ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಶೇ. 98.18 ಫಲಿತಾಂಶದೊಂದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಆದರೆ ಶೇ. 85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಈ ಹಿನ್ನೆಲೆ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ತೀವ್ರ ಟೀಕೆ ಮಾಡಿದ್ದಾರೆ.
ಜೆಡಿಎಸ್, ಕಲಬುರಗಿಯ ಶೈಕ್ಷಣಿಕ ಹಿನ್ನಡೆಯಿಗೆ ಆಡಳಿತದ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ್ದು, ಮೂಲಸೌಕರ್ಯ, ಶಿಕ್ಷಕರ ನೇಮಕ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದೆ. ಇದೇ ವೇಳೆ ಬಿಜೆಪಿ ಕೂಡ ಸಾಮಾಜಿಕ ಜಾಲತಾಣದ ಮೂಲಕ ವ್ಯಂಗ್ಯ ಪೋಸ್ಟ್ ಹಂಚಿಕೊಂಡು ಟೀಕೆ ಮಾಡಿದೆ.
ಇನ್ನು ಜೆಡಿಎಸ್ ನಾಯಕರು, “ಕಲಬುರಗಿಯನ್ನು ಶೈಕ್ಷಣಿಕವಾಗಿ ಹಿಂದುಳಿಯುವಂತೆ ಮಾಡಲಾಗಿದೆ” ಎಂದು ಆರೋಪಿಸಿದ್ದು, ಬಿಜೆಪಿ ಕೂಡ ಪ್ರಿಯಾಂಕ್ ಖರ್ಗೆ ಅವರ ಫೋಟೋ ಹಂಚಿಕೊಂಡು ಟೀಕಾತ್ಮಕ ಪ್ರತಿಕ್ರಿಯೆ ನೀಡಿದೆ.
ಈ ಫಲಿತಾಂಶದ ಹಿನ್ನೆಲೆಯಲ್ಲಿ ಶಿಕ್ಷಣ ಸಾಧನೆಗಿಂತ ರಾಜಕೀಯ ವಾಗ್ದಾಳಿ ಹೆಚ್ಚಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

