ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಶ್ಚಿಮ ಪದವೀಧರರ ಕ್ಷೇತ್ರ ಧಾರವಾಡ, ಹಾವೇರಿ, ಗದಗ, ಕಾರವಾರ ಜಿಲ್ಲೆಗಳನ್ನೊಳಗೊಂಡ ವಿಶಾಲ ಕ್ಷೇತ್ರವಾಗಿದ್ದು, ಈ ಬಾರಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ನನಗೆ ಅವಕಾಶ ನೀಡಿದ್ದು, ಬದ್ಧತೆ, ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡುವ ಹಾಗೂ ಪದವೀಧರರ ದ್ವನಿಯಾಗಿ ಕಾರ್ಯ ಮಾಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಹೇಳಿದರು.
ಅವರು ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮುಂಬರುವ ಪಶ್ಚಿಮ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಕ್ಷೇತ್ರದಲ್ಲಿ ಈಗಾಗಲೇ 88 ಸಾವಿರಕ್ಕೂ ಅಧಿಕ ಪದವೀಧರರು ನೋಂದಣಿಯಾಗಿದ್ದು, 1984ರಿಂದ 2008ರವರೆಗೆ ಈಗಿನ ಸಚಿವ ಡಾ. ಎಚ್.ಕೆ. ಪಾಟೀಲ ಪ್ರತಿನಿಧಿಸುತ್ತಾ ಬಂದಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ಸಹ ಕ್ಷೇತ್ರದಲ್ಲಿ ಉತ್ತಮ ಕಾರ್ಯವನ್ನು ಮಾಡುವ ಉದ್ದೇಶವನ್ನು ಹೊಂದಿದ್ದು, ಬದ್ಧತೆ, ಪ್ರಾಮಾಣಿಕತೆಯಿಂದ ಜನರ ಸೇವೆ ಮಾಡಿದ್ದು, ಪದವೀಧರರ ಕುಂದು-ಕೊರತೆಗಳನ್ನು ಸರ್ಕಾರ ಮಟ್ಟದಲ್ಲಿ ಪ್ರಶ್ನಿಸುವ ನಿಟ್ಟಿನಲ್ಲಿ ವಿಶೇಷವಾಗಿ ಕಾರ್ಯ ಮಾಡಿದ್ದು, ಮುಂದಿನ ದಿನಗಳಲ್ಲಿಯೂ ಈ ಕಾರ್ಯವನ್ನು ಮುಂದುವರೆಸುತ್ತೇನೆ. ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಎಲ್ಲರೂ ಮತ ನೀಡಿ ಆಶೀರ್ವಾದಿಸಿದರೆ, ಎಲ್ಲರ ಪ್ರೀತಿ ವಿಶ್ವಾಸ, ನಂಬಿಕೆಗೆ ದ್ರೋಹ ಬಗೆಯದಂತೆ ಕೆಲಸ ನಿರ್ವಹಿಸುವುದಾಗಿ ಹೇಳಿದರು.
ಮಾಜಿ ಶಾಸಕರುಗಳಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ ಮಾತನಾಡಿ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆದು ಕ್ರಿಯಾಶೀಲ ವ್ಯಕ್ತಿತ್ವದ ಮೋಹನ ಲಿಂಬಿಕಾಯಿ ಆಯ್ಕೆಯಾಗುವಂತೆ ಎಲ್ಲರೂ ವಿಶೇಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.
ಹಾವೇರಿ ಲೋಕಸಭಾ ಕ್ಷೇತ್ರದ ಯುವ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಪಶ್ಚಿಮ ಪದವೀಧರ ಚುನಾವಣೆ ಒಂದು ರೀತಿ ಮಾರ್ಗಸೂಚಿ ಚುನಾವಣೆ ಇದ್ದಂತೆ. ಈ ಚುನಾವಣೆ ವ್ಯಕ್ತಿತ್ವದ ಮೇಲೆ ಅವಲಂಬಿತವಾಗಿದ್ದು, ಪದವೀಧರರ ಮತಗಳು ಪೊಳ್ಳು ಭರವಸೆಗಳಿಗೆ ಬಲಿಯಾಗದೆ ಅರ್ಹ ಮತ್ತು ಜನಮುಖಿ ವ್ಯಕ್ತಿ ಮೋಹನ್ ಲಿಂಬಿಕಾಯಿಯವರಿಗೆ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ನಗರ ಘಟಕ ಅಧ್ಯಕ್ಷ ಅಮರೇಶ ತೆಂಬದಮನಿ, ಸೋಮಣ್ಣ ಬೆಟಗೇರಿ, ಎಂ.ಎನ್. ಗದಗ, ಸುರೇಶ ನಾವಿ, ಗುರುನಾಥ ದಾನಪ್ಪನವರ, ಮಹೇಶ ಹೊಗೆಸೊಪ್ಪಿನ, ಶರಣು ಗೋಡಿ, ರಂಜನ್ ಪಾಟೀಲ, ಯಲ್ಲಪ್ಪ ತಳವಾರ, ವಿ.ಜಿ. ಪಡಗೇರಿ, ದೀಪಕ ಲಮಾಣಿ, ರಾಜು ಪಾಟೀಲ, ಆದಪ್ಪಗೌಡ್ರ ಪಾಟೀಲ, ಎಂ.ಆರ್. ಸೋಂಪೂರ, ಅಂದಾನಯ್ಯ ಕುರ್ತಕೋಟಿಮಠ, ಮಹೇಶ ಹಾರೋಗೇರಿ, ಎಸ್.ಕೆ. ಹವಾಲ್ದಾರ, ಡಿ.ಜೆ. ಮುಚ್ಚಾಲೆ, ಸತೀಶ ಪಾಟೀಲ, ಪದ್ಮರಾಜ ಪಾಟೀಲ, ಕಮತದ, ರಮೇಶ ಕಲಬುರ್ಗಿ ಸೇರಿದಂತೆ ಅನೇಕರು ಹಾಜರಿದ್ದರು. ಕಿರಣ ನವಲೆ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ಮುಖಂಡ ಹಾಗೂ ನಿಗಮ ಮಂಡಳಿ ಅಧ್ಯಕ್ಷ ನಂಜಯ್ಯನಮಠ ಮಾತನಾಡಿ, ಮೋಹನ ಲಿಂಬಿಕಾಯಿಯವರು ಕ್ರಿಯಾಶೀಲ ವ್ಯಕ್ತಿಯಾಗಿದ್ದಾರೆ. ಸಾಮಾಜಿಕ ಕಳಕಳಿ, ಸಮಾಜದ ಬಗ್ಗೆ ಚಿಂತನೆಗಳ ಬಗ್ಗೆ ಕಾಳಜಿ ಹೊಂದಿರುವ ಅಭ್ಯರ್ಥಿಯಾಗಿದ್ದು, ಇವರ ಆಯ್ಕೆ ಪದವೀಧರರಿಗೆ ದೊಡ್ಡ ದ್ವನಿಯಾಗಲಿದೆ ಎಂದರು.