Home Blog

ಬಿಡದಿ ಟೌನ್‌ಶಿಪ್‌ ಯೋಜನೆ ವಿವಾದ: ಮಂಡಲಹಳ್ಳಿಯಲ್ಲಿ ಸರ್ವೆ ಸ್ಥಗಿತ, ಬಿಗಿ ಪೊಲೀಸ್ ಭದ್ರತೆ

0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ರೈತರ ಹೋರಾಟ ನಿರ್ಣಾಯಕ ಹಂತ ತಲುಪಿದ್ದು, ಮಂಡಲಹಳ್ಳಿ ಗ್ರಾಮದಲ್ಲಿ ನಡೆದ ಹಿಂಸಾತ್ಮಕ ಘಟನೆ ಬಳಿಕ ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಹೈ ಅಲರ್ಟ್‌ ಘೋಷಿಸಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹಲ್ಲೆ ನಡೆಸಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ವಿಶೇಷ ಶೋಧ ಕಾರ್ಯ ಮುಂದುವರಿದಿದೆ.

ಘಟನೆಯ ಬಳಿಕ ಅಧಿಕಾರಿಗಳು ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಆದರೆ ಸರ್ಕಾರ ಮತ್ತೆ ಸರ್ವೆ ಆರಂಭಿಸಲು ಮುಂದಾದರೆ ಅದನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ ಎಂದು ರೈತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಉಗ್ರ ಪ್ರತಿಭಟನೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ಗ್ರಾಮಕ್ಕೆ ಬಂದು ಭೂಸರ್ವೆ ನಡೆಸಲು ಮುಂದಾದದ್ದೇ ಸಂಘರ್ಷಕ್ಕೆ ಕಾರಣವಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸದಂತೆ ಮಂಡಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್‌ ಕಣ್ಗಾವಲು ಹೆಚ್ಚಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಆದಿಚುಂಚನಗಿರಿ ಮಠದ ಜಮೀನು ಕಬಳಿಸಲೆತ್ನಿಸಿದ 6 ಸರ್ಕಾರಿ ಅಧಿಕಾರಿಗಳು ಸೇರಿ 11 ಮಂದಿ ಬಂಧನ

ಬೆಂಗಳೂರು: ಸ್ಮಶಾನದಲ್ಲಿದ್ದ ಸಮಾಧಿಯಿಂದ ಹೆಸರು ಸಂಗ್ರಹಿಸಿ, ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ವಾರಸುದಾರರನ್ನು ಸೃಷ್ಟಿಸಿ ಆದಿಚುಂಚನಗಿರಿ ಮಠಕ್ಕೆ ಸೇರಿದ ₹120 ಕೋಟಿ ಮೌಲ್ಯದ ಜಮೀನನ್ನು ಕಬಳಿಸಿದ ಹೈಟೆಕ್ ವಂಚನೆ ಪ್ರಕರಣವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದು, 6 ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.

ಕೆಂಗೇರಿ ಹೋಬಳಿಯ ಕಂಬಳಿಪುರ ಗ್ರಾಮದ ಸರ್ವೇ ನಂ.43ರಲ್ಲಿ ಮಠಕ್ಕೆ ದಾನವಾಗಿ ಬಂದಿದ್ದ 45 ಎಕರೆ ಜಮೀನಿನ ಪೈಕಿ 6 ಎಕರೆ ಜಮೀನನ್ನು ಕಬಳಿಸಲು ಮಾಸ್ಟರ್ ಮೈಂಡ್ ನರೇಶ್ ಗೌಡ ಮತ್ತು ಆತನ ಸಹಚರರು ಸೂಕ್ಷ್ಮ ಸಂಚು ರೂಪಿಸಿದ್ದರು.

ಮೂಲ ಮಾಲೀಕರ ಹೆಸರಿನಲ್ಲೇ ಮೃತಪಟ್ಟಿದ್ದ ವ್ಯಕ್ತಿಯ ಸಮಾಧಿಯನ್ನು ಪತ್ತೆಹಚ್ಚಿದ ಆರೋಪಿಗಳು, ಆತನ ಕುಟುಂಬದ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡು ರೌಡಿ ಶೀಟರ್ ಫ್ರಾನ್ಸಿಸ್ ಹಾಗೂ ಜೋಸ್ವಾನ್ ಅವರನ್ನು ವಾರಸುದಾರರೆಂದು ತೋರಿಸಿ ನಕಲಿ ವಂಶವೃಕ್ಷ ಮತ್ತು ದಾಖಲೆಗಳನ್ನು ಸೃಷ್ಟಿಸಿದ್ದರು.

ಈ ಅಕ್ರಮಕ್ಕೆ ಬೇಗೂರು ಹಾಗೂ ಕೆಂಗೇರಿ ಕಂದಾಯ ಇಲಾಖೆಯ ಅಧಿಕಾರಿಗಳೇ ಕೈಜೋಡಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಲಕ್ಷಾಂತರ ರೂಪಾಯಿ ಲಂಚ ಪಡೆದು ವಿಲೇಜ್ ಅಕೌಂಟೆಂಟ್‌ಗಳು, ರೆವಿನ್ಯೂ ಇನ್ಸ್‌ಪೆಕ್ಟರ್‌ಗಳು ಹಾಗೂ ಡೆಪ್ಯೂಟಿ ತಹಶೀಲ್ದಾರ್‌ಗಳು ನಕಲಿ ದಾಖಲೆಗಳನ್ನು ಸಿದ್ಧಪಡಿಸಿ, ಖಾತೆ ಬದಲಾವಣೆಗೂ ಅನುಮೋದನೆ ನೀಡಿದ್ದರು.

ನಂತರ ಜಮೀನನ್ನು ಮೂರನೇ ವ್ಯಕ್ತಿಗೆ ಮಾರಾಟ ಮಾಡಿ ಆರೋಪಿಗಳು ಭಾರೀ ಹಣ ಸಂಪಾದಿಸಿದ್ದರು. ಜಮೀನು ಅಕ್ರಮವಾಗಿ ವರ್ಗಾವಣೆಯಾಗಿರುವ ಮಾಹಿತಿ ತಿಳಿದ ಮಠದ ಆಡಳಿತ ಮಂಡಳಿ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆಯಲ್ಲಿ ಸಂಪೂರ್ಣ ಸಂಚು ಬಯಲಾಗಿದೆ.

ಪ್ರಸ್ತುತ 11 ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ನರೇಶ್ ಗೌಡನಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

India vs England: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

0

ಬರ್ಮಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಮಂಗಳವಾರ ಚಾಲನೆ ದೊರೆತಿದೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ.

ಟಿ20 ಸರಣಿಯ ಸೋಲಿನ ನಿರಾಸೆಯಿಂದ ಹೊರಬರಲು ಭಾರತ ಈ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸುವ ಗುರಿ ಹೊಂದಿದೆ. ಇದೇ ವೇಳೆ, 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡದ ಸಿದ್ಧತೆಯ ದೃಷ್ಟಿಯಿಂದಲೂ ಈ ಸರಣಿ ಮಹತ್ವದ್ದಾಗಿದೆ.

ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್‌ಪ್ರೀತ್ ಬುಮ್ರಾ ಮತ್ತೆ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟಿಗೆ ಕಣಕ್ಕಿಳಿದಿದ್ದಾರೆ. ಈ ಮೂವರು ಅನುಭವಿ ಆಟಗಾರರ ಪ್ರದರ್ಶನದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಮಾಡಲು ತೀರ್ಮಾನಿಸಿದರು. ಇದರೊಂದಿಗೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಅಧಿಕೃತವಾಗಿ ಪ್ರಕಟಗೊಂಡಿದೆ. ಇಂಗ್ಲೆಂಡ್ ತಂಡ ಒಂದು ದಿನ ಮುಂಚೆಯೇ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿತ್ತು.

ಮುಖಾಮುಖಿ ದಾಖಲೆ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 61 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಇಂಗ್ಲೆಂಡ್ 44 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಎರಡು ಪಂದ್ಯಗಳು ಟೈ ಆಗಿದ್ದು, ಮೂರು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

ಇಂಗ್ಲೆಂಡ್ ನೆಲದಲ್ಲಿ ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಪಂದ್ಯಗಳಲ್ಲಿ ಗೆಲುವು ಹಾಗೂ 37 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಟೈ ಆಗಿದ್ದು, ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಮುಕ್ತಾಯಗೊಂಡಿವೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಭಾರತ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟರಲ್ಲಿ ಜಯ ಹಾಗೂ ನಾಲ್ಕರಲ್ಲಿ ಸೋಲು ಅನುಭವಿಸಿದೆ.

ಇಂಗ್ಲೆಂಡ್ ಪ್ಲೇಯಿಂಗ್ XI:
ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್ ಹಾಗೂ ಆದಿಲ್ ರಶೀದ್.

ಭಾರತದ ಪ್ಲೇಯಿಂಗ್ XI:
ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್.

‘ಶಾ ಈಗ ನನ್ನ ಆತ್ಮೀಯ ಸ್ನೇಹಿತ’: 6 ವರ್ಷದ ವೈರಲ್ ವಿಡಿಯೋಗೆ ಅನುಪಮ್ ಖೇರ್ ತಿರುಗೇಟು

ಮುಂಬೈ: ಬಾಲಿವುಡ್‌ನ ಇಬ್ಬರು ಹಿರಿಯ ನಟರಾದ ಅನುಪಮ್ ಖೇರ್ ಮತ್ತು ನಸೀರುದ್ದೀನ್ ಶಾ ನಡುವಿನ ಹಳೆಯ ರಾಜಕೀಯ ಭಿನ್ನಾಭಿಪ್ರಾಯ ಮತ್ತೆ ಸುದ್ದಿಯಾಗಿದ್ದು, ವೈರಲ್ ಆಗಿರುವ ಆರು ವರ್ಷದ ಹಳೆಯ ವಿಡಿಯೋ ಕುರಿತು ಅನುಪಮ್ ಖೇರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ಉದ್ದೇಶಪೂರ್ವಕ ಅಭಿಯಾನ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ನಸೀರುದ್ದೀನ್ ಶಾ ಈಗ ತಮ್ಮ ಆತ್ಮೀಯ ಸ್ನೇಹಿತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯದ ಸಂದರ್ಭದಲ್ಲಿ ನಸೀರುದ್ದೀನ್ ಶಾ ಅನುಪಮ್ ಖೇರ್ ಅವರನ್ನು ‘ಕೋಡಂಗಿ’ ಎಂದು ಕರೆದಿದ್ದ ವಿಡಿಯೋ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಮಾತನಾಡಿದ ಅನುಪಮ್, ರಾಮ್ ಮಂದಿರ ದೇಣಿಗೆ ವಿವಾದದ ಬಗ್ಗೆ ತಮ್ಮ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಕೆಲವರು ಹಳೆಯ ವಿಡಿಯೋವನ್ನು ಹುಡುಕಿ ವೈರಲ್ ಮಾಡಿದ್ದಾರೆ ಎಂದು ಕಿಡಿಕಾರಿದರು.

“ಆ ವಿವಾದವನ್ನು ನಾನು ಬಹಳ ಹಿಂದೆಯೇ ಮರೆತಿದ್ದೇನೆ. ನಾನು ಮತ್ತು ನಸೀರುದ್ದೀನ್ ಶಾ ಇತ್ತೀಚೆಗೆ ಭೇಟಿಯಾಗಿ ಪರಸ್ಪರ ಅಪ್ಪಿಕೊಂಡಿದ್ದೇವೆ. 2025ರಲ್ಲೇ ಅವರು ನನ್ನ ಬಳಿ ಬಂದು ಕ್ಷಮೆ ಕೇಳಿದ್ದರು” ಎಂದು ಅನುಪಮ್ ಖೇರ್ ಬಹಿರಂಗಪಡಿಸಿದರು.

ಇದೇ ವೇಳೆ ಅಯೋಧ್ಯೆಯಲ್ಲಿ ನಡೆಯುತ್ತಿರುವ ‘ಶ್ರೀ ರಾಮ್ ಭೂಮಿ’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಅನುಪಮ್, ರಾಮ್ ಮಂದಿರ ದೇಣಿಗೆ ಪ್ರಕರಣದ ಬಗ್ಗೆ ಮಾತನಾಡಿ, “ಕೆಲವರ ಅಕ್ರಮದಿಂದ ರಾಮ ಮಂದಿರದ ಗೌರವಕ್ಕೆ ಧಕ್ಕೆಯಾಗುವುದಿಲ್ಲ. ಆದರೆ ಹಣ ದುರುಪಯೋಗ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ವೈರಲ್ ವಿಡಿಯೋ ಮೂಲಕ ಮತ್ತೆ ಚರ್ಚೆಗೆ ಗ್ರಾಸವಾಗಿದ್ದ ಹಳೆಯ ವಿವಾದಕ್ಕೆ ತೆರೆ ಎಳೆಯುವ ರೀತಿಯಲ್ಲಿ ಅನುಪಮ್ ಖೇರ್ ನೀಡಿರುವ ಈ ಸ್ಪಷ್ಟನೆ ಈಗ ಬಾಲಿವುಡ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ರಾಜಕೀಯ ಬೇರೆ, ಕೆಲಸ ಬೇರೆ: ಸಚಿವ ಕೃಷ್ಣ ಬೈರೇಗೌಡರ ಕಾರ್ಯವೈಖರಿಗೆ ಹೆಚ್.ಡಿ. ದೇವೇಗೌಡ ಮೆಚ್ಚುಗೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಉತ್ತಮ ಆಡಳಿತಾತ್ಮಕ ಕೆಲಸವನ್ನು ಮೆಚ್ಚಲೇಬೇಕು ಎಂದು ಅವರು ಹೇಳಿದರು.

ಜೆಪಿ ಭವನದಲ್ಲಿ ಆಯೋಜಿಸಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ಈ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶೇಷವಾಗಿ ನಗರದಲ್ಲಿನ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಅವರನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಶ್ಲಾಘನೀಯವಾಗಿವೆ ಎಂದು ದೇವೇಗೌಡ ಹೇಳಿದರು.

ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ಟೀಕೆ ಮಾಡುವ ದೇವೇಗೌಡರು, ಈ ಬಾರಿ ರಾಜಕೀಯವನ್ನು ಮೀರಿ ಸಚಿವ ಕೃಷ್ಣ ಬೈರೇಗೌಡ ಅವರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಬಹಿರಂಗವಾಗಿ ಪ್ರಶಂಸಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರತಿ ಸಂಘಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಈ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ದೇಶದ ವೈವಿಧ್ಯಮಯ ಸಂಸ್ಕೃತಿ, ಏಕತೆ ಮತ್ತು ಇತಿಹಾಸದ ಸಂದೇಶವನ್ನು ಯುವಜನತೆಗೆ ತಲುಪಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3 ಸಾವಿರ ಕಿಲೋಮೀಟರ್‌ಗೂ ಹೆಚ್ಚು ದೂರದ ‘ಭಾರತ್ ಜೋಡೋ ಯಾತ್ರೆ’ ಕೈಗೊಂಡಿದ್ದರು. ಆ ಯಾತ್ರೆಯ ನೆನಪಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು. ಇದೀಗ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಯೋಜನೆಗೆ ಅಂತಿಮ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ. ಯೋಜನೆ ಯಶಸ್ವಿಯಾಗಿ ಜಾರಿಯಾಗಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿವೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ಜುಲೈ 13ರಂದು ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು.

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

0

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಪಿಎಸ್‌ಐ ಬೈರಪ್ಪ ವಿರುದ್ಧ ಇದೀಗ ಪತ್ನಿ ಮತ್ತು ಮಾವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪತ್ನಿ ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿ) ದೂರು ನೀಡಲು ಮುಂದಾಗಿದ್ದಾರೆ.

ವಕೀಲೆಯಾಗಿರುವ ಪತ್ನಿ ನೀಡಿರುವ ಆರೋಪದ ಪ್ರಕಾರ, ಐದು ವರ್ಷಗಳ ಹಿಂದೆ ಬೈರಪ್ಪ ಅವರನ್ನು ವಿವಾಹವಾಗಿದ್ದು, ಆರಂಭದ ಮೂರು ವರ್ಷ ದಾಂಪತ್ಯ ಜೀವನ ಸುಗಮವಾಗಿತ್ತು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ಆದರೆ ಬಳಿಕ ಪಿಎಸ್‌ಐ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿದ್ದು, ಮನೆಗೆ ಯುವತಿಯರನ್ನು ಕರೆತರುವುದು ಸೇರಿದಂತೆ ಹಲವು ವಿಚಾರಗಳು ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಿದ್ದವು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರಶ್ನಿಸಿದ ಬಳಿಕ, ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ತಂದೆಯ ಮನೆಯಿಂದ ₹50 ಲಕ್ಷ ಹಣ ತಂದುಕೊಡಬೇಕು, ಇಲ್ಲವಾದರೆ ಜೊತೆಯಲ್ಲಿ ಬದುಕುವುದಿಲ್ಲ ಎಂದು ವರದಕ್ಷಿಣೆಗಾಗಿ ಒತ್ತಡ ಹೇರುತ್ತಿದ್ದ ಹಾಗೂ ಹಲ್ಲೆ ನಡೆಸುತ್ತಿದ್ದ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಮೂರು ವರ್ಷದ ಮಗಳು ತನ್ನ ಮಗುವೇ ಅಲ್ಲ ಎಂಬ ಅನುಮಾನ ವ್ಯಕ್ತಪಡಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಜಗಳವಾದಾಗ ಪತ್ನಿ ಹಾಗೂ ಮಗುವನ್ನು ಬಿಟ್ಟು ಮನೆಯಿಂದ ಹೊರಟು ಹೋಗುತ್ತಿದ್ದ ಎಂದು ಅವರು ಆರೋಪಿಸಿದ್ದಾರೆ.

ಜುಲೈ 12ರಂದು ನಡೆದ ಗಲಾಟೆಯ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಮಾವನ ಮೇಲೆಯೇ ಮಚ್ಚು ಹಿಡಿದು ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ, ಪೊಲೀಸರು ಎಫ್‌ಐಆರ್ ದಾಖಲಿಸದೆ ಕೇವಲ ಎನ್‌ಸಿಆರ್ ದಾಖಲಿಸಿ ಕಳುಹಿಸಿದ್ದಾರೆ ಎಂದು ಪತ್ನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಮನೆಯ ಮುಂದೆ ರೌಡಿಗಳನ್ನು ನಿಲ್ಲಿಸಿ ಬೆದರಿಕೆ ಹಾಕುವುದು, ಯುವತಿಯರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಸಂದೇಶ ವಿನಿಮಯ ಮಾಡಿಕೊಳ್ಳುವುದು, ಮದುವೆಯಾಗುವುದಾಗಿ ನಂಬಿಸಿ ಸಂಪರ್ಕ ಬೆಳೆಸುವುದು ಹಾಗೂ ಒಪ್ಪದಿದ್ದರೆ ಬೆದರಿಕೆ ಹಾಕುವುದು ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಪತ್ನಿ ಮಾಡಿದ್ದಾರೆ. ಕೆಲವು ಯುವತಿಯರೇ ತಮ್ಮ ಚಾಟ್‌ಗಳ ಪ್ರತಿಗಳನ್ನು ಕಳುಹಿಸಿದ್ದು, ಅದರಿಂದ ಈ ವಿಚಾರಗಳು ಬೆಳಕಿಗೆ ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಮೋಹನ್ ಮುರುಳಿ ಅವರು ಬೈರಪ್ಪ ಅವರ ಬ್ಯಾಚ್‌ಮೇಟ್ ಆಗಿರುವುದರಿಂದ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂಬ ಆರೋಪವನ್ನೂ ಪತ್ನಿ ಮಾಡಿದ್ದಾರೆ.

ಸದ್ಯ ಪತ್ನಿ ತನ್ನ ಮೂರು ವರ್ಷದ ಮಗುವಿನೊಂದಿಗೆ ತಂದೆಯ ಮನೆಯಲ್ಲಿ ಆಶ್ರಯ ಪಡೆದಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

‘ಅಭಿಮಾನಿಗಳ ಪ್ರೀತಿಯ ಗಾಯ’ಕ್ಕೆ ಕೊನೆಗೂ ಸರ್ಜರಿ: ಪವನ್ ಕಲ್ಯಾಣ್ ಚೇತರಿಕೆ, ಪತ್ನಿಯ ಭಾವನಾತ್ಮಕ ಪೋಸ್ಟ್ ವೈರಲ್

ಮುಂಬೈ: ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಬಲ ಭುಜಕ್ಕೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಎರಡೂ ಭುಜಗಳಲ್ಲಿ ತೀವ್ರ ರೋಟೇಟರ್ ಕಫ್ ಗಾಯಗಳಿದ್ದರೂ, ಚೇತರಿಕೆ ಸುಲಭವಾಗುವ ಉದ್ದೇಶದಿಂದ ಮೊದಲ ಹಂತದಲ್ಲಿ ಬಲ ಭುಜಕ್ಕೆ ಮಾತ್ರ ಸುಮಾರು ಮೂರೂವರೆ ಗಂಟೆಗಳ ಸರ್ಜರಿ ನಡೆಸಲಾಗಿದೆ.

ಶಸ್ತ್ರಚಿಕಿತ್ಸೆಗೆ ಮುನ್ನ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಬಲ ಭುಜದಲ್ಲಿ ಮೊದಲೇ ಗೊತ್ತಿರದ ಅವಲ್ಶನ್ ಫ್ರಾಕ್ಚರ್ ಪತ್ತೆಯಾಗಿದ್ದು, ಇದರಿಂದ ಸರ್ಜರಿ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ. ಆದಾಗ್ಯೂ ಚಿಕಿತ್ಸೆ ಯಶಸ್ವಿಯಾಗಿದ್ದು, ಪವನ್ ಕಲ್ಯಾಣ್ ವೈದ್ಯರ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು. ಈ ಭೇಟಿಯ ಚಿತ್ರಗಳನ್ನು ಪತ್ನಿ ಅನ್ನಾ ಲೆಜ್ನೇವಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಾವನಾತ್ಮಕ ಪೋಸ್ಟ್‌ನಲ್ಲಿ ಅನ್ನಾ, “ಪವನ್ ಕಲ್ಯಾಣ್ ತಮ್ಮ ನೋವನ್ನು ಎಂದಿಗೂ ಹೊರಹಾಕುವುದಿಲ್ಲ. ಜೀವನದ ಜವಾಬ್ದಾರಿಗಳೇ ಅವರಿಗೆ ಮೊದಲ ಆದ್ಯತೆ. ಈಗ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದು ನನ್ನ ಕರ್ತವ್ಯ. ಅವರು ಪ್ರತಿದಿನ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜನಸೇನಾ ಪಕ್ಷದ ಪ್ರಕಾರ, ವೈದ್ಯರು ಮೊದಲೇ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರೂ ಸಾರ್ವಜನಿಕ ಹಾಗೂ ಅಧಿಕೃತ ಕರ್ತವ್ಯಗಳ ಕಾರಣದಿಂದ ಅದನ್ನು ಮುಂದೂಡಲಾಗಿತ್ತು. ಈಗ ಬಲ ಭುಜದ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು, ಎಡ ಭುಜದ ಸರ್ಜರಿಯನ್ನು ಸುಮಾರು ಎರಡು ತಿಂಗಳ ಬಳಿಕ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಕಳೆದ ವರ್ಷ ಇದೇ ಗಾಯದ ಬಗ್ಗೆ ಪ್ರತಿಕ್ರಿಯಿಸಿದ್ದ ಪವನ್ ಕಲ್ಯಾಣ್, “ಇದು ಅಭಿಮಾನಿಗಳು ಪ್ರೀತಿಯಿಂದ ಕೊಟ್ಟ ಗಾಯ” ಎಂದು ಹಾಸ್ಯವಾಗಿ ಹೇಳಿದ್ದ ಮಾತು ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ಹೈಕೋರ್ಟ್ ಆದೇಶದಂತೆ ಜೈಲಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ಕೌನ್ಸಿಲರ್: ದಕ್ಷಿಣ ಭಾರತದಲ್ಲೇ ಇದೇ ಮೊದಲು

0

ಕೇರಳ: ಕೇರಳದಲ್ಲಿ ಅಪರೂಪದ ಬೆಳವಣಿಗೆಯೊಂದರಲ್ಲಿ, ಬಂಧನದಲ್ಲಿರುವ ಬಿಜೆಪಿ ಕೌನ್ಸಿಲರ್ ಆರ್. ಸುಗತನ್ ಅವರು ವಿಯೂರ್ ಕೇಂದ್ರ ಕಾರಾಗೃಹದಲ್ಲೇ ಕೌನ್ಸಿಲರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಜೈಲಿನಲ್ಲೇ ಜನಪ್ರತಿನಿಧಿಯೊಬ್ಬರು ಪ್ರಮಾಣ ವಚನ ಸ್ವೀಕರಿಸಿರುವ ಮೊದಲ ಘಟನೆ ಇದಾಗಿದೆ.

ತಿರುವನಂತಪುರಂ ಮಹಾನಗರ ಪಾಲಿಕೆಯ ವಯೋಟ್ಟುಕೋಣಂ ವಾರ್ಡ್‌ನಿಂದ ಆಯ್ಕೆಯಾಗಿರುವ ಆರ್. ಸುಗತನ್ ಅವರಿಗೆ ಜೈಲಿನ ಗ್ರಂಥಾಲಯದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮೇಯರ್ ವಿ.ವಿ. ರಾಜೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಸುಗತನ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸುಗತನ್ ಅವರು ಸದ್ಯ ಕೇರಳ ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ (KAAPA) ಅಡಿಯಲ್ಲಿ ಬಂಧಿತರಾಗಿ ವಿಯೂರ್ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗಿರಲಿಲ್ಲ. ತಾತ್ಕಾಲಿಕ ಬಿಡುಗಡೆಗೆ ರಾಜ್ಯ ಸರ್ಕಾರ ಅನುಮತಿ ನೀಡದ ಕಾರಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ತಾತ್ಕಾಲಿಕ ಬಿಡುಗಡೆ ನೀಡುವುದು ಸಾಧ್ಯವಿಲ್ಲ ಎಂಬ ಸರ್ಕಾರದ ವಾದವನ್ನು ಪರಿಗಣಿಸಿ, ಜೈಲಿನೊಳಗೇ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸುವಂತೆ ಆದೇಶಿಸಿತ್ತು.

ಅದರಂತೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಜೈಲಿನ ಗ್ರಂಥಾಲಯದಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಅಲ್ಲದೆ, ಕಾರ್ಯಕ್ರಮದ ವರದಿ ಮಾಡಲು ಪತ್ರಕರ್ತರಿಗೂ ಜೈಲು ಪ್ರವೇಶಕ್ಕೆ ಅವಕಾಶ ನೀಡುವಂತೆ ನಿರ್ದೇಶನ ನೀಡಲಾಗಿತ್ತು.

ಈ ಹಿಂದೆ ಸುಗತನ್ ಸೇರಿದಂತೆ ಬಿಜೆಪಿಯ 20 ಕೌನ್ಸಿಲರ್‌ಗಳು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಕಾನೂನುಬದ್ಧ ವಿಧಾನಗಳನ್ನು ಸಂಪೂರ್ಣವಾಗಿ ಪಾಲಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಜ್ಞಾವಿಧಿಯನ್ನು ಮರುನಡೆಸುವಂತೆ ನ್ಯಾಯಾಲಯ ಆದೇಶಿಸಿತ್ತು.

ಅದರಂತೆ ಜುಲೈ 14ರಂದು ತಿರುವನಂತಪುರಂ ಕಾರ್ಪೊರೇಷನ್ ಕಚೇರಿಯಲ್ಲಿ ಮರು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅದಕ್ಕೂ ಮುನ್ನ ಸಮಾಜ ವಿರೋಧಿ ಚಟುವಟಿಕೆಗಳ ಆರೋಪದಡಿ ಸುಗತನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ತಾತ್ಕಾಲಿಕ ಬಿಡುಗಡೆಯನ್ನೂ ಸರ್ಕಾರ ನಿರಾಕರಿಸಿದ್ದರಿಂದ, ಹೈಕೋರ್ಟ್ ಆದೇಶದಂತೆ ಅವರು ಜೈಲಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ಆಟಗಾರರು ಕ್ರಿಕೆಟ್ʼಗೆ ಅಗತ್ಯ: 40 ಓವರ್ʼಗಳ ಏಕದಿನ ಕ್ರಿಕೆಟ್ʼಗೆ ಗಿಲ್ ವಿರೋಧ

0

ಬರ್ಮಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು, ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಭವಿಷ್ಯದ ತಂಡದ ಯೋಜನೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತಾದ ಊಹಾಪೋಹಗಳಿಗೆ ತೆರೆ ಎಳೆದಿರುವ ಗಿಲ್, 2027ರ ಐಸಿಸಿ ಏಕದಿನ ವಿಶ್ವಕಪ್ ಯೋಜನೆಯಲ್ಲಿ ಈ ಇಬ್ಬರು ದಿಗ್ಗಜರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಿಲ್, ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಅವರೊಂದಿಗೆ 2027ರ ವಿಶ್ವಕಪ್‌ಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ದಕ್ಷಿಣ ಆಫ್ರಿಕಾದ ಪರಿಸ್ಥಿತಿಗೆ ತಕ್ಕಂತೆ ತಂಡವನ್ನು ಹೇಗೆ ರೂಪಿಸಬೇಕು, ಭವಿಷ್ಯದಲ್ಲಿ ತಂಡಕ್ಕೆ ನೆರವಾಗಬಲ್ಲ ಯುವ ವೇಗಿಗಳು, ಸ್ಪಿನ್ನರ್‌ಗಳು ಹಾಗೂ ಆಲ್‌ರೌಂಡರ್‌ಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅನುಭವವೇ ತಂಡದ ದೊಡ್ಡ ಶಕ್ತಿಯಾಗಿದೆ ಎಂದು ಗಿಲ್ ಅಭಿಪ್ರಾಯಪಟ್ಟರು. ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ಬ್ಯಾಟಿಂಗ್ ವಿಭಾಗದ ಬೆನ್ನೆಲುಬಾಗಿ ನಿಂತಿರುವ ಈ ಇಬ್ಬರು ಹಲವು ಮಹತ್ವದ ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಅವರ ಅನುಭವ ಮತ್ತು ಮಾರ್ಗದರ್ಶನ ಯುವ ಆಟಗಾರರ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಏಕದಿನ ಕ್ರಿಕೆಟ್ ಅನ್ನು 50 ಓವರ್‌ಗಳಿಂದ 40 ಓವರ್‌ಗಳಿಗೆ ಇಳಿಸುವ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಗಿಲ್, ಆ ಪ್ರಸ್ತಾವನೆಗೆ ತಾವು ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಏಕದಿನ ಕ್ರಿಕೆಟ್‌ಗೆ ಮತ್ತಷ್ಟು ಜನಪ್ರಿಯತೆ ತರುವ ಉದ್ದೇಶದಿಂದ ಮೂರು ಅಥವಾ ನಾಲ್ಕು ದೇಶಗಳು ಭಾಗವಹಿಸುವ ತ್ರಿಕೋನ ಅಥವಾ ಬಹು ರಾಷ್ಟ್ರಗಳ ಸರಣಿಗಳನ್ನು ಹೆಚ್ಚಾಗಿ ಆಯೋಜಿಸಿದರೆ ಈ ಮಾದರಿಯ ಮೇಲಿನ ಆಸಕ್ತಿ ಮತ್ತಷ್ಟು ಹೆಚ್ಚಲಿದೆ ಎಂದು ಸಲಹೆ ನೀಡಿದರು.

ಇತ್ತೀಚೆಗೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಭಾರತ ಅನುಭವಿಸಿದ ಟಿ20 ಸರಣಿ ಸೋಲಿನ ಕುರಿತು ಮಾತನಾಡಿದ ಗಿಲ್, ಟಿ20 ಮತ್ತು ಏಕದಿನ ಕ್ರಿಕೆಟ್ ಸಂಪೂರ್ಣ ವಿಭಿನ್ನ ಮಾದರಿಗಳಾಗಿದ್ದು, ಆ ಫಲಿತಾಂಶಗಳು ಏಕದಿನ ತಂಡದ ಆತ್ಮವಿಶ್ವಾಸದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಜಸ್‌ಪ್ರೀತ್ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ನೀಡಿದ್ದು, ಹೊಸ ಸರಣಿಯನ್ನು ಸಕಾರಾತ್ಮಕ ಮನೋಭಾವದೊಂದಿಗೆ ಆರಂಭಿಸಲು ಭಾರತ ಸಜ್ಜಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.