ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರು ಮತ್ತೊಮ್ಮೆ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿರಿಯ ವಕೀಲ ರಂಜಿತ್ ರೋಹಟಗಿ ಅವರ ಮೂಲಕ ದರ್ಶನ್ ಈ ಅರ್ಜಿ ಸಲ್ಲಿಸಿದ್ದು, ಮೇ 4ರಂದು ಈ ಮನವಿ ವಿಚಾರಣೆಗೆ ಬರಲಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ದರ್ಶನ್ ಹಲವು ಬಾರಿ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 2024ರ ಜೂನ್ 11ರಂದು ಮೈಸೂರಿನಲ್ಲಿ ಮೊದಲ ಬಾರಿಗೆ ಬಂಧಿತರಾದ ಅವರನ್ನು ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು.
ನಂತರ 2024ರ ಅಕ್ಟೋಬರ್ನಲ್ಲಿ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬಳಿಕ ಡಿಸೆಂಬರ್ 2024ರಲ್ಲಿ ಅವರಿಗೆ ಜಾಮೀನು ಮಂಜೂರಾಗಿತ್ತು.
ಆದರೆ, ರಾಜ್ಯ ಸರ್ಕಾರ ಈ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ 2025ರಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ್ದರಿಂದ ದರ್ಶನ್ ಮತ್ತೆ ಜೈಲು ಸೇರಬೇಕಾಯಿತು.
ಸುಪ್ರೀಂಕೋರ್ಟ್ ಆದೇಶದಂತೆ 2025ರ ಆಗಸ್ಟ್ 14ರಂದು ಪೊಲೀಸರು ಅವರನ್ನು ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು. ಜಾಮೀನು ಅವಧಿಯಲ್ಲಿ ಅವರು ತಮ್ಮ ‘ಡೆವಿಲ್’ ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ್ದರು.
ಈಗ ಸುಮಾರು ಎಂಟೂವರೆ ತಿಂಗಳ ಬಳಿಕ ದರ್ಶನ್ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಬಾರಿ ಸಲ್ಲಿಸಿರುವ ಅರ್ಜಿಯಲ್ಲಿ ಯಾವ ಆಧಾರದ ಮೇಲೆ ಜಾಮೀನು ಕೋರಲಾಗಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.


