Home Blog

ಸಿಎಂ ಬದಲಾದರೂ ಉತ್ತಮ ಆಡಳಿತದ ನಂಬಿಕೆ ಇಲ್ಲ: ಕಾಂಗ್ರೆಸ್ ಬೆಳವಣಿಗೆ ಬಗ್ಗೆ ವಿಜಯೇಂದ್ರ ಟೀಕೆ

ಬಳ್ಳಾರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆದರೂ ಉತ್ತಮ ಆಡಳಿತ ಸಿಗುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಉಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳಗಿನ ಗೊಂದಲ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿದರೆ ಅದು ಮುಖ್ಯಮಂತ್ರಿಗಳ ಟಿಪ್ಪಣಿಯಲ್ಲೇ ಇರುತ್ತದೆ. ಸಿಎಂ ಬದಲಾವಣೆ ವಿಚಾರವನ್ನು ಬಿಜೆಪಿ ಯಾವುದೇ ರೀತಿಯಲ್ಲಿ ಬಳಸಿಕೊಳ್ಳುವುದಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಸ್ಥಿರ ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಬಿಜೆಪಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.

ಆದರೆ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಬೇಗ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ ಎಂದು ಟೀಕಿಸಿದ ಅವರು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್‌ನ ಒಳಕಚ್ಚಾಟದಿಂದ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.

ಕಳೆದ ಎರಡು-ಮೂರು ದಿನಗಳಿಂದ ನಡೆದಿರುವ ರಾಜಕೀಯ ಬೆಳವಣಿಗೆಗಳು ರಾಜ್ಯದಲ್ಲಿ ಅನಿಶ್ಚಿತ ವಾತಾವರಣ ನಿರ್ಮಾಣ ಮಾಡಿವೆ. ಮುಖ್ಯಮಂತ್ರಿ ರಾಜೀನಾಮೆ ಕುರಿತು ನಡೆಯುತ್ತಿರುವ ಚರ್ಚೆಗಳು ಜನರಲ್ಲಿ ಗೊಂದಲ ಸೃಷ್ಟಿಸಿವೆ ಎಂದು ಹೇಳಿದರು.

9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಚಿತ್ರಮಂದಿರ ಮಾಲೀಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಜೊತೆಗೆ ಜಾತಿ ನಿಂದನೆ ಹಾಗೂ ಆ್ಯಸಿಡ್ ದಾಳಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ 52 ವರ್ಷದ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಎನ್. ಮಂಜುನಾಥ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್ ಅಭಿಪ್ರಾಯವೇನು?

ಸಂತ್ರಸ್ತೆ ನೀಡಿರುವ ಹೇಳಿಕೆಗಳು ಹಾಗೂ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಆರೋಪಿಯ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸಾಕ್ಷ್ಯಾಧಾರಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯಪಟ್ಟಿದೆ.

ದೂರು ದಾಖಲಿಸಿದ ಹಿನ್ನೆಲೆ ಆರೋಪಿಯು ಕೆಲವರನ್ನು ಮನೆಗೆ ಕಳುಹಿಸಿ ಜಾತಿ ನಿಂದನೆ ಮಾಡಿಸಿ ಬೆದರಿಕೆ ಹಾಕಿರುವ ಆರೋಪವೂ ಇದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಅಪರಾಧ ದೃಢಪಟ್ಟರೆ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಆದರೆ, ಆರೋಪಿಯು ವಿಚಾರಣಾ ನ್ಯಾಯಾಲಯದಲ್ಲಿ ನಿಯಮಿತ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ಅಂತಹ ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ಹಿನ್ನೆಲೆ

ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಹಾಗೂ ಕೃಷಿಕನಾಗಿರುವ ಮಂಜುನಾಥ, 9ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಶಾಲೆ ಬಳಿ ನಿಂತು ಆಕೆಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನಿರಂತರ ಕಿರುಕುಳದಿಂದ ಬೇಸತ್ತ ಬಾಲಕಿ 2024-25ನೇ ಸಾಲಿನಲ್ಲಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು ಎಂದು ತಿಳಿದುಬಂದಿದೆ.

ಬಾಲಕಿ ಪೊಲೀಸರಿಗೆ ದೂರು ನೀಡಲು ಮುಂದಾದ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ, 2026ರ ಮಾರ್ಚ್ 14ರಂದು ಬಾಲಕಿಯ ಮನೆ ಬಳಿ ತೆರಳಿ ಜಾತಿ ನಿಂದನೆ ಮಾಡಿದ್ದಲ್ಲದೆ, ತನ್ನೊಂದಿಗೆ ಬಂದ ಕೆಲವರ ಮೂಲಕ ಬಾಲಕಿ ಹಾಗೂ ಆಕೆಯ ಅಜ್ಜಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಹಾಗೂ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ಬಾಲಕಿಗೆ ನಿರಂತರವಾಗಿ ಕರೆ ಮಾಡಿ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಲ್ಲದೆ, ಆಕೆಯ ಸ್ನೇಹಿತೆಯರನ್ನೂ ಕರೆತರಲು ಒತ್ತಾಯಿಸಿದ್ದಾನೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ವಾದ-ಪ್ರತಿವಾದ

ವಿಚಾರಣೆ ವೇಳೆ ಆರೋಪಿಯ ಪರ ವಕೀಲರು, ಬಾಲಕಿ ಮತ್ತು ಆಕೆಯ ಸ್ನೇಹಿತರು ಸಿನಿಮಾ ಟಿಕೆಟ್ ವಿಚಾರವಾಗಿ ಆರೋಪಿಯನ್ನು ಸಂಪರ್ಕಿಸುತ್ತಿದ್ದರು. ಬಳಿಕ ಹಣ ಹಾಗೂ ಆಸ್ತಿ ಕಸಿದುಕೊಳ್ಳಲು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸುಳ್ಳು ದೂರು ನೀಡಲಾಗಿದೆ ಎಂದು ವಾದಿಸಿದರು.

ಇದಕ್ಕೆ ಸರ್ಕಾರದ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆರೋಪಿಯ ವಿರುದ್ಧ ಸ್ಪಷ್ಟ ಸಾಕ್ಷ್ಯಗಳಿವೆ. ಬಾಲಕಿ ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 18ರ ಅನ್ವಯ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮೊನ್ನೆ ಹೈಕಮಾಂಡ್ ನಾಯಕರು ನನಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಅವರು ಹೇಳಿದ ತಕ್ಷಣವೇ ನಾನು ‘ನಾಡಿದ್ದು ಕೊಡುತ್ತೇನೆ’ ಎಂದು ತಿಳಿಸಿದ್ದೆ. ಅದರಂತೆ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಹೇಳಿದರು.

“ನಾನು ಮೊದಲಿನಿಂದಲೂ ಹೇಳುತ್ತಿದ್ದೆ, ಹೈಕಮಾಂಡ್ ಯಾವಾಗ ಸೂಚನೆ ನೀಡುತ್ತದೆಯೋ ಆಗ ನಾನು ರಾಜೀನಾಮೆ ಕೊಡುತ್ತೇನೆ ಎಂದು. ಈಗ ಅದೇ ರೀತಿಯಲ್ಲಿ ನಡೆದುಕೊಂಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ರಾಜೀನಾಮೆ ಪ್ರಕ್ರಿಯೆ ಕುರಿತು ವಿವರಿಸಿದ ಅವರು, ನಾನು ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ. ಆದರೆ ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ ಎಂದು ಅಲ್ಲಿನ ಕಚೇರಿಯಲ್ಲಿ ತಿಳಿಸಿದರು. ಅವರು ಇಂದು ರಾತ್ರಿ ವಾಪಸ್ ಬರುತ್ತಾರೆ ಎಂದರು. ಹೀಗಾಗಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜ್ಯಪಾಲರು ಮರಳಿದ ಬಳಿಕ ಸಂವಿಧಾನದ ಪ್ರಕಾರ ಪ್ರಕ್ರಿಯೆ ನಡೆಸಿ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಮ್ಮ ಪಕ್ಷ 135ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಕೂಡ ನಮ್ಮ ಬೆಂಬಲದಲ್ಲಿದ್ದಾರೆ. ರಾಜ್ಯದಲ್ಲಿ ನಮಗೆ ಸ್ಪಷ್ಟ ಬಹುಮತವಿದೆ ಎಂದು ಹೇಳಿದರು.

“ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಮುಂದಿನ ಮುಖ್ಯಮಂತ್ರಿಗೆ ಆಡಳಿತ ನಡೆಸಲು ಅವಕಾಶ ಕಲ್ಪಿಸುವುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ಯಾವುದೇ ಗೊಂದಲವಿಲ್ಲದೆ ಮುಂದಿನ ಸರ್ಕಾರದ ರಚನೆಗೆ ಅವಕಾಶ ಮಾಡಿಕೊಡಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

‘ಒಂದು ಮಾತು ಆಡಿದ್ರೆ ಆಟವೇ ಹಾಳು!’: ಸಿಎಂ ಕುರ್ಚಿ ಮುನ್ನ ಡಿಕೆಶಿಗೆ ಸೈಲೆನ್ಸ್ ವಾರ್ನಿಂಗ್

0

ತುಮಕೂರು: ಕರ್ನಾಟಕ ರಾಜಕೀಯದ ಅತ್ಯಂತ ನಿರ್ಣಾಯಕ ಘಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೊಣವಿನಕೆರೆ ಅಜ್ಜಯ್ಯರಿಂದ ಮಹತ್ವದ ಸೂಚನೆ ಸಿಕ್ಕಿದೆ. “ಈಗ ಮಾತಾಡಿದರೆ ಎಲ್ಲವೂ ಕೈ ತಪ್ಪಬಹುದು” ಎಂಬ ಸ್ಪಷ್ಟ ಎಚ್ಚರಿಕೆಯನ್ನು ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ತೀವ್ರ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಪ್ರಮಾಣವಚನ ಪೂರ್ಣಗೊಳ್ಳುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಶ್ರೀಗಳು ಸೂಚಿಸಿದ್ದಾರೆ. “ಮಾತು ಆಡಿದರೆ ಮುತ್ತು ಒಡೆದು ಹೋಗುತ್ತದೆ” ಎಂಬ ರೂಪಕದ ಮೂಲಕ ರಾಜಕೀಯವಾಗಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಡಿಕೆಶಿಗೆ ಸಂದೇಶ ರವಾನಿಸಲಾಗಿದೆ.

ಈ ಸೂಚನೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸದೆ ನೇರವಾಗಿ ತೆರಳಿದ್ದು ಗಮನ ಸೆಳೆದಿದೆ. ಅಲ್ಲದೆ, ಡಿಕೆಶಿ ಆಪ್ತ ವಲಯಕ್ಕೂ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಇದೀಗ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಡಿಕೆ ಶಿವಕುಮಾರ್ ಅವರನ್ನು ಖಾಸಗಿವಾಗಿ ಭೇಟಿಯಾಗಲಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

ದೆಹಲಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಅವರು ನೊಣವಿನಕೆರೆ ಮಠಕ್ಕೆ ಎರಡು ಬಾರಿ ಭೇಟಿ ನೀಡಿ ವಿಶೇಷ ಆಶೀರ್ವಾದ ಪಡೆದಿದ್ದರು. “ಅಜ್ಜಯ್ಯ ಹೇಳಿದ ಮಾತು ನನಗೆ ಅಂತಿಮ” ಎಂದು ಡಿಕೆಶಿ ಈ ಹಿಂದೆ ಹೇಳಿದ್ದನ್ನು ಇದೀಗ ಅವರ ಮೌನವೇ ಮತ್ತೆ ಸಾಬೀತುಪಡಿಸುತ್ತಿದೆ.

ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಸಿಗಂದೂರು ಸೇತುವೆ ಬಳಿ ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಉಮೇಶ್ (35) ಎಂದು ಗುರುತಿಸಲಾಗಿದೆ. ಅವರು ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕಿನ ಗಲಗಲಿ ಗ್ರಾಮದ ನಿವಾಸಿಯಾಗಿದ್ದರು.

ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ದೇವಿಯ ದರ್ಶನ ಮುಗಿಸಿಕೊಂಡ ಬಳಿಕ ಸೇತುವೆ ವೀಕ್ಷಣೆಗಾಗಿ ತೆರಳಿದ್ದ ಉಮೇಶ್, ಬಳಿಕ ಈಜಲು ನೀರಿಗೆ ಇಳಿದ ವೇಳೆ ಆಕಸ್ಮಿಕವಾಗಿ ಮುಳುಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

“ಸಿದ್ದರಾಮಯ್ಯರನ್ನು ಕೆಳಗಿಳಿಸಿದ್ರೆ ಇತಿಹಾಸ ಮರುಕಳಿಸುತ್ತದೆ!”: ಕಾಂಗ್ರೆಸ್‌ಗೆ ಅಹಿಂದ ನಾಯಕನ ಖಡಕ್ ವಾರ್ನಿಂಗ್

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಅಹಿಂದ ಮುಖಂಡ ಪುಟ್ಟೇಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

“ರಾತ್ರೋರಾತ್ರಿ ಸಿಎಂ ಬದಲಿಸುವ ಕಾಂಗ್ರೆಸ್ ನಿರ್ಧಾರವನ್ನು ನಾವು ವಿರೋಧಿಸುತ್ತೇವೆ. ಇಂತಹ ನಿರ್ಧಾರಗಳಿಂದ ಪಕ್ಷಕ್ಕೆ ಯಾವ ಪರಿಣಾಮ ಎದುರಾಗುತ್ತದೆ ಅನ್ನೋದು ಕಾಂಗ್ರೆಸ್‌ಗೆ ಚೆನ್ನಾಗಿ ಗೊತ್ತಿದೆ” ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಇನ್ನೂ ಎರಡು ವರ್ಷಗಳ ಕಾಲ ಅಧಿಕಾರ ಮುಂದುವರಿಸಲು ಅವಕಾಶ ನೀಡಬೇಕು. ಅವರು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಕೈಗೊಂಡಿರುವ ಈ ರಾಜಕೀಯ ಹೆಜ್ಜೆ ಪಕ್ಷಕ್ಕೇ ದೊಡ್ಡ ಹಿನ್ನಡೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಹಿಂದೆ ದೇವರಾಜ ಅರಸು, ಬಂಗಾರಪ್ಪ ಮತ್ತು ವೀರಪ್ಪ ಮೊಯ್ಲಿ ಅವರನ್ನು ಅಧಿಕಾರದಿಂದ ತೆಗೆದ ಬಳಿಕ ಕಾಂಗ್ರೆಸ್ ದುರ್ಬಲಗೊಂಡಿತ್ತು. ಆ ಇತಿಹಾಸವನ್ನು ಪಕ್ಷ ಮರೆತಿರಬಾರದು ಎಂದು ಪುಟ್ಟೇಗೌಡ ಹೇಳಿದರು.

“ಅಹಿಂದ ಸಮುದಾಯದ ಬೆಂಬಲ ಕಾಂಗ್ರೆಸ್‌ಗೆ ಎಷ್ಟು ಮುಖ್ಯ ಅನ್ನೋದು ಅವರಿಗೆ ಗೊತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಬೇಕು” ಎಂದು ಆಗ್ರಹಿಸಿದರು.

‘ಕಾವೇರಿ’ಯಲ್ಲಿ ಭಾವುಕ ವಿದಾಯ… ಕೊನೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಕೊನೆಗೂ ಅಧಿಕೃತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಎರಡನೇ ಅವಧಿಯ ಆಡಳಿತಕ್ಕೆ ತೆರೆ ಎಳೆದಿದ್ದಾರೆ.

ರಾಜೀನಾಮೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರೊಂದಿಗೆ ಕೊನೆಯ ಉಪಹಾರ ಸಭೆ ನಡೆಯಿತು. ಸಾಮಾನ್ಯವಾಗಿ ರಾಜಕೀಯ ಚಟುವಟಿಕೆಗಳಿಂದ ಕಿಕ್ಕಿರಿದಿರುತ್ತಿದ್ದ ಕಾವೇರಿ ನಿವಾಸ ಇಂದು ಭಾವುಕ ವಾತಾವರಣಕ್ಕೆ ಸಾಕ್ಷಿಯಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ಸಚಿವರು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ರಾಜಕೀಯ ಪಯಣವನ್ನು ನೆನೆದು ಭಾವುಕರಾದರು. ಕೆಲ ಸಚಿವರ ಕಣ್ಣಂಚು ತೇವಗೊಂಡಿತ್ತು. ಇದೇ ವೇಳೆ ಸಹೋದ್ಯೋಗಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಬಳಿಕ ಮಧ್ಯಾಹ್ನ ಲೋಕಭವನದತ್ತ ತೆರಳಿದರು.

ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸಂವಿಧಾನಾತ್ಮಕ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರ ಅಧಿಕೃತ ಅನುಮೋದನೆಯ ಬಳಿಕವೇ ರಾಜೀನಾಮೆ ಜಾರಿಗೆ ಬರಲಿದೆ.

ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದ್ದು, ಬಳಿಕ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಸಂದೇಶಕ್ಕೆ ಗೌರವ ಸೂಚಿಸಿ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಈ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಅಧ್ಯಾಯವೊಂದು ಅಂತ್ಯ ಕಂಡಂತಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರ ದಾಳಿ! ಬಳ್ಳಾರಿಯಲ್ಲಿ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ಪತ್ತೆ

0

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಾಟದ ದೊಡ್ಡ ಜಾಲವೊಂದು ಪೊಲೀಸರ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಕುರಗೋಡು ಪೊಲೀಸರು ನಡೆಸಿದ ದಾಳಿಯಲ್ಲಿ 5.52 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ, ಆರೋಪಿಗಳು ಮೊದಲು ಲೇಔಟ್ ಪ್ರದೇಶದಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬಳಿಕ ಲಾರಿಗೆ ತುಂಬಿ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.

ದಂಧೆಯಲ್ಲಿ ಭಾಗಿಯಾಗಿರುವ ಯರ್ರಿಸ್ವಾಮಿ ಮತ್ತು ಉಮಾಶಂಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಅಕ್ರಮ ಪಡಿತರ ವಸ್ತುಗಳ ಸಾಗಾಟ ಮತ್ತು ಕಾಳಬಜಾರ್ ವಿರುದ್ಧ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಇತಿಹಾಸ ನಿರ್ಮಾಣ! AI ಮೂಲಕ ಕನ್ನಡಕ್ಕೆ ಬಂದ ಮೊದಲ ದೊಡ್ಡ ಇತಿಹಾಸ ಕೃತಿ ಬಿಡುಗಡೆಗೆ ಸಜ್ಜು

0

ಮೈಸೂರು: ಇದೀಗ ಸಂಸ್ಕೃತಿ ಮತ್ತು ಕೃತಕ ಬುದ್ಧಿಮತ್ತೆಯ ಹೊಸ ಯುಗಕ್ಕೆ ವೇದಿಕೆಯಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಎಐ ತಂತ್ರಜ್ಞಾನ ಬಳಸಿ ಕನ್ನಡಕ್ಕೆ ಅನುವಾದಗೊಂಡಿರುವ ಐತಿಹಾಸಿಕ ಕೃತಿ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ.

ಖ್ಯಾತ ಇತಿಹಾಸಕಾರ ವಿಕ್ರಮ್ ಸಂಪತ್ ಬರೆದಿರುವ ‘My Name Is Gauhar Jaan: The Life and Times of a Musician’ ಪುಸ್ತಕವನ್ನು ‘TransLit’ ಎಂಬ ಎಐ ತಂತ್ರಜ್ಞಾನ ಬಳಸಿ ಕನ್ನಡಕ್ಕೆ ತರ್ಜುಮೆ ಮಾಡಲಾಗಿದೆ. ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಕೃತಿಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಅಭಿವೃದ್ಧಿಪಡಿಸಿರುವ ಈ ತಂತ್ರಜ್ಞಾನ ಕೇವಲ ಕೆಲವೇ ವಾರಗಳಲ್ಲಿ ಅನುವಾದ ಕಾರ್ಯ ಪೂರ್ಣಗೊಳಿಸಿದೆ. ಶೇಕಡಾ 80ರಷ್ಟು ನಿಖರತೆಯೊಂದಿಗೆ ಎಐ ಅನುವಾದ ಮಾಡಿದ್ದು, ಬಳಿಕ ಮಾನವ ಸಂಪಾದಕರು ಅಂತಿಮ ತಿದ್ದುಪಡಿ ನಡೆಸಿದ್ದಾರೆ.

ಗೌಹರ್ ಜಾನ್ ಭಾರತೀಯ ಸಂಗೀತ ಇತಿಹಾಸದ ಅಪರೂಪದ ಹೆಸರು. 1902ರಲ್ಲಿ ಗ್ರಾಮೊಫೋನ್‌ನಲ್ಲಿ ಧ್ವನಿ ಮುದ್ರಿಸಿದ ಭಾರತದ ಮೊದಲ ಮಹಿಳಾ ಕಲಾವಿದೆ ಎಂಬ ಕೀರ್ತಿ ಅವರಿಗೆ ಸಲ್ಲುತ್ತದೆ. ತಮ್ಮ ಜೀವನದ ಕೊನೆಯ ಹಂತದಲ್ಲಿ ಮೈಸೂರು ಮಹಾರಾಜರ ಆಶ್ರಯ ಪಡೆದಿದ್ದ ಅವರು, 1930ರಲ್ಲಿ ಮೈಸೂರಿನಲ್ಲೇ ಕೊನೆಯುಸಿರೆಳೆದಿದ್ದರು.

ಇದೀಗ ಅವರ ಜೀವನ ಚರಿತ್ರೆ ಆಧುನಿಕ ಎಐ ತಂತ್ರಜ್ಞಾನದ ನೆರವಿನಿಂದ ಕನ್ನಡದಲ್ಲಿ ಪ್ರಕಟವಾಗುತ್ತಿರುವುದು ಭಾರತೀಯ ಪ್ರಕಾಶನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತಿದೆ.

ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಾಗಿ ಘೋಷಿಸಿರುವ ಬೆನ್ನಲ್ಲೇ ಆಡಳಿತ ವಲಯದಲ್ಲಿ ಮಹತ್ವದ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ನಡುವೆಯೇ ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಸಿಎಂ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಾಗಿ ನಿಯೋಜಿಸಲಾಗಿದೆ. ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ. ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್. ಕೃಷ್ಣಮೂರ್ತಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ನೇಮಿಸಲಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ. ಶಿವಸ್ವಾಮಿ ಅವರನ್ನು ಕ್ರೈಸ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

2023ರಲ್ಲಿ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ತಮ್ಮ ಆಡಳಿತ ತಂಡವನ್ನು ಬಲಪಡಿಸುವ ಉದ್ದೇಶದಿಂದ ಆಪ್ತ ಅಧಿಕಾರಿಗಳನ್ನು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿದ್ದರು. ಆ ಸಂದರ್ಭದಲ್ಲಿ ಡಾ. ವೆಂಕಟೇಶಯ್ಯ ಅವರನ್ನು ಗುತ್ತಿಗೆ ಆಧಾರದ ಮೇಲೆ ಸಿಎಂ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಜೊತೆಗೆ ಹಿರಿಯ ಕೆಎಎಸ್ ಅಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರಿಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು.

ಸಾಮಾನ್ಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಮುಖ ಆಡಳಿತಾತ್ಮಕ ಬದಲಾವಣೆಗಳು ನಡೆಯುವುದು ರೂಢಿಯಾಗಿದೆ. ಆದರೆ, ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನವೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿರುವುದು ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

error: Content is protected !!