Home Blog

ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್: ಬೆಳ್ಳಂಬೆಳಗ್ಗೆ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ

ಬೆಂಗಳೂರು: ದೇವರ ಮೇಲಿನ ಅಪಾರ ಭಕ್ತಿ ಮತ್ತು ನಂಬಿಕೆಗೆ ಹೆಸರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಬಳಿಕ ಪತ್ನಿ ಉಷಾ ಅವರೊಂದಿಗೆ ತಿರುಪತಿ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಶುಕ್ರವಾರ ಮುಂಜಾನೆ ತಿರುಮಲ ದೇವಸ್ಥಾನಕ್ಕೆ ತೆರಳಿದ ಸಿಎಂ ದಂಪತಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಜನರ ಸುಖ-ಶಾಂತಿ, ಸಮೃದ್ಧಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನದ ಬಳಿಕ ದೇವಸ್ಥಾನದಲ್ಲಿ ಸೆರೆಹಿಡಿದಿರುವ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರು,

“ಓಂ ನಮೋ ವೆಂಕಟೇಶಾಯ
ಕಾಮಿತಾರ್ಥ ಪ್ರದಾಯಿನೇ
ಪ್ರಣತಃ ಕ್ಲೇಶ ನಾಶಾಯ
ಗೋವಿಂದಾಯ ನಮೋ ನಮಃ”

ಎಂಬ ಶ್ಲೋಕವನ್ನು ಉಲ್ಲೇಖಿಸಿ, “ಧರ್ಮಪತ್ನಿಯೊಂದಿಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ದಿವ್ಯ ದರ್ಶನ ಪಡೆದಿದ್ದೇನೆ. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ದು, ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹ ಪ್ರತಿಯೊಬ್ಬರ ಮೇಲೂ ಇರಲಿ. ರಾಜ್ಯ ಸುಭಿಕ್ಷವಾಗಿ ಬೆಳೆಯಲಿ” ಎಂದು ಆಶಿಸಿದ್ದಾರೆ.

ಇತ್ತೀಚೆಗಷ್ಟೇ ನಗರದ ಅಧಿದೇವತೆ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದ ಸಿಎಂ, ಇದೀಗ ತಿರುಮಲ ಶ್ರೀನಿವಾಸನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ಭಕ್ತಿಭಾವವನ್ನು ವ್ಯಕ್ತಪಡಿಸಿದ್ದಾರೆ.

ಚಿನ್ನದ ಬೆಲೆಯಲ್ಲಿ ಕುಸಿತ! ಇಂದು ಒಂದೇ ದಿನ 3650 ರೂ. ಇಳಿಕೆ! 1 ಗ್ರಾಂ ಗೋಲ್ಡ್ ರೇಟ್‌ ಎಷ್ಟು ಗೊತ್ತಾ?

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಚಿನ್ನದ ಬೆಲೆ, ಶುಕ್ರವಾರ (ಜೂನ್ 19, 2026) ಮತ್ತೊಮ್ಮೆ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ. ಒಂದೇ ದಿನದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ₹3,650 ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲೂ ₹10,000 ಇಳಿಕೆಯಾಗಿದೆ.

ತಜ್ಞರ ಪ್ರಕಾರ, ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿಗಿಂತ ಈಕ್ವಿಟಿ ಮಾರುಕಟ್ಟೆಯತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದು ಅಮೂಲ್ಯ ಲೋಹಗಳ ಬೇಡಿಕೆಗೆ ಹೊಡೆತ ನೀಡಿದ್ದು, ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ.

ಇಂದು 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹365 ಇಳಿಕೆಯಾಗಿ ₹14,586ಕ್ಕೆ ತಲುಪಿದೆ. ಅದೇ ರೀತಿ, 10 ಗ್ರಾಂ ಚಿನ್ನದ ಬೆಲೆ ₹3,650 ಇಳಿಕೆಯಾಗಿದ್ದು, ₹1,45,860ಕ್ಕೆ ದಾಖಲಾಗಿದೆ.

22 ಕ್ಯಾರೆಟ್ ಚಿನ್ನದ ದರದಲ್ಲೂ ಇಳಿಕೆ ಕಂಡುಬಂದಿದೆ. 1 ಗ್ರಾಂ ಚಿನ್ನದ ಬೆಲೆ ₹335 ಇಳಿಕೆಯಾಗಿ ₹13,370 ಆಗಿದ್ದು, 10 ಗ್ರಾಂ ಚಿನ್ನದ ಬೆಲೆ ₹3,350 ಕಡಿಮೆಯಾಗಿ ₹1,33,700ಕ್ಕೆ ತಲುಪಿದೆ.

ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಕುಸಿತ ದಾಖಲಾಗಿದೆ. ಇಂದು ಬೆಳ್ಳಿ ದರದಲ್ಲಿ ₹10,000 ಇಳಿಕೆಯಾಗಿದ್ದು, ಪ್ರತಿ ಕೆ.ಜಿ. ಬೆಲೆ ₹2,50,000ಕ್ಕೆ ತಲುಪಿದೆ. ಅಂದರೆ, ಪ್ರತಿ ಗ್ರಾಂ ಬೆಳ್ಳಿ ದರ ₹250 ಆಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಸತತವಾಗಿ ಇಳಿಕೆ ಕಂಡುಬರುತ್ತಿರುವುದರಿಂದ, ಆಭರಣ ಖರೀದಿಸಲು ಹಾಗೂ ಹೂಡಿಕೆ ಮಾಡಲು ಯೋಜಿಸುತ್ತಿರುವವರಿಗೆ ಇದು ಉತ್ತಮ ಅವಕಾಶವೆಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹೃದಯಾಘಾತದಿಂದ ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು

0

ಮೈಸೂರು/ಶಿವಮೊಗ್ಗ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಈಗ ವಯಸ್ಸಿನ ಮಿತಿಯನ್ನು ಮೀರಿ ಮಕ್ಕಳ ಹಾಗೂ ಯುವಕರ ಜೀವವನ್ನೇ ಕಸಿಯುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಹಾಗೂ ಶಿವಮೊಗ್ಗದಲ್ಲಿ ಮೊದಲನೇ ತರಗತಿ ಬಾಲಕನೊಬ್ಬರು ಹಠಾತ್ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆಗಳು ಸಾರ್ವಜನಿಕರನ್ನು ಬೆಚ್ಚಿಬೀಳಿಸಿವೆ.

ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿ ಮಾದೇಶ್ ಕಾಲೇಜು ಆವರಣದಲ್ಲೇ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದುಬಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಾದೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಆರು ವರ್ಷದ ತ್ರಿಲೋಕ್ ಜೈನ್ ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ನೆಲಕ್ಕುರುಳಿದ್ದಾನೆ. ಶಿಕ್ಷಕರು ಮತ್ತು ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಬಾಲಕ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.

ವೈದ್ಯರ ಪ್ರಾಥಮಿಕ ಅಂದಾಜಿನ ಪ್ರಕಾರ ಎರಡೂ ಪ್ರಕರಣಗಳಲ್ಲಿ ಹೃದಯಾಘಾತದ ಸಾಧ್ಯತೆ ಕುರಿತು ಶಂಕೆ ವ್ಯಕ್ತವಾಗಿದ್ದು, ಅಂತಿಮ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಕಿರಿಯ ವಯಸ್ಸಿನವರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವುದು ವೈದ್ಯಕೀಯ ವಲಯ ಹಾಗೂ ಪೋಷಕರಲ್ಲಿ ತೀವ್ರ ಕಳವಳ ಮೂಡಿಸಿದೆ.

ಮೈಸೂರಿನ ದೇವರಾಜ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಮತ್ತು ವೈದ್ಯಕೀಯ ತನಿಖೆ ಪ್ರಗತಿಯಲ್ಲಿದೆ.

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಖದೀಮನ ದುರಂತ ಅಂತ್ಯ: ಫುಟ್‌ಪಾತ್‌ನಲ್ಲೇ ಕುಸಿದು ಬಿದ್ದು ಸಾವು

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಖದೀಮನೊಬ್ಬ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ವಿಚಿತ್ರ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಜೂನ್ 16ರಂದು ಕಬ್ಬನ್‌ಪೇಟೆಯ 14ನೇ ಕ್ರಾಸ್ ಬಳಿ ಪಾದಚಾರಿಯೊಬ್ಬರ ಮೊಬೈಲ್ ಕಸಿದುಕೊಂಡು ಸಹಚರನೊಂದಿಗೆ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸಂತ್ರಸ್ತ ಯುವಕ ಕಳ್ಳ ಕಳ್ಳ ಎಂದು ಕೂಗಿಕೊಂಡಿದ್ದಾನೆ. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಕಾರ್ಮಿಕನೊಬ್ಬ ಸಮಯಪ್ರಜ್ಞೆ ಮೆರೆದು ಕಳ್ಳರನ್ನು ತಡೆಯಲು ಯತ್ನಿಸಿದ ಪರಿಣಾಮ, ಆರೋಪಿಗಳು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ.

ಬೈಕ್‌ನಿಂದ ಬಿದ್ದ ಬಳಿಕ ಕಳ್ಳರು ಕದ್ದ ಮೊಬೈಲ್‌ನ್ನು ಬಿಟ್ಟು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಜುನೈದ್ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದಿದ್ದಾನೆ. ಸ್ಥಳೀಯರು ನೆರವಿಗೆ ಧಾವಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.

ಪ್ರಾಥಮಿಕ ಮಾಹಿತಿಯಂತೆ ಜುನೈದ್ ಈ ಹಿಂದೆಯೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಪರಾರಿಯಾಗುವ ವೇಳೆ ಹೃದಯಾಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೊಬ್ಬ ಆರೋಪಿ ಅರ್ಬಾಜ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

‘ನಾಲ್ವರು ನಮಗೆ ದ್ರೋಹ ಮಾಡಿದ್ದಾರೆ, ಯಾರು ಅಂತ ಗೊತ್ತಿದೆ’: ಜಿ.ಟಿ.ಡಿ ವಿರುದ್ಧ ಕುಮಾರಸ್ವಾಮಿ ಗರಂ

0

ಮೈಸೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ಒಳಗಿನ ಅಸಮಾಧಾನ ಸ್ಫೋಟಗೊಂಡಿದ್ದು, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪಕ್ಷದ ನಾಲ್ವರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ, ಅವರು ಪಕ್ಷ ತೊರೆಯುವ ಚರ್ಚೆಯನ್ನೂ ನಡೆಸಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಅಡ್ಡ ಮತದಾನ ಮಾಡಿದವರ ಬಗ್ಗೆ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ. ಅವರು ಯಾವ ಕಾರಣಕ್ಕೆ ಹೀಗೆ ಮಾಡಿದ್ದಾರೆ ಎಂಬುದೂ ಗೊತ್ತಿದೆ. ಇದು ನನಗೆ ಆಘಾತವಲ್ಲ, ಮೊದಲೇ ನಿರೀಕ್ಷಿಸಿದ್ದ ಬೆಳವಣಿಗೆ ಎಂದು ಹೇಳಿದರು.

ಪಕ್ಷದೊಳಗಿನ ನಿಷ್ಠಾವಂತರನ್ನು ಹಾಗೂ ಹಿತಶತ್ರುಗಳನ್ನು ಗುರುತಿಸುವ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ನಿನ್ನೆ ಬಂದ ಫಲಿತಾಂಶ ಮತ್ತೊಂದು ಅನುಭವ ನೀಡಿದೆ. ಕೆಲವರ ಮೇಲೆ ಅತಿಯಾದ ನಂಬಿಕೆ ಇಡಬಾರದು ಎಂಬ ಪಾಠವನ್ನು ಈ ಚುನಾವಣೆ ಕಲಿಸಿದೆ ಎಂದು ಅವರು ಕಿಡಿಕಾರಿದರು.

ಪಕ್ಷ ತೊರೆಯುವವರು ಹೋಗಲಿ. ಜೆಡಿಎಸ್ ಅನ್ನು ಯುವಕರ ಕೈಯಲ್ಲಿ ಪುನರ್‌ನಿರ್ಮಿಸುತ್ತೇನೆ. ಮುಂದಿನ ದಿನಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ಸಿಗಲಿದೆ ಎಂದು ಘೋಷಿಸಿದರು.

ಜಿ.ಟಿ ದೇವೇಗೌಡ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಅವರ ವಿಚಾರ ಮುಗಿದ ಅಧ್ಯಾಯ. ಅವರು ಒಂದು ಕಾಲಲ್ಲ, ಎರಡು ಕಾಲುಗಳನ್ನೂ ಪಕ್ಷದ ಹೊರಗೆ ಇಟ್ಟಿದ್ದಾರೆ. ಈ ಬಾರಿ ಟಿಕೆಟ್ ನೀಡುವ ವಿಚಾರದಲ್ಲಿ ಅಂತಿಮ ನಿರ್ಧಾರ ನನ್ನದೇ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ದೊಡ್ಡ ಗೌಡರಿಗೆ ಜಿ.ಟಿ.ಡಿ ಮೇಲೆ ಪ್ರೀತಿ ಇರಬಹುದು. ಆದರೆ ಆ ಭಾವನೆಯನ್ನು ದುರುಪಯೋಗಪಡಿಸಿಕೊಳ್ಳಲು ನಾನು ಅವಕಾಶ ನೀಡುವುದಿಲ್ಲ” ಎಂದು ಹೇಳುವ ಮೂಲಕ ಪಕ್ಷದೊಳಗಿನ ಭಿನ್ನಮತಕ್ಕೆ ತೆರೆ ಎಳೆಯುವ ಸಂದೇಶ ರವಾನಿಸಿದರು.

ಭಾರತ ಮಹಿಳಾ ತಂಡಕ್ಕೆ ಶಾಕ್: ಟಿ20 ವಿಶ್ವಕಪ್ʼನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್!

0

ಮುಂಬೈ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿರುವ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಾಯದ ಕಾರಣದಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಾದಕ್ಕೆ ಗಾಯವಾಗಿರುವ ಶ್ರೇಯಾಂಕಾ ಅವರಿಗೆ ಸಂಪೂರ್ಣ ಚೇತರಿಕೆಗೆ ಹೆಚ್ಚಿನ ಸಮಯ ಅಗತ್ಯವಿರುವುದರಿಂದ, ವಿಶ್ವಕಪ್‌ನ ಉಳಿದ ಪಂದ್ಯಗಳಲ್ಲಿ ಅವರು ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಬುಧವಾರ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಈ ಘಟನೆ ಸಂಭವಿಸಿತ್ತು. ಎದುರಾಳಿ ತಂಡದ ಇನ್ನಿಂಗ್ಸ್‌ನ 6ನೇ ಓವರ್‌ನ ಮೊದಲ ಎಸೆತದ ವೇಳೆ ಮಿಡ್‌ವಿಕೆಟ್ ಪ್ರದೇಶದತ್ತ ತೆರಳುತ್ತಿದ್ದ ಚೆಂಡನ್ನು ತಡೆಯಲು ಪ್ರಯತ್ನಿಸಿದ ಶ್ರೇಯಾಂಕಾ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅವರು ಮೈದಾನ ತೊರೆಯಬೇಕಾಯಿತು.

ಶ್ರೇಯಾಂಕಾ ಅವರ ಸ್ಥಾನಕ್ಕೆ ಯುವ ಆಟಗಾರ್ತಿ ಪ್ರೇಮಾ ರಾವತ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಬದಲಾವಣೆಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ತಾಂತ್ರಿಕ ಸಮಿತಿಯು ಅಧಿಕೃತ ಅನುಮೋದನೆ ನೀಡಿದೆ. ಟೂರ್ನಿಯ ನಿಯಮಗಳ ಪ್ರಕಾರ, ಗಾಯಗೊಂಡ ಆಟಗಾರ್ತಿಯ ಬದಲಿಗೆ ಹೊಸ ಆಟಗಾರ್ತಿಯನ್ನು ಸೇರಿಸಲು ತಾಂತ್ರಿಕ ಸಮಿತಿಯ ಅನುಮತಿ ಕಡ್ಡಾಯವಾಗಿದೆ.

24 ವರ್ಷದ ಪ್ರೇಮಾ ರಾವತ್ ಇತ್ತೀಚಿನ ದಿನಗಳಲ್ಲಿ ತಮ್ಮ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಭಾರತ ‘ಎ’ ತಂಡದ ಪರ ಆಡಿದ್ದ ಅವರು 9.62ರ ಸರಾಸರಿಯಲ್ಲಿ 8 ವಿಕೆಟ್ ಪಡೆದು ಮಿಂಚಿದ್ದರು.

ಇದರ ಜೊತೆಗೆ, ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್)‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿರುವ ಪ್ರೇಮಾ, ಕಳೆದ ಎರಡು ಆವೃತ್ತಿಗಳಲ್ಲಿ ಒಟ್ಟು ಆರು ಪಂದ್ಯಗಳನ್ನು ಆಡಿದ್ದು, ಮೂರು ವಿಕೆಟ್ ಕಬಳಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದ ಶ್ರೇಯಾಂಕಾ ಅವರಿಗೆ ಇದು ಮತ್ತೊಂದು ಹಿನ್ನಡೆಯಾಗಿದೆ. ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಮೂರು ಓವರ್‌ಗಳಲ್ಲಿ ಕೇವಲ 17 ರನ್ ನೀಡಿ ಪರಿಣಾಮಕಾರಿ ಪ್ರದರ್ಶನ ನೀಡಿದ್ದರು.

ಭಾರತ ತಂಡ ಈಗಾಗಲೇ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟೂರ್ನಿಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ, ಶ್ರೇಯಾಂಕಾ ಅವರ ಅನುಪಸ್ಥಿತಿ ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ.

ರೈತರಿಗೆ ಗುಡ್ ನ್ಯೂಸ್: ನಾಳೆ ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ – ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಹೀಗೆ ಪರಿಶೀಲಿಸಿ

0

ನವದೆಹಲಿ: ದೇಶಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ವೆಚ್ಚಗಳಿಗೆ ಆರ್ಥಿಕ ನೆರವಾಗುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ 23ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಲಿದೆ.

ಪಶ್ಚಿಮ ಬಂಗಾಳದ ಹೂಗ್ಲಿಯ ತಾರಕೇಶ್ವರದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9 ಕೋಟಿಗೂ ಹೆಚ್ಚು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ.

e-KYC ಕಡ್ಡಾಯ

ಯೋಜನೆಯ 23ನೇ ಕಂತಿನ ಹಣ ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದ e-KYC ಪೂರ್ಣಗೊಳಿಸಿರುವುದು ಕಡ್ಡಾಯ. e-KYC ಮಾಡಿಸದ ಫಲಾನುಭವಿಗಳ ಖಾತೆಗೆ ಈ ಕಂತಿನ ಹಣ ಜಮೆಯಾಗುವುದಿಲ್ಲ.

e-KYC ಮಾಡುವ ವಿಧಾನ:

  • PM-Kisan ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ e-KYC ಆಯ್ಕೆಯನ್ನು ಕ್ಲಿಕ್ ಮಾಡಿ.
  • ಆಧಾರ್ ಸಂಖ್ಯೆಯನ್ನು ನಮೂದಿಸಿ OTP ಮೂಲಕ ಪರಿಶೀಲನೆ ಪೂರ್ಣಗೊಳಿಸಿ.
  • ವೆಬ್‌ಸೈಟ್‌ನಲ್ಲಿ ಸಾಧ್ಯವಾಗದಿದ್ದರೆ PM-Kisan ಮೊಬೈಲ್ ಆ್ಯಪ್‌ನಲ್ಲಿ Face Authentication ಮೂಲಕ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಬಯೋಮೆಟ್ರಿಕ್ ಮೂಲಕ e-KYC ಪೂರ್ಣಗೊಳಿಸಬಹುದು.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವುದು ಹೇಗೆ?

ಪ್ರತಿ ಕಂತು ಬಿಡುಗಡೆಗೂ ಮುನ್ನ ಕೇಂದ್ರ ಸರ್ಕಾರ ಅರ್ಹ ಫಲಾನುಭವಿಗಳ ಹೊಸ ಪಟ್ಟಿಯನ್ನು ಪ್ರಕಟಿಸುತ್ತದೆ. ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಹಣ ಜಮೆಯಾಗುತ್ತದೆ.

ಹೆಸರು ಪರಿಶೀಲಿಸುವ ವಿಧಾನ:

  • PM-Kisan ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • Beneficiary List ಆಯ್ಕೆಯನ್ನು ಕ್ಲಿಕ್ ಮಾಡಿ.
  • ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮದ ವಿವರಗಳನ್ನು ಆಯ್ಕೆ ಮಾಡಿ.
  • Get Report ಆಯ್ಕೆಯನ್ನು ಕ್ಲಿಕ್ ಮಾಡಿದರೆ ನಿಮ್ಮ ಗ್ರಾಮದ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ.
  • ಅದರಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಬಹುದು.

PM-Kisan ಯೋಜನೆ ಕುರಿತು

ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತ್ತು. ಯೋಜನೆಯಡಿ ಅರ್ಹ ರೈತರಿಗೆ ವರ್ಷಕ್ಕೆ ₹6,000 ಆರ್ಥಿಕ ನೆರವನ್ನು ಮೂರು ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಇದುವರೆಗೆ ಯೋಜನೆಯಡಿ 22 ಕಂತುಗಳ ಹಣ ರೈತರ ಖಾತೆಗಳಿಗೆ ಯಶಸ್ವಿಯಾಗಿ ಜಮೆಯಾಗಿದ್ದು, ಇದೀಗ 23ನೇ ಕಂತಿನ ಬಿಡುಗಡೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.

ಕೊಳ್ಳೇಗಾಲದಲ್ಲಿ ಕಾರು ದುರಂತ: ಇಬ್ಬರು ಸಾವು, ಮೂವರಿಗೆ ಗಾಯ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಮೃತರಲ್ಲಿ ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೆದಾರ ನಂಜುಂಡಪ್ಪ ಮತ್ತು ನ್ಯಾಯಾಲಯ ಸಿಬ್ಬಂದಿ ಯಮುನಪ್ಪ ಸೇರಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಕೈಗೊಂಡಿದ್ದಾರೆ.

SC/ST ಕಾಯ್ದೆ ದುರುಪಯೋಗಕ್ಕೆ ಅವಕಾಶವಿಲ್ಲ: ಕಂಪನಿ ಅಧಿಕಾರಿಗಳ ವಿರುದ್ಧದ FIR ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕಾರ್ಮಿಕ ಹಾಗೂ ಸಿವಿಲ್ ಸ್ವರೂಪದ ವಿವಾದಗಳಿಗೆ ಕ್ರಿಮಿನಲ್ ಪ್ರಕರಣದ ರೂಪ ನೀಡಿ, ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಭದ್ರಾವತಿಯ ಮಾಲ್ನಾಡ್ ಅಲೋಯ್ಸ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಮಧುಕರ್ ಜೋಯಿಸ್ ಸೇರಿದಂತೆ ಐವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಸಂಬಂಧಿತ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಕಂಪನಿಯು ಶೋಕಾಸ್ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ಕೈಗೊಂಡಿದ್ದಕ್ಕೆ ಪ್ರತೀಕಾರವಾಗಿ ಆಡಳಿತ ಮಂಡಳಿಯ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು, ಜಾತಿ ನಿಂದನೆಯ ಘಟನೆ ಸಾರ್ವಜನಿಕರು ಇರುವ ಅಥವಾ ನೋಡಬಹುದಾದ ಸ್ಥಳದಲ್ಲಿ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ತೀರ್ಪುಗಳಲ್ಲಿ ಸ್ಪಷ್ಟಪಡಿಸಿದೆ. ಆದರೆ, ಈ ಪ್ರಕರಣದಲ್ಲಿ ಆರೋಪಿತ ಘಟನೆ ಕಂಪನಿಯ ಕಚೇರಿಯ ನಾಲ್ಕು ಗೋಡೆಗಳ ಒಳಗೆ ನಡೆದಿದ್ದು, ಅಲ್ಲಿ ಸಾರ್ವಜನಿಕರು ಇರಲಿಲ್ಲ. ಆದ್ದರಿಂದ ಈ ಪ್ರಕರಣವು ಎಸ್‌ಸಿ/ಎಸ್‌ಟಿ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಿವಿಲ್ ಅಥವಾ ಸೇವಾ ಸಂಬಂಧಿತ ವಿವಾದಗಳಿಗೆ ಕ್ರಿಮಿನಲ್ ಸ್ವರೂಪ ನೀಡಿ ವಿಶೇಷ ಕಾಯ್ದೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೂರುದಾರರು ಮಾಡಿರುವ ಆರೋಪಗಳಲ್ಲಿ ಅಪರಾಧದ ಅಗತ್ಯ ಅಂಶಗಳು ಕಂಡುಬರದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣ ಹಾಗೂ ಮುಂದಿನ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ

ದೂರುದಾರ ರವಿ ಅವರು ಭದ್ರಾವತಿಯ ಮಾಲ್ನಾಡ್ ಅಲೋಯ್ಸ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸುಮಾರು 18 ವರ್ಷಗಳಿಂದ ಪ್ರೊಡಕ್ಷನ್ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ನಿರ್ಲಕ್ಷ್ಯದಿಂದ ಕಂಪನಿಗೆ ನಷ್ಟ ಉಂಟಾಗಿದೆ ಎಂದು ಆರೋಪಿಸಿ 2024ರ ಡಿಸೆಂಬರ್‌ನಲ್ಲಿ ಕಂಪನಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಬಳಿಕ ಆಂತರಿಕ ತನಿಖೆಗೆ ಆದೇಶಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಈ ಕ್ರಮವನ್ನು ಪ್ರಶ್ನಿಸಿ ರವಿ ಅವರು ಕೈಗಾರಿಕಾ ನ್ಯಾಯಾಧೀಕರಣದ ಮೊರೆ ಹೋಗಿ, ಶೋಕಾಸ್ ನೋಟಿಸ್ ರದ್ದುಪಡಿಸುವಂತೆ ಹಾಗೂ ಜಾತಿ ತಾರತಮ್ಯ ಮಾಡದಂತೆ ಕಂಪನಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಧೀಕರಣವು ಅವರ ಪರವಾಗಿ ಯಾವುದೇ ಏಕಪಕ್ಷೀಯ ಆದೇಶ ನೀಡಿರಲಿಲ್ಲ.

ಇದಾದ ಬಳಿಕ ರವಿ ಅವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಂಪನಿಯ ವ್ಯವಸ್ಥಾಪಕ ಮಧುಕರ್ ಜೋಯಿಸ್, ಕಾರ್ಯನಿರ್ವಾಹಕ ನಿರ್ದೇಶಕ ಪ್ರತೀಕ್ ಎಂ. ಜೋಯಿಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್. ಜಗದೀಶ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ಇನ್ನಿಬ್ಬರು ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಕಂಪನಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಎಫ್‌ಐಆರ್ ಹಾಗೂ ಸಂಬಂಧಿತ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಶಾರ್ಟ್ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಜವಳಿ ಅಂಗಡಿ; ಲಕ್ಷಾಂತರ ರೂ. ನಷ್ಟ!

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಗೆ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಚಿಕ್ಕೋಡಿ ಪೇಟೆಯಲ್ಲಿರುವ ಜಯಶ್ರೀ ಗಾರ್ಮೆಂಟ್ಸ್‌ನಲ್ಲಿ ರಾತ್ರಿ ವೇಳೆ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಇದರಿಂದ ಬೆಂಕಿ ಕಾಣಿಸಿಕೊಂಡಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಅಂಗಡಿಗೆ ವ್ಯಾಪಿಸಿದ್ದು, ಕಟ್ಟಡ ದಟ್ಟ ಹೊಗೆಯಿಂದ ಆವರಿಸಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಮೂರು ಅಗ್ನಿಶಾಮಕ ವಾಹನಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಯಿತು.

ಸಾರ್ವಜನಿಕರ ಸಹಕಾರದೊಂದಿಗೆ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು. ಆದರೆ ಬೆಂಕಿಗೆ ಅಂಗಡಿಯಲ್ಲಿದ್ದ ಬಟ್ಟೆಗಳು ಹಾಗೂ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

error: Content is protected !!