ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಇದರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಉತ್ತಮವಾಗಿದೆ.
ಕೃಷ್ಣಾ ಹಾಗೂ ತುಂಗಭದ್ರಾ ಜಲಾನಯನ ಪ್ರದೇಶದ ಹಲವು ಡ್ಯಾಂಗಳು ಭರ್ತಿಯ ಅಂಚಿಗೆ ತಲುಪಿದ್ದು, ಕಾವೇರಿ ಜಲಾನಯನ ಪ್ರದೇಶದ ಕೆಆರ್ಎಸ್ನಲ್ಲೂ ನೀರಿನ ಸಂಗ್ರಹ ಸ್ಥಿರವಾಗಿದೆ. ಇಂದಿನ ಸೆಪ್ಟೆಂಬರ್ 10ರ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೇಗಿದೆ ಅನ್ನೋದನ್ನ ನೋಡೋದಾದ್ರೆ..
ಯಾದಗಿರಿ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿಯಾಗಿದೆ. 492.25 ಮೀಟರ್ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 492.07 ಮೀಟರ್ ನೀರು ಸಂಗ್ರಹವಾಗಿದೆ. ಒಳಹರಿವು ಸದ್ಯ ಶೂನ್ಯ ಕ್ಯೂಸೆಕ್ ಇದ್ದು, 12 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇನ್ನು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಕೂಡ ಭರ್ತಿಯ ಅಂಚಿನಲ್ಲಿದೆ. 519.60 ಮೀಟರ್ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 519.56 ಮೀಟರ್ ನೀರಿನ ಮಟ್ಟವಿದೆ. 12,326 ಕ್ಯೂಸೆಕ್ ಒಳಹರಿವು ಇದ್ದು, 8,263 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಮಂಡ್ಯದ ಕೆಆರ್ಎಸ್ ಜಲಾಶಯದ ಕಡೆ ನೋಡೋದಾದ್ರೆ, 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 106.64 ಅಡಿ ನೀರಿದೆ. ಒಟ್ಟು 49.452 ಟಿಎಂಸಿ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ನಲ್ಲಿ 28.478 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು 2,804 ಕ್ಯೂಸೆಕ್ ಇದ್ದು, ಹೊರಹರಿವು 3,734 ಕ್ಯೂಸೆಕ್ ಇದೆ.
ಇನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲೂ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ. 1633 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 1629.08 ಅಡಿ ನೀರಿದೆ. ಒಟ್ಟು 105.788 ಟಿಎಂಸಿ ಸಾಮರ್ಥ್ಯದಲ್ಲಿ 90.643 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನು ಕಬಿನಿ ಜಲಾಶಯದ ನೀರಿನ ಮಟ್ಟ ನೋಡೋದಾದ್ರೆ, 84 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 68.62 ಅಡಿ ನೀರಿದೆ. ಒಟ್ಟು ಸಂಗ್ರಹ 11.01 ಟಿಎಂಸಿ ಎಂದು ವರದಿಯಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿರುವ ಹಿನ್ನೆಲೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿದೆ. ಕೃಷ್ಣಾ, ತುಂಗಭದ್ರಾ ಹಾಗೂ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳ ನೀರಿನ ಮಟ್ಟದ ಮೇಲೆ ಸದ್ಯ ಎಲ್ಲರ ಗಮನ ನೆಟ್ಟಿದೆ.

