ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದ ಕಾಂಗ್ರೆಸ್ಸಿನದು ನಾಲಾಯಕ್ ಸರ್ಕಾರ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ಕೊಡುವಂತೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು.
ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂದು ನನಗಂತೂ ಅರ್ಥ ಆಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇóಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು. ಗಮನಿಸುತ್ತ ಹೋದರೆ, ಈ ಸರಕಾರದ ಒಂದೊಂದು ನಿರ್ಣಯವೂ ಪ್ರಜಾಪ್ರಭುತ್ವವನ್ನು ಅಣಕಿಸುವ ರೀತಿಯಲ್ಲಿದೆ. ಇದು ಖಂಡಿತ ಸರಿಯಲ್ಲ ಎಂದು ನುಡಿದರು.
ಈ ನಿರ್ಧಾರವನ್ನು ರಾಜ್ಯ ಸರಕಾರ ಹಿಂಪಡೆಯಬೇಕು. ಮಾಧ್ಯಮಗಳಿಗೆ ನಿರ್ಬಂಧ ಹೇರುವುದನ್ನು ನಾವು ಖಂಡಿತ ಒಪ್ಪಲು ಸಾಧ್ಯವಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಮತ್ತೊಮ್ಮೆ ಹೇಳುವುದಾಗಿ ತಿಳಿಸಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಜಯಘೋಷ ಕೂಗುವುದಕ್ಕೆ ಕಡಿವಾಣ ಹಾಕಲು ಈ ಅಯೋಗ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ; ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದರೂ ಪುರಾವೆಗಳಿಲ್ಲವೆಂದು ತಿಳಿಸಿದ್ದರು.
ಅಂಥ ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಲು ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಖಂಡಿಸಿದರು. ಈಗ ಸಚಿವರ ಕಚೇರಿಯಲ್ಲಿ ಕಳ್ಳತನದ ನೆಪವೊಡ್ಡಿ ಈ ರೀತಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎಂದ ಅವರು, ಈ ಕುರಿತ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದರು.

