ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಬಿಲ್ ಕಲೆಕ್ಟರ್ ಒಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬಿಳಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಶಿವಪ್ಪ ಎಂದು ಗುರುತಿಸಲಾಗಿದೆ. ಶಿವಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ ನೋಟ್ನಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡಿ ಮಾನಸಿಕ ಒತ್ತಡ ಹೇರಲಾಗುತ್ತಿತ್ತು ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಕಂಪ್ಯೂಟರ್ ಜ್ಞಾನ ಇಲ್ಲದ ಕಾರಣ ಪಿಡಿಒ ನಂದಲಿಂಗೇಶ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಹಾಗೂ ಜಾತಿ ನಿಂದನೆ ಮಾಡುತ್ತಿದ್ದರು ಎಂದು ಶಿವಪ್ಪ ಕುಟುಂಬಸ್ಥರು ಆರೋಪಿಸಿದ್ದಾರೆ.
ಶಿವಪ್ಪ ಅವರು ಬಿಳಚೋಡು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ವರ್ಷಗಳ ಕಾಲ ನೀರಗಂಟಿಯಾಗಿ ಕೆಲಸ ಮಾಡಿದ್ದು, ಕಳೆದ 2-3 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸಂಬಂಧ ಮೃತ ಶಿವಪ್ಪ ಅವರ ಪುತ್ರ ಅಶೋಕ್ ಅವರು ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು, ಶಿವಪ್ಪ ಕುಟುಂಬಸ್ಥರು ಆರೋಪಿತ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

