ಬಳ್ಳಾರಿ: ಮೂಲಭೂತವಾದಿ ಚಿಂತನೆಗಳ ಪ್ರಚಾರ ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಯೋಜಿತ ಪೊಲೀಸ್ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರಲ್ಲಿ ಬಳ್ಳಾರಿ ಮೂಲದ ಅಬ್ದುಲ್ ಸಲಾಮ್ (36) ಸೇರಿದ್ದು, ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ವಿವಿಧ ರಾಜ್ಯಗಳ ಪೊಲೀಸರ ಸಹಯೋಗದಲ್ಲಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೂಲಕ ಉಗ್ರವಾದಿ ವಿಚಾರಧಾರೆಗಳನ್ನು ಹಬ್ಬಿಸುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ಮಾರ್ಚ್ 23ರಂದು ವಿಜಯವಾಡ ಟೌನ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ಆರಂಭಿಸಿದ್ದರು.
ವಿಂಚ್ಪೇಟ್ನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ ಬಂಧನದ ವೇಳೆ ದೊರೆತ ಮಾಹಿತಿ ಆಧರಿಸಿ ದೇಶವ್ಯಾಪಿ ಕಾರ್ಯಾಚರಣೆ ವಿಸ್ತರಿಸಲಾಯಿತು.
ಬಳ್ಳಾರಿಯಲ್ಲಿ ಆರೋಪಿ ಸಲಾಮ್ ಬಂಧನಕ್ಕೆ ಕೌಲ್ ಬಜಾರ್ ಪೊಲೀಸ್ ಠಾಣೆಯ ಸಹಕಾರ ಪಡೆದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಹೆಚ್ಚಿನ ವಿಚಾರಣೆಗಾಗಿ ಆಂಧ್ರ ಪ್ರದೇಶಕ್ಕೆ ಕರೆದೊಯ್ಯಲಾಗಿದೆ.
ತನಿಖೆಯಲ್ಲಿ ‘ಅಲ್ ಮಾಲಿಕ್ ಇಸ್ಲಾಮಿಕ್ ಯೂತ್’ ಎಂಬ ಗುಂಪಿನ ಮೂಲಕ ಯುವಕರನ್ನು ಅತಿರೇಕದ ಮಾರ್ಗಕ್ಕೆ ಸೆಳೆಯುವ ಪ್ರಯತ್ನ ನಡೆದಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸಂಘಟನೆ ತನ್ನ ಪ್ರಭಾವ ವಿಸ್ತರಿಸಿಕೊಂಡಿದ್ದು, ಹಲವು ರಾಜ್ಯಗಳಲ್ಲಿ ಸಂಪರ್ಕ ಜಾಲ ನಿರ್ಮಿಸಿಕೊಂಡಿತ್ತು.
ಈ ಬೆಳವಣಿಗೆ ದೇಶದ ಭದ್ರತಾ ವ್ಯವಸ್ಥೆಗೆ ಸವಾಲು ಎತ್ತುವಂತಿದ್ದು, ಪೊಲೀಸರು ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

