Home Blog

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ; ಮರು ತನಿಖೆ ಕುರಿತ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

0

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ ತನಿಖೆಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಿಬಿಐ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ವಿಚಾರಣೆ ವೇಳೆ, “ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಏಕೆ ಭೇಟಿ ನೀಡಲಿಲ್ಲ? 14 ವರ್ಷಗಳಾದರೂ ಸಮರ್ಪಕ ತನಿಖೆ ನಡೆದಿಲ್ಲ” ಎಂದು ಸಿಬಿಐಗೆ ನ್ಯಾಯಪೀಠ ಪ್ರಶ್ನೆ ಮಾಡಿತು.

ಪ್ರಕರಣದಲ್ಲಿರುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ಸೂಚಿಸಿದ ನ್ಯಾಯಪೀಠ, ಅಂತಿಮ ಆದೇಶದ ಬಳಿಕ ಮಧ್ಯಂತರ ತನಿಖಾ ವರದಿಯನ್ನೂ ಕೇಳಲಾಗುವುದು ಎಂದು ತಿಳಿಸಿತು. ಪ್ರಕರಣದ ಮರು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ನ್ಯಾಯಾಲಯವೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿತು.

ಸೌಜನ್ಯ ಅವರ ತಾಯಿ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ, ಎಸ್‌ಐಟಿ ರಚನೆಯಾದರೆ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.

ಮರು ತನಿಖೆಗೆ ತಾತ್ವಿಕ ಒಪ್ಪಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, ಯಾವ ರೀತಿಯ ತನಿಖೆ ನಡೆಸಬೇಕು ಹಾಗೂ ಅದನ್ನು ಯಾವ ಸಂಸ್ಥೆ ಕೈಗೊಳ್ಳಬೇಕು ಎಂಬ ಕುರಿತು ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ತೀರ್ಪಿನಲ್ಲಿ ತನಿಖೆಯ ಸ್ವರೂಪ ಹಾಗೂ ಮುಂದಿನ ಕ್ರಮಗಳ ಕುರಿತು ವಿಸ್ತೃತ ನಿರ್ದೇಶನ ನೀಡುವ ಸಾಧ್ಯತೆ ಇದೆ.

ವಿಚಾರಣೆ ವೇಳೆ ಸಿಬಿಐ ಪರ ವಾದಗಳನ್ನು ಪ್ರಶ್ನಿಸಿದ ನ್ಯಾಯಪೀಠ, “ಕೆಳ ನ್ಯಾಯಾಲಯದಲ್ಲಿ ಇನ್ನೂ ಕೆಲವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದ್ದೀರಿ. ಈಗ ಸಿಬ್ಬಂದಿ ಕೊರತೆ ಮತ್ತು ಹಣಕಾಸಿನ ಸಮಸ್ಯೆಗಳನ್ನು ನೆಪವಾಗಿ ಹೇಳುವುದು ಸಮಂಜಸವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿತು.

14 ವರ್ಷಗಳಿಂದ ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಸಿಐಡಿ ವರದಿ ಸೇರಿದಂತೆ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ತಿಳಿಸಿ, ಅಂತಿಮ ಆದೇಶದ ಮೂಲಕ ಮರು ತನಿಖೆಯ ಕುರಿತು ಸ್ಪಷ್ಟ ನಿರ್ದೇಶನ ನೀಡುವುದಾಗಿ ಹೇಳಿದೆ.

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದ್ದರೂ, ಇದುವರೆಗೆ ಯಾರೊಬ್ಬರ ಮೇಲೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಕೈಗೊಳ್ಳಲಾದ ಪೊಲೀಸ್ ಕ್ರಮವನ್ನು ಖಂಡಿಸಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

“ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ದಾರೆ? ನ್ಯಾಯಸಮ್ಮತ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಯನ್ನು ಕೇಳುತ್ತಿರುವ ಅವರ ವಿರುದ್ಧ ಭದ್ರತಾ ಪಡೆಗಳು ಬಲಪ್ರಯೋಗ ನಡೆಸುವುದು ಏಕೆ? ಗುಣಮಟ್ಟದ ಮತ್ತು ವಿಶ್ವಾಸಾರ್ಹ ಶಿಕ್ಷಣ ವ್ಯವಸ್ಥೆ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು” ಎಂದು ಅವರು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಶ್ರಮಿಸುತ್ತಾರೆ. ಆದರೆ ಪರೀಕ್ಷೆಯ ಅಂತಿಮ ಹಂತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುದ್ದಿ ಹೊರಬೀಳುವುದರಿಂದ ಅವರ ಕನಸುಗಳು ಭಗ್ನವಾಗುತ್ತಿವೆ. ಈ ರೀತಿಯ ನಿರಂತರ ಅಕ್ರಮಗಳಿಂದ ಅನೇಕ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಮುಂದಿಟ್ಟ ಮೂರು ಪ್ರಮುಖ ಬೇಡಿಕೆಗಳು

  • ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
  • ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.
  • ದೇಶಾದ್ಯಂತ ನಡೆದ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ಅನುಭವಿಸಿದ ಸಂಕಷ್ಟಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಬೇಕು.

ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸ ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಪರಿಣಾಮಕಾರಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

ಜಿಂಬಾಬ್ವೆ ವಿರುದ್ಧ ಮೊದಲ ಟಿ20ಗೆ ಟೀಂ ಇಂಡಿಯಾ ಸಜ್ಜು: ವೈಭವ್ ಸೂರ್ಯವಂಶಿಗೆ ಅವಕಾಶ, ರಿಂಕು ಸಿಂಗ್ ಕಮ್ ಬ್ಯಾಕ್ ಸಾಧ್ಯತೆ!

0

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜುಲೈ 23ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಜಿಂಬಾಬ್ವೆ ತಲುಪಿದ್ದು, ಸರಣಿಗಾಗಿ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿ ಸೋಲಿನಿಂದ ನಿರಾಸೆ ಅನುಭವಿಸಿರುವ ಭಾರತ, ಇದೀಗ ಜಿಂಬಾಬ್ವೆ ವಿರುದ್ಧ ಗೆಲುವಿನ ಮೂಲಕ ಪುಟಿದೇಳುವ ಗುರಿ ಹೊಂದಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ತಂಡಕ್ಕೆ ಈ ಸರಣಿ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಮೊದಲ ಟಿ20 ಪಂದ್ಯಕ್ಕಾಗಿ ಸಂಭಾವ್ಯ ಪ್ಲೇಯಿಂಗ್-11 ಕೂಡ ಬಹುತೇಕ ಅಂತಿಮಗೊಂಡಿದೆ. ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ರಿಂಕು ಸಿಂಗ್ ಕೂಡ ತಂಡಕ್ಕೆ ಮರಳುವ ನಿರೀಕ್ಷೆಯಿದೆ.

ಸಂಜು ಸ್ಯಾಮ್ಸನ್ ಈ ಸರಣಿಗೆ ಆಯ್ಕೆಯಾಗದ ಹಿನ್ನೆಲೆಯಲ್ಲಿ, ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಆರಂಭಿಕ ಬ್ಯಾಟರ್‌ಗಳಾಗಿ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್, ನಾಯಕ ಶ್ರೇಯಸ್ ಅಯ್ಯರ್ ಹಾಗೂ ತಿಲಕ್ ವರ್ಮಾ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದ್ದಾರೆ.

ಇತ್ತೀಚಿನ ಸರಣಿಗಳಲ್ಲಿ ಅವಕಾಶದಿಂದ ವಂಚಿತರಾಗಿದ್ದ ರಿಂಕು ಸಿಂಗ್‌ಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಶಿವಂ ದುಬೆ ಆಲ್‌ರೌಂಡರ್ ಪಾತ್ರದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಲಿದ್ದು, ತಂಡದ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ.

ಬೌಲಿಂಗ್ ವಿಭಾಗದಲ್ಲೂ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಯುವ ಆಲ್‌ರೌಂಡರ್ ಹರ್ಷ ದುಬೆ ಭಾರತ ಪರ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಕಳೆದ ಎರಡು ವರ್ಷಗಳಿಂದ ಗಾಯದ ಸಮಸ್ಯೆಯಿಂದ ತಂಡದಿಂದ ದೂರವಿದ್ದ ವೇಗಿ ಮಯಾಂಕ್ ಯಾದವ್ ಕೂಡ ತಂಡಕ್ಕೆ ಮರಳಿದ್ದು, ಮೊದಲ ಪಂದ್ಯದಲ್ಲೇ ಅವಕಾಶ ಪಡೆಯುವ ನಿರೀಕ್ಷೆಯಿದೆ. ವೇಗದ ಬೌಲಿಂಗ್ ವಿಭಾಗದಲ್ಲಿ ಪ್ರಿನ್ಸ್ ಯಾದವ್ ಜೊತೆಗೆ ಅಶೋಕ್ ಶರ್ಮಾ ಅಥವಾ ಯಶ್ ಠಾಕೂರ್ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಇದುವರೆಗೆ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಅವರ ನಾಯಕತ್ವದಲ್ಲಿ ಆಡಿದ ಆರು ಪಂದ್ಯಗಳಲ್ಲೂ ಭಾರತ ಸೋಲು ಕಂಡಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಜಿಂಬಾಬ್ವೆ ವಿರುದ್ಧದ ಈ ಸರಣಿ ಶ್ರೇಯಸ್ ಅಯ್ಯರ್ ಹಾಗೂ ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ಮೊದಲ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್-11:

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಹರ್ಷ ದುಬೆ, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ/ಯಶ್ ಠಾಕೂರ್, ಮಯಾಂಕ್ ಯಾದವ್.

ರಾಜ್ಯದ ಸಮಸ್ಯೆ ಬಿಟ್ಟು ಜಿರಳೆ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಆರ್. ಅಶೋಕ್ ಕಿಡಿ

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ (CJP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಆ ಸಂಘಟನೆ ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬೆಂಬಲ ನೀಡಿರುವುದನ್ನು ಟೀಕಿಸಿದರು.

“ರಾಹುಲ್ ಗಾಂಧಿ ಜಿರಳೆ ಪ್ರತಿಭಟನೆಗೆ ಹೋಗುತ್ತಾರೆ. ಆದರೆ ರಾಜ್ಯದ ರೈತರ ಸಮಸ್ಯೆ, ಬರ ಪರಿಸ್ಥಿತಿ ಹಾಗೂ ಜನರ ಸಂಕಷ್ಟಗಳ ಬಗ್ಗೆ ಮಾತನಾಡಲು ಅವರಿಗೆ ಸಮಯವಿಲ್ಲ” ಎಂದು ಅಶೋಕ್ ಲೇವಡಿ ಮಾಡಿದರು.

ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕೃಷಿ ಸಚಿವರು ಹಾಗೂ ತೋಟಗಾರಿಕೆ ಸಚಿವರಿಲ್ಲ. ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸುವವರು ಯಾರು? ಅಧಿಕಾರಿಗಳನ್ನು ನಂಬುವ ಪರಿಸ್ಥಿತಿ ಇದೆಯೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸುತ್ತಿದೆ. ಆದರೆ ಮೊದಲು ರಾಜ್ಯ ಸರ್ಕಾರವೇ ಬರವನ್ನು ವಿಪತ್ತು ಎಂದು ಘೋಷಿಸಿಲ್ಲ. ಕೇಂದ್ರ ಸರ್ಕಾರ ಹೇಗೆ ಕ್ರಮ ಕೈಗೊಳ್ಳುತ್ತದೆ ಎಂದು ಅಶೋಕ್ ಹೇಳಿದರು.

“ರೋಮ್ ಹೊತ್ತಿ ಉರಿಯುತ್ತಿದ್ದಾಗ ಯಾರೋ ಪಿಟೀಲು ಬಾರಿಸುತ್ತಿದ್ದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕುಳಿತಿದ್ದಾರೆ. ಈಗ ಎಲ್ಲರಿಗೂ ದೆಹಲಿ ರಾಜಕೀಯವೇ ಬೇಕಾಗಿದೆ” ಎಂದು ಟೀಕಿಸಿದರು.

ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ವಾಗ್ದಾಳಿ ನಡೆಸಿದ ಅಶೋಕ್, “ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಅವರು ಮೊದಲು ಕಲಬುರಗಿಯಿಂದ ಜನರು ಗುಳೆ ಹೋಗುತ್ತಿರುವುದಕ್ಕೆ ಲೆಕ್ಕ ನೀಡಲಿ” ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಜನರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ, ತಾಂಡಾಗಳು ಖಾಲಿಯಾಗುತ್ತಿವೆ. ಈ ಸಮಸ್ಯೆಗಳ ಬಗ್ಗೆ ಸರ್ಕಾರ ಮೊದಲು ಗಮನ ಹರಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದರು.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಅನಂತನಾಗ್ ಗುಂಡಿನ ದಾಳಿಯಲ್ಲಿ ಪೊಲೀಸ್ ಹೆಡ್ ʼಕಾನ್ಸ್ಟೇಬಲ್ ಹುತಾತ್ಮ

ಶ್ರೀನಗರ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಹೆಚ್ಚಾಗಿದ್ದು, ಅನಂತನಾಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

ಬುಧವಾರ ಮಧ್ಯಾಹ್ನ ಅನಂತನಾಗ್ ಜಿಲ್ಲೆಯ ಲಾಲ್ ಚೌಕ್ ಪ್ರದೇಶದಲ್ಲಿ ಉಗ್ರರು ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯಾಹ್ನ ಸುಮಾರು 12.30ರ ವೇಳೆಗೆ ನಡೆದ ಈ ದಾಳಿಯಲ್ಲಿ 35 ವರ್ಷದ ಹೆಡ್ ಕಾನ್ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ ಗಂಭೀರವಾಗಿ ಗಾಯಗೊಂಡಿದ್ದರು.

ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದ್ದ ಆಶಿಕ್ ಹುಸೇನ್ ಕುರೇಷಿ ಅವರನ್ನು ತಕ್ಷಣವೇ ಅನಂತನಾಗ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆ ಬಳಿಕ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ದಾಳಿ ನಡೆಸಿ ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ಇಡೀ ಪ್ರದೇಶವನ್ನು ಸುತ್ತುವರಿದಿವೆ. ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಉಗ್ರರ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಉಗ್ರರ ಚಟುವಟಿಕೆಗಳ ಮೇಲೆ ಭದ್ರತಾ ಪಡೆಗಳು ತೀವ್ರ ನಿಗಾ ಇರಿಸಿವೆ.

ರಾಯಚೂರಿನಲ್ಲಿ ನಿಲ್ಲದ ಬೀದಿ ನಾಯಿಗಳ ರಕ್ತಪಾತ: 3 ವರ್ಷದ ಬಾಲಕಿ ಮೇಲೆ ದಾಳಿ

0

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆಯುತ್ತಿದ್ದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹಾಗೂ ನಾಲ್ಕು ವರ್ಷದ ಬಾಲಕ ಜೀವಕ್ಕಾಗಿ ಹೋರಾಡುತ್ತಿರುವ ಘಟನೆಗಳ ಬೆನ್ನಲ್ಲೇ ಇದೀಗ ಮಾನ್ವಿಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿ ಕ್ರೂರವಾಗಿ ದಾಳಿ ನಡೆಸಿದೆ. ಇದೇ ವೇಳೆ ರಾಯಚೂರು ನಗರದ ಮಾರುಕಟ್ಟೆಯಲ್ಲೂ ವ್ಯಕ್ತಿಯೊಬ್ಬರು ನಾಯಿ ಕಡಿತಕ್ಕೊಳಗಾಗಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಮಾನ್ವಿ ಪಟ್ಟಣದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಇನಾಯಾ ಮೇಲೆ ಏಕಾಏಕಿ ಬೀದಿ ನಾಯಿಯೊಂದು ಎರಗಿ ಮುಖ, ಕಣ್ಣಿನ ಭಾಗ ಹಾಗೂ ಎದೆಗೆ ತೀವ್ರವಾಗಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಮಗುವಿನ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ನಾಯಿಯನ್ನು ಓಡಿಸಿದ್ದು, ಇನ್ನೂ ಕೆಲ ಕ್ಷಣ ತಡವಾಗಿದ್ದರೆ ಅನಾಹುತ ಸಂಭವಿಸುತ್ತಿತ್ತು ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಮಾನ್ವಿ ಪುರಸಭೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ಬಗ್ಗೆ ಪದೇಪದೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಇದರ ನಡುವೆ ರಾಯಚೂರು ನಗರದ ಸದರಬಜಾರ್ ರಸ್ತೆಯಲ್ಲೂ ಬೀದಿ ನಾಯಿಯೊಂದು ಮಾರುಕಟ್ಟೆಗೆ ಬಂದಿದ್ದ ಸತ್ಯಪ್ಪ (40) ಎಂಬುವರ ಮೇಲೆ ದಾಳಿ ನಡೆಸಿ ಕಚ್ಚಿದೆ. ಪತ್ನಿಯೊಂದಿಗೆ ಬೈಕ್ ನಿಲ್ಲಿಸುತ್ತಿದ್ದ ವೇಳೆ ನಡೆದ ದಾಳಿಯಲ್ಲಿ ಗಾಯಗೊಂಡ ಸತ್ಯಪ್ಪ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಜಿಲ್ಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯಿಂದ ಜನರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ನಾಯಿಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೌರಾಡಳಿತವನ್ನು ಒತ್ತಾಯಿಸಿದ್ದಾರೆ.

ನೀಟ್ ಅಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿ ಎಂದ ಡಾ.ಜಿ. ಪರಮೇಶ್ವರ್

ಚಿಕ್ಕಬಳ್ಳಾಪುರ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಪೂರ್ಣ ಜವಾಬ್ದಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಇದರ ಪರಿಣಾಮವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಕಿಡಿಕಾರಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವವರನ್ನೇ ಬಂಧಿಸುವುದು ಯಾವ ರೀತಿಯ ಆಡಳಿತ ಎಂದು ಅವರು ಪ್ರಶ್ನಿಸಿದರು.

ದೇಶದ ಪ್ರತಿಯೊಬ್ಬ ಯುವಕ-ಯುವತಿಗೂ ಗುಣಮಟ್ಟದ ಶಿಕ್ಷಣ ಪಡೆಯುವ ಹಕ್ಕನ್ನು ಸಂವಿಧಾನ ನೀಡಿದೆ. ಶಿಕ್ಷಣ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬುದನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲೇ ಸ್ಪಷ್ಟಪಡಿಸಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ರಾಜ್ಯದಲ್ಲಿ ಈ ಹಿಂದೆ ಸಿಇಟಿ (CET) ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ಯಶಸ್ವಿಯಾಗಿ ನಡೆಸುತ್ತಿತ್ತು. ತಾವು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿಯೂ ಯಾವುದೇ ಗೊಂದಲವಿಲ್ಲದೆ ಪರೀಕ್ಷೆಗಳು ನಡೆದಿದ್ದವು. ಬಳಿಕ ಕೇಂದ್ರ ಸರ್ಕಾರ ಸಿಇಟಿ ಬದಲಿಗೆ ನೀಟ್ ಪರೀಕ್ಷೆಯನ್ನು ಜಾರಿಗೆ ತಂದಿತು. ಆರಂಭದಲ್ಲಿ ವಿರೋಧ ವ್ಯಕ್ತವಾದರೂ ವಿದ್ಯಾರ್ಥಿಗಳು ಅದನ್ನು ಒಪ್ಪಿಕೊಂಡರು. ಆದರೆ ಈಗ ಪದೇಪದೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸಿದೆ ಎಂದು ಅವರು ಆರೋಪಿಸಿದರು.

ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಡಿಸಿಎಂ ಪರಮೇಶ್ವರ್ ಆಗ್ರಹಿಸಿದರು.

‘ಜನ ನಾಯಗನ್’ ಲೀಕ್ ರಹಸ್ಯ ಬಯಲು: ಫ್ರೀಲ್ಯಾನ್ಸ್ ಸಿಬ್ಬಂದಿಯೊಬ್ಬನಿಂದ ನಡೆದ ಪ್ರಮಾದ ಎಂದ ನಿರ್ದೇಶಕ ವಿನೋದ್

ಚೆನ್ನೈ: ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಬಿಡುಗಡೆಯ ಮುನ್ನವೇ ಆನ್‌ಲೈನ್‌ನಲ್ಲಿ ಲೀಕ್ ಆಗಿದ್ದ ಪ್ರಕರಣದ ಹಿಂದಿನ ರಹಸ್ಯವನ್ನು ನಿರ್ದೇಶಕ ಎಚ್. ವಿನೋದ್ ಬಹಿರಂಗಪಡಿಸಿದ್ದಾರೆ. ಸಿನಿಮಾ ಸೋರಿಕೆಯ ಹಿಂದೆ ಯಾವುದೇ ರಾಜಕೀಯ ಅಥವಾ ಪ್ರಚಾರ ತಂತ್ರ ಇರಲಿಲ್ಲ; ಎಡಿಟಿಂಗ್ ರೂಂನಲ್ಲಿದ್ದ ಫ್ರೀಲ್ಯಾನ್ಸ್ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಅವರು ತಿಳಿಸಿದ್ದಾರೆ.

ಜನವರಿಯಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ ಸೆನ್ಸಾರ್ ವಿಳಂಬ, ಕಾನೂನು ಹೋರಾಟ ಹಾಗೂ ಎಚ್‌ಡಿ ಪ್ರಿಂಟ್ ಲೀಕ್‌ನಿಂದ ಭಾರೀ ಹಿನ್ನಡೆ ಅನುಭವಿಸಿತ್ತು. ಈ ನಡುವೆ ವಿಜಯ್ ಅವರೇ ಸಿನಿಮಾ ಲೀಕ್ ಮಾಡಿಸಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿದ್ದವು.

ಈ ಕುರಿತು ಪ್ರತಿಕ್ರಿಯಿಸಿದ ವಿನೋದ್, “ವಿಜಯ್ ಅವರ ಯಶಸ್ಸಿಗೆ ಸಿನಿಮಾ ಲೀಕ್ ಅಗತ್ಯವಿರಲಿಲ್ಲ. ಅವರಿಗೆ ಪ್ರೇಕ್ಷಕರ ಬೆಂಬಲವೇ ಸಾಕು” ಎಂದು ಆರೋಪಗಳನ್ನು ತಳ್ಳಿಹಾಕಿದರು.

ಲೀಕ್ ಆದ ದೃಶ್ಯಗಳಲ್ಲಿ ಎಡಿಟಿಂಗ್ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಎಡಿಟಿಂಗ್ ತಂಡದ ಎಲ್ಲ ಸದಸ್ಯರ ವಿಚಾರಣೆ ನಡೆಸಲಾಗಿತ್ತು. ಗೂಗಲ್ ಡ್ರೈವ್ ಮೂಲಕ ಯಾವುದೇ ಫೈಲ್ ವರ್ಗಾವಣೆಯಾಗಿದೆಯೇ ಎಂಬುದನ್ನೂ ಪರಿಶೀಲಿಸಲಾಗಿತ್ತು.

ಕೊನೆಗೆ ಫ್ರೀಲ್ಯಾನ್ಸ್ ಸಿಬ್ಬಂದಿಯೊಬ್ಬ ಎಡಿಟಿಂಗ್ ರೂಂನಿಂದ ದೃಶ್ಯಗಳನ್ನು ಕಾಪಿ ಮಾಡಿಕೊಂಡು ತನ್ನ ಸ್ನೇಹಿತರೊಂದಿಗೆ ವೀಕ್ಷಿಸಿದ್ದಾನೆ. ಅಲ್ಲಿಂದಲೇ ಸಿನಿಮಾ ಅನಧಿಕೃತವಾಗಿ ಹರಡಿ ಆನ್‌ಲೈನ್‌ಗೆ ಅಪ್‌ಲೋಡ್ ಆಗಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

“ನಾನು ಭೇಟಿಯಾದಾಗ ಆತ ಅಳುತ್ತಾ ಕ್ಷಮೆ ಕೇಳಿದ. ಆದರೆ ಆತನೇ ಏಕಾಂಗಿಯಾಗಿ ಕೃತ್ಯ ಎಸಗಿದ್ದಾನೋ ಅಥವಾ ಇನ್ನಾರಾದರೂ ಇದರ ಹಿಂದೆ ಇದ್ದಾರೋ ಎಂಬುದು ಇನ್ನೂ ನಿಗೂಢವಾಗಿದೆ,” ಎಂದು ವಿನೋದ್ ತಿಳಿಸಿದ್ದಾರೆ.

ಎಲ್ಲ ವಿವಾದಗಳನ್ನು ಹಿಂದಿಕ್ಕಿರುವ ‘ಜನ ನಾಯಗನ್’ ಚಿತ್ರ ಜುಲೈ 23ರಂದು ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ವಿಜಯ್ ಜೊತೆಗೆ ಪೂಜಾ ಹೆಗ್ಡೆ ಮತ್ತು ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜೈಲಿನಲ್ಲಿರುವ ದರ್ಶನ್‌ ಭೇಟಿಯಾದ ರಕ್ಷಿತಾ, ವಿಜಯಲಕ್ಷ್ಮಿ: ಗೆಳೆಯನ ಸ್ಥಿತಿ ನೋಡಿ ಭಾವುಕರಾದ ನಟಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ಆಗಮಿಸಿದರು. ಇಬ್ಬರೂ ಪ್ರತ್ಯೇಕವಾಗಿ ಜೈಲಿಗೆ ಪ್ರವೇಶಿಸಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಚರ್ಚೆ ನಡೆಸಿದರು.

ಜೈಲಿನಲ್ಲಿರುವ ದರ್ಶನ್ ಅವರ ಸ್ಥಿತಿಯನ್ನು ಕಂಡು ರಕ್ಷಿತಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಆಪ್ತ ಸ್ನೇಹಿತನ ಸಂಕಷ್ಟದಿಂದ ಮನನೊಂದ ಅವರು, ಭೇಟಿ ಮುಗಿಸಿ ಹೊರಬರುವಾಗಲೂ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಲಿಲ್ಲ.

ಮಾಧ್ಯಮಗಳು ಪ್ರಶ್ನಿಸಿದಾಗ “ದರ್ಶನ್ ಚೆನ್ನಾಗಿದ್ದಾರೆ” ಎಂದು ಮಾತ್ರ ಹೇಳಿದ ರಕ್ಷಿತಾ, ವಿಜಯಲಕ್ಷ್ಮಿಯೊಂದಿಗೆ ಅಲ್ಲಿಂದ ತೆರಳಿದರು.

ಇನ್ನೊಂದೆಡೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಆವರೆಗೆ ದರ್ಶನ್‌ಗೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಮುಂದಿನ ವರ್ಷ ಮೇ 15ರವರೆಗೆ ಜೈಲಿನಲ್ಲೇ ಉಳಿಯಬೇಕಾಗಿದೆ.

‘ಫ್ಲಾಪ್ ಸಾಂಗಿದು… ಅಭಿಯಾನ ನಿಲ್ಲಿಸಿ’! ಪದ್ಮ ಪ್ರಶಸ್ತಿ ಅಭಿಯಾನಕ್ಕೆ ಹಂಸಲೇಖ ಬ್ರೇಕ್

ಬೆಂಗಳೂರು: ಪದ್ಮ ಪ್ರಶಸ್ತಿ ಹಾಗೂ ಜ್ಞಾನಪೀಠ ಪ್ರಶಸ್ತಿ ನೀಡುವಂತೆ ತಮ್ಮ ಪರವಾಗಿ ಆರಂಭವಾಗಿದ್ದ ಅಭಿಯಾನವನ್ನು ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ತಿರಸ್ಕರಿಸಿದ್ದಾರೆ. ಪ್ರಶಸ್ತಿಗಿಂತ ಕನ್ನಡದ ಹಕ್ಕು ಮತ್ತು ಭಾಷೆಯ ಅಸ್ತಿತ್ವಕ್ಕಾಗಿ ನಡೆಯುವ ಹೋರಾಟಗಳೇ ಮುಖ್ಯ ಎಂದು ಹೇಳುವ ಮೂಲಕ ಅಭಿಯಾನವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ.

ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಹಂಸಲೇಖ, “ಇದಕ್ಕೆ ನನ್ನ ಒಪ್ಪಿಗೆ ಇಲ್ಲ. ಇದು ಅಭಿಮಾನದ ದುಡುಕು, ಪ್ರೀತಿಯ ತೊಂದರೆ. ಸೀನ್‌, ಟ್ಯೂನ್‌, ಲಿರಿಕ್ಸ್‌ ಯಾವುದಕ್ಕೂ ಹೊಂದದ ಫ್ಲಾಪ್ ಸಾಂಗಿದು. ದಯವಿಟ್ಟು ಇದನ್ನು ನಿಲ್ಲಿಸಿ” ಎಂದು ನೇರವಾಗಿ ತಿಳಿಸಿದ್ದಾರೆ.

ಪ್ರಶಸ್ತಿಗಳಿಗಾಗಿ ಪ್ರಚಾರ ನಡೆಸುವುದಕ್ಕಿಂತ ಕನ್ನಡ ಭಾಷೆಯ ಹಕ್ಕು, ಗೌರವ ಮತ್ತು ಉಳಿವಿಗಾಗಿ ಜನರನ್ನು ಒಗ್ಗೂಡಿಸುವ ಅಭಿಯಾನಗಳು ಅಗತ್ಯವೆಂದು ಅವರು ಒತ್ತಿ ಹೇಳಿದ್ದಾರೆ.

ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸಂಗೀತ ಮತ್ತು ಸಾಹಿತ್ಯದ ಮೂಲಕ ಅಳಿಸಲಾಗದ ಛಾಪು ಮೂಡಿಸಿರುವ ಹಂಸಲೇಖ ಸಾವಿರಾರು ಜನಪ್ರಿಯ ಹಾಡುಗಳನ್ನು ಕನ್ನಡಕ್ಕೆ ನೀಡಿದ್ದಾರೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಕ್ಕೂ ಸಂಗೀತ ನೀಡಿದ್ದರೂ, ಅವರಿಗೆ ಇನ್ನೂ ಯಾವುದೇ ಕೇಂದ್ರ ನಾಗರಿಕ ಪ್ರಶಸ್ತಿ ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಅಭಿಯಾನಕ್ಕೆ ಇದೀಗ ಸ್ವತಃ ಹಂಸಲೇಖ ಅವರೇ ತೆರೆ ಎಳೆದಿದ್ದಾರೆ.