ಗದಗ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಗದಗ ಜಿಲ್ಲೆ ಮತ್ತೆ ಹಿನ್ನಡೆ ಅನುಭವಿಸಿದೆ. ಕಳೆದ ವರ್ಷ ಅಲ್ಪ ಏರಿಕೆ ಕಂಡಿದ್ದ ಫಲಿತಾಂಶ ಈ ಬಾರಿ ಕುಸಿದಿದ್ದರೂ, ಕೆಲವು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಬಾರಿ ಕೂಡ ಜಿಲ್ಲೆಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗ
ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಎಸ್ಎ ಪಿಯು ಕಾಲೇಜಿನ ವಿದ್ಯಾರ್ಥಿನಿ ಹುಲಿಗೆಮ್ಮ 589 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಲಕ್ಷ್ಮೇಶ್ವರದ ಎಸ್ಎಂಜಿವಿಜಿ ಕಾಲೇಜಿನ ರೋಹಿಣಿ ಬೆಟಗೇರಿ 584 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಎಂ.ಬಿ. ಪಾಟೀಲ ಪಿಯು ಕಾಲೇಜಿನ ಮಂಜುಳಾ ಹುಳಕಣ್ಣವರ 582 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗ
ಗದಗ ನಗರದ ಸರಕಾರಿ ಪಿಯು ಕಾಲೇಜಿನ ಸಮೃದ್ಧಿ ಸಿದ್ಧಲಿಂಗ 591 (ಶೇ. 98.4) ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸನ್ಮಾರ್ಗ ಪಿಯು ಕಾಲೇಜಿನ ಕಿರಣ ಹಿರೇಮಠ 590 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಮಲ್ಲಸಮುದ್ರದ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ರೇಖಾ ಕಣ್ಣೂರ 587 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗ
ಮುಂಡರಗಿ ಜೆಎ ಕಾಲೇಜಿನ ಪದ್ಮಪ್ರಿಯಾ ಶೆಟ್ಟರ್ ಹಾಗೂ ಗದಗ ತಾಲೂಕಿನ ಬಳಗಾನೂರ ಗ್ರಾಮದ ಚಿಕೇನಕೊಪ್ಪ ಶರಣರ ಕಾಲೇಜಿನ ಗೀತಾ ಹೂಗಾರ ಇಬ್ಬರೂ 590 (ಶೇ. 98.3) ಅಂಕಗಳೊಂದಿಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಗದಗ ಎಎಸ್ಎಸ್ ಕಾಲೇಜಿನ ವಿನೀತ ಬಂಡಾ, ಪ್ರಿಯಾಂಕಾ ಎಚ್ ಮತ್ತು ಆದಿತ್ಯ ರಾಯಬಾಗಿ ತಲಾ 589 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಡಿಡಿಪಿಯುಗೆ ಡಿಸಿ ನೋಟಿಸ್
ಜಿಲ್ಲೆಯ ಪಿಯುಸಿ ಫಲಿತಾಂಶ ಕುರಿತು ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಡಿಡಿಪಿಯು ಎಸ್.ಬಿ. ಮಸನಾಯಕ ಅವರಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕವೂ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದು ಹಾಗೂ ಜಿಲ್ಲೆಯ ಸ್ಥಾನ ಕುರಿತು ತಪ್ಪು ಮಾಹಿತಿ ನೀಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
“ಪಿಯು ಫಲಿತಾಂಶ ಕುರಿತು ಡಿಡಿಪಿಯು ಸಮಗ್ರ ಮಾಹಿತಿ ನೀಡಲೇಬೇಕು. ತಪ್ಪು ಮಾಹಿತಿ ನೀಡಿದರೆ ತಪ್ಪು ಸಂದೇಶ ಹೋಗುತ್ತದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದ್ದಾರೆ.

