Home Blog

ನರೇಗಲ್ಲಿಗೆ ಬಂತು ವರ್ಷದ ಮೊದಲ ಮಳೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಈ ವರ್ಷದ ಮಳೆಗಾಲವಿನ್ನೂ ಪ್ರಾರಂಭವಾಗಿಲ್ಲ. ಆದರೂ ಸೋಮವಾರ ಸಂಜೆ ನರೇಗಲ್ಲದಲ್ಲಿ 15-20 ನಿಮಿಷಗಳ ಕಾಲ ಅಕಾಲಿಕ ಮಳೆ ಸುರಿದು ರೈತರಲ್ಲಿ ಆತಂಕ ಮೂಡಿಸಿತು. ಮಳೆ ಸ್ವಲ್ಪ ಬಿರುಸಾಗಿಯೆ ಸುರಿಯಿತು. ರಸ್ತೆಯ ಮೇಲೆಲ್ಲ ನೀರು ಹರಿಯಿತು. ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳು ಮಳೆಯಿಂದ ತೊಂದರೆಗೊಳಗಾದರು.

ಚಳಿಗಾಲ ಸರಿದು ಈಗಿನ್ನೂ ಬೇಸಿಗೆ ಪ್ರಾರಂಭವಾಗುತ್ತಿದೆ. ಶಿವರಾತ್ರಿಯ ನಂತರ ಬಿಸಿಲಿಗೆ ಜನ ಶಿವಶಿವ ಎನ್ನುತ್ತಾರಂತೆ. ಆದರೆ ಶಿವರಾತ್ರಿ ಮುಗಿದು ಎಂಟು ದಿನಗಳು ಕಳೆದರೂ ಅಷ್ಟೊಂದು ಪರಿಯ ಬಿಸಿಲು ಜನರನ್ನು ಬಾಧಿಸಿಲ್ಲ. ಹೀಗಾಗಿ ಬೇಸಿಗೆ ಕಾಲದ ಪ್ರಾರಂಭವಿಲ್ಲದೆ ಸುರಿದ ಅಕಾಲಿಕ ಮಳೆ ಜನತೆಯಲ್ಲಿ ಸೋಜಿಗದ ಜೊತೆಗೆ ಆತಂಕವನ್ನುಂಟುಮಾಡಿತು.

ಜೋಳದ ಕಟಾವು ಆಗದೆ ಮಳೆಯಾದರೆ ಜೋಳದ ತೆನೆ ಕಪ್ಪಾಗುತ್ತದೆ. ಕಾಳುಗಳು ಕಪ್ಪಾಗುತ್ತವೆ. ಕುಶಿಬಿಯ ತೆನೆಯಲ್ಲಿ ನೀರು ಹೊಕ್ಕರೆ ಅದರ ಕಾಳೂ ಕಪ್ಪಾಗುತ್ತದೆ. ಹೊಲದಲ್ಲಿ ರಾಶಿ ಮಾಡಲು ಬಿಟ್ಟಿರುವ ಬೆಳೆಯೆಲ್ಲವೂ ಹಾಳಾಗುತ್ತದೆ. ನೀರಿನಿಂದ ತೊಯ್ದ ಹೊಟ್ಟನ್ನು ಒಯ್ಯಲು ಯಾರೂ ಇಚ್ಛೆ ಪಡುವುದಿಲ್ಲ. ಹೀಗೆ ರೈತರಿಗೆ ಅನೇಕ ತೊಂದರೆಗಳಾಗುತ್ತವೆ ಎಂದು ರೈತರಾದ ಬಾಳಪ್ಪ ಸೋಮಗೊಂಡ, ಕೆ.ಎಸ್. ಕಳಕಣ್ಣವರ, ಎಸ್.ಕೆ. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಪೂರ್ಣ ರಾಮಾಯಣ’ದಲ್ಲಿ ಕಳೆದುಹೋದ ಪ್ರೇಕ್ಷಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಶ್ರೀ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ ಸಹಕಾರದಲ್ಲಿ ಭಾರತೀಯ ವಿದ್ಯಾಭವನ ಆಯೋಜಿಸಿರುವ ಪುಲಿಗೆರೆ ಉತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ವಿದುಷಿ ಗಾಯತ್ರಿ ಚಂದ್ರಶೇಖರ ಅವರ ನೇತೃತ್ವದ ತಂಡ ಪ್ರಸ್ತುತಪಡಿಸಿದ ಭರತನಾಟ್ಯ ಪ್ರದರ್ಶನ ಸೇರಿದ್ದ ಸಾವಿರಾರು ಜನರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದ ಈ ತಂಡದ ಕಲಾವಿದೆಯರು ಸಂಪೂರ್ಣ ರಾಮಾಯಣದ ಸನ್ನಿವೇಶಗಳನ್ನೇ ಪ್ರೇಕ್ಷಕರ ಕಣ್ತುಂಬಿಸಿದರು. ರಾಮ, ಸೀತೆ, ಲಕ್ಷ್ಮಣ, ರಾವಣ, ವಿಭೀಷಣ, ಶಬರಿ, ಜಟಾಯು, ಹನುಮಂತ ಇತ್ಯಾದಿ ಪಾತ್ರಗಳನ್ನು ಸೀತಾಪಹರಣ, ಶ್ರೀರಾಮಪಟ್ಟಾಭಿಷೇಕದಂತಹ ಪ್ರಸಂಗಗಳನ್ನು ಪರಕಾಯ ಪ್ರವೇಶ ಮಾಡಿದವರಂತೆ ಲೀಲಾಜಾಲವಾಗಿ ಅಭಿನಯಿಸಿದ್ದು ಪ್ರೇಕ್ಷಕರ ಆಕರ್ಷಣೆಗೆ ಕಾರಣವಾಗಿತ್ತು.

ನಂತರ ಬೆಂಗಳೂರಿನ ವಿದುಷಿ ಲತಾ ಲಕ್ಷ್ಮೀಶ್ ಮತ್ತು ತಂಡದವರು ಪ್ರಸ್ತುತಪಡಿಸಿದ ಭರತನಾಟ್ಯ ನೃತ್ಯ ವೈವಿಧ್ಯ ಗಮನ ಸೆಳೆಯುವಂತಿತ್ತು. ಈ ತಂಡದ ಕಲಾವಿದರು ಪುಷ್ಪಾಂಜಲಿ ನೃತ್ಯವನ್ನು ಪ್ರಸ್ತುತಪಡಿಸುವ ಮೂಲಕ ನೃತ್ಯ ಪ್ರದರ್ಶನವನ್ನು ಪ್ರಾರಂಭಿಸಿದರು. ಪ್ರಥಮ ಪೂಜಿತ ವಿಘ್ನನಿವಾರಕ ಗಣೇಶ ಪಂಚರತ್ನ, ಶುದ್ಧ ನೃತ್ಯ ಬಂಧವಾಗಿರುವ ಜತಿಸ್ವರದಲ್ಲಿ ಪ್ರಸ್ತುತಪಡಿಸಿದರು. ಅರ್ಧನಾರೀಶ್ವರನ ನೃತ್ಯ ವೈಭವ ಎಲ್ಲರ ಗಮನ ಸೆಳೆಯಿತು. ನಂತರದಲ್ಲಿ ಅಭಂಗಗಳು, ತರುವಾಯ ಮಹಿಷ ಮರ್ದಿನಿ ನೃತ್ಯ ರೂಪಕ ಅತ್ಯಂತ ಸುಂದರವಾಗಿ ಮೂಡಿ ಬಂದಿತು. ನಿರಂತರವಾಗಿ ನೃತ್ಯ ಪ್ರದರ್ಶಿಸಿದ ಈ ಕಲಾವಿದೆಯರು ಪ್ರೇಕ್ಷಕರ ಕರತಾಡನದಿಂದ ಪುಲಕಿತರಾದರು.

ತಂಡದ ಸದಸ್ಯರಾದ ಲಾಸ್ಯ, ಅಂಜನಾ, ಗೌತಮಿ, ತೇಜಸ್ವಿನಿ, ಪೂಜಿತಾ, ಸುಖದಾ ಭಟ್, ರಿಶಿತಾ, ತನ್ಮಯಿ, ಯಶಸ್ವಿನಿ ಅವರ ನೃತ್ಯಗಳು ಎಲ್ಲರ ಮೆಚ್ಚುಗೆ ಗಳಿಸಿದವು. ನಂತರ 3 ದಿನಗಳ ಸಂಗೀತ, ನೃತ್ಯ, ಚಿತ್ರ ಸಂಭ್ರಮಗಳ ಪುಲಿಗೆರೆ ಉತ್ಸವದ ವೈಭವಕ್ಕೆ ಸಹಕರಿಸಿದ ಹಿರಿಯರನ್ನು ಭಾರತೀಯ ವಿದ್ಯಾಭವನದ ವತಿಯಿಂದ ಅಭಿನಂದಿಸಲಾಯಿತು.

ಅಪರೂಪದ ಕಲಾ ಪ್ರತಿಭೆಯಾಗಿರುವ ವಿದುಷಿ ಗಾಯತ್ರಿ ಚಂದ್ರಶೇಖರ ಅವರ ಹಾವ-ಭಾವ, ರೌದ್ರಾವತಾರದ ಭಂಗಿ, ಯುದ್ಧದ ಸನ್ನಿವೇಶ, ಕೊನೆಗೆ ಪಟ್ಟಾಭಿಷೇಕದ ದೃಶ್ಯಗಳು ಸಂಪೂರ್ಣ ರಾಮಾಯಣದ ಚಿತ್ರಣವನ್ನು ತೆರೆದಿಟ್ಟಂತಿತ್ತು. ವಿಶೇಷವಾಗಿ ಶಬರಿಯು ರಾಮನಿಗಾಗಿ ಕಾಯುತ್ತಿರುವ ವೃದ್ಧೆಯ ಪಾತ್ರವಂತೂ ಅದ್ಭುತವಾಗಿ ಮೂಡಿಬಂದಿತು. ಸುಮಾರು ಒಂದುವರೆ ಗಂಟೆಗೂ ಅಧಿಕ ಕಾಲ ಭರತನಾಟ್ಯವನ್ನು ಪ್ರದರ್ಶಿಸಿದ ಈ ತಂಡ ಕೊನೆಗೆ ರಾಮನ ಪಟ್ಟಾಭಿಷೇಕ ನೆರವೇರಿಸಿದಾಗ ಇಡೀ ಆವರಣದಲ್ಲಿದ್ದ ಪ್ರೇಕ್ಷಕರೆಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದರು.

ನಾಳೆ ಕೊಪ್ಪಳ ಬಂದ್: ಖಾಸಗಿ ಶಾಲೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ!

0

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಾಳೆ (ಮಂಗಳವಾರ) ಜಿಲ್ಲೆಯಾದ್ಯಾಂತ ಬಂದ್ ಘೋಷಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟವು ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ. ಇದೊಂದಿಗೆ, ಕೊಪ್ಪಳ ವಿವಿಯ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಕೂಡ ಮುಂದೂಡಲು ಆದೇಶ ಹೊರಡಿಸಲಾಗಿದೆ.

ನಾಳೆ ನಡೆಯಲಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಯಾವುದೇ ಅಪಾಯಕ್ಕೆ ಒಳಗಾಗದಂತೆ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮಂಡ್ಯ: ಡಿಂಕಾ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ – 14 ಆರೋಪಿಗಳ ವಿರುದ್ಧ FIR ದಾಖಲು

0

ಮಂಡ್ಯ: ಮಂಡ್ಯ ಜಿಲ್ಲಾ ಪಾಂಡವಪುರ ತಾಲ್ಲೂಕಿನ ಡಿಂಕಾ ಗ್ರಾಮದಲ್ಲಿ ಭೀಕರ ದೌರ್ಜನ್ಯ ಘಟನೆ ನಡೆದಿದೆ.

ಫೆಬ್ರವರಿ 22ರಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಚಿನಕುರಳಿ ಕಡೆ ಸಾಗುತ್ತಿದ್ದಾಗ ಗಿರೀಶ್, ಮಂಜು (ಅಲಿಯಾಸ್ ಪ್ಲಗ್), ಜೀವನ್, ಶಶಿಕುಮಾರ, ಅಯ್ಯಪ್ಪ, ಮದನ್, ಮಾದಪ್ಪ, ರವಿ, ನಿಂಗಣ್ಣ ಮತ್ತು ಗಣೇಶ ಸೇರಿದಂತೆ ಹತ್ತಾರು ಮಂದಿ ಕೈಯಲ್ಲಿ ಕಲ್ಲು ಮತ್ತು ದೊಣ್ಣೆ ಹಿಡಿದು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ.

ಘಟನೆಯ ವೇಳೆ, ವ್ಯಕ್ತಿಯ ಕಾಲು ಮತ್ತು ತಲೆಗೆ ಗಂಭೀರ ಗಾಯಗಳು ಸಂಭವಿಸಿದ್ದು, ಹಲ್ಲೆ ಮಾಡುವ ಕಿಡಿಗೇಡಿಗಳು ಈ ಕ್ರೌರ್ಯವನ್ನು ವಿಡಿಯೋದಲ್ಲಿ ದಾಖಲಿಸಿದ್ದರು. ಸ್ಥಳೀಯರು ಹಾಗೂ ಆಂಬ್ಯುಲೆನ್ಸ್ ಮೂಲಕ ಹಲ್ಲೆಗೀಡಾದ ವ್ಯಕ್ತಿಯನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ತರುವ ಮೂಲಕ ಚಿಕಿತ್ಸೆ ನೀಡಲಾಗಿತ್ತು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ 14 ಆರೋಪಿಗಳ ವಿರುದ್ಧ FIR ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಪೋಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.

 

ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಕಸ್ಟಡಿಗೆ | ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಮಧ್ಯರಾತ್ರಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದರಿಂದ ಬಹುತೇಕ ಕಾರ್ಯಕರ್ತರಲ್ಲಿ ಅಸಮಾಧಾನ ಮಡುಗಟ್ಟಿದೆ.

ಪ್ರತಿನಿತ್ಯ ನೂರಾರು ಜನ ಕಾರ್ಯಕರ್ತರು ಮನೆ ಬಳಿ ಬರುತ್ತಿದ್ದರು. ಅನೇಕ ಕೆಲಸ ಕಾರ್ಯಗಳ ಬೇಡಿಕೆಯನ್ನು ಹೊತ್ತು ತರುವ ಸಾರ್ವಜನಿಕರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಮನೆ ಮುಂದೆ ತುಂಬಿರುತ್ತಿದ್ದರು. ಆದರೆ ರವಿವಾರ ಮನೆಯ ಸುತ್ತಲೂ ಖಾಲಿ ಖಾಲಿ ಆಗಿದೆ. ಮನೆಯ ಕೆಲಸಗಾರರನ್ನು ಹೊರತುಪಡಿಸಿ ಕುಟುಂಬಸ್ಥರು ಬೇರೆಕಡೆ ಸ್ಥಳಾಂತರವಾಗಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಶಾಸಕರ ಪತ್ನಿ ಸರೋಜಾ ಮಾನಸಿಕ ಖಿನ್ನತೆಗೆ ಒಳಗಾಗಿ ಊಟವಿಲ್ಲದೆ, ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ಶಾಸಕ ಚಂದ್ರು ಲಮಾಣಿ ಎಂದಿನಂತೆ ನಿಗದಿತ ಕಾರ್ಯಕ್ರಮಗಳ ಪ್ರಕಾರ ಶನಿವಾರ ಮುಂಜಾನೆ 7.30ರಿಂದಲೇ ಸೋಮೇಶ್ವರ ದೇವಸ್ಥಾನದಲ್ಲಿ ನಡೆದಿರುವ ಪುಲಿಗೆರೆ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಸುಮಾರು 1 ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ ಆಲಿಸಿದ ಅವರು ನಂತರ ಮನೆಗೆ ತೆರಳಿ 10 ಗಂಟೆಯ ಹೊತ್ತಿಗೆ ದೇವಸ್ಥಾನಕ್ಕೆ ಮರಳಿ ಬಂದು ಪುಲಿಗೆರೆ ಉತ್ಸವದ ನಿಮಿತ್ತ ನಡೆದ ಸೋಮೇಶ್ವರ ಪಲ್ಲಕ್ಕಿ ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡು ಸ್ವತಃ ಪಲ್ಲಕ್ಕಿಯನ್ನು ಹೊತ್ತು ಸೇವೆ ಸಲ್ಲಿಸಿದ್ದರು. ನಂತರ ಅಲ್ಲಿಂದ ತೆರಳಿದ ಅವರು ಆಸ್ಪತ್ರೆಯಲ್ಲಿ ವಿ.ಜಿ. ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಿದ್ದರು.

ಶನಿವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿದ್ದಾಗಲೇ ಲೋಕಾಯುಕ್ತ ದಾಳಿ ನಡೆದಿದ್ದು, ಏಕಾಏಕಿ ನಡೆದ ದಾಳಿಯಿಂದ ಅವರು ಆಪ್ತ ಕಾರ್ಯದರ್ಶಿಗಳಾದ ಮಂಜುನಾಥ ವಾಲ್ಮೀಕಿ ಮತ್ತು ಗುರು ಅವರು ಸಹ ಈ ಘಟನೆಯಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿಂದ ಪ್ರಾರಂಭವಾದ ಲೋಕಾಯುಕ್ತ ತನಿಖೆ ಸುಮಾರು 12 ಗಂಟೆಗಳ ಕಾಲ, ಮಧ್ಯರಾತ್ರಿ 2 ಗಂಟೆಯವರೆಗೂ ನಡೆದು ಅಲ್ಲಿಂದ ಶಾಸಕ ಡಾ. ಚಂದ್ರು ಲಮಾಣಿಯವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ಗದುಗಿಗೆ ತೆರಳಿದರು.

ಶನಿವಾರ ಮಧ್ಯಾಹ್ನ ಶಾಸಕರ ಮೇಲೆ ಲೋಕಾಯುಕ್ತ ದಾಳಿ ನಡೆದ ಸುದ್ದಿ ಹರಡುತ್ತಿದ್ದಂತೆ ಸುದ್ದಿ ತಿಳಿದ ಬಿಜೆಪಿಯ ನೂರಾರು ಕಾರ್ಯಕರ್ತರು, ಮುಖಂಡರು ಜಮಾಯಿಸಿ ಶಾಸಕರ ಮೇಲೆ ಷಡ್ಯಂತ್ರದಿಂದ ಅವರನ್ನು ಸಿಲುಕಿಸುವ ಕಾರ್ಯವನ್ನು ಮಾಡಲಾಗಿದೆ, ದಲಿತ ಮುಖಂಡರನ್ನು ತುಳಿಯುವ ಕಾರ್ಯ ಇದಾಗಿದೆ, ಶಾಸಕರು ಅಮಾಯಕರು ಎಂದು ಆಕ್ರೋಶ ಹೊರಹಾಕಿದರು.

ಸಚಿವ ಎಚ್.ಕೆ. ಪಾಟೀಲರೇ ಇದಕ್ಕೆ ಕಾರಣ, ಅವರಿಂದಲೇ ಈ ಹೇಯ ಕೃತ್ಯ ನಡೆದಿದೆ, ಕಾನೂನು ಸಚಿವರಿಂದಲೇ ಕಾನೂನು ಉಲ್ಲಂಘನೆಯಾಗುತ್ತಿದೆ, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೋರಾಗಿ ಕೂಗುತ್ತಿದ್ದರು. ಇದು ಬಂಜಾರ ಸಮಾಜದ ಯುವ ಮುಖಂಡ ಬೆಳೆಯುತ್ತಿರುವದನ್ನು ಸಹಿಸಲಾಗದವರ ಕಾರ್ಯ ಎಂದು ಆಕ್ರೋಶದಿಂದ ಕೂಗಿದರು. ಮಧ್ಯರಾತ್ರಿ ಶಾಸಕರನ್ನು ಹೊರಕ್ಕೆ ಕರೆತರುತ್ತಿದ್ದಂತೆ ಕಾರ್ಯಕರ್ತರ ಅಕ್ರೋಶ ಮುಗಿಲುಮುಟ್ಟಿತ್ತು. ಪೊಲೀಸ್ ಅಧಿಕಾರಿಗಳು, ನೂರಾರು ಪೊಲೀಸ್ ಸಿಬ್ಬಂದಿಗಳು ಪರಿಸ್ಥಿತಿ ನಿಭಾಯಿಸಿದರು.

ಸಹಕಾರಿ ಸಂಘದ ನೂತನ ನ್ಯಾಯಬೆಲೆ ಅಂಗಡಿ, ಕಡಲೆ ಖರೀದಿ ಕೇಂದ್ರ ಪ್ರಾರಂಭ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಗ್ರಾಮದಿಂದ ದೂರವಿರುವ ಮಾರುತಿ ನಗರ ಕುಟುಂಬಗಳ ಬೇಡಿಕೆಯಂತೆ ನ್ಯಾಯಬೆಲೆ ಅಂಗಡಿಯ ಪರವಾನಿಗೆಯ ನಂತರ ತಡವಾಗಿಯಾದರೂ ಆರಂಭವಾಗಿದ್ದು, ಆ ಭಾಗದ ಬಡವರಿಗೆ ಅನುಕೂಲವಾಗಲಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಂ. 2ರ ನೂತನ ಅಧ್ಯಕ್ಷ ಮಹೇಶ ಮುಸ್ಕಿನಭಾವಿ ಹೇಳಿದರು.

ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಂ. 2ರ ನೂತನ ನ್ಯಾಯಬೆಲೆ ಅಂಗಡಿ ಹಾಗೂ ಸರ್ಕಾರದಿಂದ ಬೆಂಬಲ ಬೆಲೆಯ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದಿನ ತಿಂಗಳಿನಿಂದ ಮಾರುತಿ ನಗರದ ಸಾರ್ವಜನಿಕ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ನ್ಯಾಯಬೆಲೆ ಅಂಗಡಿ ತೆರೆದು ಪಡಿತರ ವಿತರಿಸಲಾಗುವುದು. ಈ ಹಿಂದೆ ಗ್ರಾಮ ಸಭೆಯ ನಿರ್ಣಯದಂತೆ ಅಭಿವೃದ್ಧಿ ಅಧಿಕಾರಿಗಳು ಖಾಲಿ ಇರುವ ನಿವೇಶನವನ್ನು ನಮ್ಮ ಸಂಘಕ್ಕೆ ಒದಗಿಸಿಕೊಡಬೇಕು. ಕಡಲೆ ಖರೀದಿಗೆ ಪ್ರತಿ ಕ್ವಿಂಟಲ್‌ಗೆ ಸರ್ಕಾರ 5875 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ ಒಂದು ಖಾತೆಗೆ 10 ಎಕರೆವರೆಗೆ 40 ಕ್ವಿಂಟಲ್ ಖರೀದಿ ಮಾಡಲಾಗುತ್ತಿದ್ದು, ರೈತರು ಸಹಕಾರ ನೀಡಬೇಕು ಎಂದರು.

ಪಿ.ಡಿ.ಒ ಅಮೀರನಾಯಕ ಮಾತನಾಡಿ, ರೈತರ ಧ್ವನಿಯಾಗಿರುವ ಸಹಕಾರ ಸಂಘವು ಇನ್ನು ಮುಂದೆ ಬಡವರಿಗೆ ಸರ್ಕಾರ ಉಚಿತವಾಗಿ ನೀಡುವ ಆಹಾರ ಧಾನ್ಯವನ್ನು ಪೂರೈಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿರುವುದು ಶ್ಲಾಘನೀಯ. ಗ್ರಾಮಸಭೆಯ ನಿರ್ಣಯದಂತೆ ಸಂಘಕ್ಕೆ ಗ್ರಾಮ ಪಂಚಾಯಿತಿಯಿಂದ ನಿವೇಶನ ಒದಗಿಸುವ ಕುರಿತು ಪರಿಶೀಲಿಸಲಾಗುವುದು ಎಂದರು.

ಸಂಘದ ಉಪಾಧ್ಯಕ್ಷ ಪರಸಪ್ಪ ಕರಿಯಲ್ಲಪ್ಪನವರ, ಲಕ್ಕುಂಡಿ ಬಿ.ಜೆ.ಪಿ ಮಂಡಲದ ಅಧ್ಯಕ್ಷ ಪ್ರಕಾಶ ಅರಹುಣಶಿ ಮಾತನಾಡಿದರು. ಹಿರಿಯರಾದ ಎ.ಬಿ. ಬಿರಾದಾರ, ನಿರ್ದೇಶಕರಾದ ಅಶೋಕ ಮುಸ್ಕಿನಭಾವಿ, ಮಲ್ಲಪ್ಪ ಹಗರಿ, ನಿಂಗಪ್ಪ ಮಂಗಳೂರು, ವಿರೂಪಾಕ್ಷಪ್ಪ ಕಮತರ, ಪಂಚಾಕ್ಷರಯ್ಯ ನಾಗಾವಿಮಠ, ಅನ್ನಪೂರ್ಣ ಹಡಗಲಿ, ಗಂಗವ್ವ ಮುಕ್ಕಣ್ಣವರ, ಕಲ್ಲಪ್ಪ ಬಣವಿ ವೇದಿಕೆಯಲ್ಲಿದ್ದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಬಿ. ಬೆಣಕಲ್ ಸ್ವಾಗತಿಸಿದರು. ಬಸವರಾಜ ಮುಳ್ಳಾಳ ನಿರೂಪಿಸಿದರು. ಶಿವು ಭಜಂತ್ರಿ ವಂದಿಸಿದರು.

ಸಂಘದ ಹಿರಿಯ ಸದಸ್ಯ ಅಜ್ಜಣ್ಣ ಪಾಟೀಲ ಮಾತನಾಡಿ, ಮಾರುತಿ ನಗರದ ಜನರ ಅನುಕೂಲಕ್ಕಾಗಿಯೇ ಕಳೆದ 4 ವರ್ಷದ ಹಿಂದೆಯೇ ಜಿಲ್ಲಾಧಿಕಾರಿಗಳು ನಮ್ಮ ಸಂಘಕ್ಕೆ ನ್ಯಾಯಬೆಲೆ ಅಂಗಡಿ ತೆರೆಯಲು ಅನುಮತಿ ನೀಡಿದ್ದರು. ಆದರೆ ಆಹಾರ ಇಲಾಖೆಯ ಅಧಿಕಾರಿಗಳ ನಿಷ್ಕಾಳಜಿಯಿಂದ ಇಲ್ಲಿಯವರೆಗೂ ಮುಂದೂಡುತ್ತಾ ಬಂದಿದ್ದು ವಿಷಾದನೀಯ. ಗ್ರಾಮದ ಅಭಿವೃದ್ಧಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಗ್ರಾಮದ ಜನರ ಕುಂದುಕೊರತೆಗಳ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ವಿ.ವಿ ಬ್ಲೂ ಆಗಿ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿನಿ ರೇಖಾ ಗೋಕಾವಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಜರುಗಿದ ಮಹಿಳಾ ಖೋಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ಏಪ್ರಿಲ್ 4ರಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಂತರ ವಿಶ್ವವಿದ್ಯಾಲಯಗಳ ದಕ್ಷಿಣ ವಲಯ ಖೋಖೋ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾನೂನು ಹಾಗೂ ಸಂಸದಿ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಾಚಾರ್ಯರು ಆರ್.ಎಂ. ಕಲ್ಲನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಲ್ಪ ಶಾಲೆಯಲ್ಲಿ ‘ಟ್ರೆಡಿಷನಲ್ ಡೇ’

0

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಪ್ರಕಲ್ಪ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಟ್ರೆಡಿಷನಲ್ ಡೇ’ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ್ದು ಶಾಲಾ ಆವರಣದಲ್ಲಿ ವೈವಿಧ್ಯಮಯ ಸಂಸ್ಕೃತಿಯ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಕನ್ನಡ, ತಮಿಳು, ತೆಲುಗು, ಮರಾಠಿ ಹಾಗೂ ಉತ್ತರ ಭಾರತದ ಸಂಪ್ರದಾಯಿಕ ವೇಷಭೂಷಣಗಳಲ್ಲಿ ಕಂಗೊಳಿಸಿದ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು.

ಶಾಲೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಎಸ್.ವಿ. ಹುಬ್ಬಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಉಡುಪಿನ ಸೊಬಗು ಮತ್ತೆ ನೆನಪಾಗಲಿ. ವೇಷ-ಭೂಷಣ ಬದಲಾಗಬಹುದು. ಆದರೆ, ಸಂಸ್ಕೃತಿ ಮತ್ತು ಸಂಸ್ಕಾರ ಎಂದಿಗೂ ಶಾಶ್ವತವಾಗಿರುತ್ತದೆ ಎಂದರು.

ವಿದ್ಯಾರ್ಥಿಗಳು ಪರಂಪರೆಯ ಆಚರಣೆಗಳ ಮಹತ್ವವನ್ನು ವಿವರಿಸಿ, ನಮ್ಮ ಸಂಸ್ಕೃತಿಯನ್ನು ಉಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಪಿ.ಎಸ್. ಹುಬ್ಬಳ್ಳಿ ಹಾಗೂ ಮಾರ್ಗದರ್ಶಕರಾದ ಎಸ್.ಎಸ್. ಹುಬ್ಬಳ್ಳಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಎಂ.ಎಂ. ಡಂಬಳ ಅಭಿನಂದಿಸಿದರು.

ಬೆಂಗಳೂರು: ಎಂ.ಫಾರ್ಮಾ ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂ.ಫಾರ್ಮಾ ಕೋರ್ಸ್ ಪ್ರವೇಶ ಎರಡನೇ ಮತ್ತು ಅಂತಿಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಫೆ.25ರಂದು ಮಧ್ಯಾಹ್ನ 2 ಗಂಟೆಯೊಳಗೆ ವಿದ್ಯಾರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಫೆ.25ರಂದು ಸಂಜೆ 8 ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, ಫೆ.26ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಸೀಟು ಹಂಚಿಕೆಗೊಳ್ಳುವ ವಿದ್ಯಾರ್ಥಿಗಳು ಫೆ.27ರಿಂದ ಮಾರ್ಚ್ 4ರವರೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರಗಳನ್ನು ಪಡೆಯಬೇಕು. ನಂತರ, ಮಾರ್ಚ್ 5ರೊಳಗೆ ತಮ್ಮ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.

ಮಹತ್ವದ ಸೂಚನೆ: ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದುವರೆಗೆ ಯಾವುದೇ ಸೀಟು ಹಂಚಿಕೆಯಾಗದ ಅಥವಾ ಈಗಾಗಲೇ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಎರಡನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳಿಗೆ ಆಯ್ಕೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ KEA ವೆಬ್‌ಸೈಟ್ ಪರಿಶೀಲಿಸುವಂತೆ ತಿಳಿಸಲಾಗಿದೆ.

 

ಶಾಸಕ ಡಾ. ಚಂದ್ರು ಜನರಿಗೆ ದ್ರೋಹವೆಸಗಿದ್ದಾರೆ: ರಾಮಣ್ಣ ಲಮಾಣಿ 

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಾಸಕ ಡಾ. ಚಂದ್ರು ಲಮಾಣಿ ಭ್ರಷ್ಟಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದು ಈ ಕ್ಷೇತ್ರದ ಜನರ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಇವರಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲದ ಕಾರಣ ಕೂಡಲೇ ರಾಜೀನಾಮೆ ಕೊಟ್ಟು ಪ್ರಾಮಾಣಿಕವಾಗಿ ವೈದ್ಯರ ವೃತ್ತಿ ಮುಂದುವರೆಸಬೇಕು ಎಂದು ಮಾಜಿ ಶಾಸಕರಾದ ರಾಮಣ್ಣ ಲಮಾಣಿ ಮತ್ತು ರಾಮಕೃಷ್ಣ ದೊಡ್ಡಮನಿ ಆಗ್ರಹಿಸಿದರು.

ಅವರು ಸೋಮವಾರ ಪಟ್ಟಣದಲ್ಲಿ ಶಾಸಕರ ಮನೆ ಮೇಲೆ ಲೋಕಾಯುಕ್ತ ದಾಳಿಯಾದ ವೇಳೆ ಬಿಜೆಪಿ ಕಾರ್ಯಕರ್ತರು ಇದು ಕಾಂಗ್ರೆಸ್ ಪಕ್ಷ ಮತ್ತು ಹೆಚ್.ಕೆ. ಪಾಟೀಲರ ಷಡ್ಯಂತ್ರ ಎಂಬ ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಿರಹಟ್ಟಿ ಮತಕ್ಷೇತ್ರ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದೆ. ದಿ. ಉಪನಾಳ ಗೂಳಪ್ಪನವರು, ಟಿ.ಬಿ. ಬಾಳಿಕಾಯಿ, ಎಸ್.ಎಸ್. ಪಾಟೀಲ, ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ ಮತ್ತು ನಾನು ಸೇರಿ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕ್ಷೇತ್ರಕ್ಕೆ ಹೆಸರು ತರುವ ಕೆಲಸ ಮಾಡಿದ್ದೇವೆ. ಆದರೆ ವಿದ್ಯಾವಂತನೆಂದು ಜನರು ಕೊಟ್ಟ ಅವಕಾಶವನ್ನು ದುರುಪಯೋಗ ಮಾಡಿಕೊಂಡು ಲಂಚದ ಮೂಲಕ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ವಿದ್ಯೆ ಇದ್ದರೂ ವಿನಯ, ಸಂಸ್ಕಾರವೇ ಇಲ್ಲದ ಅಧಿಕಾರದ ಮದದಿಂದ ಕ್ಷೇತ್ರದ ಅಭಿವೃದ್ಧಿಯ ಹಣ ಕೊಳ್ಳೆ ಹೊಡೆದುಕೊಂಡು ಹೋಗುವ ಇವರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಜೀವಬೆದರಿಕೆ, ಜಾತಿನಿಂದನೆ ಕೇಸ್ ಮಾಡಿಸುವ ಸಂಸ್ಕೃತಿಯ ಶಾಸಕನಿಂದ ಜನ ರೋಸಿ ಹೋಗಿದ್ದಾರೆ. ಪಕ್ಷಕ್ಕೆ ನೈತಿಕ ಹಕ್ಕಿದ್ದರೆ ಬಿಜೆಪಿ ಪಕ್ಷದವರು ಮತ್ತು ಜನರ ಹಿತದೃಷ್ಟಿಯಿಂದ ರಾಜ್ಯಪಾಲರು ಇವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕ್ಷೇತ್ರಕ್ಕೆ ಕೋಟ್ಯಾಂತರ ರೂ. ಹಣ ಹರಿದು ಬಂದಿದೆ. ಆದರೆ ಡಾ. ಚಂದ್ರು ಲಮಾಣಿ ಕಾಂಗ್ರೆಸ್ ಪಕ್ಷದಿಂದ ನಯಾಪೈಸೆ ದುಡ್ಡು ಬಂದಿಲ್ಲ ಎಂದು ಹೇಳುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಮಾಡಲು ಸಾಕಷ್ಟು ಕೆಲಸವಿದ್ದರೂ ಅವರ ಚಿತ್ತ ಕೇವಲ ದುಡ್ಡು ಮಾಡುವತ್ತ ಇದೆ. ಆದಾಗ್ಯೂ ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ರಾಜರಾಣಿ ಹೆಚ್.ಕೆ. ಪಾಟೀಲರ ಹೆಸರನ್ನು ಎಳೆದು ತರುವ ಕೆಟ್ಟ ಮನಸ್ಥಿತಿ ಜನರಿಗೆ ಅರ್ಥವಾಗುತ್ತದೆ. ವಿದ್ಯಾವಂತರಾದ ಇವರು ಆತ್ಮಸಾಕ್ಷಿಯಿಂದ ರಾಜಕೀಯ ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು ಎಂದರು.

ಬಳಿಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಾಸಕ ಡಾ. ಚಂದ್ರು ಲಮಾಣಿ ಅವರ ರಾಜೀನಾಮೆ ಪಡೆಯಬೇಕು ಎಂದು ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಮಣ್ಣ ಲಮಾಣಿ (ಶಿಗ್ಲಿ), ಯಲ್ಲಪ್ಪ ಸೂರಣಗಿ, ನೀಲಪ್ಪ ಶರಸೂರಿ, ಶಿವಣ್ಣ ಕಬ್ಬೇರ, ಕಲ್ಲಪ್ಪ ಗಂಗಣ್ಣವರ, ಮನೋಜ ರಾಟೋಡ, ಜಗದೀಶ ಹುಲಿಗೆಮ್ಮನವರ, ಶಿವರಾಜಗೌಡ ಪಾಟೀಲ, ಪರಮೇಶ ಲಮಾಣಿ, ತಿಪ್ಪಣ್ಣ ಸಂಶಿ, ನಾಗರಾಜ ದೊಡ್ಡಮನಿ, ವಾಸೀಂ ಅಕ್ರಮ ಮುಚ್ಚಾಲೆ, ರಾಜು ಓಲೇಕಾರ, ರಾಜರತ್ನ ಹುಲಗೂರ, ನೀಲಪ್ಪ ಪಡಗೇರಿ, ಶಶಿಕಲಾ ಬಡಿಗೇರ, ರಫೀಕ ಕಲಬುರ್ಗಿ, ಸಂತೋಷ ತೇಲಿ, ರಂಜಾನಸಾಬ ನದಾಫ್ ಮುಂತಾದವರಿದ್ದರು.

ಕೆಪಿಸಿಸಿ ಸದಸ್ಯೆ ಸುಜಾತಾ ದೊಡ್ಡಮನಿ, ಚನ್ನಪ್ಪ ಜಗಲಿ, ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷ ಜಿ.ಆರ್. ಕೊಪ್ಪದ, ಫಕ್ಕಿರೇಶ ಮ್ಯಾಟಣ್ಣವರ, ವಿರೇಂದ್ರ ಪಾಟೀಲ, ನಾಗರಾಜ ಮಡಿವಾಳರ, ಎಸ್.ಪಿ. ಬಳಿಗಾರ, ಶರಣು ಗೋಡಿ, ಸೋಮಣ್ಣ ಬೆಟಗೇರಿ ಮಾತನಾಡಿ, ಭ್ರಷ್ಟಾಚಾರದಿಂದ ಶಿಕ್ಷೆಗೊಳಗಾದ ಶಾಸಕನನ್ನು ಬಿಜೆಪಿ ಸಮರ್ಥಿಸಿಕೊಂಡರೆ, ಬೆಂಬಲಿಸಿದರೆ ಇದು ಬಿಜೆಪಿ ಸಂಸ್ಕೃತಿಯನ್ನು ಸಾಕ್ಷೀಕರಿಸಿದಂತಾಗುತ್ತದೆ. ಬಿಜೆಪಿಗರ ಹೋರಾಟಕ್ಕೆ ಯಾರೂ ಬೆಂಬಲ ನೀಡಬಾರದು. ಹಾಗೇನಾದರೂ ಆದರೆ ಇದಕ್ಕೆ ಕಾಂಗ್ರೆಸ್ ಪಕ್ಷವೂ ದಿಟ್ಟ ಹೋರಾಟಕ್ಕೆ ಸಿದ್ಧ ಎಂದರು.

error: Content is protected !!