Home Blog

ವಿದ್ಯುತ್ ಖಾಸಗೀಕರಣ ವಿರೋಧಿಸಿ ಗರ್ಜನೆ: ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಯಾವುದೇ ಕ್ರಮವೂ ರೈತರು, ವಿದ್ಯುತ್ ಬಳಕೆದಾರರು ಹಾಗೂ ವಿದ್ಯುತ್ ವಲಯದ ನೌಕರರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಆಸ್ತಿಯನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸುವಂತಾಗಿದೆ ಎಂದು ಗದಗ ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ ಕಲ್ಯಾಣಶೆಟ್ಟಿ ಹೇಳಿದರು.

ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಹಾಗೂ ವಿದ್ಯುತ್ ಕ್ಷೇತ್ರ ಖಾಸಗೀಕರಣವನ್ನು ವಿರೋಧಿಸಿ ರೈತರು, ಬಳಕೆದಾರರು ಮತ್ತು ಹೆಸ್ಕಾಂ ನೌಕರರಿಗಾಗಿ ಆಯೋಜಿಸಿದ್ದ ಆಕ್ಷೇಪಣಾ ಅರ್ಜಿ ಸಲ್ಲಿಕೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಸ್ಕಾಂ ಸಂಸ್ಥೆಯು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ವಿದ್ಯುತ್ ಕಂಬಗಳು, ಉಪಕೇಂದ್ರಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳ ಬಳಕೆಗೆ ನೀಡುವುದು ಸರಿಯಲ್ಲ. ಖಾಸಗೀಕರಣ ಜಾರಿಯಾದರೆ ರೈತರಿಗೆ ದೊರೆಯುತ್ತಿರುವ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಕಡ್ಡಾಯವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಗೃಹಜ್ಯೋತಿ, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಹಾಗೂ ಗಂಗಾ ಕಲ್ಯಾಣ ಸೇರಿದಂತೆ ಹಲವು ಜನಪರ ಯೋಜನೆಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಜೊತೆಗೆ ಕೈಮಗ್ಗ ನೇಕಾರರು ಹಾಗೂ ಕಾಫಿ ಬೆಳೆಗಾರರಿಗೆ ನೀಡಲಾಗುತ್ತಿರುವ ಸಬ್ಸಿಡಿ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಟಾಕಪ್ಪ ಸಾತಪುತೆ ಮಾತನಾಡಿ, ಖಾಸಗಿ ಕಂಪನಿಗಳ ಪ್ರವೇಶದಿಂದ ಕೆಲವು ರಾಜ್ಯಗಳಲ್ಲಿ ರೈತರು ಮತ್ತು ಗ್ರಾಹಕರು ಸಂಕಷ್ಟ ಅನುಭವಿಸಿರುವ ಉದಾಹರಣೆಗಳಿವೆ. ಆದ್ದರಿಂದ ಜೂನ್ 23ರೊಳಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುರೇಶ ಸ್ವಾದಿ, ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮುಕ್ತಾರ ಅಹ್ಮದ್ ಗದಗ, ಬಾಬಣ್ಣ ಉಮಚಗಿ, ಬಸವರಾಜ ಸೂರಣಗಿ ಹಾಗೂ ಬಸವರಾಜ ಟೋಕಾಳಿ ಮಾತನಾಡಿ, ಯಾವುದೇ ಕಾರಣಕ್ಕೂ ಟಾಟಾ ಪವರ್ ಕಂಪನಿಗೆ ವಿತರಣಾ ಪರವಾನಗಿ ನೀಡಬಾರದು. ಖಾಸಗೀಕರಣದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಂಜನೇಪ್ಪ ಬಿ., ಶಾಖಾಧಿಕಾರಿಗಳಾದ ಕಿರಣಕುಮಾರ ಪಮ್ಮಾರ, ರಘುಪತಿ ನಾಯಕ, ಇರನಗೌಡ, ಬಸವರಾಜ, ವಿಜಯ, ಸಂತೋಷ ನಾಯಕ ಸೇರಿದಂತೆ ಅನೇಕ ರೈತರು, ಲೈನ್‌ಮನ್‌ಗಳು ಹಾಗೂ ವಿದ್ಯುತ್ ಬಳಕೆದಾರರು ಭಾಗವಹಿಸಿದ್ದರು.

“ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ರೈತರಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಲು ಎಲ್ಲರೂ ಖಾಸಗೀಕರಣವನ್ನು ವಿರೋಧಿಸಬೇಕು.”

ರಾಜೇಶ ಕಲ್ಯಾಣಶೆಟ್ಟಿ

ಕಾರ್ಯನಿರ್ವಾಹಕ ಇಂಜಿನಿಯರ್, ಗದಗ

ಸಮೃದ್ಧ ಮಳೆ-ಬೆಳೆಗಾಗಿ ವಿಶೇಷ ಪೂಜೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೃದ್ಧ ಮಳೆ ಮತ್ತು ಉತ್ತಮ ಬೆಳೆಗಾಗಿ ಲಕ್ಷ್ಮೇಶ್ವರದ ರೈತ ಸಮುದಾಯ ಮಂಗಳವಾರ ಮಂಜಲಾಪುರದ ಕೊಲ್ಲಾರೆಮ್ಮ ದೇವಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸಿ ವರುಣ ದೇವನ ಕೃಪೆ ಕೋರಿತು.

ಪಟ್ಟಣದ ಸೊಪ್ಪಿನಕೇರಿ ಓಣಿಯ ರೈತರು ಜಂತ್ಲಿ ಬಸವೇಶ್ವರ ದೇವಸ್ಥಾನದಿಂದ ಭಜನೆ ಹಾಡುತ್ತಾ ಕೊಲ್ಲಾರೆಮ್ಮ ದೇವಿಯ ಸನ್ನಿಧಿಗೆ ತೆರಳಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ದೇವಿಯ ಪ್ರಾಂಗಣದ ಮುಂಭಾಗದಲ್ಲಿ ಹೊಂಡ ನಿರ್ಮಿಸಿ ಅದರಲ್ಲಿ ನೀರು ತುಂಬಿಸಿ, ವರುಣ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಅಶ್ವತ್ಥ ಕಟ್ಟೆಗೂ ಪೂಜೆ ನೆರವೇರಿಸಲಾಯಿತು.

ಮಳೆ ಸಮೃದ್ಧಿಯಾಗಿ ಸುರಿದು ಕೃಷಿ ಚಟುವಟಿಕೆಗಳು ಯಶಸ್ವಿಯಾಗಲಿ ಹಾಗೂ ರೈತರ ಬದುಕು ಹಸನಾಗಲಿ ಎಂಬ ಆಶಯದೊಂದಿಗೆ ರೈತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೂಜಾರಿಯ ಮೂಲಕ ದೇವಿಯ ವಾಣಿ ತಿಳಿಸಲಾಯಿತು. ಸಂಪ್ರದಾಯದಂತೆ ದೇವಿಯ ವಾಣಿಯ ಬಳಿಕ ಮೂರು ದಿನಗಳೊಳಗೆ ಮಳೆಯಾಗುವ ನಂಬಿಕೆ ರೈತ ಸಮುದಾಯದಲ್ಲಿದೆ.

ಹಿರಿಯರ ಕಾಲದಿಂದಲೂ ಮಳೆಗಾಗಿ ಕೊಲ್ಲಾರೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ನಡೆದುಬಂದಿದ್ದು, ಐದು ಮಂಗಳವಾರಗಳ ವ್ರತಾಚರಣೆಯನ್ನೂ ರೈತರು ಪಾಲಿಸಿಕೊಂಡು ಬರುತ್ತಿದ್ದಾರೆ. ದೇವಿಯ ವಾಣಿಯಂತೆ ಮಳೆಯಾದ ಬಳಿಕ ರೈತರು ಒಟ್ಟಾಗಿ ಸೇರಿ ಗೋದಿ ಹುಗ್ಗಿ, ಜೋಳದ ಕಿಚಡಿ ಹಾಗೂ ಅನ್ನಪ್ರಸಾದ ಸಿದ್ಧಪಡಿಸಿ ಸಂಭ್ರಮದಿಂದ ಪೂಜೆ ನೆರವೇರಿಸುತ್ತಾರೆ.

ದೇವಿಯ ವಾಣಿ ಎಂದಿಗೂ ಸುಳ್ಳಾಗಿಲ್ಲ ಎಂಬ ನಂಬಿಕೆಯಿಂದ ರೈತರು ಈ ಸಂಪ್ರದಾಯವನ್ನು ಶ್ರದ್ಧಾಭಕ್ತಿಯಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ಹಿರಿಯರಾದ ಭರಮಪ್ಪ ಗುಡಗೇರಿ ಹಾಗೂ ನೀಲಪ್ಪ ಕನವಳ್ಳಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನೀಲಪ್ಪ ಕನವಳ್ಳಿ, ಭರಮಪ್ಪ ಕೊಡ್ಲಿ, ಚನ್ನಪ್ಪ ಆದಿ, ಭರಮಣ್ಣ ಗುಡಗೇರಿ, ಮುದಕನಗೌಡ ಪಾಟೀಲ, ಈರಣ್ಣ ಮುಳಗುಂದ, ಸೋಮಣ್ಣ ಚಿಂಚಲಿ, ವಿರೂಪಾಕ್ಷ ಆದಿ, ಮಯೂರಗೌಡ ಪಾಟೀಲ, ಮಂಜಪ್ಪ ಮುಳಗುಂದ, ಈರಪ್ಪ ಗುಡಗೇರಿ, ರಮೇಶ್ ಹೆಬ್ಬಾಳ, ಬಸವರಾಜ ಆದಿ, ಸಿದ್ದು ರಾಚನಾಯ್ಕರ, ಶೇಖಪ್ಪ ಪುಟಾಣಿ, ಈರಣ್ಣ ಹುಳಕನವರ, ಶಂಭು ತಂಡಿಗೇರ, ಪರಶುರಾಮ ಶಿರಹಟ್ಟಿ ಸೇರಿದಂತೆ ರೈತರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

“ಹಿರಿಯರ ಕಾಲದಿಂದಲೂ ಮಳೆಗಾಗಿ ಕೊಲ್ಲಾರೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ದೇವಿಯ ವಾಣಿಯ ಮೇಲೆ ರೈತ ಸಮುದಾಯಕ್ಕೆ ಅಪಾರ ನಂಬಿಕೆ ಇದೆ.”

 ಭರಮಪ್ಪ ಗುಡಗೇರಿ ಹಾಗೂ ನೀಲಪ್ಪ ಕನವಳ್ಳಿ

ಸಚಿವ ಸ್ಥಾನಕ್ಕಾಗಿ ಎಚ್.ಕೆ. ಪಾಟೀಲ್ ಬೆಂಬಲಿಗರ ಪ್ರಾರ್ಥನೆ

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ರಾಜಕೀಯ ಮುಖಂಡ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ದೊರೆಯಲೆಂದು ನಗರದ ಗಂಗಿಮಡಿ ಅಬುಹರೇರ ಮಸೀದಿಯಲ್ಲಿ ಮಂಗಳವಾರ ವಿಶೇಷ ಸಾಮೂಹಿಕ ದುವಾ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಧರ್ಮಗುರುಗಳಾದ ಜನಾಬ್ ಇನಾಯತುಲ್ಲಾ ಸಾಹೇಬ್ ಪೀರಜಾದೆ, ಮೌಲಾನಾ ಅಬ್ದುಲ್ ಗಫೂರ್ ಸಾಹೇಬ್ ಪಲ್ಲೇದ್, ಮೌಲಾನಾ ಅಬ್ದುಲ್ ಸಮದ್ ಜಕಾತಿ, ಹಫೀಜ್ ಅಬೂಬಕರ್, ಹಫೀಜ್ ಸದ್ದಾಂ ಹಾಗೂ ಹಫೀಜ್ ಅಬ್ದುಲ್ಲಾ ಸೇರಿದಂತೆ ಹಲವರು ಭಾಗವಹಿಸಿ, ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೈಯದ್ ಖಾಲಿದ್ ಕೊಪ್ಪಳ, ಉಸ್ಮಾನ್ ಮಾಳೆಕೊಪ್ಪ, ಫಾರೂಕ್ ಸಿಂದಗಿ, ಅಕ್ಬರ್ ಅತ್ತಾರ, ಮೊಹಮ್ಮದ್ ಬೆಟಗೇರಿ, ಉಜೈರ್, ಮೈನು ಗುಜಮಾಗಡಿ, ಚಾಂದ್ ಸಾಬ್ ಅಬ್ಬಿಗೇರಿ, ಮಹಮ್ಮದ್ ಬೋದ್ಲೆಖಾನ್, ಹಾಫೀಸ್ ರೋಣ, ಬಾಬಾಜಾನ್ ಹಣಗಿ, ಬಾಬಾಜಾನ್ ಕೊಡತಗೇರಿ ಸೇರಿದಂತೆ ಹಲವಾರು ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಎಚ್.ಕೆ. ಪಾಟೀಲ್ ಅವರ ಅನುಭವ, ಜನಪರ ಸೇವೆ ಹಾಗೂ ಆಡಳಿತಾತ್ಮಕ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯದ ಅಭಿವೃದ್ಧಿ, ಶಾಂತಿ, ಸೌಹಾರ್ದತೆ ಹಾಗೂ ಜನರ ಸುಖ-ಸಮೃದ್ಧಿಗಾಗಿ ವಿಶೇಷ ದುವಾ ಮಾಡಲಾಯಿತು.

“ಎಚ್.ಕೆ. ಪಾಟೀಲ್ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಜನನಾಯಕರು. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಜನರ ಆಶಯವಾಗಿದೆ.”

ಸಯ್ಯದ್ ಖಾಲಿದ್ ಕೊಪ್ಪಳ

ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು: ಮಹಿಳೆ ಬಂಧನ

0

ವಿಜಯಸಾಕ್ಷಿ ಸುದ್ದಿ, ನವಲಗುಂದ: ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಮಹಿಳಾ ಆರೋಪಿತೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿತೆಯಿಂದ ₹4.70 ಲಕ್ಷ ಮೌಲ್ಯದ 42.79 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಳ್ಳೂರ ಗ್ರಾಮದ ಶೈಲಾ ಸಿದ್ದಯ್ಯ ಹಿರೇಮಠ ಅವರು ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಕುರಿತು ನೀಡಿದ ದೂರಿನ ಆಧಾರದ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೂಡಲೇ ನವಲಗುಂದ ವೃತ್ತದ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಯಿತು.

ಗ್ರಾಮದ ಸುತ್ತಮುತ್ತಲಿನ ನಿವಾಸಿಗಳಿಂದ ಮಾಹಿತಿ ಸಂಗ್ರಹಿಸಿ, ದೊರೆತ ಸುಳಿವಿನ ಆಧಾರದ ಮೇಲೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಬಳಿಕ ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿತೆಯಿಂದ 42.79 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹4,70,690 ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಡಿಎಸ್‌ಪಿ ಶಿವಾನಂದ ಕಟಗಿ ಹಾಗೂ ಪೊಲೀಸ್ ಉಪಾಧೀಕ್ಷಕ ವಿನೋದ ಮುಕ್ತೇದಾರ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡದಲ್ಲಿ ಪಿಎಸ್‌ಐ ಜನಾರ್ಧನ ಬಿ. ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೋಟ್

“ಪ್ರಕರಣ ದಾಖಲಾದ ತಕ್ಷಣವೇ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರ ಮತ್ತು ಸಿಬ್ಬಂದಿಯ ಸಮನ್ವಯದಿಂದ ಆರೋಪಿತೆಯನ್ನು ಪತ್ತೆಹಚ್ಚಿ ಕಳುವಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಯಿತು.”

ರವಿ. ಕಪ್ಪತನವರ್, ಸಿಪಿಐ, ನವಲಗುಂದ

 

ಪ್ರಜಾಪ್ರಭುತ್ವ ರಕ್ಷಣೆಗೆ ಜನಜಾಗೃತಿ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪ್ರಭುತ್ವದ ರಕ್ಷಣೆ ಕೇವಲ ರಾಜಕೀಯ ಪಕ್ಷಗಳ ಹೊಣೆಗಾರಿಕೆಯಲ್ಲ. ಸಮಾಜದ ಪ್ರತಿಯೊಬ್ಬ ಜಾಗೃತ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದರು.

ನಗರದ ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಮಧ್ಯಂತರ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ಒತ್ತಡ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಮೇಲಿನ ಅನ್ಯಾಯ ಹಾಗೂ ಅಧಿಕಾರ ದುರುಪಯೋಗದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಕ್ಕುಗಳ ಸಂರಕ್ಷಣೆಗಾಗಿ ಸಂಘಟಿತ ಹೋರಾಟಗಳು ಅನಿವಾರ್ಯವಾಗಿದ್ದು, ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸಬೇಕು ಎಂದು ಕರೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಕಾರ್ಯಕರ್ತರು ಮನೆಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ಅಲಿ ಮಧ್ಯಂತರ ವರದಿ ಮಂಡಿಸಿದರು. ಬಳಿಕ ಜಿಲ್ಲೆಯ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ಸುಮಯ್ಯ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಪ್ರಜಾಪ್ರಭುತ್ವವನ್ನು ಬಲಪಡಿಸುವ ಶಕ್ತಿ ಮತದಾರರಲ್ಲಿದೆ. ಜನರ ಹಕ್ಕುಗಳ ರಕ್ಷಣೆಗಾಗಿ ಜಾಗೃತಿ ಮತ್ತು ಸಂಘಟಿತ ಹೋರಾಟಗಳು ಇಂದಿನ ಅಗತ್ಯವಾಗಿದೆ.”

ಅಪ್ಸರ್ ಕೊಡ್ಲಿಪೇಟೆ

ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ

ಪ್ರಮುಖ ನಿರ್ಣಯಗಳು

  • ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಬೇಕು.
  • ಹೊಂಬಳ ನಾಕಾ ಫ್ಲೈಓವರ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು.
  • ಬೈಪಾಸ್ ಮೂಲಕ ಸಂಚರಿಸುವ ರೈಲುಗಳನ್ನು ಗದಗ ಜಂಕ್ಷನ್ ಮೂಲಕ ಓಡಿಸಲು ಕ್ರಮ ಕೈಗೊಳ್ಳಬೇಕು.
  • ಗದಗ ನಗರದ ರಸ್ತೆ ಕಾಮಗಾರಿಗಳನ್ನು ಮುಂಗಾರು ಮುನ್ನ ಪೂರ್ಣಗೊಳಿಸಬೇಕು.
  • ಗದಗ-ನರಗುಂದ ರಸ್ತೆಯ ಕುಸಿದ ಭಾಗದಲ್ಲಿ ಹೊಸ ಸೇತುವೆ ನಿರ್ಮಾಣವನ್ನು ತ್ವರಿತಗೊಳಿಸಬೇಕು.
  • ಮಳೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸಬೇಕು.

ವಾಯುಪಡೆ ಸಿಬ್ಬಂದಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, ಮತಾಂತರಕ್ಕೆ ಒತ್ತಡ ಆರೋಪ; ಇಬ್ಬರ ಬಂಧನ

0

ನಾಗ್ಪುರ: ಭಾರತೀಯ ವಾಯುಪಡೆಯ ಸಿಬ್ಬಂದಿಯೊಬ್ಬರ ಪತ್ನಿಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಬಲವಂತವಾಗಿ ಮತಾಂತರಕ್ಕೆ ಒತ್ತಡ ಹೇರಿದ ಆರೋಪದಡಿ ಇಬ್ಬರನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಶೋಧ ಕಾರ್ಯ ಮುಂದುವರಿದಿದೆ.

24 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕಳೆದ 16 ತಿಂಗಳ ಅವಧಿಯಲ್ಲಿ ತನಗೆ ವ್ಯವಸ್ಥಿತವಾಗಿ ಮಾದಕ ದ್ರವ್ಯ ನೀಡಿ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಅಯ್ಯಜ್ ತಾಜ್ ಮದಾರೆ (26) ಮತ್ತು ಆಮಿನ್ ಶೇಖ್ (30) ಎಂಬುವರನ್ನು ಬಂಧಿಸಲಾಗಿದೆ. ಹಜರತ್ ಮೌಲಾನಾ ಎಂಬ ಧರ್ಮಗುರು ಪ್ರಕರಣದ ಮೂರನೇ ಆರೋಪಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅವರು ಮಧ್ಯಪ್ರದೇಶದ ಛಿಂದ್ವಾರಾ ಪ್ರದೇಶದಲ್ಲಿ ಇರುವ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೇರೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ವಾಯುಪಡೆ ಸಿಬ್ಬಂದಿಯನ್ನು ವಿವಾಹವಾಗಿರುವ ಮಹಿಳೆ ಜೂನ್ 12ರಂದು ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಪರಿಚಯಸ್ಥನಾಗಿದ್ದ ಪ್ರಮುಖ ಆರೋಪಿ 2025ರಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಲೈಂಗಿಕ ದೌರ್ಜನ್ಯ, ಬೆದರಿಕೆ, ಸುಲಿಗೆ ಹಾಗೂ ಬಲವಂತದ ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಅತ್ಯಾಚಾರ, ಸುಲಿಗೆ, ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಆರೋಪಗಳನ್ನು ದಾಖಲಿಸಲಾಗಿದೆ. ಜೊತೆಗೆ ಮಹಾರಾಷ್ಟ್ರದ ಮಾಟ-ಮಂತ್ರ ಮತ್ತು ಅಂಧಶ್ರದ್ಧೆ ವಿರೋಧಿ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ದಿನವೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಋಷಿಕೇಶ್ ಸಿಂಗಾರೆಡ್ಡಿ ತಿಳಿಸಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ ಮಾಟ-ಮಂತ್ರ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ತನಿಖೆ ಮುಂದುವರಿದಿದೆ.

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡುವೆ ಅವಘಡ: ಎಸ್‌ಐಟಿ ಎಸ್ಪಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

0

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಎಸ್‌ಐಟಿ ಅಧಿಕಾರಿಗಳ ತಂಡ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟ್ ಬಳಿ ಪಲ್ಟಿಯಾದ ಘಟನೆ ನಡೆದಿದೆ.

ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಚರ್ಚೆಗಾಗಿ ಅಧಿಕಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಇನ್ನೋವಾ ಕಾರು ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RSS ಬಗ್ಗೆ ಪ್ರಶ್ನೆ ಕೇಳುವವರ ಪಟ್ಟಿಗೆ ಈಗ ಪ್ರಿಯಾಂಕ್ ಖರ್ಗೆ ಸೇರ್ಪಡೆ: ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಪ್ರಶ್ನೆಗಳನ್ನು ಎತ್ತುವ ಕಾಂಗ್ರೆಸ್ ನಾಯಕರ ಸಾಲಿಗೆ ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಸೇರಿದ್ದಾರೆ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಅವರು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ಕೇಳಿರುವ ಪ್ರಶ್ನೆಗಳು ಹೊಸದೇನಲ್ಲ. ಈ ಹಿಂದೆ ಕಾಂಗ್ರೆಸ್‌ನ ಅನೇಕ ನಾಯಕರು ಇದೇ ರೀತಿಯ ಪ್ರಶ್ನೆಗಳನ್ನು ಕೇಳಿದ್ದು, ಅವರಿಗೆ ಈಗಾಗಲೇ ಉತ್ತರ ದೊರೆತಿದೆ. ಉತ್ತರ ಸಿಕ್ಕಿದ್ದರೂ ಅದೇ ಪ್ರಶ್ನೆಯನ್ನು ಮತ್ತೆ ಮತ್ತೆ ಮುಂದಿಡಲಾಗುತ್ತಿದೆ ಎಂದು ಹೇಳಿದರು.

ಈಗ ಮೋಹನ್ ಭಾಗವತ್ ಕೂಡ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಹೀಗಾಗಿ ಅವರಿಗೆ ಬೇಕಾದ ಉತ್ತರ ದೊರೆತಿದೆ. ಈ ಹಿಂದೆ ಇದೇ ರೀತಿಯ ಪ್ರಶ್ನೆಗಳನ್ನು ಕೇಳಿದವರನ್ನು ‘ಗಾಂಪರು ದೊರೆಗಳು’ ಎಂದು ಕರೆಯಲಾಗುತ್ತಿತ್ತು. ಈಗ ಆ ಪಟ್ಟಿಗೆ ಪ್ರಿಯಾಂಕ್ ಖರ್ಗೆ ಕೂಡ ಸೇರಿದ್ದು, ಅವರು ಕರ್ನಾಟಕದ ‘ಗಾಂಪರು ದೊರೆ’ ಎಂದು ವ್ಯಂಗ್ಯವಾಡಿದರು.

ಮಾಧ್ಯಮಗಳಲ್ಲಿ ತಮ್ಮ ಹೆಸರು ಹೆಚ್ಚು ಪ್ರಚಾರವಾಗಬೇಕು ಹಾಗೂ ತಾವು ಮೇಧಾವಿಗಳೆಂದು ಬಿಂಬಿಸಿಕೊಳ್ಳುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಇದೇ ವೇಳೆ, “ನೀವು ಪರಿಶಿಷ್ಟ ಜಾತಿ ಸಮುದಾಯದವರು. ಡಾ. ಬಿ.ಆರ್. ಅಂಬೇಡ್ಕರ್ ಜನರ ಹಕ್ಕುಗಳಿಗಾಗಿ ಹೋರಾಟ ನಡೆಸಿ ಮೀಸಲಾತಿಯನ್ನು ಕಲ್ಪಿಸಿಕೊಟ್ಟಿದ್ದಾರೆ. ಆದರೆ ಆರ್‌ಎಸ್‌ಎಸ್‌ನಿಂದ ಯಾವ ದಲಿತರಿಗೆ ಅನ್ಯಾಯವಾಗಿದೆ? ಆರ್‌ಎಸ್‌ಎಸ್ ಬಗ್ಗೆ ಪ್ರಶ್ನೆಗಳನ್ನು ಕೇಳುವುದರಿಂದ ದಲಿತ ಸಮುದಾಯಕ್ಕೆ ಯಾವ ರೀತಿಯ ಪ್ರಯೋಜನವಾಗಲಿದೆ?” ಎಂದು ಪ್ರಶ್ನಿಸಿದರು.

RSS ಬಗ್ಗೆ ತಿಳಿಯಬೇಕಾದರೆ ಶಾಖೆಗೆ ಬನ್ನಿ: ಪ್ರಿಯಾಂಕ್ ಖರ್ಗೆಗೆ ಸಿಟಿ ರವಿ ಬಹಿರಂಗ ಆಹ್ವಾನ

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಮಾಹಿತಿ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಸಂಘದ ಬಗ್ಗೆ ತಿಳಿದುಕೊಳ್ಳಬೇಕಾದರೆ ನೇರವಾಗಿ ಶಾಖೆಗೆ ಬಂದು ವೀಕ್ಷಣೆ ಮಾಡಲಿ ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಗೃಹ ಸಚಿವರಾಗಿ ಪತ್ರ ಬರೆದಿದ್ದರೆ, ಸರ್ಕಾರದ ದಾಖಲೆಗಳಲ್ಲಿಯೇ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಸಾಕಷ್ಟು ಮಾಹಿತಿಗಳು ಲಭ್ಯವಿರುತ್ತವೆ ಎಂದು ಹೇಳಿದರು.

ಆರ್‌ಎಸ್‌ಎಸ್ ಅನ್ನು ದೇಶದಲ್ಲಿ ಮೂರು ಬಾರಿ ನಿಷೇಧಿಸಲಾಗಿತ್ತು. ಅವುಗಳಲ್ಲಿ ಎರಡು ಬಾರಿ ನ್ಯಾಯಾಲಯಗಳು ನಿಷೇಧವನ್ನು ತೆರವುಗೊಳಿಸಿದ್ದರೆ, ಮತ್ತೊಂದು ಸಂದರ್ಭದಲ್ಲಿ ಸರ್ಕಾರವೇ ನಿಷೇಧವನ್ನು ಹಿಂಪಡೆದಿತ್ತು. ಈ ಎಲ್ಲಾ ಪ್ರಕ್ರಿಯೆಗಳಲ್ಲಿ ಸಂಘದ ಚಟುವಟಿಕೆಗಳು ಹಾಗೂ ಕಾನೂನುಬದ್ಧತೆ ಕುರಿತು ಈಗಾಗಲೇ ಚರ್ಚೆ ನಡೆದಿದ್ದು, ಅಗತ್ಯ ದಾಖಲೆಗಳು ಸರ್ಕಾರ ಮತ್ತು ನ್ಯಾಯಾಲಯಗಳ ಬಳಿ ಇವೆ ಎಂದು ತಿಳಿಸಿದರು.

ಸಂವಿಧಾನವು ನೋಂದಾಯಿತ ಹಾಗೂ ನೋಂದಣಿಯಾಗದ ಸಂಘಟನೆಗಳ ಕಾರ್ಯಾಚರಣೆಗೆ ಅವಕಾಶ ನೀಡಿದೆ. ಆರ್‌ಎಸ್‌ಎಸ್ ಯಾವುದೇ ಸೊಸೈಟಿ, ಟ್ರಸ್ಟ್ ಅಥವಾ ಕಂಪನಿ ಅಲ್ಲ. ಹೀಗಾಗಿ ಅದನ್ನು ಕಡ್ಡಾಯವಾಗಿ ನೋಂದಾಯಿಸಬೇಕಾದ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಂಘವು ರಾಷ್ಟ್ರಭಕ್ತಿ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿ ಕುರಿತು ಕುತೂಹಲ ಇದ್ದರೆ ಪ್ರಿಯಾಂಕ್ ಖರ್ಗೆ ಯಾವುದೇ ಆರ್‌ಎಸ್‌ಎಸ್ ಶಾಖೆಗೆ ಭೇಟಿ ನೀಡಿ ಸ್ವತಃ ತಿಳಿದುಕೊಳ್ಳಬಹುದು ಎಂದು ಸಿಟಿ ರವಿ ಹೇಳಿದರು.

“ಶಾಖೆಗೆ ಬಂದು ಅಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಬಹುದು. ಹಾಡು, ಆಟ, ಅಮೃತ ವಚನ ಸೇರಿದಂತೆ ಸಂಘದ ಕಾರ್ಯಪದ್ಧತಿಯನ್ನು ನೇರವಾಗಿ ನೋಡಬಹುದು. ಯಾವುದೇ ಶಾಖೆಗೆ ಭೇಟಿ ನೀಡಿ ಸಂಘದ ಬಗ್ಗೆ ಮಾಹಿತಿ ಪಡೆಯಿರಿ” ಎಂದು ಆಹ್ವಾನ ನೀಡಿದರು.

ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಿದವರನ್ನು ಬಯಲಿಗೆಳೆಯಿರಿ: ಶೀರೂರು ಶ್ರೀ

0

ಉಡುಪಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪಗಳು ಹೊಸ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಧರ್ಮಸ್ಥಳದಂತಹ ಪ್ರತಿಷ್ಠಿತ ಧಾರ್ಮಿಕ ಕ್ಷೇತ್ರದ ವಿರುದ್ಧ ನೂರಾರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಂಚು ರೂಪಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಆರೋಪಗಳ ಹಿಂದಿನ ಸತ್ಯಾಸತ್ಯತೆಯನ್ನು ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಲಕ್ಷಾಂತರ ಭಕ್ತರ ನಂಬಿಕೆಯ ಕೇಂದ್ರವಾಗಿದ್ದು, ಇಂತಹ ಬೆಳವಣಿಗೆಗಳು ಸಮಾಜದಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸಬಹುದು. ಹೀಗಾಗಿ ಸಂಬಂಧಿತ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಧಾರ್ಮಿಕ ಕ್ಷೇತ್ರಗಳ ಗೌರವ ಉಳಿಯಬೇಕಾದರೆ ಆರೋಪಗಳ ಹಿಂದಿರುವ ವಾಸ್ತವಾಂಶ ಹೊರಬರಬೇಕು. ಸಂಚು ಇದ್ದರೆ ಅದರ ಹಿಂದಿರುವವರನ್ನು ಕಾನೂನಿನ ಮುಂದೆ ತರಬೇಕು ಎಂದು ಶೀರೂರು ಶ್ರೀಗಳು ಹೇಳಿದ್ದಾರೆ.

error: Content is protected !!