ರಾಯಚೂರು: ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ತೆರಳಿದ್ದ ಕಾರ್ಮಿಕನೊಬ್ಬ ಕೆಲಸದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಯಾಪಲದಿನ್ನಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ.
ಮೃತರನ್ನು ಹುಸೇನಪ್ಪ ಮಡಿವಾಳ (49) ಎಂದು ಗುರುತಿಸಲಾಗಿದೆ. ಕೆಲಸದ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಉಸಿರು ಚೆಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು 40 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಒಣಗಿದ ಕೆರೆಯ ಪ್ರದೇಶದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹೀಟ್ಸ್ಟ್ರೋಕ್ ಕಾರಣದಿಂದ ಸಾವು ಸಂಭವಿಸಿರಬಹುದು ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ಬಳಿಕ ಸುಡು ಬಿಸಿಲಿನಲ್ಲಿ ಸರಿಯಾದ ನೆರಳು, ಕುಡಿಯುವ ನೀರು ಹಾಗೂ ORS ವ್ಯವಸ್ಥೆ ಇಲ್ಲದೆ ಕೆಲಸ ಮಾಡಿಸಿದ್ದೇ ಸಾವಿಗೆ ಕಾರಣ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಹಾಗೂ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಆದರೆ ವೈದ್ಯರ ಪ್ರಕಾರ, ತೀವ್ರ ಬಿಸಿಲಿನಲ್ಲಿ ದೇಹದ ನೀರಿನ ಅಂಶ ಕಡಿಮೆಯಾಗಿ ರಕ್ತದೊತ್ತಡ ಇಳಿಯುವ ಕಾರಣವೂ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಲಾಗಿದೆ.
ಮೃತನ ಕುಟುಂಬಕ್ಕೆ ಇದುವರೆಗೆ ಯಾವುದೇ ಹಿರಿಯ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪರಿಹಾರ ನೀಡಬೇಕು ಹಾಗೂ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

