Home Blog

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಅನಿಲ ಸ್ಫೋಟ: 82 ಕಾರ್ಮಿಕರ ದುರ್ಮರಣ

ಬೀಜಿಂಗ್: ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ದುರಂತಗಳಲ್ಲಿ ಇದೂ ಒಂದಾಗಿದೆ ಎಂದು ವರದಿಯಾಗಿದೆ.

ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29ರ ಸುಮಾರಿಗೆ ಸ್ಫೋಟ ಸಂಭವಿಸಿದೆ.

ಅಪಘಾತ ಸಂಭವಿಸಿದ ವೇಳೆ ಒಟ್ಟು 247 ಕಾರ್ಮಿಕರು ಗಣಿಯ ಒಳಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ ಬಹುತೇಕರನ್ನು ಶನಿವಾರ ಬೆಳಗ್ಗಿನ ವೇಳೆಗೆ ರಕ್ಷಿಸಿ ಮೇಲ್ಮೈಗೆ ಕರೆತರಲಾಗಿದೆ.

ಸ್ಫೋಟದ ಪರಿಣಾಮ 82 ಮಂದಿ ಮೃತಪಟ್ಟಿದ್ದು, ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸೂಚನೆ ನೀಡಿದ್ದಾರೆ. ಅದೇ ವೇಳೆ ಈ ಭೀಕರ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆ.

ಅಂತಹ ಘಟನೆ ನಡೆದಿಲ್ಲ: ಜೈಲಿನಲ್ಲಿ ದರ್ಶನ್ ಆತ್ಮಹತ್ಯೆ ಯತ್ನ ವದಂತಿಗೆ ತೆರೆ ಎಳೆದ ಪರಮೇಶ್ವರ್

ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ವದಂತಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನ್ನ ಗಮನಕ್ಕೆ ಬಂದ ಬಳಿಕ ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದಿದ್ದೇನೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಹೊರತು ಮತ್ತೇನೂ ವಿಷಯ ಇಲ್ಲ ಎಂದು ಹೇಳಿದರು.

ಇನ್ನೊಂದೆಡೆ, ಟೌನ್‌ಹಾಲ್ ಬಳಿ ನಾಳೆ ನಡೆಯಬೇಕಿದ್ದ ಸಿಜೆಪಿ ಬಹಿರಂಗ ಸಭೆಗೆ ಪೊಲೀಸರು ಅನುಮತಿ ನಿರಾಕರಿಸಿರುವ ವಿಚಾರಕ್ಕೂ ಗೃಹ ಸಚಿವರು ಪ್ರತಿಕ್ರಿಯಿಸಿದರು.

ಯಾವ ಉದ್ದೇಶಕ್ಕೆ ಕಾರ್ಯಕ್ರಮ ನಡೆಯುತ್ತಿದೆ, ಯಾರೆಲ್ಲ ಭಾಗವಹಿಸುತ್ತಾರೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಾರೆ. ಅನುಮತಿ ನೀಡಬೇಕಾ ಬೇಡವಾ ಅನ್ನೋದು ಪೊಲೀಸರ ನಿರ್ಧಾರ. ಪೊಲೀಸರು ನಿರಾಕರಣೆ ಮಾಡಿದ್ದಾರೆ ಅಂದ್ರೆ ಅದರ ಹಿಂದೆ ಕೆಲವು ಅಂಶಗಳು ಇರಬಹುದು ಎಂದು ಹೇಳಿದರು.

ನಮ್ಮ ಪಕ್ಷ ಮತ್ತು ನಾಯಕರ ಬೆಂಬಲ ಬೇರೆ ವಿಚಾರ. ಪೊಲೀಸರ ಕೆಲಸವನ್ನು ಪೊಲೀಸರು ಮಾಡುತ್ತಾರೆ. ರಾಜಕಾರಣಿಗಳ ಕೆಲಸವನ್ನು ರಾಜಕಾರಣಿಗಳು ಮಾಡುತ್ತಾರೆ” ಎಂದು ಸ್ಪಷ್ಟಪಡಿಸಿದರು.

ಬಕ್ರೀದ್ ಹಬ್ಬದ ವೇಳೆ ಕುರ್ಬಾನಿಗೆ ರಕ್ಷಣೆ ನೀಡುವಂತೆ ವಕ್ಫ್ ಬೋರ್ಡ್ ಪತ್ರ ಬರೆದಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಗೃಹ ಸಚಿವರು, “ದೊಡ್ಡ ಹಬ್ಬಗಳ ಸಂದರ್ಭದಲ್ಲಿ ಪೊಲೀಸರು ಸಾಮಾನ್ಯವಾಗಿ ಎಚ್ಚರಿಕೆ ವಹಿಸುತ್ತಾರೆ. ಹೆಚ್ಚುವರಿ ಭದ್ರತೆ ಅಗತ್ಯವಿದ್ದರೆ ಅದನ್ನೂ ಮಾಡುತ್ತಾರೆ ಎಂದರು.

ವಕ್ಫ್ ಬೋರ್ಡ್‌ಗೆ ಏನು ಆತಂಕವಿದೆಯೋ ಗೊತ್ತಿಲ್ಲ. ಅವರು ಪತ್ರ ಬರೆದಿದ್ದರೆ, ಅದಕ್ಕೆ ಅನುಗುಣವಾಗಿ ಪೊಲೀಸರು ಸ್ಪಂದಿಸುತ್ತಾರೆ ಎಂದು ತಿಳಿಸಿದರು.

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ

0

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಸಿನಿಮೀಯ ಶೈಲಿಯ ಅಕ್ರಮ ಸ್ಪಿರಿಟ್ ಸಾಗಣೆ ಜಾಲ ಬಯಲಾಗಿದೆ. ಆಯಿಲ್ ಟ್ಯಾಂಕರ್ ಹೆಸರಿನಲ್ಲಿ ಸಾಗಿಸಲಾಗುತ್ತಿದ್ದ ವಾಹನದೊಳಗೆ 14 ಸಾವಿರ ಲೀಟರ್ ಸ್ಪಿರಿಟ್ ಪತ್ತೆಯಾಗಿದ್ದು, ಅಧಿಕಾರಿಗಳು ಶಾಕ್ ಆಗಿದ್ದಾರೆ.

ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಸ್ಪಿರಿಟ್ ಅನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಅಧಿಕಾರಿಗಳ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಗ್ಯಾಂಗ್ ವಿಶೇಷ ತಂತ್ರ ಬಳಸಿತ್ತು. ಟ್ಯಾಂಕರ್‌ನ ಕೆಲವು ಭಾಗಗಳಲ್ಲಿ ಮಾತ್ರ ಆಯಿಲ್ ತುಂಬಿಸಿ, ಸಣ್ಣ ಪೈಪ್‌ಗಳ ಮೂಲಕ ಅದನ್ನು ಹೊರಗೆ ತೋರಿಸಲಾಗುತ್ತಿತ್ತು. ಉಳಿದ ಭಾಗಗಳಲ್ಲಿ ಭಾರಿ ಪ್ರಮಾಣದ ಸ್ಪಿರಿಟ್ ಸಂಗ್ರಹಿಸಿ ಅಕ್ರಮ ಸಾಗಣೆ ನಡೆಸಲಾಗುತ್ತಿತ್ತು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಖಾನಾಪುರ ಅಬಕಾರಿ ಅಧಿಕಾರಿಗಳು ಟ್ಯಾಂಕರ್‌ನ ಒಳಭಾಗ ಪರಿಶೀಲಿಸಿದಾಗ, ಆಯಿಲ್ ಪೈಪ್‌ಗಳ ಸುತ್ತಲೂ ಸ್ಪಿರಿಟ್ ತುಂಬಿರುವುದು ಪತ್ತೆಯಾಗಿದೆ.

ಸಾಮಾನ್ಯವಾಗಿ ಗೋವಾದಿಂದ ಕರ್ನಾಟಕಕ್ಕೆ ಅಕ್ರಮ ಮದ್ಯ ಬರುತ್ತದೆ. ಆದರೆ ಈ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಿಂದ ಗೋವಾಕ್ಕೆ ಸ್ಪಿರಿಟ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಸದ್ಯ ಅಬಕಾರಿ ಇಲಾಖೆ ಇಡೀ ಜಾಲದ ಬೇರು ಪತ್ತೆಹಚ್ಚಲು ಮುಂದಾಗಿದ್ದು, ಬಂಧಿತ ಆರೋಪಿಯಿಂದ ಮಹತ್ವದ ಮಾಹಿತಿ ಕಲೆಹಾಕುತ್ತಿದೆ.

ಇವಾಂಕಾ ಟ್ರಂಪ್ ಹತ್ಯೆಗೆ ಸಂಚು ಆರೋಪ: ಇರಾಕಿ ಪ್ರಜೆ ಬಂಧನ!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಇರಾಕಿ ಪ್ರಜೆಯೊಬ್ಬನನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

32 ವರ್ಷದ ಮೊಹಮ್ಮದ್ ಬಕರ್ ಸಾದ್ ದಾವೂದ್ ಅಲ್-ಸಾದಿ ಎಂಬಾತ ಪ್ರಮುಖ ಶಂಕಿತನಾಗಿದ್ದು, ಈತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

2020ರಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಇರಾನ್‌ನ ಸೇನಾ ಕಮಾಂಡರ್ ಖಾಸಿಂ ಸೊಲೈಮಾನಿ ಹತ್ಯೆಯಾಗಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಆರೋಪಿ ಇವಾಂಕಾ ಟ್ರಂಪ್ ಅವರ ಫ್ಲೋರಿಡಾ ನಿವಾಸದ ನೀಲನಕ್ಷೆಯನ್ನು ಹೊಂದಿದ್ದಾನೆ ಎನ್ನಲಾಗಿದೆ. ಅಲ್ಲದೆ, “ನಿಮ್ಮ ಅರಮನೆಗಳು ಅಥವಾ ಸೀಕ್ರೆಟ್ ಸರ್ವೀಸ್ ನಿಮ್ಮನ್ನು ರಕ್ಷಿಸಲಾರದು” ಎಂದು ಅಮೆರಿಕನ್ನರಿಗೆ ಎಚ್ಚರಿಕೆ ನೀಡುವ ಆನ್‌ಲೈನ್ ಬೆದರಿಕೆ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ನಮ್ಮ ಮನೆಯನ್ನು ಸುಟ್ಟ ರೀತಿಯಲ್ಲೇ ಅವರ ಮನೆಯನ್ನು ಸುಟ್ಟುಹಾಕಬೇಕು ಎಂದು ಹೇಳಿ ಇವಾಂಕಾ ಟ್ರಂಪ್ ಅವರನ್ನು ಕೊಲ್ಲುವ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದ ಎಂದು ಇರಾಕಿನ ಮಾಜಿ ರಾಜತಾಂತ್ರಿಕ ಎಂಟಿಫಾದ್ ಕಾನ್ಬರ್ ಹೇಳಿದ್ದಾರೆ.

ಮೇ 15ರಂದು ಟರ್ಕಿಯಲ್ಲಿ ಬಂಧಿತನಾದ ಅಲ್-ಸಾದಿಯನ್ನು ಬಳಿಕ ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಈತ ಯುರೋಪ್ ಹಾಗೂ ಉತ್ತರ ಅಮೆರಿಕಾದಾದ್ಯಂತ ನಡೆದ 18 ದಾಳಿಗಳು ಮತ್ತು ದಾಳಿ ಪ್ರಯತ್ನಗಳಲ್ಲಿ ಭಾಗಿಯಾಗಿದ್ದಾನೆ ಎಂದು ಅಮೆರಿಕ ಅಧಿಕಾರಿಗಳು ಆರೋಪಿಸಿದ್ದಾರೆ.

ಫೈರ್‌ಬಾಂಬ್ ದಾಳಿ, ಗುಂಡಿನ ದಾಳಿ, ಯಹೂದಿ ಸಮುದಾಯದ ಕೇಂದ್ರಗಳು ಹಾಗೂ ಅಮೆರಿಕನ್ ರಾಜತಾಂತ್ರಿಕ ಕಚೇರಿಗಳನ್ನು ಗುರಿಯಾಗಿಸಿಕೊಂಡು ನಡೆದ ಹಲವು ದಾಳಿಗಳಿಗೂ ಈತನ ಸಂಪರ್ಕವಿದೆ ಎಂದು ತನಿಖಾ ಸಂಸ್ಥೆಗಳು ಶಂಕಿಸಿವೆ.

ನಿಖಿಲ್ ಕುಮಾರಸ್ವಾಮಿ ವಯಸ್ಸಿಗೆ ತಕ್ಕಂತೆ ಮಾತನಾಡಲಿ: ಇಕ್ಬಾಲ್ ಹುಸೇನ್

ರಾಮನಗರ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾರೋಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಿಖಿಲ್ ಕುಮಾರಸ್ವಾಮಿ ತಮ್ಮ ವಯಸ್ಸಿಗೆ ಹಾಗೂ ಅನುಭವಕ್ಕೆ ತಕ್ಕಂತೆ ಮಾತನಾಡಿದರೆ ಒಳ್ಳೆಯದು ಎಂದು ಟೀಕಿಸಿದರು.

ನಿಖಿಲ್‌ಗೆ ಇನ್ನೂ ರಾಜಕೀಯ ಅನುಭವ ಕಡಿಮೆ. ಯಾವ ನೈತಿಕತೆ ಇಟ್ಟುಕೊಂಡು ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.

ಇದೇ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುರಿತೂ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಮತ್ತು ಕುಮಾರಸ್ವಾಮಿ ಒಂದೇ ವಯಸ್ಸಿನವರು. ರಾಜಕೀಯದಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ರಾಜಕಾರಣ ಬರುತ್ತದೆ, ಹೋಗುತ್ತದೆ. ಆದರೆ ಮಾತಿನ ಮೇಲೆ ನಿಗಾ ಇಟ್ಟು ಮಾತನಾಡಬೇಕು ಎಂದು ಪರೋಕ್ಷವಾಗಿ ನಿಖಿಲ್‌ಗೆ ತಿರುಗೇಟು ನೀಡಿದರು.

ಇನ್ನೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಆದಷ್ಟು ಬೇಗ ಎಲ್ಲವೂ ಒಳ್ಳೆಯದಾಗಲಿದೆ. ಸಿಹಿ ಸುದ್ದಿ ಬರಲಿದೆ. ಸ್ವಲ್ಪ ದಿನ ಕಾಯಬೇಕು ಅಷ್ಟೇ ಎಂದು ಕುತೂಹಲಕಾರಿ ಹೇಳಿಕೆ ನೀಡಿದರು.

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಮಹತ್ವದ ಹೆಜ್ಜೆ: ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಬೆಂಗಳೂರು: ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ವಿವರವಾದ ಯೋಜನಾ ವರದಿ (DPR)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ನಿನ್ನೆ ಸಂಜೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಡಿಪಿಆರ್ ವರದಿಯನ್ನು ಅಧಿಕೃತವಾಗಿ ಸ್ವೀಕರಿಸಿದರು. ಈ ಯೋಜನೆ ಕುರಿತು ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಂಸ್ಥೆಯು ಡಿಪಿಆರ್ ಸಿದ್ಧಪಡಿಸಿದ್ದು, ಯೋಜನೆಗೆ ಸಂಬಂಧಿಸಿದಂತೆ ಮುಂದಿನ ಹಂತದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ.

ಈ ಕುರಿತು ಮಾತನಾಡಿದ ಡಾ. ಪರಮೇಶ್ವರ್, “ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಫೀಸಿಬಿಲಿಟಿ ಅಧ್ಯಯನ ನಡೆಸುವುದಾಗಿ ಘೋಷಿಸಿದ್ದರು” ಎಂದು ಹೇಳಿದರು.

“ಹೈದರಾಬಾದ್ ಮೂಲದ ಸಂಸ್ಥೆಯೊಂದರಿಂದ ₹3.5 ಕೋಟಿ ವೆಚ್ಚದಲ್ಲಿ ಕಾರ್ಯಸಾಧ್ಯತಾ ವರದಿ ಪಡೆಯಲಾಗಿದೆ. ಆ ವರದಿಯಲ್ಲಿ ಮಾದಾವರದಿಂದ ತುಮಕೂರುವರೆಗೆ ಮೆಟ್ರೋ ಯೋಜನೆ ಜಾರಿಗೆ ತರಬಹುದು ಎಂದು ಶಿಫಾರಸು ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಅದರ ನಂತರ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ನೀಡಲಾಗಿದ್ದು, ಮೆಟ್ರೋ ಸಂಸ್ಥೆಯ ಮೂಲಕ ಮತ್ತೊಂದು ಏಜೆನ್ಸಿಯಿಂದ ವಿವರವಾದ ಯೋಜನಾ ವರದಿ ತಯಾರಿಸಲಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯನ್ನು ಪಿಪಿಪಿ (Public-Private Partnership) ಮಾದರಿಯಲ್ಲಿ ಜಾರಿಗೊಳಿಸುವ ಉದ್ದೇಶವಿದ್ದು, ಡಿಪಿಆರ್ ಪ್ರಕಾರ ಯೋಜನೆಗೆ ಸುಮಾರು ₹20 ಸಾವಿರ ಕೋಟಿ ವೆಚ್ಚ ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.

“ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬಳಿಕ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುತ್ತದೆ” ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಆಧಾರ್ʼನಲ್ಲಿ ಮಗಳ ಹೆಸರು, ಲಿಂಗ ತಪ್ಪು: ₹10 ಲಕ್ಷ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಆಧಾರ್ ಕಾರ್ಡ್‌ನಲ್ಲಿ ಅಪ್ರಾಪ್ತ ಬಾಲಕಿಯ ಹೆಸರು ಮತ್ತು ಲಿಂಗವನ್ನು ತಪ್ಪಾಗಿ ನಮೂದಿಸಿ, ಹಲವು ಬಾರಿ ಮನವಿ ಮಾಡಿದರೂ ತಿದ್ದುಪಡಿ ಮಾಡದೇ ನಿರ್ಲಕ್ಷ್ಯ ವಹಿಸಿರುವ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ವಿರುದ್ಧ ಮಹಿಳೆಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ಸಿಂಗೇನ ಅಗ್ರಹಾರದ ನಿವಾಸಿ ಲಕ್ಷ್ಮಿ ಅವರು ತಮ್ಮ ಮಗಳ ಪರವಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಅರ್ಜಿಯ ಪ್ರಕಾರ, ಲಕ್ಷ್ಮಿ ಅವರ ಮಗಳು ತನುಶ್ರೀ 2015ರ ಜುಲೈ 22ರಂದು ಜನಿಸಿದ್ದು, ಜನನ ಪ್ರಮಾಣಪತ್ರ ಹಾಗೂ ಶಾಲಾ ದಾಖಲೆಗಳಲ್ಲಿ ‘ತನುಶ್ರೀ’ ಮತ್ತು ‘ಹೆಣ್ಣು ಮಗು’ ಎಂದೇ ನಮೂದಿಸಲಾಗಿದೆ. ಆದರೆ ಯುಐಡಿಎಐ ನೀಡಿರುವ ಆಧಾರ್ ಕಾರ್ಡ್‌ನಲ್ಲಿ ಮಗುವಿನ ಹೆಸರನ್ನು ‘ಪೂಜಾ’ ಎಂದು ಹಾಗೂ ಲಿಂಗದ ಜಾಗದಲ್ಲಿ ‘ಗಂಡು’ ಎಂದು ತಪ್ಪಾಗಿ ಮುದ್ರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ತಪ್ಪನ್ನು ಸರಿಪಡಿಸಲು ತಾಯಿ ಲಕ್ಷ್ಮಿ ಹಲವು ಬಾರಿ ಸಂಬಂಧಿತ ದಾಖಲೆಗಳೊಂದಿಗೆ ಆಧಾರ್ ಕೇಂದ್ರಗಳು ಹಾಗೂ ಯುಐಡಿಎಐ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

2026ರ ಮಾರ್ಚ್ 24ರಂದು ಯುಐಡಿಎಐ ಕೇಂದ್ರ ಕಚೇರಿ ಮತ್ತು ಬೆಂಗಳೂರು ಪ್ರಾದೇಶಿಕ ಕಚೇರಿಗೆ ಕಾನೂನು ನೋಟಿಸ್ ನೀಡಲಾಗಿದ್ದರೂ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕಿಯ ಶಾಲಾ ಪ್ರವೇಶ, ಸರ್ಕಾರಿ ಸೌಲಭ್ಯಗಳು ಹಾಗೂ ಇತರ ಗುರುತಿನ ದಾಖಲೆಗಳಿಗೆ ತೊಂದರೆ ಉಂಟಾಗುತ್ತಿದೆ. ಇದರಿಂದ ತಾಯಿ ಮತ್ತು ಮಗಳು ತೀವ್ರ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಯುಐಡಿಎಐ ಕ್ರಮವು ಸಂವಿಧಾನದ ವಿಧಿ 14 ಮತ್ತು 21ರ ಅಡಿಯಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಲಾಗಿದ್ದು, ಅಧಿಕಾರಿಗಳ ಕರ್ತವ್ಯ ವೈಫಲ್ಯದಿಂದ ಬಾಲಕಿಯ ಶೈಕ್ಷಣಿಕ ಹಾಗೂ ಸಾಮಾಜಿಕ ಹಕ್ಕುಗಳಿಗೂ ಧಕ್ಕೆಯಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಹೀಗಾಗಿ ಆಧಾರ್ ಕಾರ್ಡ್‌ನಲ್ಲಿರುವ ‘ಪೂಜಾ, ಗಂಡು’ ಎಂಬ ತಪ್ಪು ಮಾಹಿತಿಯನ್ನು ತೆಗೆದುಹಾಕಿ ‘ತನುಶ್ರೀ, ಹೆಣ್ಣು’ ಎಂದು ತಕ್ಷಣ ತಿದ್ದುಪಡಿ ಮಾಡಲು ಯುಐಡಿಎಐಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಅಲ್ಲದೇ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಸಂವಿಧಾನಿಕ ನಡೆಗಾಗಿ ತಪ್ಪಿತಸ್ಥ ಅಧಿಕಾರಿಗಳಿಂದಲೇ ₹10 ಲಕ್ಷ ಪರಿಹಾರ ಕೊಡಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿದಾರರು ಮನವಿ ಮಾಡಿದ್ದಾರೆ.

‘ವಿಜಯೇಂದ್ರನ ಚೇಲಾಗಳೇ ಬಿಜೆಪಿ ಪದಾಧಿಕಾರಿಗಳು’: ಯತ್ನಾಳ್ ಹೊಸ ಬಾಂಬ್!

ವಿಜಯಪುರ: ಲಾಡ್ಲೆ ಮಶಾಕ್ ಪ್ರಕರಣ ಹಿಂಪಡೆದ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದು, ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

“ಮುಸ್ಲಿಮರ ಓಲೈಕೆ ಅತಿಯಾದ ಮಟ್ಟಕ್ಕೆ ಹೋಗಿದೆ. ಗಲಭೆ, ಕಲ್ಲು ತೂರಾಟ ಮತ್ತು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಮೇಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿರುವುದು ಅಪರಾಧಿಗಳಿಗೆ ಉತ್ತೇಜನ ನೀಡಿದಂತಾಗಿದೆ” ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯೇಂದ್ರ ವಿರುದ್ಧ ನೇರವಾಗಿ ಆರೋಪ ಮಾಡಿದ ಅವರು, “ವಿಜಯೇಂದ್ರ ಅನೇಕ ವಂಚನೆ ಮತ್ತು ನಕಲಿ ಸಹಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಹೀಗಾಗಿ ಇಂತಹ ವಿಚಾರಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವನಿಗಿಲ್ಲ” ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಒಳರಾಜಕೀಯದ ಬಗ್ಗೆ ಬಹಿರಂಗವಾಗಿ ಮಾತನಾಡಿದ ಯತ್ನಾಳ್, “ರಾಜ್ಯ ಪದಾಧಿಕಾರಿಗಳಲ್ಲಿ ಬಹುತೇಕರು ವಿಜಯೇಂದ್ರನ ಚೇಲಾಗಳೇ. ಅವರ ಅಭಿಪ್ರಾಯ ಕೇಳಿದರೆ ವಿಜಯೇಂದ್ರ ಪರವಾಗಿಯೇ ಮಾತನಾಡುತ್ತಾರೆ” ಎಂದು ಟೀಕಿಸಿದರು.

“ಯಡಿಯೂರಪ್ಪ ಹಾಗೂ ವಿಜಯೇಂದ್ರ ಕೆಲ ಸ್ವಾಮೀಜಿಗಳನ್ನು ಮುಂದೆ ಮಾಡುತ್ತಿದ್ದಾರೆ. ಅವರನ್ನು ಕೆಳಗಿಳಿಸಿದರೆ ಲಿಂಗಾಯತರು ಬೆಂಬಲಿಸುವುದಿಲ್ಲ ಎಂದು ಅಮಿತ್ ಶಾಗೆ ಕರೆ ಮಾಡಿಸುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲ ಹಾಲಿ ಮತ್ತು ಮಾಜಿ ಶಾಸಕರು, ಮುಖಂಡರ ಅಭಿಪ್ರಾಯ ಪಡೆಯಬೇಕು ಎಂದು ಯತ್ನಾಳ್ ಒತ್ತಾಯಿಸಿದರು.

ಬಂಗಾರ ಖರೀದಿಸೋರಿಗೆ ಭರ್ಜರಿ ಗುಡ್ ​ನ್ಯೂಸ್​​: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಹಣದುಬ್ಬರದ ಆತಂಕವೂ ಹೆಚ್ಚಾಗಿದೆ. ಇದರ ಪರಿಣಾಮ ಅಮೂಲ್ಯ ಲೋಹಗಳ ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ಚಿನ್ನದ ದರದಲ್ಲಿ ಇಳಿಕೆ ದಾಖಲಾಗಿದೆ.

ಮೇ 23, 2026 ಶನಿವಾರದಂದು 24 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂಗೆ ₹430 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹1,59,060 ಆಗಿದೆ. ಅದೇ ರೀತಿ 1 ಗ್ರಾಂ ಚಿನ್ನದ ದರ ₹43 ಇಳಿಕೆಯಾಗಿ ₹15,906ಕ್ಕೆ ತಲುಪಿದೆ.

22 ಕ್ಯಾರೆಟ್ ಚಿನ್ನದ ದರವೂ ಇಳಿಕೆ ಕಂಡಿದ್ದು, 1 ಗ್ರಾಂಗೆ ₹40 ಕಡಿಮೆಯಾಗಿ ₹14,580 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹400 ಇಳಿಕೆಯಾಗಿ ₹1,45,800ಕ್ಕೆ ತಲುಪಿದೆ.

ಇನ್ನೊಂದೆಡೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹285 ಆಗಿದ್ದು, ಹಿಂದಿನ ದರವೇ ಮುಂದುವರಿದಿದೆ. ಒಂದು ಕೆಜಿ ಬೆಳ್ಳಿ ಬೆಲೆ ₹2.85 ಲಕ್ಷದಷ್ಟಿದೆ.

ಎಸ್‌ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜೋಗಿ ಹನುಮಂತಪ್ಪ ನೇಮಕ

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಎಸ್‌ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜೋಗಿ ಹನುಮಂತಪ್ಪ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಈ ನೇಮಕಕ್ಕೆ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಜೋಗಿ ಹನುಮಂತಪ್ಪ ಅವರು ಹಲವು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಹಾಗೂ ಕಾರ್ಯಕರ್ತರೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ನನ್ನನ್ನು ಈ ಹುದ್ದೆಗೆ ಆಯ್ಕೆ ಮಾಡಿದ ರಾಜ್ಯ ನಾಯಕರು, ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ಸಹ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್ ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳಿಗೆ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಜೋಗಿ ಹನುಮಂತಪ್ಪ ತಿಳಿಸಿದ್ದಾರೆ.

“ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಎಸ್‌ಟಿ ಸಮುದಾಯದ ಅಭಿವೃದ್ಧಿ ಹಾಗೂ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ. ಆಶೀರ್ವಾದ ಮಾಡಿದ ಹಗರಿಬೊಮ್ಮನಹಳ್ಳಿ ರಾಮನಗರ–ಕುರದಗಡ್ಡಿ ವಾರ್ಡ್‌ನ ಸಮಸ್ತ ಮತಬಾಂಧವರಿಗೆ ಕೃತಜ್ಞನಾಗಿದ್ದೇನೆ.”

ಜೋಗಿ ಹನುಮಂತಪ್ಪ, ಪುರಸಭೆ ಸದಸ್ಯರು

error: Content is protected !!