Home Blog

‘2028ರಲ್ಲಿ ಡಿಕೆಶಿ ಸಿಎಂ ಆಗೋದು ಖಚಿತ’: ಕಾಂಗ್ರೆಸ್ ನಾಯಕತ್ವದ ಬಗ್ಗೆ ಸಚಿವ ತಂಗಡಗಿ ವಿಶ್ವಾಸ

0

ಕೊಪ್ಪಳ: 2028ರ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಮುಂದುವರಿಯಲಿದೆ. ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಶಿವರಾಜ್ ಎಸ್. ತಂಗಡಗಿ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್‌ನ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ವ್ಯಕ್ತಪಡಿಸುತ್ತಿರುವುದು ಸಹಜ. ಪ್ರತಿಯೊಬ್ಬ ಹಿರಿಯ ನಾಯಕನಿಗೂ ತನ್ನ ರಾಜಕೀಯ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ. ಆದರೆ 2028ರಲ್ಲೂ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್ ಅವರದ್ದೇ ಎಂದು ತಂಗಡಗಿ ಹೇಳಿದ್ದಾರೆ.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಸಚಿವ ಸ್ಥಾನದ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಹಿಟ್ನಾಳ್ ಮುಂದಿನ ದಿನಗಳಲ್ಲಿ ಸಚಿವರಾಗುವ ವಿಶ್ವಾಸವಿದೆ ಎಂದರು. ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಅಸಮಾಧಾನ ಅಥವಾ ಮುನಿಸಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡ ತಂಗಡಗಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಇದೀಗ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಗ್ಯಾರಂಟಿ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ ಅವರು, ತಮ್ಮ ಪಕ್ಷದೊಳಗಿನ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳುವಂತೆ ಬಿಜೆಪಿಗೆ ಸಲಹೆ ನೀಡಿದರು.

ಅಶೋಕ್, ಸುನೀಲ್ ಕುಮಾರ್ ಹಾಗೂ ಸಿ.ಟಿ. ರವಿ ಅವರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳಿವೆ ಎಂದು ಆರೋಪಿಸಿದ ತಂಗಡಗಿ, ಬಿಜೆಪಿ ತನ್ನದೇ ಪಕ್ಷದ ಸಮಸ್ಯೆಗಳನ್ನು ಸರಿಪಡಿಸಿಕೊಂಡ ಬಳಿಕ ಕಾಂಗ್ರೆಸ್ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು.

2028ರಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ, ಡಿಕೆಶಿ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ: ಸಚಿವ ತಂಗಡಗಿ

0

ಕೊಪ್ಪಳ: 2028ರ ವಿಧಾನಸಭಾ ಚುನಾವಣೆಯ ಬಳಿಕವೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ತಂಗಡಗಿ, 2028ರ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿರುವುದಾಗಿ ಕಾಂಗ್ರೆಸ್‌ನ ಹಿರಿಯ ನಾಯಕರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.

ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಆದರೆ 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ತಂಗಡಗಿ ಹೇಳಿದರು.

ಕೊಪ್ಪಳ ಜಿಲ್ಲೆಯ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಚಿವ ಸ್ಥಾನಕ್ಕಾಗಿ ಆಕಾಂಕ್ಷೆ ವ್ಯಕ್ತಪಡಿಸಿರುವ ವಿಚಾರಕ್ಕೂ ಸಚಿವ ತಂಗಡಗಿ ಪ್ರತಿಕ್ರಿಯಿಸಿದರು. ಹಿಟ್ನಾಳ್ ಅವರು ಸಚಿವ ಸ್ಥಾನ ಪಡೆಯುವ ಆಕಾಂಕ್ಷೆ ಹೊಂದಿದ್ದರು. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಂಗಡಗಿ ಹೇಳಿದರು.

ಜಿಲ್ಲೆಯ ಶಾಸಕರ ನಡುವೆ ಯಾವುದೇ ಮುನಿಸಿಲ್ಲ. ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ತಂಗಡಗಿ, ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ಮಾದರಿ ಎಂದು ಹೇಳಿದ ಅವರು, ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಟೀಕೆ-ಟಿಪ್ಪಣಿ ಮಾಡಿದ್ದ ಬಿಜೆಪಿಯವರು ಇದೀಗ ಬಿಜೆಪಿ ನೇತೃತ್ವದ ಸರ್ಕಾರಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಇದೇ ರೀತಿಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳನ್ನೂ ಪ್ರಸ್ತಾಪಿಸಿದ ತಂಗಡಗಿ, “ಬಿಜೆಪಿಯಲ್ಲಿ ಅಶೋಕ್ ಅವರನ್ನು ಕಂಡರೆ ಸುನೀಲ್ ಕುಮಾರ್ ಅವರಿಗೆ ಆಗುವುದಿಲ್ಲ, ಸುನೀಲ್ ಕುಮಾರ್ ಅವರನ್ನು ಕಂಡರೆ ಸಿ.ಟಿ. ರವಿ ಅವರಿಗೆ ಆಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ಮೊದಲು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ. ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಶಿವರಾಜ್ ಎಸ್. ತಂಗಡಗಿ ತಿರುಗೇಟು ನೀಡಿದರು.

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

0

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಮಹಿಳಾ ಸಚಿವ ಸ್ಥಾನವನ್ನು ಸದ್ಯ ಮುಖ್ಯಮಂತ್ರಿ ನಿರ್ವಹಿಸಲಿದ್ದಾರೆ. ಮೂವರೂ ಸಮರ್ಥರಾಗಿರುವುದರಿಂದ ಯಾರನ್ನು ಆಯ್ಕೆ ಮಾಡಬೇಕು ಎಂಬ ವಿಚಾರದಲ್ಲಿ ಗೊಂದಲವಿದ್ದು, ಈ ಕಾರಣದಿಂದ ನಿರ್ಧಾರ ವಿಳಂಬವಾಗುತ್ತಿದೆ ಎಂದು ಹೇಳಿದರು.

ಮಹಿಳಾ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವವರೆಗೆ ಮುಖ್ಯಮಂತ್ರಿ ಖಾತೆಯನ್ನು ನಿರ್ವಹಿಸಲಿದ್ದಾರೆ. ಪಕ್ಷವು ಮೂವರಲ್ಲಿ ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡುತ್ತದೆಯೋ, ಅವರ ಪರವಾಗಿ ನಾವೆಲ್ಲರೂ ನಿಲ್ಲುತ್ತೇವೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಖಾತೆ ಹಂಚಿಕೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠ ಹಿಡಿದಿದ್ದರೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಧಿವೇಶನ ಮುಗಿದ ಬಳಿಕ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಜಮೀರ್‌ ಅಹಮದ್‌ ಅವರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಹಿಂದೇಟು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ಜಮೀರ್‌ ಅವರು ತಮ್ಮ ಪತ್ರದಲ್ಲಿ ಬಿಬಿಎಂಪಿ ಚುನಾವಣೆ ವಿಚಾರದ ಬಗ್ಗೆ ಬರೆದಿದ್ದಾರೆ. ಈ ಕುರಿತು ಅವರನ್ನೇ ಕೇಳಬೇಕು ಎಂದು ಹೇಳಿದರು.

ಬಿಜೆಪಿಯವರು ಮಾಡುತ್ತಿರುವ ಆರೋಪಗಳ ಕುರಿತು ಮಾತನಾಡಿದ ಅವರು, ಬಿಜೆಪಿಯವರ ಕಚೇರಿಯಲ್ಲಿಯೇ ಬಿಜೆಪಿ ನಾಯಕರು ಧ್ವಜ ಹಾರಿಸುವುದಿಲ್ಲ. ಹೀಗಿರುವಾಗ ನಮ್ಮ ಮೇಲೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.

ಕಳೆದ 70 ವರ್ಷಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ಹಿಂದೇಟು ಹಾಕುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದ ಸಚಿವರಿದ್ದು, ಈಗಾಗಲೇ ಅವರ ಹಾಗೂ ಸರ್ಕಾರದ ಗಮನಕ್ಕೆ ವಿಷಯ ಬಂದಿದೆ ಎಂದು ತಿಳಿಸಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಬೇಕು ಎನ್ನುವುದು ಬಹಳ ದಿನಗಳ ಬೇಡಿಕೆಯಾಗಿದೆ. ಆದರೆ, ಪಾಲಿಕೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿಂದೆ ತಾವು ಹಾಗೂ ಜಿಲ್ಲಾಧಿಕಾರಿಗಳು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಬಾರಿ ಸಲಹೆಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಕಳೆದ ಮೂರು ತಿಂಗಳಿನಿಂದ ಸಭೆ ನಡೆಸಿಲ್ಲ. ಉದ್ದೇಶಪೂರ್ವಕವಾಗಿಯೇ ಸಭೆ ನಡೆಸುತ್ತಿಲ್ಲ ಎಂಬ ಅನುಮಾನವಿದೆ. ಈ ವಿಚಾರದಲ್ಲಿ ಮಾಧ್ಯಮಗಳು ಬೆಳಕು ಚೆಲ್ಲಬೇಕು ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

4 ಸಾರಿಗೆ ನಿಗಮಗಳಿಂದ 15 ಸಾವಿರಕ್ಕೂ ಹೆಚ್ಚು ಹೊಸ ಬಸ್ʼಗಳ ಖರೀದಿಗೆ ಚಾಲನೆ: ಬೈರತಿ ಸುರೇಶ್

0

ಚಿಕ್ಕಬಳ್ಳಾಪುರ: ರಾಜ್ಯದ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನವು ಬ್ರಿಟಿಷರ ದಾಸ್ಯದಿಂದ ಭಾರತ ಮುಕ್ತಗೊಂಡ ಐತಿಹಾಸಿಕ ದಿನ. ನಮ್ಮದೇ ಸಂವಿಧಾನ ಹಾಗೂ ನಮ್ಮದೇ ಆಶೋತ್ತರಗಳಿಗೆ ರೆಕ್ಕೆ ನೀಡಿದ ದಿನ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳ ಖರೀದಿ

ತಾವು ಸಾರಿಗೆ ಸಚಿವರಾದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸುವ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ₹286 ಕೋಟಿ ವೆಚ್ಚದಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲಾಗಿದೆ ಎಂದು ತಿಳಿಸಿದರು.

ಇದರ ಜೊತೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿರುವ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಹಾಗೂ ಈಗಿರುವ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು 15 ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಹೊಸ ಬಸ್‌ಗಳನ್ನು ಖರೀದಿಸಿ, ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಬೈರತಿ ಸುರೇಶ್ ತಿಳಿಸಿದರು.

ಇ-ಖಾತೆ ಸುಲಭಗೊಳಿಸಲು ಕ್ರಮ

ಈ ಹಿಂದೆ ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದ ಆರನೇ ಗ್ಯಾರಂಟಿಯಾದ ಭೂ-ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ (KTCP Act), 1961ರಲ್ಲಿ ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಬೈರತಿ ಸುರೇಶ್ ಹೇಳಿದರು.

ಎಲ್ಲರಿಗೂ ಸುಲಭವಾಗಿ ಇ-ಖಾತೆ ದೊರೆಯುವಂತೆ ಇ-ಖಾತೆ ರೋಲ್‌ಔಟ್‌ ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಲು ಅಗತ್ಯ ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದರು.

ದೇವರಮನೆ ಬೆಟ್ಟಕ್ಕೆ ಪ್ರವಾಸ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ!

0

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಬೆಟ್ಟಕ್ಕೆ ವೀಕೆಂಡ್‌ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 26 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ನರೇಶ್ ಎಂದು ಗುರುತಿಸಲಾಗಿದೆ.

ನರೇಶ್‌ ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ವೀಕೆಂಡ್‌ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಬೆಟ್ಟಕ್ಕೆ ಬೈಕ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು.

ದೇವರಮನೆ ಬೆಟ್ಟದ ಸೌಂದರ್ಯ ಸವಿದ ಬಳಿಕ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದ ವೇಳೆ ಮಾರ್ಗ ಮಧ್ಯೆ ತುಂತುರು ಮಳೆ ಆರಂಭವಾಗಿದೆ. ಈ ವೇಳೆ ಮಳೆಯಿಂದ ರಕ್ಷಿಸಿಕೊಳ್ಳಲು ಕೋಟ್‌ ಹಾಕಿಕೊಳ್ಳಲು ನರೇಶ್‌ ಬೈಕ್‌ ನಿಲ್ಲಿಸಿದ್ದಾರೆ. ಕೋಟ್‌ ಹಾಕಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ನರೇಶ್‌ ಅವರ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಸಮಾಜ ಸೇವಕ ಆರೀಫ್‌ ಅವರ ಆಂಬುಲೆನ್ಸ್‌ ಮೂಲಕ ಮೂಡಿಗೆರೆ ತಾಲೂಕಿನ ಬಣಕಲ್‌ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನರೇಶ್‌ ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ನರೇಶ್‌ ಮೃತಪಟ್ಟಿರುವುದರಿಂದ ಅವರ ಸ್ನೇಹಿತರು ಕಣ್ಣೀರಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಣಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

2027ರ IPLʼನಲ್ಲಿ ಹಾರ್ದಿಕ್ ಪಾಂಡ್ಯ ಯಾವ ತಂಡ ಸೇರಲಿದ್ದಾರೆ? ಭವಿಷ್ಯ ನುಡಿದ ರವಿಚಂದ್ರನ್ ಅಶ್ವಿನ್

ನವದೆಹಲಿ: 2027ರ ಐಪಿಎಲ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಯಾವ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂಬ ಚರ್ಚೆ ಇದೀಗ ಕ್ರಿಕೆಟ್ ವಲಯದಲ್ಲಿ ತೀವ್ರವಾಗಿದೆ. ಮುಂಬೈ ಇಂಡಿಯನ್ಸ್ ತಂಡದಿಂದ ಪಾಂಡ್ಯ ಹೊರಬರುವ ಸಾಧ್ಯತೆ ಇದೆ ಎಂಬ ವರದಿಗಳ ಬೆನ್ನಲ್ಲೇ, ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪೈಪೋಟಿ ನಡೆಸುತ್ತಿವೆ ಎನ್ನಲಾಗುತ್ತಿದೆ. ಇದರ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಹಾರ್ದಿಕ್ ಪಾಂಡ್ಯ ಅವರ ಮುಂದಿನ ಐಪಿಎಲ್ ತಂಡದ ಕುರಿತು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಕೆಲ ದಿನಗಳ ಹಿಂದೆ ಹಾರ್ದಿಕ್ ಪಾಂಡ್ಯ ತಮ್ಮ ಮಾಜಿ ತಂಡವಾದ ಗುಜರಾತ್ ಟೈಟಾನ್ಸ್‌ಗೆ ಮರಳಲು ಆಸಕ್ತಿ ಹೊಂದಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು. ಆದರೆ, ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಬಳಿ ಪಾಂಡ್ಯ ನಾಯಕತ್ವದ ಬೇಡಿಕೆ ಇಟ್ಟಿದ್ದರು ಹಾಗೂ ಈ ಬೇಡಿಕೆಯನ್ನು ಫ್ರಾಂಚೈಸಿ ತಿರಸ್ಕರಿಸಿದೆ ಎಂಬ ಮಾತುಗಳು ಕೂಡ ಕೇಳಿಬಂದಿದ್ದವು.

ಸದ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಶುಭ್‌ಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಫೈನಲ್ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಆರ್‌ಸಿಬಿ ವಿರುದ್ಧ ಸೋಲು ಅನುಭವಿಸಿ ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಇದೀಗ ರವಿಚಂದ್ರನ್ ಅಶ್ವಿನ್ ಅವರ ಅಭಿಪ್ರಾಯದ ಪ್ರಕಾರ, ಹಾರ್ದಿಕ್ ಪಾಂಡ್ಯ ಮತ್ತೆ ಗುಜರಾತ್ ಟೈಟಾನ್ಸ್ ತಂಡಕ್ಕೆ ಮರಳುವ ಸಾಧ್ಯತೆ ಇದೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅಶ್ವಿನ್, ಗುಜರಾತ್ ಟೈಟಾನ್ಸ್ ತಂಡದ ಪರ ಆಡಿದ ಸಂದರ್ಭದಲ್ಲಿ ಪಾಂಡ್ಯ ಅವರ ಅತ್ಯುತ್ತಮ ಪ್ರದರ್ಶನಗಳು ಹೊರಹೊಮ್ಮಿದ್ದವು ಎಂದು ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದೊಂದಿಗೆ ಆಡಿದ ಅವಧಿಯನ್ನು ಆನಂದಿಸಿದ್ದರು. ನಾಯಕತ್ವವಾಗಲಿ ಅಥವಾ ಬ್ಯಾಟಿಂಗ್ ವಿಚಾರವಾಗಲಿ, ಅವರ ಅತ್ಯುತ್ತಮ ಪ್ರದರ್ಶನಗಳು ಗುಜರಾತ್ ತಂಡದಲ್ಲಿದ್ದಾಗಲೇ ಬಂದಿದ್ದವು. ಹೀಗಾಗಿ ಪಾಂಡ್ಯ ಮತ್ತೆ ಗುಜರಾತ್ ಟೈಟಾನ್ಸ್ ತಂಡಕ್ಕೆ ಮರಳಬಹುದು ಎಂಬ ವಿಶ್ವಾಸವಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

2022ರ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ ಹಾರ್ದಿಕ್ ಪಾಂಡ್ಯ, ಮೊದಲ ಆವೃತ್ತಿಯಲ್ಲೇ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2023ರ ಆವೃತ್ತಿಯಲ್ಲೂ ಅವರ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿ ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಇದಾದ ಬಳಿಕ 2024ರ ಐಪಿಎಲ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದರು. ಇದೀಗ ಮತ್ತೆ ಅವರು ಗುಜರಾತ್ ತಂಡದತ್ತ ಮುಖ ಮಾಡಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.

ಆದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್‌ಗೆ ಮರಳಿದರೂ ನಾಯಕತ್ವದ ಜವಾಬ್ದಾರಿ ಸಿಗುವುದು ಅನುಮಾನ ಎಂದು ಅಶ್ವಿನ್ ಹೇಳಿದ್ದಾರೆ. ಕಳೆದ ಎರಡು ವರ್ಷಗಳಿಂದ ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಪಾಂಡ್ಯ ಆಟಗಾರನಾಗಿ ತಂಡಕ್ಕೆ ಮರಳಿದರೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅವಕಾಶ ದೊರೆಯಬಹುದು ಎಂಬುದು ಅಶ್ವಿನ್ ಅವರ ಅಭಿಪ್ರಾಯವಾಗಿದೆ.

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸತತ 2ನೇ ವರ್ಷ ಖರ್ಗೆ, ರಾಹುಲ್ ಗಾಂಧಿ ಗೈರು!

0

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ವರ್ಷವೂ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಈ ವೇಳೆ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವ ಸಂದರ್ಭದಲ್ಲೇ ಕಾಂಗ್ರೆಸ್‌ ನಾಯಕರ ಗೈರುಹಾಜರಿ ನಡೆದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಸಂಘರ್ಷ ನಡೆದಿತ್ತು.

2024ರಲ್ಲೂ ಆಸನ ವ್ಯವಸ್ಥೆ ವಿವಾದ

2024ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲೂ ರಾಹುಲ್ ಗಾಂಧಿ ಅವರ ಆಸನ ವ್ಯವಸ್ಥೆ ವಿವಾದಕ್ಕೆ ಕಾರಣವಾಗಿತ್ತು. ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಎರಡನೇ ಸಾಲಿನ ಹಿಂದಿನ ಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು.

ಇದನ್ನು ವಿರೋಧ ಪಕ್ಷಗಳು ಅವಮಾನ ಎಂದು ಟೀಕಿಸಿದ್ದವು. ಆದರೆ, ಒಲಿಂಪಿಕ್ಸ್‌ ಕ್ರೀಡಾಪಟುಗಳಿಗೆ ಆಸನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿತ್ತು.

ವಿಪಕ್ಷ ನಾಯಕನಿಗೆ ಮುಂಭಾಗದ ಸಾಲಿನಲ್ಲಿ ಸ್ಥಾನ

ಶಿಷ್ಟಾಚಾರದ ಪ್ರಕಾರ, ಲೋಕಸಭೆಯ ವಿರೋಧ ಪಕ್ಷದ ನಾಯಕನಿಗೆ ಗಣ್ಯರು ಭಾಗವಹಿಸುವ ಪ್ರಮುಖ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮುಂಭಾಗದ ಸಾಲಿನಲ್ಲಿ ಆಸನ ಕಲ್ಪಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಗೈರಾಗಿರುವುದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.

ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ಸಿಎಂ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ: ಸಿದ್ದರಾಮಯ್ಯ

0

ಬೆಂಗಳೂರು: “ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೆಜೆಸ್ಟಿಕ್ ಬಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ತಾವು ಸೈಲೆಂಟ್ ಆಗಿದ್ದಾರೆ ಎಂಬ ಚರ್ಚೆಗೆ ಪ್ರತಿಕ್ರಿಯಿಸಿದರು.

“ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಿನ್ನೆ ವಿಧಾನಸಭೆ ಅಧಿವೇಶನದಲ್ಲೂ ಭಾಗವಹಿಸಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೇನೆ. ನಾನು ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ. ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ” ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಬಿಜೆಪಿಯವರಿಗೆ ಯಾವ ನೈತಿಕತೆಯಿದೆ? ಅವರ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿಲ್ಲ. ನಾವು ಮಹಿಳೆಯರಿಗೆ ಅವಕಾಶ ನೀಡಬೇಕೆಂದಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದರು. ಅಹಿಂದ ಚಳವಳಿ ಕುರಿತ ಪ್ರಶ್ನೆಗೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಅಹಿಂದ ಚಳವಳಿ ನಡೆಯುತ್ತಿದೆ. ಒಬಿಸಿ ಒಕ್ಕೂಟದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದು 25ನೇ ವರ್ಷದ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಾಗಿ ಸಿದ್ದರಾಮಯ್ಯ ತಿಳಿಸಿದರು.

RSS ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಎಲ್ ಸಂತೋಷ್ ತಿರುಗೇಟು

0

ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಬಿಎಲ್ ಸಂತೋಷ್, ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್‌ನ ಕೊಡುಗೆಗಳ ಬಗ್ಗೆ ದೇಶಾಭಿಮಾನಿಗಳಿಗೆ ತಿಳಿದಿದೆ ಎಂದು ಹೇಳಿದರು.

“ಆರ್‌ಎಸ್‌ಎಸ್ ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ. ನೋಂದಣಿ ಮಾಡಿಕೊಂಡಿರುವ ಸಂಘಟನೆಗಳು ಏನೇನು ಮಾಡುತ್ತಿವೆ ಎಂಬುದು ನಮಗೆ ಗೊತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ತಾವು ಬಿಜೆಪಿ ಕಾರ್ಯಕರ್ತರಾಗಿದ್ದರೂ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ ಎಂದು ಹೇಳಿದ ಬಿಎಲ್ ಸಂತೋಷ್, ಬೆಂಗಳೂರಿನ ಶಿವಾಜಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 20 ವರ್ಷಗಳಿಂದ ಹಿಂದೂ ಪ್ರತಿನಿಧಿಯನ್ನು ಶಾಸಕರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

“ಈ ಎರಡು ಕ್ಷೇತ್ರಗಳಲ್ಲಿ ಹಿಂದೂ ನಾಯಕನನ್ನು ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ನೋಡೋಣ” ಎಂದು ಸವಾಲು ಹಾಕಿದರು.

ಆರ್‌ಎಸ್‌ಎಸ್ ನೋಂದಣಿ ಮಾಡಿಕೊಂಡಿದೆಯೇ ಎಂಬುದು ಸಂಘಟನೆಯ ಕಾರ್ಯವನ್ನು ಅಳೆಯುವ ಮಾನದಂಡವಲ್ಲ. ಅದೇ ರೀತಿ ಪ್ರಿಯಾಂಕ್ ಖರ್ಗೆ ಅವರೂ ಎಲ್ಲದಕ್ಕೂ ಮಾನದಂಡವಲ್ಲ ಎಂದು ಸಂತೋಷ್ ಟೀಕಿಸಿದರು.

ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಹಿನ್ನೆಲೆಯನ್ನು ಉಲ್ಲೇಖಿಸಿದ ಬಿಎಲ್ ಸಂತೋಷ್, ರಜಾಕರ ದಾಳಿಯ ಸಂದರ್ಭದಲ್ಲಿ ಅವರ ಕುಟುಂಬ ಕಲಬುರಗಿಗೆ ಬಂದಿದ್ದ ವಿಚಾರವನ್ನು ಪ್ರಸ್ತಾಪಿಸಿದರು.

ರಜಾಕರ ದಾಳಿಗೆ ಹೆದರಿ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಬಂದಿದ್ದರು. ಆ ಸಂದರ್ಭದಲ್ಲಿ ರಜಾಕರ ವಿರುದ್ಧ ನಿಂತಿದ್ದು ಆರ್‌ಎಸ್‌ಎಸ್ ಕಾರ್ಯಕರ್ತರು ಎಂದು ಸಂತೋಷ್ ಹೇಳಿದರು.

“ನಿಮ್ಮ ಕುಟುಂಬ ಇಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಹಿಂದೂಗಳು ಕಾರಣ. ಆಗ ರಜಾಕರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್‌ಎಸ್. ಅಂದು ನಿಮ್ಮ ಪೊಲೀಸರು ಬಂದಿಲ್ಲ, ನಿಮ್ಮ ರಾಜಕಾರಣಿಗಳು ಬಂದಿಲ್ಲ. ಆರ್‌ಎಸ್‌ಎಸ್‌ನ ಯುವಕರು ರಸ್ತೆಗಳಲ್ಲಿ ನಿಂತಿದ್ದರು. ಇದನ್ನು ನೀವು ನೆನಪಿಟ್ಟುಕೊಳ್ಳಬೇಕು” ಎಂದು ಬಿಎಲ್ ಸಂತೋಷ್ ಹೇಳಿದರು.

ಆರ್‌ಎಸ್‌ಎಸ್‌ನ ನೋಂದಣಿ ವಿಚಾರಕ್ಕಿಂತ ಅದರ ಸಾಮಾಜಿಕ ಹಾಗೂ ರಾಷ್ಟ್ರೀಯ ಕಾರ್ಯಚಟುವಟಿಕೆಗಳನ್ನು ಗಮನಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 72,000 ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಡಿಕೆಶಿ

0

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಶಿಕ್ಷಣ, ಆರ್ಥಿಕತೆ ಹಾಗೂ ಆಡಳಿತ ಕ್ಷೇತ್ರದಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಯುವಕರಿಗೆ ನೆರವಾಗುವ ‘ಯುವ ಉದ್ಯೋಗ ಸೇತು’ ಯೋಜನೆ ಜಾರಿಗೆ ತರಲಾಗುವುದು. ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ AIಗೆ ಆದ್ಯತೆ

ಶಿಕ್ಷಣ ಕ್ಷೇತ್ರದಲ್ಲೂ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ ಡಿ.ಕೆ. ಶಿವಕುಮಾರ್, ಆರನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ವಿಶೇಷ ಮೀಸಲಾತಿ ನೀಡಲಾಗುವುದು. ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಒಕ್ಕೂಟ ತತ್ವ ಮತ್ತಷ್ಟು ಗಟ್ಟಿಯಾಗಲಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ, ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ದೇಶದ ಅಭಿವೃದ್ಧಿಗೆ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಗಡಿಗಳನ್ನು ಕಾಯುತ್ತಿರುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸಿದ ಅವರು, ಕಾಯಕ, ಸಮಾನತೆ ಮತ್ತು ದಾಸೋಹದ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವುದು ತಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದು ತಿಳಿಸಿದರು.

2047ರ ವೇಳೆಗೆ ₹320 ಲಕ್ಷ ಕೋಟಿ ಆರ್ಥಿಕತೆಯ ಗುರಿ

ಪಂಡಿತ್ ಜವಾಹರಲಾಲ್ ನೆಹರೂ ಅವರ ‘ನವ ಭಾರತ’ದ ಕಲ್ಪನೆಯಂತೆ ‘ಯುವ ಕರ್ನಾಟಕ–ನವ ಭಾರತ’ ಎಂಬ ಧ್ಯೇಯದೊಂದಿಗೆ ರಾಜ್ಯವನ್ನು ಮುನ್ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಯುವಕರಿಗೆ ಹೆಚ್ಚಿನ ಅವಕಾಶಗಳು, ಉದ್ಯೋಗ ಸೃಷ್ಟಿ ಹಾಗೂ ಸಮಗ್ರ ಅಭಿವೃದ್ಧಿಯ ಮೂಲಕ ಈ ಗುರಿ ಸಾಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜನರ ಮನೆಬಾಗಿಲಿಗೆ ಆಡಳಿತ

ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲಾಗಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಪರ ಹಾಗೂ ಸರ್ವರನ್ನೂ ಒಳಗೊಂಡ ಆಡಳಿತ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.