Home Blog

ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಇಲ್ಲ: ಆರೋಪಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದು, ಕುರುಬ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಬಂದಿದ್ದರಿಂದ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಮಂಜೂರಾಗಿದೆ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳಿಂದ ಬಂದಿರುವ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.

ಇದು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇತರೆ ಹಿಂದುಳಿದ ಜಾತಿಗಳಿಂದ ಸಲ್ಲಿಕೆಯಾಗಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕುರುಬ ಸಮುದಾಯದ ಜೊತೆಗೆ ಮಡಿವಾಳ, ಲಿಂಗಾಯತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ ಹಾಗೂ ರೆಡ್ಡಿ ಸೇರಿದಂತೆ ವಿವಿಧ ಸಮುದಾಯಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೂ ಪೂರ್ವಭಾವಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಈ ಆದೇಶವು ಅನುದಾನ ಬಿಡುಗಡೆಗೆ ಸಂಬಂಧಿಸಿದ ಅಂತಿಮ ಆದೇಶವಲ್ಲ ಎಂದು ವಿವರಿಸಿರುವ ಅವರು, ಅನುದಾನ ಪಡೆಯಲು ಸಂಬಂಧಿತ ಸಂಘ-ಸಂಸ್ಥೆಗಳು ಜಿಲ್ಲಾಧಿಕಾರಿಗಳ ಮೂಲಕ ಜಮೀನು ಅಥವಾ ನಿವೇಶನದ ದಾಖಲೆಗಳು, ಸ್ಥಳೀಯ ಸಂಸ್ಥೆಗಳ ಕಟ್ಟಡ ಪರವಾನಗಿ, ಮೂರು ವರ್ಷದ ಆಡಿಟ್ ವರದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರ ಕಾಮಗಾರಿಯ ಪ್ರಗತಿಯನ್ನು ಮೂರು ಹಂತಗಳಲ್ಲಿ ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಲಾಗುವುದು. ಪ್ರತಿವರ್ಷ ಕಾಮಗಾರಿಯ ಪ್ರಗತಿ ಪರಿಶೀಲನೆಯ ಆಧಾರದ ಮೇಲೆ ಮಂಜೂರಾದ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸರ್ಕಾರದ ಆದೇಶದಂತೆ ಪ್ರವರ್ಗ-1 ಮತ್ತು ಪ್ರವರ್ಗ-2ಎಗೆ ಸೇರಿದ ಜಾತಿಗಳಿಗೆ ಶೇ.70ರಷ್ಟು ಹಾಗೂ ಪ್ರವರ್ಗ-3ಎ ಮತ್ತು 3ಬಿಗೆ ಸೇರಿದ ಜಾತಿಗಳಿಗೆ ಶೇ.30ರಷ್ಟು ಅನುದಾನ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರವರ್ಗ-1 ಮತ್ತು 2ಎ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜಾತಿಗಳು ಇರುವುದರಿಂದ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಮಂಜೂರಾಗಿರುವಂತೆ ಕಂಡುಬಂದಿದೆ ಹೊರತು ಇದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ವಾರಾಂತ್ಯದಲ್ಲೇ ಇರಾನ್ ಜೊತೆ ಶಾಂತಿ ಒಪ್ಪಂದ?: ಟ್ರಂಪ್ ವಿಶ್ವಾಸ

0

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಅಂತ್ಯಗೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಈ ವಾರಾಂತ್ಯದಲ್ಲೇ ಶಾಂತಿ ಒಪ್ಪಂದಕ್ಕೆ ಸಹಿ ಬೀಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಜೊತೆಗಿನ ಸಂಘರ್ಷ ಅಂತ್ಯಗೊಳಿಸಲು ಮಹತ್ವದ ಒಪ್ಪಂದದ ಅಂತಿಮ ಹಂತ ತಲುಪಿದ್ದೇವೆ ಎಂದು ಹೇಳಿದ್ದಾರೆ. ಶಾಂತಿ ಒಪ್ಪಂದ ಜಾರಿಯಾದ ತಕ್ಷಣ ಜಾಗತಿಕ ತೈಲ ಸಾಗಣೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ತೆರೆಯುವ ಸಾಧ್ಯತೆ ಇದೆ ಎಂದಿದ್ದಾರೆ.

ಈ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಸೌದಿ ಅರೇಬಿಯಾ, ಬಹ್ರೇನ್ ಹಾಗೂ ಕುವೈತ್ ನಾಯಕರೊಂದಿಗೆ ಮಾತುಕತೆ ನಡೆಸಿರುವುದಾಗಿ ಟ್ರಂಪ್ ತಿಳಿಸಿದ್ದಾರೆ. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರೊಂದಿಗೂ ಶೀಘ್ರದಲ್ಲೇ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳಿಗೂ ಈ ಒಪ್ಪಂದದಲ್ಲಿ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದು, ಸಹಿ ಸಮಾರಂಭದ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಭಾರತೀಯ ಶೂಟಿಂಗ್‌ಗೆ ದೊಡ್ಡ ನಷ್ಟ: ಖ್ಯಾತ ಕೋಚ್ ಜಸ್ಪಾಲ್ ರಾಣಾ ನಿಧನ

0

ನವದೆಹಲಿ: ಭಾರತೀಯ ಶೂಟಿಂಗ್ ಕ್ಷೇತ್ರದ ದಿಗ್ಗಜ, ಖ್ಯಾತ ಕೋಚ್ ಹಾಗೂ ಮಾಜಿ ಶೂಟರ್ ಜಸ್ಪಾಲ್ ರಾಣಾ ಅವರು 49ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕೆಲವು ದಿನಗಳ ಹಿಂದೆ ಜರ್ಮನಿಯ ಮ್ಯೂನಿಕ್‌ನಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಟೂರ್ನಿಯ ವೇಳೆ ಜಸ್ಪಾಲ್ ರಾಣಾ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆರಂಭದಲ್ಲಿ ಅದನ್ನು ಸಾಮಾನ್ಯ ಅಸಿಡಿಟಿ ಎಂದು ಭಾವಿಸಿ ಅವರು ಪ್ರವಾಸ ಮುಂದುವರಿಸಿದ್ದರು. ಆದರೆ ಭಾರತಕ್ಕೆ ಮರಳುವ ವೇಳೆ ವಿಮಾನ ಪ್ರಯಾಣದ ಸಂದರ್ಭದಲ್ಲೂ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿ ತಲುಪುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ತಪಾಸಣೆಯಲ್ಲಿ ಹೃದಯದ ರಕ್ತನಾಳದಲ್ಲಿ ಗಂಭೀರ ಬ್ಲಾಕೇಜ್ ಇರುವುದು ಪತ್ತೆಯಾಗಿತ್ತು. ವೈದ್ಯರು ಸ್ಟೆಂಟ್ ಅಳವಡಿಸಿ ಚಿಕಿತ್ಸೆ ನೀಡಿದ್ದರೂ, ಮತ್ತೊಂದು ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆಯೇ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಭಾರತೀಯ ಶೂಟಿಂಗ್ ಕ್ರೀಡೆಗೆ ಅಪಾರ ಕೊಡುಗೆ ನೀಡಿದ್ದ ಜಸ್ಪಾಲ್ ರಾಣಾ ಅವರ ಅಗಲಿಕೆ ಕ್ರೀಡಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

260 ಜೀವಗಳನ್ನು ಬಲಿ ಪಡೆದ ಏರ್ ಇಂಡಿಯಾ ದುರಂತಕ್ಕೆ ಒಂದು ವರ್ಷ: ಇನ್ನೂ ಬಹಿರಂಗವಾಗಿಲ್ಲ ಅಪಘಾತದ ನಿಖರ ಕಾರಣ

0

ಅಹಮದಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ್ದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದು ಒಂದು ವರ್ಷ ತುಂಬಿದೆ. 2025ರ ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ AI171 ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು 260 ಮಂದಿಯ ಸಾವಿಗೆ ಕಾರಣವಾಗಿತ್ತು.

ಮಧ್ಯಾಹ್ನ 1.38ಕ್ಕೆ ಹಾರಾಟ ಆರಂಭಿಸಿದ್ದ 12 ವರ್ಷ ಹಳೆಯ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನ ನಿಯಂತ್ರಣ ಕಳೆದುಕೊಂಡು ಅಹಮದಾಬಾದ್‌ನ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು.

ಈ ಭೀಕರ ದುರಂತದಲ್ಲಿ ವಿಮಾನದ ಪೈಲಟ್ ಸೇರಿದಂತೆ 241 ಮಂದಿ ಮೃತಪಟ್ಟಿದ್ದರು. ನೆಲದಲ್ಲಿದ್ದ 19 ಮಂದಿ ಸಹ ಪ್ರಾಣ ಕಳೆದುಕೊಂಡ ಪರಿಣಾಮ ಒಟ್ಟು ಮೃತರ ಸಂಖ್ಯೆ 260ಕ್ಕೆ ಏರಿತ್ತು. ದುರಂತದ ಒಂದು ವರ್ಷ ಪೂರ್ಣಗೊಂಡಿದ್ದರೂ ಅಪಘಾತಕ್ಕೆ ಕಾರಣವಾದ ನಿಖರ ಅಂಶಗಳ ಕುರಿತ ಅಂತಿಮ ತನಿಖಾ ವರದಿ ಇನ್ನೂ ಪ್ರಕಟವಾಗಿಲ್ಲ.

ಇದೀಗ ಮೃತಪಟ್ಟವರ ಕುಟುಂಬಗಳ ಪೈಕಿ ಶೇ.96ರಷ್ಟು ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ವಿತರಿಸಲಾಗಿದ್ದು, ಅಂತಿಮ ಪರಿಹಾರ ಮತ್ತು ತನಿಖಾ ವರದಿಗಾಗಿ ಕುಟುಂಬಸ್ಥರು ಇನ್ನೂ ಕಾಯುತ್ತಿದ್ದಾರೆ.

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಿದ ದುಷ್ಕರ್ಮಿಗಳು: ಕೆಲವೇ ಗಂಟೆಗಳಲ್ಲಿ ಶಂಕಿತ ವಶಕ್ಕೆ

0

ಕಾನ್ಪುರ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಘಟನೆಯ ಕೆಲವೇ ಗಂಟೆಗಳಲ್ಲಿ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಕಾನ್ಪುರ-ದೆಹಲಿ ಮಾರ್ಗದ ರೈಲು ಫಿರೋಜಾಬಾದ್ ಜಿಲ್ಲೆಯ ಮಖನ್‌ಪುರ ನಿಲ್ದಾಣದ ಬಳಿ ಸಂಜೆ 7.15ರ ಸುಮಾರಿಗೆ ಸಂಚರಿಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಕಲ್ಲು ಎಸಿ ಕೋಚ್‌ನ ಕಿಟಕಿಗೆ ಬಡಿದ ಪರಿಣಾಮ ಗಾಜು ಹಾನಿಗೊಳಗಾಗಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಅದೇ ಕೋಚ್‌ನಲ್ಲಿ ಇದ್ದ ಮೋಹನ್ ಭಾಗವತ್ ಅವರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆ ಬೆನ್ನಲ್ಲೇ ಆಗ್ರಾ ವಲಯದ ಎಡಿಜಿ ಎಸ್.ಕೆ. ಭಗತ್, ಡಿಐಜಿ ಶೈಲೇಶ್ ಪಾಂಡೆ ಹಾಗೂ ಫಿರೋಜಾಬಾದ್ ಎಸ್‌ಎಸ್‌ಪಿ ಆದಿತ್ಯ ಲಾಂಘೆ ನೇತೃತ್ವದಲ್ಲಿ ತನಿಖೆ ಆರಂಭಿಸಲಾಯಿತು. ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯ ಮಾಹಿತಿಗಳ ಆಧಾರದ ಮೇಲೆ ಒಬ್ಬ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ.

ಸುರಕ್ಷತಾ ಪರಿಶೀಲನೆಗಾಗಿ ರೈಲನ್ನು ತುಂಡ್ಲಾ ಜಂಕ್ಷನ್ ಹೊರಭಾಗದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಪರಿಶೀಲನೆ ಪೂರ್ಣಗೊಂಡ ಬಳಿಕ ಸಂಜೆ 7.41ಕ್ಕೆ ರೈಲು ದೆಹಲಿಯತ್ತ ತನ್ನ ಪ್ರಯಾಣವನ್ನು ಮುಂದುವರಿಸಿತು. ಪ್ರಕರಣದ ಕುರಿತು ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

260 ಜೀವಗಳನ್ನು ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ ಇಂದಿಗೆ ಒಂದು ವರ್ಷ

0

ಅಹಮದಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ್ದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. 260 ಮಂದಿಯನ್ನು ಬಲಿತೆಗೆದುಕೊಂಡಿದ್ದ ಈ ಭೀಕರ ಅವಘಡದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ ಎಂಬುದು ಗಮನಾರ್ಹವಾಗಿದೆ.

2025ರ ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳಲು ಏರ್ ಇಂಡಿಯಾದ AI171 ವಿಮಾನ ಟೇಕ್‌ಆಫ್ ಆಗಿತ್ತು. ಮಧ್ಯಾಹ್ನ 1.38ಕ್ಕೆ ಹೊರಟಿದ್ದ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನದಲ್ಲಿ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು.

ಆದರೆ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ನಿಯಂತ್ರಣ ತಪ್ಪಿ ಅಹಮದಾಬಾದ್‌ನ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು. ಪರಿಣಾಮ ವಿಮಾನದಲ್ಲಿದ್ದ ಪೈಲಟ್ ಸೇರಿದಂತೆ 241 ಮಂದಿ ಹಾಗೂ ನೆಲದಲ್ಲಿದ್ದ 19 ಮಂದಿ ಸಾವನ್ನಪ್ಪಿ ಒಟ್ಟು 260 ಜನರು ದುರಂತಕ್ಕೆ ಬಲಿಯಾಗಿದ್ದರು.

ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ತಿಳಿಸುವ ಅಂತಿಮ ತನಿಖಾ ವರದಿ ಇನ್ನೂ ಪ್ರಕಟವಾಗಿಲ್ಲ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಧ್ಯಂತರ ಪರಿಹಾರವಾಗಿ ತಲಾ 25 ಲಕ್ಷ ರೂಪಾಯಿ ನೀಡಲಾಗಿದ್ದು, ಇದುವರೆಗೆ ಶೇಕಡಾ 96ರಷ್ಟು ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದುರಂತದ ಮೊದಲ ವರ್ಷದ ಸ್ಮರಣಾರ್ಥವಾಗಿ ಮೃತಪಟ್ಟವರಿಗೆ ಗೌರವ ಸಲ್ಲಿಸಲು ಏರ್ ಇಂಡಿಯಾ ಸಿಬ್ಬಂದಿ ಇಂದು (ಜೂನ್ 12) ತಮ್ಮ ಕಾರ್ಯಸ್ಥಳಗಳಲ್ಲಿ ಮಧ್ಯಾಹ್ನ 1.39ರಿಂದ 1.41ರವರೆಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಿದ್ದಾರೆ.

ಒಂದು ವರ್ಷ ಕಳೆದರೂ ಈ ದುರಂತದ ನೆನಪು ಇನ್ನೂ ಅನೇಕರ ಮನಸ್ಸಿನಲ್ಲಿ ಹಸಿರಾಗಿದ್ದು, ಮೃತರ ಕುಟುಂಬಗಳು ನ್ಯಾಯ ಮತ್ತು ಸಂಪೂರ್ಣ ತನಿಖಾ ವರದಿಗಾಗಿ ಕಾಯುತ್ತಿವೆ.

 

ಕೊಲ್ಲೂರಿಗೆ ಸಿಎಂ ವಿಜಯ್ ಭೇಟಿ: ವಿಶೇಷ ಪೂಜೆ ಇಲ್ಲ, ಸಾಮಾನ್ಯ ಭಕ್ತರಂತೆ ದೇವಿ ದರ್ಶನ

0

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಅಥವಾ ವಿಶೇಷ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂಬ ಸುದ್ದಿಗಳಿಗೆ ದೇವಸ್ಥಾನ ಆಡಳಿತ ಸ್ಪಷ್ಟನೆ ನೀಡಿದೆ.

ದೇವಸ್ಥಾನದ ಅರ್ಚಕ ನಿತ್ಯಾನಂದ ಅಡಿಗ ಮಾತನಾಡಿ, ಕೊಲ್ಲೂರು ಕ್ಷೇತ್ರದ ಸಂಪ್ರದಾಯದ ಪ್ರಕಾರ ಯಾವುದೇ ವಿವಿಐಪಿ ಅಥವಾ ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ಪೂಜೆ ನಡೆಸುವ ಪದ್ಧತಿ ಇಲ್ಲ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ವಿಜಯ್ ಅವರಿಗೂ ಸಾಮಾನ್ಯ ಭಕ್ತರಿಗೆ ಇರುವ ರೀತಿಯಲ್ಲಿಯೇ ದೇವಿಯ ದರ್ಶನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಪೂರ್ಣಕುಂಭ ಸ್ವಾಗತ ನೀಡಿ ಗೌರವ ಸಲ್ಲಿಸಲಾಗುತ್ತದೆ. ಆದರೆ ವಿಶೇಷ ಪೂಜೆ, ವಿಶೇಷ ಮಂಗಳಾರತಿ ಅಥವಾ ಹೆಚ್ಚುವರಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ಅವರು ದೇವಸ್ಥಾನಕ್ಕೆ ಆಗಮಿಸುವ ವೇಳೆಯಲ್ಲಿ ಮಹಾಮಂಗಳಾರತಿ ನಡೆಯುತ್ತಿದ್ದರೆ ಅದನ್ನು ವೀಕ್ಷಿಸುವ ಅವಕಾಶ ಮಾತ್ರ ದೊರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಶುಕ್ರವಾರವಾಗಿರುವುದರಿಂದ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವ ಹಾಗೂ ಇತರೆ ಧಾರ್ಮಿಕ ವಿಧಿವಿಧಾನಗಳು ಎಂದಿನ ನಿತ್ಯ ಕಾರ್ಯಕ್ರಮಗಳ ಭಾಗವಾಗಿದ್ದು, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಿಶೇಷವಾಗಿ ಆಯೋಜಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಅರ್ಚಕ ವೃಂದ, ದೇವಸ್ಥಾನ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಮನ್ವಯದಲ್ಲಿ ಎಲ್ಲ ವ್ಯವಸ್ಥೆಗಳು ಪೂರ್ಣಗೊಂಡಿವೆ.

ದೊಡ್ಡಣ್ಣ ನಿಧನ ಸುದ್ದಿ ವೈರಲ್: ‘ನನಗೇನೂ ಆಗಿಲ್ಲ’ ಎಂದು ವದಂತಿಗೆ ಬ್ರೇಕ್ ಹಾಕಿದ ಹಿರಿಯ ನಟ

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸುಳ್ಳು ಸುದ್ದಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಸ್ವತಃ ದೊಡ್ಡಣ್ಣ ಅವರೇ ಈ ವದಂತಿಯನ್ನು ಅಲ್ಲಗಳೆದಿದ್ದಾರೆ.

ಸಾಮಾಜಿಕ ಜಾಲತಾಣದ ಒಂದು ಪುಟದಲ್ಲಿ “ದೊಡ್ಡಣ್ಣ ಇನ್ನಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಶ್ರದ್ಧಾಂಜಲಿ ಪೋಸ್ಟರ್ ಪ್ರಕಟಿಸಲಾಗಿತ್ತು. “ನಿಮ್ಮ ಅಭಿನಯ ಮತ್ತು ಸಾಧನೆ ಯಾವಾಗಲೂ ನಮ್ಮೊಂದಿಗೆ ಇರುತ್ತದೆ” ಎಂಬ ಸಂದೇಶದೊಂದಿಗೆ ಪೋಸ್ಟ್ ವೈರಲ್ ಆಗಿತ್ತು.

ಈ ಬೆಳವಣಿಗೆಯಿಂದ ಆತಂಕಗೊಂಡ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿರುವ ದೊಡ್ಡಣ್ಣ, “ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ನೆಮ್ಮದಿಯಿಂದ ಇದ್ದೇನೆ. ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು” ಎಂದು ಹೇಳಿದ್ದಾರೆ.

ನಕಲಿ ಪೋಸ್ಟರ್‌ಗಳನ್ನು ಸೃಷ್ಟಿಸಿ ಸುಳ್ಳು ಸುದ್ದಿ ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಸಾಮಾಜಿಕ ಜಾಲತಾಣ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಪೊಲೀಸರ ಎದುರೇ ಪುಡಿರೌಡಿಗಳ ಪುಂಡಾಟ; ಬಿಡಿಸಲು ಬಂದ ಕಾನ್ಸ್‌ಟೇಬಲ್ ಮೇಲೂ ಹಲ್ಲೆ, ಐವರು ಜೈಲುಪಾಲು

0

ಗದಗ: ನಗರದ ಧೋಬಿಘಾಟ್ ಸಮೀಪದ ಬಾರ್‌ವೊಂದರ ಮುಂದೆ ಕ್ಷುಲ್ಲಕ ವಿಚಾರಕ್ಕೆ ಐವರು ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆ ಬಿಡಿಸಲು ಮುಂದಾದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆಯೂ ಹಲ್ಲೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೂಲಗಳ ಪ್ರಕಾರ, ಸಣ್ಣ ವಿಚಾರಕ್ಕೆ ಆರಂಭವಾದ ವಾಗ್ವಾದ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ರಸ್ತೆಯ ಮಧ್ಯದಲ್ಲೇ ಯುವಕರು ಹೊಡೆದಾಡಿಕೊಂಡ ಪರಿಣಾಮ ಸ್ಥಳದಲ್ಲಿ ಜನರು ಜಮಾಯಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಅಲ್ಲಿಂದ ತೆರಳುತ್ತಿದ್ದ ಕರ್ತವ್ಯದಲ್ಲಿರದ ಪೊಲೀಸ್ ಕಾನ್ಸ್‌ಟೇಬಲ್ ಅಶೋಕ್ ಪಾಟೀಲ್ ಘಟನೆ ಗಮನಿಸಿ ತಕ್ಷಣ ಮಧ್ಯಪ್ರವೇಶಿಸಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಎರಡು ಗುಂಪುಗಳನ್ನು ಸಮಾಧಾನಪಡಿಸಲು ಯತ್ನಿಸಿದರೂ, ಪುಡಿರೌಡಿಗಳು ಗಲಾಟೆ ನಿಲ್ಲಿಸುವ ಬದಲು ಅವರನ್ನೇ ನೂಕಾಡಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಕಾನ್ಸ್‌ಟೇಬಲ್‌ಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಆದಾಗ್ಯೂ, ಅವರು ಸಮಯಪ್ರಜ್ಞೆ ಮೆರೆದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಹಾಗೂ ಸಾರ್ವಜನಿಕ ಶಾಂತಿ ಭಂಗಗೊಳಿಸಿದ ಆರೋಪದಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಹಾಗೂ ಸಾರ್ವಜನಿಕ ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಘಟನೆಯ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರ ಸಮ್ಮುಖದಲ್ಲೇ ನಡೆದ ಈ ಪುಂಡಾಟ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಕರ್ತವ್ಯದಲ್ಲಿರದಿದ್ದರೂ ಧೈರ್ಯ, ಸಮಯಪ್ರಜ್ಞೆ ಹಾಗೂ ಕರ್ತವ್ಯನಿಷ್ಠೆ ಮೆರೆದು ಗಲಾಟೆಯನ್ನು ನಿಯಂತ್ರಣಕ್ಕೆ ತಂದ ಕಾನ್ಸ್‌ಟೇಬಲ್ ಅಶೋಕ್ ಪಾಟೀಲ್ ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿ ಶವಯಾತ್ರೆಯಲ್ಲಿ ತಪ್ಪದೆ ಕಾಣಿಸುವ ಬಿಳಿ ನಾಯಿ: ಅಚ್ಚರಿಗೊಂಡ ಡಂಬಳ ಗ್ರಾಮಸ್ಥರು! ಏನಿದು ವಿಸ್ಮಯ?

0

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅಪರೂಪದ ಹಾಗೂ ವಿಸ್ಮಯಕಾರಿ ಘಟನೆಯೊಂದು ಗ್ರಾಮಸ್ಥರ ಗಮನ ಸೆಳೆದಿದೆ.

ಗ್ರಾಮದಲ್ಲಿ ಯಾರೇ ನಿಧನ ಹೊಂದಿದರೂ, ಬಿಳಿ ಬಣ್ಣದ ಬೀದಿ ನಾಯಿಯೊಂದು ಅಂತ್ಯಯಾತ್ರೆಯಲ್ಲಿ ತಪ್ಪದೆ ಭಾಗವಹಿಸಿ ಸ್ಮಶಾನದವರೆಗೂ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗ್ರಾಮಸ್ಥರ ಪ್ರಕಾರ, ಕೆಲ ತಿಂಗಳ ಹಿಂದೆ ಪಾರಮ್ಮ ಎಂಬ ಮಹಿಳೆಯ ನಿಧನದ ಬಳಿಕ ಈ ವಿಚಿತ್ರ ನಡೆ ಆರಂಭವಾಗಿದೆ. ಆ ಬಳಿಕ ಗ್ರಾಮದಲ್ಲಿ ನಡೆಯುವ ಪ್ರತಿಯೊಂದು ಅಂತ್ಯಸಂಸ್ಕಾರದ ಮೆರವಣಿಗೆಯಲ್ಲೂ ಈ ನಾಯಿ ಕಾಣಿಸಿಕೊಳ್ಳುತ್ತಿದೆ.

ಮೃತರ ಮನೆ ಬಳಿಯಿಂದಲೇ ಮೆರವಣಿಗೆಯೊಂದಿಗೆ ಸಾಗುವ ಈ ನಾಯಿ, ಸ್ಮಶಾನಕ್ಕೆ ತಲುಪಿದ ಬಳಿಕವೂ ಅಂತ್ಯಸಂಸ್ಕಾರ ಪೂರ್ಣಗೊಳ್ಳುವವರೆಗೂ ಅಲ್ಲಿಯೇ ಉಳಿದುಕೊಂಡು ನಂತರ ತನ್ನ ದಾರಿಯನ್ನು ಹಿಡಿಯುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಘಟನೆ ಗ್ರಾಮದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಕೆಲವರು ಇದನ್ನು ಭಾವನಾತ್ಮಕ ಬಂಧನ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಇದು ಪ್ರಾಣಿಗಳ ವಿಶಿಷ್ಟ ಸಂವೇದನೆ ಎಂದು ಅಭಿಪ್ರಾಯಪಡುತ್ತಿದ್ದಾರೆ.

ಸ್ಥಳೀಯರಾದ ಈರಣ್ಣ ಸಲಗಾರ ಹಾಗೂ ಮಂಜುನಾಥ ಸಂಜಿವಣ್ಣವರ ಅವರು ಈ ಬಗ್ಗೆ ಮಾತನಾಡಿ, “ನಾವು ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿದ್ದೇವೆ. ಆದರೆ ಪ್ರತಿಯೊಂದು ಅಂತ್ಯಸಂಸ್ಕಾರದಲ್ಲಿ ತಪ್ಪದೆ ಭಾಗವಹಿಸುವ ನಾಯಿಯನ್ನು ಎಂದಿಗೂ ನೋಡಿಲ್ಲ. ಇದು ನಿಜಕ್ಕೂ ಆಶ್ಚರ್ಯಕರ ಸಂಗತಿ,” ಎಂದು ತಿಳಿಸಿದ್ದಾರೆ.

ಒಟ್ಟಾರೆ, ನಾಯಿಗಳು ಮಾನವ ಭಾವನೆಗಳನ್ನು ಸೂಕ್ಷ್ಮವಾಗಿ ಗ್ರಹಿಸುವ ಸಾಮರ್ಥ್ಯ ಹೊಂದಿರುವುದರಿಂದ ಇಂತಹ ವರ್ತನೆ ಕಾಣಿಸಬಹುದು ಎಂದು ಹೇಳಬಹುದಾಗಿದೆ.

error: Content is protected !!