ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಘಟನೆಯ ನಂತರ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ, ಈಗ ಸಮಗ್ರ ತನಿಖೆಗೆ ಮುಂದಾಗಿದೆ.
ಈ ವಿಶೇಷ ತನಿಖಾ ತಂಡದಲ್ಲಿ ಪೊಲೀಸ್ ಅಧೀಕ್ಷಕ (SP) ದರ್ಜೆಯ ಅಧಿಕಾರಿಯನ್ನು ಮುಖ್ಯ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ, ತಂಡದಲ್ಲಿ ಒಬ್ಬ ಜಿಲ್ಲಾ ನ್ಯಾಯಾಧೀಶರು ಮತ್ತು ಲೋಕಾಯುಕ್ತ ತಾಂತ್ರಿಕ ವಿಭಾಗದ ಮುಖ್ಯ ಇಂಜಿನಿಯರ್ ಕೂಡ ಭಾಗಿಯಾಗಿದ್ದಾರೆ. ಇದೇ ತಿಂಗಳ 16ರೊಳಗೆ ಸಂಪೂರ್ಣ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿ ಪಾಟೀಲ್ ಸೂಚನೆ ನೀಡಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನಿಖಾ ತಂಡ ಸಭೆ ನಡೆಸುತ್ತಿದ್ದು, ವಿಚಾರಣೆಗಾಗಿ ಯಾರಿಗೆ ನೋಟಿಸ್ ನೀಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಸಭೆಯಲ್ಲಿ ಬೌರಿಂಗ್ ಆಸ್ಪತ್ರೆಯ ಡೀನ್ ಕೂಡ ಭಾಗವಹಿಸಲಿದ್ದು, ಅಗತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಈ ನಡುವೆ, ಘಟನಾ ಸ್ಥಳದಿಂದ ಸಿಮೆಂಟ್, ಮಣ್ಣು, ಕಲ್ಲು ಸೇರಿದಂತೆ ವಿವಿಧ ಮಾದರಿಗಳನ್ನು ಇಂಜಿನಿಯರ್ಗಳ ತಂಡ ಸಂಗ್ರಹಿಸಿದೆ. ಈ ಮಾದರಿಗಳ ಆಧಾರದ ಮೇಲೆ ಆಸ್ಪತ್ರೆ ಆಡಳಿತ ಮಂಡಳಿಯವರನ್ನು ವಿಚಾರಣೆ ನಡೆಸಲಾಗುತ್ತದೆ. ಒಂದೆಡೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ನಡೆಯುತ್ತಿದ್ದರೆ, ಇನ್ನೊಂದೆಡೆ ಇಂಜಿನಿಯರ್ಗಳ ತಂಡ ಹಾಗೂ ಲೋಕಾಯುಕ್ತದ ವಿಶೇಷ ತಂಡದಿಂದ ಸಮಗ್ರ ಪರಿಶೀಲನೆ ಮುಂದುವರಿದಿದೆ.

