Home Blog

ಫಲಿತಾಂಶ ಸುಧಾರಣೆಗೆ ಕ್ರಾಂತಿಕಾರಿ ಕ್ರಮ!

0

ವಿಜಯಸಾಕ್ಷಿ ಸುದ್ದಿ, ಗದಗ: ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದಂತೆ ಮಕ್ಕಳ ಓದಿಗೆ ಅಡ್ಡಿಯಾಗುತ್ತಿರುವ ಮೊಬೈಲ್ ಮತ್ತು ಟಿವಿಗಳನ್ನು ನಿಯಂತ್ರಿಸಲು ಗದಗ ತಾಲೂಕು ಪಂಚಾಯಿತಿ ಕೈಗೊಂಡ ಕ್ರಮವೊಂದು ಈಗ ರಾಜ್ಯದ ಗಮನ ಸೆಳೆಯುತ್ತಿದೆ.

ಗದಗ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಜೆ 7ರಿಂದ ರಾತ್ರಿ 9ರವರೆಗೆ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಮತ್ತು ಟಿವಿಗಳನ್ನು ಸ್ವಿಚ್ ಆಫ್ ಮಾಡಬೇಕು. ಅಷ್ಟೇ ಅಲ್ಲದೆ, ಗ್ರಾಮದ ಬೀದಿಗಳಲ್ಲಿ ಟ್ರ‍್ಯಾಕ್ಟರ್‌ಗಳಲ್ಲಿ ಜೋರಾಗಿ ಹಾಡು ಹಾಕಿಕೊಂಡು ಓಡಾಡುವುದನ್ನು ನಿಷೇಧಿಸಿ ಡಂಗುರ ಸಾರುವಂತೆ ಗದಗ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಕ್ರಾಂತಿಕಾರಿ ಸೂಚನೆಗೆ ನಾಂದಿ ಹಾಡಿದ್ದು ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಮತ್ತು ಮಕ್ಕಳ ಏಕಾಗ್ರತೆ ಹೆಚ್ಚಿಸಲು ಪೋಷಕರಲ್ಲಿ ಶಿಸ್ತು ಮೂಡಿಸುವುದು ಅನಿವಾರ್ಯ ಎಂಬ ದೂರದೃಷ್ಟಿಯೊಂದಿಗೆ ಅವರು ನೀಡಿದ ವಿನಂತಿ ಪತ್ರವನ್ನು ಆಧರಿಸಿ, ತಾ.ಪಂ ಇಒ ಈ ಸೂಚನೆ ನೀಡಿದ್ದಾರೆ. ಶಿಕ್ಷಣಾಧಿಕಾರಿಗಳ ಈ ಸಂವೇದನಾಶೀಲ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಹಳ್ಳಿಗಳಲ್ಲಿ ಮೊಬೈಲ್‌ನಿಂದ ವಿದ್ಯಾರ್ಥಿಗಳು ಕೆಲಕಾಲ ದೂರ ಉಳಿಯಲಿ ಎನ್ನುವ ಉದ್ದೇಶದಿಂದ ಮೊಟ್ಟ ಮೊದಲ ಬಾರಿಗೆ ಮಹಾರಾಷ್ಟçದ ಸಾಂಗ್ಲಿ ಸಮೀಪದ ಮೋಹಿತೆ ವಡ್ಗಾಂವ್ ಗ್ರಾಮದಲ್ಲಿ ‘ಸೈರನ್’ ಪದ್ಧತಿ ಜಾರಿಗೆ ಬಂದಿತು. ಅದಾದ ನಂತರ ದಕ್ಷಿಣ ಕನ್ನಡ ಕೆಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಫೋನ್ ಬಿಡಿ ಓದಿಗೆ ಸಮಯ ಕೊಡಿ’ ಎಂಬ ಅಭಿಯಾನಗಳು ನಡೆದಿದ್ದವು. ಈಚೆಗಷ್ಟೆ ಬೆಳಗಾವಿ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಸ್ವಯಂಪ್ರೇರಿತವಾಗಿ ಜನರು ಸಂಜೆ ವೇಳೆ ಟಿವಿ ಬಂದ್ ಮಾಡಿ ಮಕ್ಕಳಿಗೆ ಓದಿಸಲು ಸಹಕರಿಸುತ್ತಿದ್ದಾರೆ. ಆದರೆ, ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಡಂಗುರ ಸಾರಿಸಿ, ಮೊಬೈಲ್, ಟಿವಿಯಿಂದ ಎರಡು ಗಂಟೆ ದೂರ ಇರುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವುದು ಗದಗ ಜಿಲ್ಲೆಯ ವಿಶೇಷತೆ.

ಗದಗ ತಾಲೂಕು ಪಂಚಾಯಿತಿ ಇಒ ಹೊರಡಿಸಿರುವ ಈ ಆದೇಶದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಗದಗ ಬಿಇಒ ಅವರ ಈ ಕಾರ್ಯ ಇತರ ಜಿಲ್ಲೆಗಳಿಗೂ ಮಾದರಿಯಾಗಲಿ ಎಂಬ ಒತ್ತಾಯ ಕೇಳಿಬರುತ್ತಿದೆ. ಒಂದು ವೇಳೆ ಈ ಪ್ರಯೋಗ ಗದಗದಲ್ಲಿ ಯಶಸ್ವಿಯಾದರೆ, ಮುಂಬರುವ ದಿನಗಳಲ್ಲಿ ಇಡೀ ರಾಜ್ಯಕ್ಕೆ ಇದು ಪಸರಿಸುವುದರಲ್ಲಿ ಅನುಮಾನವಿಲ್ಲ ಎನ್ನುತ್ತಾ ಗದಗ ಗ್ರಾಮೀಣ ವಲಯದ ಶಿಕ್ಷಕರು.

“ಕೇವಲ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡಿದರೆ ಸಾಲದು, ಮನೆಯಲ್ಲಿಯೂ ಪೂರಕ ವಾತಾವರಣ ಇರಬೇಕು. ಸಂಜೆಯ ಎರಡು ಗಂಟೆಗಳ ಕಾಲ ಡಿಜಿಟಲ್ ಉಪವಾಸ ಮಾಡುವುದರಿಂದ ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚುವುದರ ಜೊತೆಗೆ ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧವೂ ಸುಧಾರಿಸಲಿದೆ ಎನ್ನುವ ಉದ್ದೇಶದಿಂದ ತಾ.ಪಂ ಇಒ ಅವರಿಗೆ ಮನವಿ ಮಾಡಿಕೊಂಡಿದೆ. ಮನವಿಗೆ ತಕ್ಷಣ ಸ್ಪಂದಿಸಿ, ಎಲ್ಲ ಪಿಡಿಒಗಳಿಗೆ ಸೂಚನೆ ನೀಡುವ ಮೂಲಕ ಶೈಕ್ಷಣಿಕ ಕಾಳಜಿ ಮೆರೆದಿದ್ದಾರೆ”

  • ವಿ.ವಿ. ನಡುವಿನಮನಿ.
    ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ.

ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿನಂತಿ ಮೇರೆಗೆ ಫೆ. 3ರಂದು ಎಲ್ಲ ಪಿಡಿಒಗಳಿಗೆ ಪತ್ರ ಬರೆಯಲಾಗಿದೆ. ಕಸ ವಿಲೇವಾರಿ ವಾಹನದ ಮೂಲಕ ಎರಡು ಗಂಟೆ ಮೊಬೈಲ್, ಟಿವಿಯಿಂದ ದೂರ ಉಳಿಯುವಂತೆ ಡಂಗುರ ಸಾರಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳುವ ಚಿಂತನೆ ಮೂಡಿದೆ.

  • ಮಲ್ಲಯ್ಯ ಕೊರವನವರ.
    ತಾ.ಪಂ ಇಒ, ಗದಗ.

ಹೆಚ್‌ಪಿವಿ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ: ಶಾಸಕ ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಚ್‌ಪಿವಿ ಲಸಿಕೆ ರಾಮಬಾಣವಾಗಿದ್ದು, ವಿದ್ಯಾರ್ಥಿನಿಯರು ಲಸಿಕೆಯಿಂದಾಗುವ ಆರೋಗ್ಯದ ಲಾಭವನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.

ಅವರು ಬುಧವಾರ ಪಟ್ಟಣದ ಗುರುಭವನದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮ, ಜಿಲ್ಲಾ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ, ಎಸ್.ಆರ್. ಪಾಟೀಲ ಪ್ರತಿಷ್ಠಾನ, ರಾಜೀವಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಪ್ರಾಜೆಕ್ಟ್ ಶೀಲ್ಡ್ರಾವರ ಆಶ್ರಯದಲ್ಲಿ ಜರುಗಿದ ಹೆಚ್.ಪಿ.ವಿ 2ನೇ ಹಂತದ ಉಚಿತ ಲಸಿಕೆ ವಿತರಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಚ್.ಪಿ.ವಿ ಲಸಿಕೆಯನ್ನು ಮೊದಲು ನಾನು ನಮ್ಮ ಮೊಮ್ಮಕ್ಕಳ ಮೆೇಲೆ ಪ್ರಯೋಗ ಮಾಡಿಸಿದ್ದೇನೆ. ಅವರ ಮೆೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಆಗದಿದ್ದಲ್ಲಿ ಮಾತ್ರ ಬೇರೆ ಹೆಣ್ಣು ಮಕ್ಕಳಿಗೆ ಉಚಿತವಾಗಿ ವಿತರಿಸುವಂತೆ ತಿಳಿಸಿದೆ. ಇಂತಹ ಮಹತ್ವದ ಕಾರ್ಯಕ್ಕೆ ಶಿಕ್ಷಣ, ಆರೋಗ್ಯ ಇಲಾಖೆಗಳು ಸಂಪೂರ್ಣವಾಗಿ ಪ್ರೋತ್ಸಾಹಿಸಿದ್ದು ಸ್ವಾಗತಾರ್ಹವಾಗಿದೆ ಎಂದರು.

ಮತಕ್ಷೇತ್ರದಲ್ಲಿನ ಎಲ್ಲ ಸರಕಾರಿ ಶಾಲೆಗಳ ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲು ಈಗಾಗಲೇ ಸೂಚಿಸಿದ್ದೇನೆ. ಮುಖ್ಯವಾಗಿ ಹೆಣ್ಣು ಮಕ್ಕಳ ಪಾಲಕರು ಲಸಿಕೆ ಪಡೆಯುವಂತೆ ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಕಾರಣ ಹೆಣ್ಣು ಮಕ್ಕಳ ಆರೋಗ್ಯವನ್ನು ಸದೃಢಗೊಳಿಸಲು ಹೆಚ್.ಪಿ.ವಿ ಲಸಿಕೆ ಅಸ್ತ್ರವಾಗಿದ್ದು, ಗರ್ಭಕಂಠದ ಕ್ಯಾನ್ಸರ್‌ನ್ನು ತಡೆಗಟ್ಟಬಹುದು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿನ ಖಾಸಗಿ ಶಾಲೆಗಳ ಹೆಣ್ಣು ಮಕ್ಕಳಿಗೂ ಹೆಚ್.ಪಿ.ವಿ ಲಸಿಕೆಯನ್ನು ವಿತರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಆರೋಗ್ಯ ಇಲಾಖೆಯ ಕೆ.ಎಲ್. ಹಾದಿಮನಿ ಹೆಚ್.ಪಿ.ವಿ ಲಸಿಕೆಯಿಂದಾಗುವ ಲಾಭದ ಕುರಿತು ಉಪನ್ಯಾಸ ನೀಡಿದರು. ಟಿ.ಈಶ್ವರ, ಐ.ಎಸ್. ಪಾಟೀಲ, ವಿ.ಆರ್. ಗುಡಿಸಾಗರ, ಬಿಇಒ ಎ.ಎನ್. ಕಂಬೋಗಿ, ಡಾ. ಶಕೀಲಅಹ್ಮದ್ ದುಂದರಗಿ, ಡಾ. ಬಿ.ಎಸ್. ಭಜಂತ್ರಿ, ಡಾ. ಎಲ್.ಡಿ. ಬಾಕಳೆ, ಬಸವರಾಜ ನವಲಗುಂದ, ಯೂಸುಫ್ ಇಟಗಿ, ಸಂಜಯ ದೊಡ್ಡಮನಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಹೆಚ್.ಪಿ.ವಿ ಲಸಿಕೆಯನ್ನು ಮೊದಲ ಹಂತದಲ್ಲಿ 864 ಹೆಣ್ಣು ಮಕ್ಕಳಿಗೆ ವಿತರಣೆ ಮಾಡಲಾಗಿದೆ. ಈಗ ಮೊದಲ ಲಸಿಕೆಯನ್ನು ಪಡೆದಿರುವ ಎಲ್ಲ 864 ಮಕ್ಕಳಿಗೂ ಎರಡನೇ ಲಸಿಕೆಯನ್ನು ವಿತರಿಸಲಾಗುತ್ತಿದೆ. ಯಾವ ಹೆಣ್ಣು ಮಕ್ಕಳ ಆರೋಗ್ಯದ ಮೆೇಲೆಯೂ ಲಸಿಕೆ ಕೆಟ್ಟ ಪರಿಣಾಮ ಬೀರಿಲ್ಲ ಎನ್ನುವುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಗದಗ ಜಿಲ್ಲಾ ಪ್ರಗತಿ ವಿಮರ್ಶೆ; 650 ಫಲಾನುಭವಿಗಳಿಗೆ ಶೀಘ್ರ ಸೌಲಭ್ಯ ಕಲ್ಪಿಸಲು ನಿರ್ದೇಶನ

0

ವಿಜಯಸಾಕ್ಷಿ ಸುದ್ದಿ, ಗದಗ: ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸಭೆ ಸಚಿವರ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಗದಗ ಜಿಲ್ಲೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿದಾರರ ಒಟ್ಟು ಸಂಖ್ಯೆ 2543 ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು. ಗೃಹಲಕ್ಷ್ಮೀ ಯೋಜನೆ ಪಡೆಯಲು ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ 650 ಫಲಾನುಭವಿಗಳಿಗೆ ಶೀಘ್ರದಲ್ಲಿ ಯೋಜನೆಯ ಸೌಲಭ್ಯ ಕಲ್ಪಿಸುವಂತೆ ಸಚಿವರು ಸೂಚಿಸಿದರು.

ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಸಚಿವ ಡಾ. ಎಚ್.ಕೆ. ಪಾಟೀಲ ಸೂಚಿಸಿದರು.

ಗದಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ಇರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತರುವ ಮೂಲಕ ಪರಿಹಾರ ಮಾರ್ಗ ನೀಡುವಂತೆ ಕೋರಿದರು.

ಸಭೆಯಲ್ಲಿ ಗದಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ದಯಾನಂದ ಪವಾರ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರಾದ ಅನಿತಾ ಲಕ್ಷ್ಮೀ ಹಾಗೂ ರೋಜಲೀನ್, ಸಹಾಯಕ ನಿರ್ದೇಶಕರಾದ ಹೇಮಾ ಎಚ್, ರೀಜು, ಗದಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಅಧೀಕ್ಷಕ ರಾಜು ಕಂಟಿಗೊಣ್ಣವರ ಸೇರಿದಂತೆ ಗದಗ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

ಬಾಕ್ಸ್

ಕುಟುಂಬದ ಮುಖ್ಯಸ್ಥ ಮರಣ ಹೊಂದಿದ ಸಂದರ್ಭಗಳಲ್ಲಿ ರೇಷನ್ ಕಾರ್ಡ್ ನವೀಕರಣಕ್ಕೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ಪ್ರಕ್ರಿಯೆ ಸರಳಗೊಳಿಸುವುದು ಅಗತ್ಯ. ಸರ್ಕಾರದ ಮಹತ್ತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ನೇರ ಸಹಕಾರಿಯಾಗಿದ್ದು, ದೈನಂದಿನ ಕುಟುಂಬ ನಿರ್ವಹಣೆಗೆ ಶಕ್ತಿಯನ್ನು ನೀಡುತ್ತಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆಯಾಗದಂತೆ ನಿಗಾ ವಹಿಸಿ: ಶಾಸಕ ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕು ಸೇರಿದಂತೆ ಮತಕ್ಷೇತ್ರದಾದ್ಯಂತ ಪ್ರತಿ ಗ್ರಾಮಗಳಿಗೂ ಅನುದಾನವನ್ನು ನೀಡಲಾಗಿದ್ದು, ಸಮರ್ಪಕವಾಗಿ ಕೆಲಸಗಳಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅನುದಾನದ ಲಭ್ಯತೆಯಿದ್ದರೂ ಸಹ ಅಭಿವೃದ್ಧಿ ಕಾರ್ಯಗಳು ಏಕೆ ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಶಾಸಕ ಜಿ.ಎಸ್. ಪಾಟೀಲ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅವರು ಬುಧವಾರ ತಾ.ಪಂ ಸಭಾಭವನದಲ್ಲಿ ಜರುಗಿದ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿ.ಪಂ, ಪಿಡಬ್ಲುಡಿ, ಆರ್‌ಡಬ್ಲುಎಸ್ ಇಲಾಖೆಗಳಿಗೆ ಅನುದಾನವನ್ನು ಒದಗಿಸಲಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳು ನಡೆದಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಂದಾಗ ಮಾತ್ರ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಲು ಸಾಧ್ಯ ಎಂದರು.

ಗ್ರಾಮೀಣ ಭಾಗಗಳ ರಸ್ತೆಗಳು ಸೇರಿದಂತೆ ಮುಖ್ಯ ರಸ್ತೆಗಳು ಅತಿಯಾದ ಮಳೆಯಿಂದ ಹಾಳಾಗಿದ್ದು, ಅವುಗಳನ್ನು ದುರಸ್ತಿಗೊಳಿಸಿ ಎಂದು ಎರಡು ತಿಂಗಳ ಹಿಂದೆಯೇ ಸೂಚಿಸಲಾಗಿತ್ತು. ಆದರೆ ಈಗ ಕೆಲಸ ಆರಂಭಿಸಿದ್ದೀರಿ. ಈ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾದರೆ ನೀವು ನಮಗೆ ಬೇಡ ಎಂದು ಕೆಲ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬೇಗನೆ ಎಲ್ಲ ಕೆಲಸಗಳು ಮುಗಿಯಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಲಕ್ಕಲಕಟ್ಟಿ, ನಾಗೇಂದ್ರಗಡ, ಹರ್ಲಾಪೂರ, ಉಮಚಗಿ, ನಾರಾಯಣಪೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಕಾರ್ಯ ನಿಧಾನಗತಿಯಲ್ಲಿ ನಡೆದಿದ್ದು, ಈ ವಿಷಯ ನಿಮ್ಮ ಗಮನಕ್ಕೆ ಬಂದಿಲ್ಲವೇ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಆರ್.ಎನ್. ಪುರೋಹಿತರನ್ನು ಪ್ರಶ್ನಿಸಿದ ಶಾಸಕರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿಷ್ಕಾಳಜಿ ವಹಿಸಬೇಡಿ ಎಂದರು.

ಇದೇ ಸಂಧರ್ಭದಲ್ಲಿ ಆರ್‌ಡಬ್ಲುಎಸ್ ಮುಖ್ಯ ಅಭಿಯಂತರ ಚಂದ್ರ ನೇರಲೆಕರವರಿಗೂ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತಿ ಕ್ರಮ ವಹಿಸಿ ಎಂದು ಸೂಚಿಸಿದರು. ನಂತರ ಅವರು ವಿವಿಧ ಇಲಾಖೆಗಳ ಪ್ರಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಾದ ಸಂಗನಗೌಡ ಪಾಟೀಲ, ಶರಣಪ್ಪ ಬೆಟಗೇರಿ, ರೋಣ, ಗಜೇಂದ್ರಗಡ, ಮುಂಡರಗಿ, ಗದಗ ತಾ.ಪಂ ಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಮತಕ್ಷೇತ್ರದಲ್ಲಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಗೊಂಡಿದೆ. ಅವುಗಳಿಗೆ ಶೀಘ್ರವೇ ಚಾಲನೆ ನೀಡಿ. ಇನ್ನು ಪಿಎಂಜಿಎಸ್‌ಆರ್‌ವಾಯ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಅನುಮತಿ ದೊರತಿದ್ದು, ಅಧಿಕಾರಿಗಳು ಎಲ್ಲ ಕಾಮಗಾರಿಗಳ ಪ್ರಗತಿಗೆ ಶ್ರಮಿಸಬೇಕು. ಮಾರನಬಸರಿ ಗ್ರಾಮಕ್ಕೆ ಮತ್ತೆ 35 ಲಕ್ಷ ರೂಗಳ ಅನುದಾನವನ್ನು ನೀಡಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಿ”

  • ಜಿ.ಎಸ್. ಪಾಟೀಲ.
    ಶಾಸಕರು.

NMDC ಯಿಂದ ಅಕ್ರಮ ಅದಿರು ಸಾಗಣೆ? 7 ದಿನಗಳಲ್ಲಿ ವರದಿ ನೀಡಲು ಸಚಿವ ಖಂಡ್ರೆ ಆದೇಶ

0

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್.ಎಂ.ಡಿ.ಸಿ.ಯಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಣೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಈ ಕುರಿತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡವನ್ನು ರಚಿಸಿ, 7 ದಿನಗಳ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.

ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಾಟವಾಗಿದೆಯೇ? ನಿಯಮಗಳ ಉಲ್ಲಂಘನೆ ನಡೆದಿದೆಯೇ? ಎಂಬುದನ್ನು ಸಮಗ್ರವಾಗಿ ಪರಿಶೀಲಿಸುವಂತೆ ಅವರು ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಆರೋಪಿ ಲಾರಿ ಚಾಲಕ ನೀಡಿದ ಮಾಹಿತಿ ಆಧರಿಸಿ ಸುಮಾರು ಎರಡೂವರೆ ಸಾವಿರ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನೂ ಸಚಿವರು ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು: ಸಚಿವ ಕಿರಣ್ ರಿಜಿಜು ಎಚ್ಚರಿಕೆ

0

ನವದೆಹಲಿ: ಸದನದಲ್ಲಿ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು “ಭಾರತ ಮಾತೆಯನ್ನು ಮಾರಿಬಿಟ್ಟಿದೆ” ಎಂದು ಆರೋಪಿಸಿದ್ದರು. ಅಲ್ಲದೇ, ಭಾರತ–ಅಮೆರಿಕಾ ವಾಣಿಜ್ಯ ಒಪ್ಪಂದವನ್ನು “ಸಂಪೂರ್ಣ ಶರಣಾಗತಿ” ಎಂದು ಟೀಕಿಸಿದ್ದರು. ಭಾರತದ ಶಕ್ತಿ ಸುರಕ್ಷತೆಯನ್ನು ಅಮೆರಿಕಾಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದರು.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜಿಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು” ಎಂದು ಹೇಳಿದ ಅವರು, ಗಂಭೀರ ಆರೋಪಗಳನ್ನು ಮಾಡುವ ಮೊದಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು ಎಂಬುದು ಸದನದ ನಿಯಮ ಎಂದು ಸ್ಪಷ್ಟಪಡಿಸಿದರು.

ಯಾವುದೇ ಪುರಾವೆ ಅಥವಾ ನೋಟಿಸ್ ನೀಡದೆ ಆರೋಪ ಮಾಡಲಾಗಿದೆ ಎಂದು ಆರೋಪಿಸಿದ ರಿಜಿಜು, ರಾಹುಲ್ ಗಾಂಧಿ ಅವರ ಭಾಷಣದಲ್ಲಿನ ತಪ್ಪು ಹೇಳಿಕೆಗಳು, ಸುಳ್ಳು ಆರೋಪಗಳು ಹಾಗೂ ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ಹೇಳಿ, ಈ ಹಿನ್ನೆಲೆಯಲ್ಲಿ ಹಕ್ಕುಚ್ಯುತಿ ನೋಟಿಸ್ ತರಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನಿಗೆ ‘ಹೇಡಿ’ ಎಂದ ಸಿಎಂ: ಭಾರತೀಯರಿಗೆ ಮಾಡಿದ ಅಪಮಾನ ಎಂದ ರೇಣುಕಾಚಾರ್ಯ

0

ಬೆಂಗಳೂರು: ಮುಖ್ಯಮಂತ್ರಿಗಳು ದೇಶದ ಪ್ರಧಾನಮಂತ್ರಿಗಳ ವಿರುದ್ಧ ಹೇಡಿ ಎಂಬ ಪದ ಬಳಸಿದ್ದು ಭಾರತೀಯರಿಗೆ ಮಾಡಿದ ಅಪಮಾನ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು.

ಸಿದ್ದರಾಮಯ್ಯನವರು ಈ ಸಂಬಂಧ ದೇಶದ ಕ್ಷಮೆ ಕೇಳಬೇಕು. 146 ಕೋಟಿ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. 2014ರಲ್ಲಿ ಮೋದಿಜೀ ಅವರನ್ನು ನರಹಂತಕ ಎಂದಿದ್ದರು. ನಿಮಗೆ ಚುನಾವಣೆಯಲ್ಲಿ ಜನರು ಛೀಮಾರಿ ಹಾಕಿದ್ದರು ಎಂದು ತಿಳಿಸಿದರು.

ಕೇವಲ ಕುರ್ಚಿಗಾಗಿ, ಸೋನಿಯಾ ಗಾಂಧಿ, ಅಪ್ರಬುದ್ಧ ರಾಜಕಾರಣಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಶಿರಬಾಗಿ ನಮಸ್ಕರಿಸುತ್ತೀರಲ್ಲವೇ? ಇದು ಅನುಭವಿ ರಾಜಕಾರಣಿಯಾದ ನಿಮಗೆ ಶೋಭೆ ತರುತ್ತದೆಯೇ ಎಂದು ಕೇಳಿದರು.

ನರೇಂದ್ರ ಮೋದಿಜೀ ಅವರು ನಿಮಗೆ ಹೆದರಿ ಓಡಿ ಹೋಗಿಲ್ಲ. ಕಾಂಗ್ರೆಸ್ ಪಕ್ಷವು ಮಹಿಳಾ ಸದಸ್ಯರ ಮೂಲಕ ಪ್ರತಿಭಟನೆಗೆ ಮುಂದಾಗಿತ್ತು. ಲೋಕಸಭಾ ಸ್ಪೀಕರ್ ಅವರ ಸಲಹೆ ಮೇರೆಗೆ ಆ ಸಂದರ್ಭದಲ್ಲಿ ಪಾಲ್ಗೊಂಡಿಲ್ಲ. ಎಲುಬಿಲ್ಲದ ನಾಲಿಗೆ ಎಂಬ ಕಾರಣಕ್ಕೆ ಹೀಗೆ ಮಾತನಾಡುತ್ತೀರಾ ಎಂದು ಪ್ರಶ್ನಿಸಿದರು.

ಕುರ್ಚಿಯ ವಿಷಯ ಬಂದಾಗ ನೀವು ಈ ರೀತಿ ಮಾತನಾಡುತ್ತೀರಿ. ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದು 3 ವರ್ಷಗಳಾಗಿವೆ. ನಿಮ್ಮ ಸಾಧನೆ ಏನು ಎಂದು ಕೇಳಿದರು. ಹೀಗೆ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಅಡ್ರೆಸ್ ಇಲ್ಲದಂತಾಗಿದೆ ಎಂದು ತಿಳಿಸಿದರು.

ಚಾಯ್‍ವಾಲಾ ಇವತ್ತು ದೇಶದ ಪ್ರಧಾನಿ ಆಗಿಲ್ಲವೇ? ಎಂದ ಅವರು, ಈ ದೇಶದಲ್ಲಿ ಒಂದು ಕಾಲದಲ್ಲಿ ಇಂದಿರಾ ಎಂದರೆ ಇಂಡಿಯ ಎಂದಿತ್ತು. ಈಗ ಕಾಂಗ್ರೆÉ್ರಸ್ಸಿಗೆ ಅಡ್ರೆಸ್ ಇಲ್ಲವಾಗಿದೆ. ಕಾಂಗ್ರೆಸ್ಸಿಗೆ ಭವಿಷ್ಯ ಇಲ್ಲವಾಗಿದೆ ಎಂದು ಆರೋಪಿಸಿದರು. ನಿಮ್ಮ ಹಿರಿಯ ನಾಯಕರು ನಿಮ್ಮನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ಗಮನ ಸೆಳೆದರು.

T20 World Cup: ಭಾರತ-ನಮೀಬಿಯಾ ಮುಖಾಮುಖಿ: ಪ್ಲೇಯಿಂಗ್ ಇಲೆವೆನ್‌ʼನಲ್ಲಿ 2 ಬದಲಾವಣೆ

0

ನವದೆಹಲಿ: ಟಿ20 ವಿಶ್ವಕಪ್‌ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆ ಇದೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇನ್ನೊಂದೆಡೆ, ಮೊದಲ ಪಂದ್ಯದಲ್ಲಿ ಆಡಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರು ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದು, ನಾಲ್ಕನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಅವಕಾಶ ಪಡೆಯುವ ನಿರೀಕ್ಷೆಯಿದೆ. ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ ಆಗಮನದಿಂದ ಮೊಹಮ್ಮದ್ ಸಿರಾಜ್ ಹೊರಗುಳಿಯುವ ಸಾಧ್ಯತೆ ಇದೆ. ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಕಾಯ್ದುಕೊಳ್ಳುವ ನಿರೀಕ್ಷೆಯಿದೆ.

ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಇಶಾನ್ ಕಿಶನ್
  • ಸಂಜು ಸ್ಯಾಮ್ಸನ್
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ರಿಂಕು ಸಿಂಗ್
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ಅಕ್ಷರ್ ಪಟೇಲ್
  • ಜಸ್​ಪ್ರೀತ್ ಬುಮ್ರಾ
  • ಅರ್ಷದೀಪ್ ಸಿಂಗ್
  • ವರುಣ್ ಚಕ್ರವರ್ತಿ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಬಾಕಿ ಬಿಲ್ ಬಿಡುಗಡೆ ಆಗದಿದ್ದರೆ ರಾಜ್ಯವೇ ಸ್ಥಗಿತ: ಸರ್ಕಾರಕ್ಕೆ ಗುತ್ತಿಗೆದಾರರ ಗಡುವು

0

ಮಂಡ್ಯ: ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಅಸಮಾಧಾನ ತೀವ್ರಗೊಂಡಿದೆ. ಸಾವಿರಾರು ಕೋಟಿ ರೂಪಾಯಿ ಪಾವತಿಗಳು ಬಾಕಿ ಉಳಿದಿರುವುದರಿಂದ ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ಗುತ್ತಿಗೆದಾರರ ಸಂಘ ತೀರ್ಮಾನಿಸಿದೆ.

ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಯಿತು.

ರಾಜ್ಯದಲ್ಲಿ ಒಟ್ಟು 37 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿದಿದೆ ಎಂದು ಸಂಘ ಆರೋಪಿಸಿದೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರವೇ 950 ಕೋಟಿ ರೂ. ಪಾವತಿ ಬಾಕಿಯಾಗಿದೆ. “ಸಾಲ ಪಡೆದು ಕಾಮಗಾರಿ ಮಾಡಿದ್ದೇವೆ. ಆದರೆ ಸರ್ಕಾರದಿಂದ ಹಣ ಸಿಗದ ಕಾರಣ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಮಂಜುನಾಥ್ ಹೇಳಿದರು.

ಸರ್ಕಾರಕ್ಕೆ ಮನವಿ ಮಾಡಿದರೂ ಸ್ಪಂದನೆ ಇಲ್ಲ ಎಂದು ಆರೋಪಿಸಿದ ಅವರು, “ಕಮಿಷನ್ ವ್ಯವಸ್ಥೆ ಹೆಚ್ಚಾಗಿದೆ. ನಮ್ಮನ್ನೇ ಕಡೆಗಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

ಇದಕ್ಕೂ ಮೊದಲು ರಾಜ್ಯ ಗುತ್ತಿಗೆದಾರರ ಪ್ರತಿನಿಧಿ ಸಂಘವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ 33 ಸಾವಿರ ಕೋಟಿ ರೂ. ಪಾವತಿಗಳು ಬಾಕಿ ಇರುವುದಾಗಿ ಗಮನ ಸೆಳೆದಿತ್ತು.

ಮಾರ್ಚ್ 5ರಂದು ನಡೆಯಲಿರುವ ಹೋರಾಟ ಸರ್ಕಾರಕ್ಕೆ ದೊಡ್ಡ ತಲೆನೋವಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಮತ್ತೆ ದುರಂತ: ತೆರೆದ ಮ್ಯಾನ್ಹೋಲ್ʼಗೆ ಬಿದ್ದು ಕಾರ್ಮಿಕ ಸಾವು!

0

ನವದೆಹಲಿ: ಗುಂಡಿಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಐದು ದಿನಗಳ ಬಳಿಕ, ತೆರೆದ ಮ್ಯಾನ್ಹೋಲ್ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ದೆಹಲಿಯ ರೋಹಿಣಿ ಪ್ರದೇಶದ ಸೆಕ್ಟರ್ 32ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಬಿರ್ಜು ಕುಮಾರ್ ರೈ  ಒಳಚರಂಡಿ ಮ್ಯಾನ್ಹೋಲ್ಗೆ ಬಿದ್ದು ಮೃತಪಟ್ಟಿದ್ದಾರೆ.

ಬೇಗಂಪುರ ಪ್ರದೇಶದ ಮಹಾಶಕ್ತಿ ಕಾಳಿ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಬಿರ್ಜು ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿದ್ದ ಒಳಚರಂಡಿ ಮ್ಯಾನ್ಹೋಲ್ಗೆ ಬಿದ್ದಿದ್ದಾರೆ. ಅವನ ಮುಂದೆ ನಡೆದುಕೊಂಡು ಹೋಗುತ್ತಿದ್ದ ಸ್ನೇಹಿತನಿಗೆ ಈ ಘಟನೆ ನಡೆದಿರುವುದು ತಕ್ಷಣ ಗಮನಕ್ಕೆ ಬಂದಿರಲಿಲ್ಲ. ಮಂಗಳವಾರವಷ್ಟೇ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ನೆರೆಯ ನೋಯ್ಡಾದಲ್ಲೂ ಸಮಾನ ಘಟನೆ ನಡೆದಿತ್ತು. ಕಳೆದ ತಿಂಗಳು 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯುವರಾಜ್ ಮೆಹ್ತಾ ಅವರು ದಟ್ಟ ಮಂಜಿನ ನಡುವಲ್ಲಿ ಕಾರು ಚಾಲನೆ ಮಾಡುವ ವೇಳೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಸೆಕ್ಟರ್ 150ರಲ್ಲಿ ತಮ್ಮ ಅಪಾರ್ಟ್‌ಮೆಂಟ್ ಕಟ್ಟಡದತ್ತ ತಿರುವು ಪಡೆಯುವಾಗ ರಸ್ತೆ ಹಾಗೂ ಹೊಂಡದ ನಡುವೆ ಇರುವ ಚರಂಡಿಯ ಬಳಿ ಸುರಕ್ಷತಾ ತಡೆಗೋಡೆಗಳಿದ್ದರೂ ದುರ್ಘಟನೆ ಸಂಭವಿಸಿತ್ತು.

error: Content is protected !!