Home Blog

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ-ಮಲೆನಾಡಿನಲ್ಲಿ ಹೈ ಅಲರ್ಟ್, ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಇಂದು (ಜೂನ್ 13) ರಾಜ್ಯಾದ್ಯಂತ ಮಿಶ್ರ ಹವಾಮಾನ ಕಂಡುಬರುವ ಸಾಧ್ಯತೆಯಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ರಾಜ್ಯದಲ್ಲಿ ಸರಾಸರಿ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬೆಳಗಿನ ವೇಳೆಯಲ್ಲಿ ಭಾಗಶಃ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಮಧ್ಯಾಹ್ನದ ನಂತರ ಹವಾಮಾನದಲ್ಲಿ ಬದಲಾವಣೆ ಉಂಟಾಗಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಶೇ.50ರಷ್ಟಿದೆ. ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದ್ದು, ಉಷ್ಣಾಂಶದ ನಡುವೆಯೇ ದಿಢೀರ್ ಮಳೆ ಸುರಿಯುವ ಸಾಧ್ಯತೆಯಿದೆ.

ರಾತ್ರಿಯ ವೇಳೆಗೆ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದ್ದರೂ, ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗುವ ಸಾಧ್ಯತೆ ಇದ್ದು, ತಂಪಾದ ಗಾಳಿ ಬೀಸುವ ನಿರೀಕ್ಷೆಯಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ತೀರ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳುವ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಸೇರಿದಂತೆ ಕರಾವಳಿ ಭಾಗಗಳು ಹಾಗೂ ಶಿರಸಿ, ಸಿದ್ದಾಪುರದಂತಹ ಘಟ್ಟ ಪ್ರದೇಶಗಳಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣ ಇರಲಿದ್ದು, ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

ಮಲೆನಾಡಿನಲ್ಲಿ ಮುಂಗಾರು ಅಬ್ಬರ

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಮಲೆನಾಡು ಭಾಗಗಳಲ್ಲಿ ಮುಂಗಾರು ಸಂಪೂರ್ಣವಾಗಿ ಆವರಿಸಿಕೊಂಡಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನದಿಗಳು ಮತ್ತು ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗತೊಡಗಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 26ರಿಂದ 30 ಡಿಗ್ರಿ ಸೆಲ್ಸಿಯಸ್ ನಡುವೆಯಿರಲಿದ್ದು, ರಾತ್ರಿ ವೇಳೆಯಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ.

ಭಾರೀ ಮಳೆ, ಬಿರುಗಾಳಿ ಮತ್ತು ಗುಡುಗು ಸಂಭವಿಸುವ ಸಾಧ್ಯತೆ ಇರುವುದರಿಂದ ಕರಾವಳಿ ಹಾಗೂ ಮಲೆನಾಡಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತಗಳು ಸೂಚಿಸಿವೆ. ವಾಹನ ಸವಾರರು ಮಳೆಗಾಲದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಜನಸಾಮಾನ್ಯರಿಗೆ ಮತ್ತೊಂದು ಹೊರೆ: ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆ – ಕೆಜಿಗೆ 10 ರಿಂದ 20 ರೂ. ಹೆಚ್ಚಳ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಇದೀಗ ಅಕ್ಕಿ ದರ ಏರಿಕೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ನಿತ್ಯದ ಆಹಾರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಅಕ್ಕಿಯ ಬೆಲೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಏರಿಕೆಯಾಗಿದ್ದು, ಗ್ರಾಹಕರ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬೀಳುವಂತಾಗಿದೆ.

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ತಳಿಯ ಅಕ್ಕಿಗಳ ಬೆಲೆ ಪ್ರತಿ ಕೆಜಿಗೆ 10ರಿಂದ 20 ರೂಪಾಯಿವರೆಗೆ ಏರಿಕೆಯಾಗಿದೆ. ಇದರಿಂದ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದು, ದಿನನಿತ್ಯದ ಖರ್ಚು-ವೆಚ್ಚಗಳನ್ನು ನಿರ್ವಹಿಸುವುದು ಕಷ್ಟಕರವಾಗುತ್ತಿದೆ.

ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೇಡಿಕೆ ಮತ್ತು ಪೂರೈಕೆಯ ನಡುವಿನ ಅಸಮತೋಲನವೇ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ಕೇಂದ್ರ ಸರ್ಕಾರ ಅಕ್ಕಿ ರಫ್ತಿಗೆ ಮುಕ್ತ ಅವಕಾಶ ನೀಡಿರುವುದರಿಂದ ಉತ್ತಮ ಗುಣಮಟ್ಟದ ಅಕ್ಕಿಯ ಹೆಚ್ಚಿನ ಪ್ರಮಾಣ ವಿದೇಶಗಳಿಗೆ ಸಾಗುತ್ತಿದೆ. ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕಡಿಮೆಯಾಗಿದ್ದು, ಇದರ ನೇರ ಪರಿಣಾಮವಾಗಿ ಚಿಲ್ಲರೆ ಮಾರುಕಟ್ಟೆಗಳಲ್ಲಿ ಬೆಲೆಗಳು ಏರಿಕೆಯಾಗಿವೆ.

ಅಕ್ಕಿ ದರದಲ್ಲಿ ಉಂಟಾಗಿರುವ ಈ ದಿಢೀರ್ ಏರಿಕೆ ಗ್ರಾಹಕರ ಖರೀದಿ ಸಾಮರ್ಥ್ಯದ ಮೇಲೂ ಪರಿಣಾಮ ಬೀರಿದೆ. ಬೆಲೆ ಹೆಚ್ಚಳದ ಕಾರಣ ಅನೇಕರು ಅಕ್ಕಿ ಖರೀದಿಯ ಪ್ರಮಾಣವನ್ನು ಕಡಿಮೆ ಮಾಡುತ್ತಿರುವುದು ಕಂಡುಬರುತ್ತಿದೆ. ಇದರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವ್ಯಾಪಾರಿ ಅರುಣ್ ಪರಮೇಶ್, “ಅಕ್ಕಿ ದರ ಏರಿಕೆಯಿಂದ ಗ್ರಾಹಕರು ಖರೀದಿಯನ್ನು ಕಡಿಮೆ ಮಾಡಿದ್ದಾರೆ. ಇದರಿಂದ ವ್ಯಾಪಾರಿಗಳ ಮಾರಾಟದಲ್ಲೂ ಗಮನಾರ್ಹ ಕುಸಿತ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಏಜೆಂಟ್ ದರ್ಬಾರ್ ಆರೋಪ: ರಾಮನಗರ RTO ಮೇಲೆ ಲೋಕಾಯುಕ್ತ ರೇಡ್!

ರಾಮನಗರ: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಪಿ.ವಿ. ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕಚೇರಿಯಲ್ಲಿನ ಎಲ್ಲಾ ಪ್ರಮುಖ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಹಲವು ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ತಿಳಿದುಬಂದಿದೆ.

ನಿಯಮದ ಪ್ರಕಾರ 7 ದಿನಗಳಲ್ಲಿ ವಿತರಿಸಬೇಕಾಗಿದ್ದ ಲೈಸೆನ್ಸ್ ಮತ್ತು ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು ತಿಂಗಳುಗಳ ಕಾಲ ವಿಳಂಬವಾಗಿ ಕಚೇರಿಯಲ್ಲೇ ಸಂಗ್ರಹವಾಗಿದ್ದವು ಎಂಬುದು ದಾಳಿ ವೇಳೆ ಪತ್ತೆಯಾಗಿದೆ. ಸಾರ್ವಜನಿಕರು ನೇರವಾಗಿ ಬಂದರೆ ಕೆಲಸ ವಿಳಂಬವಾಗುತ್ತಿದ್ದು, ಏಜೆಂಟ್‌ಗಳ ಮೂಲಕ ಹಣ ನೀಡಿದರೆ ಮಾತ್ರ ಕೆಲಸ ಮಾಡಲಾಗುತ್ತಿತ್ತು ಎಂಬ ದೂರುಗಳಿಗೂ ತಾಳೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಕಚೇರಿಯಲ್ಲಿ ಏಜೆಂಟ್‌ಗಳ ನಡುವೆ ಕಮಿಷನ್ ವಿಚಾರಕ್ಕೆ ನಡೆದ ಗಲಾಟೆಯ ಕುರಿತು ಯಾವುದೇ ಪೊಲೀಸ್ ದೂರು ದಾಖಲಿಸದಿರುವ ವಿಷಯವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಕಳೆದ ಒಂದು ವರ್ಷದಲ್ಲಿ ಇದೇ ಕಚೇರಿಯ ಮೇಲೆ ಮೂರು ಬಾರಿ ಲೋಕಾಯುಕ್ತ ದಾಳಿ ನಡೆದಿದ್ದರೂ ಭ್ರಷ್ಟಾಚಾರದಲ್ಲಿ ಬದಲಾವಣೆ ಕಂಡುಬಂದಿಲ್ಲ ಎಂದು ಆರೋಪಗಳು ಕೇಳಿಬಂದಿವೆ.

ದಾಳಿಯ ವೇಳೆ ಲೋಕಾಯುಕ್ತ ಎಸ್‌ಪಿ ಕೇಳಿದ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಲು ಆರ್‌ಟಿಒ ಅಧಿಕಾರಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪ್ರಮುಖ ಕಡತಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಕಾಂಗ್ರೆಸ್ ಆಡಳಿತದಲ್ಲಿ ಗದಗ ಜಿಲ್ಲೆ ಅತಿ ಹಿಂದುಳಿದಿದೆ: ರಾಜು ಕುರುಡಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಗೋವಿಂದರಾವ್ ವರದಿಯಲ್ಲಿ ಗದಗ ಜಿಲ್ಲೆಯನ್ನು ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಗುರುತಿಸಿರುವುದು ಜಿಲ್ಲೆಯ ಅಭಿವೃದ್ಧಿ ಸ್ಥಿತಿಗತಿಗಳನ್ನು ಬಯಲು ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಆಡಳಿತ ಮತ್ತು ಮಾಜಿ ಸಚಿವ ಎಚ್.ಕೆ. ಪಾಟೀಲ ನೇರ ಹೊಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.

ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ನಂಜುಂಡಪ್ಪ ವರದಿ ಬದಲಿಗೆ ಗೋವಿಂದರಾವ್ ವರದಿ ಆಧರಿಸಿ ಅನುದಾನ ಹಂಚಿಕೆ ಮಾಡಲು ಮುಂದಾಗಿದ್ದು, ಹೊಸ ವರದಿಯಲ್ಲಿ ಗದಗ ಜಿಲ್ಲೆ ಅಭಿವೃದ್ಧಿ ಸೂಚ್ಯಂಕದಲ್ಲಿ ಹಿನ್ನಡೆ ಕಂಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಈ ಹಿಂದೆ ನಂಜುಂಡಪ್ಪ ವರದಿಯಲ್ಲಿ ಶಿರಹಟ್ಟಿ ಹಾಗೂ ರೋಣ ತಾಲೂಕುಗಳು ಮಾತ್ರ ಹಿಂದುಳಿದ ಪಟ್ಟಿಯಲ್ಲಿದ್ದವು. ಆದರೆ ಗೋವಿಂದರಾವ್ ವರದಿಯಲ್ಲಿ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳು ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಸೇರಿರುವುದು ಜಿಲ್ಲೆಯ ಅಭಿವೃದ್ಧಿಯ ನೈಜ ಚಿತ್ರಣವನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ರೋಣ ಮತ್ತು ಮುಂಡರಗಿ ತಾಲೂಕುಗಳು ಆರೋಗ್ಯ, ಆದಾಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಹಿಂದುಳಿದಿವೆ. ನರಗುಂದ, ಲಕ್ಷ್ಮೇಶ್ವರ, ಶಿರಹಟ್ಟಿ, ಗಜೇಂದ್ರಗಡ ಹಾಗೂ ಗದಗ ತಾಲೂಕುಗಳೂ ವಿವಿಧ ಅಭಿವೃದ್ಧಿ ಮಾನದಂಡಗಳಲ್ಲಿ ಹಿನ್ನಡೆ ಕಂಡಿವೆ ಎಂದು ವರದಿ ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಸೂಚ್ಯಂಕ ಮತ್ತು ತಲಾ ಆದಾಯದ ಸ್ಥಿತಿಯನ್ನು ಗಮನಿಸಿದರೆ ಜನಪ್ರತಿನಿಧಿಗಳು ಹಾಗೂ ಆಡಳಿತ ವ್ಯವಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ರಾಜು ಕುರುಡಗಿ ಆರೋಪಿಸಿದ್ದಾರೆ.

“ಗದಗ ಜಿಲ್ಲೆ ಕೈಗಾರಿಕೆ, ಶಿಕ್ಷಣ, ಆರೋಗ್ಯ, ಆದಾಯ ಹಾಗೂ ಸಾಮಾಜಿಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಿಂದುಳಿದಿರುವುದು ವರದಿಯಿಂದ ಸಾಬೀತಾಗಿದೆ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಮೊದಲು ಈ ವರದಿಗೆ ಉತ್ತರ ನೀಡಬೇಕು.”

ತೋಟಪ್ಪ (ರಾಜು) ಕುರುಡಗಿ

ಬಿಜೆಪಿ ಜಿಲ್ಲಾಧ್ಯಕ್ಷರು

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ಕೊಡಿ: ಹಾಲಕೆರೆ ಗ್ರಾಮದಲ್ಲಿ ದೀರ್ಘದಂಡ ನಮಸ್ಕಾರ ಹೋರಾಟ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹಾಲಕೆರೆ ಗ್ರಾಮದಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ವಿನೂತನ ಹೋರಾಟ ನಡೆಸಿದರು.

ಗ್ರಾಮದ ಬಸವೇಶ್ವರ ವೃತ್ತದಿಂದ ಶ್ರೀ ಅನ್ನದಾನೇಶ್ವರ ಮಠದವರೆಗೆ ನಡೆದ ದೀರ್ಘದಂಡ ನಮಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹಾಲಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂದಾನಗೌಡ ಪಾಟೀಲ, ಜಿ.ಎಸ್. ಪಾಟೀಲರ ಹಿರಿತನ, ಪಕ್ಷಕ್ಕೆ ಸಲ್ಲಿಸಿರುವ ಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅವರು ತೋರಿದ ಬದ್ಧತೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.

ಜಿ.ಎಸ್. ಪಾಟೀಲರು ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಆಡಳಿತ ಅನುಭವ ಹೊಂದಿದ್ದಾರೆ. ಅವರ ಕಾರ್ಯದಕ್ಷತೆ ಮತ್ತು ಜನಪರ ಚಿಂತನೆಗೆ ಸಚಿವ ಸ್ಥಾನ ಸೂಕ್ತ ಗೌರವವಾಗಲಿದೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಿರೀಶಗೌಡ ಮುಲ್ಕಿಪಾಟೀಲ ಮಾತನಾಡಿ, ಜಿ.ಎಸ್. ಪಾಟೀಲರು ಯಾವುದೇ ಹಗರಣಗಳಿಲ್ಲದ ಸ್ವಚ್ಛ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದು, ಈ ಭಾಗಕ್ಕೆ ಸಚಿವ ಸ್ಥಾನ ಸಿಗದಿರುವುದು ಜನರಲ್ಲಿ ಬೇಸರ ಮೂಡಿಸಿದೆ. ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಕಾರ್ಯಕರ್ತರು ಹಾಗೂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ಸಚಿವ ಸ್ಥಾನಕ್ಕಾಗಿ ಅಗತ್ಯವಿದ್ದರೆ ರೋಣ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ತುಮಕೂರಿನಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಹೋರಾಟ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು.

ಆನಂದ ಹಳ್ಳಿ, ಬಸವರಾಜ ಪೂಜಾರ, ಅಪ್ಪಣ್ಣ ಹಳ್ಳಿ, ಪರಶುರಾಮ ತಲೇಖಾನ್, ಅಭಿಷೇಕ ಕುಸಮ್ಮನವರ, ಅಂದಪ್ಪ ಕುರಿ, ಬಸವರಾಜ ಹುಲ್ಯಾಳ, ಭೀಮಪ್ಪ ಖ್ಯಾರ, ಮುತ್ತಪ್ಪ ಪೂಜಾರ, ದುರುಗಪ್ಪ ತಲೇಖಾನ್, ಹುಲಗಪ್ಪ ಬಂಗಾಳಿಗಿಡದ, ಮುದಿಯಪ್ಪ ಪೂಜಾರ ಸೇರಿದಂತೆ ಅನೇಕರು ಭಾಗವಹಿಸಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಸೊಪ್ಪಯ್ಯ ಸೊಪ್ಪಿಹಿರೇಮಠ, ವೀರಣ್ಣ ಹಳ್ಳಿ, ಮಹೇಶ ಕುರಿ, ಹನಮಪ್ಪ ತೊಂಡಿಹಾಳ, ತಿಮ್ಮರೆಡ್ಡೆಪ್ಪ ಹೊಸಮನಿ, ಶರಣಪ್ಪ ಪೂಜಾರ, ಬಾಳಪ್ಪ ಬುರಡಿ, ಬಸಪ್ಪ ಮೂಲಿಮನಿ, ಮಹಾಂತೇಶ ಪ್ರಭಣ್ಣವರ, ಪ್ರವೀಣ ಬೈರಗೊಂಡ, ನವೀನ್ ಮಾದಿನೂರ, ಅಂದೇಶ ಶಿರೂರು, ವೀರಭದ್ರಪ್ಪ ನವಲಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಭಿಮಾನಿಗಳ ಹಕ್ಕೊತ್ತಾಯ

  • ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು
  • ರೋಣ ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಗಬೇಕು
  • ಹಿರಿತನ ಮತ್ತು ಸಂಘಟನಾ ಸೇವೆಗೆ ಗೌರವ ಸಿಗಬೇಕು
  • ಸಚಿವ ಸ್ಥಾನ ನೀಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು

“ಜಿ.ಎಸ್. ಪಾಟೀಲರು ಜಾತಿ, ಮತಗಳ ಗಡಿಯನ್ನು ಮೀರಿದ ಜನನಾಯಕರು. ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಅಂತಹ ನಾಯಕನಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಪಕ್ಷದ ಕರ್ತವ್ಯವಾಗಿದೆ.”

ಅಂದಾನಗೌಡ ಪಾಟೀಲ

ಅಧ್ಯಕ್ಷರು, ಹಾಲಕೆರೆ ಪಿಕೆಪಿಎಸ್

AI ಅಶ್ಲೀಲ ವಿಡಿಯೋ ಬಳಸಿ ಯುವತಿಗೆ ಬ್ಲ್ಯಾಕ್‌ಮೇಲ್: ಇಬ್ಬರು ಬಂಧನ!

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಿಂದ ಯುವತಿಯೊಬ್ಬಳ ಫೋಟೋವನ್ನು ಪಡೆದು ಕೃತಕ ಅಶ್ಲೀಲ ವಿಡಿಯೋ ಸೃಷ್ಟಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಂಧಿತರನ್ನು ಅಕ್ಷಯ್ ಮತ್ತು ಸಾಹುಲ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು AI ಹಾಗೂ ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್‌ಗಳ ಸಹಾಯದಿಂದ 25 ವರ್ಷದ ಯುವತಿಯ ಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋ ತಯಾರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆ ಬಳಿಕ ಯುವತಿಯ ತಾಯಿಗೆ “ಯೋಗೇಶ್” ಎಂಬ ಹೆಸರಿನಲ್ಲಿ ನಿರಂತರವಾಗಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಬ್ಲ್ಯಾಕ್‌ಮೇಲ್‌ಗೆ ಒಳಗಾದ ಕುಟುಂಬ ಲಕ್ಕವಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ತನಿಖೆಯ ವೇಳೆ ಆರೋಪಿಗಳ ನಿಜವಾದ ಗುರುತು ಪತ್ತೆಯಾಗಿ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳು ಹಣದ ಅಗತ್ಯದಿಂದ ಸಾಲ ತೀರಿಸಲು ಈ ಕೃತ್ಯಕ್ಕೆ ಕೈಹಾಕಿದ್ದಾಗಿ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಶ್ಲಾಘನೀಯ: ಗಜೆಂದ್ರ ಯಾದವ್

0

ವಿಜಯಸಾಕ್ಷಿ ಸುದ್ದಿ, ಗದಗ: ಛತ್ತೀಸ್‌ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವ ಗಜೆಂದ್ರ ಯಾದವ್ ಅವರು ಗುರುವಾರ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಪುರಾತನ ದೇವಾಲಯಗಳು ಹಾಗೂ ಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿದರು.

ಲಕ್ಕುಂಡಿಯ ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದು ದೇಶದ ಅಪರೂಪದ ಪರಂಪರೆ ತಾಣಗಳಲ್ಲಿ ಒಂದಾಗಿದ್ದು, ಭಗವಾನ್ ಮಹಾದೇವರ ವಿವಿಧ ಸ್ವರೂಪಗಳನ್ನು ಪ್ರತಿಬಿಂಬಿಸುವ ದೇವಾಲಯಗಳು ಹಾಗೂ ಶಿಲ್ಪಕಲಾ ವೈಭವದಿಂದ ವಿಶೇಷ ಸ್ಥಾನ ಪಡೆದಿದೆ ಎಂದು ಹೇಳಿದರು.

11ನೇ ಮತ್ತು 12ನೇ ಶತಮಾನಗಳ ಅಮೂಲ್ಯ ಪಾರಂಪರಿಕ ಸ್ಮಾರಕಗಳನ್ನು ಪುರಾತತ್ವ ಇಲಾಖೆ ಸಂರಕ್ಷಿಸಿ ಉಳಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಐತಿಹಾಸಿಕ ತಾಣಗಳು ರಾಷ್ಟ್ರಮಟ್ಟದಲ್ಲಿ ಹೆಚ್ಚಿನ ಪ್ರಚಾರ ಪಡೆಯಬೇಕಿದ್ದು, ಈ ಕುರಿತು ಕೇಂದ್ರ ಸರ್ಕಾರದ ಸಂಬಂಧಿತ ಸಚಿವರೊಂದಿಗೆ ಚರ್ಚಿಸಿ ಲಕ್ಕುಂಡಿಯ ಮಹತ್ವವನ್ನು ದೇಶದಾದ್ಯಂತ ಪರಿಚಯಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಲಕ್ಕುಂಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಪರಂಪರೆಯ ಸಂರಕ್ಷಣೆಗಾಗಿ ಜಿಲ್ಲಾಡಳಿತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಕೈಗೊಂಡಿರುವ ಕಾರ್ಯಗಳನ್ನು ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಶಾಸಕ ಸಿ.ಸಿ. ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣ ಗೊಗೇರಿ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಲಕ್ಕುಂಡಿ ದೇಶದ ಅತ್ಯಂತ ವಿಶಿಷ್ಟ ಪರಂಪರೆ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಐತಿಹಾಸಿಕ ಸ್ಮಾರಕಗಳು ಮತ್ತು ಶಿಲ್ಪಕಲಾ ವೈಭವವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ.”

 ಗಜೆಂದ್ರ ಯಾದವ್, ಛತ್ತೀಸ್‌ಗಢ ಸಚಿವರು

ಹೆಸರು ಬೆಳೆಗೆ ರೋಗದ ಕಾಟ: ರೈತರಲ್ಲಿ ಆತಂಕದ ಕಾರ್ಮೋಡ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಹಂಗಾಮಿನ ಪ್ರಮುಖ ವಾಣಿಜ್ಯ ಬೆಳೆಗಳಲ್ಲೊಂದಾದ ಹೆಸರು ಬೆಳೆಗೆ ಸುರುಳಿಪೂಚಿ (ಎಲೆಮುಟಗಿ), ಎಲೆಚುಕ್ಕಿ ಹಾಗೂ ಹಳದಿ ರೋಗ ಕಾಣಿಸಿಕೊಂಡಿದ್ದು, ತಾಲೂಕಿನ ರೈತರಲ್ಲಿ ಆತಂಕ ಮನೆ ಮಾಡಿದೆ. ಬಿತ್ತನೆಯಾಗಿ ಕೇವಲ 20ರಿಂದ 25 ದಿನಗಳಾಗಿರುವ ಬೆಳೆಗೆ ರೋಗಬಾಧೆ ಕಾಣಿಸಿಕೊಂಡಿರುವುದು “ಮೊದಲ ತುತ್ತಿಗೆ ಹಳ್ಳು” ಎಂಬಂತಾಗಿದ್ದು, ರೈತರ ನಿರೀಕ್ಷೆಗಳಿಗೆ ತಣ್ಣೀರು ಎರಚಿದಂತಾಗಿದೆ.

ಎಲ್‌ನೀನೋ ಪರಿಣಾಮದಿಂದ ಈ ಬಾರಿ ಮುಂಗಾರು ಮಳೆ ಕೊರತೆಯಾಗುವ ಸಾಧ್ಯತೆ ಇದೆ ಎಂಬ ಹವಾಮಾನ ಮುನ್ಸೂಚನೆಯ ಹಿನ್ನೆಲೆಯಲ್ಲಿ ರೈತರು ಮೇ ಮೂರನೇ ಹಾಗೂ ನಾಲ್ಕನೇ ವಾರದಲ್ಲಿಯೇ ಹೆಸರು ಬಿತ್ತನೆ ಮಾಡಿದ್ದರು. ಆದರೆ ಇದೀಗ ಮಳೆಯ ಕೊರತೆಯ ಜೊತೆಗೆ ರೋಗಬಾಧೆ ಕಾಣಿಸಿಕೊಂಡಿರುವುದು ರೈತರನ್ನು ಕಂಗಾಲಾಗಿಸಿದೆ.

ಕಳೆದ ವರ್ಷವೂ ರೋಗಬಾಧೆಯಿಂದ ಹೆಸರು ಬೆಳೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ರೈತರು ಈ ಬಾರಿ ಹೆಚ್ಚಿನ ಬೆಲೆ ನೀಡಿ ಅಣ್ಣಿಗೇರಿ, ನವಲಗುಂದ ಹಾಗೂ ನರಗುಂದ ಭಾಗಗಳಿಂದ ಪ್ರತಿ ಕೆ.ಜಿ.ಗೆ ಸುಮಾರು ₹160 ದರದಲ್ಲಿ ಗುಣಮಟ್ಟದ ಬೀಜ ಖರೀದಿಸಿ ಬಿತ್ತನೆ ಮಾಡಿದ್ದರು. ಕೇಂದ್ರ ಸರ್ಕಾರ ಹೆಸರು ಬೆಳೆಗೆ ಬೆಂಬಲ ಬೆಲೆ ಘೋಷಿಸಿರುವುದು ಹಾಗೂ ಕಡಿಮೆ ಮಳೆಯಲ್ಲಿಯೂ ಉತ್ತಮ ಇಳುವರಿ ನಿರೀಕ್ಷೆಯಿಂದ ಈ ಬಾರಿ ತಾಲೂಕಿನಲ್ಲಿ ಸುಮಾರು 5,100 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ.

ಲಕ್ಷ್ಮೇಶ್ವರ, ಶಿಗ್ಲಿ, ದೊಡ್ಡೂರ, ಸೂರಣಗಿ, ಬಾಲೆಹೊಸೂರ, ಅಕ್ಕಿಗುಂದ, ಬಡ್ನಿ, ಬಟ್ಟೂರ, ಹರದಗಟ್ಟಿ, ಅಡರಕಟ್ಟಿ, ಗೊಜನೂರ, ಯಳವತ್ತಿ, ಯತ್ನಳ್ಳಿ, ಮಾಡಳ್ಳಿ, ರಾಮಗೇರಿ ಹಾಗೂ ಬಸಾಪುರ ಭಾಗಗಳ ಕಪ್ಪು ಮಣ್ಣಿನ ಜಮೀನುಗಳಲ್ಲಿ ವ್ಯಾಪಕವಾಗಿ ಹೆಸರು ಬೆಳೆದಿದ್ದು, ಇದೀಗ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ರೋಗಬಾಧಿತ ಕ್ಷೇತ್ರಕ್ಕೆ ಕೃಷಿ ಇಲಾಖೆ ಭೇಟಿ

ಸೊರಟೂರು ಗ್ರಾಮದ ರೈತ ಮಹಾಂತೇಶ ಸೊರಟೂರು ಅವರ ಜಮೀನಿಗೆ ಭೇಟಿ ನೀಡಿದ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ, ರೋಗಬಾಧಿತ ಬೆಳೆಯನ್ನು ಪರಿಶೀಲಿಸಿ ರೈತರಿಗೆ ಅಗತ್ಯ ಸಲಹೆ ನೀಡಿದರು.

ಈ ಕುರಿತು ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆಯ ಹಿನ್ನೆಲೆಯಲ್ಲಿ ಅನೇಕ ರೈತರು ಅವಧಿಗೂ ಮುನ್ನ ಬಿತ್ತನೆ ಮಾಡಿದ್ದು, ಇಂತಹ ಬೆಳೆಗಳಲ್ಲಿ ರೋಗಬಾಧೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದರು.

ರೈತರಿಗೆ ಕೃಷಿ ಇಲಾಖೆಯ ಸಲಹೆ

ರೋಗಬಾಧೆ ಕಂಡುಬಂದ ತಕ್ಷಣ ರೈತರು ಸೂಕ್ತ ಕ್ರಿಮಿನಾಶಕ ಸಿಂಪಡಣೆ ಮಾಡಬೇಕು. 15 ಲೀಟರ್ ನೀರಿಗೆ 15 ಎಂಎಲ್ ಅಫಿಡೋಪೈರೋಪೆನ್ ಅಥವಾ 6 ಎಂಎಲ್ ಥಯಾಮೆಥೋಕ್ಸಾಮ್, ಅಥವಾ 10 ಗ್ರಾಂ ಡಿಯಾಫೆಂಥಿಯೋರಾನ್, ಅಥವಾ 5 ಎಂಎಲ್ ಇಮಿಡಾಕ್ಲೋಪ್ರಿಡ್ ಜೊತೆಗೆ 6 ಗ್ರಾಂ ಅಸಿಟಮಾಪ್ರಿಡ್ ಬೆರೆಸಿ ಸಿಂಪಡಣೆ ಮಾಡುವುದು ಪರಿಣಾಮಕಾರಿ ಎಂದು ತಿಳಿಸಿದರು.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಈ ವಾರ ಮಳೆಯ ಸಾಧ್ಯತೆ ಕಡಿಮೆ ಇರುವುದರಿಂದ ತೇವಾಂಶ ಕೊರತೆ ಇದ್ದರೆ ಬಿತ್ತನೆ ಮುಂದೂಡುವುದು ಉತ್ತಮ. ರೈತರು ಬೆಳೆದರ್ಶಕ ಆ್ಯಪ್‌ನಲ್ಲಿ ಬೆಳೆ ನೋಂದಣಿ ಮಾಡಿಸಿಕೊಳ್ಳುವುದರಿಂದ ಬೆಳೆವಿಮೆ, ಬೆಳೆಹಾನಿ ಪರಿಹಾರ ಹಾಗೂ ಬೆಂಬಲ ಬೆಲೆ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೈತರಾದ ಚನ್ನಪ್ಪ ಷಣ್ಮುಕಿ, ದ್ಯಾಮಣ್ಣ ಮೋದಿ, ಮಲ್ಲಪ್ಪ ಕಲ್ಲೂರ, ಮಲ್ಲಪ್ಪ ಸೊರಟೂರು, ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ, ಪಿ.ಕೆ. ಹೊನ್ನಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕಳೆದ ವರ್ಷ ಮಳೆಯಿಂದ ಬೆಳೆ ಹಾನಿಯಾಗಿತ್ತು. ಈ ವರ್ಷ ಉತ್ತಮ ಇಳುವರಿ ನಿರೀಕ್ಷೆಯಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಹೆಸರು ಬಿತ್ತನೆ ಮಾಡಿದ್ದೇವೆ. ಈಗ ಆರಂಭದಲ್ಲೇ ರೋಗ ಕಾಣಿಸಿಕೊಂಡಿರುವುದು ರೈತರ ಆತಂಕ ಹೆಚ್ಚಿಸಿದೆ.”

ಚನ್ನಪ್ಪ ಷಣ್ಮುಕಿ ಹಾಗೂ ಮಲ್ಲಪ್ಪ ಸೊರಟೂರು, ರೈತರು

‘ಭರವಸೆ ಹೆಚ್ಚು, ಸಾಧನೆ ಕಡಿಮೆ’: ಮೋದಿ ಸರ್ಕಾರದ ವಿರುದ್ಧ ಅಶೋಕ ಮಂದಾಲಿ ವಾಗ್ದಾಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತವು ಸಾಧನೆಗಿಂತ ಸುಳ್ಳು ಭರವಸೆಗಳು, ವೈಫಲ್ಯಗಳು, ಬೆಲೆ ಏರಿಕೆ, ನಿರುದ್ಯೋಗ ಹಾಗೂ ರೈತರ ಸಂಕಷ್ಟಗಳಿಂದಲೇ ಗುರುತಿಸಿಕೊಂಡಿದೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದೀರ್ಘ ಪ್ರಕಟಣೆ ನೀಡಿರುವ ಅವರು, “ಗರೀಬ್ ಕಲ್ಯಾಣ್” ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ವಾಸ್ತವದಲ್ಲಿ ಕೆಲವೇ ಉದ್ಯಮಿಗಳ ಹಿತಾಸಕ್ತಿಗೆ ಆದ್ಯತೆ ನೀಡಿದ್ದು, ಸಾಮಾನ್ಯ ಜನರ ಬದುಕು ದುಸ್ತರಗೊಳಿಸಿದೆ ಎಂದು ಆರೋಪಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, 2022ರೊಳಗೆ ರೈತರ ಆದಾಯ ದ್ವಿಗುಣ, ಗುಡಿಸಲು ಮುಕ್ತ ಭಾರತ, 100 ಸ್ಮಾರ್ಟ್ ಸಿಟಿಗಳು, ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಆತ್ಮನಿರ್ಭರ ಭಾರತ, ಎಲ್ಲರಿಗೂ ಆರೋಗ್ಯ ವಿಮೆ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳು ನಿರೀಕ್ಷಿತ ಗುರಿ ತಲುಪಿಲ್ಲ ಎಂದು ಅವರು ದೂರಿದರು.

ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮೆ ಮಾಡುವ ಭರವಸೆ ಸೇರಿದಂತೆ ಹಲವು ಚುನಾವಣಾ ಆಶ್ವಾಸನೆಗಳು ಜನರನ್ನು ಸೆಳೆಯುವ ರಾಜಕೀಯ ಘೋಷಣೆಗಳಾಗಿ ಉಳಿದಿವೆ ಎಂದು ಟೀಕಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇಂದು ಲಕ್ಷಾಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಯುವಕರನ್ನು ನಿರುದ್ಯೋಗದ ಅಂಚಿಗೆ ತಳ್ಳಿದೆ ಎಂದು ಆರೋಪಿಸಿದ ಅಶೋಕ ಮಂದಾಲಿ, ಪದವೀಧರ ಯುವಕರಲ್ಲಿ ನಿರುದ್ಯೋಗ ಪ್ರಮಾಣ ಆತಂಕಕಾರಿ ಮಟ್ಟ ತಲುಪಿದೆ ಎಂದು ಹೇಳಿದರು.

ಪೇಪರ್ ಲೀಕ್ ಹಗರಣಗಳು, ಅಗ್ನಿಪಥ್ ಯೋಜನೆ, ಸರ್ಕಾರಿ ನೇಮಕಾತಿಗಳ ವಿಳಂಬ ಹಾಗೂ ಉದ್ಯೋಗಾವಕಾಶಗಳ ಕೊರತೆಯಿಂದ ಯುವಜನತೆ ಭವಿಷ್ಯದ ಬಗ್ಗೆ ಆತಂಕದಲ್ಲಿದೆ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಆಹಾರ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಚುನಾವಣೆ ಮುಗಿದ ತಕ್ಷಣ ಇಂಧನ ಹಾಗೂ ಎಲ್‌ಪಿಜಿ ದರಗಳನ್ನು ಹೆಚ್ಚಿಸುವುದು ಕೇಂದ್ರ ಸರ್ಕಾರದ ರೂಢಿಯಾಗಿದೆ ಎಂದು ಆರೋಪಿಸಿದರು.

2014ಕ್ಕೆ ಹೋಲಿಸಿದರೆ ಇಂದಿನ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರಗಳು ಗಣನೀಯವಾಗಿ ಏರಿಕೆಯಾಗಿದ್ದು, ಸಾಮಾನ್ಯ ವರ್ಗದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ಈಡೇರಿಲ್ಲ. ಕನಿಷ್ಠ ಬೆಂಬಲ ಬೆಲೆ (MSP), ರಸಗೊಬ್ಬರ ದರ ಏರಿಕೆ, ಕೃಷಿ ವೆಚ್ಚ ಹೆಚ್ಚಳ ಹಾಗೂ ಅನುದಾನ ಕಡಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆರೋಪಿಸಿದರು.

ರಸಗೊಬ್ಬರ ಸಬ್ಸಿಡಿ ಕಡಿತ ಹಾಗೂ ಕೃಷಿ ಕ್ಷೇತ್ರದ ಮೇಲಿನ ನಿರ್ಲಕ್ಷ್ಯದಿಂದ ರೈತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.

ಜಿಎಸ್‌ಟಿ ಜಾರಿಯಾದ ನಂತರ ಕರ್ನಾಟಕದಂತಹ ತೆರಿಗೆ ಕೊಡುಗೆ ನೀಡುವ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ಕರ್ನಾಟಕ ದೇಶದ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾಗಿದ್ದರೂ, ಕೇಂದ್ರದಿಂದ ಮರಳಿ ಸಿಗುವ ಪಾಲು ತೀರಾ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಹಣಕಾಸು ಆಯೋಗದ ಶಿಫಾರಸುಗಳು ಹಾಗೂ ಜಿಎಸ್‌ಟಿ ವ್ಯವಸ್ಥೆಯಿಂದ ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಸಂಪನ್ಮೂಲಗಳು ಕಡಿಮೆಯಾಗುತ್ತಿವೆ ಎಂದು ಅಶೋಕ ಮಂದಾಲಿ ಆರೋಪಿಸಿದರು.

ಆರ್ಥಿಕತೆ ಮತ್ತು ರೂಪಾಯಿ ಮೌಲ್ಯ ಕುಸಿತ

ದೇಶದ ಆರ್ಥಿಕ ಬೆಳವಣಿಗೆ ದರ ಕುಸಿಯುತ್ತಿದ್ದು, ರೂಪಾಯಿ ಮೌಲ್ಯ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದೆ. ದೇಶದ ಸಾಲದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ಪರಿಣಾಮವಾಗಿ ಸಣ್ಣ ಕೈಗಾರಿಕೆಗಳು, ಎಂಎಸ್‌ಎಂಇಗಳು ಹಾಗೂ ಸ್ಟಾರ್ಟ್‌ಅಪ್ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ದೂರಿದರು. ಕೇಂದ್ರ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಪ್ರಚಾರ ರಾಜಕಾರಣದಲ್ಲಿ ತೊಡಗಿದೆ. ಜನರ ನೈಜ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಮೊದಲ ಆದ್ಯತೆಯಾಗಬೇಕು ಎಂದು ಅಶೋಕ ಮಂದಾಲಿ ಆಗ್ರಹಿಸಿದ್ದಾರೆ.

“ಪ್ರತಿ ವರ್ಷ ಎರಡು ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣ, 15 ಲಕ್ಷ ರೂ. ಜಮೆ, ಬೆಲೆ ನಿಯಂತ್ರಣ ಸೇರಿದಂತೆ ಹಲವು ಭರವಸೆಗಳು ಘೋಷಣೆಯಲ್ಲೇ ಉಳಿದಿವೆ. 12 ವರ್ಷದ ಮೋದಿ ಆಡಳಿತದ ಸಾಧನೆಗಿಂತ ವೈಫಲ್ಯಗಳೇ ಹೆಚ್ಚಾಗಿವೆ.”

ಅಶೋಕ ಮಂದಾಲಿ

ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ

  • ಮೋದಿ ಸರ್ಕಾರದ ಪ್ರಮುಖ ವೈಫಲ್ಯಗಳು
  • ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ಈಡೇರಿಲ್ಲ
  • ರೈತರ ಆದಾಯ ದ್ವಿಗುಣ ಮಾಡುವ ಗುರಿ ವಿಫಲ
  • ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರಗಳಲ್ಲಿ ಭಾರೀ ಏರಿಕೆ
  • ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಯೋಜನೆಗಳು ನಿರೀಕ್ಷಿತ ಫಲ ನೀಡಿಲ್ಲ
  • ನಿರುದ್ಯೋಗ ಪ್ರಮಾಣ ಏರಿಕೆ
  • ಕರ್ನಾಟಕಕ್ಕೆ ಜಿಎಸ್‌ಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ
  • ರೂಪಾಯಿ ಮೌಲ್ಯ ಕುಸಿತ ಹಾಗೂ ಸಾಲದ ಹೊರೆ ಹೆಚ್ಚಳ
  • ರಸಗೊಬ್ಬರ ಸಬ್ಸಿಡಿ ಕಡಿತದಿಂದ ರೈತರಿಗೆ ಸಂಕಷ್ಟ
  • ಸಣ್ಣ ಕೈಗಾರಿಕೆಗಳು ಮತ್ತು ಸ್ಟಾರ್ಟ್‌ಅಪ್‌ಗಳ ಮೇಲೆ ಆರ್ಥಿಕ ಒತ್ತಡ

ಮಾಸಾಶನ ಸ್ಥಗಿತಕ್ಕೆ ಹಿರಿಯರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಮನಸ್ವಿನಿ ಯೋಜನೆಯ ಮಾಸಾಶನಗಳು ಫಲಾನುಭವಿಗಳ ಖಾತೆಗೆ ಜಮೆಯಾಗದ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಈ ಹಿನ್ನೆಲೆ ಸಾಹಿತಿ ಹಾಗೂ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಹಾದಿಮನಿ ನೇತೃತ್ವದಲ್ಲಿ ಫಲಾನುಭವಿಗಳು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿ, ಬಾಕಿ ಉಳಿದಿರುವ ಮಾಸಾಶನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಮನವಿಯಲ್ಲಿ, ಮಾಸಾಶನವೇ ಜೀವನಾಧಾರವಾಗಿರುವ ಸಾವಿರಾರು ಫಲಾನುಭವಿಗಳು ಹಲವು ತಿಂಗಳಿಂದ ಹಣ ಸಿಗದೇ ಸಂಕಷ್ಟ ಎದುರಿಸುತ್ತಿದ್ದಾರೆ. ವಯೋವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ದಿನನಿತ್ಯದ ಖರ್ಚು ನಿರ್ವಹಿಸುವುದೇ ಕಷ್ಟಕರವಾಗಿದ್ದು, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ.

ನಕಲಿ ದಾಖಲೆಗಳ ಆಧಾರದ ಮೇಲೆ ಮಾಸಾಶನ ಪಡೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಹೆಸರಿನಲ್ಲಿ ಅರ್ಹ ಫಲಾನುಭವಿಗಳ ಮಾಸಾಶನ ಸ್ಥಗಿತಗೊಳಿಸಿರುವುದು ಸರಿಯಲ್ಲ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವ ಬದಲು ಎಲ್ಲ ಫಲಾನುಭವಿಗಳನ್ನೂ ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಮಾಸಾಶನ ಸ್ಥಗಿತದಿಂದ ಅನೇಕ ಹಿರಿಯ ನಾಗರಿಕರು ಔಷಧೋಪಚಾರ, ಆಹಾರ ಹಾಗೂ ದಿನನಿತ್ಯದ ಅಗತ್ಯ ವೆಚ್ಚಗಳನ್ನು ಭರಿಸಲು ಪರದಾಡುವಂತಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಬಾಕಿ ಉಳಿದಿರುವ ಮಾಸಾಶನವನ್ನು ಬಿಡುಗಡೆ ಮಾಡಿ ಫಲಾನುಭವಿಗಳ ನೆರವಿಗೆ ಬರಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕೃಷ್ಣ ಜಾಧವ, ನೀಲಪ್ಪ ತುಳಿ, ಅಡಿವೆಕ್ಕ ರಾಮಗಿರಿ, ವೀರಬಸಯ್ಯ ಮಠಪತಿ, ಇಮಾಮಸಾಬ ಬೈರಕದಾರ, ಜನ್ನತಬಿ ಬೈರಕದಾರ, ಪುಂಡಲೀಕ ಪರಬತ, ವಿನಾಯಕ ಹಾದಿಮನಿ, ಲಕ್ಷ್ಮಣ ತೋಡೇಕಾರ, ಲಕ್ಷ್ಮವ್ವ ಹಾದಿಮನಿ, ಈರಪ್ಪ ಚಿಕ್ಕತೋಟ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಮಾಸಾಶನ ಇಲ್ಲದೆ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರು ಜೀವನ ಸಾಗಿಸುವುದೇ ಕಷ್ಟವಾಗಿದೆ. ತಕ್ಷಣ ಬಾಕಿ ಪಿಂಚಣಿ ಬಿಡುಗಡೆ ಮಾಡದಿದ್ದರೆ ಹೋರಾಟ ಅನಿವಾರ್ಯ.”

ಶ್ರೀಕಾಂತ ಹಾದಿಮನಿ

ಸಾಹಿತಿ ಹಾಗೂ ಸಾಮಾಜಿಕ ಕಾರ್ಯಕರ್ತ

error: Content is protected !!