ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಬೇಟೆಗೆ ಬಂದಿದ್ದ ಆರೋಪದ ಮೇಲೆ ಮೂವರು ಮೃತಪಟ್ಟಿರುವ ಎನ್ಕೌಂಟರ್ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಮೃತ ಆಥೋಣಿಸಾಮಿ ಅವರ ಪತ್ನಿ ಲೂರ್ದಾಮೇರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ನಲ್ಲಿ ನಿರ್ದಿಷ್ಟ ಅಧಿಕಾರಿಗಳ ಹೆಸರುಗಳನ್ನು ನಮೂದಿಸದೆ, ‘ಅರಣ್ಯ ಅಧಿಕಾರಿಗಳು, ಹನೂರು ವಿಭಾಗ’ ಎಂದು ಆರೋಪಿಗಳನ್ನು ಉಲ್ಲೇಖಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS)ಯ **103(1)**ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಹಾಗೂ ಚಾಮರಾಜನಗರ ಎಸ್ಪಿ ಮುತ್ತುರಾಜು ಅವರ ಸಮ್ಮುಖದಲ್ಲಿ ಎಫ್ಐಆರ್ ದಾಖಲಾಗಿದ್ದು, ಇಬ್ಬರೂ ಬೆಳಗ್ಗೆಯಿಂದ ಹನೂರು ಪೊಲೀಸ್ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.
ದೂರಿನಲ್ಲಿ ಏನಿದೆ?
ಲೂರ್ದಾಮೇರಿ ಅವರು ನೀಡಿರುವ ದೂರಿನ ಪ್ರಕಾರ, ಕುಟುಂಬವು ಹಸುಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದೆ. ನಿನ್ನೆ ಹಸುಗಳು ಮೇಯಲು ಕಾಡಿಗೆ ತೆರಳಿದ್ದು, ಬಳಿಕ ವಾಪಸ್ ಬಂದಿರಲಿಲ್ಲ. ಹಸುಗಳನ್ನು ಹುಡುಕಿಕೊಂಡು ಬರಲು ಸಂಜೆ ವೇಳೆ ಪತಿ ಆಥೋಣಿಸಾಮಿ, ಅವರ ಸಹೋದರ ಕುಮಾರ್, ಮೈದುನ ಪೀಟರ್ ಹಾಗೂ ದೊಡ್ಡಪ್ಪನ ಮಗ ಜೋಸೆಫ್ ಕಾಡಿಗೆ ತೆರಳಿದ್ದರು.
ಬೆಳಗ್ಗೆಯಾದರೂ ನಾಲ್ವರೂ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ಜೋಸೆಫ್ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮರಿಯಮಂಗಲ ಗ್ರಾಮದಿಂದ ಸುಮಾರು 4 ಕಿ.ಮೀ. ದೂರದ ಕಾಡಿನಲ್ಲಿ ವಿಶ್ರಾಂತಿ ಪಡೆಯುತ್ತಾ ಮಲಗಿದ್ದ ವೇಳೆ ಬೆಳಗಿನ ಜಾವ ಸುಮಾರು 3ರಿಂದ 5 ಗಂಟೆಯ ನಡುವೆ ಅರಣ್ಯಾಧಿಕಾರಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ಜೋಸೆಫ್ ತಿಳಿಸಿದ್ದಾಗಿ ಲೂರ್ದಾಮೇರಿ ದೂರಿನಲ್ಲಿ ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ತಾನು ತಪ್ಪಿಸಿಕೊಂಡು ಬಂದಿರುವುದಾಗಿ ಜೋಸೆಫ್ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳೇ ತಮ್ಮ ಪತಿಯನ್ನು ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಲೂರ್ದಾಮೇರಿ ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದು, ಎನ್ಕೌಂಟರ್ ಪ್ರಕರಣದ ತನಿಖೆ ಮತ್ತಷ್ಟು ಕುತೂಹಲ ಕೆರಳಿಸಿದೆ.

