Home Blog

ಪೋಷಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಟೆಕ್ಕಿ ರೋಹನ್ ಮಾನಸಿಕ ಅಸ್ವಸ್ಥನಲ್ಲ ಎಂದ ನಿಮ್ಹಾನ್ಸ್

ಬೆಂಗಳೂರು: ನಗರದ ವಿಜ್ಞಾನನಗರದ ಆದರ್ಶ ವಿಸ್ತಾ ವಿಲ್ಲಾದಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪದಡಿ ಬಂಧನಕ್ಕೊಳಗಾಗಿರುವ ಟೆಕ್ಕಿ ರೋಹನ್ ಚಂದ್ರ ಭಟ್ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಘಟನೆ ಬಳಿಕ ರೋಹನ್ ಸ್ಕಿಜೋಫ್ರೇನಿಯಾ ಸೇರಿದಂತೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂಬ ಮಾಹಿತಿ ಹರಿದಾಡಿದ್ದರೂ, ನಿಮ್ಹಾನ್ಸ್ ವೈದ್ಯಕೀಯ ಪರೀಕ್ಷೆಯಲ್ಲಿ ಆತ ಸಂಪೂರ್ಣ ಮಾನಸಿಕವಾಗಿ ಸದೃಢನಾಗಿದ್ದಾನೆ ಎಂಬುದು ದೃಢಪಟ್ಟಿದೆ.

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ನವೀನ್‌ಚಂದ್ರ ಭಟ್ ಹಾಗೂ ದಂತ ವೈದ್ಯೆ ಡಾ. ಶ್ಯಾಮಲಾ ಭಟ್ ಅವರನ್ನು ಚಾಕುವಿನಿಂದ ಇರಿದು ಕೊಂದ ಪ್ರಕರಣದ ತನಿಖೆ ವೇಳೆ ಆರೋಪಿಯನ್ನು ನಿಮ್ಹಾನ್ಸ್‌ಗೆ ದಾಖಲಿಸಿ ವೈದ್ಯಕೀಯ ವೀಕ್ಷಣೆಗೆ ಒಳಪಡಿಸಲಾಗಿತ್ತು. ಒಂದು ವಾರದ ಪರಿಶೀಲನೆ ಬಳಿಕ ವೈದ್ಯರು ರೋಹನ್‌ಗೆ ಒತ್ತಡ, ಆತಂಕ ಅಥವಾ ಸ್ಕಿಜೋಫ್ರೇನಿಯಾ ಸೇರಿದಂತೆ ಯಾವುದೇ ಗಂಭೀರ ಮಾನಸಿಕ ಕಾಯಿಲೆಯ ಲಕ್ಷಣಗಳು ಕಂಡುಬಂದಿಲ್ಲ ಎಂದು ವರದಿ ನೀಡಿದ್ದಾರೆ.

ಪೊಲೀಸ್ ತನಿಖೆ ಪ್ರಕಾರ, ಸ್ಟಾರ್ಟ್‌ಅಪ್ ಆರಂಭಿಸಲು 10 ಲಕ್ಷ ರೂಪಾಯಿ ನೀಡುವಂತೆ ಪೋಷಕರನ್ನು ರೋಹನ್ ಒತ್ತಾಯಿಸಿದ್ದ. ಆದರೆ ಉದ್ಯೋಗ ಪಡೆದು ಸ್ಥಿರವಾಗುವಂತೆ ಸಲಹೆ ನೀಡಿದ ಪೋಷಕರು ಹಣ ನೀಡಲು ನಿರಾಕರಿಸಿದ್ದರು. ಇದೇ ವಿಚಾರದಲ್ಲಿ ಆತನ ಅಸಮಾಧಾನ ಹೆಚ್ಚಾಗಿತ್ತು.

ಇದರ ಜೊತೆಗೆ ತನ್ನ ಮೊಬೈಲ್ ಸಂಖ್ಯೆಯನ್ನು ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಮಾಡಲು ತಂದೆ ಅವಕಾಶ ನೀಡದಿದ್ದ ವಿಚಾರವೂ ಕುಟುಂಬದೊಳಗಿನ ಕಲಹಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ಎರಡೂ ವಿಚಾರಗಳ ಬಗ್ಗೆ ನಡೆದ ತೀವ್ರ ವಾಗ್ವಾದವೇ ಫೆಬ್ರವರಿ 11ರಂದು ನಡೆದ ಭೀಕರ ಕೊಲೆಗೆ ಕಾರಣವಾಯಿತು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಪೊಲೀಸರು ಸುಮಾರು 500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳು ಹಾಗೂ ಫಾರೆನ್ಸಿಕ್ ವರದಿಗಳನ್ನು ಸೇರಿಸಿದ್ದಾರೆ. ಆರೋಪಿಯ ಬಟ್ಟೆ ಮತ್ತು ದೇಹದಲ್ಲಿ ಪತ್ತೆಯಾದ ರಕ್ತದ ಕಲೆಗಳು ಮೃತ ಪೋಷಕರದ್ದೇ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಬಿ.ಕೆ. ಹರಿಪ್ರಸಾದ್‌ಗೆ ಕೆಪಿಸಿಸಿ ಸಾರಥ್ಯ: ಸಚಿವ ಸ್ಥಾನ ಬದಲು ಪಕ್ಷ ಸಂಘಟನೆಯ ಹೊಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ಕುರಿತು ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್ ಅವರನ್ನು ಸರ್ಕಾರಕ್ಕಿಂತ ಪಕ್ಷ ಸಂಘಟನೆಯ ಜವಾಬ್ದಾರಿಗೆ ಆಯ್ಕೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೂಡ ಬಲವಾಗಿ ಕೇಳಿಬಂದಿತ್ತು. ಆದರೆ ಅವರ ಆಯ್ಕೆಗೆ ಪಕ್ಷದೊಳಗಿನ ಒಂದು ಬಣ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಪರ ಒಲವು ತೋರಿದೆ ಎನ್ನಲಾಗಿದೆ.

ಸದ್ಯ ವಿಧಾನಪರಿಷತ್ ಸದಸ್ಯರಾಗಿರುವ ಹರಿಪ್ರಸಾದ್ ಅವರು ಕಾಂಗ್ರೆಸ್ ಸಂಘಟನೆ ಹಾಗೂ ರಾಷ್ಟ್ರೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಪಕ್ಷವನ್ನು ಬಲಪಡಿಸುವ ಉದ್ದೇಶದಿಂದಲೇ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆಗೆ ಹಿಂದುಳಿದ ವರ್ಗಗಳಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಮತ್ತು ಸ್ಥಾನಮಾನ ನೀಡುವ ಉದ್ದೇಶವೂ ಈ ನಿರ್ಧಾರದ ಹಿಂದೆ ಇದೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಬಳಿಕ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಮಧ್ಯಪ್ರದೇಶದಲ್ಲಿ ಆಲಿಕಲ್ಲು ಮಳೆ ಅಬ್ಬರ: 36 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ 36 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಮುಂದಿನ ಕೆಲವು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಮಂಗಳವಾರ ರಾಜ್ಯದ ಬಹುತೇಕ ನಗರಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದ್ದು, ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಉಷ್ಣಾಂಶದಲ್ಲಿ ಇಳಿಕೆ ಕಂಡುಬಂದಿದೆ. ಇಂದೋರ್ ಹಾಗೂ ಉಜ್ಜಯಿನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯೆಲ್ಲೋ ಅಲರ್ಟ್ ಘೋಷಿಸಿದ ಜಿಲ್ಲೆಗಳು

ಇಂದೋರ್, ಉಜ್ಜಯಿನಿ, ಗ್ವಾಲಿಯರ್, ಶಿಯೋಪುರ್, ಮೊರೆನಾ, ಭಿಂಡ್, ದತಿಯಾ, ಶಿವಪುರಿ, ಗುಣಾ, ಅಶೋಕನಗರ, ನಿವಾರಿ, ಟಿಕಮ್ಗಢ್, ಛತ್ತರ್ಪುರ, ಪನ್ನಾ, ದಿಂಡೋರಿ, ಮಂಡ್ಲಾ, ಬಾಲಾಘಾಟ್, ಸಿಯೋನಿ, ಛಿಂದ್ವಾರಾ, ಪಾಂಡುರ್ನಾ, ನರ್ಮದಾಪುರಂ, ಬೇತುಲ್, ಹರ್ದಾ, ಬುರ್ಹಾನ್ಪುರ, ಖಾಂಡ್ವಾ, ದೇವಾಸ್, ಶಾಜಾಪುರ, ರಾಜ್ಗಢ್, ಖಾರ್ಗೋನೆ, ರತ್ಲಾಮ್,

ಝಾಬುವಾ, ಅಲಿರಾಜ್ಪುರ ಹಾಗೂ ಬರ್ವಾನಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.ಹವಾಮಾನ ಇಲಾಖೆ ಜನರಿಗೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಗುಡುಗು-ಮಿಂಚಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಲಹೆ ನೀಡಿದೆ. ಅಲ್ಲದೆ, ಸ್ಥಳೀಯ ಆಡಳಿತದಿಂದ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದೆ.

ಮಳೆಯ ಪರಿಣಾಮ ರಾಜ್ಯದ ಹಲವು ನಗರಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಭೋಪಾಲ್ ಮತ್ತು ಗ್ವಾಲಿಯರ್‌ನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು,

ಇಂದೋರ್‌ನಲ್ಲಿ 38.2 ಡಿಗ್ರಿ, ಉಜ್ಜಯಿನಿಯಲ್ಲಿ 37.5 ಡಿಗ್ರಿ ಹಾಗೂ ಜಬಲ್ಪುರದಲ್ಲಿ 38.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.ಮುಂದಿನ ಕೆಲವು ದಿನಗಳವರೆಗೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

 

ಡಿಕೆಶಿ ಸಚಿವ ಸಂಪುಟದ ಮೊದಲ ಪಟ್ಟಿ ಫೈನಲ್: ಪರಮೇಶ್ವರ್ ಏಕೈಕ DCM, 13 ಮಂದಿ ಇಂದು ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟದ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು,

ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಾಯ ಕೇಳಿಬಂದಿದ್ದರೂ, ಹೈಕಮಾಂಡ್ ಆ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ.

ಜಾತಿ ಸಮೀಕರಣ ಮತ್ತು ರಾಜಕೀಯ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಲಿರುವವರು

ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರ ಹೆಸರು ಸೇರಿದ್ದು, ಉಳಿದಂತೆ ಸತೀಶ್ ಜಾರಕಿಹೊಳಿ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಡಾ. ಯತೀಂದ್ರ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೊದಲ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರು ಮತ್ತು ಸಚಿವಾಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಹಂತದಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾತಿ ಸಮೀಕರಣಕ್ಕೆ ಆದ್ಯತೆ

ಸಚಿವ ಸಂಪುಟ ರಚನೆಯಲ್ಲಿ ಜಾತಿ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಕಾಂಗ್ರೆಸ್ ನಾಯಕತ್ವ ಹೆಚ್ಚಿನ ಒತ್ತು ನೀಡಿದೆ. ಒಕ್ಕಲಿಗ ಸಮುದಾಯದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೂ ಮೂರು ಸ್ಥಾನಗಳು ದೊರೆತಿವೆ.

ದಲಿತ ಸಮುದಾಯದಡಿ ಡಾ. ಜಿ. ಪರಮೇಶ್ವರ್ ಸೇರಿ ಮೂವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಕುರುಬ ಸಮುದಾಯದ ಇಬ್ಬರು ನಾಯಕರಿಗೂ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಪರಿಶಿಷ್ಟ ಪಂಗಡ (ಎಸ್‌ಟಿ), ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳಿಂದ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ಸಮತೋಲನ ಸಾಧಿಸಲು ಪ್ರಯತ್ನಿಸಲಾಗಿದೆ.

ಇಂದು ಅದ್ಧೂರಿ ಪ್ರಮಾಣವಚನ

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಲವು ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಹೊಸ ಸರ್ಕಾರದ ಮೊದಲ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಈ ರೂಪುರೇಷೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ದಿಕ್ಕು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ.

13 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ-ಮೊಬೈಲ್ ರಿಕವರಿ: ಮಹಾಲಿಂಗಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ

0

ಬಾಗಲಕೋಟೆ: ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂ. ಮೌಲ್ಯದ ಕಳುವಾದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದಾರೆ.

2025-26ನೇ ಸಾಲಿನಲ್ಲಿ ಸಾರ್ವಜನಿಕರಿಂದ ಕಳುವಾಗಿದ್ದ 62 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 9.15 ಲಕ್ಷ ರೂಪಾಯಿಗಳಷ್ಟಾಗಿದೆ ಎಂದು ಅಂದಾಜಿಸಲಾಗಿದೆ.

ಅದೇ ರೀತಿ 2026ನೇ ಸಾಲಿನಲ್ಲಿ ಕಳೆದುಹೋದ 30 ಮೊಬೈಲ್‌ಗಳನ್ನು CEIR ಪೋರ್ಟಲ್ ತಂತ್ರಜ್ಞಾನ ಬಳಸಿ ಟ್ರ್ಯಾಕ್ ಮಾಡಿ ರಿಕವರಿ ಮಾಡಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ 4.19 ಲಕ್ಷ ರೂಪಾಯಿಗಳಾಗಿದೆ.

ಎರಡೂ ಸೇರಿ ಒಟ್ಟು 13.34 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲೀಕರಿಗೆ ಮರಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯನ್ನು ಎಸ್‌ಪಿ ಸಿದ್ಧಾರ್ಥ ಗೋಯಲ್ ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ಸೇರಿ 30 ಮಂದಿಯ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಬೃಹತ್ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ.

ನಿಗಮದ ಹಣದ ಅಕ್ರಮ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಆಪ್ತರ ಪಾತ್ರವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಸಿಬಿಐ ತಿಳಿಸಿದೆ. ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ನಡೆದಿರುವ ಆರ್ಥಿಕ ಅಕ್ರಮಗಳ ತನಿಖೆಯನ್ನು ಪೂರ್ಣಗೊಳಿಸಿರುವ ಸಿಬಿಐ, ಮೂರು ಪ್ರಕರಣಗಳಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಜಿ. ರಸ್ತೆ ಶಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆರಂಭಗೊಂಡಿತ್ತು. ಬಳಿಕ ನ್ಯಾಯಾಲಯದ ನಿರ್ದೇಶನದಂತೆ ತನಿಖೆಯನ್ನು ಇಲಾಖೆಯ ಇತರೆ ಘಟಕಗಳಿಗೂ ವಿಸ್ತರಿಸಲಾಗಿತ್ತು.

ಸಿಬಿಐ ತನಿಖೆಯ ಪ್ರಕಾರ, ಮಾಜಿ ಸಚಿವ ಬಿ. ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಅವರು ಸೇರಿ ಅಕ್ರಮ ಹಣ ವರ್ಗಾವಣೆಗೆ ಸಂಚು ರೂಪಿಸಿದ್ದರು.

ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮಾ ಎಂಬಾತ ನಕಲಿ ದಾಖಲೆಗಳನ್ನು ಬಳಸಿಕೊಂಡು 18 ಬೋಗಸ್ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ. ನಿಗಮದ ಎಂಡಿ ಮತ್ತು ಅಕೌಂಟ್ಸ್ ಅಧಿಕಾರಿಗಳ ನಕಲಿ ಸಹಿ ಹಾಗೂ ರಬ್ಬರ್ ಸ್ಟಾಂಪ್‌ಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂಪಾಯಿ ಪೈಕಿ 89.63 ಕೋಟಿ ರೂಪಾಯಿಯನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ವರ್ಗಾಯಿಸಿ, ಬಳಿಕ ನಗದು, ಚಿನ್ನ ಹಾಗೂ ಐಷಾರಾಮಿ ಬೆನಾಮಿ ವಾಹನಗಳ ರೂಪದಲ್ಲಿ ಪರಿವರ್ತಿಸಲಾಗಿದೆ ಎಂದು ಸಿಬಿಐ ಹೇಳಿದೆ. ಈ ಅಕ್ರಮಕ್ಕೆ ಕೆಲವು ಬ್ಯಾಂಕ್ ಅಧಿಕಾರಿಗಳ ಸಹಕಾರವೂ ದೊರೆತಿತ್ತು ಎಂಬ ಆರೋಪವೂ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.

ಸ್ಮಾರ್ಟ್ ಕಂಪ್ಯೂಟರ್ ಲ್ಯಾಬ್ ಮತ್ತು ರೊಟ್ಟಿ ತಯಾರಿಕಾ ಯಂತ್ರಗಳ ಖರೀದಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ನೆಕ್ಕಂಟಿ ನಾಗರಾಜ್ ಅವರ ಆಪ್ತರಿಗೆ ಸೇರಿದ ಸಂಸ್ಥೆಗೆ 13.95 ಕೋಟಿ ರೂಪಾಯಿ ಮೌಲ್ಯದ ಗುತ್ತಿಗೆ ನೀಡಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.

ಈ ವ್ಯವಹಾರದ ಪ್ರತಿಫಲವಾಗಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ತಲುಪಿದ ಎಂದು ಹೇಳಲಾಗಿರುವ 1.20 ಕೋಟಿ ರೂಪಾಯಿ ಅಕ್ರಮ ಹಣವನ್ನು ಅವರ ಸಹೋದರಿ, ಭಾವ, ವೈಯಕ್ತಿಕ ಸಹಾಯಕ (ಪಿಎ) ಹಾಗೂ ಬಳ್ಳಾರಿಯಲ್ಲಿರುವ ಫಾರ್ಮ್‌ಹೌಸ್ ಮಾಲೀಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.

ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ 4.90 ಕೋಟಿ ರೂಪಾಯಿ ಕಾಮಗಾರಿಯಲ್ಲಿ ನಿಯಮಬಾಹಿರವಾಗಿ ಉಪಗುತ್ತಿಗೆ ನೀಡಲಾಗಿತ್ತು ಎಂದು ಸಿಬಿಐ ತಿಳಿಸಿದೆ.

ಈ ವ್ಯವಹಾರದಲ್ಲಿ ನೆಕ್ಕಂಟಿ ನಾಗರಾಜ್ ಅವರ ಕುಟುಂಬಕ್ಕೆ 64 ಲಕ್ಷ ರೂಪಾಯಿ ಹಾಗೂ ಇಲಾಖೆಯ ಸೆಕ್ಷನ್ ಅಧಿಕಾರಿ ಪ್ರಕಾಶ್ ಅವರಿಗೆ 15.50 ಲಕ್ಷ ರೂಪಾಯಿ ಲಂಚ ರೂಪದಲ್ಲಿ ಪಾವತಿಸಲಾಗಿದೆ ಎಂಬ ಆರೋಪವನ್ನೂ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಚಾರ್ಜ್‌ಶೀಟ್ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಂಗ ಪ್ರಕ್ರಿಯೆ ಮತ್ತಷ್ಟು ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

ದೆಹಲಿ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ; 21 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ.

ಇಂದು ಬೆಳಿಗ್ಗೆ ಸುಮಾರು 8:50ರ ವೇಳೆಗೆ ರೆಸ್ಟೋರೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಕಟ್ಟಡದ ವಿವಿಧ ಮಹಡಿಗಳಿಗೆ ವ್ಯಾಪಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ತುರ್ತು ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅವಘಡದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ಮೃತರಲ್ಲಿ ಕೆಲ ವಿದೇಶಿ ಪ್ರಜೆಗಳೂ ಸೇರಿದ್ದಾರೆ ಎನ್ನಲಾಗಿದೆ. ಇನ್ನು 37 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಆರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಆರಂಭವಾದ ಬೆಂಕಿ ಬಳಿಕ ಮೇಲಿನ ಮಹಡಿಗಳಿಗೂ ಹರಡಿಕೊಂಡಿದೆ. ಸ್ಥಳದಲ್ಲಿ ಹತ್ತು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ದೇವೇಗೌಡರ ಮನೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್: ಆಶೀರ್ವಾದ ಪಡೆದು ಪ್ರಮಾಣವಚನಕ್ಕೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಗೌರವಪೂರ್ವಕವಾಗಿ ಆಹ್ವಾನಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಬೆನ್ನಲ್ಲೇ, ಡಿಕೆ ಶಿವಕುಮಾರ್ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿದರು. ಅಲ್ಲಿ ಹಿರಿಯ ನಾಯಕರನ್ನು ಭೇಟಿಯಾದ ಅವರು, ದೇವೇಗೌಡರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದರು.

ಭೇಟಿಯ ವೇಳೆ ರಾಜ್ಯದ ಅಭಿವೃದ್ಧಿ, ಉತ್ತಮ ಆಡಳಿತ ಹಾಗೂ ಜನಪರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹಿರಿಯರ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಜೊತೆಗೆ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಹಿರಿಯ ನಾಯಕರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನಿಸುವ ಮೂಲಕ ಡಿಕೆ ಶಿವಕುಮಾರ್ ಸೌಹಾರ್ದ ರಾಜಕಾರಣದ ಸಂದೇಶ ರವಾನಿಸಿದ್ದಾರೆ.

ವಿಶೇಷವೆಂದರೆ, 1985ರಲ್ಲಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಅದೇ ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಾಗುವ ಸಂದೇಶವನ್ನು ಈ ಭೇಟಿಯ ಮೂಲಕ ಡಿಕೆ ಶಿವಕುಮಾರ್ ನೀಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಹೊಸ ಸರ್ಕಾರದ ಆರಂಭದಲ್ಲೇ ಸಮನ್ವಯ ಮತ್ತು ಸಹಕಾರದ ರಾಜಕಾರಣಕ್ಕೆ ಒತ್ತು ನೀಡುವ ಪ್ರಯತ್ನವಾಗಿ ಈ ನಡೆ ಗಮನ ಸೆಳೆದಿದೆ.

ಎಲ್ಲರನ್ನೂ ಜೊತೆಗೂಡಿಸಿಕೊಂಡು ಕರ್ನಾಟಕ ಮುನ್ನಡೆಸಿರಿ: ಡಿ.ಕೆ. ಶಿವಕುಮಾರ್ʼಗೆ ಸೋನಿಯಾ ಗಾಂಧಿ ಶುಭಾಶಯ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ ಅವರು, ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಡೆದ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, “ಎಲ್ಲರನ್ನೂ ಜೊತೆಯಾಗಿ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಸಾಮರ್ಥ್ಯ ನಿಮ್ಮಲ್ಲಿದೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಹೊಸ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸಿ, ಇನ್ನಷ್ಟು ಯಶಸ್ಸು ಸಾಧಿಸಲಿ” ಎಂದು ಶುಭ ಹಾರೈಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇಂದು ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಎಂ ಜೊತೆಗೆ ಸುಮಾರು 10ರಿಂದ 12 ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

ಇದರೊಂದಿಗೆ ಕಳೆದ ಕೆಲವು ವಾರಗಳಿಂದ ಕಾಂಗ್ರೆಸ್ ಪಾಳಯದಲ್ಲಿ ನಡೆದಿದ್ದ ಅಧಿಕಾರ ಹಸ್ತಾಂತರದ ಚರ್ಚೆ ಹಾಗೂ ಗೊಂದಲಗಳಿಗೆ ಅಂತ್ಯ ಸಿಗಲಿದೆ. ಇದೇ ವೇಳೆ, ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹೊಸ ಜವಾಬ್ದಾರಿ ನೀಡಲಾಗಿದೆ.

ರಾಜ್ಯದಲ್ಲಿ ಹೊಸ ನಾಯಕತ್ವದ ಅಡಿಯಲ್ಲಿ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಆಡಳಿತ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ರಚನೆ ಹಾಗೂ ಆಡಳಿತಾತ್ಮಕ ನಿರ್ಧಾರಗಳತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.

ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು; ರೋಹಿತ್-ಹಾರ್ದಿಕ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಬಿಸಿಸಿಐ

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದೆ. ಈಗಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎರಡೂ ಸರಣಿಗಳಿಗಾಗಿ ತಂಡಗಳನ್ನು ಪ್ರಕಟಿಸಿದ್ದು,

ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಇಬ್ಬರೂ ಸಂಪೂರ್ಣ ಫಿಟ್ ಆಗಿರುವುದು ಖಚಿತವಾದ ಬಳಿಕವೇ ಅಂತಿಮವಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಆಟಗಾರರ ದೈಹಿಕ ಸಾಮರ್ಥ್ಯ ಪರಿಶೀಲನೆಗಾಗಿ ಬಿಸಿಸಿಐ, ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಅವರಿಗೆ ಆರೋಗ್ಯ ತಪಾಸಣೆಗೆ ಹಾಜರಾಗುವಂತೆ ಸೂಚಿಸಿದೆ. ಇದರಂತೆ ಹಾರ್ದಿಕ್ ಪಾಂಡ್ಯ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಒಂದು ವಾರ ಕಾಲ ತರಬೇತಿ ಮತ್ತು ಫಿಟ್ನೆಸ್ ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ.

ತಪಾಸಣೆ ಪೂರ್ಣಗೊಂಡ ಬಳಿಕ ಅವರು ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ಶರ್ಮಾ ಅವರ ಫಿಟ್ನೆಸ್ ಕುರಿತಾಗಿ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಜಮ್ಮು ಮತ್ತು ಕಾಶ್ಮೀರದ ಪ್ರತಿಭಾವಂತ ವೇಗಿ ಔಕಿಬ್ ನಬಿ ದಾರ್ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡದಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಜೂನ್ 6ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆಯುವ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಲು ಬಿಸಿಸಿಐ ಔಕಿಬ್ ಅವರಿಗೆ ಅವಕಾಶ ನೀಡಿದೆ.

ಅಫ್ಘಾನಿಸ್ತಾನ ತಂಡದಲ್ಲಿ ಗುಣಮಟ್ಟದ ಸ್ಪಿನ್ನರ್‌ಗಳಿರುವುದರಿಂದ, ನೆಟ್‌ಗಳಲ್ಲಿ ಬ್ಯಾಟರ್‌ಗಳಿಗೆ ಸವಾಲೊಡ್ಡಲು ಸನ್‌ರೈಸರ್ಸ್ ಹೈದರಾಬಾದ್ ತಂಡದ ಲೆಗ್ ಸ್ಪಿನ್ನರ್ ಜೀಶನ್ ಅನ್ಸಾರಿ ಅವರನ್ನೂ ಅಭ್ಯಾಸ ಶಿಬಿರಕ್ಕೆ ಕರೆಸಲಾಗಿದೆ.

ಕೇವಲ ಏಳು ದಿನಗಳ ಅವಧಿಯಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಬೇಕಿರುವ ಕಾರಣ ವೇಗದ ಬೌಲರ್‌ಗಳ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆ ಇದೆ. ಇದರ ಜೊತೆಗೆ ಹವಾಮಾನ ವೈಪರಿತ್ಯವೂ ತಲೆನೋವಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಸೇರಿದಂತೆ ಪ್ರಮುಖ ವೇಗಿಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸಿದ್ಧತೆ ನಡೆಸಲು ವಿಶೇಷ ತರಬೇತಿ ನೀಡಲಾಗುತ್ತಿದೆ. ಬ್ಯಾಟರ್‌ಗಳಿಗೂ ಹೆಚ್ಚಿನ ಅಭ್ಯಾಸದ ಅಗತ್ಯವಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ರಣಜಿ ಟ್ರೋಫಿಯ ಹಾಲಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಔಕಿಬ್ ನಬಿ ದಾರ್, ಕಳೆದ ಋತುವಿನಲ್ಲಿ 60 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದಿದ್ದರು. ಆದಾಗ್ಯೂ, ಬಿಸಿಸಿಐ ಪ್ರಕಟಿಸಿರುವ 15 ಸದಸ್ಯರ ತಂಡದಲ್ಲಿ ಅವರಿಗೆ ಸ್ಥಾನ ಸಿಕ್ಕಿಲ್ಲ.

ಆದರೆ ಅಭ್ಯಾಸ ಪಂದ್ಯಗಳ ಮೂಲಕ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅವರಿಗೆ ಅವಕಾಶ ದೊರೆತಿದ್ದು, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್‌ರೊಂದಿಗೆ ತರಬೇತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಮತ್ತೊಬ್ಬ ವೇಗಿ ಶಶಿಕಾಂತ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಕೂಡ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮಾಜಿ ನಾಯಕ ಹಾಗೂ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ದಿಲೀಪ್ ವೆಂಗ್ಸರ್ಕರ್, ದೇಶಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಅವಕಾಶ ನೀಡದಿದ್ದರೆ ರಣಜಿ ಟ್ರೋಫಿಯ ಮಹತ್ವವೇನು ಎಂದು ಪ್ರಶ್ನಿಸಿದ್ದಾರೆ.

ಭಾರತ ತಂಡದ ಮೊದಲ ಅಭ್ಯಾಸ ಪಂದ್ಯ ಮಂಗಳವಾರ ಮಧ್ಯಾಹ್ನ ಆರಂಭವಾಗಲಿದೆ. ಆದರೆ ಇತ್ತೀಚೆಗೆ ಐಪಿಎಲ್ ಫೈನಲ್‌ನಲ್ಲಿ ಆಡಿದ್ದ ಆಟಗಾರರು ಮೊದಲ ದಿನದ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆಯಿದೆ.

ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಶುಭಮನ್ ಗಿಲ್, ಸಾಯಿ ಸುದರ್ಶನ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಮಾನವ್ ಸುತಾರ್ ಹಾಗೂ ವಾಷಿಂಗ್ಟನ್ ಸುಂದರ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ತಂಡದ ಭಾಗವಾಗಿದ್ದಾರೆ.

ಅಫ್ಘಾನಿಸ್ತಾನ ಸರಣಿಗೆ ಮುನ್ನ ಭಾರತ ತಂಡದ ಸಿದ್ಧತೆಗಳು ಚುರುಕುಗೊಂಡಿದ್ದು, ಫಿಟ್ನೆಸ್, ತಂಡದ ಸಮತೋಲನ ಮತ್ತು ಯುವ ಆಟಗಾರರ ಪ್ರದರ್ಶನದ ಮೇಲೆ ಬಿಸಿಸಿಐ ವಿಶೇಷ ಗಮನ ಹರಿಸಿದೆ.

error: Content is protected !!