Home Blog

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ…

ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ಸಮೀಪ ನಡೆದಿದೆ.

ಮೃತರನ್ನು ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಎಂದು ಗುರುತಿಸಲಾಗಿದೆ.

ರೋಣದಿಂದ ಗಜೇಂದ್ರಗಡ ಕಡೆಗೆ ಮಣ್ಣು ಸಾಗಿಸಿಕೊಂಡು ಟಿಪ್ಪರ್ ಅತಿವೇಗವಾಗಿ ತೆರಳುತ್ತಿದ್ದ ವೇಳೆ, ಇಟಗಿ ಕ್ರಾಸ್‌ನಿಂದ ಹೊಸಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ನಂತರ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಭಾರತದ ಆರ್ಥಿಕತೆಗೆ ಭರ್ಜರಿ ವೇಗ; ಮೊದಲ ತ್ರೈಮಾಸಿಕದಲ್ಲಿ GDP ಶೇ.7.8ರಷ್ಟು ಏರಿಕೆ!

0

ನವದೆಹಲಿ: ಜಾಗತಿಕ ಯುದ್ಧ ಸಂಘರ್ಷಗಳು, ತೈಲ ಬೆಲೆ ಏರಿಕೆ ಹಾಗೂ ಪೂರೈಕೆ ಸರಪಳಿ ಅಡೆತಡೆಗಳ ನಡುವೆಯೂ ಭಾರತದ ಆರ್ಥಿಕತೆ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿದ ಬೆಳವಣಿಗೆ ದಾಖಲಿಸಿದೆ.

ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಭಾರತದ ಜಿಡಿಪಿ ಶೇ.7.8ರಷ್ಟು ಬೆಳವಣಿಗೆ ಕಂಡಿದೆ.

ಈ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ವಿರೋಧ ಪಕ್ಷಗಳು ಹಾಗೂ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಜಾಗತಿಕ ಮಟ್ಟದಲ್ಲಿ ಹಲವು ಬಿಕ್ಕಟ್ಟುಗಳು ಎದುರಾಗಿರುವ ಸಂದರ್ಭದಲ್ಲೂ ಭಾರತ ಹೊಸ ದಾಖಲೆ ಬರೆದಿದೆ. ದೇಶದ 1.4 ಶತಕೋಟಿ ಜನರ ಕಠಿಣ ಪರಿಶ್ರಮ ಮತ್ತು ಸಾಮೂಹಿಕ ಇಚ್ಛಾಶಕ್ತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಟೀಕಾಕಾರರಿಗೆ ಮೋದಿ ತಿರುಗೇಟು:

ದೇಶದ ಆರ್ಥಿಕತೆಯ ಕುರಿತು ಹತಾಶೆ ಮೂಡಿಸುವ ಹಾಗೂ ‘ಸುಳ್ಳುಗಳ ಪ್ರತಿಧ್ವನಿ’ ಹರಡುವವರಿಗೆ ಶೇ.7.8ರಷ್ಟು ಜಿಡಿಪಿ ಬೆಳವಣಿಗೆಯೇ ಸೂಕ್ತ ಉತ್ತರ ಎಂದು ಪ್ರಧಾನಿ ಹೇಳಿದ್ದಾರೆ. ಕೆಲವರು ದೇಶದ ಪ್ರಗತಿಯನ್ನು ಮರೆಮಾಚಲು ಸುಳ್ಳುಗಳನ್ನು ಹರಡುತ್ತಿದ್ದರೂ ಭಾರತ ನಿರಂತರವಾಗಿ ಮುನ್ನಡೆಯುತ್ತಿದೆ ಎಂದು ಅವರು ಪರೋಕ್ಷವಾಗಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆತ್ಮನಿರ್ಭರ ಭಾರತಕ್ಕೆ ಒತ್ತು:

ಜಾಗತಿಕ ಆರ್ಥಿಕ ಏರಿಳಿತಗಳಿಂದ ದೇಶೀಯ ಮಾರುಕಟ್ಟೆಯನ್ನು ರಕ್ಷಿಸಲು ಸ್ವಾವಲಂಬನೆ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದೇ ವೇಗವನ್ನು ಮುಂದುವರಿಸುವ ಮೂಲಕ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

RBI ಅಂದಾಜನ್ನೂ ಮೀರಿದ ಬೆಳವಣಿಗೆ:

ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿದ್ದ ಶೇ.7ರ ಬೆಳವಣಿಗೆಗಿಂತಲೂ ಹೆಚ್ಚಿನ ಸಾಧನೆಯನ್ನು ಭಾರತ ದಾಖಲಿಸಿದೆ. ಸೇವಾ ವಲಯ ಶೇ.10ರಷ್ಟು ಹಾಗೂ ರಿಯಲ್ ಎಸ್ಟೇಟ್ ಮತ್ತು ಐಟಿ ವಲಯಗಳು ಶೇ.12.1ರಷ್ಟು ಬೆಳವಣಿಗೆ ದಾಖಲಿಸಿವೆ.

ಪ್ರಸಕ್ತ ಬೆಲೆಗಳಲ್ಲಿ ನಾಮಿನಲ್ ಜಿಡಿಪಿ ಶೇ.10.3ರಷ್ಟು ಏರಿಕೆಯಾಗಿದ್ದು, ಒಟ್ಟು ಮೌಲ್ಯ ₹88.27 ಲಕ್ಷ ಕೋಟಿಗೆ ತಲುಪಿದೆ.

ಜಾಗತಿಕ ಆರ್ಥಿಕತೆಯ ನಡುವೆ ಭಾರತದ ಸಾಧನೆ:

ಅಮೆರಿಕ, ಯುರೋಪ್ ಹಾಗೂ ಚೀನಾ ಸೇರಿದಂತೆ ಪ್ರಮುಖ ಆರ್ಥಿಕತೆಗಳು ಹಣದುಬ್ಬರ ಮತ್ತು ಆರ್ಥಿಕ ಒತ್ತಡಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಾರತವು ಜಗತ್ತಿನ ಪ್ರಮುಖ ಆರ್ಥಿಕತೆಗಳ ಪೈಕಿ ವೇಗವಾಗಿ ಬೆಳೆಯುತ್ತಿರುವ ದೇಶವಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.

ನಿರ್ಮಲಾ ಸೀತಾರಾಮನ್ ಮೆಚ್ಚುಗೆ:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಭಾರತದ ಜಿಡಿಪಿ ಬೆಳವಣಿಗೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೈಗೊಂಡಿರುವ ಸುಧಾರಣಾ ಕ್ರಮಗಳು ಹಾಗೂ ಚುರುಕಾದ ಆರ್ಥಿಕ ನಿರ್ವಹಣೆ ಸಕಾರಾತ್ಮಕ ಫಲಿತಾಂಶ ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

ಬೆಳಗಾಗುವಷ್ಟರಲ್ಲಿ 830 ಕೋಳಿಗಳು ಸಾವು; ದಾವಣಗೆರೆ ರೈತರಿಗೆ ಭಾರೀ ನಷ್ಟ!

0

ದಾವಣಗೆರೆ: ಒಂದೇ ದಿನ ಇದ್ದಕ್ಕಿದ್ದಂತೆ 830 ನಾಟಿ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ.

ಘಟನೆಯಿಂದ ಕೋಳಿ ಸಾಕಾಣಿಕೆ ಮಾಡುತ್ತಿದ್ದ ರೈತ ಕುಟುಂಬಗಳಿಗೆ ಭಾರೀ ನಷ್ಟ ಉಂಟಾಗಿದೆ.

ರಾಮಗೊಂಡನಹಳ್ಳಿಯ ಪ್ರಕಾಶ್ ಹಾಗೂ ಅರ್ಜುನ್ ಎಂಬ ರೈತರಿಗೆ ಸೇರಿದ ನಾಟಿ ಕೋಳಿಗಳು ಸಾವನ್ನಪ್ಪಿವೆ. ಕೋಳಿಗಳಿಗೆ ಯಾವುದೇ ರೋಗದ ಲಕ್ಷಣಗಳಿರಲಿಲ್ಲ. ಅಲ್ಲದೆ, ಆಹಾರ ನೀಡುವಲ್ಲಿಯೂ ಯಾವುದೇ ವ್ಯತ್ಯಾಸವಾಗಿರಲಿಲ್ಲ ಎಂದು ರೈತರು ತಿಳಿಸಿದ್ದಾರೆ.

ಆದರೆ ಬೆಳಗಾಗುವಷ್ಟರಲ್ಲಿ ನೂರಾರು ಕೋಳಿಗಳು ಏಕಾಏಕಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೋಳಿಗಳ ಸಾವಿನ ಹಿಂದೆ ದುಷ್ಕರ್ಮಿಗಳ ಕೈವಾಡವಿರಬಹುದು ಎಂಬ ಶಂಕೆಯನ್ನು ರೈತರು ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಬಂದ ಬಳಿಕ ಕೋಳಿಗಳ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

ಒಂದೇ ದಿನ ನೂರಾರು ಕೋಳಿಗಳನ್ನು ಕಳೆದುಕೊಂಡಿರುವುದರಿಂದ ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೋಳಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ: 6 ವಾಹನಗಳು ಜಖಂ, ತಪ್ಪಿದ ಭಾರೀ ದುರಂತ

0

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯ ಫ್ಲೈಓವರ್ ಮೇಲೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದಲ್ಲಿ ಒಟ್ಟು ಆರು ವಾಹನಗಳು ಜಖಂಗೊಂಡಿದ್ದು, ಕೆಲಕಾಲ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕಳೆದ ರಾತ್ರಿ ಸುಮಾರು 9 ಗಂಟೆ ವೇಳೆಗೆ ಏರ್‌ಪೋರ್ಟ್‌ ರಸ್ತೆಯ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದ ವೇಳೆ ಮುಂದಿದ್ದ ವಾಹನ ಏಕಾಏಕಿ ಬ್ರೇಕ್‌ ಹಾಕಿದೆ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ವಾಹನಗಳಿಗೆ ತಕ್ಷಣ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ.

ಸರಣಿ ಅಪಘಾತದ ಪರಿಣಾಮ ಒಂದು ಟಿಪ್ಪರ್‌, ನಾಲ್ಕು ಕಾರುಗಳು ಹಾಗೂ ಒಂದು ಟಿಟಿ ವಾಹನ ಜಖಂಗೊಂಡಿವೆ. ಡಿಕ್ಕಿಯ ರಭಸಕ್ಕೆ ವಾಹನಗಳಿಗೆ ಹಾನಿಯಾಗಿದ್ದು, ಘಟನೆಯಿಂದ ಫ್ಲೈಓವರ್ ಮೇಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತದಿಂದ ಏರ್‌ಪೋರ್ಟ್‌ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಯಿತು. ವಿಷಯ ತಿಳಿಯುತ್ತಿದ್ದಂತೆ ಸಂಚಾರ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದರು.

ಪೊಲೀಸರು ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ರಸ್ತೆಯಲ್ಲಿ ಸಂಚಾರ ಸಹಜ ಸ್ಥಿತಿಗೆ ಮರಳಿತು.

ಅದೃಷ್ಟವಶಾತ್‌ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಮುಂದಿನ ವಾಹನ ಏಕಾಏಕಿ ಬ್ರೇಕ್‌ ಹಾಕಿದ್ದೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಕುರಿತು ಸಂಚಾರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: 33ನೇ ಕಂತಿನ ಹಣ ಇದೇ ತಿಂಗಳು ಬಿಡುಗಡೆ!

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹಿಳಾ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ.

ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಸರ್ಕಾರ ಮನೆ-ಮನೆ ಸರ್ವೆ ನಡೆಸಿ ಯೋಜನೆಯನ್ನು ಪರಿಷ್ಕರಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ಪೂರ್ಣಗೊಳ್ಳುವವರೆಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು.

ಆದರೆ ಇದೀಗ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರೊಂದಿಗೆ ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ.

ಹೀಗಾಗಿ ಅನರ್ಹ ಫಲಾನುಭವಿಗಳ ಪತ್ತೆಗಾಗಿ ಮನೆ-ಮನೆ ಸರ್ವೆ ನಡೆಯುತ್ತಿದ್ದರೂ, ಅರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ 33ನೇ ಕಂತಿನ ಹಣ ದೊರೆಯಲಿದೆ. ಇಂದಿನಿಂದಲೇ ಮನೆ-ಮನೆ ಸರ್ವೆ ಕಾರ್ಯವೂ ಆರಂಭವಾಗಲಿದೆ.

ಚಿತ್ರದುರ್ಗದಲ್ಲಿ ಬಿರುಕು ಬಿಟ್ಟ ಹಳೆಯ ಸೇತುವೆ: ಕುಸಿತದ ಭೀತಿಯಲ್ಲಿ ಗ್ರಾಮಸ್ಥರು!

0

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸುಮಾರು ನಾಲ್ಕು ದಶಕಗಳ ಹಿಂದೆ ನಿರ್ಮಾಣವಾಗಿರುವ ಈ ಸೇತುವೆ ಹಲವು ದಿನಗಳಿಂದ ಶಿಥಿಲಾವಸ್ಥೆಯಲ್ಲಿದೆ. ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದರೂ ಇದುವರೆಗೂ ಸಮರ್ಪಕವಾಗಿ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋನಿಗರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಚಳ್ಳಕೆರೆ ಪಟ್ಟಣದೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಇದಾಗಿದೆ. ಪ್ರತಿನಿತ್ಯ ಸಾವಿರಾರು ಜನರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಇದೇ ಸೇತುವೆಯನ್ನು ಅವಲಂಬಿಸಿದ್ದಾರೆ.

ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. ಹೀಗಾಗಿ ತಜ್ಞರಿಂದ ತಕ್ಷಣ ಸೇತುವೆಯ ಪರಿಶೀಲನೆ ನಡೆಸಿ, ಅಗತ್ಯ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಲ್ಲಿಯವರೆಗೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪರ್ಯಾಯ ಮಾರ್ಗ ಕಲ್ಪಿಸಬೇಕು. ಸೇತುವೆಗೆ ಮತ್ತಷ್ಟು ಹಾನಿಯಾಗುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಗದಗ, ಧಾರವಾಡದ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಪತ್ರ

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಕೇವಲ ಮಳೆಯ ಪ್ರಮಾಣದ ಅಂಕಿ-ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬರಪೀಡಿತ ತಾಲೂಕುಗಳನ್ನು ಗುರುತಿಸದೆ, ನೆಲದ ಮೇಲಿನ ವಾಸ್ತವ ಪರಿಸ್ಥಿತಿ, ಬೆಳೆಗಳ ಸ್ಥಿತಿಗತಿ ಹಾಗೂ ರೈತರ ಸಂಕಷ್ಟವನ್ನು ಪರಿಗಣಿಸಿ ಗದಗ ಮತ್ತು ಧಾರವಾಡ ಜಿಲ್ಲೆಗಳ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಉತ್ತರ ಕರ್ನಾಟಕದ ಈ ಎರಡೂ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆದರೆ ಮಳೆಯಾಶ್ರಿತ ಕೃಷಿಯನ್ನೇ ಪ್ರಮುಖವಾಗಿ ಅವಲಂಬಿಸಿರುವ ಗದಗ ಜಿಲ್ಲೆಯ ಪರಿಸ್ಥಿತಿ ಗಂಭೀರವಾಗಿದ್ದರೂ, ಜಿಲ್ಲೆಯ ಪೈಕಿ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಉಳಿದ ತಾಲೂಕುಗಳಲ್ಲಿಯೂ ಮಳೆ ಅಭಾವದಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ವಾಸ್ತವಾಂಶವನ್ನು ಸರ್ಕಾರ ಪರಿಗಣಿಸಬೇಕಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಬಹುತೇಕ ರೈತರು ಮಳೆಯನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದಾರೆ. ಈ ಬಾರಿ ರೈತರು ಬಿತ್ತನೆ ನಡೆಸಿ, ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಹಣ ವ್ಯಯಿಸಿದ್ದಾರೆ. ಹಲವರು ಸಾಲ ಮಾಡಿ ಕೃಷಿ ಕೈಗೊಂಡಿದ್ದಾರೆ. ಆದರೆ ಅಗತ್ಯ ಸಮಯದಲ್ಲಿ ಮಳೆಯಾಗದ ಪರಿಣಾಮ ಬೆಳೆಗಳು ಒಣಗುವ ಹಂತ ತಲುಪಿದ್ದು, ಅನ್ನದಾತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಒಂದೆಡೆ ಕಣ್ಣೆದುರೇ ಬೆಳೆ ನಾಶವಾಗುತ್ತಿದ್ದರೆ, ಮತ್ತೊಂದೆಡೆ ಕೃಷಿಗಾಗಿ ಮಾಡಿದ ಸಾಲದ ಹೊರೆ ರೈತರನ್ನು ಕಾಡುತ್ತಿದೆ. ಉತ್ತಮ ಬೆಳೆ ಕೈಗೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು ಈಗ ಮಳೆಯ ನಿರೀಕ್ಷೆಯಲ್ಲಿ ದಿನ ದೂಡುವಂತಾಗಿದೆ.

ಮಳೆ ಕೊರತೆಯ ಪರಿಣಾಮ ಕೃಷಿಗೆ ಮಾತ್ರ ಸೀಮಿತವಾಗಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಜಾನುವಾರುಗಳಿಗೆ ನೀರು ಹಾಗೂ ಮೇವಿನ ಕೊರತೆಯೂ ಉಂಟಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡುವ ಮುನ್ನ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರು ಒತ್ತಾಯಿಸಿದ್ದಾರೆ.

ಪಕ್ಕದ ಧಾರವಾಡ ಜಿಲ್ಲೆಯಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಭಾವದಿಂದ ಅಲ್ಲಿನ ರೈತರೂ ಸಂಕಷ್ಟಕ್ಕೆ ಸಿಲುಕಿದ್ದು, ವಿವಿಧ ತಾಲೂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸುವಂತೆ ಅಲ್ಲಿನ ಜನಪ್ರತಿನಿಧಿಗಳು ಹಾಗೂ ಶಾಸಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.

ಬರ ಘೋಷಣೆಗೆ ಕೇವಲ ಮಳೆ ಮಾಪನದ ಅಂಕಿ-ಅಂಶಗಳನ್ನೇ ಮಾನದಂಡವಾಗಿಸಿಕೊಳ್ಳುವ ಬದಲು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ನಷ್ಟ, ರೈತರ ಆರ್ಥಿಕ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಜಾನುವಾರುಗಳ ಮೇವಿನ ಪರಿಸ್ಥಿತಿ ಸೇರಿದಂತೆ ಸಮಗ್ರ ವಾಸ್ತವಾಂಶಗಳನ್ನು ಪರಿಶೀಲಿಸಬೇಕು ಎಂದು ಜಿ.ಎಸ್. ಪಾಟೀಲ ಆಗ್ರಹಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಬರ ಪರಿಹಾರ ಹಾಗೂ ಬೆಳೆ ನಷ್ಟ ಪರಿಹಾರವನ್ನು ಶೀಘ್ರವಾಗಿ ತಲುಪಿಸಬೇಕು. ಗ್ರಾಮೀಣ ಜನರು ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಬೇರೆ ಜಿಲ್ಲೆಗಳು ಅಥವಾ ನೆರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಜಾನುವಾರುಗಳ ರಕ್ಷಣೆಗಾಗಿ ಅಗತ್ಯ ಪ್ರಮಾಣದ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

ಒಣಗಿದ ಹೊಲ..ಮುಗಿಲಿನತ್ತ ರೈತನ ಚಿತ್ತ! ಸಿಎಂ ಭೇಟಿ ಮೇಲೆ ಅನ್ನದಾತರ ಭಾರಿ ನಿರೀಕ್ಷೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಒಂದೆಡೆ ಕಣ್ಣೆದುರೇ ಒಣಗುತ್ತಿರುವ ಬೆಳೆ… ಮತ್ತೊಂದೆಡೆ ತೀರಿಸಲಾಗದ ಸಾಲದ ಹೊರೆ… ಬದುಕು ಸಾಗಿಸುವುದು ಹೇಗೆ ಎಂಬ ಭವಿಷ್ಯದ ಚಿಂತೆ! ಮಳೆಗಾಗಿ ಪ್ರತಿದಿನ ಆಗಸದತ್ತ ಮುಖ ಮಾಡುತ್ತಿರುವ ಅನ್ನದಾತನ ಕಣ್ಣಲ್ಲಿ ಈಗ ನೀರಿಲ್ಲ, ಕೇವಲ ಆತಂಕ ಮತ್ತು ನಿರೀಕ್ಷೆ ಮಾತ್ರ ಉಳಿದಿದೆ.

ಇಂತಹ ಗಂಭೀರ ಬರದ ವಾತಾವರಣದಲ್ಲಿಯೂ ಲಕ್ಷ್ಮೇಶ್ವರ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗುಳಿದಿದೆ. ಹೊಲದಲ್ಲಿ ಬೆಳೆ ಒಣಗುತ್ತಿದೆ, ರೈತನ ಬದುಕು ಕಮರುತ್ತಿದೆ. ಆದರೆ ದಾಖಲೆಗಳಲ್ಲಿ ಮಾತ್ರ ಪರಿಸ್ಥಿತಿ ಅಷ್ಟೊಂದು ಗಂಭೀರವಾಗಿಲ್ಲವೇ ಎಂಬ ಪ್ರಶ್ನೆ ಇದೀಗ ತಾಲೂಕಿನ ರೈತರನ್ನು ಕಾಡುತ್ತಿದೆ.

ಈ ಮಧ್ಯೆ ಇಂದು ಸೆಪ್ಟೆಂಬರ್ ೧ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬರ ಪರಿಸ್ಥಿತಿ ವೀಕ್ಷಣೆಗೆ ಆಗಮಿಸುತ್ತಿರುವುದು ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಮುಖ್ಯಮಂತ್ರಿಗಳ ಭೇಟಿ ಕೇವಲ ಅಧಿಕಾರಿಗಳ ವರದಿ, ಕಡತ ಮತ್ತು ಅಂಕಿ-ಅಂಶಗಳ ಪರಿಶೀಲನೆಗಷ್ಟೇ ಸೀಮಿತವಾಗುತ್ತದೆಯೇ? ಅಥವಾ ಒಣಗಿದ ಹೊಲಗಳಿಗೆ ತೆರಳಿ ಅನ್ನದಾತನ ಕಣ್ಣೀರಿನ ಹಿಂದಿರುವ ನೋವನ್ನು ಖುದ್ದಾಗಿ ಅರಿಯುತ್ತಾರೆಯೇ? ಎಂಬುದು ಈಗ ಲಕ್ಷ್ಮೇಶ್ವರ ತಾಲೂಕಿನ ಬಹುದೊಡ್ಡ ಪ್ರಶ್ನೆಯಾಗಿದೆ.

ಮುಂಗಾರಿನುದ್ದಕ್ಕೂ ಬೆಳೆಗಳಿಗೆ ಅಗತ್ಯವಿದ್ದ ಸಮಯದಲ್ಲಿ ತಾಲೂಕಿನಾದ್ಯಂತ ಸಮರ್ಪಕ ಮಳೆಯಾಗಿಲ್ಲ. ಜುಲೈನಲ್ಲಿ ಸುರಿದ ಅಲ್ಪಸ್ವಲ್ಪ ಮಳೆಯಿಂದ ಹೆಸರು ಬೆಳೆಗೆ ಮಾತ್ರ ಅತ್ಯಲ್ಪ ಪ್ರಮಾಣದಲ್ಲಿ ಇಳುವರಿ ಬಂದಿದೆ ಎನ್ನಲಾಗಿದೆ.

ಆದರೆ ಮೆಕ್ಕೆಜೋಳ, ಶೇಂಗಾ, ಹತ್ತಿ, ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳು ಮಳೆ ಕೊರತೆ ಮತ್ತು ಬಿಸಿಲಿನ ತಾಪಕ್ಕೆ ಒಣಗಿ ಹೋಗುತ್ತಿವೆ. ಹೊಲದಲ್ಲಿನ ಬೆಳೆಯೊಂದಿಗೆ ರೈತರ ಬದುಕಿನ ಭರವಸೆಯೂ ಕಮರಿ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ತಾಲೂಕಿನ ೩೪,೮೬೬ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ ೩೨,೯೨೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಅಂದರೆ ಸುಮಾರು ಶೇ.೯೫ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.

೨೨,೦೫೦ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, ೬,೧೫೦ ಹೆಕ್ಟೇರ್‌ನಲ್ಲಿ ಹೆಸರು, ೩,೦೦೦ ಹೆಕ್ಟೇರ್‌ನಲ್ಲಿ ಶೇಂಗಾ, ೧,೫೦೦ ಹೆಕ್ಟೇರ್‌ನಲ್ಲಿ ಹತ್ತಿ ಹಾಗೂ ೨೨೦ ಹೆಕ್ಟೇರ್‌ನಲ್ಲಿ ತೊಗರಿ ಬಿತ್ತನೆಯಾಗಿದೆ.

ಇನ್ನು ಈರುಳ್ಳಿ, ಮೆಣಸಿನಕಾಯಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಸುಮಾರು ೨೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲ್ಪಟ್ಟಿವೆ. ಆದರೆ ಮಳೆಯಿಲ್ಲದೆ ಹಲವು ಕಡೆ ಬೆಳೆಗಳು ಒಣಗಿ, ರೈತರು ಹಾಕಿದ ಬಂಡವಾಳವೇ ಮಣ್ಣಿನಲ್ಲಿ ಮಣ್ಣಾಗುವ ಸ್ಥಿತಿ ಬಂದಿದೆ.

ಬೀಜ, ಗೊಬ್ಬರ, ಕ್ರಿಮಿನಾಶಕ, ಕೂಲಿ ಹಾಗೂ ಬಿತ್ತನೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿರುವ ರೈತರು ಇದೀಗ ಸಾಲದ ಹೊರೆ ಹೊತ್ತು, ಮುಂದಿನ ಬದುಕಿನ ಬಗ್ಗೆ ಚಿಂತಿಸುವಂತಾಗಿದೆ.

ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ತಾಲೂಕಿನಲ್ಲಿ ಶೇ.೨೧ರಷ್ಟು ಮಾತ್ರ ಮಳೆ ಕೊರತೆ ದಾಖಲಾಗಿರುವುದು ಬರಪೀಡಿತ ತಾಲೂಕು ಘೋಷಣೆಗೆ ಪ್ರಮುಖ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಆದರೆ ರೈತರ ಪ್ರಶ್ನೆ ಮಾತ್ರ ಸರಳವಾಗಿದೆ—ದಾಖಲೆಗಳಲ್ಲಿ ಮಳೆ ಕೊರತೆ ಕಡಿಮೆಯಿರಬಹುದು… ಆದರೆ ಹೊಲದಲ್ಲಿ ಒಣಗುತ್ತಿರುವ ಬೆಳೆಯನ್ನು ಯಾವ ದಾಖಲೆ ಅಳೆಯಲಿದೆ?

ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ ಈಗಾಗಲೇ ಶೇ.೫೦ರಷ್ಟು ಬೆಳೆಹಾನಿ ವರದಿ ಸಲ್ಲಿಕೆಯಾಗಿದೆ. ಒಂದೆಡೆ ಬೆಳೆಹಾನಿಯ ವರದಿ, ಮತ್ತೊಂದೆಡೆ ಬರಪೀಡಿತ ಪಟ್ಟಿಯಿಂದ ಹೊರಗಿಡುವ ಪರಿಸ್ಥಿತಿ—ಇದು ರೈತರಿಗೆ ಅರ್ಥವಾಗದ ಲೆಕ್ಕಾಚಾರವಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕು ಹೊರತುಪಡಿಸಿ ಲಕ್ಷ್ಮೇಶ್ವರ ಸೇರಿದಂತೆ ಉಳಿದ ತಾಲೂಕುಗಳು ಬರಪಟ್ಟಿಯಿಂದ ಹೊರಗುಳಿದಿವೆ. ಒಂದೇ ಜಿಲ್ಲೆಯೊಳಗೆ ಮಳೆ ಕೊರತೆ, ಬೆಳೆಹಾನಿ ಹಾಗೂ ರೈತರ ಸಂಕಷ್ಟ ಬಹುತೇಕ ಒಂದೇ ರೀತಿಯಲ್ಲಿದ್ದರೂ ಬರ ಘೋಷಣೆಯಲ್ಲಿ ಮಾತ್ರ ಈ ವ್ಯತ್ಯಾಸ ಏಕೆ ಎಂಬ ಪ್ರಶ್ನೆ ರೈತ ಸಮುದಾಯದಿಂದ ಕೇಳಿಬರುತ್ತಿದೆ.

ಮುಖ್ಯಮಂತ್ರಿಗಳ ಬರ ವೀಕ್ಷಣೆ ಸಂದರ್ಭದಲ್ಲಿ ಅಧಿಕಾರಿಗಳು ಕೇವಲ ಕಡತಗಳಲ್ಲಿರುವ ಅಂಕಿ-ಅಂಶಗಳನ್ನು ಮಂಡಿಸುವ ಬದಲು, ಒಣಗುತ್ತಿರುವ ಹೊಲಗಳಿಗೆ ಕರೆದುಕೊಂಡು ಹೋಗಿ ನೈಜ ಸ್ಥಿತಿಯನ್ನು ತೋರಿಸಬೇಕು ಎಂಬುದು ರೈತರ ಆಗ್ರಹವಾಗಿದೆ.

ತಾಲೂಕಿನ ಬಟ್ಟೂರ, ಸೂರಣಗಿ, ಬಾಲೆಹೊಸೂರು, ಹರದಗಟ್ಟಿ, ಆದ್ರಳ್ಳಿ, ದೊಡ್ಡೂರು, ಯಲ್ಲಾಪುರ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ನಿಂತಿವೆ.

ಹೊಲಕ್ಕೆ ಇಳಿದು ನೋಡಿದರೆ ಮಾತ್ರ ರೈತನ ನೋವು ಅರ್ಥವಾಗುತ್ತದೆ. ಕಡತ ತೆರೆದು ನೋಡಿದರೆ ಕೇವಲ ಅಂಕಿ-ಅಂಶಗಳು ಮಾತ್ರ ಕಾಣುತ್ತವೆ. ಹೀಗಾಗಿ ಮುಖ್ಯಮಂತ್ರಿ ಅವರು ಅಧಿಕಾರಿಗಳ ವರದಿಗಿಂತ ಹೊಲದಲ್ಲಿರುವ ವಾಸ್ತವವನ್ನು ನೋಡಬೇಕು ಎಂಬುದು ಅನ್ನದಾತರ ಒಕ್ಕೊರಲಿನ ಆಗ್ರಹವಾಗಿದೆ.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ರೈತರಲ್ಲಿ ಭಾರಿ ನಿರೀಕ್ಷೆ ಮೂಡಿದೆ. ಒಣಗುತ್ತಿರುವ ಬೆಳೆಗಳನ್ನು ಖುದ್ದಾಗಿ ವೀಕ್ಷಿಸಿ, ತಾಲೂಕಿನ ಬರಗಾಲದ ವಸ್ತುಸ್ಥಿತಿಯನ್ನು ಅರಿತು ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆಯೇ? ಎಂಬ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ.

ಸಿಎಂ ಭೇಟಿ ಕಾಟಾಚಾರದ ಬರ ವೀಕ್ಷಣೆಯಾಗುತ್ತದೆಯೇ ಅಥವಾ ರೈತರ ಬದುಕಿಗೆ ಆಸರೆಯಾಗುವ ಮಹತ್ವದ ನಿರ್ಧಾರಕ್ಕೆ ನಾಂದಿಯಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಚ್ಛಾಶಕ್ತಿಯೊಂದಿಗೆ ಸಮನ್ವಯ ಸಾಧಿಸಿ ಜಿಲ್ಲೆಯ ಬರಗಾಲದ ವಸ್ತುಸ್ಥಿತಿ ಹಾಗೂ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಖುದ್ದಾಗಿ ಪರಿಶೀಲಿಸಬೇಕು. ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಲಕ್ಷ್ಮೇಶ್ವರದ ಹೆಸರನ್ನು ಸೇರ್ಪಡೆ ಮಾಡಿ, ತ್ವರಿತವಾಗಿ ಬೆಳೆನಷ್ಟ ಪರಿಹಾರ, ಬೆಳೆವಿಮೆ ಹಾಗೂ ಇತರ ಬರ ಪರಿಹಾರದ ಸೌಲಭ್ಯಗಳನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಅವರ ಬರ ವೀಕ್ಷಣೆ ಕೇವಲ ಅಧಿಕಾರಿಗಳ ಕಡತಗಳ ವೀಕ್ಷಣೆಯಾಗದೆ, ರೈತರ ಹೊಲದಲ್ಲಿನ ಬರದ ವಾಸ್ತವ ಸ್ಥಿತಿಯ ವೀಕ್ಷಣೆಯಾಗಬೇಕು. ಸರ್ಕಾರದ ನಿರ್ಧಾರವೂ ಅದಕ್ಕೆ ತಕ್ಕಂತಿರಬೇಕು. ಕಾಟಾಚಾರಕ್ಕೆ ಬಂದ ಪುಟ್ಟ, ಹೋದ ಪುಟ್ಟ ಎಂಬಂತಾದರೆ ಇಡೀ ರೈತ ಸಮುದಾಯ ಸರ್ಕಾರದ ವಿರುದ್ಧ ತಿರುಗಿಬೀಳಲಿದೆ. ರೈತರ ನ್ಯಾಯಯುತ ಬೇಡಿಕೆಗಳಿಗಾಗಿ ಎಂತಹ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ.

– ಮಂಜುನಾಥ ಮಾಗಡಿ, ಅಧ್ಯಕ್ಷರು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ

ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರ ಹಾಗೂ ಬೆಳೆಹಾನಿ ಪ್ರಮಾಣದ ವರದಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಬರ ವೀಕ್ಷಣೆಗೆ ಬರುವ ಸಂದರ್ಭದಲ್ಲಿ ತಾಲೂಕಿನ ಬರಗಾಲದ ವಸ್ತುಸ್ಥಿತಿ, ಬೆಳೆಹಾನಿ ಹಾಗೂ ರೈತರು ಅನುಭವಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯ ಕುರಿತು ಸಮಗ್ರ ಮಾಹಿತಿ ನೀಡಲು ಅಗತ್ಯ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ.

– ಶಿವಕುಮಾರ ಕಾಶಪ್ಪನವರ, ಸಹಾಯಕ ಕೃಷಿ ನಿರ್ದೇಶಕರು

27 ಗ್ರಾಪಂಗಳಲ್ಲಿ ಜಾಬ್‌ಕಾರ್ಡ್ ಮೇಳ

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜನಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರವರೆಗೆ ತಾಲೂಕಿನಾದ್ಯಂತ ಜಾಬ್‌ಕಾರ್ಡ್ ಮೇಳ ಹಾಗೂ ಮನೆ-ಮನೆ ಭೇಟಿ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗಿರುವ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಕಲ್ಪಿಸುವುದು ಪ್ರಮುಖ ಆದ್ಯತೆಯಾಗಿದೆ. ವಿಬಿ ಜಿ ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಲಭ್ಯವಿರುವ ವಿವಿಧ ಕಾಮಗಾರಿಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು ಎಂದರು.

ಜಾಬ್‌ಕಾರ್ಡ್ ಹೊಂದಿರುವವರು ಹಾಗೂ ಹೊಸದಾಗಿ ಜಾಬ್‌ಕಾರ್ಡ್ ಪಡೆಯಲು ಅರ್ಹರಾಗಿರುವ ಕುಟುಂಬಗಳನ್ನು ಗುರುತಿಸಿ, ಯೋಜನೆಯಡಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವಂತೆ ಪ್ರೇರೇಪಿಸಲಾಗುವುದು. ಗ್ರಾಮದಲ್ಲಿಯೇ ಉದ್ಯೋಗ ದೊರೆಯುವುದರಿಂದ ಗ್ರಾಮೀಣ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕರನ್ನು ಯೋಜನೆಯಡಿ ತೊಡಗಿಸಿಕೊಂಡು ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ತಾಲೂಕಿನ ಎಲ್ಲ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಪ್ರಗತಿಯಲ್ಲಿದ್ದು, ಗ್ರಾಮೀಣ ಕುಟುಂಬಗಳಿಗೆ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಲು ವಿಶೇಷ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲಿದ್ದಾರೆ. ಉದ್ಯೋಗ ಬೇಡಿಕೆ ಸಂಗ್ರಹಿಸುವುದು ಹಾಗೂ ಯೋಜನೆಯಡಿ ಲಭ್ಯವಿರುವ ವಿವಿಧ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯದ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ಡಾ. ಜನಗಿ ತಿಳಿಸಿದ್ದಾರೆ.

ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವುದು ಜಾಬ್‌ಕಾರ್ಡ್ ಮೇಳದ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಾಬ್‌ಕಾರ್ಡ್ ಹೊಂದಿರುವ ಹಾಗೂ ಇ-ಕೆವೈಸಿ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಿ, ಗ್ರಾಮೀಣ ಕುಟುಂಬಗಳಿಗೆ ಆದಾಯದ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

— ಡಾ. ಎಚ್.ಎಸ್. ಜನಗಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಗದಗ

ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಕೆಲಸದ ಅವಕಾಶಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾಬ್‌ಕಾರ್ಡ್ ಮೇಳ ಮಹತ್ವ ಪಡೆದಿದೆ. ಗ್ರಾಮದಲ್ಲಿಯೇ ಕೂಲಿ ಕೆಲಸ ದೊರೆಯುವುದರಿಂದ ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಪ್ಪಲಿದೆ. ಜಾಬ್‌ಕಾರ್ಡ್ ಹೊಂದಿರುವವರು ಇ-ಕೆವೈಸಿ ಪೂರ್ಣಗೊಳಿಸಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ಪ್ರಚಾರ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

— ಕುಮಾರ ಪುಜಾರ, ಸಹಾಯಕ ನಿರ್ದೇಶಕರು, ವಿಬಿ ಜಿ ರಾಮ್ ಜಿ ಯೋಜನೆ, ತಾಲೂಕು ಪಂಚಾಯಿತಿ, ಗದಗ

ಬಿಬಿಎ ಪರೀಕ್ಷೆಯಲ್ಲಿ ಮನೋರಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಬಿಬಿಎ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಪರೀಕ್ಷೆಯಲ್ಲಿ ಕುಮಾರಿ ಯಶಸ್ವಿನಿ ಬಾಗೇವಾಡಿ ಅವರು 601 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಶಹತಾಜ್ ಖಾಜಿ ಅವರು 590 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದು, ಕುಮಾರಿ ಸಿಮ್ರಾನ್ ನದಾಫ ಅವರು 483 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಇನ್ನು ಕುಮಾರಿ ಸಾನಿಯಾ ಕುರುವಿನಕೊಪ್ಪ ಅವರು 477 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನ ಗಳಿಸಿದ್ದಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರ್ಮನ್ ಎನ್.ಎಂ. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಹಾಗೂ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ ಮತ್ತು ಚೇತನ ಕುಡತರಕರ ಶ್ಲಾಘಿಸಿದ್ದಾರೆ.

ಸಂಯೋಜಕಿ ಪ್ರೊ. ಆರತಿ ಗೌಡರ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.