“ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.”ನಂದಾ ಹಣಬರಟ್ಟಿ, ಮತದಾರರ ನೋಂದಣಾಧಿಕಾರಿ
ಜೂ. 16ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿ
ಧರ್ಮ ಒಡೆಯುವ ಶಕ್ತಿಗಳ ವಿರುದ್ಧ ಹಿಂದೂ ಸಮಾಜ ಜಾಗೃತವಾಗಲಿ
ಕನ್ನೇರಿ ಸ್ವಾಮೀಜಿಯ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿ
ಜೂ. 14ರಂದು ರಾಜ್ಯ ಮಟ್ಟದ ಗಾಣಿಗ ಸಮಾಜದ ವಧು-ವರರ ಮಹಾ ಸಮಾವೇಶ
ಬಣ್ಣಗಳಲ್ಲೇ ಭಾವನೆಗಳ ಅನಾವರಣ
“ಚಿತ್ರಗಳು ಕೇವಲ ಬಣ್ಣಗಳ ಸಂಯೋಜನೆ ಅಲ್ಲ; ಅವು ಮನಸ್ಸಿನ ಮಾತುಗಳನ್ನು ಮೌನವಾಗಿ ಹೇಳುವ ಕಲಾತ್ಮಕ ಭಾಷೆ.”ಡಾ. ಬಸವರಾಜ ಬಳ್ಳಾರಿಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಮುಖಂಡರ ಆಗ್ರಹ
“ಪಕ್ಷನಿಷ್ಠೆ, ಅಭಿವೃದ್ಧಿ ಕಾರ್ಯ ಹಾಗೂ ಜನಪರ ರಾಜಕಾರಣಕ್ಕೆ ಈ ಬಾರಿ ಸಚಿವ ಸ್ಥಾನ ರೂಪದಲ್ಲಿ ನ್ಯಾಯ ಸಿಗಬೇಕು.”ಶರಣಪ್ಪ ಬೆಟಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ರಾಜ್ಯದಲ್ಲಿ ಮಳೆ ಅಬ್ಬರ: ಬೀದರ್, ಶಿವಮೊಗ್ಗ, ದಾಂಡೇಲಿ ಜನಜೀವನ ಅಸ್ತವ್ಯಸ್ತ!
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಗಡಿ ಜಿಲ್ಲೆ ಬೀದರ್ನಲ್ಲಿ ಕಳೆದ ಒಂದು ಗಂಟೆಯಿಂದ ಸಿಡಿಲು-ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬಿರುಗಾಳಿಯ ಪರಿಣಾಮವಾಗಿ ಹಲವು ಕಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ. ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ ಮತ್ತು ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ದಿನಗಳಲ್ಲಿಯೂ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ.
ಶಿವಮೊಗ್ಗದಲ್ಲಿಯೂ ಸಿಡಿಲು-ಗುಡುಗಿನೊಂದಿಗೆ ಜೋರಾಗಿ ಮಳೆಯಾಗಿದ್ದು, ಕಳೆದ ಅರ್ಧ ಗಂಟೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಬಿಸಿಲಿನಿಂದ ಕಾದಿದ್ದ ನಗರವನ್ನು ಮಳೆರಾಯ ತಂಪುಗೊಳಿಸಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಇದೇ ವೇಳೆ ದಾಂಡೇಲಿಯಲ್ಲಿ ಗಾಳಿ ಸಹಿತ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವೆಡೆ ರಸ್ತೆಗಳ ಮೇಲೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬಲವಾದ ಗಾಳಿಗೆ ಅಂಗಡಿಗಳ ಬೋರ್ಡ್ಗಳು ಹಾರಿ ಹಾನಿಯಾಗಿದ್ದು, ಕೆಲ ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ಮರದ ಕೊಂಬೆಗಳು ಹಾಗೂ ಗಿಡಗಂಟೆಗಳು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಆಸ್ಪತ್ರೆ ಮುಂಭಾಗಕ್ಕೂ ಮಳೆ ನೀರು ನುಗ್ಗಿದ ವರದಿಯಾಗಿದೆ. ಭಾರೀ ಮಳೆಯಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಪರದಾಡಿದ ಘಟನೆ ನಡೆದಿದೆ.
ಒಟ್ಟಾರೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮುಂದಿನ ಗಂಟೆಗಳಲ್ಲಿ ಮತ್ತಷ್ಟು ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಸೂಚಿಸಿದೆ.
ರಾಜಣ್ಣ, ಪರಮೇಶ್ವರ್ ಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ಮಹತ್ವದ ನಿರ್ಧಾರ!
ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣ ಅವರಿಗೆ ಈ ಬಾರಿ ಗೌರವ ಡಾಕ್ಟರೇಟ್ ನೀಡದಿರಲು ತೀರ್ಮಾನಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರೂ ನಾಯಕರು ವಿಶ್ವವಿದ್ಯಾಲಯಕ್ಕೆ ನೀಡಿರುವ ಕೊಡುಗೆ ಮಹತ್ವದ್ದು. ಆರಂಭದಲ್ಲಿ ಅವರ ಹೆಸರುಗಳನ್ನು ಪರಿಗಣಿಸಲಾಗಿತ್ತು. ಆದರೆ ಪರಿಶೀಲನಾ ಸಮಿತಿ ದೇಶದ ಇತರ ರಾಜ್ಯಗಳಲ್ಲಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡುವ ನಿಯಮಗಳು ಹಾಗೂ ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ನಡೆದ ಉದಾಹರಣೆಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸತೀಶ್ ಜಾರಕಿಹೊಳಿ ಅವರು ತಮಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಅನ್ನು ತಿರಸ್ಕರಿಸಿದ್ದರು. ಅಲ್ಲದೆ, ಸಿದ್ದರಾಮಯ್ಯ ಅವರಿಗೂ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡುವ ವಿಷಯದಲ್ಲಿ ಅವರು ಸ್ವತಃ ವಿನಮ್ರವಾಗಿ ನಿರಾಕರಿಸಿದ್ದರು ಎಂಬುದನ್ನೂ ಸಮಿತಿ ಪರಿಗಣಿಸಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಇನ್ಮುಂದೆ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡಬಾರದು ಎಂಬ ತೀರ್ಮಾನಕ್ಕೆ ಸಮಿತಿ ಬಂದಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ರಾಜಕಾರಣಿಗಳನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಈ ಬಾರಿ ಸ್ವಾತಂತ್ರ್ಯ ಹೋರಾಟಗಾರ ಟಿ. ಆರ್. ರೇವಣ್ಣ, ಕನ್ನಡದ ಕವಿ ಹಾಗೂ ಚಿಂತಕ ದ್ವಾರನಕುಂಟೆ ಪಾತಣ್ಣ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಹಾಗೂ ವಕೀಲ ಎನ್. ಆರ್. ಪ್ರದೀಪ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲಾಗಿದ್ದು, ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಇನ್ನೂ ಅಂತಿಮ ಮಾಹಿತಿ ಲಭ್ಯವಾಗಿಲ್ಲ. ಘಟಿಕೋತ್ಸವಕ್ಕೂ ಮುನ್ನ ಅವರು ನೂತನವಾಗಿ ಸ್ಥಾಪಿತವಾದ ತುಮಕೂರು ಇನ್ನೋವೇಶನ್ ಇನ್ ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್ಶಿಪ್ ಕೌನ್ಸಿಲ್ ಹಾಗೂ ಗೋ ಗ್ರೀನ್ – ಬೈಸಿಕಲ್ ಇನಿಶಿಯೇಟಿವ್ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಒಟ್ಟು 29 ಲಕ್ಷ ರೂ. ವೆಚ್ಚದಲ್ಲಿ ಘಟಿಕೋತ್ಸವ ಆಯೋಜಿಸಲಾಗುತ್ತಿದ್ದು, ಈ ಬಾರಿ ಒಬ್ಬರಿಗೆ ಡಿ.ಲಿಟ್, 59 ಪಿಎಚ್.ಡಿ ಪದವಿಗಳು, 2,058 ಸ್ನಾತಕೋತ್ತರ ಪದವಿಗಳು ಹಾಗೂ 8,781 ಸ್ನಾತಕ ಪದವಿಗಳು ಪ್ರದಾನವಾಗಲಿದೆ. ಜೊತೆಗೆ 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳು ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಕುಲಪತಿ ತಿಳಿಸಿದ್ದಾರೆ.
ನಕಲಿ ಸಹಿ ಆರೋಪ: ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ನಕಲಿ ಸಹಿ ಆರೋಪದ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಎಂಸಿ ಪ್ರಕಟಿಸಿದೆ. ಪಕ್ಷದ ಉಪಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಅವರು ಸಹಿ ಮಾಡಿರುವ ಅಧಿಕೃತ ಪತ್ರದಲ್ಲಿ, ಇಬ್ಬರು ಶಾಸಕರು ಸಭೆಗಳಿಗೆ ಪದೇಪದೇ ಗೈರಾಗುತ್ತಿದ್ದು, ಪಕ್ಷದ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಈ ಬೆಳವಣಿಗೆಗೂ ಮುನ್ನ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಬೆಂಬಲ ಸೂಚಿಸುವ ಪತ್ರದಲ್ಲಿ ತಮ್ಮ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಇಬ್ಬರು ಶಾಸಕರು ದೂರು ನೀಡಿದ್ದರು ಎಂಬ ಮಾಹಿತಿ ಹೊರಬಿದ್ದಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಟಿಎಂಸಿಯೊಳಗೇ ಶಾಸಕರ ಸಹಿ ನಕಲಿ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಈ ಘಟನೆಯಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಲೋಕಸಭೆ ಚುನಾವಣೆಯ ಬಳಿಕ ಟಿಎಂಸಿಯೊಳಗಿನ ಅಸಮಾಧಾನ ಹಾಗೂ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿರುವ ಚರ್ಚೆಗಳ ನಡುವೆ ಈ ಘಟನೆ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ ಮಗನಿಂದಲೇ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ತಿವಿದು ಹತ್ಯೆಗೈದ ಭೀಕರ ಘಟನೆ ನಡೆದಿದೆ.
37 ವರ್ಷದ ಮಧುಸೂದನ್ ಮೃತ ದುರ್ದೈವಿ. ಆರೋಪಿಯಾಗಿರುವ ರಾಹುಲ್ ತನ್ನ ಚಿಕ್ಕಪ್ಪನ ಮೇಲೆ ದಾಳಿ ನಡೆಸಿದವನು ಎಂದು ತಿಳಿದುಬಂದಿದೆ.
ಮೇ 31ರ ರಾತ್ರಿ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಕೆಲಸದ ವಿಚಾರವಾಗಿ ಮಧುಸೂದನ್ ಅವರು ರಾಹುಲ್ಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಕಾರ್ಯಕ್ರಮದಿಂದ ಹೊರನಡೆದಿದ್ದಾನೆ ಎಂದು ಹೇಳಲಾಗಿದೆ.
ಕಾರ್ಯಕ್ರಮ ಮುಗಿದ ಬಳಿಕ ಮನೆ ಸಮೀಪ ಮಧುಸೂದನ್ ಮೇಲೆ ರಾಹುಲ್ ಏಕಾಏಕಿ ದಾಳಿ ನಡೆಸಿದ್ದಾನೆ. ಬಿಯರ್ ಬಾಟಲಿಯಿಂದ ಕುತ್ತಿಗೆ ಭಾಗಕ್ಕೆ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಧುಸೂದನ್ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಬಳಿಕ ಆರೋಪಿ ರಾಹುಲ್ ಸ್ಥಳದಿಂದ ಪರಾರಿಯಾಗಿದ್ದನು. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

