡಿಯಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಎರಡನೇ ಮದುವೆಯಾಗಿರುವ ಆರೋಪ ಎದುರಿಸುತ್ತಿರುವ ಸುನೀಲ್ ಕುಮಾರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ಕಲಬುರಗಿ ಪೀಠ ಈ ಮಹತ್ವದ ಆದೇಶ ನೀಡಿದೆ.

ಐಪಿಸಿ ಸೆಕ್ಷನ್ 494ರ ಅಡಿಯಲ್ಲಿ ಮೊದಲ ಪತ್ನಿ ಜೀವಂತವಾಗಿರುವಾಗ ಎರಡನೇ ವಿವಾಹವಾಗುವ ವ್ಯಕ್ತಿಯ ವಿರುದ್ಧ ದ್ವಿಪತ್ನಿತ್ವದ ಆರೋಪ ಅನ್ವಯಿಸುತ್ತದೆ. ಆದರೆ, ಈ ಕೃತ್ಯಕ್ಕೆ ಕುಮ್ಮಕ್ಕು ನೀಡುವ ಅಥವಾ ಸಹಕರಿಸುವ ಇತರರಿಗೆ ಶಿಕ್ಷೆಯಿಂದ ಯಾವುದೇ ವಿಶೇಷ ವಿನಾಯಿತಿ ನೀಡಲಾಗಿಲ್ಲ ಎಂದು ಪೀಠ ತಿಳಿಸಿದೆ.

ಮೊದಲ ಮದುವೆ ಕಾನೂನುಬದ್ಧವಾಗಿ ಜಾರಿಯಲ್ಲಿದೆ ಎಂಬ ವಿಚಾರ ತಿಳಿದಿದ್ದರೂ, ಎರಡನೇ ಮದುವೆಗೆ ಅಗತ್ಯ ವ್ಯವಸ್ಥೆ ಮಾಡುವುದು, ಪ್ರಚೋದನೆ ನೀಡುವುದು ಅಥವಾ ವಿವಾಹ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸಿ ಸಹಾಯ ಮಾಡುವುದು ನಡೆದಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧವೂ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಚೋದನೆ ಆರೋಪ ಅನ್ವಯಿಸುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಸಂಬಂಧ ಸುಪ್ರೀಂಕೋರ್ಟ್ ಮತ್ತು ವಿವಿಧ ಹೈಕೋರ್ಟ್‌ಗಳ ಹಿಂದಿನ ತೀರ್ಪುಗಳನ್ನು ಪರಿಗಣಿಸಿದ ನ್ಯಾಯಪೀಠ, ಎರಡನೇ ಮದುವೆಗೆ ಸಹಕರಿಸಿದವರ ವಿರುದ್ಧ ದಾಖಲಿಸಿರುವ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಚೋದನೆ ಆರೋಪವನ್ನು ಕೇವಲ ಈ ಕಾರಣಕ್ಕಾಗಿ ಕೈಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಅರ್ಜಿದಾರ ಸುನೀಲ್ ಕುಮಾರ್ ಅವರು ಮೊದಲ ಪತ್ನಿ ಜೀವಂತವಾಗಿದ್ದರೂ ಮತ್ತೊಬ್ಬ ಮಹಿಳೆಯನ್ನು ಎರಡನೇ ವಿವಾಹವಾಗಿದ್ದರು ಎಂಬ ಆರೋಪ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೊದಲ ಪತ್ನಿ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿ, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಐಪಿಸಿ ಸೆಕ್ಷನ್ 494, ಸೆಕ್ಷನ್ 109 ಹಾಗೂ ಸೆಕ್ಷನ್ 149ರ ಅಡಿಯಲ್ಲಿ ಕಾಗ್ನಿಜೆನ್ಸ್ ಪಡೆದುಕೊಂಡಿತ್ತು. ಬಳಿಕ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸಿಂದಗಿ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿತ್ತು.

ಈ ಪ್ರಕರಣದಲ್ಲಿ ಎರಡನೇ ಮದುವೆಯಾಗಿದ್ದ ಪತಿ, ಎರಡನೇ ಪತ್ನಿ ಹಾಗೂ ವಿವಾಹ ನೆರವೇರಿಸಿದ ಅರ್ಚಕರು ಸೇರಿದಂತೆ ಇತರರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠದ ಮುಂದೆ, ಐಪಿಸಿ ಸೆಕ್ಷನ್ 494ರ ಅಡಿಯಲ್ಲಿ ನಡೆಯುವ ಅಪರಾಧಕ್ಕೆ ಸೆಕ್ಷನ್ 109ರ ಪ್ರಕಾರ ಇತರ ವ್ಯಕ್ತಿಗಳ ವಿರುದ್ಧವೂ ಕುಮ್ಮಕ್ಕು ನೀಡಿದ ಆರೋಪ ಅನ್ವಯಿಸಬಹುದೇ ಎಂಬ ಕಾನೂನು ಪ್ರಶ್ನೆ ಎದುರಾಗಿತ್ತು.

ಈ ಪ್ರಮುಖ ಕಾನೂನು ಪ್ರಶ್ನೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಸ್ತೃತ ಪೀಠದ ಪರಿಗಣನೆಗೆ ಕಳುಹಿಸುವಂತೆ ಏಕಸದಸ್ಯ ಪೀಠವು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ರವಾನಿಸಿತ್ತು. ಬಳಿಕ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣವನ್ನು ದ್ವಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ದ್ವಿಸದಸ್ಯ ಪೀಠ ಇದೀಗ ಎರಡನೇ ಮದುವೆಗೆ ಸಹಕರಿಸಿದವರ ವಿರುದ್ಧವೂ ಐಪಿಸಿ ಸೆಕ್ಷನ್ 109ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

ಹನೂರು ಅರಣ್ಯ ಶೂಟೌಟ್ ಪ್ರಕರಣ: ಸರ್ಕಾರ ಸತ್ಯ ಮರೆಮಾಚುತ್ತಿದೆ – ಬಿ.ವೈ. ವಿಜಯೇಂದ್ರ ಆರೋಪ

0

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯಲ್ಲಿ ನಡೆದಿರುವ ಅರಣ್ಯ ಶೂಟೌಟ್ ಪ್ರಕರಣದ ಸತ್ಯಾಂಶವನ್ನು ರಾಜ್ಯ ಸರ್ಕಾರ ಮರೆಮಾಚುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಪ್ರಕರಣದ ಸತ್ಯಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಬಿಜೆಪಿ ವತಿಯಿಂದ ಈಗಾಗಲೇ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸಮಿತಿ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ಪ್ರಶ್ನೆಗಳು ಮತ್ತು ಅನುಮಾನಗಳು ಮೂಡಿವೆ ಎಂದು ಹೇಳಿದ್ದಾರೆ.

ಹನೂರು ಪ್ರಕರಣದಲ್ಲಿ ಮೃತದೇಹಗಳನ್ನು ಆತುರಾತುರವಾಗಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಇದುವರೆಗೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ. ವರದಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಚ್ಚಿಡುವ ಅಗತ್ಯವೇನು? ವರದಿಯಲ್ಲಿ ಏನಿದೆ ಎಂಬುದನ್ನು ಜನರಿಗೆ ತಿಳಿಸಬೇಕಲ್ಲವೇ? ವರದಿಯನ್ನು ಬಿಡುಗಡೆ ಮಾಡದಿರುವುದೇ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಘಟನೆಯ ಕೆಲವು ಫೋಟೋಗಳನ್ನು ಪ್ರದರ್ಶಿಸಿದ ವಿಜಯೇಂದ್ರ, ಮೃತ ವ್ಯಕ್ತಿಯ ಭುಜದ ಭಾಗಕ್ಕೆ ಗನ್‌ ಇಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವಂತೆ ಫೋಟೋಗಳಲ್ಲಿ ಕಾಣಿಸುತ್ತಿದೆ ಎಂದು ಆರೋಪಿಸಿದರು.

ತಜ್ಞರ ಅಭಿಪ್ರಾಯದ ಪ್ರಕಾರ ಇದು ದೂರದಿಂದ ಅಥವಾ ಲಾಂಗ್‌ ರೇಂಜ್‌ನಿಂದ ಗುಂಡು ಹಾರಿಸಿದ ಪ್ರಕರಣದಂತೆ ಕಾಣುತ್ತಿಲ್ಲ. ಸಮೀಪದಿಂದ ಗುಂಡು ಹಾರಿಸಿರುವ ಸಾಧ್ಯತೆಯಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕೂಡ ಈ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಹಾಗಿದ್ದರೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಈ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ ಇದು ಸಾಮಾನ್ಯ ಎನ್‌ಕೌಂಟರ್‌ ಪ್ರಕರಣವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದ್ದಾರೆ.

ಐಕಾನಿಕ್ ಊರ್ವಶಿ ಚಿತ್ರಮಂದಿರಕ್ಕೆ ತೆರೆ: ಸುಪ್ರೀಂ ಆದೇಶದ ಬೆನ್ನಲ್ಲೇ ನೆಲಸಮವಾದ ಡಾ. ರಾಜ್ ಉದ್ಘಾಟಿಸಿದ್ದ ಚಿತ್ರಮಂದಿರ!

ಬೆಂಗಳೂರು: ರಾಜಧಾನಿಯ ಲಾಲ್‌ಬಾಗ್ ಮುಖ್ಯರಸ್ತೆಯಲ್ಲಿದ್ದ ಪ್ರೇಕ್ಷಕರ ನೆಚ್ಚಿನ ಹಾಗೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾಗಿದ್ದ ‘ಊರ್ವಶಿ’ ಥಿಯೇಟರ್‌ ಇನ್ನು ನೆನಪು ಮಾತ್ರ. ಸುಮಾರು ಎಂಟು ವರ್ಷಗಳಿಂದ ನಡೆಯುತ್ತಿದ್ದ ಗುತ್ತಿಗೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಬೆನ್ನಲ್ಲೇ ಭೂಮಾಲೀಕರು ಪೊಲೀಸರ ಸಮ್ಮುಖದಲ್ಲಿ ಸ್ಥಳವನ್ನು ವಾಪಸ್ ಪಡೆದಿದ್ದಾರೆ. ಇದೀಗ ಐತಿಹಾಸಿಕ ಚಿತ್ರಮಂದಿರದ ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯ ಆರಂಭವಾಗಿದೆ.

1970ರಲ್ಲಿ ವರನಟ ಡಾ. ರಾಜ್‌ಕುಮಾರ್ ಅವರ ಹಸ್ತದಿಂದ ಉದ್ಘಾಟನೆಗೊಂಡಿದ್ದ ಊರ್ವಶಿ ಚಿತ್ರಮಂದಿರಕ್ಕೆ ಸುಮಾರು 55 ವರ್ಷಗಳ ಸುದೀರ್ಘ ಇತಿಹಾಸವಿದೆ. 1,100 ಆಸನಗಳ ಸಾಮರ್ಥ್ಯ ಹೊಂದಿದ್ದ ಈ ಚಿತ್ರಮಂದಿರದಲ್ಲಿ ಐದು ಭಾಷೆಗಳ 5,000ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಂಡಿವೆ.

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಎಕೆ 47’ ಸಿನಿಮಾ ಇದೇ ಚಿತ್ರಮಂದಿರದಲ್ಲಿ 100 ದಿನಗಳ ಯಶಸ್ವಿ ಪ್ರದರ್ಶನ ಕಂಡು ದಾಖಲೆ ನಿರ್ಮಿಸಿತ್ತು. ವಿಶೇಷವಾಗಿ, ಭಾರತದ ಕೇವಲ ಎರಡು ಏಕಪರದೆ ಚಿತ್ರಮಂದಿರಗಳಲ್ಲಿ ಲಭ್ಯವಿದ್ದ ಅತ್ಯಾಧುನಿಕ ಸೌಂಡ್‌ ಟೆಕ್ನಾಲಜಿಯನ್ನೂ ಊರ್ವಶಿ ಹೊಂದಿತ್ತು.

ಚಿತ್ರಮಂದಿರವನ್ನು ಗುತ್ತಿಗೆಗೆ ಪಡೆದಿದ್ದ ಬಸಟ್ಟಿ ಶೆಟ್ಟಿ ಅವರ ಲೀಸ್ ಅವಧಿ 2018ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿತ್ತು. ಬಳಿಕ ಗುತ್ತಿಗೆ ಮುಂದುವರಿದಿರುವ ಬಗ್ಗೆ ವಿವಾದ ಉಂಟಾಗಿತ್ತು. ಸುಮಾರು ಎಂಟು ವರ್ಷಗಳಿಂದ ನಡೆದ ಕಾನೂನು ಹೋರಾಟದ ಬಳಿಕ ಇದೀಗ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭೂಮಾಲೀಕರು ಸ್ಥಳವನ್ನು ವಾಪಸ್ ಪಡೆದಿದ್ದಾರೆ.

ಇದೀಗ ಊರ್ವಶಿ ಚಿತ್ರಮಂದಿರದ ಕಟ್ಟಡ ನೆಲಸಮವಾಗುತ್ತಿರುವ ದೃಶ್ಯ ಕಂಡು ಸಿನಿಪ್ರಿಯರು ಭಾವುಕರಾಗಿದ್ದಾರೆ. ಹಲವು ತಲೆಮಾರುಗಳ ಸಿನಿಮಾಸ್ಮೃತಿಗಳನ್ನು ಹೊತ್ತಿದ್ದ ಚಿತ್ರಮಂದಿರ ಕಣ್ಮರೆಯಾಗುತ್ತಿರುವುದು ಕನ್ನಡ ಸಿನಿರಂಗಕ್ಕೂ ದೊಡ್ಡ ನಷ್ಟ ಎಂದೇ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಊರ್ವಶಿ ಚಿತ್ರಮಂದಿರಕ್ಕೆ ಈ ಅಂತ್ಯ ಎದುರಾಗಿದೆ. ಚಿತ್ರಮಂದಿರ ಉಳಿದಿದ್ದರೆ ‘ಟಾಕ್ಸಿಕ್’ ಸಿನಿಮಾವನ್ನು ಇಲ್ಲೇ ಅದ್ದೂರಿಯಾಗಿ ಬಿಡುಗಡೆ ಮಾಡುವ ಸಾಧ್ಯತೆ ಇತ್ತು ಎಂಬ ಮಾತುಗಳೂ ಕೇಳಿಬರುತ್ತಿವೆ.

ಒಟ್ಟಾರೆ, ಬೆಂಗಳೂರಿನ ಸಿನಿಮಾ ಸಂಸ್ಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಊರ್ವಶಿ ಚಿತ್ರಮಂದಿರದ 55 ವರ್ಷಗಳ ಸುದೀರ್ಘ ಪಯಣಕ್ಕೆ ಇದೀಗ ತೆರೆ ಬಿದ್ದಂತಾಗಿದೆ.

ಯಶ್‌ ಭೇಟಿಮಾಡಿದ ನಟ ಅನುಪಮ್ ಖೇರ್: ‘ಟಾಕ್ಸಿಕ್’ ಚಿತ್ರಕ್ಕೆ ಶುಭಹಾರೈಕೆ

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ನಡೆದ ಭೇಟಿಯ ಬಳಿಕ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ‘ಟಾಕ್ಸಿಕ್’ ಸಿನಿಮಾಕ್ಕೆ ಶುಭಕೋರಿರುವ ಅವರು, ‘ಕೆಜಿಎಫ್’ ಮೂಲಕ ರಾಕಿ ಭಾಯ್ ಪಾತ್ರವನ್ನು ಯಶ್ ಕಟ್ಟಿಕೊಟ್ಟ ರೀತಿಯಿಂದ ಹಿಡಿದು ಅವರ ವೈಯಕ್ತಿಕ ವ್ಯಕ್ತಿತ್ವದವರೆಗೆ ಹಲವು ವಿಚಾರಗಳನ್ನು ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಯಶ್ ಅವರನ್ನು ಭೇಟಿಯಾಗಿರುವುದು ಸಂತೋಷ ತಂದಿದೆ ಎಂದು ಹೇಳಿರುವ ಅನುಪಮ್ ಖೇರ್, ‘ಕೆಜಿಎಫ್’ ಸರಣಿಯ ಮೂಲಕ ರಾಕಿ ಭಾಯ್ ಪಾತ್ರಕ್ಕೆ ಅವರು ನೀಡಿದ ಜೀವಂತಿಕೆ ಹಾಗೂ ಅವರ ಸಂಪೂರ್ಣ ಸಿನಿ ಪಯಣವನ್ನು ಮೆಚ್ಚಿಕೊಂಡಿದ್ದಾರೆ.

ವಯಸ್ಸು ಮತ್ತು ತಲೆಮಾರು ವಿಭಿನ್ನವಾಗಿದ್ದರೂ ಕನಸುಗಳ ಭಾಷೆ ಒಂದೇ ಎಂಬ ಸಂದೇಶವನ್ನು ಅನುಪಮ್ ಖೇರ್ ನೀಡಿದ್ದಾರೆ. ಯಶ್ ಅವರ ವೃತ್ತಿಜೀವನದ ಬೆಳವಣಿಗೆಯ ಹಿಂದೆ ಇರುವ ಉತ್ಸಾಹ ಮತ್ತು ಪರಿಶ್ರಮವನ್ನು ಅವರು ವಿಶೇಷವಾಗಿ ಗುರುತಿಸಿದ್ದಾರೆ.

ಯಶ್ ತೆರೆಮೇಲೆ ಪವರ್‌ಫುಲ್ ಆಗಿ ಕಾಣಿಸಿಕೊಂಡರೂ ನಿಜ ಜೀವನದಲ್ಲಿ ಅತ್ಯಂತ ಸರಳ ಹಾಗೂ ವಿನಮ್ರ ವ್ಯಕ್ತಿ ಎಂದು ಅನುಪಮ್ ಖೇರ್ ಹೇಳಿದ್ದಾರೆ. ಯಶ್ ಅವರಂತಹ ಪ್ರತಿಭಾವಂತ ಕಲಾವಿದರ ಉತ್ಸಾಹ ಮತ್ತು ಕೆಲಸದ ಮೇಲಿನ ಬದ್ಧತೆ ತಮಗೂ ಹೊಸ ಪ್ರೇರಣೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಸಿನಿಮಾ ಮಾತ್ರವಲ್ಲದೆ ಇಬ್ಬರೂ ತಮ್ಮ ವೈಯಕ್ತಿಕ ಬದುಕು, ಹೆತ್ತವರು, ಕುಟುಂಬ ಹಾಗೂ ಮುಂದಿನ ಕನಸುಗಳ ಬಗ್ಗೆಯೂ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಈ ಮಾತುಕತೆಯ ಬಳಿಕ ‘ಟಾಕ್ಸಿಕ್’ ಸಿನಿಮಾ ಯಶಸ್ವಿಯಾಗಲಿ, ಪ್ರೇಕ್ಷಕರಿಗೆ ವಿಶೇಷ ಅನುಭವ ನೀಡಲಿ ಹಾಗೂ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಲಿ ಎಂದು ಅನುಪಮ್ ಖೇರ್ ಶುಭ ಹಾರೈಸಿದ್ದಾರೆ.

ಗ್ಯಾನೇಂದ್ರ ಕುಮಾರ್ ‘ಓಡಿ ಹೋಗಿಲ್ಲ, ರಜೆ ಪತ್ರ ನೀಡಿದ್ದಾರೆ’: ಪ್ರಿಯಾಂಕ್ ಖರ್ಗೆ

0

ಬೆಂಗಳೂರು: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂಬ ಚರ್ಚೆಗೆ ತೆರೆ ಎಳೆಯಲು ಮುಂದಾದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿ ರಜೆಗಾಗಿ ಲಿಖಿತ ಅರ್ಜಿ ಸಲ್ಲಿಸಿರುವುದನ್ನು ಸರ್ಕಾರ ಪರಿಶೀಲಿಸಿ ದೃಢಪಡಿಸಿದೆ ಎಂದು ಹೇಳಿದ್ದಾರೆ. ತಂದೆಯ ಅನಾರೋಗ್ಯದ ಕಾರಣ ತುರ್ತಾಗಿ ಮನೆಗೆ ತೆರಳಿರುವುದಾಗಿ ಅರ್ಜಿಯಲ್ಲಿ ತಿಳಿಸಿದ್ದು, ಅವರು ಎರಡು ದಿನಗಳಲ್ಲಿ ವಾಪಸ್ ಬರುವುದಾಗಿ ಖಾಸಗಿ ಸಂಖ್ಯೆಯಿಂದ ಸಂಪರ್ಕಿಸಿದಾಗ ತಿಳಿಸಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.

ಗ್ಯಾನೇಂದ್ರ ಕುಮಾರ್ ಅವರ ಅಧಿಕೃತ ಮೊಬೈಲ್ ಸಂಖ್ಯೆ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಮಿಸ್ಸಿಂಗ್ ಹಾಗೂ ಓಡಿ ಹೋಗಿರುವ ಬಗ್ಗೆ ವರದಿಗಳು ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ನಡೆಸಿದೆ. ಅವರು ತಮ್ಮ ಇಲಾಖೆ ಮುಖ್ಯಸ್ಥರಿಗೆ ರಜೆ ಪತ್ರ ಸಲ್ಲಿಸಿರುವುದರ ಜೊತೆಗೆ ಸರ್ಕಾರಕ್ಕೂ ಮಾಹಿತಿ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಶನಿವಾರ ಈ ಬೆಳವಣಿಗೆ ನಡೆದಿದ್ದು, ಗ್ಯಾನೇಂದ್ರ ಕುಮಾರ್ ನಾಳೆ ಅಥವಾ ನಾಡಿದ್ದು ಕರ್ತವ್ಯಕ್ಕೆ ಮರಳುತ್ತಾರೆಯೇ ಎಂಬುದರ ಬಗ್ಗೆ ಸದ್ಯಕ್ಕೆ ಖಚಿತ ಮಾಹಿತಿ ಇಲ್ಲ ಎಂದು ಸಚಿವರು ಹೇಳಿದರು.

ಅಧಿಕಾರಿ ಕರ್ತವ್ಯದಿಂದ ದೂರ ಉಳಿದಿರುವುದು ಅನುಮಾನಕ್ಕೆ ಕಾರಣವಾಗಿರುವುದನ್ನು ಸರ್ಕಾರ ಒಪ್ಪಿಕೊಂಡಿದೆ. ಸಾಂದರ್ಭಿಕ ಬೆಳವಣಿಗೆಗಳನ್ನು ಗಮನಿಸಿದರೆ ಅನುಮಾನ ಮೂಡುವುದು ಸಹಜ. ಆದರೂ ರಜೆ ಪತ್ರ, ಇಲಾಖೆ ಮುಖ್ಯಸ್ಥರಿಗೆ ನೀಡಿರುವ ಮಾಹಿತಿ ಹಾಗೂ ಸರ್ಕಾರಕ್ಕೆ ಮರಳುವ ಭರವಸೆ ನೀಡಿರುವುದನ್ನೂ ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇದರ ನಡುವೆಯೇ KPSC ಪ್ರಕರಣದ ತನಿಖೆಯ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದೆ. ಯಾವುದೇ ವ್ಯಕ್ತಿ, ಯಾವುದೇ ಹುದ್ದೆಯಲ್ಲಿದ್ದರೂ ಕಾನೂನು ಕ್ರಮದಿಂದ ವಿನಾಯಿತಿ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

KPSC ಅಧ್ಯಕ್ಷರು, ಕಂಟ್ರೋಲರ್ ಅಥವಾ ಯಾವುದೇ ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾಗಿದ್ದರೆ ತನಿಖೆ ಎದುರಿಸಲೇಬೇಕು. ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಅಧಿಕಾರಿಗಳಿಗೆ ಸರ್ಕಾರ ಅಥವಾ ಕಾನೂನು ರಕ್ಷಣೆ ನೀಡುವುದಿಲ್ಲ ಎಂದು ಸಚಿವರು ಎಚ್ಚರಿಸಿದರು.

ED ದಾಳಿ ಹಾಗೂ ತನಿಖೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ತನಿಖಾ ಸಂಸ್ಥೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು. ED ಕೂಡ ಸಹಕಾರ ಕೋರಿ ಪತ್ರ ಬರೆದಿದ್ದು, ಅಗತ್ಯ ಮಾಹಿತಿಯನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಅಧಿಕಾರಿಗಳು ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಯಾರೇ ತಪ್ಪು ಮಾಡಿದ್ದರೂ ಕಾನೂನು ತನ್ನ ಕೆಲಸ ಮಾಡಲಿದೆ. KPSC ವಿಚಾರದಲ್ಲಿ ಯಾವುದೇ ರಾಜಿ ಅಥವಾ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದರು.

ಗ್ಯಾನೇಂದ್ರ ಕುಮಾರ್ ಪ್ರಕರಣವನ್ನು ಸರ್ಕಾರ ಗಮನಿಸುತ್ತಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ H1N1 ಏರಿಕೆ : 8 ತಿಂಗಳಲ್ಲಿ 4,212 ಪ್ರಕರಣ, 15 ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು

0

ಬೆಂಗಳೂರು: ರಾಜ್ಯದಲ್ಲಿ H1N1 ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಈ ವರ್ಷದ ಎಂಟು ತಿಂಗಳಲ್ಲಿ 32 ಜಿಲ್ಲೆಗಳಿಂದ ಒಟ್ಟು 4,212 ಪ್ರಯೋಗಾಲಯ ದೃಢೀಕೃತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಣ್ಗಾವಲು ಹಾಗೂ ಸಿದ್ಧತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆ ಸಜ್ಜಾಗಿದ್ದು, ಅಗತ್ಯ ಮೂಲಸೌಕರ್ಯ, ಆಸ್ಪತ್ರೆ ಬೆಡ್‌ಗಳು ಹಾಗೂ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲಾಗಿದೆ.

ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಷನ್ ಪ್ಲಾಟ್‌ಫಾರ್ಮ್ (IHIP) ಕಣ್ಗಾವಲು ವರದಿ ಪ್ರಕಾರ, 32 ಜಿಲ್ಲೆಗಳಲ್ಲಿ 4,212 ಪ್ರಯೋಗಾಲಯ ದೃಢೀಕೃತ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ರಾಜ್ಯದಲ್ಲಿ 4,583 ಹಾಗೂ 2024ರಲ್ಲಿ 3,903 ಪ್ರಕರಣಗಳು ವರದಿಯಾಗಿದ್ದವು.

ರಾಜ್ಯದಲ್ಲಿ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್ ಹಾಗೂ ಜುಲೈನಿಂದ ಸೆಪ್ಟೆಂಬರ್‌ವರೆಗೆ ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುವ ಪ್ರವೃತ್ತಿ ಇದೆ. ಹೀಗಾಗಿ ಪ್ರಸ್ತುತ ಪ್ರಕರಣಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಚುರುಕುಗೊಳಿಸಿದೆ.

ILI ಹಾಗೂ SARI ಪ್ರಕರಣಗಳ ಪತ್ತೆಗಾಗಿ ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗದಿತ ಕಣ್ಗಾವಲು ಕೇಂದ್ರಗಳಾಗಿ ಬಳಸಲಾಗುತ್ತಿದೆ. ICMR-NCDC ಪ್ರಯೋಗಾಲಯಗಳು, ರಾಜ್ಯದ ವೈರಲ್ ರೋಗನಿರ್ಣಯ ಪ್ರಯೋಗಾಲಯಗಳು (VRDL) ಹಾಗೂ ನಿಮ್ಹಾನ್ಸ್ ಮೂಲಕ ಮಾದರಿಗಳ ಪರೀಕ್ಷೆಗೆ ಅಗತ್ಯ ಕಿಟ್‌ಗಳು ಮತ್ತು ಉಪಕರಣಗಳನ್ನು ಸಿದ್ಧವಾಗಿರಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾಸ್ಪತ್ರೆಗಳವರೆಗೆ ಒಸೆಲ್ಟಾಮಿವಿರ್ ಮಾತ್ರೆಗಳು, N95 ಮಾಸ್ಕ್‌ಗಳು ಹಾಗೂ PPE ಕಿಟ್‌ಗಳನ್ನು ದಾಸ್ತಾನು ಇರಿಸಲಾಗಿದೆ. ಸೋಂಕಿತರನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡುವ ಉದ್ದೇಶದಿಂದ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗಿದೆ.

ಜ್ವರ, ಶೀತ, ಕೆಮ್ಮು ಸೇರಿದಂತೆ ಸೋಂಕಿನ ಲಕ್ಷಣಗಳು ಕಂಡುಬಂದರೆ ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸೋಪು ಅಥವಾ ಸ್ಯಾನಿಟೈಸರ್‌ನಿಂದ ಕೈಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು ಹಾಗೂ ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇಪದೇ ಮುಟ್ಟದಿರುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಶುದ್ಧೀಕರಿಸಿದ ಬಿಸಿ ನೀರು ಬಳಸುವುದು, ವೈದ್ಯರ ಸಲಹೆಯಿಲ್ಲದೆ ಸ್ವಯಂ ಔಷಧ ಸೇವಿಸದಿರುವುದು, ಜ್ವರ ಅಥವಾ ಶೀತದ ಲಕ್ಷಣಗಳಿರುವಾಗ ಹಸ್ತಲಾಘವ ತಪ್ಪಿಸುವುದು ಹಾಗೂ ಅನಗತ್ಯವಾಗಿ ಜನಸಂದಣಿ ಇರುವ ಸ್ಥಳಗಳಿಗೆ ತೆರಳದಿರುವಂತೆ ಸೂಚಿಸಲಾಗಿದೆ. ಸೀನುವಾಗ ಮತ್ತು ಕೆಮ್ಮುವಾಗ ಕರವಸ್ತ್ರ ಅಥವಾ ಟಿಶ್ಯೂ ಬಳಸುವಂತೆಯೂ ತಿಳಿಸಲಾಗಿದೆ.

ಇನ್ನು ಬೆಂಗಳೂರಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ H1N1 ಸೋಂಕು ವ್ಯಾಪಿಸಿದೆ ಎಂಬ ವದಂತಿಗಳನ್ನು ಆರೋಗ್ಯ ಸಚಿವರು ತಳ್ಳಿಹಾಕಿದ್ದಾರೆ. ಶಾಲೆಯ ಇಬ್ಬರು ಶಿಕ್ಷಕರಲ್ಲಿ ಮಾತ್ರ ಲಕ್ಷಣಗಳು ಕಂಡುಬಂದಿದ್ದು, ಯಾವುದೇ ವಿದ್ಯಾರ್ಥಿಗೆ ಸೋಂಕು ದೃಢಪಟ್ಟಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಶಾಲಾ ಆವರಣಗಳಲ್ಲಿ ಸೋಂಕು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತ ಮಂಡಳಿಗಳಿಗೆ ಮಾರ್ಗಸೂಚಿ ನೀಡಲಾಗಿದೆ.