Home Blog

ಬಿಜೆಪಿ ಶಾಸಕ ಮುನಿರತ್ನ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ FIR: ಇಲ್ಲಿದೆ ಕೇಸಿನ ಸಂಪೂರ್ಣ ವಿವರ

0

ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮುನಿರತ್ನ ಸೇರಿದಂತೆ ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ, ಲಕ್ಷ್ಮೀ ಜಯರಾಮ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಅಯ್ಯಣ್ಣ ರೆಡ್ಡಿ, ಬಿ.ಎನ್. ಲೋಹಿತ್ ಮತ್ತು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಚಂದ್ರಶೇಖರ್ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (SIT) ವರ್ಗಾವಣೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಪ್ರಕರಣದ ದಾಖಲೆಗಳನ್ನು SITಗೆ ಹಸ್ತಾಂತರಿಸಿದ್ದಾರೆ.

ದೂರಿನಲ್ಲಿ ಏನಿದೆ?

2018ರ ಜುಲೈನಲ್ಲಿ ಫೇಸ್‌ಬುಕ್ ಮೂಲಕ ರವಿಶಂಕರ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು ಎಂದು ದೂರುದಾರೆ ತಿಳಿಸಿದ್ದಾರೆ. 2019ರಲ್ಲಿ ಧಾರವಾಡದಲ್ಲಿ ರವಿಶಂಕರ್ ತಮ್ಮನ್ನು ಸರ್ಕಾರಿ ವಸತಿಗೃಹಕ್ಕೆ ಕರೆದೊಯ್ದು ಸುಮಾರು ಮೂರು ದಿನಗಳ ಕಾಲ ಅಲ್ಲಿಯೇ ಇರಿಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ 2021ರ ಅಕ್ಟೋಬರ್ 6ರಂದು ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ರವಿಶಂಕರ್ ವಿರುದ್ಧ ಅತ್ಯಾಚಾರ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ಬಳಿಕ ಪ್ರಕರಣವನ್ನು ಧಾರವಾಡಕ್ಕೆ ವರ್ಗಾಯಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂದೆ ಹನಿಟ್ರ್ಯಾಪ್ ಮಾಡಲು ಸಂಚು ರೂಪಿಸಿ ಕೆಲವರು ತಮ್ಮನ್ನು ಪರಿಚಯಿಸಿಕೊಂಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. 2021ರ ಆಗಸ್ಟ್ 12ರಂದು ಕಗ್ಗಲಿಪುರದ ರೆಸಾರ್ಟ್‌ಗೆ ಕೆಲವರು ಪೊಲೀಸರನ್ನು ಕರೆದುಕೊಂಡು ಹೋಗಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಅದೇ ವರ್ಷ ಸೆಪ್ಟೆಂಬರ್ 1ರಂದು ಹಾಗೂ ಮತ್ತೊಮ್ಮೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ರೆಸಾರ್ಟ್‌ಗೆ ಪೊಲೀಸರನ್ನು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಕಿರಣ್ ನಾಯ್ಡು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದರು ಹಾಗೂ ಇತರರು ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಮನೆ ಶೋಧ, ಬಂಧನದ ಆರೋಪ:

2021ರ ಅಕ್ಟೋಬರ್‌ನಲ್ಲಿ ರೋಹಿತ್ ಗೌಡ ಅಲಿಯಾಸ್ ಲೋಕೇಶ್ ಅವರು ತಮ್ಮ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಮಹಿಳೆ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 11ರಂದು ತಮ್ಮ ಮನೆಯ ಶೋಧ ನಡೆಸಿ ಲ್ಯಾಪ್‌ಟಾಪ್, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಹಾರ್ಡ್‌ಡಿಸ್ಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ತಮ್ಮನ್ನು ಬಂಧಿಸಿ ಅಕ್ಟೋಬರ್ 11ರಿಂದ 13ರವರೆಗೆ ಎರಡು ದಿನಗಳ ಕಾಲ ಪೊಲೀಸ್ ವಶದಲ್ಲಿರಿಸಲಾಗಿತ್ತು. ಅಕ್ಟೋಬರ್ 13ರಂದು ಜೈಲಿಗೆ ಕಳುಹಿಸಲಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಬಳಿಕ ಮುನಿರತ್ನ ಅವರು ತಮ್ಮನ್ನು ಹಾಗೂ ತಮ್ಮ ಸಹೋದರಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ, ಈ ಹಿಂದೆ ದಾಖಲಿಸಿದ್ದ ಪ್ರಕರಣವನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಎಲ್ಲಾ ಆರೋಪಗಳ ಕುರಿತು ಇದೀಗ SIT ತನಿಖೆ ನಡೆಸಲಿದ್ದು, ತನಿಖೆಯ ಬಳಿಕ ಪ್ರಕರಣದ ಸಂಪೂರ್ಣ ವಾಸ್ತವಾಂಶ ಹೊರಬರಬೇಕಿದೆ.

CNR ರಾವ್‌ಗೆ SIR ನೋಟಿಸ್ ನೀಡಿಲ್ಲ: ಮತದಾರರ ಪಟ್ಟಿಯಲ್ಲಿನ ಹೆಸರು ವ್ಯತ್ಯಾಸಕ್ಕೆ ಜಿಬಿಎ ಸ್ಪಷ್ಟನೆ

0

ಬೆಂಗಳೂರು: ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಪಷ್ಟಪಡಿಸಿದೆ.

2002ನೇ ಸಾಲಿನ ಮತದಾರರ ಪಟ್ಟಿಯಲ್ಲಿ ಪ್ರೊ. ಸಿಎನ್‌ಆರ್ ರಾವ್ ಅವರು 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಆಗ ಅವರ ಹೆಸರು ‘ರಾಮ’ ಎಂದು ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಕ್ರಮ ಸಂಖ್ಯೆ 187ರಲ್ಲಿ ‘ಸಿಎನ್‌ಆರ್ ರಾವ್’ ಎಂಬ ಹೆಸರಿನೊಂದಿಗೆ ಅವರು ಮತದಾರರಾಗಿ ನೋಂದಾಯಿತರಾಗಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಹಳೆಯ ಹಾಗೂ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ವಿಷಯ ಗಮನಕ್ಕೆ ಬಂದಿದೆ.

ಆದರೆ ಈ ವಿಚಾರದಲ್ಲಿ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಜಿಬಿಎ ತಿಳಿಸಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಗೊಳಿಸಲು ಶಿಫಾರಸು ಮಾಡಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಹೀಗಾಗಿ ಸಿಎನ್‌ಆರ್ ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ ಎಂಬ ವರದಿಗಳು ಸರಿಯಲ್ಲ ಎಂದು ಜಿಬಿಎ ಸ್ಪಷ್ಟನೆ ನೀಡಿದೆ.

ಸರಕಾರಿ ಪಿಯು ಕಾಲೇಜಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ರಾಜ್ಯದ ಅತ್ಯುತ್ತಮ ಕಾಲೇಜುಗಳ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಅದರಲ್ಲೂ 2025–26ನೇ ಶೈಕ್ಷಣಿಕ ಸಾಲಿನ ರಾಜ್ಯದ ಎಲ್ಲ ಸರಕಾರಿ ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಲಿಂಗ ನಗರ, ಗದಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿನ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬೆಳ್ಳಿ ಹಬ್ಬದ ಪೂರ್ವತಯಾರಿಗಾಗಿ ಪ್ರತಿ ಶನಿವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗುವುದು. ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿರುವ ಎಲ್ಲ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಬೆಳ್ಳಿ ಹಬ್ಬದ ಪೂರ್ವತಯಾರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ರಾಜ್ಯದ ಮಾದರಿ ಕಾಲೇಜಿನ 25 ವರ್ಷಗಳ ಶೈಕ್ಷಣಿಕ ಸಾಧನೆಯನ್ನು ಒಗ್ಗಟ್ಟಿನಿಂದ ಸಂಭ್ರಮಿಸೋಣ ಎಂದು ಅವರು ಹೇಳಿದರು.

ಸಭೆಯಲ್ಲಿ ವಿಶ್ರಾಂತ ಪ್ರಾಚಾರ್ಯ ಚಂದ್ರಶೇಖರ ವಸ್ತ್ರದ, ಪ್ರಾಚಾರ್ಯೆ ಪೂರ್ಣಿಮಾ ಹೊಸಮನಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸೋಣ. ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ಮಾಜಿ ಪ್ರಾಚಾರ್ಯರು, ಉಪನ್ಯಾಸಕರು ಎಲ್ಲರೂ ಕೈಜೋಡಿಸಬೇಕು.

— ಸಿದ್ಧಲಿಂಗೇಶ್ವರ ಪಾಟೀಲ, ಮಾಜಿ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ

ಮಂತ್ರಾಲಯದಲ್ಲಿ ಕಾಣಿಕೆ ಎಣಿಕೆ ಪೂರ್ಣ; 16 ದಿನದಲ್ಲೇ ₹3.30 ಕೋಟಿ ಸಂಗ್ರಹ!

0

ರಾಯಚೂರು: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್–ಸೆಪ್ಟೆಂಬರ್ ತಿಂಗಳ 16 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.

16 ದಿನಗಳಲ್ಲಿ ಒಟ್ಟು ₹3,30,69,139 ಕಾಣಿಕೆ ಸಂಗ್ರಹವಾಗಿದೆ. ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಕಾಣಿಕೆ ಪ್ರಮಾಣದಲ್ಲೂ ಏರಿಕೆಯಾಗಿದೆ.

ಒಟ್ಟು ಸಂಗ್ರಹದಲ್ಲಿ ₹3,20,66,639 ಮೌಲ್ಯದ ಕರೆನ್ಸಿ ನೋಟುಗಳು ಹಾಗೂ ₹10,02,500 ಮೌಲ್ಯದ ನಾಣ್ಯಗಳು ಸೇರಿವೆ. ಇದರ ಜೊತೆಗೆ ಭಕ್ತರು 47 ಗ್ರಾಂ ಚಿನ್ನ ಹಾಗೂ 632 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು.

ಹುಂಡಿ ಎಣಿಕೆ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಹುಉದ್ದೇಶದ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟರ್ಫ್ ಬೇಡ : ಕಾಮಗಾರಿ ಸ್ಥಗಿತಕ್ಕೆ ಕ್ರೀಡಾಪಟುಗಳ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಪ್ರಮುಖ ಕ್ರೀಡಾ ತಾಣವಾಗಿರುವ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುತ್ತಿರುವ ಸಿಂಥೆಟಿಕ್ ಟರ್ಫ್ ಫುಟ್‌ಬಾಲ್ ಮೈದಾನ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಹಾಗೂ ಹಾಲಿ ಕ್ರೀಡಾಪಟುಗಳು ಹಾಗೂ ವಿವಿಧ ಕ್ರೀಡಾ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಜಿಲ್ಲಾ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಹುಉದ್ದೇಶದ ಕ್ರೀಡಾಂಗಣದಲ್ಲಿ ಟರ್ಫ್ ನಿರ್ಮಿಸುವುದರಿಂದ ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಲಭ್ಯವಿರುವ ಸ್ಥಳಾವಕಾಶ ಕಡಿಮೆಯಾಗಲಿದೆ. ಇಲ್ಲಿ ದಸರಾ ಕ್ರೀಡಾಕೂಟ, ಸರ್ಕಾರಿ ನೌಕರರ ಕ್ರೀಡಾಕೂಟ, ಶಾಲಾ-ಕಾಲೇಜುಗಳ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳು ನಡೆಯುತ್ತವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂತಹ ಸರ್ಕಾರಿ ಕಾರ್ಯಕ್ರಮಗಳಿಗೂ ಮೈದಾನ ಬಳಕೆಯಾಗುತ್ತಿದೆ. ಹೀಗಾಗಿ ಕಾಮಗಾರಿ ಸ್ಥಗಿತಗೊಳಿಸಿ, ಕ್ರೀಡಾ ಸಂಘಟನೆಗಳು, ತರಬೇತುದಾರರು, ಕ್ರೀಡಾಪಟುಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಟರ್ಫ್ ನಿರ್ಮಾಣವಾದರೆ ಶಾಟ್‌ಪುಟ್, ಡಿಸ್ಕಸ್ ಥ್ರೋ, ಜಾವೆಲಿನ್ ಥ್ರೋ, ಹ್ಯಾಮರ್ ಥ್ರೋ ಸೇರಿದಂತೆ ಅಥ್ಲೆಟಿಕ್ಸ್‌ನ ವಿವಿಧ ಎಸೆತ ವಿಭಾಗಗಳ ತರಬೇತಿ ಹಾಗೂ ಸ್ಪರ್ಧೆಗಳಿಗೆ ಸ್ಥಳಾವಕಾಶದ ಸಮಸ್ಯೆ ಎದುರಾಗಲಿದೆ. ಗ್ರಾಮೀಣ ಭಾಗದ ಕ್ರೀಡಾಪಟುಗಳು ಶಾಲಾ-ಕಾಲೇಜುಗಳ ಮೈದಾನಗಳನ್ನು ಅವಲಂಬಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಫುಟ್‌ಬಾಲ್ ಮೈದಾನ ನಿರ್ಮಾಣ ಅನಿವಾರ್ಯವಾಗಿದ್ದರೆ, ಸಿಂಥೆಟಿಕ್ ಟರ್ಫ್ ಬದಲಿಗೆ ನೈಸರ್ಗಿಕ ಹುಲ್ಲಿನ ಗ್ರಾಸ್ ಮೈದಾನ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದರು.

ಫುಟ್‌ಬಾಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಎಲ್ಲ ಕ್ರೀಡೆಗಳ ತರಬೇತಿ ಹಾಗೂ ಸ್ಪರ್ಧೆಗಳಿಗೆ ಬಳಕೆಯಾಗುತ್ತಿರುವ ಬಹುಉದ್ದೇಶದ ಜಿಲ್ಲಾ ಕ್ರೀಡಾಂಗಣವನ್ನು ಒಂದೇ ಕ್ರೀಡೆಗೆ ಸೀಮಿತಗೊಳಿಸುವುದು ಸರಿಯಲ್ಲ. ಟರ್ಫ್‌ನಿಂದ ಇತರ ಕ್ರೀಡೆಗಳಿಗೆ ಆಗುವ ತೊಂದರೆಯನ್ನು ಪರಿಗಣಿಸಿ, ಕಾಮಗಾರಿ ಸ್ಥಗಿತಗೊಳಿಸಿ ಸಮಗ್ರ ಯೋಜನೆ ರೂಪಿಸಬೇಕು.

— ರಾಜೂ ಖಾನಪ್ಪನವರ

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟರ್ಫ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಕ್ರೀಡಾ ಸಂಘಟನೆಗಳು ಹಾಗೂ ಕ್ರೀಡಾಪಟುಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ, ಎಲ್ಲ ಕ್ರೀಡೆಗಳಿಗೂ ತೊಂದರೆಯಾಗದಂತೆ ಸಮಗ್ರ ಕ್ರೀಡಾಂಗಣ ಯೋಜನೆ ರೂಪಿಸಬೇಕು.

— ಅರವಿಂದ ಹುಲ್ಲೂರ

ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿಯಿರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಕರೆ ನೀಡಿದರು.

ಗದಗ ನಗರದ ಜಿಲ್ಲಾ ನ್ಯಾಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ, ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಅಲ್ಲದೆ, ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಂಡ ಬಳಿಕ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದ ಪ್ರಕರಣ ಶಾಶ್ವತವಾಗಿ ಮುಕ್ತಾಯಗೊಳ್ಳುವುದರೊಂದಿಗೆ ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಬಹುದು ಮತ್ತು ಉಭಯ ಪಕ್ಷಗಾರರು ತಮ್ಮ ಹಿಂದಿನ ಬಾಂಧವ್ಯ ಉಳಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಒಟ್ಟು 22,229 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅವುಗಳಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಬಹುದಾದ 4,090 ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಿವಿಲ್ ದಾವೆಗಳು, ಜಮೀನು, ಮನೆ ಹಾಗೂ ನಿವೇಶನ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳಸಾಗಣೆ ಪ್ರಕರಣಗಳು, ಚೆಕ್‌ಬೌನ್ಸ್, ಮೋಟರ್ ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀಗೆ ಅರ್ಹವಾದ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಇದರಲ್ಲಿ ಸೇರಿವೆ.

ರಾಜಿಗಾಗಿ ಗುರುತಿಸಿರುವ ಪ್ರಕರಣಗಳ ಕುರಿತು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರಿಗೆ ಮುಂಚಿತವಾಗಿ ಮಾಹಿತಿ ನೀಡಿ, ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ಪ್ರಕರಣಗಳಿಗೆ ಸಂಬಂಧಿಸಿದ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೆ.19ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 3,647 ಚಾಲ್ತಿ ಪ್ರಕರಣಗಳು ಹಾಗೂ 75,808 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 79,455 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 11 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಉಪಸ್ಥಿತರಿದ್ದರು.

ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಂಡು ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಲು ಲೋಕ ಅದಾಲತ್ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

— ನಾಗವೇಣಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಸಿಗುತ್ತಿಲ್ಲ : ಎಚ್.ಕೆ. ಪಾಟೀಲ ಅಸಮಾಧಾನ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನಮಂಡಲದ ಉಭಯ ಸದನಗಳ ಕಲಾಪಗಳಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಶೇ.5ರಷ್ಟೂ ಸಮಯ ಮೀಸಲಾಗುತ್ತಿಲ್ಲ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಬುಧವಾರ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ ಹಾಗೂ ಉಪಸಭಾಪತಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ವಿಶ್ವವಿದ್ಯಾಲಯಗಳ ಸ್ಥಿತಿ ಶೋಚನೀಯವಾಗಿದ್ದು, ಸುಮಾರು ಶೇ.80ರಷ್ಟು ಹುದ್ದೆಗಳು ಖಾಲಿ ಇವೆ. ಮೂಲಸೌಕರ್ಯ ಹಾಗೂ ಕಟ್ಟಡಗಳು ಬಳಕೆಯಾಗದೆ ಪಾಳುಬಿದ್ದಿವೆ. ಇಂತಹ ಗಂಭೀರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ವಿಸ್ತೃತ ಚರ್ಚೆಯಾಗಬೇಕು ಎಂದರು.

ಉತ್ತರ ಕರ್ನಾಟಕದ ವಿಚಾರಗಳು ಕೇವಲ ಬೆಳಗಾವಿ ಅಧಿವೇಶನಕ್ಕೆ ಸೀಮಿತವಾಗಬಾರದು. ಬೆಳಗಾವಿ ಅಧಿವೇಶನದಲ್ಲಿ ಬೆಂಗಳೂರಿನ ಸಮಸ್ಯೆಗಳ ಬಗ್ಗೆಯೂ, ಬೆಂಗಳೂರಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆಯೂ ಚರ್ಚೆಯಾಗಬೇಕು. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರದೇಶವಾರು ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಸುವ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ತಾವು ಸಚಿವರಾಗಿದ್ದಾಗ ಉತ್ತರ ಕರ್ನಾಟಕದ ಹಿತದೃಷ್ಟಿಯಿಂದ ಅಂಗೀಕರಿಸಿದ್ದ ಎಂಟು ನಿರ್ಣಯಗಳು ದಿಕ್ಸೂಚಿಯಾಗಿವೆ. ಅವು ಯಾವ ಹಂತದಲ್ಲಿ ಅನುಷ್ಠಾನಗೊಂಡಿವೆ ಎಂಬುದನ್ನು ಪರಿಶೀಲಿಸಿ, ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಉಭಯ ಸದನಗಳ ಪೀಠಾಧ್ಯಕ್ಷರು ಮಾಡಬೇಕು ಎಂದರು.

‘ನಿರ್ಣಯಗಳು ಕಡತದಲ್ಲೇ ಉಳಿಯಬಾರದು’

ಸದನದಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನಗೊಳ್ಳಲು ಪೀಠಾಧ್ಯಕ್ಷರು ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಕ್ಷಾತೀತವಾಗಿರಬೇಕಾದರೂ ಜನರ ಪರವಾಗಿ ಮಾತನಾಡಲು ಯಾವುದೇ ನಿರ್ಬಂಧವಿಲ್ಲ ಎಂದು ಎಚ್.ಕೆ. ಪಾಟೀಲ ಹೇಳಿದರು.

ಸಭಾಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ಸರ್ಕಾರವನ್ನು ಎಚ್ಚರಿಸುವುದಾಗಿ ತಿಳಿಸಿದರು. ಬರ ಸಮೀಕ್ಷೆ ಬಳಿಕ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ತಾರತಮ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದರು.

ಸಭಾಪತಿ ಸಲೀಂ ಅಹ್ಮದ್, ಉಪಸಭಾಧ್ಯಕ್ಷೆ ಉಮಾಶ್ರೀ ಮಾತನಾಡಿದರು. ಜ.ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ಡಿ.ಆರ್. ಪಾಟೀಲ ಸ್ವಾಗತಿಸಿದರು.

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದಲ್ಲಿ ಶೇ.5ರಷ್ಟೂ ಸಮಯ ಸಿಗುತ್ತಿಲ್ಲ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರದೇಶವಾರು ಪ್ರತ್ಯೇಕ ಚರ್ಚೆಗೆ ಅವಕಾಶ ಕಲ್ಪಿಸುವ ನಿಯಮ ರೂಪಿಸಬೇಕು. ಸದನದಲ್ಲಿ ಅಂಗೀಕರಿಸಿದ ನಿರ್ಣಯಗಳು ಕಡತದಲ್ಲೇ ಉಳಿಯದೆ ಅನುಷ್ಠಾನಗೊಳ್ಳುವಂತೆ ಪೀಠಾಧ್ಯಕ್ಷರು ಸರ್ಕಾರವನ್ನು ಎಚ್ಚರಿಸಬೇಕು.

— ಎಚ್.ಕೆ. ಪಾಟೀಲ, ಮಾಜಿ ಸಚಿವ

ನಾನು ಈ ಸಾಂವಿಧಾನಿಕ ಪೀಠದಲ್ಲಿ ಎಷ್ಟು ದಿನ ಇರುತ್ತೇನೆ ಎಂಬುದು ಗೊತ್ತಿಲ್ಲ. ಆದರೆ ಇರುವಷ್ಟು ದಿನ ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶಿಸ್ತು ಮತ್ತು ಒಗ್ಗಟ್ಟಿನಿಂದ ಮುನ್ನಡೆಯಬೇಕು.

— ಜಿ.ಎಸ್. ಪಾಟೀಲ, ಸಭಾಧ್ಯಕ್ಷರು

ಕ್ರೀಡೆ ಇಲ್ಲದ ಬದುಕು ಕೀಟ ಹತ್ತಿದ ಹಣ್ಣಿನಂತೆ: ಫಕೀರ ದಿಂಗಾಲೇಶ್ವರ ಜಗದ್ಗುರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕ್ರೀಡೆಯಲ್ಲಿ ಪಾಲ್ಗೊಳ್ಳದ ಮಕ್ಕಳು ಕೀಟ ಹತ್ತಿದ ಕಾಳಿನಂತೆ ತಮ್ಮ ದೇಹದ ಸಂಪತ್ತನ್ನು ಕಳೆದುಕೊಳ್ಳುತ್ತಾರೆ. ಗುರಿ ಇಲ್ಲದ ಮಕ್ಕಳು ಗರಿ ಇಲ್ಲದ ಹಕ್ಕಿಯಂತೆ ಎತ್ತರಕ್ಕೆ ಹಾರಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಜೀವನದಲ್ಲಿ ಸಾಧಿಸುವ ಗುರಿ ಹೊಂದಿದ್ದರೆ ಯಶಸ್ಸು ಸಾಧ್ಯ ಎಂದು ಶಿರಹಟ್ಟಿ ಶ್ರೀ ಫಕೀರೇಶ್ವರ ಸಂಸ್ಥಾನಮಠದ ಶ್ರೀ ಫಕೀರ ದಿಂಗಾಲೇಶ್ವರ ಜಗದ್ಗುರು ಹೇಳಿದರು.

ಬಾಲೇಹೊಸೂರಿನಲ್ಲಿ ಮಂಗಳವಾರ ನಡೆದ ಸೂರಣಗಿ ಗ್ರುಪ್ ಮಟ್ಟದ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಸದೃಢ ದೇಹದಲ್ಲಿ ದೃಢ ಮನಸ್ಸು ನೆಲೆಗೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಿಂದ ದೈಹಿಕ ಆರೋಗ್ಯದ ಜತೆಗೆ ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳು ಬೆಳೆಸಿಕೊಳ್ಳಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮೊಬೈಲ್ ಹಾಗೂ ಟಿವಿಯಂತಹ ಸಾಧನಗಳಿಗೆ ಹೆಚ್ಚಿನ ಸಮಯ ಮೀಸಲಿಡುವ ಬದಲು ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕ್ರೀಡೆಯಲ್ಲಿ ಸೋಲು–ಗೆಲುವು ಸಹಜ. ಸೋಲಿನಿಂದ ನಿರಾಶರಾಗದೆ ಅದರಿಂದ ಪಾಠ ಕಲಿತು ಮುಂದಿನ ಸಾಧನೆಗೆ ಪರಿಶ್ರಮಿಸಬೇಕು. ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವುದರ ಜತೆಗೆ ಕ್ರೀಡಾಸ್ಫೂರ್ತಿ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ಭರಮಗೌಡ್ರ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.

ಗ್ರಾಮದ ಹಿರಿಯರಾದ ಗೋಪಾಲರಾವ್ ಕುಬೇರ, ಶಿವಪ್ಪ ಅಂಗೂರ, ಡಿ.ಸಿ. ಬಡೇಖಾನ್, ರಾಮಪ್ಪ ಹಾವನೂರ, ಫಕೀರೇಶ ಮ್ಯಾಟೆಣ್ಣವರ, ನಾಗಯ್ಯ ಮಠಪತಿ, ಜುಂಜಪ್ಪ ಮುದಿಯಮ್ಮನವರ, ಫಕೀರಯ್ಯ ಹಿರೇಮಠ, ದೇವೇಂದ್ರಪ್ಪ ಮತ್ತೂರ, ಬಸವರಾಜ ನೀಲಣ್ಣನವರ, ಗುರುಪಾದಪ್ಪ ಜಾಲವಾಡಗಿ ಉಪಸ್ಥಿತರಿದ್ದರು.

ಸಿಆರ್‌ಪಿ ಲೋಕೇಶ ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದಲಿಂಗಯ್ಯ ಗಾರವಾಡಮಠ ಸ್ವಾಗತಿಸಿದರು. ರೇಣುಕಸ್ವಾಮಿ ವೆಂಕಟಾಪುರಮಠ ವಂದಿಸಿದರು.

ಕ್ರೀಡಾಕೂಟದಲ್ಲಿ ಸೂರಣಗಿ ಗ್ರುಪ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಎಂ.ಎಸ್. ಚಾಲಕಬ್ಬಿ, ಎಚ್.ಎಂ. ಸಪ್ಪಿನ, ಪರಶುರಾಮ ಕೊರವರ, ಈರನಗೌಡ ಪಾಟೀಲ ಹಾಗೂ ರಮೇಶ ಮುದಗಲ್ ಮಾರ್ಗದರ್ಶನ ನೀಡಿದರು. ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

ಕ್ರೀಡೆ ವಿದ್ಯಾರ್ಥಿಗಳ ದೇಹವನ್ನು ಸದೃಢಗೊಳಿಸುವುದರ ಜತೆಗೆ ಆತ್ಮವಿಶ್ವಾಸ, ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಕ್ರೀಡೆಯಲ್ಲಿ ಗುರಿ ಇಟ್ಟುಕೊಂಡು ಪರಿಶ್ರಮಿಸಿದರೆ ಯಶಸ್ಸು ಖಚಿತ.

— ಶ್ರೀ ಫಕೀರ ದಿಂಗಾಲೇಶ್ವರ ಜಗದ್ಗುರು

ಗಣೇಶೋತ್ಸವಕ್ಕೆ ಏಕ ಗವಾಕ್ಷಿ ವ್ಯವಸ್ಥೆ; 24 ಗಂಟೆಯಲ್ಲೇ ಪರವಾನಗಿ!

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಪ್ರತಿ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಏಕ ಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಮೂಲಕ ವಿಸರ್ಜನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಅಗ್ನಿಶಾಮಕ, ಲೋಕೋಪಯೋಗಿ, ವಿದ್ಯುತ್, ನಗರಾಭಿವೃದ್ಧಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆಗಳನ್ನು ಒಳಗೊಂಡ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ.

ಸಂಬಂಧಪಟ್ಟ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಸಮಿತಿಯ ಅಧ್ಯಕ್ಷರಾಗಿದ್ದು, ತಾಲೂಕಿನ ತಹಶೀಲ್ದಾರರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗಣೇಶೋತ್ಸವಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ.

ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸಲ್ಲಿಸುವ ಅರ್ಜಿಗಳ ಕುರಿತು ಸಂಬಂಧಪಟ್ಟ ಇಲಾಖೆಗಳು ತಮ್ಮ ಅಭಿಪ್ರಾಯ ನೀಡಲಿದ್ದು, ಅರ್ಜಿ ಸ್ವೀಕರಿಸಿದ 24 ಗಂಟೆಗಳೊಳಗಾಗಿ ಅರ್ಜಿದಾರರಿಗೆ ಪರವಾನಗಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು.

ಸಮಿತಿಯ ಸದಸ್ಯ ಇಲಾಖೆಗಳು ಪರಸ್ಪರ ನಿರಂತರ ಸಂಪರ್ಕದಲ್ಲಿದ್ದು, ಹಬ್ಬದ ಸಂದರ್ಭದಲ್ಲಿ ತಮ್ಮ ಕೇಂದ್ರ ಸ್ಥಾನಗಳಲ್ಲಿ ಹಾಜರಿದ್ದು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಪರವಾನಗಿ ನೀಡುವ ಮುನ್ನ ಆಯೋಜಕರಿಂದ ನ್ಯಾಯಾಲಯದ ನಿರ್ದೇಶನಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸೂಚನೆಗಳನ್ನು ಪಾಲಿಸುವ ಕುರಿತು ಮುಚ್ಚಳಿಕೆ ಪಡೆಯಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆಯೂ ಆಯೋಜಕರಿಂದ ಖಾತರಿ ಪಡೆಯಬೇಕು.

ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಲಾಗುವುದು. ಅಗತ್ಯವಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು.

ಹೈ-ಟೆನ್ಶನ್ ವಿದ್ಯುತ್ ತಂತಿಗಳು ಹಾದುಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ನೀಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹ ಪ್ರತಿಷ್ಠಾಪಿಸುವ ಸಂಘ-ಸಂಸ್ಥೆಗಳು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಅನುಮತಿ ಪಡೆದ ನಂತರವೇ ಪ್ರತಿಷ್ಠಾಪಿಸಬೇಕು.

ಗಣೇಶೋತ್ಸವಕ್ಕೂ ಮುನ್ನ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರನ್ನು ಒಳಗೊಂಡ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಗಣೇಶೋತ್ಸವ ಆಯೋಜಕರು ಆಡಳಿತ ಮತ್ತು ಪೊಲೀಸ್ ಇಲಾಖೆ ನೀಡುವ ಎಲ್ಲ ಮಾರ್ಗಸೂಚಿ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಶಾಂತಿಯುತವಾಗಿ ಹಬ್ಬ ಆಚರಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಸ್ಮರಣೆ : ಬಿಜೆಪಿ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಬಿಜೆಪಿ ಗದಗ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳಿಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ದಿನವೂ ರಜೆ ಹಾಕದೆ ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಚರಿಸುವುದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ಮೋದಿಯವರ ಸಾರ್ವಜನಿಕ ಸೇವೆಯ 25 ವರ್ಷಗಳ ಸ್ಮರಣಾರ್ಥ ಜಿಲ್ಲೆಯಲ್ಲಿ ಹಲವು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

‘ಆಶೀರ್ವಾದ ದೀಪ’, ‘25 ಕೋಟಿ ಮಕ್ಕಳ ಕನಸಿನ ಭಾರತ’, ‘ನಮೋ ಸೇವಾ ಕಥನ’ ಬೀದಿ ನಾಟಕ, ಅಂಗಳದ ಉತ್ಸವ, ಬದಲಾವಣೆಯ ಕಥೆ, ವಿಕಸಿತ ಭಾರತ ಸಂಕಲ್ಪ ಯಾತ್ರೆ, ಸೇವಾ ಜ್ಯೋತಿ ಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ‘ಸೇವೆ ನನ್ನ ಯೋಗದಾನ’ದಡಿ ರಕ್ತದಾನ ಶಿಬಿರ, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಭೇಟಿ, ವೃಕ್ಷಾರೋಪಣ, ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಚ್ಛತಾ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಕೇಂದ್ರ ಆಹಾರ ನಿಗಮದ ಸದಸ್ಯ ರವಿ ದಂಡಿನ, ನರಗುಂದ ಯುವ ಮುಖಂಡ ಉಮೇಶಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಸೇವಾ ಸಂಕಲ್ಪ ಅಭಿಯಾನ ತಂಡದ ಜಿಲ್ಲಾ ಸದಸ್ಯರಾದ ಅನೀಲ ಅಬ್ಬಿಗೇರಿ, ಸಂತೋಷ ಅಕ್ಕಿ ಸೇರಿದಂತೆ ಬಿಜೆಪಿ 9 ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಮತ್ತು ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಹಾಗೂ ಮಂಡಲ ತಂಡದ ಸದಸ್ಯರು ಭಾಗವಹಿಸಿದ್ದರು.

ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ವಿವಿಧ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಕಾರ್ಯಕರ್ತರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.

— ತೋಟಪ್ಪ (ರಾಜು) ಕುರುಡಗಿ, ಬಿಜೆಪಿ ಗದಗ ಜಿಲ್ಲಾಧ್ಯಕ್ಷ