Home Blog

ಉಪಚುನಾವಣೆ: ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ಮುಂದೂಡಿದೆ.

ಸ್ವತಂತ್ರ ಅಭ್ಯರ್ಥಿ ಗೌತಮ್ ಕುಮಾರ್ ಯು. ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಕಳೆದ ಆರು ತಿಂಗಳಿನಿಂದ ಹಣ ಬಿಡುಗಡೆ ಮಾಡಲಾಗಿಲ್ಲ. ಇದೀಗ ಉಪಚುನಾವಣೆ ಹಿನ್ನೆಲೆಯಲ್ಲಿ ಹಣ ಬಿಡುಗಡೆ ಮಾಡಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಹಣ ನೀಡಲಾಗುತ್ತಿರುವುದು ಸರಿಯಲ್ಲ ಎಂದು ವಾದಿಸಿದರು.

ಉಚಿತ ಸೌಲಭ್ಯಗಳು ದೇಶದ ಅಭಿವೃದ್ಧಿಗೆ ಹಾನಿಕಾರಕ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿರುವುದನ್ನೂ ಉಲ್ಲೇಖಿಸಿ, ಉಪಚುನಾವಣೆ ಮುಗಿಯುವವರೆಗೆ ಗೃಹಲಕ್ಷ್ಮಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಮಾಡಬಾರದು ಎಂದು ಕೋರಿದರು.

ಇದಕ್ಕೆ ಪ್ರತಿಯಾಗಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ನಿಯಮಿತವಾಗಿ ಹಣ ಬಿಡುಗಡೆ ಮಾಡುತ್ತಿದೆ. ಕೆಲ ತಿಂಗಳಲ್ಲಿ ವ್ಯತ್ಯಾಸವಾಗಿರಬಹುದು, ಆದರೆ ಯಾವುದೇ ಬಾಕಿ ಉಳಿದಿಲ್ಲ. ಅರ್ಜಿದಾರರು ತಪ್ಪು ಮಾಹಿತಿ ನೀಡುತ್ತಿರುವುದರಿಂದ ಅರ್ಜಿಯನ್ನು ವಜಾಗೊಳಿಸಿ ದಂಡ ವಿಧಿಸಬೇಕು ಎಂದು ಮನವಿ ಮಾಡಿದರು.

ಎರಡೂ ಪಾಳಯಗಳ ವಾದಗಳನ್ನು ಆಲಿಸಿದ ನ್ಯಾಯಪೀಠ, ಸರ್ಕಾರ ಈಗಾಗಲೇ ನೀತಿಗಳನ್ನು ಜಾರಿಗೊಳಿಸಿದ್ದು ಅವನ್ನು ಮುಂದುವರಿಸುತ್ತಿದೆ. ಈ ಹಂತದಲ್ಲಿ ನ್ಯಾಯಾಲಯದ ಯಾವುದೇ ಹಸ್ತಕ್ಷೇಪವು ತುಳಿತಕ್ಕೊಳಗಾದ ವರ್ಗಗಳಿಗೆ ಹಾನಿ ಉಂಟುಮಾಡಬಹುದು ಎಂದು ಹೇಳಿ, ವಿಚಾರಣೆಯನ್ನು ಮುಂದೂಡಿತು.

ಚಿತ್ರದುರ್ಗ: ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ!

0

ಚಿತ್ರದುರ್ಗ: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡನೊಬ್ಬರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ಇಂದು ಅವರ ಮೃತದೇಹ ಮುಖ ಗುರುತಿಸಲು ಕಷ್ಟವಾಗುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಕುರಿತು ಸಂಬಂಧಿಕರು ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು,

ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಬದ್ಧ ಅನುದಾನ ದೊರೆತಿಲ್ಲ

ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ.

ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಗ್ಯಾರಂಟಿಗಳಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ

ಮಾಜಿ ಸಿಎಂ ಬೊಮ್ಮಾಯಿಯವರು ರಾಜ್ಯದ ಸಾಲದ ದಾಖಲೆಗಳನ್ನು ಸರ್ಕಾರ ನೀಡಲೆಂದು ಹೇಳಿರುವ ಬಗ್ಗೆ ಉತ್ತರಿಸಿ, ಆರ್ಥಿಕತೆಯ ಸ್ಥಿತಿಗತಿಗಳ ಎಲ್ಲ ಅಂಶಗಳ ದಾಖಲೆಗಳನ್ನು ಬಜೆಟ್ ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯವರ ಅವಧಿಯಲ್ಲಿ 530000 ಕೋಟಿ ಸಾಲ ಮಾಡಲಾಗಿದೆ. ಗ್ಯಾರಂಟಿ ಯೋಜನೆಯು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿ , ಇದರಲ್ಲಿ ಭ್ರಷ್ಠಾಚಾರಕ್ಕೆ ಆಸ್ಪದವಿಲ್ಲ ಎಂದರು.

ಟೆಕ್ಕಿ ದಂಪತಿಗೆ ದುರಂತ: ಹೆದ್ದಾರಿಯಲ್ಲಿ ಕಾರು-ಲಾರಿ ಡಿಕ್ಕಿ, ನವವಿವಾಹಿತೆ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಬೆಂಗಳೂರು ಹೈದರಾಬಾದ್‌ ಹೈವೆಯ ಶೆಟ್ಟಿಗೆರೆ ಕ್ರಾಸ್ ಬಳಿ ಕಾರು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಕ್ಷಿತಾ ಮತ್ತು ರಾಜಶೇಖರ್ ದಂಪತಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಕಳೆದ ನವೆಂಬರ್‌ನಲ್ಲಿ ವಿವಾಹವಾಗಿದ್ದ ಈ ದಂಪತಿ, ತಮ್ಮ ಸಂಬಂಧಿ ಪವನ್ ರೆಡ್ಡಿ ಜೊತೆ ಕಾರಿನಲ್ಲಿ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಈ ವೇಳೆ ಶೆಟ್ಟಿಗೆರೆ ಕ್ರಾಸ್ ಬಳಿ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಜ್ಜಿಹೋಗಿದ್ದು, ರಕ್ಷಿತಾ ಮತ್ತು ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ ರಾಜಶೇಖರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸಂಬಂಧ Peresandra Police Station ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಲಿ: ಶ್ರೇಯಸ್ ಪಟೇಲ್ ಮನವಿ

0

ನವದೆಹಲಿ: ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ ಶೀಘ್ರವಾಗಿ ಭೌಗೋಳಿಕ ಸೂಚಕ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರಾಜಮುಡಿ ಅಕ್ಕಿಯ ವೈಶಿಷ್ಟ್ಯ ಮತ್ತು ಅದರ ಮಹತ್ವವನ್ನು ವಿವರಿಸಿದರು.

ಇದೇ ವೇಳೆ, ಜಿಲ್ಲೆಯಲ್ಲಿ ಜೋಳ ಬೆಳೆ ಹಾನಿಯಾಗಿದ್ದರೂ ರೈತರಿಗೆ ಇನ್ನೂ ಪರಿಹಾರ ದೊರೆಯದಿರುವ ವಿಚಾರವನ್ನು ಅವರು ಗಮನಕ್ಕೆ ತಂದರು. ಕಳೆದ ಜೂನ್ ತಿಂಗಳಲ್ಲಿ ಸುಮಾರು 1.1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆ ಬೆಳೆದಿದ್ದು, ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲಿ ಹಾನಿಯಾಗಿದೆ. ಆದರೂ ಇದುವರೆಗೆ ರೈತರಿಗೆ ಯಾವುದೇ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದರು.

ಈ ವಿಳಂಬದ ಕುರಿತು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಬೆಳೆ ಪರಿಹಾರವನ್ನು ಹಾಲು ಒಕ್ಕೂಟಗಳ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.

ಹಾಸನ ಜಿಲ್ಲೆಯಲ್ಲಿ ಸುಮಾರು 1.8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನಕಾಯಿ ಬೆಳೆ ಬೆಳೆಯಲಾಗುತ್ತಿದೆ. ಈ ಬೆಳೆಗಳಿಗೆ ಸೂಕ್ತ ಸಸ್ಯ ಸಂರಕ್ಷಣಾ ಯೋಜನೆಗಳನ್ನು ಜಾರಿಗೊಳಿಸುವುದರ ಜೊತೆಗೆ, ಜಿಲ್ಲೆಯ ಕೃಷಿ ಪ್ರಯೋಗಾಲಯಗಳ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು: ಮಮತಾ ಬ್ಯಾನರ್ಜಿ ಆರೋಪ

0

ಪಶ್ಚಿಮ ಬಂಗಾಳ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ರದ್ದುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು ರೂಪಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಆರೋಪಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದರು. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳಿಗೆ ಸಮರ್ಪಕ ಭದ್ರತೆ ಒದಗಿಸಲು ಆಯೋಗ ವಿಫಲವಾಗಿದೆ ಎಂದು ಅವರು ಹೇಳಿದರು.

ಚುನಾವಣೆ ಘೋಷಣೆಯಾದ ನಂತರ ಚುನಾವಣಾ ಆಯೋಗವು ನಾಗರಿಕ ಹಾಗೂ ಪೊಲೀಸ್ ಆಡಳಿತದಲ್ಲಿ ತನ್ನ ಅಧಿಕಾರಿಗಳನ್ನು ನಿಯೋಜಿಸಿದರೂ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಮತಾ ಆರೋಪಿಸಿದರು.

“ನನ್ನ ಎಲ್ಲಾ ಅಧಿಕಾರಗಳನ್ನು ಕಸಿದುಕೊಂಡಿದ್ದಾರೆ. ಇಂತಹ ಚುನಾವಣಾ ಆಯೋಗವನ್ನು ನಾನು ಎಂದಿಗೂ ನೋಡಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂಗಾಳದಲ್ಲಿ ಚುನಾವಣೆ ರದ್ದುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಬಿಜೆಪಿಯ ಉದ್ದೇಶ ಎಂದು ವಾಗ್ದಾಳಿ ನಡೆಸಿದರು.

ಮಾಲ್ಡಾದಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿದ ಅವರು, ಅದು ಬಿಜೆಪಿಯ ಪೂರ್ವನಿಯೋಜಿತ ಯೋಜನೆ ಎಂದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ, ಎಸ್‌ಐಆರ್ ಕಾರ್ಯದಲ್ಲಿ ತೊಡಗಿದ್ದ ಏಳು ನ್ಯಾಯಾಂಗ ಅಧಿಕಾರಿಗಳನ್ನು ಭದ್ರತಾ ಪಡೆಗಳು ಸುಮಾರು 9 ಗಂಟೆಗಳ ಬಳಿಕ ರಕ್ಷಿಸಬೇಕಾಯಿತು ಎಂದು ಹೇಳಿದರು.

ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ, ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂದು ಒತ್ತಾಯಿಸಿದರು.

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8ರಿಂದ ಕುವೈತ್–ಮಂಗಳೂರು ವಿಮಾನ ಸೇವೆ ಆರಂಭ

ಮಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್ವೇಸ್ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ.

ಜಜೀರಾ ಏರ್ವೇಸ್ ಸಂಸ್ಥೆ ಮಂಗಳೂರು, ಕೋಝಿಕ್ಕೋಡ್, ತಿರುಚಿರಾಪಳ್ಳಿ ಮತ್ತು ಕಣ್ಣೂರು ಸೇರಿದಂತೆ ಭಾರತದ ನಾಲ್ಕು ನಗರಗಳಿಗೆ ದಮ್ಮಮ್ ವಿಮಾನ ನಿಲ್ದಾಣದ ಮೂಲಕ ಹೊಸ ವಿಮಾನ ಸೇವೆಗಳನ್ನು ಘೋಷಿಸಿದೆ. ಮಂಗಳೂರಿಗೆ ಏಪ್ರಿಲ್ 9ರಿಂದ ಪ್ರತಿ ಸೋಮವಾರ ಮತ್ತು ಗುರುವಾರ ವಿಮಾನಗಳು ಸಂಚರಿಸಲಿವೆ.

ಜೆ9 3417 ಸಂಖ್ಯೆಯ ವಿಮಾನವು ಕುವೈತ್ನಿಂದ ಬೆಳಿಗ್ಗೆ 8:40ಕ್ಕೆ ಹೊರಟು, ದಮ್ಮಮ್ ಮೂಲಕ ಸಂಜೆ 4:10ಕ್ಕೆ ಮಂಗಳೂರು ತಲುಪಲಿದೆ. ಹಿಂದಿರುಗುವ ಜೆ9 3418 ವಿಮಾನವು ಮಂಗಳೂರಿನಿಂದ ಸಂಜೆ 4:55ಕ್ಕೆ ಹೊರಟು, ರಾತ್ರಿ 7:40ಕ್ಕೆ ಕುವೈತ್ ತಲುಪಲಿದೆ. ಒಟ್ಟು ಪ್ರಯಾಣದ ಅವಧಿ ಸುಮಾರು 6 ಗಂಟೆಗಳಷ್ಟಿರುತ್ತದೆ.

ಕೊರೋನಾ ಅವಧಿಯಲ್ಲಿ ಮಂಗಳೂರಿಗೆ ವಿಶೇಷ ವಿಮಾನ ಸೇವೆ ಒದಗಿಸಿದ್ದ ಸಂಸ್ಥೆ, ಇದೀಗ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಸೇವೆಯನ್ನು ಪುನರಾರಂಭಿಸಲು ನಿರ್ಧರಿಸಿದೆ.

ಹೊಸ ಮಾರ್ಗಗಳ ಸೇರ್ಪಡೆಯೊಂದಿಗೆ ಭಾರತದಲ್ಲಿ ಜಜೀರಾ ಏರ್ವೇಸ್ ಸೇವೆ 12 ನಗರಗಳಿಗೆ ವಿಸ್ತರಿಸಿದೆ. ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೊಚ್ಚಿ, ಮುಂಬೈ ಮತ್ತು ತಿರುವನಂತಪುರಂ ನಗರಗಳಿಗೆ ಈಗಾಗಲೇ ವಿಮಾನ ಸೇವೆ ನೀಡಲಾಗುತ್ತಿದೆ.

ದಕ್ಷಿಣ ಭಾರತದ ಪ್ರಯಾಣಿಕರು ತಮ್ಮ ತವರು ನಗರಗಳಿಗೆ ಸುಲಭವಾಗಿ ಸಂಪರ್ಕ ಹೊಂದಲು ಸೇವೆ ಸಹಕಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತನ್ ಪಶುಪತಿ ತಿಳಿಸಿದ್ದಾರೆ.

ನಿಯಂತ್ರಣ ತಪ್ಪಿದ ಇನ್ನೋವಾ ಕಾರು: ಅಡಿಕೆ ತೋಟಕ್ಕೆ ಬಿದ್ದು ಚಾಲಕನಿಗೆ ಗಂಭೀರ ಗಾಯ

0

ಹಾಸನ: ನಿಯಂತ್ರಣ ತಪ್ಪಿದ ಕಾರೊಂದು ಅಡಿಕೆ ತೋಟಕ್ಕೆ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿಬಿದ್ದಿದೆ.

ಘಟನೆಯಲ್ಲಿ ಕಾರು ಚಾಲಕ ಮಹಮದ್ (30) ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬಿದ್ದ ತೀವ್ರತೆಗೆ ತೋಟದಲ್ಲಿದ್ದ ಮೂರು ಅಡಿಕೆ ಮರಗಳು ಮುರಿದು ಹೋಗಿವೆ. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾನು CM ಆದ್ರೆ ಮೊದಲ ಕ್ಯಾಬಿನೆಟ್ʼನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ: ಯತ್ನಾಳ್

ವಿಜಯಪುರ: ನಾನು ಮುಖ್ಯಮಂತ್ರಿ ಆದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರಹಾಕುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನುಮ ಜಯಂತಿ ಸಂದರ್ಭದಲ್ಲಿ ಆಂಜನೇಯನ ಸನ್ನಿಧಿಯಲ್ಲಿ ನಿಂತು ಈ ಮಾತುಗಳನ್ನು ಹೇಳುತ್ತಿದ್ದೇನೆ ಎಂದರು. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ಕೇಳುವುದಿಲ್ಲ. ಅವರೇ ನನ್ನನ್ನು ಪಕ್ಷಕ್ಕೆ ಆಹ್ವಾನಿಸುತ್ತಾರೆ ಎಂದು ಹೇಳಿದರು.

ಮುಂದುವರಿದು, ಮುಖ್ಯಮಂತ್ರಿ ಆದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮಾದರಿಯಲ್ಲಿ ಆಡಳಿತ ನಡೆಸುತ್ತೇನೆ ಎಂದರು. ಮೊದಲ ಸಚಿವ ಸಂಪುಟದಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರಹಾಕುವುದಾಗಿ ಪುನರುಚ್ಚರಿಸಿದರು. ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಇತರ ಸಮುದಾಯಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರವನ್ನೂ ಪ್ರಸ್ತಾಪಿಸಿದರು.

ಇದೇ ವೇಳೆ, ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರಕ್ಕೆ ಕರೆದಿದ್ದಾರೆ. ಅದಕ್ಕಾಗಿ ನಾನು ಚರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.

ಯಾವುದೇ ನಾಟಕ ಮಾಡಿ ಬಿಜೆಪಿಗೆ ಸೇರುವ ಅವಶ್ಯಕತೆ ಇಲ್ಲ ಎಂದು ಹೇಳಿದ ಅವರು, ಸಚಿವ ಎಂ.ಬಿ. ಪಾಟೀಲ್ ಅವರ ವಿರುದ್ಧವೂ ಟೀಕೆ ಮಾಡಿದರು. ಸ್ವಾಭಿಮಾನ ಇದ್ದರೆ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಅವರು ಹೇಳಿದರು. ಅಲ್ಲದೆ, ಬಾಗೇವಾಡಿ ಕಾಂಗ್ರೆಸ್ ಅಭ್ಯರ್ಥಿ ರಾತ್ರಿ ವೇಳೆ ಬಂದು ಎಂ.ಬಿ. ಪಾಟೀಲ್ ವಿರುದ್ಧ ಪ್ರಚಾರ ಮಾಡುತ್ತಾನೆ ಎಂದು ಆರೋಪಿಸಿದರು.

ಟ್ರಂಪ್ ಭಾಷಣದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ

0

ವಾಷಿಂಗ್ಟನ್: ಇರಾನ್ ಯುದ್ಧಕ್ಕೆ ಸಂಬಂಧಿಸಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ಟ್ರಂಪ್ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ತಕ್ಷಣವೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ.

ಅಮೆರಿಕದ ಕಾಲಮಾನ ಪ್ರಕಾರ ಬುಧವಾರ ರಾತ್ರಿ 9 ಗಂಟೆಗೆ (ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ 6.30ಕ್ಕೆ) ಮಾತನಾಡಿದ ಅವರು, ಯುದ್ಧ ಇನ್ನೂ ಎರಡು ರಿಂದ ಮೂರು ವಾರಗಳವರೆಗೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಹೇಳಿಕೆಯ ಬೆನ್ನಲ್ಲೇ ತೈಲ ರಫ್ತು ರಾಷ್ಟ್ರಗಳ ಸಂಘಟನೆಯಾದ OPEC ಸದಸ್ಯ ರಾಷ್ಟ್ರಗಳ ಬ್ರೆಂಟ್ ಕಚ್ಚಾ ತೈಲದ ಬೆಲೆ 4.5 ಶೇಕಡಾ ಏರಿಕೆಯಾಗಿ, ಒಂದು ಬ್ಯಾರೆಲ್ (158 ಲೀಟರ್) ದರ 106.42 ಡಾಲರ್ (ಸುಮಾರು 9,930 ರೂಪಾಯಿ) ತಲುಪಿದೆ.

ಅಮೆರಿಕದ ವೆಸ್ಟ್ ಟೆಕ್ಸಾಸ್ ಮಧ್ಯಮ ದರ್ಜೆಯ ಕಚ್ಚಾ ತೈಲದ ದರ ಕೂಡ 4 ಶೇಕಡಾ ಏರಿಕೆಯಾಗಿ 104.24 ಡಾಲರ್ (ಸುಮಾರು 9,732 ರೂಪಾಯಿ) ಮಟ್ಟದಲ್ಲಿ ವ್ಯವಹಾರ ನಡೆಯುತ್ತಿದೆ.

ಇದಕ್ಕೂ ಮೊದಲು ಯುದ್ಧ ಶೀಘ್ರ ಅಂತ್ಯಗೊಳ್ಳಬಹುದು ಎಂದು ಹೇಳಿದ್ದ ಹಿನ್ನೆಲೆಯಲ್ಲಿ, ಬುಧವಾರ ಮಾರುಕಟ್ಟೆಯಲ್ಲಿ ಬ್ರೆಂಟ್ ತೈಲದ ಬೆಲೆ 99ರಿಂದ 100 ಡಾಲರ್ ನಡುವೆ ಇದ್ದರೆ, ವೆಸ್ಟ್ ಟೆಕ್ಸಾಸ್ ತೈಲದ ದರ 98.71 ಡಾಲರ್ ಮಟ್ಟದಲ್ಲಿ ಇತ್ತು.

ತೈಲದ ಬೆಲೆ ಏರಿಕೆ ತಾತ್ಕಾಲಿಕವಾಗಿದೆ ಎಂದು ಹೇಳಿದ ಅವರು, ಇರಾನ್ ನಡೆಸುತ್ತಿರುವ ದಾಳಿಗಳು ವಾಣಿಜ್ಯ ತೈಲ ಸಾಗಣೆ ನೌಕೆಗಳ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ ಎಂದು ಆರೋಪಿಸಿದರು.

ಯುದ್ಧವು ಇನ್ನೂ ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿದೆ. ಅದರ ಬಳಿಕ ತೈಲದ ಬೆಲೆ ತೀವ್ರವಾಗಿ ಇಳಿಕೆಯಾಗಲಿದೆ ಎಂದರು. ಹಾರ್ಮುಜ್ ಜಲಸಂಧಿಯಿಂದ ಬರುವ ತೈಲದ ಅವಶ್ಯಕತೆ ಅಮೆರಿಕಕ್ಕಿಲ್ಲ. ಮಾರ್ಗದಿಂದ ತೈಲ ಪಡೆಯುವ ಇತರ ರಾಷ್ಟ್ರಗಳೇ ಅದರ ರಕ್ಷಣೆಯ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಹೇಳಿದರು.

ಅಮೆರಿಕವು ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ತೈಲ ಬೆಲೆ ಏರಿಕೆಯಾದಾಗ ದೇಶಕ್ಕೆ ಆರ್ಥಿಕ ಲಾಭವಾಗುತ್ತದೆ. ಸೌದಿ ಅರೇಬಿಯಾ ಮತ್ತು ರಷ್ಯಾ ದೇಶಗಳನ್ನು ಸೇರಿಸಿದರೂ, ಅಮೆರಿಕ ಹೆಚ್ಚು ಪ್ರಮಾಣದಲ್ಲಿ ತೈಲ ಉತ್ಪಾದಿಸುತ್ತಿದೆ ಎಂದು ಹೇಳಿದರು.

ತೈಲದ ಕೊರತೆಯನ್ನು ಎದುರಿಸುತ್ತಿರುವ ರಾಷ್ಟ್ರಗಳು ಅಮೆರಿಕದಿಂದ ತೈಲ ಖರೀದಿಸಬಹುದು ಎಂದೂ ಹೇಳಿದರು.

ಇರಾನ್ ಶಾಂತಿ ಮಾತುಕತೆಗೆ ಬಾರದಿದ್ದರೆ, ಮುಂದಿನ 2-3 ವಾರಗಳಲ್ಲಿ ಅಲ್ಲಿನ ತೈಲ ಕೇಂದ್ರಗಳು ಮತ್ತು ವಿದ್ಯುತ್ ಘಟಕಗಳ ಮೇಲೆ ತೀವ್ರ ದಾಳಿ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

error: Content is protected !!