Home Blog

ಬಿಡದಿ ಟೌನ್‌ಶಿಪ್ ಜೆಎಂಸಿ ಸರ್ವೆಗೆ ಅಡ್ಡಿ; 20ಕ್ಕೂ ಹೆಚ್ಚು ರೈತರ ವಿರುದ್ಧ FIR!

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಜಂಟಿ ಭೂಮಾಪನ ಕಾರ್ಯದ ವೇಳೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಜೆಎಂಸಿ ಸರ್ವೆಗೆ ತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದಡಿ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಂದಾಯ ಇಲಾಖೆ ಅಧಿಕಾರಿಗಳು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆ ನಡೆಸುವ ವೇಳೆ ರೈತರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎನ್ನಲಾಗಿದೆ.

ಸರ್ವೆಗೆ ವಿರೋಧ ಮುಂದುವರಿಸಿದ ರೈತರು:

ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಗೆ ಒಳಪಡುವ ಹಲವು ಗ್ರಾಮಗಳಲ್ಲಿ ರೈತರು ಇದೀಗ ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲಾಡಳಿತ ಅಥವಾ ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಕಾರ್ಯ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಹಾಗೂ ಸ್ಥಳೀಯರು ಸಿದ್ಧತೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಸದ್ಯಕ್ಕೆ ಜೆಎಂಸಿ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸಂಘರ್ಷಕ್ಕೆ ಅವಕಾಶ ನೀಡದೆ, ಮೊದಲು ಪ್ರತಿಭಟನಾಕಾರರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಯೋಜನೆ ಪರ ಇರುವ ರೈತರ ಜಮೀನು ಸರ್ವೆಗೆ ಸಿದ್ಧತೆ:

ಇನ್ನೊಂದೆಡೆ, ಬಿಡದಿ ಟೌನ್‌ಶಿಪ್ ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳ ಜೆಎಂಸಿ ಸರ್ವೆ ಕಾರ್ಯವನ್ನು ಮುಂದುವರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಭದ್ರತೆ ಪಡೆದುಕೊಂಡು, ಯೋಜನೆ ಪರ ಇರುವ ರೈತರ ಜಮೀನುಗಳ ಸರ್ವೆ ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ವಿರೋಧ, ಅಧಿಕಾರಿಗಳ ಕ್ರಮ ಹಾಗೂ ಮುಂದಿನ ಮಾತುಕತೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

ಸಚಿವರಿಗೆ ‘ಚಿಲ್ಲರೆ ಕೊಡಿ, ಇಲ್ಲದಿದ್ರೆ ಬಸ್ ಇಳಿಯಿರಿ’ ಎಂದ BMTC ಸಿಬ್ಬಂದಿ ಅಮಾನತು!

ಬೆಂಗಳೂರು: ಮುಖಕ್ಕೆ ಮಾಸ್ಕ್ ಧರಿಸಿ ಸಾಮಾನ್ಯ ಪ್ರಯಾಣಿಕರಂತೆ ಬಿಎಂಟಿಸಿ ಬಸ್‌ನಲ್ಲಿ ಸಂಚರಿಸಿ ಸಾರಿಗೆ ವ್ಯವಸ್ಥೆಯ ರಿಯಾಲಿಟಿ ಚೆಕ್ ನಡೆಸಿದ್ದ ಸಚಿವ ಭೈರತಿ ಸುರೇಶ್ ಅವರಿಗೆ ಉದ್ಧಟತನದಿಂದ ವರ್ತಿಸಿದ್ದ ಆರೋಪದಡಿ ಚಾಲಕ ಕಂ ನಿರ್ವಾಹಕನನ್ನು ಬಿಎಂಟಿಸಿ ಅಮಾನತುಗೊಳಿಸಿದೆ.

ರಾಮಕೃಷ್ಣ ಟಿ.ಜಿ. ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ.

ಜುಲೈ 11ರಂದು ರಾತ್ರಿ ಸುಮಾರು 9.30ರ ವೇಳೆಗೆ ಸಚಿವ ಭೈರತಿ ಸುರೇಶ್ ಹೆಬ್ಬಾಳದಿಂದ ಭೂಪಸಂದ್ರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಏರಿದ್ದರು. ತಮ್ಮ ಗುರುತು ಮರೆಮಾಚಿಕೊಂಡು ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣಿಸಿದ ಸಚಿವರು, ಬಸ್ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಪ್ರಯಾಣಿಕರಿಗೆ ನೀಡಲಾಗುತ್ತಿರುವ ಸೇವೆಯನ್ನು ಖುದ್ದಾಗಿ ಪರಿಶೀಲಿಸಿದ್ದರು.

ಪ್ರಯಾಣದ ವೇಳೆ ಟಿಕೆಟ್ ಪಡೆಯಲು ಸಚಿವರು ಹಣ ನೀಡಿದ್ದರು. ಈ ಸಂದರ್ಭದಲ್ಲಿ ಚಾಲಕ ಕಂ ನಿರ್ವಾಹಕ ರಾಮಕೃಷ್ಣ ಟಿ.ಜಿ. ಆರು ರೂಪಾಯಿ ಚಿಲ್ಲರೆ ನೀಡುವಂತೆ ಕೇಳಿದ್ದಾರೆ. ತಮ್ಮ ಬಳಿ ಚಿಲ್ಲರೆ ಇಲ್ಲ ಎಂದು ಸಚಿವರು ತಿಳಿಸಿದಾಗ, ‘ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ’ ಎಂದು ಉದ್ಧಟತನದಿಂದ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಯುಪಿಐ ವ್ಯವಸ್ಥೆ ಇದ್ದರೂ ಮಾಹಿತಿ ನೀಡದ ಸಿಬ್ಬಂದಿ:

ಬಿಎಂಟಿಸಿ ಬಸ್‌ಗಳಲ್ಲಿ 2024ರಿಂದಲೇ ಯುಪಿಐ ಮೂಲಕ ಡಿಜಿಟಲ್ ಟಿಕೆಟ್ ಪಾವತಿ ವ್ಯವಸ್ಥೆ ಜಾರಿಯಲ್ಲಿದೆ. ನಿಗಮದ ಒಟ್ಟು ಟಿಕೆಟ್ ಆದಾಯದಲ್ಲಿ ಸುಮಾರು ಶೇ.53ರಷ್ಟು ಹಣ ಯುಪಿಐ ಮೂಲಕವೇ ಸಂಗ್ರಹವಾಗುತ್ತಿದೆ.

ಆದರೆ, ಚಿಲ್ಲರೆ ಇಲ್ಲದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಯುಪಿಐ ಪಾವತಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಬೇಕಿದ್ದ ನಿರ್ವಾಹಕ ಕರ್ತವ್ಯದಲ್ಲಿ ವಿಫಲರಾಗಿದ್ದಾರೆ ಎಂದು ಬಿಎಂಟಿಸಿ ಪರಿಗಣಿಸಿದೆ. ಸಿಬ್ಬಂದಿಯ ವರ್ತನೆಯಿಂದ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಪ್ರಚಾರಕ್ಕೆ ಅವಕಾಶ ಉಂಟಾಗಿದೆ ಎಂದು ನಿಗಮ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ರಾಮಕೃಷ್ಣ ಟಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಫನ್ ವರ್ಲ್ಡ್ ಬಳಿ ಹೊಸ ಬಸ್ ನಿಲ್ದಾಣ:

ಸಚಿವರ ರಿಯಾಲಿಟಿ ಚೆಕ್ ವೇಳೆ ಮತ್ತೊಂದು ಸಮಸ್ಯೆಯೂ ಬೆಳಕಿಗೆ ಬಂದಿದೆ. ಜಯಮಹಲ್ ರಸ್ತೆಯ ಫನ್ ವರ್ಲ್ಡ್ ಸಮೀಪ ಪ್ರಯಾಣಿಕರೊಬ್ಬರು ಬಸ್ ನಿಲ್ಲಿಸುವಂತೆ ಕೈ ಸನ್ನೆ ಮಾಡಿದರೂ, ಬಸ್ ನಿಲ್ಲಿಸದೆ ತೆರಳಿರುವುದನ್ನು ಸಚಿವರು ಗಮನಿಸಿದ್ದರು.

ಪ್ರಯಾಣಿಕರ ಅನುಕೂಲಕ್ಕಾಗಿ ಸಚಿವರ ನಿರ್ದೇಶನದ ಮೇರೆಗೆ ಫನ್ ವರ್ಲ್ಡ್ ಸಮೀಪ ಅಧಿಕೃತ ಬಸ್ ನಿಲುಗಡೆಯನ್ನು ಜಾರಿಗೆ ತರಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳೂರಿನಲ್ಲಿ 11 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ; ನಾಲ್ವರು ಅಪ್ರಾಪ್ತರು ವಶಕ್ಕೆ!

ಮಂಗಳೂರು: ಅಕ್ರಮವಾಗಿ ಭಾರತಕ್ಕೆ ನುಸುಳಿ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದು, ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂರ್ ಅಮೀನ್, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಜಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತರ ವಿರುದ್ಧ ಅಗತ್ಯ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

ಪಶ್ಚಿಮ ಬಂಗಾಳದ ನಕಲಿ ವಿಳಾಸ ಬಳಕೆ:

ಆರೋಪಿಗಳು ಅಕ್ರಮವಾಗಿ ಭಾರತ ಪ್ರವೇಶಿಸಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಾಂಗ್ಲಾದೇಶದ ಗುರುತಿನ ಚೀಟಿ ವಶ:

ಕಾರ್ಯಾಚರಣೆ ವೇಳೆ ಆರೋಪಿಗಳ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ, ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಖಲೆಗಳ ಆಧಾರದ ಮೇಲೆ ಬಂಧಿತರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲೂ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಪತ್ತೆಹಚ್ಚಿದ್ದರು. ಇದೀಗ ಉರ್ವಾದಲ್ಲಿ ಮತ್ತೆ 11 ಮಂದಿ ಪತ್ತೆಯಾಗಿರುವುದು ಅಕ್ರಮ ವಲಸೆ ಜಾಲದ ಕುರಿತು ಅನುಮಾನ ಮೂಡಿಸಿದೆ.

ಪ್ರಕರಣದ ವರದಿಯನ್ನು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ರಮ ವಲಸೆ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Chanakya Niti: ಪ್ರಗತಿಗೆ ಅಡ್ಡಿಯಾಗುವ ಕೆಟ್ಟ ಅಭ್ಯಾಸಗಳಿವು; ತಪ್ಪದೇ ನಿಯಂತ್ರಿಸಿ!

0

ಜೀವನದಲ್ಲಿ ಯಶಸ್ಸು ಹಾಗೂ ಪ್ರಗತಿ ಸಾಧಿಸಲು ನಮ್ಮ ಕೆಲವು ಅಭ್ಯಾಸಗಳ ಮೇಲೆ ನಿಯಂತ್ರಣ ಹೊಂದುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ನಮ್ಮಲ್ಲಿರುವ ಕೆಲವು ಕೆಟ್ಟ ಅಭ್ಯಾಸಗಳು ಜೀವನದ ಬೆಳವಣಿಗೆಗೆ ಅಡ್ಡಿಯಾಗಬಹುದು. ಅವುಗಳನ್ನು ನಿಯಂತ್ರಿಸಲು ಕಲಿತವರು ಮಾತ್ರ ಸಕಾರಾತ್ಮಕವಾಗಿ ಮುಂದೆ ಸಾಗಲು ಸಾಧ್ಯ ಎಂದು ಚಾಣಕ್ಯ ನೀತಿಯಲ್ಲಿ ತಿಳಿಸಲಾಗಿದೆ.

ಕೋಪದ ಮೇಲೆ ಇರಲಿ ನಿಯಂತ್ರಣ:

ಚಾಣಕ್ಯರ ಪ್ರಕಾರ, ಕೋಪವು ಮನುಷ್ಯನ ದೊಡ್ಡ ಶತ್ರು. ಕೋಪದ ಸಮಯದಲ್ಲಿ ವ್ಯಕ್ತಿಯ ಯೋಚನಾ ಶಕ್ತಿ ಕುಂದುತ್ತದೆ ಹಾಗೂ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಇದರಿಂದ ಸಂಬಂಧಗಳು ಹಾಳಾಗುವುದರ ಜೊತೆಗೆ ವೈಯಕ್ತಿಕ ಹಾಗೂ ವೃತ್ತಿ ಜೀವನದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕೋಪ ಬಂದಾಗ ತಕ್ಷಣ ಪ್ರತಿಕ್ರಿಯಿಸುವ ಬದಲು ಶಾಂತವಾಗಿ ಯೋಚಿಸುವುದು ಉತ್ತಮ.

ಮಾತಿನ ಮೇಲೆ ಹಿಡಿತ ಇರಲಿ:

ಯೋಚಿಸದೆ ಮಾತನಾಡುವ ಅಭ್ಯಾಸ ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಚಾಣಕ್ಯರು ಎಚ್ಚರಿಸಿದ್ದಾರೆ. ಮಾತನಾಡುವ ಮುನ್ನ ಯೋಚಿಸುವುದು ಹಾಗೂ ಸೌಮ್ಯವಾಗಿ ಮಾತನಾಡುವುದು ಉತ್ತಮ ಸಂಬಂಧಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ, ತಮ್ಮ ಯೋಜನೆಗಳು ಹಾಗೂ ವೈಯಕ್ತಿಕ ವಿಚಾರಗಳನ್ನು ಎಲ್ಲರೊಂದಿಗೂ ಹಂಚಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ.

ಆಸೆ ಮತ್ತು ದುರಾಸೆ ನಿಯಂತ್ರಿಸಿ:

ಅತಿಯಾದ ಆಸೆ ಹಾಗೂ ದುರಾಸೆ ವ್ಯಕ್ತಿಯ ನೆಮ್ಮದಿಯನ್ನು ಕಸಿದುಕೊಳ್ಳಬಹುದು. ಇರುವುದರಲ್ಲಿ ತೃಪ್ತಿ ಹೊಂದಿ, ತಮ್ಮ ಗುರಿಗಳ ಮೇಲೆ ಗಮನ ಕೇಂದ್ರೀಕರಿಸಿದರೆ ಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರಬಹುದು ಎಂದು ಚಾಣಕ್ಯ ನೀತಿ ಹೇಳುತ್ತದೆ.

ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ:

ಹಣ ಸಂಪಾದಿಸುವುದು ಎಷ್ಟು ಮುಖ್ಯವೋ, ಅದನ್ನು ಸರಿಯಾದ ರೀತಿಯಲ್ಲಿ ಬಳಸುವುದು ಕೂಡ ಅಷ್ಟೇ ಮುಖ್ಯ ಎಂದು ಚಾಣಕ್ಯರು ಹೇಳಿದ್ದಾರೆ. ಅಗತ್ಯವಿಲ್ಲದ ಖರ್ಚುಗಳನ್ನು ನಿಯಂತ್ರಿಸದಿದ್ದರೆ ಹಣ ಉಳಿಸಲು ಸಾಧ್ಯವಾಗುವುದಿಲ್ಲ. ಭವಿಷ್ಯದ ಭದ್ರತೆಗಾಗಿ ಹಣದ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಬೇಕು.

ಒಟ್ಟಿನಲ್ಲಿ, ಕೋಪ, ಮಾತು, ಆಸೆ ಹಾಗೂ ಖರ್ಚಿನ ಮೇಲೆ ನಿಯಂತ್ರಣ ಸಾಧಿಸಿದರೆ ಜೀವನದಲ್ಲಿ ಯಶಸ್ಸಿನ ಹಾದಿ ಸುಲಭವಾಗುತ್ತದೆ ಎಂಬುದು ಚಾಣಕ್ಯ ನೀತಿಯ ಸಾರವಾಗಿದೆ.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಎಸ್‌ಡಿಪಿಐ ಸ್ಪರ್ಧೆ

0

ವಿಜಯಸಾಕ್ಷಿ ಸುದ್ದಿ, ಗದಗ: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಎಸ್‌ಡಿಪಿಐ ಪಕ್ಷ ತೀರ್ಮಾನಿಸಿದ್ದು, ಕಳೆದ ಎರಡು ವರ್ಷಗಳಿಂದಲೇ ಚುನಾವಣಾ ಪೂರ್ವ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಜನಪರ ಹೋರಾಟಗಳನ್ನು ತೀವ್ರಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಗದಗ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಪಕ್ಷದ ವಿರೋಧವಿಲ್ಲ. ಆದರೆ, ಅದರ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ರೀತಿಯಲ್ಲಿ ನಡೆಯುತ್ತಿರುವ ಪ್ರಕ್ರಿಯೆ ಜನವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು, 2002ರ ದಾಖಲೆಗಳನ್ನು ಕಡ್ಡಾಯಗೊಳಿಸುವುದು ಸಮಂಜಸವಲ್ಲ. ಕೇವಲ ಹೆಸರಿನ ಕಾಗುಣಿತದ ದೋಷವನ್ನು ಆಧಾರವನ್ನಾಗಿ ಮಾಡಿಕೊಂಡು ಕ್ರಮ ಕೈಗೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ಅನಗತ್ಯ ಒತ್ತಡ ಹೇರಿ ಕೆಲಸ ಮಾಡಲಾಗುತ್ತಿದೆ. ಸಮರ್ಪಕ ಮ್ಯಾಪಿಂಗ್ ನಡೆಸದೆ ಗುರಿ ನಿಗದಿಪಡಿಸುವುದರಿಂದ ಒಬ್ಬರ ಮಾಹಿತಿಯನ್ನು ಮತ್ತೊಬ್ಬರ ಹೆಸರಿಗೆ ಮ್ಯಾಪಿಂಗ್ ಮಾಡುವಂತಹ ಗೊಂದಲಗಳು ಉಂಟಾಗುತ್ತಿವೆ ಎಂದು ಆರೋಪಿಸಿದರು.

ಪ್ರಸ್ತುತ ರಾಜ್ಯದಲ್ಲಿ ಯಾವುದೇ ಚುನಾವಣೆಗಳಿಲ್ಲ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅನಗತ್ಯ ಗಡಿಬಿಡಿ ಮಾಡದೆ, ಬಿಎಲ್‌ಒಗಳು ತಮ್ಮ ನಿಯಮಿತ ಕರ್ತವ್ಯಗಳನ್ನು ನಿರ್ವಹಿಸಿದ ಬಳಿಕ ಮನೆ-ಮನೆಗೆ ತೆರಳಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು. ನಿರಂತರ ಒತ್ತಡದಿಂದ ಹಲವಾರು ಬಿಎಲ್‌ಒಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದರು.

“ಮತದಾರರ ಪಟ್ಟಿ ಪರಿಷ್ಕರಣೆ ತಪ್ಪಲ್ಲ. ಆದರೆ ಎಸ್‌ಐಆರ್ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ತಳ್ಳುವುದು ಹಾಗೂ ಬಿಎಲ್‌ಒಗಳ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು.”

– ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷ, ಎಸ್‌ಡಿಪಿಐ

ವಿಪಕ್ಷ ನಿರ್ಮೂಲನೆ ಯತ್ನ: ಆರೋಪ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮೂಲಕ ಕೇಂದ್ರ ಸರ್ಕಾರವು ದೇಶವನ್ನು ವಿಪಕ್ಷ ರಹಿತವಾಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿಗೆ ಮತ ಹಾಕುವವರನ್ನು ಮಾತ್ರ ಉಳಿಸಿ, ಉಳಿದವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.

ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತ ಸಮುದಾಯಗಳು ಒಗ್ಗಟ್ಟಾಗಿ ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ನಡೆಸಬೇಕಾದ ಅಗತ್ಯವಿದೆ. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಲೋಕಸಭೆ ಚುನಾವಣೆಯವರೆಗೆ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ₹16.62 ಕೋಟಿ ಮೊತ್ತದ ಪ್ರಕರಣ ಇತ್ಯರ್ಥ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಜುಲೈ 11ರಂದು ನಡೆದ ದ್ವಿತೀಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 366 ಪ್ರಕರಣಗಳನ್ನು ₹16.62 ಕೋಟಿ ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.

ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ ಅವರ ನೇತೃತ್ವದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಮೂರ್ತಿಗಳಾದ ಸಚಿನ್ ಶಂಕರ ಮಗದುಮ್, ಸಿ.ಎಂ. ಪೂನಚ್ಚ ಹಾಗೂ ಗೀತಾ ಕೆ.ಬಿ. ಸೇರಿದಂತೆ ಸದಸ್ಯರು ನಾಲ್ಕು ಪೀಠಗಳಲ್ಲಿ ವಿಚಾರಣೆ ನಡೆಸಿದರು. ಒಟ್ಟು 1,037 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.

ಅಪಘಾತ ಪರಿಹಾರ, ಭೂಸ್ವಾಧೀನ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸೇವಾ ಪ್ರಕರಣಗಳು, ರಿಟ್ ಅರ್ಜಿಗಳು ಹಾಗೂ ಆಸ್ತಿ ವಿವಾದಗಳಿಗೆ ಸಂಬಂಧಿಸಿದ ಹಲವು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಭೂಸ್ವಾಧೀನಕ್ಕೆ ಸಂಬಂಧಿಸಿದ 46 ಮೇಲ್ಮನವಿಗಳನ್ನು ಸರ್ಕಾರ ನಿಗದಿಪಡಿಸಿದ್ದ ಒಂದು ಎಕರೆ ನೀರಾವರಿ ಜಮೀನಿಗೆ ₹40 ಲಕ್ಷ ಪರಿಹಾರ ಆಧಾರದ ಮೇಲೆ ಭೂಮಾಲೀಕರು ಮತ್ತು ಭೂಸ್ವಾಧೀನ ಅಧಿಕಾರಿಗಳ ನಡುವಿನ ಸಮಾಲೋಚನೆಯ ಮೂಲಕ ಇತ್ಯರ್ಥಪಡಿಸಲಾಯಿತು.

ಕೌಟುಂಬಿಕ ಹಾಗೂ ಆಸ್ತಿ ವಿವಾದಗಳಲ್ಲೂ ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ರಾಜಿ ಸಂಧಾನಕ್ಕೆ ಅವಕಾಶ ಕಲ್ಪಿಸಿ, ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗೇ ಬಗೆಹರಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಲಾಯಿತು ಎಂದು ಧಾರವಾಡ ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಅಧಿಕ ವಿಲೇಖನಾಧಿಕಾರಿ ಜೆರಾಲ್ಡ್ ರುಡಾಲ್ಫ್ ಮೆಂಡೋನ್ಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕಿ ರತ್ನಾ ಬಬಲಿಗೆ ‘ರಾಷ್ಟ್ರ ಶಿಕ್ಷಣ ರತ್ನ’ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರ ಸಹ ಶಿಕ್ಷಕಿ ರತ್ನಾ ಬಬಲಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ‘ರಾಷ್ಟ್ರ ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹುಬ್ಬಳ್ಳಿಯ ಬೆಳಕು ಸಾಹಿತಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಆಯೋಜಿಸಿದ್ದ 125ನೇ ಬೆಳಕು ಸಮ್ಮೇಳನದಲ್ಲಿ ಅಕ್ಷರದವ್ವ ಲೂಸಿ ಸಾಲ್ಡಾನ ದತ್ತಿ ಪ್ರಶಸ್ತಿ ಅಡಿಯಲ್ಲಿ ಈ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವು ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ, ಬೆಳಕು ಟ್ರಸ್ಟ್ ನಾಡಿನ ಶಿಕ್ಷಕರು, ಸಾಧಕರು ಹಾಗೂ ರೈತರನ್ನು ಗುರುತಿಸಿ ಗೌರವಿಸುವ ಮೂಲಕ ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಯ ಉಳಿವು-ಬೆಳೆವಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಇಂತಹ ಸಮ್ಮೇಳನಗಳು ಸಾಧಕರಿಗೆ ಮತ್ತಷ್ಟು ಪ್ರೇರಣೆ ನೀಡುತ್ತವೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ವಿ.ವಿ. ಶಿವರುದ್ರಯ್ಯ, ಬೆಳಕು ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಮಹಿಳಾ ಘಟಕದ ಗೌರವಾಧ್ಯಕ್ಷೆ ನಿರ್ಮಲಾ ಯಲಿಗಾರ, ಕೆ.ಪಿ. ಸುಜಾತಾ, ಎಲ್.ಐ. ಲಕ್ಕಮ್ಮನವರ, ಮಂಜುನಾಥ ಮಟ್ಟಿ ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಾಧನೆ ಸಾಧಕರ ಸ್ವತ್ತು-ಶ್ರಮ ಮತ್ತು ಶಿಸ್ತೇ ಯಶಸ್ಸಿನ ಗುಟ್ಟು: ಕುರಿ ಶಿವಮೂರ್ತಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: “ಸಾಧನೆ ಎಂಬುದು ಸಾಧಕರ ಸ್ವತ್ತು, ಸೋಮಾರಿಗಳದ್ದಲ್ಲ. ಗುರಿ, ಕಠಿಣ ಪರಿಶ್ರಮ ಮತ್ತು ಶಿಸ್ತು ಇದ್ದರೆ ಯಾವುದೇ ಎತ್ತರವನ್ನು ತಲುಪಬಹುದು” ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು.

ಪಟ್ಟಣದ ಕೊಟ್ಟೂರೇಶ್ವರ ಚಿತ್ರಮಂದಿರದಲ್ಲಿ ತಾಲೂಕು ಕುರುಬರ ಸಂಘ, ಕನಕ ನೌಕರರ ಸಂಘ ಹಾಗೂ ಕನಕ ಸೇನೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದೂ ಮುಖ್ಯವಾಗಿದೆ. ಮಕ್ಕಳ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಶಿಕ್ಷಣ ಕಲಿಸಲು ಪೋಷಕರು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಬೇಕು. “ಸಮಾಜ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ, ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ ಎಂಬ ಚಿಂತನೆ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ನಿಕಟ ಪೂರ್ವ ಅಧ್ಯಕ್ಷ ಬುಡ್ಡಿ ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಪತ್ರಕರ್ತ ಉಜ್ಜಿನಿ ರುದ್ರಪ್ಪ, ಸಮಾಜದ ಮುಖಂಡರಾದ ಮುಟಗನಹಳ್ಳಿ ಕೊಟ್ರೇಶ್ ಹಾಗೂ ಕನ್ನಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ನಂದಿಪುರ ಡಾ. ಮಹೇಶ್ವರ ಸ್ವಾಮೀಜಿ ಹಾಗೂ ಉತ್ತಂಗಿ ಸೋಮಶಂಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಮೈನಹಳ್ಳಿ ಶಿವರಾಜ್ ವಹಿಸಿದ್ದರು.

ಈ ಸಂದರ್ಭದಲ್ಲಿ ಕುಲಗುರು ಕೊಟ್ರಯ್ಯ ಒಡೆಯರ್, ಕೆ. ಮೈಲಾರಪ್ಪ, ಜಳಕಿ ಗುರುಸಿದ್ದಪ್ಪ, ಶಿವಾನಂದಪ್ಪ, ಐಟಿ ಕೊಟ್ರೇಶ್, ಕೋಗಳಿ ಹನುಮಂತಪ್ಪ, ಬಣಕಾರ ಗೋಣೆಪ್ಪ, ಹುಲಿಮನಿ ಗೂಳಪ್ಪ, ಫೋಟೋ ರಾಮಣ್ಣ, ಭಂಡಾರಿ ಭರಮಪ್ಪ, ಹುಡೆದ ಹುಲುಗಪ್ಪ, ಕನಕ ನೌಕರರ ಸಂಘದ ತಾಲೂಕು ಅಧ್ಯಕ್ಷ ಮೈನಹಳ್ಳಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆಂಜನೇಯ ವಕೀಲರು, ಮುರ್ನಾಳ ಹಾಗೂ ದೇವೇಂದ್ರ ಹೊಸಮನಿ ನಿರೂಪಿಸಿದರು. ವಿದ್ಯಾರ್ಥಿನಿ ಭೂಮಿಕ ಹಾಗೂ ಮಹಾಂತೇಶ್ ತಂಡದವರ ಪ್ರಾರ್ಥನೆ ಮತ್ತು ಭಾವಗೀತೆಗಳು ಕಾರ್ಯಕ್ರಮಕ್ಕೆ ಮೆರುಗು ತಂದವು.

“ಕಠಿಣ ಪರಿಶ್ರಮದಿಂದ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಉದ್ದೇಶ, ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಸ್ಪೂರ್ತಿ ನೀಡುವುದಾಗಿದೆ.”

– ಕುರಿ ಶಿವಮೂರ್ತಿ

ನಗರಸಭೆಯ ಕಡತಗಳ ಜಾಲಾಡಿದ ಲೋಕಾಯುಕ್ತ

0

ವಿಜಯಸಾಕ್ಷಿ ಸುದ್ದಿ, ಗದಗ: ಲಂಚದ ಬೇಡಿಕೆ, ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯದ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ವಿವಿಧ ವಿಭಾಗಗಳ ದಾಖಲೆಗಳನ್ನು ಸುದೀರ್ಘವಾಗಿ ಪರಿಶೀಲಿಸಿದರು.

ಗದಗ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಸಿಪಿಐಗಳು ಸೇರಿದಂತೆ ಗದಗ ಮತ್ತು ಧಾರವಾಡ ಜಿಲ್ಲೆಗಳ 15ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಬೆಳಗ್ಗೆಯೇ ಏಳಕ್ಕೂ ಹೆಚ್ಚು ವಾಹನಗಳಲ್ಲಿ ನಗರಸಭೆ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ವಿವಿಧ ವಿಭಾಗಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದರು.

ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಲೇವಾರಿ, ಪ್ರಗತಿ ಹಾಗೂ ಅನುಮೋದನೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿದರು. ಸಂಜೆಯವರೆಗೂ ಮುಂದುವರಿದ ಕಾರ್ಯಾಚರಣೆಯಲ್ಲಿ ಹಲವು ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ವಿವಿಧ ವಿಭಾಗಗಳಲ್ಲಿ ಕಂಡುಬಂದಿರುವ ಲೋಪದೋಷಗಳ ಕುರಿತು ಮಾಹಿತಿ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಂದ ದಾಖಲೆ ಹಾಗೂ ವಿವರಣೆ ಪಡೆದುಕೊಂಡರು.

ದಾಳಿಯ ಆರಂಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ಆಗಮಿಸಿದ್ದರಿಂದ ನಗರಸಭೆ ಕಚೇರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಗೊಂದಲ ಉಂಟಾದರೂ, ಯಾವುದೇ ಆತಂಕ ಬೇಡ, ಅಗತ್ಯ ದಾಖಲೆಗಳನ್ನು ಮಾತ್ರ ಒದಗಿಸುವಂತೆ ಅಧಿಕಾರಿಗಳು ಸೂಚಿಸಿ ಪರಿಶೀಲನೆ ಮುಂದುವರಿಸಿದರು.

ಗದಗ-ಬೆಟಗೇರಿ ನಗರಸಭೆಯಲ್ಲಿ ಹಲವು ವರ್ಷಗಳಿಂದ ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳ ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿರುವುದು ಮಹತ್ವ ಪಡೆದಿದೆ.

ದಿನವಿಡೀ ನಡೆದ ಲೋಕಾಯುಕ್ತ ಕಾರ್ಯಾಚರಣೆ ಅವಳಿ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಪರಿಶೀಲನೆಯಲ್ಲಿ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರತ್ತ ಸಾರ್ವಜನಿಕರ ಚಿತ್ತ ನೆಟ್ಟಿದೆ.

ಲೋಕಾಯುಕ್ತ ಪರಿಶೀಲನೆ ನಡೆದ ವಿಭಾಗಗಳು

  • ಬೀದಿದೀಪ ನಿರ್ವಹಣೆ
  • ಕುಡಿಯುವ ನೀರು ಪೂರೈಕೆ
  • ಟ್ಯಾಂಕರ್ ಮೂಲಕ ನೀರು ವಿತರಣೆ
  • ಲೋಕೋಪಯೋಗಿ ವಿಭಾಗ
  • ತೆರಿಗೆ ವಿಭಾಗ
  • ಸಾರ್ವಜನಿಕ ಅರ್ಜಿಗಳ ವಿಲೇವಾರಿ
  • ಇತರೆ ಆಡಳಿತ ವಿಭಾಗಗಳ ದಾಖಲೆಗಳು

ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, 2025ನೇ ಸಾಲಿನ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ನೇತೃತ್ವದಲ್ಲಿ ತಿಮ್ಮಾಪುರ, ಹರ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಲಾಶಯಗಳು, ಕೆರೆಗಳು ಹಾಗೂ ಕೊಳವೆಬಾವಿಗಳು ಬತ್ತಿವೆ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಗಿದೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈರುಳ್ಳಿ, ಮೆಣಸಿನಕಾಯಿ, ಸೂರ್ಯಕಾಂತಿ, ಜೋಳ, ಹೆಸರು, ಕಡಲೆ ಹಾಗೂ ಗೋಧಿ ಬೆಳೆಗಳಿಗೆ ವಿಮೆ ಮಾಡಿಸಿರುವ ರೈತರಿಗೆ ಬೆಳೆ ನಷ್ಟವಾದರೂ ಪರಿಹಾರ ಸಿಕ್ಕಿಲ್ಲ. ಸಂಬಂಧಪಟ್ಟ ವಿಮಾ ಕಂಪನಿಗಳ ಮೇಲೆ ಒತ್ತಡ ಹೇರಿ ಬಾಕಿ ವಿಮಾ ಹಣವನ್ನು ರೈತರ ಖಾತೆಗೆ ತಕ್ಷಣ ಜಮಾ ಮಾಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಅಲ್ಲದೆ ಎಸ್‌ಬಿಐ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲವನ್ನು 2018ರ ಮಾದರಿಯಲ್ಲಿ ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ ಜೋಗಿನ ಮಾತನಾಡಿ, ತಿಮ್ಮಾಪುರ ಭಾಗದಲ್ಲಿ ಹೆಸರು, ಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ತಕ್ಷಣ ಪರಿಹಾರ ನೀಡದಿದ್ದರೆ ರೈತರು ಬದುಕು ನಡೆಸುವುದು ಕಷ್ಟವಾಗಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಅಂದಪ್ಪ ಕೂಳೂರು, ಶರಣಪ್ಪ ಜೋಗಿನ, ಹನುಮಂತ ಭೀಮನೂರು, ಶೇಖಪ್ಪ ಘಂಟೆ, ಹನುಮಪ್ಪ ತಳವಾರ, ಶಿವಕುಮಾರ ಯತ್ನಟ್ಟಿ, ಶೇಖಪ್ಪ ಗಾಜಿ, ಕಪತ್ತಪ್ಪ ಸೋಂಪೂರ, ಬಸಪ್ಪ ಬನ್ನಿಮರದ, ಯಲ್ಲಪ್ಪ ಗಂಗರಾತ್ರಿ, ಮಾರುತಿ ಬಿಚಗಲ್ಲ, ಭೀಮಪ್ಪ ಆಲೂರು ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.

“ಮಳೆ ಇಲ್ಲದೆ ಬೆಳೆಗಳು ಸಂಪೂರ್ಣ ಒಣಗಿ ಹೋಗಿವೆ. ರೈತರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ವಿಮೆ ಹಣ ಬಿಡುಗಡೆ ಹಾಗೂ ಬೆಳೆ ಸಾಲ ಮನ್ನಾ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ.”

– ಯಲ್ಲಪ್ಪ ಎಚ್. ಬಾಬರಿ, ಜಿಲ್ಲಾ ಅಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ