ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಆತಂಕ ಹೆಚ್ಚಾಗಿದೆ.
ಕಲಬೆರಕೆ ಆಹಾರ ಪದಾರ್ಥಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಶೀಲನೆಗೆ ಮುಂದಾಗಿದೆ.
ಇತ್ತೀಚೆಗೆ ಕೋಲಾರದಲ್ಲಿ 10 ಟನ್ ರಾಸಾಯನಿಕ ಮಿಶ್ರಿತ ಅಡಿಕೆಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ಮುಳಬಾಗಿಲು ಟಿಎಚ್ಒ ಡಾ. ಸುಗುಣ ನೇತೃತ್ವದ ಆರೋಗ್ಯ ಸುರಕ್ಷತಾ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.
ಅಡಿಕೆಯಲ್ಲಿ ಕಲರಿಂಗ್ ಏಜೆಂಟ್ಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಲ್ಯಾಬ್ ವರದಿ ಬಂದ ಬಳಿಕ ಅಡಿಕೆಯಲ್ಲಿ ಯಾವ ರೀತಿಯ ರಾಸಾಯನಿಕ ಬಳಸಲಾಗಿದೆ ಎಂಬುದು ಸ್ಪಷ್ಟವಾಗಲಿದೆ.
ಬ್ರಾಂಡೆಡ್ ಆಹಾರಗಳ ಮೇಲೂ ನಿಗಾ:
ಅಡಿಕೆಯ ಜೊತೆಗೆ ಮಕ್ಕಳಲ್ಲಿ ಜನಪ್ರಿಯವಾಗಿರುವ ಟೆಟ್ರಾಪ್ಯಾಕ್ ಜ್ಯೂಸ್, ಬಿಸ್ಕತ್, ಚಿಪ್ಸ್, ಚಾಕೋಲೇಟ್ ಹಾಗೂ ಕೇಕ್ ಸೇರಿದಂತೆ ವಿವಿಧ ಪ್ಯಾಕೇಜ್ಡ್ ಆಹಾರಗಳ ಗುಣಮಟ್ಟದ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿವೆ.
ಆಹಾರ ಪದಾರ್ಥಗಳು ಮಾರುಕಟ್ಟೆಗೆ ಬರುವ ಮುನ್ನ ಅಗತ್ಯ ಗುಣಮಟ್ಟದ ಪರೀಕ್ಷೆಗಳನ್ನು ನಡೆಸಬೇಕಿದ್ದರೂ, ಕೆಲವು ಖಾಸಗಿ ಲ್ಯಾಬ್ಗಳು ಹಾಗೂ ಕಂಪನಿಗಳ ವಿರುದ್ಧ ಅಕ್ರಮದ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವಿವಿಧ ಬ್ರಾಂಡೆಡ್ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಸರ್ಕಾರಿ ಪ್ರಯೋಗಾಲಯಗಳಲ್ಲಿ ಮರುಪರಿಶೀಲನೆ ನಡೆಸಲು ಮುಂದಾಗಿದೆ.
ಆರೋಗ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಎಫ್ಡಿಎ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಆಹಾರ ಕಲಬೆರಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

