Home Blog

‘ಕುಮಾರಸ್ವಾಮಿಗೆ ಡಿಕೆಶಿ ನೋಡಿದ್ರೆ ಹೊಟ್ಟೆ ತೊಳಸುತ್ತೆ’! ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

0

ರಾಮನಗರ: ಡಿ.ಕೆ. ಶಿವಕುಮಾರ್‌ ಅವರನ್ನು ನೋಡಿದ ತಕ್ಷಣ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೊಟ್ಟೆ ತೊಳಸಿದಂತಾಗುತ್ತದೆ ಎಂದು ಸಚಿವ ಎಚ್‌.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ನೈಸ್‌ ರಸ್ತೆಯ ಟೋಲ್‌ ನೀಡಬೇಡಿ ಎಂದು ಎಚ್‌.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸಚಿವರಾಗಿ ಹೇಗೆ ಮಾತನಾಡಬೇಕು ಎಂಬ ಅರಿವು ಕುಮಾರಸ್ವಾಮಿ ಅವರಿಗೆ ಇರಬೇಕು ಎಂದು ಟೀಕಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಯೊಬ್ಬರು ಹಾದಿ-ಬೀದಿಯಲ್ಲಿ ಹೋಗುವವರ ರೀತಿಯಲ್ಲಿ ಮಾತನಾಡಬಾರದು. ನೈಸ್‌ ಟೋಲ್‌ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಧೈರ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಿ ಟೋಲ್‌ ತಡೆಯುವಂತೆ ಆದೇಶ ತರಲಿ ಎಂದು ಸಚಿವ ಬಾಲಕೃಷ್ಣ ಸವಾಲು ಹಾಕಿದರು.

ದೆಹಲಿಯಲ್ಲಿ ಕೆಲಸ ಮಾಡಲು ಜನರು ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವರನ್ನಾಗಿ ಆಯ್ಕೆ ಮಾಡಿದ್ದಾರೆ. ಆದರೆ ಬೆಳಗ್ಗೆಯಾದರೆ ರಾಜ್ಯಕ್ಕೆ ಬಂದು ಕೂರುತ್ತಿದ್ದಾರೆ ಎಂದು ಸಚಿವರು ವ್ಯಂಗ್ಯವಾಡಿದರು. ನೈಸ್‌ ಟೋಲ್‌ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸಿ ಟೋಲ್‌ ಬಂದ್‌ ಮಾಡಿಸಲಿ ಎಂದು ಹೇಳಿದರು.

‘ಸಿಎಂಗೆ ಕೆಟ್ಟ ಹೆಸರು ತರುವುದೇ ಉದ್ದೇಶ’:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ತರುವುದೇ ಕುಮಾರಸ್ವಾಮಿ ಅವರ ಮುಖ್ಯ ಉದ್ದೇಶವಾಗಿದೆ. ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಿರುವುದು ಕುಮಾರಸ್ವಾಮಿ ಅವರಿಗೆ ಹೊಟ್ಟೆಯುರಿ ತರಿಸುತ್ತಿದೆ ಎಂದು ಟೀಕಿಸಿದರು.

ನೈಸ್‌ ರಸ್ತೆ ವಿಚಾರವಾಗಿ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಿತಿ ರಚಿಸಿದ್ದಾರೆ. ಸಮಿತಿಯಲ್ಲಿ ತಾವು, ಸಚಿವ ಚಲುವರಾಯಸ್ವಾಮಿ ಹಾಗೂ ಡಾ. ಜಿ. ಪರಮೇಶ್ವರ್‌ ಇದ್ದೇವೆ. ಸಮಿತಿಯ ವರದಿ ಬಂದ ಬಳಿಕ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ನಾಗೇಂದ್ರ ಪ್ರಕರಣದಲ್ಲೂ ವಿಪಕ್ಷಗಳ ವಿರುದ್ಧ ವಾಗ್ದಾಳಿ:

ಸಚಿವ ನಾಗೇಂದ್ರ ವಿರುದ್ಧ ಸಿಬಿಐ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರಕ್ಕೂ ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದರು. ಸಿಬಿಐ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ತಮ್ಮ ನಾಯಕರ ವಿರುದ್ಧವೂ ತನಿಖಾ ಸಂಸ್ಥೆಗಳನ್ನು ಬಳಸಲಾಗಿತ್ತು. ಆದರೆ ಅಂತಿಮವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ವಜಾಗೊಂಡಿತು ಎಂದು ಹೇಳಿದರು.

ವಿಪಕ್ಷಗಳು ವಿಚಾರವನ್ನು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಬದಲು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿವೆ ಎಂದು ಸಚಿವರು ಆರೋಪಿಸಿದರು.

ಬಿಡದಿ ಟೌನ್‌ಶಿಪ್‌ ಯೋಜನೆ ಕುರಿತು ಸಮಿತಿ:

ಇನ್ನು ಬಿಡದಿ ಟೌನ್‌ಶಿಪ್‌ ಯೋಜನೆಯ ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿಯು ಯೋಜನೆಯ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೆಚ್‌.ಸಿ. ಬಾಲಕೃಷ್ಣ ಹೇಳಿದರು.

ಅಶ್ವಿನಿ ಅತ್ಯಾಚಾರ-ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್; ಪ್ರಮುಖ ಆರೋಪಿ ಜೈಲು, 4 ಪೇದೆ ಅಮಾನತು!

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದ ಯುವತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ನಾಲ್ವರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.

ಹೊಕ್ರಾಣಿ ಗ್ರಾಮದ 21 ವರ್ಷದ ಅಶ್ವಿನಿ ಅವರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಗುಂಡ್ಯಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಉಳಿದ ಮೂವರು ಆರೋಪಿಗಳ ವಿಚಾರಣೆ ಮುಂದುವರಿದಿದೆ.

ಮಾಹಿತಿ ಪ್ರಕಾರ, ಅಶ್ವಿನಿ ರಾತ್ರಿ ವೇಳೆ ಬಹಿರ್ದೆಸೆಗೆ ತೆರಳಿದ್ದರು. ಆದರೆ ಬಳಿಕ ಅವರು ಮನೆಗೆ ವಾಪಸ್ ಬಂದಿರಲಿಲ್ಲ. ಯುವತಿ ನಾಪತ್ತೆಯಾಗಿರುವ ಕುರಿತು ಸಿರವಾರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದರೂ ಪೊಲೀಸರು ತಕ್ಷಣ ಸ್ಪಂದಿಸಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಮರುದಿನ ಬೆಳಗ್ಗೆ ಯುವತಿಯ ಶವ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಯುವತಿ ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದರೂ ಪೊಲೀಸರು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಆರೋಪದಡಿ ನಾಲ್ವರು ಪೊಲೀಸ್ ಪೇದೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಭೀಮರಡ್ಡಿ, ವೀರೇಶ, ದೇವರಾಜ ಹಾಗೂ ನಾಗರಾಜ ಅವರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿಚಾರಣೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Gen Z ಮತದಾರರ ಸೆಳೆಯಲು ಬಿಜೆಪಿ ವಿಶೇಷ ತಂಡ ರಚನೆ: ಸ್ಮೃತಿ ಇರಾನಿ, ವಿನೋದ್ ತಾವಡೆ ಸೇರ್ಪಡೆ

0

ನವದೆಹಲಿ: ಯುವಜನತೆ, ಅದರಲ್ಲೂ ಮುಖ್ಯವಾಗಿ Gen Z ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಬಿಜೆಪಿ ವಿಶೇಷ ತಂಡವೊಂದನ್ನು ರಚಿಸಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ನೇತೃತ್ವದಲ್ಲಿ ರೂಪಿಸಲಾಗಿರುವ ಈ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ ಮತ್ತು ವಿನೋದ್ ತಾವಡೆ ಸೇರಿದಂತೆ ಹಲವು ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ. ಗುಜರಾತ್ ಸಚಿವ ಹರ್ಷ್ ಸಾಂಘ್ವಿ ಹಾಗೂ ಛತ್ತೀಸ್‌ಗಢ ಸಚಿವ ಒ.ಪಿ. ಚೌಧರಿ ಕೂಡ ತಂಡದ ಭಾಗವಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೇಶದಾದ್ಯಂತ ಯುವಜನರೊಂದಿಗೆ ನೇರ ಹಾಗೂ ನಿರಂತರ ಸಂವಾದ ನಡೆಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. Gen Z ಯುವಕರ ಆಕಾಂಕ್ಷೆ, ಸಮಸ್ಯೆ ಮತ್ತು ನಿರೀಕ್ಷೆಗಳನ್ನು ನೇರವಾಗಿ ಅರಿಯುವುದು ಕಾರ್ಯಕ್ರಮದ ಗುರಿಯಾಗಿದ್ದು, ಬಿಜೆಪಿ ನಾಯಕರೊಂದಿಗೆ ನೇರವಾಗಿ ಸಂವಾದ ನಡೆಸಿ ತಮ್ಮ ಅಭಿಪ್ರಾಯ ಹಾಗೂ ಪ್ರಶ್ನೆಗಳನ್ನು ಮಂಡಿಸಲು ಯುವಜನರಿಗೆ ವೇದಿಕೆ ಕಲ್ಪಿಸುವ ಉದ್ದೇಶವನ್ನೂ ಪಕ್ಷ ಹೊಂದಿದೆ.

ಸಂವಾದ, ಚರ್ಚೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಯುವ ಮತದಾರರನ್ನು ತಲುಪಲು ಬಿಜೆಪಿ ಮುಂದಾಗಿದೆ. ಹೊಸ ತಲೆಮಾರಿನೊಂದಿಗೆ ಪಕ್ಷದ ಸಂಪರ್ಕ ಬಲಪಡಿಸುವುದು ಹಾಗೂ ಯುವಜನರ ರಾಜಕೀಯ ಭಾಗವಹಿಸುವಿಕೆ ಹೆಚ್ಚಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

Gen Z ಸಂಪರ್ಕ ಅಭಿಯಾನದ ನಿಖರ ವೇಳಾಪಟ್ಟಿ, ಕಾರ್ಯಕ್ರಮಗಳ ಸ್ವರೂಪ ಹಾಗೂ ಸ್ಥಳಗಳ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಮುಂಬರುವ ಚುನಾವಣಾ ಸವಾಲುಗಳ ಹಿನ್ನೆಲೆಯಲ್ಲಿ ಯುವ ಮತದಾರರತ್ತ ಬಿಜೆಪಿ ಹೆಚ್ಚಿನ ಗಮನ ಹರಿಸುತ್ತಿರುವುದರ ಸೂಚನೆ ಇದಾಗಿದೆ.

ಇದೇ ವೇಳೆ, ನಿತಿನ್ ನಬೀನ್ ಅವರು ಶನಿವಾರ (ಆ.22) ಬಿಜೆಪಿಯ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವುದು ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ: ಶೀಘ್ರದಲ್ಲೇ ನೋಟ್ ಬುಕ್ ಕೊಡುಗೆ ಎಂದ ಮಧು ಬಂಗಾರಪ್ಪ

0

ಬೆಂಗಳೂರು/ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ‘ಕಲಾಂ ಸೆಂಟರ್’ಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಈ ಘೋಷಣೆ ಮಾಡಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಒದಗಿಸುವುದು ತಮ್ಮ ಕರ್ತವ್ಯ ಎಂದ ಸಚಿವರು, ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಿಲ್ಲದಿದ್ದರೂ ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದಾಗಿ ಹೇಳಿದರು. ಇದಕ್ಕೆ ಅಗತ್ಯ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಮಾತುಗಳನ್ನು ಆಲಿಸಿದ ಸಚಿವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಹಾಗೂ ಕಾಲೇಜಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಹಂಚಿಕೊಂಡಾಗ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳೊಂದಿಗೆ ಸಂವಾದ ನಡೆಸುವುದು ತಮಗೆ ಯಾವಾಗಲೂ ಖುಷಿ ಕೊಡುವ ವಿಚಾರ ಎಂದ ಸಚಿವರು, ನಿರೀಕ್ಷಿಸದ ಪ್ರಶ್ನೆ ಹಾಗೂ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಮುಂದಿಡುತ್ತಾರೆ, ಲವಲವಿಕೆಯ ವಾತಾವರಣ ಸೃಷ್ಟಿಸುತ್ತಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.

ಪೂಜೆಯ ಹೂವು ಎಸೆಯಬೇಡಿ! ಮನೆಯಲ್ಲೇ ಕೆಮಿಕಲ್‌ ಫ್ರೀ ಧೂಪ ತಯಾರಿಸುವ ಸುಲಭ ವಿಧಾನ

0

ಮನೆಯಲ್ಲಿ ದೈನಂದಿನ ಪೂಜೆ, ವರಮಹಾಲಕ್ಷ್ಮಿ ಹಬ್ಬ, ಗೌರಿ-ಗಣೇಶ ಹಬ್ಬ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಲ್ಲಿ ದೇವರಿಗೆ ಅರ್ಪಿಸಿದ ಹೂವುಗಳನ್ನು ಮರುದಿನ ಎಸೆಯುವುದು ಸಾಮಾನ್ಯ.

ಆದರೆ ಈ ಪೂಜಾ ಹೂವುಗಳನ್ನು ತ್ಯಾಜ್ಯವಾಗಿ ಎಸೆಯುವ ಬದಲು ಮರುಬಳಕೆ ಮಾಡಿ ಮನೆಯಲ್ಲೇ ಕೆಮಿಕಲ್‌ ಫ್ರೀ ಧೂಪ ತಯಾರಿಸಬಹುದು. ಇದರಿಂದ ಪರಿಸರ ಸ್ನೇಹಿ ಪರ್ಯಾಯ ಸಿಗುವುದರ ಜೊತೆಗೆ ನೈಸರ್ಗಿಕ ಸುವಾಸನೆಯ ಧೂಪವನ್ನು ಸುಲಭವಾಗಿ ತಯಾರಿಸಿಕೊಳ್ಳಬಹುದು.

ದೇವರಿಗೆ ಅರ್ಪಿಸಿದ ದಾಸವಾಳ, ಸೇವಂತಿಗೆ, ಚೆಂಡುಹೂವು, ಮಲ್ಲಿಗೆ, ಗುಲಾಬಿ ಸೇರಿದಂತೆ ವಿವಿಧ ಹೂವುಗಳ ದಳಗಳನ್ನು ಬಳಸಿಕೊಂಡು ಯಾವುದೇ ರಾಸಾಯನಿಕವಿಲ್ಲದ ಧೂಪವನ್ನು ತಯಾರಿಸಬಹುದು. ಈ ವಿಧಾನ ಸರಳವಾಗಿದ್ದು, ಮನೆಯಲ್ಲಿರುವ ಕೆಲವೇ ಸಾಮಗ್ರಿಗಳಿಂದ ಇದನ್ನು ಸಿದ್ಧಪಡಿಸಬಹುದು.

ಮೊದಲು ಹೂವುಗಳನ್ನು ಚೆನ್ನಾಗಿ ಒಣಗಿಸಬೇಕು:

ಪೂಜೆಯಲ್ಲಿ ಬಳಸಿದ ಹೂವುಗಳ ದಳಗಳನ್ನು ಪ್ರತ್ಯೇಕವಾಗಿ ತೆಗೆದು ಸ್ವಚ್ಛವಾದ ಬಟ್ಟೆ ಅಥವಾ ತಟ್ಟೆಯ ಮೇಲೆ ಹರಡಬೇಕು. ನಂತರ ಉತ್ತಮ ಗಾಳಿ ಮತ್ತು ಸೂರ್ಯನ ಬೆಳಕು ಬೀಳುವ ಸ್ಥಳದಲ್ಲಿ 2ರಿಂದ 3 ದಿನಗಳವರೆಗೆ ಸಂಪೂರ್ಣ ಒಣಗಿಸಬೇಕು. ಹೂವುಗಳಲ್ಲಿ ಯಾವುದೇ ತೇವಾಂಶ ಉಳಿಯದಂತೆ ನೋಡಿಕೊಳ್ಳುವುದು ಮುಖ್ಯ. ಸಮಯದ ಅಭಾವ ಇದ್ದರೆ ಹೂವಿನ ದಳಗಳನ್ನು ಸ್ವಲ್ಪ ಹೊತ್ತು ಡ್ರೈ ರೋಸ್ಟ್‌ ಮಾಡಿ ಒಣಗಿಸಬಹುದು.

ಹೂವಿನ ದಳಗಳನ್ನು ಪುಡಿ ಮಾಡಿ:

ಹೂವುಗಳು ಸಂಪೂರ್ಣ ಒಣಗಿದ ಬಳಿಕ ಅವುಗಳನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಪುಡಿ ಮಾಡಬೇಕು. ನಂತರ ಈ ಪುಡಿಗೆ ತೆಂಗಿನ ನಾರು, ಹವನ ಸಾಮಗ್ರಿ, ಗಗ್ಗುಳ, ಶ್ರೀಗಂಧ, ಸಾಂಬ್ರಾಣಿ ಅಥವಾ ಕರ್ಪೂರದಂತಹ ನೈಸರ್ಗಿಕ ಸುಗಂಧ ದ್ರವ್ಯಗಳನ್ನು ಸೇರಿಸಿ ಮತ್ತೆ ಚೆನ್ನಾಗಿ ಪುಡಿ ಮಾಡಬೇಕು. ಬಳಿಕ ಜರಡಿಯ ಮೂಲಕ ಶೋಧಿಸಿ ಮೃದುವಾದ ಪುಡಿಯನ್ನು ಪ್ರತ್ಯೇಕವಾಗಿ ಇಟ್ಟುಕೊಳ್ಳಬಹುದು.

ಇಚ್ಛೆಯಿದ್ದರೆ ಈ ಮಿಶ್ರಣಕ್ಕೆ ಪಲಾವ್‌ ಎಲೆ, ದಾಲ್ಚಿನ್ನಿ ಹಾಗೂ ಹಸುವಿನ ಒಣ ಸಗಣಿಯನ್ನು ಸೇರಿಸಬಹುದು. ಇವುಗಳಿಂದ ಧೂಪದ ಪರಿಮಳ ಹೆಚ್ಚುವುದರ ಜೊತೆಗೆ ಸೊಳ್ಳೆ ಹಾಗೂ ಇತರ ಕೀಟಗಳು ಮನೆಯೊಳಗೆ ಪ್ರವೇಶಿಸುವುದನ್ನು ಕಡಿಮೆ ಮಾಡಲು ಸಹಕಾರಿಯಾಗಬಹುದು.

ಕೋನ್‌ ಆಕಾರದ ಧೂಪ ತಯಾರಿಸುವ ವಿಧಾನ:

ತಯಾರಿಸಿದ ಹೂವಿನ ಪುಡಿಯನ್ನು ಒಂದು ಪಾತ್ರೆಯಲ್ಲಿ ಹಾಕಿ ಅದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಮೃದುವಾದ ಮಿಶ್ರಣ ತಯಾರಿಸಬೇಕು. ಬಳಿಕ ಸಣ್ಣ ಸಣ್ಣ ಉಂಡೆಗಳನ್ನು ಮಾಡಿಕೊಂಡು ಕೈಯಿಂದ ಕೋನ್‌ ಆಕಾರದಲ್ಲಿ ಧೂಪವನ್ನು ರೂಪಿಸಬೇಕು.

ನೆರಳಿನಲ್ಲಿ ಒಣಗಿಸಿದರೆ ಬಳಕೆಗೆ ಸಿದ್ಧ:

ತಯಾರಾದ ಧೂಪಗಳನ್ನು ಸ್ವಚ್ಛವಾದ ತಟ್ಟೆ ಅಥವಾ ಬಟ್ಟೆಯ ಮೇಲೆ ಇಟ್ಟು ನೆರಳಿರುವ ಹಾಗೂ ಗಾಳಿ ಚೆನ್ನಾಗಿ ಬೀಸುವ ಸ್ಥಳದಲ್ಲಿ 1ರಿಂದ 2 ದಿನಗಳವರೆಗೆ ಒಣಗಿಸಬೇಕು. ನೇರ ಸೂರ್ಯನ ಬೆಳಕಿನಲ್ಲಿ ಒಣಗಿಸುವುದನ್ನು ತಪ್ಪಿಸಬೇಕು, ಏಕೆಂದರೆ ಇದರಿಂದ ಧೂಪದ ನೈಸರ್ಗಿಕ ಸುವಾಸನೆ ಕಡಿಮೆಯಾಗುವ ಸಾಧ್ಯತೆ ಇರುತ್ತದೆ.

ಧೂಪಗಳು ಸಂಪೂರ್ಣವಾಗಿ ಒಣಗಿದ ಬಳಿಕ ಅವುಗಳನ್ನು ಪೂಜೆಯ ಸಮಯದಲ್ಲಿ ಬಳಸಬಹುದು. ಈ ವಿಧಾನದಿಂದ ಪೂಜಾ ಹೂವುಗಳ ಮರುಬಳಕೆ ಸಾಧ್ಯವಾಗುವುದರ ಜೊತೆಗೆ ಮನೆಯಲ್ಲಿಯೇ ನೈಸರ್ಗಿಕ, ಕೆಮಿಕಲ್‌ ಫ್ರೀ ಹಾಗೂ ಪರಿಸರ ಸ್ನೇಹಿ ಧೂಪವನ್ನು ತಯಾರಿಸಿಕೊಳ್ಳಬಹುದು.

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

0

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಮುಂಗಾರು ಮಳೆ ಕಳೆದುಕೊಂಡಿದ್ದು, ದನಕರುಗಳಿಗೆ ಕುಡಿಯುವ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರು ಕಂಗಾಲಾಗಿ ಗುಳೆ ಹೋಗುತ್ತಿದ್ದರೂ ಸರ್ಕಾರ ರೈತರ ಪರವಾಗಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಬರ ಇರುವ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರೂ ಸರ್ಕಾರ ಯಾಕೆ ಅಧಿಕೃತವಾಗಿ ಬರ ಘೋಷಣೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಹಾಗೂ ಸಚಿವರೇ ಬರ ಪರಿಸ್ಥಿತಿ ಇರುವುದನ್ನು ಒಪ್ಪಿಕೊಳ್ಳುತ್ತಿದ್ದರೂ ಅಧಿಕೃತ ಘೋಷಣೆ ಮಾಡದಿರುವುದನ್ನು ಪ್ರಶ್ನಿಸಿದ ರವಿಕುಮಾರ್, ಕೂಡಲೇ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು. ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ ಅವರು, ರೈತರು ಮೂರು ಬಾರಿ ಬಿತ್ತನೆ ಮಾಡಿದ್ದು, ಗೊಬ್ಬರ, ಕೂಲಿ ಹಾಗೂ ಬಿತ್ತನೆ ವೆಚ್ಚದಿಂದ ನಷ್ಟ ಅನುಭವಿಸಿದ್ದಾರೆ ಎಂದು ವಿವರಿಸಿದರು.

ಎರಡೂವರೆ ತಿಂಗಳಿನಿಂದ ರೈತರು ಸಂಕಷ್ಟದಲ್ಲಿದ್ದು, ಅವರಿಗೆ ಎಕರೆಗೆ 50 ಸಾವಿರ ರೂ. ನೀಡಬೇಕು ಹಾಗೂ ರಾಜ್ಯದಾದ್ಯಂತ ಇರುವ ರೈತರಿಗಾಗಿ 10 ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಬೇಕು ಎಂದು ರವಿಕುಮಾರ್ ಒತ್ತಾಯಿಸಿದರು.

ದಲಿತರ ರಕ್ಷಣೆಗೆ ವಿಫಲ ಸರ್ಕಾರ: ಸಚಿವ ಕಾಶಪ್ಪನವರ್ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

0

ಬೆಂಗಳೂರು: ಈ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ದೇವದುರ್ಗದಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆಯನ್ನು ಉಲ್ಲೇಖಿಸಿದ ಅವರು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದರೂ ಗೃಹ ಇಲಾಖೆ ಮೌನವಾಗಿದೆ ಎಂದು ಆರೋಪಿಸಿದರು. ಗೃಹ ಸಚಿವರು ವಾಸ್ತವದಲ್ಲಿ ಆರ್‌ಎಸ್‌ಎಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಕಾಶಪ್ಪನವರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ನಾರಾಯಣಸ್ವಾಮಿ, ಪ್ರಧಾನಿ ಮೋದಿ ಅವರ ಬಗ್ಗೆ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಸಚಿವರ ಬಂಧನ ಅಥವಾ ಎಫ್‌ಐಆರ್ ಆಗಿಲ್ಲ ಎಂದು ದೂರಿದ ಅವರು, ಈ ವಿಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿರುವುದನ್ನು ಖಂಡಿಸಿದ ನಾರಾಯಣಸ್ವಾಮಿ, ಇಂತಹ ಕ್ರಮವನ್ನು ಬಿಜೆಪಿ ಎಂದಿಗೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೂಡಲೇ ಸಚಿವ ಕಾಶಪ್ಪನವರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮಂಡ್ಯ ಬೆಲ್ಲಕ್ಕೆ ಬಂಗಾರದ ಬೆಲೆ: ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಬೆಲ್ಲದ ದರ!

0

ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆಯ ಮೇಲೆ ತಟ್ಟಿದೆ.

ಇತಿಹಾಸದಲ್ಲೇ ಎಂದೂ ಕಂಡಿರದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ. ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡು-ಮೂರು ದಿನಗಳಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿ ಈಗ 6,500 ರೂ.ನಿಂದ 7,000 ರೂ.ವರೆಗೆ ಹರಾಜಾಗುತ್ತಿದೆ.

ಕಳೆದ ಆರು ತಿಂಗಳಿಂದ ಮಳೆಯಿಲ್ಲದೆ ಹಾಗೂ ಕಬ್ಬಿಗೆ ನೀರಿನ ಪೂರೈಕೆಯಾಗದೆ ಗದ್ದೆಗಳು ಒಣಗಿ ನಿಂತಿವೆ. ಪರಿಣಾಮ ಕಬ್ಬಿನ ಇಳುವರಿ ಅರ್ಧದಷ್ಟು ಕುಸಿದಿದ್ದು, ಗಾಣಗಳಿಗೆ ಕಬ್ಬು ಸಿಗದೆ ಉತ್ಪಾದನೆ ಸಂಪೂರ್ಣ ಕುಂಠಿತಗೊಂಡಿದೆ. ಹಿಂದೆ ಪ್ರತಿದಿನ 10ರಿಂದ 12 ಲಾರಿಗಳಷ್ಟು ಮಾರುಕಟ್ಟೆಗೆ ಹೋಗುತ್ತಿದ್ದ ಬೆಲ್ಲದ ಪೂರೈಕೆ ಈಗ ಅರ್ಧದಷ್ಟು ಇಳಿಕೆಯಾಗಿದೆ.

ಬೆಲ್ಲದ ಮಾರುಕಟ್ಟೆ ಪ್ರಾರಂಭವಾದ ದಿನದಿಂದಲೂ ಈ ಮಟ್ಟಿಗೆ ದರ ಏರಿಕೆಯಾಗಿರಲಿಲ್ಲ. ಈ ಸೀಸನ್‌ನಲ್ಲಿ ಬೆಲೆ ತಗ್ಗಬೇಕಿತ್ತಾದರೂ, ಇಷ್ಟು ಭಾರೀ ಏರಿಕೆ ಕಂಡಿರುವುದು ಇದೇ ಮೊದಲು ಎಂದು ವ್ಯಾಪಾರಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಳೆಯಾಶ್ರಿತ ಹಾಗೂ ನೀರಾವರಿಯಿಲ್ಲದೆ ಒಣಗಿದ ಕಬ್ಬಿನ ಬೆಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದರೆ, ಕಚ್ಚಾ ವಸ್ತು ಸಿಗದೆ ಬೆಲ್ಲದ ದರ ಗಗನಕ್ಕೇರಿರುವುದು ಸಾಮಾನ್ಯ ಜನರಿಗೂ ಬಿಸಿ ತಟ್ಟುವಂತೆ ಮಾಡಿದೆ.

ಔಷಧ ಕಂಪನಿಯಲ್ಲಿ ಭಾರೀ ಸ್ಫೋಟ; ಇಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ

0

ಹೈದರಾಬಾದ್: ತೆಲಂಗಾಣದ ಯಾದಾದ್ರಿ-ಭುವನಗಿರಿ ಜಿಲ್ಲೆಯ ಔಷಧ ಘಟಕವೊಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 10:30ರ ವೇಳೆಗೆ ಪೊಚಂಪಲ್ಲಿ ಮಂಡಲದ ದೋತಿಗುಡೆಂ ಗ್ರಾಮದ ಹೊರವಲಯದಲ್ಲಿರುವ ಹ್ಯಾಜೆಲೋ ಲ್ಯಾಬ್ ಪ್ರೈ.ಲಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. 9 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ಭಾರೀ ಶಬ್ದ ಕೇಳಿ ಸ್ಥಳೀಯ ನಿವಾಸಿಗಳು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಸ್ಫೋಟದ ಬಳಿಕ ಕಂಪನಿಯ ಆವರಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ನೀರಿನ ಪೈಪ್‌ಗಳ ಮೂಲಕ ಬೆಂಕಿ ನಿಯಂತ್ರಿಸಲು ಹರಸಾಹಸಪಟ್ಟಿದ್ದು, ರಕ್ಷಣಾ ಸಿಬ್ಬಂದಿ ಹಾಗೂ ಕಾರ್ಮಿಕರು ಕೂಡ ಕಾರ್ಯಾಚರಣೆಗೆ ಸಹಕರಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಫಾರ್ಮಾ ಕಂಪನಿಯಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿರುವ ಸಾಧ್ಯತೆಯನ್ನು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಸ್ಫೋಟ ಸಂಭವಿಸಿದ ಸ್ಥಳ, ರಿಯಾಕ್ಟರ್‌ನ ಸ್ಥಿತಿ ಹಾಗೂ ಕಂಪನಿಯಲ್ಲಿ ಕೈಗೊಳ್ಳಲಾಗಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಬೆಟ್ಟದ ಮಾವಿನಕೆರೆ ದೇವಾಲಯದಲ್ಲಿ ಪುತ್ರ ಪ್ರಜ್ವಲ್ ನೆನೆದು ಭವಾನಿ ರೇವಣ್ಣ ಕಣ್ಣೀರು!

0

ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟ ಘಟನೆ ನಡೆದಿದೆ.

ಎರಡನೇ ಶ್ರಾವಣ ಶನಿವಾರದ ಪ್ರಯುಕ್ತ ಭವಾನಿ ರೇವಣ್ಣ ಅವರು ಕುಟುಂಬಸ್ಥರೊಂದಿಗೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರೊಂದಿಗೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿ, ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ಸಲ್ಲಿಸಿದರು. ಈ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟರು.

ಜೈಲಿನಲ್ಲಿರುವ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆನೆದು ಭವಾನಿ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಕಂಬನಿ ಒರೆಸಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸೂರಜ್ ರೇವಣ್ಣ ಭಾಗಿಯಾಗಿದ್ದರು.