Home Blog

ಜಾತಿ ಸಮೀಕ್ಷೆ ಮುಂದೂಡುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಆರೋಪ

0

ನವದೆಹಲಿ: ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸುವುದಾಗಿ ಘೋಷಿಸಿ ಒಂದು ವರ್ಷ ಕಳೆದಿದ್ದರೂ, ಅದರ ಅನುಷ್ಠಾನ ಪ್ರಕ್ರಿಯೆ ಕುರಿತು ಇನ್ನೂ ಯಾವುದೇ ಸ್ಪಷ್ಟತೆ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾತಿ ಸಮೀಕ್ಷೆಯನ್ನು ಉದ್ದೇಶಪೂರ್ವಕವಾಗಿ ಮುಂದೂಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಕಳೆದ ವರ್ಷದ ಇದೇ ದಿನ ಮೋದಿ ಸರ್ಕಾರ ಮುಂಬರುವ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲಾಗುವುದು ಎಂದು ಘೋಷಿಸಿತ್ತು. ಆದರೆ ಒಂದು ವರ್ಷ ಕಳೆದರೂ ಈ ಪ್ರಕ್ರಿಯೆ ಹೇಗೆ ಜಾರಿಯಾಗಲಿದೆ ಎಂಬ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ” ಎಂದು ಹೇಳಿದ್ದಾರೆ.

ಈ ವಿಷಯದಲ್ಲಿ ವಿರೋಧ ಪಕ್ಷಗಳು, ವಿವಿಧ ರಾಜ್ಯ ಸರ್ಕಾರಗಳು ಅಥವಾ ತಜ್ಞರೊಂದಿಗೆ ಯಾವುದೇ ಸಮಾಲೋಚನೆ ನಡೆಸಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2025ರ ಮೇ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಸಂಬಂಧ ಪತ್ರ ಬರೆದು ಹಲವು ಪ್ರಶ್ನೆಗಳನ್ನು ಎತ್ತಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಖರ್ಗೆ ಪತ್ರದಲ್ಲಿ ಪ್ರಸ್ತಾಪಿಸಿದ್ದ ಪ್ರಶ್ನೆಗಳು ಮತ್ತು ಆತಂಕಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ವಿಶೇಷ ಅಧಿವೇಶನದ ನಂತರ, ಜಾತಿ ಜನಗಣತಿ ಪ್ರಕ್ರಿಯೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕಿದೆ ಎಂಬ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ ಎಂದು ಕಾಂಗ್ರೆಸ್ ವಾದಿಸಿದೆ.

ಕರ್ತವ್ಯದ ವೇಳೆ ಹೃದಯಾಘಾತ: ಲೆಕ್ಕಪತ್ರಾಧಿಕಾರಿ ಸಾವು

0

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಲೆಕ್ಕಪತ್ರಾಧಿಕಾರಿ ವಿಜಯಕುಮಾರ್ (40) ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟ ಘಟನೆ ನಡೆದಿದೆ.

ಬೆಳಿಗ್ಗೆ ಸಾಮಾನ್ಯವಾಗಿ ಕೆಲಸಕ್ಕೆ ಹಾಜರಾದ ವಿಜಯಕುಮಾರ್, ಕಚೇರಿಯಲ್ಲಿ ದೈನಂದಿನ ಕಾರ್ಯಗಳಲ್ಲಿ ನಿರತರಾಗಿದ್ದ ನಂತರ ತಮ್ಮ ಕೋಣೆಗೆ ತೆರಳಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಅವರ ಕುಸಿತವನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯಕುಮಾರ್ ಅವರ ಅಕಾಲಿಕ ನಿಧನಕ್ಕೆ ಸಹೋದ್ಯೋಗಿಗಳು, ಸ್ಥಳೀಯರು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪುರಸಭೆ ಕಚೇರಿಯಲ್ಲಿ ಶೋಕದ ವಾತಾವರಣ ಆವರಿಸಿದೆ.

ಹುಟ್ಟುಹಬ್ಬದ ಸಂಭ್ರಮದ ನಡುವೆ ದುರಂತ: ಹೊಸ ಬಟ್ಟೆ ಖರೀದಿಗೆ ಬಂದ 6 ವರ್ಷದ ಬಾಲಕಿ ಗೋಡೆ ಕುಸಿತಕ್ಕೆ ಬಲಿ

ಬೆಂಗಳೂರು: ನಗರದಲ್ಲಿ  ಸುರಿದ ಭಾರೀ ಮಳೆಗೆ ಉಂಟಾದ ಅವಘಡದಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟ ದುರ್ಘಟನೆಗೆ ಮತ್ತೊಂದು ಮನಕಲಕುವ ಹಿನ್ನೆಲೆ ಬಹಿರಂಗವಾಗಿದೆ. ಮೃತಪಟ್ಟವರಲ್ಲಿ 6 ವರ್ಷದ ಬಾಲಕಿ ಮುಸಾವಿರ್ ಬೇಗಂ ಕೂಡ ಇದ್ದಳು.

ಮೇ 3ರಂದು ತನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮುಸಾವಿರ್, ಅದಕ್ಕಾಗಿ ಹೊಸ ಬಟ್ಟೆ ಹಾಗೂ ವಸ್ತುಗಳನ್ನು ಖರೀದಿಸಲು ತನ್ನ ತಾಯಿ ಮುಬೀನ್ ತಾಜ್ ಮತ್ತು ಅತ್ತೆ ತಬ್ರೀನ್ ತಾಜ್ ಜೊತೆ ಶಿವಾಜಿನಗರ ಪ್ರದೇಶಕ್ಕೆ ಬಂದಿದ್ದಳು.

ಮಗು ತನ್ನ ಬರ್ತ್‌ಡೇಗಾಗಿ ಖುಷಿಯಿಂದ ಬಟ್ಟೆ ಆಯ್ಕೆ ಮಾಡುತ್ತಿದ್ದಾಗಲೇ ಧಾರಾಕಾರ ಮಳೆ ಆರಂಭವಾಗಿದೆ. ಅದೇ ವೇಳೆ ಬೌರಿಂಗ್ ಆಸ್ಪತ್ರೆ ಸಮೀಪದ ದುರ್ಬಲಗೊಂಡ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದಿದ್ದು, ಅವಶೇಷಗಳಡಿ ಮುಸಾವಿರ್ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.

ತಾಯಿ ಮುಬೀನ್ ಮತ್ತು ಅತ್ತೆ ತಬ್ರೀನ್ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಸಾವಿರ್ ತನ್ನ ತಂದೆ-ತಾಯಿಗೆ ಏಕೈಕ ಮಗಳು ಎಂಬುದು ಕುಟುಂಬದ ದುಃಖವನ್ನು ಇನ್ನಷ್ಟು ತೀವ್ರಗೊಳಿಸಿದೆ.

ಈ ದುರ್ಘಟನೆಯಲ್ಲಿ ಇನ್ನೂ 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೊಲೆ ಪ್ರಕರಣ: ಆರು ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ಗಂಗಾವತಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಹಾಗೂ ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರು ಆರೋಪಿಗಳನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಾಲಯ, ಅಪರಾಧದ ಗಂಭೀರತೆ ಹಾಗೂ ಆರೋಪಿಗಳ ಹಿಂದಿನ ಅಪರಾಧ ಚರಿತ್ರೆಯನ್ನು ಪರಿಗಣಿಸಿ ಮರಣದಂಡನೆ ವಿಧಿಸಿದೆ.

ಪ್ರಕರಣದ ವಿಚಾರಣೆ ವೇಳೆ ಸಿಸಿಟಿವಿ ದೃಶ್ಯಾವಳಿ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿಗಳು ಈ ಹಿಂದೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಚಾರವನ್ನೂ ಗಮನಿಸಿದೆ.

ನ್ಯಾಯಾಧೀಶರು ತೀರ್ಪು ನೀಡುವ ವೇಳೆ, “ಮಾರುತಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆತನಿಗೆ ಚಿಕಿತ್ಸೆ ದೊರಕುವಂತೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಕಾರಣಕ್ಕೆ ಪ್ರತೀಕಾರವಾಗಿ ಈ ಕೊಲೆ ನಡೆಸಲಾಗಿದೆ. ಇಂತಹ ಕೃತ್ಯಗಳನ್ನು ಸಭ್ಯ ಸಮಾಜ ಒಪ್ಪಲಾರದು” ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿ, ಆರೋಪಿಗಳಿಗೆ ಅಗತ್ಯವಿದ್ದರೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ನ್ಯಾಯಾಲಯ ಸೂಚಿಸಿದೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ:

2025ರ ಅಕ್ಟೋಬರ್ 8ರ ಮಧ್ಯರಾತ್ರಿ ನಗರದ ಹೊರವಲಯದ ರಾಣಾ ಪ್ರತಾಪ್ ಸಿಂಗ್ ವೃತ್ತದ ಸಮೀಪದ ಖಾಸಗಿ ಆಸ್ಪತ್ರೆ ಬಳಿ ವೆಂಕಟೇಶ ಕುರುಬರ್ ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಊಟ ಮುಗಿಸಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿದ್ದ ಆರೋಪಿಗಳು, ಅವರ ವಾಹನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಬಳಿಕ ಮಾರಕಾಯುಧಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದರು.

ತೀವ್ರವಾಗಿ ಗಾಯಗೊಂಡ ವೆಂಕಟೇಶರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಹಳೆಯ ದ್ವೇಷ ಹಾಗೂ ಮಾರುತಿ ಎಂಬ ವ್ಯಕ್ತಿಯ ಚಿಕಿತ್ಸೆಗೆ ವೆಂಕಟೇಶ ನೆರವಾಗಿದ್ದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದರು.

ಬೌರಿಂಗ್ ಆಸ್ಪತ್ರೆ ದುರಂತ: ಕಾಂಪೌಂಡ್ʼ ಗಳ ಬಳಿ ಯಾರೂ ಮಾರಾಟ ಮಾಡಬೇಡಿ – ಖರ್ಗೆ ಮನವಿ

ಕಲಬುರಗಿ: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ದುರಂತಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಭವಿಷ್ಯದಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, “ಕುಸಿದ ಕಾಂಪೌಂಡ್ ಹಳೆಯದಾಗಿತ್ತೇ ಅಥವಾ ಕಳಪೆ ಗುಣಮಟ್ಟದಲ್ಲಿ ನಿರ್ಮಿಸಲಾಗಿತ್ತೇ ಎಂಬ ಬಗ್ಗೆ ತನಿಖೆ ನಡೆಸಬೇಕು. ದುರಂತದಲ್ಲಿ ಹಾನಿಗೊಳಗಾದವರಿಗೆ ಹಾಗೂ ಅಲ್ಲಿ ವ್ಯಾಪಾರ ಮಾಡುತ್ತಿದ್ದ ಸಣ್ಣ ವ್ಯಾಪಾರಿಗಳಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು” ಎಂದು ಹೇಳಿದರು.

ಅದಲ್ಲದೆ ಭವಿಷ್ಯದಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು. ಕಾಂಪೌಂಡ್‌ಗಳ ಬಳಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಕಾಂಪೌಂಡ್​ಗಳ ಬಳಿ ಯಾರೂ ಮಾರಾಟ ಮಾಡಬೇಡಿ ಎಂದು ಖರ್ಗೆ ಮನವಿ ಮಾಡಿದರು.

ಪುಟ್ಪಾತ್ ಮೇಲೆ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗಳ ಸಮಸ್ಯೆಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಅವರನ್ನು ಅಲ್ಲಿಂದ ತೆರವುಗೊಳಿಸಲು ಹೋದರೆ, ‘ನಮ್ಮ ಹೊಟ್ಟೆ ಮೇಲೆ ಹೊಡೆಯುತ್ತಿದ್ದೀರಿ’ ಎನ್ನುತ್ತಾರೆ. ಆದರೆ ನಗರದ ನಾಗರಿಕರಿಗೆ ಅನಾನುಕೂಲವಾಗಬಾರದು.

ಮುನ್ಸಿಪಾಲಿಟಿಗಳು ಅವರಿಗೆ ಯೋಗ್ಯವಾದ ಸ್ಥಳಗಳನ್ನು ಒದಗಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದಂತೆ ನಾಳೆ ಇನ್ನೊಂದು ಕಡೆ ಆಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಿಗ್ ವರ್ಕರ್‌ಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಬೇಕು ಎಂದು ಖರ್ಗೆ ಒತ್ತಾಯಿಸಿದರು.

ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕುಡಿಯುವ ನೀರಿನ ಸಂಕಷ್ಟದ ಎಚ್ಚರಿಕೆ

0

ಮೈಸೂರು: ರಾಜ್ಯದ ಪ್ರಮುಖ ನೀರಿನ ಮೂಲಗಳಲ್ಲಿ ಒಂದಾದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಮಟ್ಟ ದಾಖಲೆಯಷ್ಟು ಕುಸಿತ ಕಂಡಿದ್ದು, ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ.

ಜಲಾಶಯದ ಸಂಗ್ರಹ ಮಟ್ಟ 94 ಅಡಿಗೆ ಇಳಿಕೆಯಾಗಿದ್ದು, ಒಟ್ಟು ಲಭ್ಯ ನೀರಿನ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ ನೀರನ್ನು ಅತ್ಯಂತ ಜಾಗರೂಕತೆಯಿಂದ ಬಳಕೆ ಮಾಡುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿಗಾವಳಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ 19.50 ಟಿಎಂಸಿಎಫ್‌ಟಿ ಮತ್ತು 9.25 ಟಿಎಂಸಿಎಫ್‌ಟಿ ನೀರು ಇದ್ದರೆ, ಈ ವರ್ಷ ಅದು 18.52 ಟಿಎಂಸಿಎಫ್‌ಟಿ ಮತ್ತು 6.23 ಟಿಎಂಸಿಎಫ್‌ಟಿ ಆಗಿದೆ.

ಸಾಮಾನ್ಯವಾಗಿ ಈ ಸಮಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ಇರುವುದಾದರೂ, ಈ ಬಾರಿ ತಾಪಮಾನ ಏರಿಕೆಯಿಂದ ನೀರಿನ ಆಳ ಕುಸಿತಗೊಂಡಿದೆ. ಇದರ ಪರಿಣಾಮವಾಗಿ ಪಾಚಿ ಬೆಳವಣಿಗೆ ಹೆಚ್ಚಾಗಿ ನೀರಿನ ಗುಣಮಟ್ಟ ಕುಸಿಯುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದರಿಂದ ನೀರಿನ ರುಚಿ ಮತ್ತು ಆರೋಗ್ಯದ ಮೇಲೆ ಪರಿಣಾಮ ಬಿದ್ದು, ನೀರಿನಿಂದ ಹರಡುವ ರೋಗಗಳ ಅಪಾಯವೂ ಹೆಚ್ಚಾಗಿದೆ.

ಮಾಜಿ ನೀರಾವರಿ ಕಾರ್ಯದರ್ಶಿ ಕ್ಯಾಪ್ಟನ್ ರಾಜಾ ರಾವ್ ಅವರ ಪ್ರಕಾರ, ಈಗಿನ ಪರಿಸ್ಥಿತಿ ಅತ್ಯಂತ ಎಚ್ಚರಿಕೆಯ ಹಂತದಲ್ಲಿದ್ದು, ನೀರಿನ ಮಿತ ಬಳಕೆ ಅನಿವಾರ್ಯವಾಗಿದೆ. ಹಾಗೆಯೇ ಕೆಎಸ್‌ಎನ್‌ಡಿಎಂಸಿ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಅವರು ನೀಡಿರುವ ಮಾಹಿತಿಯಂತೆ, ಪ್ರಸ್ತುತ ಲೈವ್ ಸ್ಟೋರೇಜ್ ಸುಮಾರು 10 ಟಿಎಂಸಿಎಫ್‌ಟಿ ಇದ್ದು, ಅದರಲ್ಲಿ ಬಹುಪಾಲು ನೀರನ್ನು ಬೆಂಗಳೂರು, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಬಳಸಲಾಗುತ್ತಿದೆ.

ಕೆಆರ್‌ಎಸ್‌ನಿಂದ ಟಿ.ಕೆ. ಹಳ್ಳಿ ವರೆಗೆ ನೀರು ಸಾಗಿಸುವ ವೇಳೆ ಸಹ ಆವಿಯಾಗುವ ಪ್ರಮಾಣ ಹೆಚ್ಚಾಗಿದ್ದು, ನೀರಿನ ನಷ್ಟವೂ ಗಮನಾರ್ಹವಾಗಿದೆ. ಜೂನ್ ಮಧ್ಯಭಾಗದವರೆಗೆ ಮಳೆ ಆರಂಭವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಸ್ಥಳ ಪರಿಶೀಲನೆ ಬಳಿಕ ಲೋಕಾಯುಕ್ತರು ಹೇಳಿದ್ದೇನು?

ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದೆ.

ಗುರುವಾರ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಆಡಳಿತಾತ್ಮಕ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳ ಪರಿಶೀಲನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಪೌಂಡ್ ಗೋಡೆಯ ಅಡಿಪಾಯ ಅತ್ಯಂತ ದುರ್ಬಲವಾಗಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದು ಹೇಳಿದರು.

“ಪ್ರತಿ ವರ್ಷ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತದೆ ಎಂಬುದು ಅಧಿಕಾರಿಗಳಿಗೆ ತಿಳಿದಿದ್ದರೂ, ಇಂತಹ ದುರ್ಬಲ ಗೋಡೆಯ ಪಕ್ಕದಲ್ಲೇ ಬೀದಿ ಬದಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಿರುವುದು ಸ್ಪಷ್ಟ ಬೇಜವಾಬ್ದಾರಿ. ಕೇವಲ ಒಂದು ಗಂಟೆ ಮಳೆಗೆ ಗೋಡೆ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟಿಸುತ್ತದೆ” ಎಂದು ಅವರು ಹೇಳಿದರು.

ಈ ಪ್ರಕರಣದಲ್ಲಿ ಕೆಳಹಂತದ ಸಿಬ್ಬಂದಿಯನ್ನು ಮಾತ್ರ ಹೊಣೆಗಾರರನ್ನಾಗಿ ಮಾಡದೇ, ಸಂಬಂಧಪಟ್ಟ ಉನ್ನತಾಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತರು ಸ್ಪಷ್ಟಪಡಿಸಿದರು.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಹಿರಿಯ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಮಳೆಗೆ ಹೊಸ ದಾಖಲೆ: 111 ಮಿ.ಮೀ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ನಗರದಲ್ಲಿ ಏಪ್ರಿಲ್ 29ರಂದು ಸುರಿದ ಆಲಿಕಲ್ಲು, ಗುಡುಗು ಮತ್ತು ಮಿಂಚಿನ ಸಹಿತ ಧಾರಾಕಾರ ಮಳೆ ಏಪ್ರಿಲ್ ತಿಂಗಳ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದೆ. ಸಂಜೆ ಒಂದೇ ಅವಧಿಯಲ್ಲಿ 111 ಮಿಲಿಮೀಟರ್ ಮಳೆಯಾಗಿದ್ದು, 2001ರ ದಾಖಲೆಗೂ ಸಮೀಪದ ಮಟ್ಟ ತಲುಪಿದೆ.

ನಗರದ ವಿವಿಧ ಭಾಗಗಳಲ್ಲಿ ಭಾರೀ ಮಳೆ ದಾಖಲಾಗಿದ್ದು, ಸಂಪಂಗಿರಾಮನಗರದಲ್ಲಿ 39 ಮಿ.ಮೀ, ಪುಲಕೇಶಿನಗರದಲ್ಲಿ 36.50 ಮಿ.ಮೀ, ಬೊಮ್ಮನಹಳ್ಳಿಯಲ್ಲಿ 31 ಮಿ.ಮೀ, ಕಾಟನ್ಪೇಟೆಯಲ್ಲಿ 29 ಮಿ.ಮೀ, ಎಚ್‌ಎಎಲ್ ವಿಮಾನ ನಿಲ್ದಾಣ ಪ್ರದೇಶದಲ್ಲಿ 25 ಮಿ.ಮೀ, ಬಿಟಿಎಂ ಲೇಔಟ್‌ನಲ್ಲಿ 22.50 ಮಿ.ಮೀ ಹಾಗೂ ಮಾರತ್ತಹಳ್ಳಿಯಲ್ಲಿ 18.50 ಮಿ.ಮೀ ಮಳೆಯಾಗಿದೆ.

ಹವಾಮಾನ ಇಲಾಖೆ ಮುಂದಿನ ಮೂರು ದಿನಗಳವರೆಗೆ ನಗರದಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೂ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಜಾರಿಯಾಗಿದೆ.

ಮಳೆಯಿಂದ ಸಂಭವಿಸಿದ ಅವಾಂತರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬೆಂಗಳೂರು ಮಹಾನಗರದಲ್ಲಿ ಮ್ಯಾನ್ಹೋಲ್ ಸ್ವಚ್ಛತೆ, ಅಪಾಯಕಾರಿ ಮರದ ಕೊಂಬೆಗಳ ತೆರವು ಮತ್ತು ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಂಡರ್‌ಪಾಸ್‌ಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು ಹಾಗೂ ಬೌರಿಂಗ್ ಆಸ್ಪತ್ರೆ ರೀತಿಯ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಬೆಂಗಳೂರು ಮಳೆಯ ಅವಾಂತರಕ್ಕೆ ಮೃತರ ಸಂಖ್ಯೆ 10ಕ್ಕೆ ಏರಿಕೆ: ಗೋಡೆ ಕುಸಿತ, ವಿದ್ಯುತ್ ಶಾಕ್, ಮೇಲ್ಚಾವಣಿ ಬಿದ್ದು ಸರಣಿ ದುರಂತ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಗಾಳಿಗೆ ಸಂಬಂಧಿಸಿದ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಾಳಿ-ಮಳೆಗೆ ಮನೆ ಮೇಲ್ಚಾವಣಿ ಕುಸಿದು ಮತ್ತೊಂದು ದುರಂತ ಸಂಭವಿಸಿದ್ದು, ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮನೆಯ ಮೇಲ್ಚಾವಣಿಗೆ ಗಾಳಿಯಿಂದ ಹಾರದಂತೆ ಇಡಲಾಗಿದ್ದ ಕಲ್ಲುಗಳು ಗಾಳಿಯ ತೀವ್ರತೆಗೆ ಸರಿದು ಬಿದ್ದಿದ್ದು, ಮಂಜುನಾಥ್ ಮಲಗಿದ್ದ ಸ್ಥಳದ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದರ ಜೊತೆಗೆ ನಗರದಲ್ಲಿ ಸರಣಿ ದುರಂತಗಳು ನಡೆದಿದ್ದು, ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಘಟನೆ ಅತ್ಯಂತ ಭೀಕರವಾಗಿದೆ. ಈ ಘಟನೆಯಲ್ಲಿ ಮಗು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಮೊಹಮ್ಮದ್ ಅಬ್ದುಲ್ (52), ಫಯಾಜ್ ಅಹ್ಮದ್ (39), ಮುಸಾವಿರ್ ಬೇಗಂ (6), ಸ್ಮಿತಾ (47), ಲತಾ (57), ನಸೀಮುಲ್ಲಾ (19) ಮತ್ತು ಸಲಾವುದ್ದೀನ್ ಅನ್ಸಾರಿ (36) ಸೇರಿದ್ದಾರೆ.

ಮಳೆಯಿಂದ ರಕ್ಷಣೆಗಾಗಿ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯಡಿ ಆಶ್ರಯ ಪಡೆದಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ ಯಾರಬ್ ನಗರ ಪ್ರದೇಶದಲ್ಲಿ ವಿದ್ಯುತ್ ಶಾಕ್ ತಗುಲಿ ಸೈಯದ್ ಸೂಫಿಯಾನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಬೈಕ್ ಪಾರ್ಕ್ ಮಾಡುವ ವೇಳೆ ವಿದ್ಯುತ್ ತಂತಿ ಅಥವಾ ಕಂಬದಿಂದ ವಿದ್ಯುತ್ ಹರಿದು ಈ ದುರಂತ ಸಂಭವಿಸಿದೆ.

ಇದೇ ರೀತಿಯಲ್ಲಿ ಜೆ.ಪಿ. ನಗರ ವ್ಯಾಪ್ತಿಯ ಮಿನಿ ಫಾರೆಸ್ಟ್ 15ನೇ ಕ್ರಾಸ್ ಬಳಿ ನಡೆದ ಮತ್ತೊಂದು ಘಟನೆಯಲ್ಲಿ ರಘು ಎಂಬ 30-35 ವರ್ಷದ ವ್ಯಕ್ತಿ ವಿದ್ಯುತ್ ಕಂಬದ ಬಳಿ ಬಿದ್ದಿದ್ದ ತಂತಿಗೆ ತಗುಲಿ ಸಾವನ್ನಪ್ಪಿದ್ದಾರೆ.

ನಗರದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಈ ಅವಘಡಗಳಿಂದ ನಾಗರಿಕರು ಆತಂಕಗೊಂಡಿದ್ದು, ಮಳೆಗಾಲದ ಸುರಕ್ಷತಾ ಕ್ರಮಗಳನ್ನು ತಕ್ಷಣ ಬಲಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುರಕ್ಷತೆ ಪರಿಶೀಲನೆಗೆ ಆದೇಶ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್ ಗೋಡೆಗಳ ಸಾಮರ್ಥ್ಯ ಪರಿಶೀಲನೆ ನಡೆಸುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಅವಘಡದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.

ಭವಿಷ್ಯದಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಬೌರಿಂಗ್, ವಿಕ್ಟೋರಿಯಾ, ಕೆ.ಸಿ. ಜನರಲ್ ಹಾಗೂ ಸಿ.ವಿ. ರಾಮನ್ ನಗರ ಆಸ್ಪತ್ರೆ ಸೇರಿದಂತೆ ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳ ಹಳೆಯ ಕಟ್ಟಡಗಳು ಮತ್ತು ಕಾಂಪೌಂಡ್ ಗೋಡೆಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಯ ಮುಖ್ಯ ಎಂಜಿನಿಯರ್‌ಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಜೊತೆಗೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತವೆ ಎಂದು ಪುನರುಚ್ಚರಿಸಿದ ಅವರು, ಜನರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದರು.

error: Content is protected !!